Home Blog

GBA ವಾರ್ಡ್ʼಗಳಲ್ಲಿ ಪರ್ಯಾಯ SIRಗೆ ತಡೆ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಲು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ಎಸ್‌ಐಆರ್ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗವು ಜೂನ್ 19ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಂ. ವಿವೇಕ್ ಸೇರಿದಂತೆ ಐವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?

ಅರ್ಜಿದಾರರ ಪ್ರಕಾರ, 2025ರ ಅಕ್ಟೋಬರ್ 27ರಂದು ಕೇಂದ್ರ ಚುನಾವಣಾ ಆಯೋಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸುವುದಾಗಿ ಪ್ರಕಟಿಸಿತ್ತು. ಅದರಂತೆ 2026ರ ಜೂನ್ 16ರಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ಆದರೆ, ಇದರ ಮೂರೇ ದಿನಗಳ ಬಳಿಕ ಜೂನ್ 19ರಂದು ರಾಜ್ಯ ಚುನಾವಣಾ ಆಯೋಗವು ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪ್ರತ್ಯೇಕ ಎಸ್‌ಐಆರ್ ನಡೆಸಲು ಆದೇಶ ಹೊರಡಿಸಿದೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 26ರಿಂದ ಜಿಬಿಎ ಸೇರಿದಂತೆ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಎಸ್‌ಐಆರ್ ಸಮೀಕ್ಷೆಯೂ ಆರಂಭವಾಗಿದೆ.

ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಎಸ್‌ಐಆರ್ ಪ್ರಕ್ರಿಯೆಗಳು ನಡೆಯುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದು, ರಾಜ್ಯ ಚುನಾವಣಾ ಆಯೋಗದ ಜೂನ್ 19ರ ಆದೇಶವನ್ನು ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಜುಲೈ ಮೊದಲ ವಾರದಲ್ಲಿ ಉತ್ತಮ ಮಳೆ: ದೇಶದ ಮಳೆ ಕೊರತೆ ಶೇಕಡಾ 12ಕ್ಕೆ ಇಳಿದಿದೆ – ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ದೇಶದಲ್ಲಿ ಮಾನ್ಸೂನ್ ಕೊರತೆಯ ಆತಂಕ ಎದುರಾಗಿತ್ತು. ಆದರೆ ಜುಲೈ ಮೊದಲ ವಾರದಲ್ಲಿ ದೇಶಾದ್ಯಂತ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಳೆ ಕೊರತೆ ಶೇ.12ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಖಾರಿಫ್ ಬೆಳೆ ಹಂಗಾಮು ಹಾಗೂ ಎಲ್ ನಿನೊದ ಸಂಭಾವ್ಯ ಪರಿಣಾಮ ಕುರಿತು ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಿಸಿದೆ.

ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಜೂನ್‌ನಿಂದ ಜುಲೈ 7ರವರೆಗಿನ ಮಳೆಯ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಸುಮಾರು 10 ದಿನ ತಡವಾಗಿ ಆರಂಭವಾದರೂ, ಜುಲೈ ಮೊದಲ ವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದರು.

ಐಎಂಡಿ ಅಂದಾಜಿನ ಪ್ರಕಾರ, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಮಧ್ಯಮ ಮಟ್ಟಕ್ಕೆ ದುರ್ಬಲವಾಗುವ ಸಾಧ್ಯತೆ ಇದ್ದು, ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಶೇ.30ರಷ್ಟು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಸಭೆಯಲ್ಲಿ ಕೃಷಿ, ವಿದ್ಯುತ್, ಕುಡಿಯುವ ನೀರು, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪಶುಸಂಗೋಪನೆ, ಭೂ ವಿಜ್ಞಾನ, ಹಣಕಾಸು, ರಸಗೊಬ್ಬರ, ಮಾಹಿತಿ ಮತ್ತು ಪ್ರಸಾರ ಸೇರಿದಂತೆ 15ಕ್ಕೂ ಹೆಚ್ಚು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಜಲ ಆಯೋಗದ ಪ್ರತಿನಿಧಿಗಳು ಭಾಗವಹಿಸಿದ್ದರು.

