Home Blog

ಹೆಬ್ಬಾಳದಲ್ಲಿ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ; 14 ಸಾವಿರ ಲೀಟರ್ ಹಾಲು ಮಣ್ಣುಪಾಲು!

0

ಬೆಂಗಳೂರು: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾದ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ಯಾಂಕರ್‌ ಕೆಎಂಎಫ್‌ ಹಾಲು ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಸಂಜಯನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ನಮ್ಮ ಸ್ವತ್ತು ನಮಗೆ ಕೊಡಿಸಿ; ಪೊಲೀಸರ ವಿರುದ್ಧ ಮಹಿಳೆಯ ಆಕ್ರೋಶ

0

ಗದಗ: 2024ರಲ್ಲಿ ನಡೆದಿದ್ದ ಭಾರೀ ಕಳ್ಳತನ ಪ್ರಕರಣದಲ್ಲಿ ಕಳ್ಳತನವಾದ ಸ್ವತ್ತು ಪತ್ತೆಯಾದರೂ ಅದನ್ನು ಕುಟುಂಬಕ್ಕೆ ಮರಳಿಸಿಲ್ಲ ಎಂದು ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಗದಗ ನಗರದಲ್ಲಿ ಸಿಪಿಐ ಶಿವಯೋಗಿ ಅವರ ವಿರುದ್ಧ ಮಹಿಳೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆ ಆಕ್ರೋಶಕ್ಕೆ ಕಾರಣವೇನು ಎಂಬ ಕುರಿತು ತುಳಜಾಬಾಯಿ ಅವರು ತಮ್ಮ ಆರೋಪಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ.

ಗದಗ ನಗರದ ಮುಳಗುಂದ ರಸ್ತೆಯ ಅಂಜುಮನ್ ಕಾಲೇಜು ಎದುರಿನ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ 2024ರ ಫೆಬ್ರುವರಿ 28ರಂದು ಹಾಡಹಗಲೇ ಕಳ್ಳತನ ನಡೆದಿತ್ತು ಎಂದು ತುಳಜಾಬಾಯಿ ತಿಳಿಸಿದ್ದಾರೆ. ಕಳ್ಳರು ಮನೆಯಲ್ಲಿದ್ದ ಸುಮಾರು ಒಂದು ಕೆಜಿ ಚಿನ್ನ, ಒಂದೂವರೆ ಕೆಜಿ ಬೆಳ್ಳಿ ಹಾಗೂ 36 ಲಕ್ಷ ರೂ. ನಗದು ದೋಚಿಕೊಂಡು ಹೋಗಿದ್ದರು ಎಂದು ಅವರು ದೂರಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಆಗಿದ್ದ ಶಿವಯೋಗಿ ಅವರು ತನಿಖೆಯ ಉಸ್ತುವಾರಿ ವಹಿಸಿದ್ದರು ಎಂದು ಕುಟುಂಬ ತಿಳಿಸಿದೆ.

ಸ್ವತ್ತು ಸಿಕ್ಕಿದೆ ಎಂದು ಹೇಳಿದ್ದರು:

ಕಳ್ಳತನ ನಡೆದ ಕೆಲ ದಿನಗಳ ನಂತರ ಸ್ವತ್ತು ಪತ್ತೆಯಾಗಿದೆ, ಅದನ್ನು ಹಿಂದಿರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು ಎಂದು ತುಳಜಾಬಾಯಿ ಆರೋಪಿಸಿದ್ದಾರೆ. ಪ್ರಕರಣದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ತಮ್ಮನ್ನು ಸೂಚಿಸಲಾಗಿತ್ತು ಎಂದೂ ಅವರು ಆರೋಪಿಸಿದ್ದಾರೆ. ಆದರೆ, ಪ್ರಕರಣ ನಡೆದು ಸಾಕಷ್ಟು ಸಮಯ ಕಳೆದರೂ ಕಳ್ಳತನವಾದ ಸ್ವತ್ತಿನ ಪೈಕಿ ಯಾವುದನ್ನೂ ತಮಗೆ ಹಿಂದಿರುಗಿಸಲಾಗಿಲ್ಲ ಎಂದು ಅವರು ದೂರಿದ್ದಾರೆ.

