Home Blog

ಗ್ಯಾರಂಟಿಗಳು ಹೊರೆಯಾದರೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

0

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಚರ್ಚೆಗಳ ನಡುವೆಯೂ, ಯಾವುದೇ ಗ್ಯಾರಂಟಿಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಅನಾವಶ್ಯಕ ಊಹಾಪೋಹಗಳು ಹರಡಲಾಗುತ್ತಿವೆ. ಕೆಲವು ಪ್ರಕರಣಗಳಲ್ಲಿ ಮೃತಪಟ್ಟಿರುವವರ ಬ್ಯಾಂಕ್ ಖಾತೆಗಳಿಗೆ ಗ್ಯಾರಂಟಿ ಯೋಜನೆಯ ಹಣ ಜಮೆಯಾಗಿರುವುದು ಮತ್ತು ಪಡಿತರ ಅಕ್ಕಿಯನ್ನೂ ಸಹ ಮೃತರ ಹೆಸರಿನಲ್ಲಿ ಪಡೆಯಲಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆಯಲ್ಲಿ ಇಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದ ಅವರು, ಇತರ ಯೋಜನೆಗಳಲ್ಲಿ ದುರುಪಯೋಗವಾಗಿರುವುದು ಸತ್ಯವಾಗಿದ್ದು, ಮೃತರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಪಡೆದಿರುವ ಪ್ರಕರಣಗಳಿವೆ ಎಂದು ಹೇಳಿದರು. ಈ ರೀತಿಯ ಅಕ್ರಮಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಮೃತಪಟ್ಟವರ ನಿಖರ ಲೆಕ್ಕ ಸಿಗದೆ ಇರುವುದೇ ದೊಡ್ಡ ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು. ಸ್ಥಿತಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬಾರದು ಎಂಬ ಸಲಹೆ ಕುರಿತು ಕೇಳಿದಾಗ, ಆ ವಿಷಯವನ್ನೂ ಪರಿಶೀಲಿಸಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