ಖಾರಿಫ್ ಬೆಳೆಗಳ ರಕ್ಷಣೆಗಾಗಿ ಮಳೆ, ಜಲಾಶಯಗಳ ನೀರಿನ ಸಂಗ್ರಹ, ಬೆಳೆ ಬಿತ್ತನೆ, ನೀರಿನ ಲಭ್ಯತೆ, ಕೀಟ ಹಾಗೂ ರೋಗಗಳ ಸ್ಥಿತಿಗತಿಗಳ ಬಗ್ಗೆ ರಾಜ್ಯಗಳೊಂದಿಗೆ ಪ್ರತಿ ವಾರ ಬೆಳೆ-ಹವಾಮಾನ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದಲ್ಲದೆ, ಮಳೆ ಕೊರತೆ ಎದುರಿಸುತ್ತಿರುವ 262 ಜಿಲ್ಲೆಗಳಿಗೆ ವಿಶೇಷ ಕೃಷಿ ಕಾರ್ಯಯೋಜನೆ ವಿಸ್ತರಿಸಲಾಗಿದ್ದು, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಕೃಷಿ ವಿಜ್ಞಾನ ಕೇಂದ್ರಗಳಿಗೆ ಎಲ್ ನಿನೊ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನೀಡಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ತುಂಗಾಭದ್ರೆಯಲ್ಲಿ ನೀರಿನ ಮಟ್ಟ ಏರಿಕೆ: ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ

ದಾವಣಗೆರೆ: ಮಲೆನಾಡು ಭಾಗದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ತುಂಗಾಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹರಿಹರ ತಾಲೂಕಿನ ಪ್ರಸಿದ್ಧ ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಇದರಿಂದ ಹರಿಹರ ತಾಲೂಕಿನ ಮೂಲಕ ಹರಿಯುವ ತುಂಗಾಭದ್ರಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ, ಉಕ್ಕಡಗಾತ್ರಿ ಶ್ರೀಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಆವರಿಸಿದೆ.

ನದಿಯ ಅಕ್ಕಪಕ್ಕದಲ್ಲಿರುವ ಕರಿಬಸವೇಶ್ವರ ದೇವಸ್ಥಾನದ ಸ್ನಾನಘಟ್ಟ, ಜವಳಘಟ್ಟ ಹಾಗೂ ಹೂವು-ಹಣ್ಣು ವ್ಯಾಪಾರದ ಅಂಗಡಿಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರು ನದಿ ಪಾತ್ರಕ್ಕೆ ಇಳಿಯದಂತೆ ದೇವಾಲಯದ ಆಡಳಿತ ಮಂಡಳಿ ಸೂಚನೆ ನೀಡಿದೆ.

ಭದ್ರಾ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಿದರೆ, ನದಿ ದಂಡೆಯಲ್ಲಿರುವ ಗಣೇಶ ದೇವಸ್ಥಾನವೂ ಜಲಾವೃತವಾಗುವ ಸಾಧ್ಯತೆ ಇದೆ. ಜೊತೆಗೆ ನದಿಯ ಸೆಳೆತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಕ್ತರು ಆ ಭಾಗಕ್ಕೆ ತೆರಳದಂತೆ ದೇವಾಲಯದ ಆಡಳಿತ ಮಂಡಳಿ ಸೂಚನಾ ಫಲಕ ಅಳವಡಿಸಲು ಮುಂದಾಗಿದೆ.

ಸದ್ಯ ನದಿಯ ಹರಿವು ನಿಯಂತ್ರಣದಲ್ಲಿದ್ದರೂ, ಮಳೆ ಇದೇ ರೀತಿ ಮುಂದುವರಿದು ನೀರಿನ ಮಟ್ಟ ಮತ್ತಷ್ಟು ಏರಿದರೆ ನಂದಿಗುಡಿಯಿಂದ ಉಕ್ಕಡಗಾತ್ರಿಗೆ ಸಂಪರ್ಕಿಸುವ ರಸ್ತೆ ಮತ್ತು ಸೇತುವೆ ಸಂಪೂರ್ಣ ಜಲಾವೃತವಾಗುವ ಸಾಧ್ಯತೆ ಇದೆ. ಅಲ್ಲದೆ ಭದ್ರಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಿದರೆ ಫತ್ತೇಪುರ–ಉಕ್ಕಡಗಾತ್ರಿ ಸಂಪರ್ಕ ರಸ್ತೆ ಮತ್ತು ಸೇತುವೆಯೂ ಮುಳುಗಡೆಯಾಗುವ ಆತಂಕ ವ್ಯಕ್ತವಾಗಿದೆ.