ನಕಲಿ ಸಹಿ ಆರೋಪ:

ಪ್ರಕರಣದಲ್ಲಿ ಸ್ವತ್ತು ಪತ್ತೆಯಾಗಿಲ್ಲ ಎಂದು ತಿಳಿಸಿ ನ್ಯಾಯಾಲಯಕ್ಕೆ ಸಿ-ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಆರೋಪಿಸಿರುವ ತುಳಜಾಬಾಯಿ, ಆ ವರದಿಗೆ ತಮ್ಮ ನಕಲಿ ಸಹಿ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ಕಳ್ಳತನವಾದ ಚಿನ್ನಾಭರಣಗಳ ಖರೀದಿ ಬಿಲ್ ಹಾಗೂ ಇತರ ದಾಖಲೆಗಳನ್ನು ಪೊಲೀಸರಿಗೆ ನೀಡಲಾಗಿದೆ. ಆದರೂ ತಮ್ಮ ಸ್ವತ್ತು ಮರಳಿ ದೊರೆತಿಲ್ಲ ಎಂದು ಕುಟುಂಬ ಆರೋಪಿಸಿದೆ.

ಇಂದಿನ ಮಾರುಕಟ್ಟೆ ಮೌಲ್ಯದಲ್ಲಿ ಕಳ್ಳತನವಾದ ಚಿನ್ನ, ಬೆಳ್ಳಿ ಹಾಗೂ ನಗದು ಸೇರಿ ಸುಮಾರು ಎರಡು ಕೋಟಿ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದೇವೆ ಎಂದು ಕುಟುಂಬ ಹೇಳಿಕೊಂಡಿದೆ.

ಗೃಹ ಸಚಿವರ ಮೊರೆ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿರುವ ತುಳಜಾಬಾಯಿ ಮತ್ತು ಅವರ ಪುತ್ರ ವಿನಾಯಕ, ಇದೀಗ ಗೃಹ ಸಚಿವರ ಮೊರೆ ಹೋಗಿದ್ದಾರೆ.

ಕಳ್ಳತನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಳ್ಳತನವಾದ ಸ್ವತ್ತು ನಿಜವಾಗಿಯೂ ಪತ್ತೆಯಾಗಿತ್ತೇ ಎಂಬುದನ್ನು ಪರಿಶೀಲಿಸಬೇಕು. ತಮ್ಮ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಹಿಳೆ ಹಾಗೂ ಅವರ ಕುಟುಂಬ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.

ನಮ್ಮ ಮನೆ ಕಳ್ಳತನವಾದ ಬಳಿಕ ಸ್ವತ್ತು ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ಇದುವರೆಗೆ ಯಾವುದೇ ಸ್ವತ್ತು ನಮಗೆ ಮರಳಿ ದೊರೆತಿಲ್ಲ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು” ಎಂದು ತುಳಜಾಬಾಯಿ ಒತ್ತಾಯಿಸಿದ್ದಾರೆ.

ಯಡಿಯೂರು ಕೆರೆ ಭೂವಿವಾದ: ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

0

ನವದೆಹಲಿ: ಬೆಂಗಳೂರಿನ ಯಡಿಯೂರು ಕೆರೆ ಪ್ರದೇಶದ ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಭೂಮಿಯ ಸರ್ವೆ ನಂಬರ್‌ಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ಕಂದಾಯ ಅಧಿಕಾರಿಗಳಿಗೆ ನೀಡಿದ್ದ ಅನುಮತಿಯನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್, 2014ರಲ್ಲಿ ನೀಡಲಾಗಿದ್ದ ಹೊಸ ತನಿಖೆಯ ನೋಟಿಸ್‌ನ್ನೂ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ್ ಅವರ ಪೀಠ ಈ ತೀರ್ಪು ನೀಡಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 56ರ ಅಡಿಯಲ್ಲಿ ಮರುಪರಿಶೀಲನಾ ಅಧಿಕಾರವನ್ನು ಚಲಾಯಿಸಲು ಮೂರು ವರ್ಷಗಳ ಶಾಸನಬದ್ಧ ಕಾಲಮಿತಿ ಇದೆ. ಈ ಅವಧಿ ಮುಗಿದ ಬಳಿಕ ಅಧಿಕಾರಿಗಳು ಮರುಪರಿಶೀಲನಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

2014ರಲ್ಲಿ ಆರಂಭವಾಗಿದ್ದ ವಿವಾದ:

ಯಡಿಯೂರು ಕೆರೆ ಒತ್ತುವರಿಯಾಗಿರುವ ಕುರಿತು ಬಂದ ದೂರಿನ ಆಧಾರದ ಮೇಲೆ ಕಂದಾಯ ದಾಖಲೆಗಳ ಜಂಟಿ ನಿರ್ದೇಶಕರು ಹಾಗೂ ನೋಂದಣಾಧಿಕಾರಿಗಳು 2014ರಲ್ಲಿ ಭೂ ಕಂದಾಯ ಕಾಯ್ದೆಯ ಸೆಕ್ಷನ್ 56ರ ಅಡಿಯಲ್ಲಿ ಹೊಸದಾಗಿ ತನಿಖೆ ನಡೆಸಲು ಭೂಮಾಲೀಕರಿಗೆ ನೋಟಿಸ್ ನೀಡಿದ್ದರು.

ಈ ನೋಟಿಸ್ ಪ್ರಶ್ನಿಸಿ ಭೂಮಾಲೀಕರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನ ಏಕಸದಸ್ಯ ಪೀಠವು, ಮೂರು ವರ್ಷಗಳ ಕಾಲಮಿತಿ ಮುಗಿದ ಬಳಿಕ ಅಧಿಕಾರಿಗಳು ಮರುಪರಿಶೀಲನಾ ಅಧಿಕಾರ ಬಳಸಲು ಸಾಧ್ಯವಿಲ್ಲ ಎಂದು ಹೇಳಿ ನೋಟಿಸ್ ರದ್ದುಗೊಳಿಸಿತ್ತು.

ಏಕಸದಸ್ಯ ಪೀಠದ ಆದೇಶ ಬದಲಿಸಿದ್ದ ವಿಭಾಗೀಯ ಪೀಠ:

ಆದರೆ, 2020ರ ಜನವರಿಯಲ್ಲಿ ಹೈಕೋರ್ಟ್‌ನ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ಬದಲಿಸಿತ್ತು. ಅಧಿಕಾರಿಗಳು ಈವರೆಗೆ ಯಾವುದೇ ಅಂತಿಮ ಆದೇಶ ಹೊರಡಿಸಿಲ್ಲ ಎಂಬ ಕಾರಣ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ಕಂದಾಯ ಅಧಿಕಾರಿಗಳಿಗೆ ಅವಕಾಶ ನೀಡಿತ್ತು.

ಈ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನೂ ಹೈಕೋರ್ಟ್ 2023ರ ಜೂನ್‌ನಲ್ಲಿ ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಮೂರು ವರ್ಷಗಳ ಕಾಲಮಿತಿ ಕಡ್ಡಾಯ ಎಂದ ಸುಪ್ರೀಂ:

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 56ರ ಅಡಿಯಲ್ಲಿ ಆದೇಶ ಅಥವಾ ದಾಖಲೆಗಳನ್ನು ಮರುಪರಿಶೀಲಿಸುವ ಅಧಿಕಾರವನ್ನು ಕಾಯ್ದೆಯಲ್ಲಿ ನಿಗದಿಪಡಿಸಿರುವ ಮೂರು ವರ್ಷಗಳ ಅವಧಿಯ ನಂತರ ಬಳಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಾನೂನಿನಲ್ಲಿ ನಿಗದಿಪಡಿಸಿರುವ ಕಾಲಮಿತಿಯನ್ನು ಮೀರಿ ಮರುಪರಿಶೀಲನಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕೆರೆ ಒತ್ತುವರಿ ತನಿಖೆಯ ನೆಪದಲ್ಲಿಯೂ ಶಾಸನಬದ್ಧ ಕಾಲಮಿತಿಯನ್ನು ಕಡೆಗಣಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಮೂಲಕ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, 2014ರಲ್ಲಿ ಭೂಮಾಲೀಕರಿಗೆ ನೀಡಲಾಗಿದ್ದ ಹೊಸ ತನಿಖೆಯ ನೋಟಿಸ್‌ನ್ನೂ ವಜಾಗೊಳಿಸಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಜ್ಜಾದ ಉಡುಪಿ; ಹುಲಿವೇಷ, ವಿಟ್ಲಪಿಂಡಿ ಉತ್ಸವಕ್ಕೆ ಕ್ಷಣಗಣನೆ!

0

ಉಡುಪಿ: ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗಿದೆ.

ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಅರ್ಘ್ಯ ಪ್ರದಾನ ನಡೆಯಲಿದ್ದು, ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವ ವೈಭವದಿಂದ ನಡೆಯಲಿದೆ. ಅಷ್ಟಮಿ ಸಂಭ್ರಮಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣ ಮಠದ ಸುತ್ತಮುತ್ತ ಹಾಗೂ ರಥಬೀದಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಸೆಪ್ಟೆಂಬರ್ 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಉಡುಪಿಗೆ ಆಗಮಿಸುವ ನಿರೀಕ್ಷೆಯಿದ್ದು, ಭಕ್ತರ ಸ್ವಾಗತಕ್ಕೆ ನಗರವನ್ನು ಸಿಂಗಾರಗೊಳಿಸಲಾಗುತ್ತಿದೆ.

ಅಷ್ಟಮಿಗೆ ಹುಲಿವೇಷದ ಮೆರುಗು:

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಕರಾವಳಿಯ ಸಾಂಪ್ರದಾಯಿಕ ಹುಲಿವೇಷಕ್ಕೂ ಸಿದ್ಧತೆಗಳು ಭರದಿಂದ ಸಾಗಿವೆ. ಕೃಷ್ಣ ರಥಬೀದಿಯಲ್ಲಿ ಹುಲಿಗಳ ಘರ್ಜನೆ, ಕುಣಿತ ಹಾಗೂ ಹೆಜ್ಜೆಗಳ ವೈಭವ ಕಣ್ಮನ ಸೆಳೆಯಲಿದೆ.

ಹಲವು ಹುಲಿವೇಷ ತಂಡಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಅಷ್ಟಮಿ ಅಂಗವಾಗಿ ವಿವಿಧ ತಂಡಗಳಿಂದ ಹುಲಿವೇಷ ಸೇವೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹುಲಿವೇಷದ ಜತೆಗೆ ಕರಾವಳಿಯ ಸಾಂಪ್ರದಾಯಿಕ ವೇಷಗಳು ಹಾಗೂ ಜನಪದ ಕಲಾ ಪ್ರದರ್ಶನಗಳು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ.

ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ:

ಅಷ್ಟಮಿ ಪ್ರಯುಕ್ತ ಹುಲಿವೇಷ ಸ್ಪರ್ಧೆ, ಕೃಷ್ಣ ವೇಷ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳಿಂದ ಹಿರಿಯರವರೆಗೆ ಎಲ್ಲರನ್ನೂ ಸೆಳೆಯುವಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಎರಡು ದಿನಗಳ ಕಾಲ ವಿಶೇಷ ವೇದಿಕೆಯಲ್ಲಿ ಹುಲಿವೇಷ ಸ್ಪರ್ಧೆ ನಡೆಯಲಿದೆ.

ಸೆ.5ರಂದು ವಿಟ್ಲಪಿಂಡಿ ಉತ್ಸವ:

ಸೆಪ್ಟೆಂಬರ್ 5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃಣ್ಮಯ ವಿಗ್ರಹದ ಮೆರವಣಿಗೆ ನಡೆಯಲಿದೆ.

ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವದ ಅಂಗವಾಗಿ ರಥಬೀದಿಯ ವಿಶೇಷ ವೇದಿಕೆಯಲ್ಲಿ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ಮಲ್ಲಯುದ್ಧ ಪ್ರದರ್ಶನವೂ ನಡೆಯಲಿದೆ. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿರುವ ಈ ಪ್ರದರ್ಶನಕ್ಕೆ ಭಕ್ತರು ಸಾಕ್ಷಿಯಾಗಲಿದ್ದಾರೆ.

ಇದರೊಂದಿಗೆ ವಿಶೇಷ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಲಾವಿದರಿಂದ ಕಲಾ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಅಷ್ಟಮಂಗಲ ಪ್ರಶ್ನೆಯ ಅನುಸಾರದಂತೆ ಕೋಟಿ ತುಳಸಿ ಅರ್ಚನೆಯನ್ನೂ ಕೈಗೊಳ್ಳಲಾಗಿದೆ.

