ಬೆಂಗಳೂರು: ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ವಂಚನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಗಂಭೀರ ಸೈಬರ್ ಅಪರಾಧ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರ ವಿರುದ್ಧದ ಆರೋಪಗಳ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಪ್ರಮುಖ ಆರೋಪಿ ಹಾಗೂ ನವದೆಹಲಿ ನಿವಾಸಿಯಾಗಿರುವ ರಾಜೀವ್ ಸಿಂಗ್ ಅರೋರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ತ್ಯಾಗರಾಜ ಎನ್. ಇನಾವಳಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.
ಪ್ರಕರಣದ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿರುವುದರಿಂದ ತಮಗೂ ಜಾಮೀನು ನೀಡಬೇಕು ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಈ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿದ ಮುಖ್ಯ ಆರೋಪ ಅರ್ಜಿದಾರರ ಮೇಲಿದೆ ಎಂದು ಸ್ಪಷ್ಟಪಡಿಸಿದೆ.
ಇತರೆ ಆರೋಪಿಗಳ ವಿರುದ್ಧ ಕೇವಲ ಆ ದಾಖಲೆಗಳನ್ನು ಹಂಚಿಕೆ ಮಾಡಿದ ಆರೋಪವಷ್ಟೇ ಇದ್ದು, ಪ್ರಮುಖ ಆರೋಪಿಯ ಪಾತ್ರ ಸಂಪೂರ್ಣ ವಿಭಿನ್ನವಾಗಿದೆ. ಹೀಗಾಗಿ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ಕಾರಣಕ್ಕೆ ಅರ್ಜಿದಾರರಿಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣ ವಿಳಂಬವಾಗುತ್ತಿರುವುದಕ್ಕೆ ತನಿಖಾ ಸಂಸ್ಥೆ ಕಾರಣವಲ್ಲ ಎಂದು ಹೇಳಿದ ನ್ಯಾಯಪೀಠ, ಸಹ-ಆರೋಪಿಗಳು ಸಕಾಲಕ್ಕೆ ನ್ಯಾಯಾಲಯಕ್ಕೆ ಹಾಜರಾಗದಿರುವುದೇ ವಿಳಂಬಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದೆ.
ಅರ್ಜಿದಾರರು ನವದೆಹಲಿಯ ಖಾಯಂ ನಿವಾಸಿಯಾಗಿರುವುದರಿಂದ, ಜಾಮೀನು ನೀಡಿದರೆ ಮುಂದಿನ ವಿಚಾರಣೆಗೆ ಅವರನ್ನು ಹಾಜರುಪಡಿಸುವುದು ಕಷ್ಟವಾಗಬಹುದು ಎಂದು ಪೀಠ ಗಮನಿಸಿದೆ.
ಇದೇ ವೇಳೆ, ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡ ಬಳಿಕ ಹೊಸ ಪೂರಕ ಸನ್ನಿವೇಶಗಳು ಅಥವಾ ಬದಲಾದ ಪರಿಸ್ಥಿತಿಗಳು ಯಾವುದೂ ಕಂಡುಬಂದಿಲ್ಲ ಎಂದು ಹೇಳಿ, ಎರಡನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ಹೈಕೋರ್ಟ್ ತಿರಸ್ಕರಿಸಿದೆ.
ಪ್ರಕರಣದ ಹಿನ್ನೆಲೆ
ಕಲಬುರಗಿಯ ಏಶಿಯನ್ ಮಾಲ್ನ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಫಾರ್ಯು ಗ್ಲ್ಯಾಮ್ ಚೋಯಿಸ್ ಎಂಬ ಬಟ್ಟೆ ಅಂಗಡಿಯ ಒಳಭಾಗದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಲೋಗೋಗಳನ್ನು ಬಳಸಿ ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.
ಈ ಮಾಹಿತಿ ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಅಂಗಡిపై ದಾಳಿ ನಡೆಸಿದ್ದರು. ದಾಳಿಯ ವೇಳೆ ನಕಲಿ ದಾಖಲೆಗಳ ಜಾಲ ಪತ್ತೆಯಾಗಿದ್ದು, ಆರೋಪಿಗಳ ವಿರುದ್ಧ ಕಲಬುರಗಿ ನಗರದ ಸಿಸಿಬಿ/ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ 420, 465, 468, 471 ಸೆಕ್ಷನ್ಗಳ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಮುಖ ಆರೋಪಿ ರಾಜೀವ್ ಸಿಂಗ್ ಅರೋರಾ ಅಲಿಯಾಸ್ ಅಭನೀಶ್ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.
ಈ ಹಿಂದೆ ಪ್ರಮುಖ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ನಂತರ ಇತರೆ ಆರೋಪಿಗಳಿಗೆ ಜಾಮೀನು ದೊರೆತಿದ್ದರೂ, ರಾಜೀವ್ ಸಿಂಗ್ ಅರೋರಾ ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನೂ ಇದೀಗ ನ್ಯಾಯಾಲಯ ತಿರಸ್ಕರಿಸಿದೆ.