Home Blog

ಕಾಲೇಜು ವಿದ್ಯಾರ್ಥಿ ಅಪಹರಣ, ಕಾರಿನಲ್ಲೇ ಮಾರಣಾಂತಿಕ ಹಲ್ಲೆ ಆರೋಪ; ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹಲ್ಲೆಗೊಳಗಾಗಿದ್ದ ಮನೀಶ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್ ಸುಚಿ, ಸ್ಕಂದ ವೆಂಕಟೇಶ್ ಹಾಗೂ ಸಮೀದ್ ವಿರುದ್ಧ ಸೆಕ್ಷನ್ 115(2), 118(1), 352, 351(2), 3(5), 137(2) ಅಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮ್ರಾಟ್ ವಿಜಯ್, ಸೋಮವಾರ (ಆಗಸ್ಟ್ 31) ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಅದೇ ಕಾಲೇಜಿನ ವಿದ್ಯಾರ್ಥಿ ಮನೀಶ್ ಗೌಡ ಹಾಗೂ ಆತನ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಸಾಮ್ರಾಟ್ ಕಾರನ್ನು ಓವರ್‌ಟೇಕ್ ಮಾಡಿ ರೇಗಿಸಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಮನೀಶ್ ವಿರುದ್ಧ ಸಾಮ್ರಾಟ್ ವಿಜಯ್ ತೀವ್ರ ಆಕ್ರೋಶಗೊಂಡಿದ್ದರು.

ಮಂಗಳವಾರ (ಸೆಪ್ಟೆಂಬರ್ 1) ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಮನೀಶ್ ಗೌಡ ಕಾಲೇಜು ಆವರಣದಲ್ಲಿ ತಮ್ಮ ಬೈಕ್ ಪಾರ್ಕ್ ಮಾಡುತ್ತಿದ್ದಾಗ, ಬಿಳಿ ಬಣ್ಣದ ಸಫಾರಿ ಕಾರಿನಲ್ಲಿ ಗ್ಯಾಂಗ್ ಸಮೇತ ಬಂದ ಸಾಮ್ರಾಟ್ ವಿಜಯ್, ಆತನನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಅಪಹರಿಸಿದ್ದಾರೆ. ಬಳಿಕ ಪಟ್ಟಣಗೆರೆ ಮುಖ್ಯರಸ್ತೆಯ ಕಡೆಗೆ ಕಾರು ಚಲಾಯಿಸಿಕೊಂಡು ಹೋಗಿ, ಚಲಿಸುತ್ತಿದ್ದ ಕಾರಿನಲ್ಲೇ ಮನೀಶ್ ಮೇಲೆ ಹಲ್ಲೆ ನಡೆಸಿದ್ದಾರೆ.

ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್, ವೆಂಕಟೇಶ್, ಸಮೀದ್ ಸೇರಿದಂತೆ ಇತರರು ಮನೀಶ್‌ನ ಮುಖ, ಕುತ್ತಿಗೆ, ಎದೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿ, ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗಾಯಾಳು ಮನೀಶ್ ಗೌಡ ಕೆಂಗೇರಿ ಪೊಲೀಸ್ ಠಾಣೆಗೆ ತೆರಳಿ ಸಾಮ್ರಾಟ್ ವಿಜಯ್ ಹಾಗೂ ಆತನ ಸ್ನೇಹಿತರ ವಿರುದ್ಧ ಅಪಹರಣ ಮತ್ತು ಹಲ್ಲೆ ಆರೋಪದಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ರಾಮ ಜನ್ಮಭೂಮಿ ಟ್ರಸ್ಟ್ʼಗೆ ಮೂವರು ಹೊಸ ಟ್ರಸ್ಟಿಗಳ ನೇಮಕ; ಶೀಘ್ರದಲ್ಲೇ ಸಿಇಒ ಹೆಸರು ಪ್ರಕಟ

0

ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೂವರು ಹೊಸ ಟ್ರಸ್ಟಿಗಳನ್ನು ನೇಮಿಸಿದೆ. ಶೀಘ್ರದಲ್ಲೇ ಹೊಸ ಸಿಇಒ ಹೆಸರನ್ನೂ ಟ್ರಸ್ಟ್ ಘೋಷಿಸಲಿದೆ.