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜುಲೈ 4ರ ಮಧ್ಯರಾತ್ರಿ ನಡೆದ ಘಟನೆಯಲ್ಲಿ ಕೆಲ ಯುವಕರು ರಸ್ತೆಯ ಮಧ್ಯಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ತನಿಖೆ ನಡೆಸಿ, ವೀಲಿಂಗ್‌ನಲ್ಲಿ ಭಾಗಿಯಾಗಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಮುಂದುವರಿದಿದೆ.

ಕಮಲ್ ಹಾಸನ್ ವಿರುದ್ಧ ಕನ್ನಡ ಭಾಷೆ ವಿವಾದ: ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ

ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, “ತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿ” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಸಂಬಂಧ ಆರಂಭದಲ್ಲಿ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ,

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ 42ನೇ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿ ಮುಂದೂಡಿದೆ.

ಕರಾಚಿ ಕರಾವಳಿ ಬಳಿ ಪಾಕಿಸ್ತಾನದ ಕಾರ್ಗೋ ವಿಮಾನ ನಿಗೂಢವಾಗಿ ನಾಪತ್ತೆ!

ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ಕರಾವಳಿಯ ಸಮೀಪ ಅರಬ್ಬಿ ಸಮುದ್ರದ ಮೇಲೆ ಹಾರಾಟ ನಡೆಸುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದ್ದು, ಪಾಕಿಸ್ತಾನ ನೌಕಾಪಡೆ ಹಾಗೂ ರಕ್ಷಣಾ ಸಂಸ್ಥೆಗಳು ಸಮುದ್ರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಐವರು ಸಿಬ್ಬಂದಿಯನ್ನು ಹೊತ್ತಿದ್ದ ಬೋಯಿಂಗ್ 737 ಕಾರ್ಗೋ ವಿಮಾನವು ಮಂಗಳವಾರ ರಾತ್ರಿ ಯುಎಇಯ ಶಾರ್ಜಾದಿಂದ ಟೇಕ್‌ಆಫ್ ಆಗಿತ್ತು. ಸುಮಾರು ಎರಡು ಗಂಟೆಗಳ ಹಾರಾಟದ ಬಳಿಕ ಕರಾಚಿ ಕರಾವಳಿ ಸಮೀಪ ರೇಡಾರ್ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ವಿಮಾನದ ಯಾವುದೇ ಸುಳಿವು ಸಿಕ್ಕಿಲ್ಲ.

ಸ್ಥಳೀಯ ಸಮಯ ರಾತ್ರಿ 9:18ರ ಸುಮಾರಿಗೆ ವಿಮಾನದಲ್ಲಿ ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ ಎಂದು ಪೈಲಟ್ ಮಾಹಿತಿ ನೀಡಿದ್ದು, ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದಿಂದ ಮಾರ್ಗದರ್ಶನ ಪಡೆಯಲಾಗಿತ್ತು. ಆದರೆ ಸಂಪರ್ಕ ಕಡಿತಗೊಳ್ಳುವ ಮುನ್ನ ಯಾವುದೇ ತುರ್ತು ಸಂದೇಶ ಅಥವಾ ಅಪಾಯದ ಸಂಕೇತವನ್ನು ವಿಮಾನದಿಂದ ರವಾನಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರತಿಕೂಲ ಹವಾಮಾನದಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ವಿಮಾನ ಅರಬ್ಬಿ ಸಮುದ್ರದಲ್ಲೇ ಪತನಗೊಂಡಿರುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವಿಮಾನ ಕೊನೆಯದಾಗಿ ಕಾಣಿಸಿಕೊಂಡ ಪ್ರದೇಶದಲ್ಲಿ ಪಾಕಿಸ್ತಾನ ನೌಕಾಪಡೆ, ಕರಾವಳಿ ಕಾವಲು ಪಡೆ ಹಾಗೂ ಹೆಲಿಕಾಪ್ಟರ್‌ಗಳ ಮೂಲಕ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸಮುದ್ರದಲ್ಲಿ ಬಿರುಗಾಳಿ ಮತ್ತು ಎತ್ತರದ ಅಲೆಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿವೆ.

