2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಟೀಂ ಇಂಡಿಯಾ ಸತತ ಎರಡನೇ ಬಾರಿ ವಿಶ್ವಕಪ್ ಕಿರೀಟ ಗೆದ್ದುಕೊಂಡಿದೆ.
ಈ ಭರ್ಜರಿ ಗೆಲುವಿನ ನಂತರ ದೇಶಾದ್ಯಂತ ಭಾರಿ ಸಂಭ್ರಮಾಚರಣೆ ನಡೆದಿತ್ತು. ಇದೀಗ ವಿಶ್ವಕಪ್ ಮುಗಿದು ನಾಲ್ಕು ದಿನಗಳ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಉಪನಾಯಕ ಅಕ್ಷರ್ ಪಟೇಲ್ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿರುವ ವಿಚಾರ ಬೆಳಕಿಗೆ ಬಂದಿದೆ.
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಒಟ್ಟು 9 ಪಂದ್ಯಗಳನ್ನು ಆಡಿತ್ತು. ಆದರೆ ಈ ಪಂದ್ಯಗಳಲ್ಲಿ ಎರಡು ಪಂದ್ಯಗಳಿಂದ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈಬಿಡಲಾಗಿತ್ತು. ಅದರಲ್ಲೂ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮಹತ್ವದ ಪಂದ್ಯಕ್ಕೂ ಅಕ್ಷರ್ ಪಟೇಲ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು.
ಅಕ್ಷರ್ ಬದಲಿಗೆ ಅವಕಾಶ ಪಡೆದ ವಾಷಿಂಗ್ಟನ್ ಸುಂದರ್ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಪರಿಣಾಮವಾಗಿ ಟೀಂ ಇಂಡಿಯಾ ಆ ಪಂದ್ಯದಲ್ಲಿ 76 ರನ್ಗಳಿಂದ ಸೋಲು ಅನುಭವಿಸಿತು. ಈ ಸೋಲಿನ ಬಳಿಕ ಅಭಿಮಾನಿಗಳು ಹಾಗೂ ಕ್ರಿಕೆಟ್ ತಜ್ಞರು ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು.
ಇದೇ ವೇಳೆ ತಂಡದಿಂದ ಹೊರಗಿಟ್ಟಿದ್ದಕ್ಕೆ ಅಕ್ಷರ್ ಪಟೇಲ್ ಕೂಡ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಇದೀಗ ವಿಶ್ವಕಪ್ ಗೆಲುವಿನ ನಂತರ ಈ ಘಟನೆಯ ಬಗ್ಗೆ ಮಾತನಾಡಿರುವ ಸೂರ್ಯಕುಮಾರ್ ಯಾದವ್, ತಮ್ಮ ನಿರ್ಧಾರ ತಪ್ಪಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ.
‘ನಾನು ತೆಗೆದುಕೊಂಡ ಆ ನಿರ್ಧಾರದಿಂದ ಅಕ್ಷರ್ ತುಂಬಾ ಕೋಪಗೊಂಡಿದ್ದರು. ಅವರು ಕೋಪಗೊಂಡಿದ್ದರಲ್ಲಿ ತಪ್ಪೇನಿಲ್ಲ. ಅಕ್ಷರ್ ಅನುಭವಿ ಆಟಗಾರ. ಐಪಿಎಲ್ ಫ್ರಾಂಚೈಸಿಯನ್ನೂ ಮುನ್ನಡೆಸುತ್ತಿದ್ದಾರೆ. ಅಂತಹ ಆಟಗಾರನನ್ನು ತಂಡದಿಂದ ಹೊರಗಿಡುವುದರಿಂದ ಅವರಿಗೆ ನೋವಾಗುವುದು ಸಹಜ. ಪಂದ್ಯದ ಬಳಿಕ ನಾನು ಅವರೊಂದಿಗೆ ಮಾತನಾಡಿ ನನ್ನ ನಿರ್ಧಾರಕ್ಕೆ ಕ್ಷಮೆಯಾಚಿಸಿದ್ದೆ’ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.
ತಂಡದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ ಅದು ಸರಿಯಾದ ನಿರ್ಧಾರವಾಗಿರಲಿಲ್ಲ. ಆದರೆ ಅಕ್ಷರ್ ಪಟೇಲ್ ಅದಕ್ಕೆ ಬಹಳ ಪ್ರಬುದ್ಧವಾಗಿ ಪ್ರತಿಕ್ರಿಯಿಸಿದರು ಎಂದು ಸೂರ್ಯಕುಮಾರ್ ಯಾದವ್ ಸಂದರ್ಶನದಲ್ಲಿ ಹೇಳಿದ್ದಾರೆ.