ಗ್ಯಾರಂಟಿಗಳ ಭಾರ! 2.30 ಲಕ್ಷ ಮೃತರ ಖಾತೆಗೆ ಹಣ ಜಮೆ – ಸರ್ಕಾರಕ್ಕೆ ಆರ್ಥಿಕ ಸಂಕಷ್ಟ

0

ಬೆಂಗಳೂರು: ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಆರ್ಥಿಕ ಒತ್ತಡಕ್ಕೆ ಸಿಲುಕಿರುವುದಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಅಂಶ ಬಹಿರಂಗವಾಗಿದ್ದು, ಒಟ್ಟು 2.30 ಲಕ್ಷ ಮೃತ ಫಲಾನುಭವಿಗಳ ಖಾತೆಗಳಿಗೆ ಸುಮಾರು 79 ಕೋಟಿ ರೂ. ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಈ ಮೊತ್ತವನ್ನು ವಾಪಸ್ ಪಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದ್ದು, ಈಗಾಗಲೇ 2.30 ಕೋಟಿ ರೂ. ಮರುಪಡೆಯಲಾಗಿದೆ. ಈ ಬೆಳವಣಿಗೆಯ ನಡುವೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವೇ ಸರ್ಕಾರಕ್ಕೆ ಭಾರವಾಗುತ್ತಿದೆ ಎಂಬ ಮಾತುಗಳು ಆಡಳಿತ ವಲಯದಿಂದಲೇ ಕೇಳಿಬರುತ್ತಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ ಉಂಟಾಗಿದೆ ಎಂದು ಸ್ವಪಕ್ಷದ ಶಾಸಕರು ಹಾಗೂ ಜನಪ್ರತಿನಿಧಿಗಳೇ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲೇ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೂಡ ಉಚಿತ ಹಾಗೂ ಗ್ಯಾರಂಟಿ ಯೋಜನೆಗಳು ದೇಶದ ಆರ್ಥಿಕತೆಗೆ ಮಾರಕವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿತ್ತು. ಇದಾದ ಬಳಿಕ ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಬರ್ಡನ್ ಆಗಿವೆ ಎಂದು ಹೇಳಿದ್ದು, ಸಿಎಂ ಸಿದ್ದರಾಮಯ್ಯ ವರ್ಷಕ್ಕೆ 52 ಸಾವಿರ ಕೋಟಿ ರೂ.ಕ್ಕಿಂತ ಹೆಚ್ಚು ಹಣ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಕೂಡ ಸರ್ಕಾರಕ್ಕೆ ಎಲ್ಲವೂ ಹೊರೆಯಾಗಿದೆ ಎಂಬ ಮಾತು ಆಡಿದ್ದು, ಗ್ಯಾರಂಟಿಗಳ ಆರ್ಥಿಕ ಪರಿಣಾಮವನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅವುಗಳನ್ನು ಮುಂದುವರಿಸಲಾಗುವುದು ಎಂದು ಸಿಎಂ, ಡಿಸಿಎಂ ಹಾಗೂ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲರೂ ಸೇರಿಯೇ ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಈಗ ಅವು ಹೊರೆಯಾಗಿವೆ ಎಂದು ಭಾಸವಾಗಿರಬಹುದು ಎಂದಿದ್ದಾರೆ. ಇದೇ ವೇಳೆ ಗ್ಯಾರಂಟಿ ಯೋಜನೆಗಳು ಹೊರೆಯಲ್ಲ ಎಂದು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ಇತ್ತ ಆಡಳಿತ ಪಕ್ಷದ ಈ ಹೇಳಿಕೆಗಳ ವಿರುದ್ಧ ಭಾಜಪ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಅಶ್ವಥ್ ನಾರಾಯಣ್, ಗ್ಯಾರಂಟಿಗಳ ಮೇಲೆಯೇ ಸರ್ಕಾರಕ್ಕೆ ನಂಬಿಕೆ ಇಲ್ಲದಂತಾಗಿದೆ, ಗೊಂದಲ ಮೂಡಿಸದೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗೃಹಲಕ್ಷ್ಮಿ ಯೋಜನೆಯಲ್ಲಿ 5,000 ಕೋಟಿ ರೂ. ನಾಪತ್ತೆಯಾಗಿದೆ ಎಂದು ಆರೋಪಿಸಿದ್ದು, ಖಾಲಿ ಹುದ್ದೆಗಳಿದ್ದರೂ ಯುವ ನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸಿಟಿ ರವಿ, ಜನ ಉದ್ಯೋಗ ಕೇಳುತ್ತಿದ್ದಾರೆ, ಭಿಕ್ಷೆ ಅಲ್ಲ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕೇಂದ್ರ ಸಚಿವ ಕುಮಾರಸ್ವಾಮಿ, ಗ್ಯಾರಂಟಿಗಳ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ನಾಡಿನ ಅಭಿವೃದ್ಧಿಗೆ ಪೂರಕವಾದ ಸ್ಪಷ್ಟ ಕಾರ್ಯಕ್ರಮಗಳು ಕಾಣುತ್ತಿಲ್ಲ. ಜನರಿಂದ ಸಂಗ್ರಹಿಸಿದ ತೆರಿಗೆ ಹಣದ ಸಮರ್ಪಕ ಬಳಕೆ ಆಗುತ್ತಿಲ್ಲ ಎಂಬುದೇ ಇಂದಿನ ಸ್ಥಿತಿಗೆ ಕಾರಣ ಎಂದು ಟೀಕಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭವಿಷ್ಯ ಮತ್ತು ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿವೆ.

ಫ್ರಿಡ್ಜ್ ನೀರಿಗಿಂತ ಮಣ್ಣಿನ ಮಡಕೆ ನೀರೇ ಬೆಸ್ಟ್: ಬೇಸಿಗೆಯಲ್ಲಿ ಆರೋಗ್ಯ ಕಾಪಾಡುವ ಸರಳ ಉಪಾಯ!

0

ಹಿಂದಿನ ಕಾಲದಲ್ಲಿ ಮಣ್ಣಿನ ಮಡಕೆಯಲ್ಲೇ ನೀರನ್ನು ಸಂಗ್ರಹಿಸಿ ಕುಡಿಯುವ ಪದ್ಧತಿ ಸಾಮಾನ್ಯವಾಗಿತ್ತು. ಅಡುಗೆಗೆ, ಕುಡಿಯಲು ಹಾಗೂ ದೇಹವನ್ನು ತಂಪಾಗಿಸಲು ಮಣ್ಣಿನ ಮಡಕೆ ನೀರನ್ನೇ ಬಳಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫ್ರಿಡ್ಜ್ ಬಳಕೆ ಹೆಚ್ಚಾಗುತ್ತಿದ್ದಂತೆ ಮಣ್ಣಿನ ಮಡಕೆಗಳು ನಮ್ಮ ಬದುಕಿನಿಂದ ನಿಧಾನವಾಗಿ ಮಾಯವಾಗಿವೆ.