ದೆಹಲಿ ಮೂಲದ ಮಹೇಶ್ ಭಾಗ್‌ಚಂದ್ಕ, ಅಯೋಧ್ಯೆಯ ನಿವಾಸಿ ಮದನ್ ಮೋಹನ್ ಪಾಂಡೆ ಹಾಗೂ ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಅವರನ್ನು ಹೊಸ ಟ್ರಸ್ಟಿಗಳನ್ನಾಗಿ ನೇಮಿಸಲಾಗಿದೆ. ಮಹೇಶ್ ಭಾಗ್‌ಚಂದ್ಕ ಅವರು ದಿವಂಗತ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರ ಸಂಬಂಧಿ ಎಂದು ತಿಳಿದುಬಂದಿದೆ.

ಮದನ್ ಮೋಹನ್ ಪಾಂಡೆ ಹಾಗೂ ನಿರ್ಮಲಾ ಯಾದವ್ ಅವರ ನೇಮಕಾತಿಯ ಕುರಿತು ರಾಮಮಂದಿರ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ನಿರ್ಧರಿಸಲಾಗಿದೆ. ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಸಭೆ ಮುಕ್ತಾಯದ ಬಳಿಕ ಹೊಸ ಸಿಇಒ ಹೆಸರು ಪ್ರಕಟವಾಗಲಿದೆ.

10 ವರ್ಷದಲ್ಲಿ 100 ಹೊಸ ವಿಮಾನ ನಿಲ್ದಾಣ; 30,000 ಕೋಟಿ ರೂ. ಹೂಡಿಕೆಗೆ ಕೇಂದ್ರ ಸರ್ಕಾರ ಸಜ್ಜು

ನವದೆಹಲಿ: ದೇಶದ ವಾಯುಯಾನ ಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಮುಂದಿನ 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಸುಮಾರು 30,000 ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.

ಕೇಂದ್ರದ ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯ ಮುಂದುವರಿದ ಭಾಗವಾಗಿ ಈ ವಿಸ್ತರಣೆ ಕೈಗೊಳ್ಳಲಾಗುತ್ತಿದೆ. ದೇಶದ ಸಣ್ಣ ನಗರಗಳು, ಪಟ್ಟಣಗಳು ಹಾಗೂ ವಾಯುಸಂಪರ್ಕ ಕಡಿಮೆ ಇರುವ ಪ್ರದೇಶಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸುವುದೇ ಯೋಜನೆಯ ಪ್ರಮುಖ ಉದ್ದೇಶ ಎಂದು ಅವರು ತಿಳಿಸಿದರು.

ಪ್ರಸ್ತುತ ದೇಶದಲ್ಲಿ ಸುಮಾರು 166 ವಿಮಾನ ನಿಲ್ದಾಣಗಳಿದ್ದು, ಮುಂದಿನ 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣಗಳು ನಿರ್ಮಾಣವಾದರೆ ಒಟ್ಟು ಸಂಖ್ಯೆ 266ಕ್ಕೆ ಏರಿಕೆಯಾಗಲಿದೆ. ಅಂದರೆ, ಪ್ರತಿ ವರ್ಷ ಸರಾಸರಿ 10 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತದೆ. ಉಡಾನ್ ಯೋಜನೆಯ ಮೂಲಕ ಕಳೆದ ಒಂದು ದಶಕದಲ್ಲಿ ಪ್ರಾದೇಶಿಕ ವಾಯುಸಂಪರ್ಕದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದ್ದು, ಇದೀಗ ಮುಂದಿನ ಹಂತದಲ್ಲಿ ಮೂಲಸೌಕರ್ಯವನ್ನು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.

100 ಹೊಸ ವಿಮಾನ ನಿಲ್ದಾಣಗಳ ಜೊತೆಗೆ 200 ಹೊಸ ಹೆಲಿಪ್ಯಾಡ್‌ಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವೂ ಸರ್ಕಾರದ ಯೋಜನೆಯಲ್ಲಿದೆ. ದೂರದ ಮತ್ತು ಸಂಪರ್ಕ ಸೌಲಭ್ಯ ಕಡಿಮೆ ಇರುವ ಪ್ರದೇಶಗಳಿಗೆ ವೇಗದ ಸಾರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಇದು ನೆರವಾಗಲಿದೆ.