ವಿಮಾನದಲ್ಲಿದ್ದ ಸರಕುಗಳ ವಿವರವನ್ನು ಸದ್ಯಕ್ಕೆ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ವಿಮಾನದ ಪತ್ತೆ ಹಾಗೂ ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಮುಂದುವರೆದಿದೆ.

ಅಕ್ರಮ ಆಸ್ತಿ ಆರೋಪ: 7 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರು, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ರಾಯಚೂರು, ಕಲಬುರಗಿ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಅಸಮತೋಲಿತ ಆಸ್ತಿ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ದಾಳಿ ನಡೆದ ಅಧಿಕಾರಿಗಳ ವಿವರ:

  • ಬಸನಗೌಡ ಪಾಟೀಲ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಕೃಷ್ಣಾ ಭಾಗ್ಯ ಜಲನಿಗಮ, ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-4, ರಾಯಚೂರು
  • ಶಂಕರ್ ಎಂ. – ಸಹಾಯಕ ಪ್ರಾಧ್ಯಾಪಕ, ಕೃಷಿ ಎಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ವಿಶ್ವವಿದ್ಯಾಲಯ, ಚಿತ್ರದುರ್ಗ
  • ದುಗ್ಗಪ್ಪ ಬಿ.ಎಚ್. – ವಲಯ ಅರಣ್ಯಾಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ
  • ನರೇಂದ್ರ ಕುಮಾರ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಬೆಂಗಳೂರು
  • ಪ್ರವೀಣ್ ಬಿ. ಶ್ರೀಹರಿ – ಸೂಪರಿಂಟೆಂಡೆಂಟ್ ಇಂಜಿನಿಯರ್, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು
  • ಪುಷ್ಪ ಡಿ.ಆರ್. – ಉಪ ನಿರ್ದೇಶಕಿ (ಆಡಳಿತ), ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಬೆಂಗಳೂರು
  • ಮಧುಸೂಧನ್ ಎನ್. – ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ತುಮಕೂರು
  • ತಿಮ್ಮೇಗೌಡ – ಪಿಡಿಒ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ದಕ್ಷಿಣ
  • ಕಿರಣ್ ಅಂಗಡಿ – ಸಹಾಯಕ ಅರಣ್ಯ ಪರಿವರ್ತಕ, ಸಂಶೋಧನಾ ವಿಭಾಗ, ಶಿವಮೊಗ್ಗ
  • ಅಮೃತ್ ರಾವ್ – ಸಹಾಯಕ ಇಂಜಿನಿಯರ್, ಜೆಸ್ಕಾಂ, ಕಲಬುರಗಿ

ಬೆಳಗ್ಗಿನಿಂದಲೇ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ಪ್ರಿಯಕರನ ಜೊತೆ ಸೇರಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿ ಹತ್ಯೆ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಸಂಚು ರೂಪಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ನಗರದ 67ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ಇಬ್ಬರಿಗೂ ತಲಾ ₹25 ಸಾವಿರ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲರಾದರೆ ಒಂದು ವರ್ಷದ ಸಾದಾ ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.