ಆಕಳಿಕೆಯ ಜೊತೆ ಈ ಲಕ್ಷಣಗಳಿದ್ದರೆ ಎಚ್ಚರ! ಹೃದಯದ ಸಮಸ್ಯೆಯ ಸೂಚನೆಯಾಗಿರಬಹುದು

0

ನಿದ್ರೆ ಬರುತ್ತಿರುವಾಗ, ದೇಹ ದಣಿದಾಗ ಅಥವಾ ಬೇಸರವಾದಾಗ ಆಕಳಿಕೆ ಬರುವುದು ಸಾಮಾನ್ಯ. ಆದರೆ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಪದೇಪದೇ ಆಕಳಿಕೆ ಬರುತ್ತಿದ್ದರೆ ಅದರ ಹಿಂದೆ ನಿದ್ರಾಹೀನತೆ, ದೈಹಿಕ ಅಥವಾ ಮಾನಸಿಕ ದಣಿವು, ಒತ್ತಡ ಸೇರಿದಂತೆ ಹಲವು ಕಾರಣಗಳಿರಬಹುದು.

ಸಾಮಾನ್ಯವಾಗಿ ಆಕಳಿಕೆ ಏಕೆ ಬರುತ್ತದೆ ಎಂಬುದಕ್ಕೆ ನಿಖರ ಕಾರಣ ಇನ್ನೂ ಸಂಪೂರ್ಣವಾಗಿ ತಿಳಿದುಬಂದಿಲ್ಲ. ನಿದ್ರೆ ಮತ್ತು ಎಚ್ಚರದ ನಡುವಿನ ಬದಲಾವಣೆ, ದಣಿವು, ಬೇಸರ ಹಾಗೂ ಮಾನಸಿಕ ಒತ್ತಡದ ಸಂದರ್ಭಗಳಲ್ಲಿ ಆಕಳಿಕೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೆಲವು ಅಧ್ಯಯನಗಳ ಪ್ರಕಾರ ದೇಹದ ಉಷ್ಣತೆಯನ್ನು ನಿಯಂತ್ರಿಸುವ ಪ್ರಕ್ರಿಯೆಯೊಂದಿಗೂ ಆಕಳಿಕೆ ಸಂಬಂಧ ಹೊಂದಿರಬಹುದು.

ಆಕಳಿಕೆಗೂ ಹೃದಯದ ಸಮಸ್ಯೆಗೂ ಸಂಬಂಧವಿದೆಯೇ?

ಪದೇಪದೇ ಆಕಳಿಕೆ ಬರುವುದು ಮಾತ್ರ ಹೃದಯಾಘಾತದ ಲಕ್ಷಣ ಎಂದು ಹೇಳಲು ಸಾಧ್ಯವಿಲ್ಲ. ಆಕಳಿಕೆಯೊಂದಿಗೆ ಎದೆನೋವು, ಎದೆ ಬಿಗಿತ, ಉಸಿರಾಟದ ತೊಂದರೆ, ಅತಿಯಾದ ಬೆವರು, ವಾಕರಿಕೆ, ತಲೆಸುತ್ತುವಿಕೆ ಅಥವಾ ದವಡೆ, ಕುತ್ತಿಗೆ, ಭುಜ ಹಾಗೂ ಕೈಗಳಲ್ಲಿ ನೋವು ಕಾಣಿಸಿಕೊಂಡರೆ ಮಾತ್ರ ಹೆಚ್ಚಿನ ಎಚ್ಚರಿಕೆ ಅಗತ್ಯ.

ಈ ಲಕ್ಷಣಗಳು ಹೃದಯಾಘಾತ ಸೇರಿದಂತೆ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಇಂತಹ ಸಂದರ್ಭದಲ್ಲಿ ತಡ ಮಾಡದೆ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಮುಖ್ಯ.

ನಿದ್ರೆ ಮಾಡಿದ ಮೇಲೂ ಆಕಳಿಕೆ ನಿಲ್ಲುತ್ತಿಲ್ಲವೇ?

ಸಾಕಷ್ಟು ನಿದ್ರೆ ಮಾಡಿದ ನಂತರವೂ ನಿರಂತರವಾಗಿ ಆಕಳಿಕೆ ಬರುತ್ತಿದ್ದರೆ ಅಥವಾ ದಿನವಿಡೀ ಅತಿಯಾದ ನಿದ್ರೆ ಹಾಗೂ ದಣಿವು ಕಾಡುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ವಿಶೇಷವಾಗಿ ಹೊಸದಾಗಿ ಯಾವುದೇ ಔಷಧಿ ಸೇವನೆ ಆರಂಭಿಸಿದ ಬಳಿಕ ಆಕಳಿಕೆ ಹೆಚ್ಚಾಗಿದ್ದರೆ ಈ ವಿಷಯವನ್ನು ವೈದ್ಯರಿಗೆ ತಿಳಿಸಬೇಕು.