ಹೊಸ ವಿಮಾನ ನಿಲ್ದಾಣಗಳ ನಿರ್ಮಾಣದಿಂದ ಪ್ರಾದೇಶಿಕ ಸಂಪರ್ಕ ಹೆಚ್ಚುವುದರ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ, ಉದ್ಯೋಗ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಭಾರತವನ್ನು ಜಾಗತಿಕ ವಾಯುಯಾನ ಕೇಂದ್ರವಾಗಿ ರೂಪಿಸುವ ಸರ್ಕಾರದ ದೀರ್ಘಾವಧಿ ಯೋಜನೆಯಲ್ಲೂ ಇದು ಪ್ರಮುಖ ಹೆಜ್ಜೆಯಾಗಿದೆ.

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

0

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸ್ಥಳವನ್ನು ಉತ್ತರಾಖಂಡದವರು ಶುದ್ಧೀಕರಣ ಮಾಡಿದ್ದಾರೆಂದೂ, ಸಂವಿಧಾನ ಅಸ್ಪೃಶ್ಯತೆಯನ್ನು ರದ್ದುಗೊಳಿಸಿದ್ದರೂ ಸ್ವಾತಂತ್ರ್ಯ ಬಂದು 80 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾದುದೆಂದೂ ಸಿದ್ದರಾಮಯ್ಯ ಪ್ರತಿಪಾದಿಸಿದರು. ಇದು ಖರ್ಗೆ ಅವರಿಗೆ ಮಾತ್ರವಲ್ಲದೆ, ಇಡೀ ದಲಿತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ಯಾವ ತಪ್ಪನ್ನೂ ಮಾಡಿಲ್ಲ ಎಂದು ಪ್ರತಿಪಾದಿಸಿ, ಇದರ ವಿರುದ್ಧ ಎಲ್ಲರೂ ಪ್ರತಿಭಟಿಸಬೇಕು ಎಂದು ಕರೆ ನೀಡಿದರು.

ಉತ್ತರಾಖಂಡದವರು ಮಾಡಿದ ತಪ್ಪನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆಂದೂ, ಶುದ್ಧೀಕರಣ ಮಾಡಿದವರ ವಿರುದ್ಧ ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಬದಲು ಯಾವುದೇ ತಪ್ಪು ಮಾಡದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದರು. ರಾಹುಲ್ ಗಾಂಧಿ ಸಂವಿಧಾನ ಪರ ಹಾಗೂ ಅಸ್ಪೃಶ್ಯತೆ ವಿರೋಧಿ ನಿಲುವು ಹೊಂದಿರುವವರು ಎಂದು ಅವರು ಬಣ್ಣಿಸಿದರು.

ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ಹೂಡಿದೆ ಎಂದು ಆರೋಪಿಸಿದರು. ಈ ಹಿಂದೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನೇ ರದ್ದುಗೊಳಿಸಲಾಗಿತ್ತೆಂದೂ, ಸುಪ್ರೀಂ ಕೋರ್ಟ್ ಮೊರೆ ಹೋಗಿ ಸದಸ್ಯತ್ವ ಮರಳಿ ಪಡೆಯಬೇಕಾಯಿತೆಂದೂ ಅವರು ಸ್ಮರಿಸಿದರು.

ಬಿಜೆಪಿ ಅಧಿಕಾರದಲ್ಲಿರಲು ಅನರ್ಹ ಎಂದು ಟೀಕಿಸಿದ ಸಿದ್ದರಾಮಯ್ಯ, ಕೇಂದ್ರದಲ್ಲಿ ಸಂವಿಧಾನ ವಿರೋಧಿ ಸರ್ಕಾರ ಅಧಿಕಾರದಲ್ಲಿದೆ ಎಂದು ಆರೋಪಿಸಿದರು. ದಲಿತರ ಹಕ್ಕುಗಳು ಸಂವಿಧಾನದತ್ತ ಹಕ್ಕುಗಳೆಂದೂ, ಶುದ್ಧೀಕರಣ ಕೃತ್ಯ ಎಸಗಿದವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಬೇಕೆಂದೂ ಅವರು ಕರೆ ನೀಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಡೆಯಬೇಕಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ. 59ನೇ ಸಿಸಿಹೆಚ್ ಕೋರ್ಟ್, ಹೈಕೋರ್ಟ್‌ನ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಎ14 ಆರೋಪಿ ಪ್ರದೋಷ್ ಅವರನ್ನು ಇಂದು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಹೈಕೋರ್ಟ್‌ನಲ್ಲಿ ಬಾಕಿ ಇರುವ ಆದೇಶದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ಮನವಿ ಮಾಡಿದರು.