2017ರಲ್ಲಿ ನಡೆದಿದ್ದ ಸತೀಶ್ ಹತ್ಯೆ ಪ್ರಕರಣದಲ್ಲಿ ಪತ್ನಿ ಕಲ್ಪನಾ ಹಾಗೂ ಆಕೆಯ ಪ್ರಿಯಕರ ಜಾವೇದ್ ಪಾಷಾ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ಇನ್ಸ್‌ಪೆಕ್ಟರ್ ವೈ. ಮುದ್ದುರಾಜ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಾಧಾರಗಳು, ತಾಂತ್ರಿಕ ಮಾಹಿತಿ ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆ ಆರೋಪಿಗಳು ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ. ಜಯಪ್ರಕಾಶ್ ಅವರು ಇಬ್ಬರಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

ಯಶವಂತಪುರದ ಕೆ.ಎನ್. ಬಡಾವಣೆಯಲ್ಲಿ ವಾಸಿಸುತ್ತಿದ್ದ ಸತೀಶ್ ಅವರಿಗೆ ತಿಳಿಯದಂತೆ ಪತ್ನಿ ಕಲ್ಪನಾ ಜಾವೇದ್ ಪಾಷಾ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. 2017ರ ಏಪ್ರಿಲ್ 18ರಂದು ಮನೆ ಬಿಟ್ಟು ಪ್ರಿಯಕರನೊಂದಿಗೆ ತೆರಳಿದ್ದ ಕಲ್ಪನಾ ನಾಪತ್ತೆಯಾಗಿರುವ ಬಗ್ಗೆ ಸತೀಶ್ ಪೊಲೀಸರಿಗೆ ದೂರು ನೀಡಿದ್ದರು.

ನಂತರ ತಮ್ಮ ಸಂಬಂಧಕ್ಕೆ ಪತಿಯೇ ಅಡ್ಡಿಯಾಗಿದ್ದಾನೆ ಎಂದು ಭಾವಿಸಿದ ಕಲ್ಪನಾ ಮತ್ತು ಜಾವೇದ್, ಸತೀಶ್ ಹತ್ಯೆಗೆ ಸಂಚು ರೂಪಿಸಿದ್ದರು. ಮೇ 22ರಂದು ಕಲ್ಪನಾ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಗೆ ನೀಡಿದ್ದಳು. ಸತೀಶ್ ನಿದ್ರೆಗೆ ಜಾರಿದ ಬಳಿಕ ಮನೆಗೆ ಬಂದ ಜಾವೇದ್ ಜೊತೆ ಸೇರಿ, ಚೂಡಿದಾರ್ ಬಟ್ಟೆಯಿಂದ ಕುತ್ತಿಗೆ ಬಿಗಿದು, ಬಾಯಿಗೆ ಬಟ್ಟೆ ತುರುಕಿ, ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು.

ಬಳಿಕ ಸತೀಶ್ ವಿಷ ಸೇವಿಸಿ ಮೃತಪಟ್ಟಂತೆ ನಾಟಕವಾಡಿ ಪ್ರಕರಣವನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ತಮ್ಮ ಮೇಲೆ ಅನುಮಾನ ಬಾರದಂತೆ ಕೃತ್ಯಕ್ಕೆ ಬಳಸಿದ್ದ ಸಿಮ್ ಕಾರ್ಡ್ ಅನ್ನು ಮುರಿದು ನಾಶಪಡಿಸಿದ್ದರೂ, ತನಿಖೆಯಲ್ಲಿ ದೊರೆತ ಸಾಕ್ಷ್ಯಗಳು ಹಾಗೂ ವೈದ್ಯಕೀಯ ವರದಿ ಆರೋಪಿಗಳ ವಿರುದ್ಧ ಬಲವಾದ ಪುರಾವೆಯಾಗಿ ಪರಿಣಮಿಸಿತು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಕೆ.ವಿ. ಅಶ್ವಥನಾರಾಯಣ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

ಚಿನ್ನಕ್ಕಿಂತ ಬೆಳ್ಳಿ ಧರಿಸಿದರೆ ಅದೃಷ್ಟ ಹೆಚ್ಚುತ್ತಾ? ಈ ರಾಶಿಯವರಿಗೆ ವಿಶೇಷ ಫಲ!

ಇತ್ತೀಚಿನ ದಿನಗಳಲ್ಲಿ ಬೆಳ್ಳಿಯ ಬೆಲೆಯೂ ಹೆಚ್ಚಾಗುತ್ತಿದ್ದು, ಚಿನ್ನದಷ್ಟೇ ಬೆಳ್ಳಿಗೂ ಬೇಡಿಕೆ ಹೆಚ್ಚಾಗಿದೆ. ಆಭರಣದ ಜೊತೆಗೆ ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯದ ದೃಷ್ಟಿಯಿಂದಲೂ ಬೆಳ್ಳಿಗೆ ವಿಶೇಷ ಮಹತ್ವವಿದೆ ಎಂದು ನಂಬಲಾಗಿದೆ.

ಜ್ಯೋತಿಷ್ಯದ ಪ್ರಕಾರ, ಕೆಲವು ರಾಶಿಯವರಿಗೆ ಬೆಳ್ಳಿ ಧರಿಸುವುದು ಶುಭಕರವಾಗಿದ್ದು, ಇದರಿಂದ ಮನಸ್ಸಿನ ಶಾಂತಿ, ಆರ್ಥಿಕ ಸ್ಥಿರತೆ ಹಾಗೂ ಜೀವನದಲ್ಲಿ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಬೆಳ್ಳಿಗೂ ಚಂದ್ರನಿಗೂ ಸಂಬಂಧವಿದೆ ಎಂದು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಈ ರಾಶಿಯವರು ಬೆಳ್ಳಿ ಧರಿಸುವುದರಿಂದ ಮಾನಸಿಕ ನೆಮ್ಮದಿ ಹಾಗೂ ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ ಎಂದು ನಂಬಲಾಗಿದೆ.

ವೃಷಭ ರಾಶಿ:
ವೃಷಭ ರಾಶಿಯ ಅಧಿಪತಿ ಶುಕ್ರ. ಸಂಪತ್ತು ಮತ್ತು ಐಶ್ವರ್ಯದ ಸಂಕೇತವಾದ ಶುಕ್ರನ ಪ್ರಭಾವದಿಂದ ಈ ರಾಶಿಯವರು ಬೆಳ್ಳಿ ಧರಿಸುವುದು ಆರ್ಥಿಕ ಸ್ಥಿರತೆ ಮತ್ತು ಅದೃಷ್ಟಕ್ಕೆ ಅನುಕೂಲಕರ ಎಂದು ಹೇಳಲಾಗುತ್ತದೆ.

ಮೀನ ರಾಶಿ:
ಮೀನ ರಾಶಿಯವರು ಬೆಳ್ಳಿ ಧರಿಸಿದರೆ ಮನಸ್ಸಿನ ಸ್ಥಿರತೆ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಚಿಂತನೆ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರು ಬೆಳ್ಳಿಯ ಉಂಗುರ, ಸರ ಅಥವಾ ಇತರೆ ಆಭರಣಗಳನ್ನು ಧರಿಸುವುದು ಶುಭಕರ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಶಾಂತಿ ದೊರೆಯುತ್ತದೆ ಎಂದು ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾಗಿದೆ.

ತುಲಾ ರಾಶಿ:
ತುಲಾ ರಾಶಿಯ ಅಧಿಪತಿಯೂ ಶುಕ್ರನಾಗಿದ್ದು, ಬೆಳ್ಳಿ ಧರಿಸುವುದರಿಂದ ಜೀವನದಲ್ಲಿ ಸಮತೋಲನ, ಶಾಂತಿ ಹಾಗೂ ಸಂತೋಷ ಹೆಚ್ಚುತ್ತದೆ ಎಂಬ ನಂಬಿಕೆಯಿದೆ.

ಬೆಳ್ಳಿ ಧರಿಸುವುದರಿಂದ ಆಗುವ ಪ್ರಯೋಜನಗಳು:

  • ಮನಸ್ಸಿನ ಶಾಂತಿ ಹೆಚ್ಚುತ್ತದೆ.
  • ಕೋಪ ಮತ್ತು ಆತಂಕ ಕಡಿಮೆಯಾಗುತ್ತದೆ.
  • ಏಕಾಗ್ರತೆ ಸುಧಾರಿಸುತ್ತದೆ.
  • ಭಾವನೆಗಳಲ್ಲಿ ಸಮತೋಲನ ಉಂಟಾಗುತ್ತದೆ.
  • ದೇಹದ ಉಷ್ಣತೆ ಸಮತೋಲನದಲ್ಲಿರಲು ಸಹಾಯವಾಗುತ್ತದೆ ಎಂದು ನಂಬಲಾಗಿದೆ.