ಆಕಳಿಕೆ ಹೆಚ್ಚಾದಾಗ ಏನು ಗಮನಿಸಬೇಕು?

  • ಪ್ರತಿದಿನ ಸಾಕಷ್ಟು ನಿದ್ರೆ ಪಡೆಯುತ್ತಿದ್ದೀರಾ ಎಂಬುದನ್ನು ಪರಿಶೀಲಿಸಿ.
  • ಅತಿಯಾದ ದೈಹಿಕ ದಣಿವು ಅಥವಾ ಮಾನಸಿಕ ಒತ್ತಡವಿದೆಯೇ ಗಮನಿಸಿ.
  • ಹೊಸದಾಗಿ ಯಾವುದೇ ಔಷಧಿ ಸೇವನೆ ಆರಂಭಿಸಿದ್ದೀರಾ ಎಂಬುದನ್ನು ಪರಿಶೀಲಿಸಿ.
  • ಆಕಳಿಕೆಯೊಂದಿಗೆ ಎದೆನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ನಿರ್ಲಕ್ಷಿಸಬೇಡಿ.
  • ನಿರಂತರವಾಗಿ ಸಮಸ್ಯೆ ಮುಂದುವರಿದರೆ ವೈದ್ಯರ ಸಲಹೆ ಪಡೆಯಿರಿ.

ಒಟ್ಟಿನಲ್ಲಿ, ಆಕಳಿಕೆ ಸಾಮಾನ್ಯ ದೈಹಿಕ ಕ್ರಿಯೆಯಾಗಿರಬಹುದು. ಕೇವಲ ಆಕಳಿಕೆ ಬರುತ್ತಿದೆ ಎಂಬ ಕಾರಣಕ್ಕೆ ಹೃದಯದ ಸಮಸ್ಯೆ ಎಂದು ನಿರ್ಧರಿಸುವುದು ಸರಿಯಲ್ಲ. ಆದರೆ ಆಕಳಿಕೆಯೊಂದಿಗೆ ಇತರ ಅಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತರನ್ನು ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ನಿವಾಸಿ ೫೫ ವರ್ಷದ ಈರಪ್ಪ ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಹೊಲಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ತಿಳಿಯುತ್ತಿದ್ದಂತೆ ಗಜೇಂದ್ರಗಡ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

KMF ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದುಹೋಯ್ತು ಸಾವಿರಾರು ಲೀಟರ್ ಹಾಲು

0

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದ ಘಟನೆ ಹೆಬ್ಬಾಳ ಸಮೀಪ ನಡೆದಿದೆ.

ಕೆಎಂಎಫ್‌ಗೆ ಹೊರಟಿದ್ದ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಟ್ಯಾಂಕರ್‌ನ ಮುಚ್ಚಳ ಮುಚ್ಚಲು ಸಾರ್ವಜನಿಕರು ಪರದಾಡಿದ್ದಾರೆ. ಇನ್ನೂ ಕೆಲವರು ನೀರಿನ ಬಾಟಲಿಗಳಲ್ಲಿ ಹಾಲು ತುಂಬಿಕೊಂಡಿದ್ದಾರೆ.

ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಪಾಲಾಗಿದೆ. ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿವೃತ್ತ ನೌಕರರಿಗೆ ಸಿಹಿಸುದ್ದಿ; ‘ಸಂಧ್ಯಾ ಕಿರಣ’ ನಗದುರಹಿತ ಆರೋಗ್ಯ ಯೋಜನೆಗೆ ಸರ್ಕಾರ ಆದೇಶ

0

ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಸಿಹಿಸುದ್ದಿ ಸಿಕ್ಕಿದೆ. ನಗದುರಹಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ನಗದುರಹಿತ ಆರೋಗ್ಯ ಭಾಗ್ಯ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ.

ಸಂಧ್ಯಾ ಕಿರಣ ನಗದುರಹಿತ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಲಭ್ಯವಾಗಲಿದ್ದು, ವಾರ್ಷಿಕ 5 ಲಕ್ಷ ರೂಪಾಯಿಗಳವರೆಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಪಡೆಯಬಹುದಾಗಿದೆ. ನಿವೃತ್ತ ನೌಕರರಿಗೆ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸುವಂತೆ ನೌಕರರ ಸಂಘ ಈ ಹಿಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

ಸೆ.21ರಿಂದ 3 ದಿನ ವಿಶೇಷ ಅಧಿವೇಶನ; ಕಸ್ತೂರಿ ರಂಗನ್ ವರದಿ, ಬರ ಚರ್ಚೆಗೆ ಸಂಪುಟ ಒಪ್ಪಿಗೆ

0

ಬೆಂಗಳೂರು: ಸೆಪ್ಟೆಂಬರ್ 21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದ್ದು, ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ.

ಇದಕ್ಕೂ ಮುನ್ನ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರಿಸಿತ್ತಲ್ಲದೆ ಅಹೋರಾತ್ರಿ ಧರಣಿಗೂ ಸಿದ್ಧತೆ ನಡೆಸಿತ್ತು. ಈ ಮಧ್ಯೆಯೇ ವಿಧಾನಮಂಡಲದ ಕಲಾಪವನ್ನು ಮೂರು ದಿನ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿಯ ಕುರಿತು ಚರ್ಚೆ ನಡೆಯಲಿದೆ.

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

0

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಎಂದು ತೀವ್ರ ಆರೋಪ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ ಕೋವಿಡ್ ಹಗರಣ, ಬೋವಿ ನಿಗಮ ಹಗರಣ, ನೀಟ್ ಹಗರಣ, ದೇವರಾಜ್ ಟ್ರಕ್ ಟರ್ಮಿನಲ್ ಹಗರಣ, ಕಿಯೋನಿಕ್ಸ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಪರಶುರಾಮ್ ಥೀಮ್ ಪಾರ್ಕ್ ಹಗರಣ,

ಬಿಟ್‌ಕಾಯಿನ್ ಪ್ರಕರಣ ಹಾಗೂ ಕೆಕೆಆರ್‌ಡಿ ಅಕ್ರಮ ಸೇರಿದಂತೆ ನೂರಾರು ಕೋಟಿ ರೂಪಾಯಿ ಮೌಲ್ಯದ ಹಗರಣಗಳು ನಡೆದಿವೆ ಎಂದು ಆರೋಪಿಸಿದ ಪ್ರದೀಪ್ ಈಶ್ವರ್, ಯಡಿಯೂರಪ್ಪ, ಬೊಮ್ಮಾಯಿ, ಶ್ರೀರಾಮುಲು, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಸುಧಾಕರ್, ಜನಾರ್ದನ ರೆಡ್ಡಿ ಹಾಗೂ ಅಶೋಕ್ ಸೇರಿದಂತೆ ಅನೇಕರ ಅವಧಿಯಲ್ಲಿ ಈ ಹಗರಣಗಳು ನಡೆದಿವೆ ಎಂದು ದೂರಿ, ಇದಕ್ಕೆ ಬಿಜೆಪಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆಯೆಂದೂ, ಅಭಿವೃದ್ಧಿ ಕಾರ್ಯಗಳಿಗೆ 57 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆಯೆಂದೂ ತಿಳಿಸಿದ ಅವರು, ಬರ ಪರಿಸ್ಥಿತಿಯ ಬಗ್ಗೆ ಮಾತನಾಡಲು ವಿಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ಶ್ರೀರಾಮುಲು ಅವರು ಹಿಂದಿನ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಅಗೌರವದಿಂದ ಮಾತನಾಡಿದ್ದನ್ನು ಆಕ್ಷೇಪಿಸಿದ ಪ್ರದೀಪ್ ಈಶ್ವರ್, ಇನ್ನು ಮುಂದೆ ರಾಹುಲ್ ಗಾಂಧಿ ಬಗ್ಗೆ ಅಗೌರವದಿಂದ ಮಾತನಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ಮಾತಿನಲ್ಲಿ ನಿಯಂತ್ರಣ ಇಟ್ಟುಕೊಳ್ಳುವಂತೆ ಶ್ರೀರಾಮುಲು ಅವರಿಗೆ ಆಗ್ರಹಿಸಿದರು.