ಹೈಕೋರ್ಟ್‌ನ ಆದೇಶಕ್ಕಾಗಿ ಹೆಚ್ಚಿನ ಸಮಯಾವಕಾಶ ನೀಡುವಂತೆ ಎಸ್‌ಪಿಪಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಹೀಗಾಗಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯಕ್ಕೆ ಹಾಜರಾದ ಪ್ರದೋಷ್ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಸಹಿ ಮಾಡಿದ್ದಾರೆ. ವಿಚಾರಣೆ ಮುಂದೂಡಿಕೆಯಾದ ಬಳಿಕ ಪೊಲೀಸರು ಅವರನ್ನು ಮತ್ತೆ ಜೈಲಿಗೆ ಕರೆದೊಯ್ದಿದ್ದಾರೆ.

ಹೈಕೋರ್ಟ್ ಆದೇಶದ ಬಳಿಕ ಸೋಮವಾರ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಗಮನ ನೆಟ್ಟಿದೆ.

ಗುಪ್ತಾಂಗ ತೋರಿಸಿದ ಆರೋಪ: ಯುವಕನ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

0

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಚಿಕ್ಕಮಗಳೂರಿನ 26 ವರ್ಷದ ಯುವಕ ತನ್ನ ವಿರುದ್ಧ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರ ಯುವಕ ಬಸ್‌ನಿಂದ ಇಳಿದ ಬಳಿಕ ಶೌಚಾಲಯ ಹುಡುಕಾಡಿ, ಬಳಿಕ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ದೂರುದಾರೆ ಅಲ್ಲಿಗೆ ಬಂದಿದ್ದರು ಎಂಬುದನ್ನು ಪರಿಗಣಿಸಿದ ಪೀಠ, ಈ ಘಟನೆಯಲ್ಲಿ ಮಹಿಳೆಯ ಘನತೆಗೆ ಚ್ಯುತಿಯಾಗುವಂತಹ ಅಂಶ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ವಿಚಾರಣೆ ಮುಂದುವರಿಯಲು ಅನುಮತಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಹೇಳಿರುವ ಪೀಠ, ಪ್ರಕರಣವನ್ನು ರದ್ದುಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ಧರ್ಮಶಾಸ್ತ್ರದ ವಿದ್ಯಾರ್ಥಿಯಾಗಿದ್ದು ದೆಹಲಿಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾನೆಂದೂ, ಆತ ಮೂತ್ರ ವಿಸರ್ಜನೆಗೆ ಹೋಗಿದ್ದನೇ ಹೊರತು ದೂರಿನಲ್ಲಿ ಬೇರೇನೂ ಇಲ್ಲ ಎಂದೂ ಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಯಾಗಿ ದೂರುದಾರರ ಪರ ವಕೀಲರು, ಅರ್ಜಿದಾರ ಆರೋಪಿ ಅಸಭ್ಯವಾಗಿ ವರ್ತಿಸಿ ಅಸಭ್ಯ ಸನ್ನೆ ಮಾಡಿದ್ದಾನೆ ಎಂದು ಪ್ರತಿಪಾದಿಸಿದರು.

ಪ್ರಕರಣದ ಹಿನ್ನೆಲೆ: ದೂರುದಾರ ಯುವತಿ 2026ರ ಜನವರಿ 24ರಂದು ಮಧ್ಯಾಹ್ನ 3.40ರ ಸುಮಾರಿಗೆ ಬೆಂಗಳೂರಿನ ಹೆಬ್ಬಾಳ ರಿಂಗ್ ರಸ್ತೆ ಬಳಿ ಬಸ್‌ನಿಂದ ಇಳಿದು ಮನೆಗೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಆತ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಸುತ್ತಮುತ್ತಲಿನ ಜನರ ನೆರವಿನಿಂದ ಹಿಡಿದಿಟ್ಟಿದ್ದಾಗಿ ಯುವತಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 75(2)ರ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಹುಸಿಯಾದ ನಂಬಿಕೆ; ಮೊದಲ ಬಾರಿಗೆ ಸಾರ್ವಜನಿಕವಾಗಿ ಮನದ ನೋವು ತೋಡಿಕೊಂಡ RCB ಹೀರೋ!