ಆರೋಗ್ಯ ತಜ್ಞರ ಅಭಿಪ್ರಾಯದಂತೆ, ಅತಿಯಾಗಿ ತಣ್ಣನೆಯ ಫ್ರಿಡ್ಜ್ ನೀರು ದೇಹಕ್ಕೆ ಎಲ್ಲ ಸಂದರ್ಭದಲ್ಲೂ ಸೂಕ್ತವಲ್ಲ. ಅದರ ಬದಲು ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ದೇಹಕ್ಕೆ ನೈಸರ್ಗಿಕವಾಗಿ ಹೊಂದಿಕೊಳ್ಳುವ ತಾಪಮಾನದಲ್ಲಿದ್ದು, ಆರೋಗ್ಯಕ್ಕೆ ಹೆಚ್ಚು ಲಾಭಕಾರಿ.

ಮಣ್ಣಿನ ಮಡಕೆ ಜೇಡಿಮಣ್ಣಿನಿಂದ ತಯಾರಾಗಿರುವುದರಿಂದ ಅದರಲ್ಲಿ ಸಂಗ್ರಹಿಸಿದ ನೀರು ಸ್ವಾಭಾವಿಕವಾಗಿ ತಂಪಾಗುತ್ತದೆ. ಜೇಡಿಮಣ್ಣಿನ ರಂಧ್ರಗಳ ಮೂಲಕ ನೀರು ನಿಧಾನವಾಗಿ ವಾಷ್ಪೀಕರಣಗೊಂಡು ತಾಪಮಾನ ಕಡಿಮೆಯಾಗುತ್ತದೆ. ಈ ಪ್ರಕ್ರಿಯೆಯಿಂದ ನೀರು ಅತಿಯಾಗಿ ತಣ್ಣಗಾಗದೆ ದೇಹಕ್ಕೆ ಅನುಕೂಲಕರವಾಗಿರುತ್ತದೆ. ಮಣ್ಣಿನ ಮಡಕೆ ನೀರಿನ pH ಮಟ್ಟವು ಸಮತೋಲನದಲ್ಲಿರುವುದರಿಂದ ದೇಹದಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಗ್ಯಾಸ್ಟ್ರಿಕ್, ಆಮ್ಲೀಯತೆ, ಮಲಬದ್ಧತೆ ಹಾಗೂ ಇತರ ಹೊಟ್ಟೆ ಸಂಬಂಧಿತ ಸಮಸ್ಯೆಗಳು ನಿಯಂತ್ರಣಕ್ಕೆ ಬರುತ್ತವೆ.

ಇದಲ್ಲದೆ, ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ದೇಹದ ನಿರ್ವಿಷೀಕರಣಕ್ಕೆ ಸಹಕಾರಿ. ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ಹೊರಹಾಕಲ್ಪಡುತ್ತವೆ ಮತ್ತು ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಣ್ಣಿನ ಮಡಕೆಯಲ್ಲಿರುವ ನೈಸರ್ಗಿಕ ಖನಿಜಗಳು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ದೇಹವನ್ನು ಚುರುಕಾಗಿಡುತ್ತವೆ. ಬೇಸಿಗೆಯ ತೀವ್ರ ಬಿಸಿಲಿನ ಸಮಯದಲ್ಲಿ ಶಾಖದ ಹೊಡೆತದಿಂದ ರಕ್ಷಣೆ ನೀಡಲು ಮಣ್ಣಿನ ಮಡಕೆ ನೀರು ಅತ್ಯಂತ ಪರಿಣಾಮಕಾರಿಯಾಗಿದೆ. ಇದು ದೇಹವನ್ನು ತ್ವರಿತವಾಗಿ ಪುನರ್ಜಲೀಕರಣಗೊಳಿಸಿ ದೌರ್ಬಲ್ಯವನ್ನು ಕಡಿಮೆ ಮಾಡುತ್ತದೆ.