 

ಹೊಸ ಮದ್ಯ ತೆರಿಗೆ ನೀತಿ ಎಫೆಕ್ಟ್; ರಾಜ್ಯದ ಅಬಕಾರಿ ಆದಾಯದಲ್ಲಿ ಭಾರೀ ಏರಿಕೆ!

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ‘ಆಲ್ಕೋಹಾಲ್ ಇನ್ ಬಿವರೇಜ್’ ತೆರಿಗೆ ನೀತಿಯಿಂದ ಅಬಕಾರಿ ಇಲಾಖೆಯ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ.

ಮೇ 11ರಿಂದ ಜಾರಿಗೆ ಬಂದಿರುವ ಈ ನೀತಿಯಡಿ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲಾಗುತ್ತಿದ್ದು, ಇದರ ಪರಿಣಾಮವಾಗಿ ಗ್ರಾಹಕರ ಮದ್ಯ ಖರೀದಿ ಶೈಲಿಯಲ್ಲೂ ಬದಲಾವಣೆ ಕಂಡುಬಂದಿದೆ. ಹಾರ್ಡ್ ಲಿಕ್ಕರ್‌ಗಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಬಿಯರ್‌ಗಳತ್ತ ಗ್ರಾಹಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದಲ್ಲಿ ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312.67 ಕೋಟಿ ರೂ. ಹೆಚ್ಚುವರಿ ಆದಾಯ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,602.14 ಕೋಟಿ ರೂ. ಆದಾಯ ಬಂದಿದ್ದರೆ, ಈ ಬಾರಿ 1,914.81 ಕೋಟಿ ರೂ. ಸಂಗ್ರಹವಾಗಿದೆ.

ಭಾರತೀಯ ಮದ್ಯ (IML) ಮಾರಾಟದಿಂದಲೂ ಆದಾಯ ಹೆಚ್ಚಾಗಿದ್ದು, ಕಳೆದ ವರ್ಷದ 7,407.53 ಕೋಟಿ ರೂ.ಗೆ ಹೋಲಿಸಿದರೆ ಈ ಬಾರಿ 8,394.32 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಒಟ್ಟಾರೆಯಾಗಿ ಮೊದಲ ತ್ರೈಮಾಸಿಕದಲ್ಲಿ ಅಬಕಾರಿ ಇಲಾಖೆ 10,599.29 ಕೋಟಿ ರೂ. ರಾಜಸ್ವ ಸಂಗ್ರಹಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.14.39ರಷ್ಟು ಬೆಳವಣಿಗೆ ಕಂಡಿದೆ.

ಹೊಸ ತೆರಿಗೆ ನೀತಿಯಿಂದಾಗಿ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಗ್ರಾಹಕರ ಬೇಡಿಕೆ ಹೆಚ್ಚಾಗಿದೆ. ಕೆಲವು ಪ್ರೀಮಿಯಂ ಬಿಯರ್‌ಗಳ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ ಎಂದು ವರದಿಯಾಗಿದೆ.

ಇನ್ನು 2026-27ರ ಹಣಕಾಸು ವರ್ಷಕ್ಕೆ ಸರ್ಕಾರವು 45,000 ಕೋಟಿ ರೂ. ಅಬಕಾರಿ ಆದಾಯದ ಗುರಿ ಹೊಂದಿದ್ದು, ಆದಾಯ ಹೆಚ್ಚಳಕ್ಕಾಗಿ ಬಳಕೆಯಾಗದ ಹಾಗೂ ರದ್ದಾದ ಮದ್ಯದಂಗಡಿ ಮತ್ತು ಬಾರ್ ಪರವಾನಗಿಗಳನ್ನು ಆನ್‌ಲೈನ್ ಹರಾಜು ಮೂಲಕ ವಿಲೇವಾರಿ ಮಾಡಲು ಇಲಾಖೆ ಮುಂದಾಗಿದೆ.