0

ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಅನುಭವಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕೃನಾಲ್‌ಗೆ ಆಯ್ಕೆ ಸಮಿತಿ ಅವಕಾಶ ನೀಡದ ಬೆನ್ನಲ್ಲೇ, ಅವರು ಮೊದಲ ಬಾರಿಗೆ ಈ ಕುರಿತು ಸಾರ್ವಜನಿಕವಾಗಿ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

ತಂಡ ಪ್ರಕಟವಾದ ಕೆಲವೇ ಕ್ಷಣಗಳಲ್ಲಿ ಕೃನಾಲ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾರತದ ತ್ರಿವರ್ಣ ಧ್ವಜದ ಎಮೋಜಿಯೊಂದಿಗೆ “Hope is Still Alive” ಎಂದು ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಟೀಂ ಇಂಡಿಯಾಗೆ ಮರಳುವ ಅವರ ನಿರೀಕ್ಷೆ ಹಾಗೂ ಛಲವನ್ನು ವ್ಯಕ್ತಪಡಿಸಿದೆ.

ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಕೃನಾಲ್ ಪಾಂಡ್ಯ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಆರ್‌ಸಿಬಿ ಚಾಂಪಿಯನ್ ಆಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

2025ರ ಐಪಿಎಲ್‌ನಲ್ಲಿ ಕೃನಾಲ್ 15 ಪಂದ್ಯಗಳಲ್ಲಿ 17 ವಿಕೆಟ್ ಕಬಳಿಸಿದ್ದರು. ಬ್ಯಾಟಿಂಗ್‌ನಲ್ಲೂ 7 ಇನಿಂಗ್ಸ್‌ಗಳಲ್ಲಿ 109 ರನ್ ಗಳಿಸಿದ್ದರು. ಈ ಆವೃತ್ತಿಯಲ್ಲಿ ದೆಹಲಿ ವಿರುದ್ಧ 73 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದ್ದರು.

ಇನ್ನು 2026ರ ಐಪಿಎಲ್‌ನಲ್ಲಿ 16 ಪಂದ್ಯಗಳನ್ನು ಆಡಿದ್ದ ಕೃನಾಲ್ 14 ವಿಕೆಟ್‌ಗಳ ಜೊತೆಗೆ 226 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧ 73 ರನ್‌ಗಳ ಮಹತ್ವದ ಇನ್ನಿಂಗ್ಸ್ ಕೂಡ ಅವರ ಬ್ಯಾಟ್‌ನಿಂದ ಮೂಡಿಬಂದಿತ್ತು.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಟೀಂ ಇಂಡಿಯಾಗೆ ಆಯ್ಕೆಯಾಗದಿರುವುದು ಅವರ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ. ಕೃನಾಲ್ ಪಾಂಡ್ಯ ಭಾರತ ಪರ ಇದುವರೆಗೆ 5 ಏಕದಿನ ಹಾಗೂ 19 ಟಿ20 ಪಂದ್ಯಗಳನ್ನು ಆಡಿದ್ದಾರೆ. 2021ರಲ್ಲಿ ಅವರು ಕೊನೆಯ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ಅಂದಿನಿಂದ ರಾಷ್ಟ್ರೀಯ ತಂಡಕ್ಕೆ ಮರಳಲು ಕಠಿಣ ಪರಿಶ್ರಮ ನಡೆಸುತ್ತಿರುವ ಕೃನಾಲ್, ಇದೀಗ ಮತ್ತೊಮ್ಮೆ ಅವಕಾಶದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅವರ “ಭರವಸೆ ಇನ್ನೂ ಜೀವಂತವಾಗಿದೆ” ಎಂಬ ಭಾವುಕ ಸಂದೇಶ ಅಭಿಮಾನಿಗಳ ಗಮನ ಸೆಳೆದಿದೆ.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದು, ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಅವರಿಗೂ ತಂಡದಲ್ಲಿ ಸ್ಥಾನ ದೊರೆತಿದೆ.

ನಿರಂತರ ಪರಿಶ್ರಮದ ನಡುವೆಯೂ ಟೀಂ ಇಂಡಿಯಾ ಜರ್ಸಿ ತೊಡುವ ಅವಕಾಶಕ್ಕಾಗಿ ಕಾಯುತ್ತಿರುವ ಕೃನಾಲ್ ಪಾಂಡ್ಯಗೆ ಮುಂದಿನ ದಿನಗಳಲ್ಲಾದರೂ ಆಯ್ಕೆ ಸಮಿತಿ ಮಣೆ ಹಾಕುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಮೋದಿ ‘ಸ್ವದೇಶಿ’ ಕರೆ ಬೆನ್ನಲ್ಲೇ ಚಿನ್ನದ ದರ ಇಳಿಕೆ: ಸೆಪ್ಟೆಂಬರ್ 2ರಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಬದಲಾವಣೆ

0

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದ ಚಿನ್ನದ ದರ 16,397 ರೂಪಾಯಿಯಿಂದ ಮತ್ತೆ 15,202 ರೂಪಾಯಿಗೆ ಕುಸಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಮನವಿ ಮಾಡಿರುವುದರಿಂದ ಚಿನ್ನದ ಮೇಲಿನ ಹೂಡಿಕೆ ದಿಢೀರ್ ಕುಸಿತ ಕಂಡಿದೆ. ಇದರಿಂದಾಗಿ ಗ್ರಾಹಕರು ಚಿನ್ನ ಖರೀದಿಗೆ ಹಿಂದೇಟು ಹಾಕುವ ಸಾಧ್ಯತೆ ಇದ್ದು, ಈ ಮೂಲಕ ವಿದೇಶಿ ವಿನಿಮಯದಿಂದಾಗುವ ನಷ್ಟ ತಪ್ಪಿಸಲು ದೇಶ ಮುಂದಾಗಿದೆ.

ಗುಡ್ ರಿಟರ್ನ್ಸ್ ವರದಿ ಮಾಡಿರುವ ಬೆಲೆ ಪಟ್ಟಿಯ ಪ್ರಕಾರ, ಸೆಪ್ಟೆಂಬರ್ 2, 2026ರ ಬುಧವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂಪಾಯಿ ಇಳಿಕೆಯಾಗಿದ್ದು, ಗ್ರಾಂ ಬೆಲೆ ಈಗ 15,202 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 2,070 ರೂಪಾಯಿ ಇಳಿಕೆಯಾಗಿ, ಬೆಲೆ 1,52,020 ರೂಪಾಯಿಗೆ ತಗ್ಗಿದೆ.

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 190 ರೂಪಾಯಿ ಇಳಿಕೆಯಾಗಿದ್ದು, 1 ಗ್ರಾಂ ಬೆಲೆ ಈಗ 13,935 ರೂಪಾಯಿ ಆಗಿದೆ. 10 ಗ್ರಾಂ ಬೆಲೆಯಲ್ಲಿ 1,900 ರೂಪಾಯಿ ಇಳಿಕೆಯಾಗಿ, ಪ್ರಸ್ತುತ ಬೆಲೆ 1,39,350 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಶುದ್ಧ ಚಿನ್ನದ ಗ್ರಾಂ ಬೆಲೆ 15,202 ರೂಪಾಯಿ ಇದ್ದು, ಬೆಳ್ಳಿ ಬೆಲೆ ಗ್ರಾಂಗೆ 245 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಜಿಗೆ 2,45,000 ರೂಪಾಯಿ ಆಗಿದೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸ್ವದೇಶಿ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕಾಗಿ ಹಾಗೂ ಭಾರತವನ್ನು ವಿಶ್ವದ ಮುಂಚೂಣಿ ದೇಶವಾಗಿ ರೂಪಿಸಲು ಜನತೆ ‘ವೋಕಲ್ ಫಾರ್ ಲೋಕಲ್’ ಎಂಬ ಸ್ವದೇಶಿ ತತ್ವ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಾಗತಿಕ ಅನಿಶ್ಚಿತತೆಗಳ ನಡುವೆಯೂ ನಿರೀಕ್ಷೆಗೂ ಮೀರಿ ಶೇ.7.8ರಷ್ಟು ಜಿಡಿಪಿ ಪ್ರಗತಿ ದಾಖಲಿಸಿರುವ ಭಾರತದ ಸಾಧನೆ ಕುರಿತು ಬಿಷ್ಕೆಕ್‌ನಿಂದ ಮಂಗಳವಾರ ಬೆಳಗ್ಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, “ಸ್ವದೇಶಿ ಉತ್ಪನ್ನಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಆರ್ಥಿಕತೆಗೆ ಮತ್ತಷ್ಟು ಬಲ ತುಂಬಬೇಕು” ಎಂದು ಕರೆ ನೀಡಿದ್ದಾರೆ. “ಅನಗತ್ಯವಾಗಿ ಚಿನ್ನ ಖರೀದಿ ಮಾಡಬೇಡಿ, ಅತ್ಯಗತ್ಯವಿದ್ದಾಗ ಮಾತ್ರ ಬಂಗಾರ ಖರೀದಿಸಬೇಕು” ಎಂದು ಮೋದಿ ಕರೆ ನೀಡಿದ್ದು, ಇದರ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ.