ಫ್ರಿಡ್ಜ್ ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ಗಂಟಲು ನೋವು, ಶೀತ, ಜ್ವರ ಸೇರಿದಂತೆ ಕೆಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಮಣ್ಣಿನ ಮಡಕೆ ನೀರು ಕುಡಿಯುವುದರಿಂದ ಇಂತಹ ಸಮಸ್ಯೆಗಳ ಅಪಾಯ ಕಡಿಮೆ. ಜೊತೆಗೆ ಮಣ್ಣಿನ ಮಡಕೆಯ ನೀರಿಗೆ ಇರುವ ಸಹಜ ಮಣ್ಣಿನ ವಾಸನೆ ಮತ್ತು ಶುದ್ಧೀಕರಣ ಗುಣಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಹೀಗಾಗಿ ಪಾರಂಪರಿಕ ಜ್ಞಾನವನ್ನು ಮರಳಿ ಅಳವಡಿಸಿಕೊಂಡು, ಈ ಬೇಸಿಗೆಯಲ್ಲಿ ಫ್ರಿಡ್ಜ್ ನೀರಿನ ಬದಲು ಮಣ್ಣಿನ ಮಡಕೆ ನೀರನ್ನು ಆಯ್ಕೆ ಮಾಡುವುದು ಆರೋಗ್ಯಕರ ಮತ್ತು ಸುರಕ್ಷಿತ ನಿರ್ಧಾರವಾಗುತ್ತದೆ.

ಕಣ್ಣು ನೋವಿನ ಹಿಂದೆ ಇರಬಹುದು ಮೈಗ್ರೇನ್ ಸಮಸ್ಯೆ!? ತಕ್ಷಣ ವೈದ್ಯರನ್ನು ಸಂಪರ್ಕಿಸಿ

0

ಇತ್ತೀಚಿನ ದಿನಗಳಲ್ಲಿ ಕಣ್ಣುಗಳ ಮೇಲೆ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದ್ದು, ಬಹುತೇಕರು ಅದನ್ನು ತಲೆನೋವಿನ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ.

ನೋವು ಹೆಚ್ಚಾದಾಗ ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡರೂ ವರದಿಯಲ್ಲಿ ಯಾವುದೇ ಗಂಭೀರ ಸಮಸ್ಯೆ ಕಂಡುಬರದ ಸಂದರ್ಭಗಳೂ ಇವೆ. ಆದರೆ ವೈದ್ಯರ ಪ್ರಕಾರ ಕಣ್ಣುಗಳ ಮೇಲಿನ ನೋವು ದೃಷ್ಟಿ ದುರ್ಬಲತೆ, ಕನ್ನಡಕದ ಪಾಯಿಂಟ್ ಬದಲಾವಣೆಯ ಅಗತ್ಯ, ಮೈಗ್ರೇನ್ ಅಥವಾ ಕಣ್ಣಿನ ಮೇಲಿನ ಹೆಚ್ಚಿದ ಒತ್ತಡದ ಲಕ್ಷಣವಾಗಿರಬಹುದು. ವಿಶೇಷವಾಗಿ ಕನ್ನಡಕದ ಪ್ರಿಸ್ಕ್ರಿಪ್ಷನ್ ಸರಿಯಾಗಿಲ್ಲದಿದ್ದರೆ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಹಣೆಯ ಭಾಗದವರೆಗೆ ನೋವು ವಿಸ್ತರಿಸಬಹುದು. ಕಣ್ಣುಗಳ ಮೇಲೆ ಮಾತ್ರ ನೋವು ಕಂಡುಬಂದರೆ ಅದು ಸಾಮಾನ್ಯವಾಗಿ ಮೆದುಳಿನ ಸಮಸ್ಯೆಯ ಸೂಚಕವಾಗಿರುವುದು ಅಪರೂಪ.

ಆದರೆ ತಲೆತಿರುಗುವಿಕೆ, ಪದೇಪದೇ ವಾಂತಿ, ಹಣೆಯಿಂದ ಕತ್ತಿನವರೆಗೆ ತೀವ್ರ ತಲೆನೋವು, ದೇಹದ ಭಾಗಗಳಲ್ಲಿ ಹಠಾತ್ ಮರಗಟ್ಟುವಿಕೆ ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಕಣ್ಣು ಪರೀಕ್ಷೆ ಮಾಡಿಸಿಕೊಳ್ಳುವುದು, ಮೊಬೈಲ್ ಹಾಗೂ ಟಿವಿ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡುವುದು ಬಹಳ ಮುಖ್ಯ.