KPSC ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆಪತ್ರಿಕೆಗಳನ್ನು ಮನೆಗೆ ತೆಗೆದುಕೊಂಡು ಪರಿಶೀಲಿಸುತ್ತಿದ್ದೆ ಎಂದ ಐಎಎಸ್ ಅಧಿಕಾರಿ

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಸಿಐಡಿ ಮುಂದೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ನೀಡಿರುವ ಹೇಳಿಕೆಗಳು ಇದೀಗ ಮಹತ್ವ ಪಡೆದುಕೊಂಡಿವೆ. ಪ್ರಶ್ನೆಪತ್ರಿಕೆ ಸಿದ್ಧತೆ ಹಾಗೂ ಪರಿಶೀಲನೆಗೆ ಸಂಬಂಧಿಸಿದಂತೆ ಗ್ಯಾನೇಂದ್ರ ಹಲವು ಮಹತ್ವದ ಮಾಹಿತಿಗಳನ್ನು ತನಿಖಾಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದಾರೆ.

ಸಿಐಡಿ ವಿಚಾರಣೆ ವೇಳೆ, 6 ಮಾದರಿ ಪ್ರಶ್ನೆಪತ್ರಿಕೆಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸುತ್ತಿದ್ದುದಾಗಿ ಗ್ಯಾನೇಂದ್ರ ಹೇಳಿಕೆ ನೀಡಿದ್ದಾರೆ. ಪ್ರಶ್ನೆಪತ್ರಿಕೆಗಳು ಮುದ್ರಣಗೊಳ್ಳುವ ಮುನ್ನವೇ ಅವುಗಳನ್ನು ಮನೆಯಲ್ಲಿ ಪರಿಶೀಲಿಸುತ್ತಿದ್ದುದು ಕರ್ತವ್ಯ ಲೋಪಕ್ಕೆ ಕಾರಣವಾಗಿದೆ ಎಂದು ಅವರು ಒಪ್ಪಿಕೊಂಡಿರುವುದಾಗಿ ಸಿಐಡಿ ಮೂಲಗಳು ತಿಳಿಸಿವೆ.

ಆದರೆ ಇದೇ ವಿಚಾರದಲ್ಲಿ ಗ್ಯಾನೇಂದ್ರ ನೀಡಿರುವ ಮತ್ತೊಂದು ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರಶ್ನೆಪತ್ರಿಕೆ ಪರಿಶೀಲನೆಗಾಗಿ ಮನೆಗೆ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಬಸವರಾಜ್ ಪದೇಪದೇ ಮನೆಗೆ ಬರುತ್ತಿದ್ದನೆಂದೂ, ತಮಗೆ ಅರಿವಿಲ್ಲದಂತೆಯೇ ಬಸವರಾಜ್ ಪ್ರಶ್ನೆಪತ್ರಿಕೆಯಲ್ಲಿದ್ದ ಮಾಹಿತಿ ಬರೆದುಕೊಂಡು ಹೋಗಿದ್ದಾನೆಂದೂ ಗ್ಯಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ತಾವು ಸರಿಯಾಗಿ ಗಮನ ಹರಿಸಿರಲಿಲ್ಲ ಎಂದ ಅವರು, ಯಾವುದೇ ಲೋಪ ಆಗಿದ್ದರೂ ಅದಕ್ಕೆ ಬಸವರಾಜ್ ಕಾರಣ ಎಂದೂ, ಆತ ಪ್ರಶ್ನೆಪತ್ರಿಕೆ ಕದ್ದಿರುವುದು ಈಗ ಗೊತ್ತಾಗಿದೆ ಎಂದೂ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಮನೆಯಲ್ಲೇ ಪರಿಶೀಲಿಸಿದ ವಿಚಾರವೂ ತನಿಖೆಯ ಪ್ರಮುಖ ಅಂಶವಾಗಿ ಪರಿಣಮಿಸಿದೆ. ಪ್ರಶ್ನೆಪತ್ರಿಕೆ ಸಂಬಂಧಿತ ವಿಚಾರಣೆ ಮುಂದುವರಿಸಿರುವ ಸಿಐಡಿ ಅಧಿಕಾರಿಗಳು, ಇಂದು ಗ್ಯಾನೇಂದ್ರ ಅವರನ್ನು ಅವರ ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಮಹಮದ್ ಸುಹೇಲ್ ಬಳಿಕ ಇನ್ನೂ 7 ಅಭ್ಯರ್ಥಿಗಳು ಸಿಐಡಿ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಂಧನದ ಭಯದಿಂದ ಅಭ್ಯರ್ಥಿಗಳು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳ ವಿಚಾರಣೆಯಲ್ಲಿ, ಅಕ್ರಮ ನೇಮಕಾತಿಗೆ ಒಬ್ಬೊಬ್ಬ ಅಭ್ಯರ್ಥಿಯಿಂದ ವಿಭಿನ್ನ ಮೊತ್ತದ ಹಣ ಪಡೆಯಲಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ. ಕೆಲವು ಅಭ್ಯರ್ಥಿಗಳು 80 ಲಕ್ಷ ರೂಪಾಯಿವರೆಗೆ, ಇನ್ನೂ ಕೆಲವರು ಸುಮಾರು 40 ಲಕ್ಷ ರೂಪಾಯಿವರೆಗೆ ಹಣ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಇವರಲ್ಲಿ ಕೆಲವರು ಮುಂಗಡ ಹಣ ನೀಡಿದ್ದರೆ, ಮತ್ತಷ್ಟು ಅಭ್ಯರ್ಥಿಗಳು ಸಂಪೂರ್ಣ ಹಣ ಪಾವತಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಮದ್ ಸುಹೇಲ್ ಬಳಿಕ 7 ಅಭ್ಯರ್ಥಿಗಳಿಂದ ಬಂದಿದೆ ಎನ್ನಲಾದ ಈ ಹೇಳಿಕೆಗಳು ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವದ ಸುಳಿವು ನೀಡಿವೆ.