ದಂಪತಿಗಳ ಐಟಿ ವಿವರಗಳು RTI ಅಡಿಯಲ್ಲಿ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

0

ಬೆಂಗಳೂರು: ಆದಾಯ ತೆರಿಗೆ ಪಾವತಿಸುವುದು ವ್ಯಕ್ತಿಯ ಗೌಪ್ಯತೆಯ ವಿಷಯವಾಗಿದ್ದು, ವೈವಾಹಿಕ ವಿವಾದಗಳಲ್ಲಿ ದಂಪತಿಗಳ ಆದಾಯ ತೆರಿಗೆ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಪಡೆಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಸಂಬಂಧ ಸಮಗ್ರ ಮಾರ್ಗಸೂಚಿಗಳನ್ನು ಕೂಡ ನ್ಯಾಯಾಲಯ ಹೊರಡಿಸಿದೆ.

ಪತಿಯ ಆದಾಯ ತೆರಿಗೆ ಪಾವತಿ ವಿವರಗಳನ್ನು ಪತ್ನಿಗೆ ಒದಗಿಸುವಂತೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಆಯೋಗದ ಆದೇಶವನ್ನು ರದ್ದುಪಡಿಸಿದೆ.

ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಜೀವನಾಂಶ ಅಥವಾ ನಿರ್ವಹಣಾ ವೆಚ್ಚ ನಿಗದಿ ಮಾಡುವಾಗ ಪಕ್ಷಗಾರರ ಆದಾಯದ ದಾಖಲೆಗಳನ್ನು ಪರಿಶೀಲಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಗಳು ಎರಡೂ ಪಕ್ಷಗಳ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಆದಾಯ ತೆರಿಗೆ ಇಲಾಖೆ ಅಥವಾ ಇತರೆ ಪ್ರಾಧಿಕಾರಗಳಿಗೆ ಮನವಿ ಮಾಡಬಹುದು ಎಂದು ನ್ಯಾಯಪೀಠ ಹೇಳಿದೆ.

ಪಕ್ಷಗಾರರ ಆದಾಯ ಕುರಿತ ವಿವಾದಗಳಿದ್ದರೆ, ಆದಾಯ ತೆರಿಗೆ ಇಲಾಖೆ, ಬ್ಯಾಂಕ್‌ಗಳು ಹಾಗೂ ಇತರೆ ಆರ್ಥಿಕ ಸಂಸ್ಥೆಗಳಿಗೆ ಸಮನ್ಸ್ ಜಾರಿ ಮಾಡುವ ಅಧಿಕಾರ ವಿಚಾರಣಾ ನ್ಯಾಯಾಲಯಗಳಿಗೆ ಇದೆ ಎಂದು ತಿಳಿಸಿದೆ.

ಆದಾಯ ತೆರಿಗೆ ಪಾವತಿ, ಮೌಲ್ಯಮಾಪನ ಹಾಗೂ ಇತರೆ ಹಣಕಾಸು ವಿವರಗಳು RTI ಕಾಯ್ದೆಯ ಸೆಕ್ಷನ್ 8(1)(ಜೆ) ಅಡಿಯಲ್ಲಿ ವೈಯಕ್ತಿಕ ಮಾಹಿತಿಯಾಗಿದ್ದು, ಅವುಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ನ್ಯಾಯಾಲಯ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ಅಡಗಿದ್ದಲ್ಲಿ ಮಾತ್ರ ಸೂಕ್ತ ಪ್ರಾಧಿಕಾರದ ಸೂಚನೆಯ ಮೇರೆಗೆ ಮಾಹಿತಿ ನೀಡಬಹುದಾಗಿದೆ.

ವೈವಾಹಿಕ ವಿವಾದಗಳು ಅಥವಾ ಜೀವನಾಂಶದ ಪ್ರಕರಣಗಳಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿರುವುದಿಲ್ಲ. ಆದ್ದರಿಂದ ಸಂಗಾತಿಯ ಆದಾಯ ತೆರಿಗೆ ವಿವರಗಳನ್ನು ಪಡೆಯಲು RTI ಮಾರ್ಗ ಬದಲಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ನಿಜವಾದ ಆದಾಯ ಮಾಹಿತಿ ಪಡೆಯಲು ಎದುರಾಗುವ ಸಮಸ್ಯೆಗಳನ್ನು ನಿವಾರಿಸಲು ವಿಚಾರಣಾ ನ್ಯಾಯಾಲಯಗಳು ಮತ್ತು ಆದಾಯ ತೆರಿಗೆ ಇಲಾಖೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನೂ ಹೈಕೋರ್ಟ್ ಪ್ರಕಟಿಸಿದೆ.

ಲಾಭದ ಆಸೆ ತೋರಿಸಿ 74 ವರ್ಷದ ವ್ಯಕ್ತಿಗೆ ₹1.77 ಕೋಟಿ ರೂ. ಪಂಗನಾಮ!

0

ಮಂಗಳೂರು:ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭದ ಆಸೆಗೆ ಬಿದ್ದ ಮಂಗಳೂರಿನ 74 ವರ್ಷದ ವ್ಯಕ್ತಿಯೋರ್ವರು ಸುಮಾರು ₹1.77 ಕೋಟಿ ಹಣ ಕಳೆದುಕೊಂಡಿದ್ದಾರೆ. ವೆಂಟ್ರೇಡ್ ಎಂಬ ಕಂಪನಿಯಿಂದ ಶೋಯಬ್ ಘೌರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ಕಳೆದ ಡಿಸೆಂಬರ್ 24ರಂದು ಸಂತ್ರಸ್ತರಿಗೆ ಕರೆ ಮಾಡಿ ಅಮೆರಿಕನ್ ಕಮಾಡಿಟೀಸ್ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿದ್ದಾನೆ.

ಭಾರತೀಯ ರೂಪಾಯಿಯನ್ನು ಅಮೆರಿಕನ್ ಡಾಲರ್‌ಗೆ ಪರಿವರ್ತಿಸಿ ಹೂಡಿಕೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾನೆ. ಇಮೇಲ್, ವಾಟ್ಸಾಪ್ ಹಾಗೂ ದೂರವಾಣಿ ಕರೆಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಆರೋಪಿಗೆ ಮೊದಲ ಹಂತದಲ್ಲಿ ಸಂತ್ರಸ್ತರು ಸ್ವಲ್ಪ ಮೊತ್ತ ಹೂಡಿಕೆ ಮಾಡಿದ್ದರು. ಆ ಹಣಕ್ಕೆ ಸ್ವಲ್ಪ ಮಟ್ಟಿನ ಲಾಭ ಕೂಡ ಖಾತೆಗೆ ಜಮಾ ಆಗಿದ್ದರಿಂದ ವಿಶ್ವಾಸ ಹೆಚ್ಚಾಗಿದೆ.

ನಂತರ ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಆರೋಪಿ ನೀಡಿದ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ (RTGS), ಎನ್‌ಇಎಫ್‌ಟಿ (NEFT) ಹಾಗೂ ಐಎಂಪಿಎಸ್ (IMPS) ಮೂಲಕ ದೊಡ್ಡ ಮೊತ್ತಗಳನ್ನು ವರ್ಗಾಯಿಸಲಾಗಿದೆ. ಜನವರಿ 5ರಿಂದ ಫೆಬ್ರವರಿ 2ರವರೆಗೆ ಒಟ್ಟು ₹1,77,64,668.22 ಹಣ ವರ್ಗಾವಣೆ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡ ಮೊತ್ತ ಕೈಸೇರಿದ ಬಳಿಕ ಆರೋಪಿ ಸಂಪರ್ಕ ಕಡಿತಗೊಳಿಸಿದ್ದಾನೆ. ವಂಚನೆಗೆ ಒಳಗಾಗಿರುವುದನ್ನು ಅರಿತ ಸಂತ್ರಸ್ತರು ಮಂಗಳೂರು ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಕಂಟೆಂಟ್ ಕ್ರಿಯೇಟರ್ಸ್‌ʼಗೆ ನ್ಯಾಯಯುತ ಆದಾಯ ಹಂಚಿಕೆ ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

0

ನವದೆಹಲಿ: ಸಾಮಾಜಿಕ ಮಾಧ್ಯಮ ವೇದಿಕೆಗಳು ಕಂಟೆಂಟ್ ಕ್ರಿಯೇಟರ್ಸ್‌ಗಳಿಗೆ ನ್ಯಾಯಯುತ ಆದಾಯದ ಪಾಲನ್ನು ಹಂಚಿಕೊಳ್ಳಬೇಕು ಎಂದು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ಸಮಾವೇಶದಲ್ಲಿ ಮಾತನಾಡಿದ ಅವರು,

ಸುದ್ದಿ ಸಂಸ್ಥೆಗಳು, ಸಾಂಪ್ರದಾಯಿಕ ಮಾಧ್ಯಮಗಳು, ದೂರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕಂಟೆಂಟ್ ಕ್ರಿಯೇಟರ್ಸ್, ಪ್ರಭಾವಿಗಳು, ಪ್ರಾಧ್ಯಾಪಕರು ಮತ್ತು ಸಂಶೋಧಕರು ಸೇರಿದಂತೆ ಎಲ್ಲರಿಗೂ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಸಮ್ಮತವಾಗಿ ಆದಾಯ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.

ವೇದಿಕೆಗಳಲ್ಲಿ ಸಮಾನ ಹಣಗಳಿಕೆ ಮಾದರಿಗಳನ್ನು ಜಾರಿಗೆ ತರಬೇಕೆಂದು ಅವರು ಕರೆ ನೀಡಿದರು. ಮಾಧ್ಯಮ, ಶಾಸಕಾಂಗ ಮತ್ತು ನ್ಯಾಯಾಂಗ ಸೇರಿದಂತೆ ಮಾನವ ಸಮಾಜದ ವಿವಿಧ ಸ್ತಂಭಗಳನ್ನು ಬಂಧಿಸಿರುವ ನಂಬಿಕೆ ಎಂಬ ತತ್ವ ಇತ್ತೀಚೆಗೆ ಸವಾಲಿಗೆ ಒಳಗಾಗಿದೆ ಎಂದು ಹೇಳಿದರು.

ಇಡೀ ಸಮಾಜವು ಸಂಸ್ಥೆಗಳ ಮೇಲಿನ ನಂಬಿಕೆಯ ಮೇಲೆ ನಿರ್ಮಾಣಗೊಂಡಿದೆ. ಆ ನಂಬಿಕೆಗೆ ಧಕ್ಕೆಯಾದಾಗ ಸಮಾಜದ ಅಡಿಪಾಯವೇ ದುರ್ಬಲಗೊಳ್ಳಲು ಆರಂಭವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಡೀಪ್‌ಫೇಕ್‌ಗಳು, ತಪ್ಪು ಮಾಹಿತಿ ಅಭಿಯಾನಗಳು ಹಾಗೂ ಕೃತಕವಾಗಿ ಸೃಷ್ಟಿಸಲಾದ ವೀಡಿಯೊಗಳು ಮಾಧ್ಯಮ ಸೇರಿದಂತೆ ಹಲವು ಸಂಸ್ಥೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಸಚಿವರು ಎಚ್ಚರಿಸಿದರು.

ಶಿಕ್ಷಣದಲ್ಲಿ ಹೊಸ ಮಾದರಿ! KPS ಬದಲಾಗಿ “ಮ್ಯಾಗ್ನೆಟ್ ಶಾಲೆ” – ಸಚಿವ ಕೃಷ್ಣ ಬೈರೇಗೌಡ

0

ಹಾಸನ: ಜಿಲ್ಲೆಯ ಕೆಪಿಎಸ್ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು,

ಹಳ್ಳಿಗಳಲ್ಲಿ ಕೆಲವೆಡೆ ನಾಲ್ಕು-ಐದು ಮಕ್ಕಳು ಮಾತ್ರ ಶಾಲೆಗೆ ಹಾಜರಾಗುತ್ತಿರುವ ಪರಿಸ್ಥಿತಿ ಇದೆ. ಇದರಿಂದ ಶಾಲೆಗಳು ನಾಮಕಾವಸ್ತೆಗೆ ನಡೆಯುತ್ತಿರುವಂತಾಗಿದೆ. ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗದ ಹಿನ್ನೆಲೆಯಲ್ಲಿ ಕೆಪಿಎಸ್ ಶಾಲೆಗಳನ್ನು ಬಲಪಡಿಸಿ ಮ್ಯಾಗ್ನೆಟ್ ಶಾಲೆಗಳಾಗಿ ರೂಪಾಂತರಿಸಿ ಉತ್ತಮ ಮೂಲಸೌಕರ್ಯ, ಅರ್ಹ ಶಿಕ್ಷಕರು ಹಾಗೂ ಗುಣಮಟ್ಟದ ಬೋಧನೆ ಒದಗಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ 15 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದು ಡಿಡಿಪಿಐ ರಂಗನಾಥ್ ಸಚಿವರಿಗೆ ಮಾಹಿತಿ ನೀಡಿದರು.

ಇದೇ ವೇಳೆ ಬಿಪಿಎಲ್ ಕಾರ್ಡ್ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಗೆ ಸೀಮಿತಗೊಳಿಸಿರುವ ಕುರಿತು ಶಾಸಕ ಕೆ.ಎಂ. ಶಿವಲಿಂಗೇಗೌಡ ಸಚಿವರ ಗಮನ ಸೆಳೆದರು. ಈ ನಿರ್ಧಾರದಿಂದ ಗ್ರಾಮೀಣ ಭಾಗದ ಅನೇಕ ಬಡವರ ಬಿಪಿಎಲ್ ಕಾರ್ಡ್‌ಗಳು ರದ್ದಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ವಾಯು ಗುಣಮಟ್ಟ ಸೂಚ್ಯಂಕ 100 ದಾಟಿದರೆ GBAಗೆ ನೋಟಿಸ್: ಸಚಿವ ಈಶ್ವರ್ ಖಂಡ್ರೆ ಸೂಚನೆ

0

ಬೆಂಗಳೂರು: ವಾಯು ಗುಣಮಟ್ಟ ಸೂಚ್ಯಂಕ (AQI) ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ, ನಿಗದಿತ ಕಾಲಮಿತಿಯಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಕೋರಿಕೆಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ರಾಷ್ಟ್ರ ರಾಜಧಾನಿ ದೆಹಲಿಯಂತೆಯೇ ಬೆಂಗಳೂರು ಕೂಡ ‘ಗ್ಯಾಸ್ ಚೇಂಬರ್’ ಆಗದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂಬಂಧ ಶೀಘ್ರದಲ್ಲೇ ನಗರದ ಎಲ್ಲಾ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ, ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ನಗರದ ರಸ್ತೆಗಳ ಧೂಳಿನಿಂದ ವಾಯು ಗುಣಮಟ್ಟ ಕುಸಿಯುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ವೈದ್ಯರು ಬೆಂಗಳೂರು ಹೊರವಲಯಕ್ಕೆ ತೆರಳುವಂತೆ ಸಲಹೆ ನೀಡುತ್ತಿರುವುದು ಗಂಭೀರ ಪರಿಸ್ಥಿತಿ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಾಪಿತ ಕೇಂದ್ರಗಳು ಹಾಗೂ 13 ಸಂಚಾರಿ ಘಟಕಗಳ ಮೂಲಕ AQI ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. AQI 100 ದಾಟಿದರೆ ತಕ್ಷಣ ನೋಟಿಸ್ ನೀಡಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

‘ವಿಡಿಯೋ ತಿರುಚಿ ವೈರಲ್ ಮಾಡಿದ್ದಾರೆ’ – ಮಲ್ಲಿಕಾರ್ಜುನ ಮುತ್ಯಾ ಪ್ರಕರಣದಲ್ಲಿ ಬಾಲಕಿ ಪೋಷಕರ ಪ್ರತಿಕ್ರಿಯೆ

0

ಯಾದಗಿರಿ: ಪೋಕ್ಸೋ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಲ್ಲಿಕಾರ್ಜುನ ಮುತ್ಯಾ ಸಂಬಂಧಿಸಿದಂತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಲ್ಲಿರುವ ಮುತ್ಯಾ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿರುವ ಬಾಲಕಿಯ ಪೋಷಕರೂ ತಮ್ಮ ಆವೃತ್ತಿಯನ್ನು ಸಾರ್ವಜನಿಕಗೊಳಿಸಿದ್ದಾರೆ.

ಪೋಷಕರ ಪ್ರಕಾರ, ಅವರು ಹಲವು ವರ್ಷಗಳಿಂದ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರಾಗಿದ್ದು, ಮಗಳ ಹುಟ್ಟುಹಬ್ಬದ ದಿನ ಆಶೀರ್ವಾದ ಪಡೆಯಲು ಮಠಕ್ಕೆ ತೆರಳಿದ್ದರು. ಆಶೀರ್ವಾದದ ಕ್ಷಣವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದೇವೆ. ಆದರೆ ಅದನ್ನು ಕಿಡಿಗೇಡಿಗಳು ತಿರುಚಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಮುತ್ಯಾ ವಿರುದ್ಧದ ಆರೋಪಗಳನ್ನು ನಾವು ಒಪ್ಪುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಇದೀಗ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.

error: Content is protected !!