ಉತ್ತರಾಖಂಡದಲ್ಲಿ ಮಳೆ ಅವಾಂತರ: 24 ಗಂಟೆಯಲ್ಲಿ 8 ಸಾವು, ರುದ್ರಪ್ರಯಾಗದಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ

0

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದ ಭೂಕುಸಿತ, ಮನೆ ಕುಸಿತ, ಹಠಾತ್ ಪ್ರವಾಹ ಸೇರಿದಂತೆ ಹಲವು ಅವಘಡಗಳು ಸಂಭವಿಸಿದ್ದು, ರುದ್ರಪ್ರಯಾಗ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಮಣ್ಣಿನ ಸವಕಳಿಯಿಂದ ಮನೆಗಳು, ರಸ್ತೆಗಳು ಮತ್ತು ಕೃಷಿ ಜಮೀನುಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರ್ ಕಿ ಟುನಿ ಪ್ರದೇಶದಲ್ಲಿ ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ಕುಸಿದು ಟಿನ್ ಶೆಡ್‌ವೊಂದರ ಗೋಡೆ ಕುಸಿದ ಪರಿಣಾಮ, ಅದರೊಳಗೆ ಮಲಗಿದ್ದ ಇಬ್ಬರು ನೇಪಾಳಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಿರಂತರ ಮಳೆಯಿಂದ ಗುಡ್ಡದ ಮೇಲಿನ ಮಣ್ಣು ಮತ್ತು ಅವಶೇಷಗಳು ಸಡಿಲಗೊಂಡು ಶೆಡ್ ಮೇಲೆ ಬಿದ್ದಿದ್ದು, ಶೆಡ್ ಕುಸಿದ ಪರಿಣಾಮ ಒಳಗಿದ್ದ ಕಾರ್ಮಿಕರು ಸಿಲುಕಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿನೀತ್ ಪಾಲ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸೋಮೇಶ್ವರ ಬ್ಲಾಕ್‌ನ ವದ್ಯೂರಾ ಗ್ರಾಮದಲ್ಲಿ ಮನೆಯೊಂದರ ಮೇಲೆ ಮಣ್ಣು ಮತ್ತು ಅವಶೇಷಗಳು ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದರು. ಜಿಲ್ಲಾಧಿಕಾರಿ ಅಂಶುಲ್ ಸಿಂಗ್ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.

ಅಲ್ಮೋರಾದಲ್ಲಿ ಹಲವು ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ಮಣ್ಣು ಮತ್ತು ಅವಶೇಷಗಳು ನುಗ್ಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ. ಇದರಿಂದ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆ ಹಾಗೂ ಅಸ್ಥಿರವಾಗಿರುವ ಗುಡ್ಡ ಪ್ರದೇಶಗಳು ರಕ್ಷಣಾ ಮತ್ತು ರಸ್ತೆ ತೆರವು ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿವೆ.