Home Blog

ಮಧ್ಯಪ್ರಾಚ್ಯ ಬಿಕ್ಕಟ್ಟು: ಷೇರು ಮಾರುಕಟ್ಟೆ ಕುಸಿತ, ಚಿನ್ನದ ಬೆಲೆ ಇಳಿಕೆ – ಬೆಳ್ಳಿ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ಕುಸಿತ ಕಂಡಿವೆ. ಹೂಡಿಕೆದಾರರ ಆತಂಕದ ನಡುವೆ ಅಮೂಲ್ಯ ಲೋಹಗಳ ಬೆಲೆಯಲ್ಲಿ ಏರಿಳಿತ ಕಂಡುಬಂದಿದೆ. ಚಿನ್ನದ ಬೆಲೆಯಲ್ಲಿ ಆರಂಭಿಕ ಇಳಿಕೆ ದಾಖಲಾಗಿದ್ದರೆ, ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ಮಾರ್ಚ್ 2, 2026 (ಸೋಮವಾರ) ರಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 3,290 ರೂಪಾಯಿ ಇಳಿಕೆ ಕಂಡು 1,69,800 ರೂಪಾಯಿಗೆ ತಲುಪಿದೆ. 1 ಗ್ರಾಂ ಚಿನ್ನದ ಬೆಲೆ 329 ರೂಪಾಯಿ ಇಳಿಕೆಯಾಗಿದ್ದು, 16,980 ರೂಪಾಯಿ ದಾಖಲಾಗಿದೆ.

ಅದೇ ರೀತಿ, 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 300 ರೂಪಾಯಿ ಇಳಿಕೆ ಕಂಡು 15,565 ರೂಪಾಯಿಗೆ ತಲುಪಿದೆ. 10 ಗ್ರಾಂ ಚಿನ್ನದ ಬೆಲೆ 1,55,650 ರೂಪಾಯಿಯಾಗಿ ನಿಗದಿಯಾಗಿದೆ.

ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕೆಜಿ ಬೆಳ್ಳಿಯ ಬೆಲೆ 35,000 ರೂಪಾಯಿ ಏರಿಕೆ ಕಂಡು 3,30,000 ರೂಪಾಯಿಗೆ ತಲುಪಿದೆ. ಇದು ಇತ್ತೀಚಿನ ಅವಧಿಯ ಗರಿಷ್ಠ ಮಟ್ಟವೆಂದು ವ್ಯಾಪಾರ ವಲಯಗಳು ತಿಳಿಸಿವೆ.

ಜಾಗತಿಕ ಅಸ್ಥಿರತೆಯ ಪರಿಣಾಮವಾಗಿ ಸುರಕ್ಷಿತ ಹೂಡಿಕೆ ಎಂದೇ ಪರಿಗಣಿಸಲ್ಪಡುವ ಚಿನ್ನದ ಬೆಲೆಯಲ್ಲಿ ಮುಂದಿನ ದಿನಗಳಲ್ಲಿ ಏರಿಕೆ ಸಾಧ್ಯತೆ ಇದೆ ಎಂಬ ಮುನ್ಸೂಚನೆಗಳೂ ವ್ಯಕ್ತವಾಗಿವೆ. ಹೂಡಿಕೆದಾರರು ಮಾರುಕಟ್ಟೆಯ ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದಾರೆ.

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ: ಉತ್ತರ ಕರ್ನಾಟಕಕ್ಕೆ ‘ಹೀಟ್ ಅಲರ್ಟ್’

ಬೆಂಗಳೂರು: ಕಳೆದ ವರ್ಷ ಭಾರಿ ಮಳೆ ಹಾಗೂ ದಾಖಲೆ ಮಟ್ಟದ ಚಳಿ ಅನುಭವಿಸಿದ್ದ ರಾಜ್ಯದ ಜನತೆಗೆ ಇದೀಗ ತೀವ್ರ ಬಿಸಿಲಿನ ಸರದಿ ಎದುರಾಗಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಬಿಸಿಗಾಳಿಯ ತೀವ್ರತೆ ಕೂಡ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಐಎಂಡಿ ಪ್ರಕಾರ, ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ. ಸಾಮಾನ್ಯ ದಿನಗಳಿಗಿಂತ 3ರಿಂದ 15 ದಿನಗಳವರೆಗೆ ಹೆಚ್ಚುವರಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ರಾಯಚೂರು, ಬಳ್ಳಾರಿ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ 40ರಿಂದ 43 ಡಿಗ್ರಿವರೆಗೆ ತಲುಪುವ ಈ ಭಾಗಗಳಲ್ಲಿ ಈ ಬಾರಿ ಇನ್ನಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಜೊತೆಗೆ ಆರ್ದ್ರತೆಯ ಪ್ರಮಾಣವೂ ಹೆಚ್ಚಿರಲಿದೆ. ಇದರಿಂದ ಜನರಿಗೆ ಅತಿಯಾದ ಬೆವರು, ಸುಸ್ತು ಹಾಗೂ ಅಸಹನೆ ಹೆಚ್ಚಾಗುವ ಸಾಧ್ಯತೆ ಇದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಹವಾಮಾನ ತಜ್ಞರ ಪ್ರಕಾರ, ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಪ್ರಸ್ತುತ ದುರ್ಬಲ ‘ಲಾ-ನಿನಾ’ ಪರಿಸ್ಥಿತಿ ಇದೆ. ಆದರೆ ಜಾಗತಿಕ ಮಾದರಿಗಳ ಪ್ರಕಾರ, ಈ ಪರಿಸ್ಥಿತಿ ಶಿಥಿಲಗೊಂಡು ಮುಂದಿನ ದಿನಗಳಲ್ಲಿ ‘ಎಲ್-ನಿನೋ’ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಇದರಿಂದ ಉಷ್ಣತೆ ಹೆಚ್ಚಾಗುವ ಸಾಧ್ಯತೆ ಇದೆ.

ಮಾರ್ಚ್‌ನಿಂದ ಮೇವರೆಗೆ ಬಿಸಿಗಾಳಿಯ ತೀವ್ರತೆ ಜನರ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ ವೃದ್ಧರು, ಮಕ್ಕಳು, ರಸ್ತೆಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಬಿಸಿಲಿನ ತೀವ್ರತೆಯಿಂದ ದೇಹದ ನೀರಿನ ಪ್ರಮಾಣ ಕಡಿಮೆಯಾಗುವುದು, ಹೀಟ್ ಸ್ಟ್ರೋಕ್ ಹಾಗೂ ದೌರ್ಬಲ್ಯ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ- ನಟ ವಿಜಯ ದೇವರಕೊಂಡ ಮದುವೆ ರೆಸಿಪ್ಷನ್‌ಗೆ ಆಹ್ವಾನಿತರಿಗೆ ಮಾತ್ರ ಪ್ರವೇಶ

ಹೈದರಾಬಾದ್: ದೇಶಾದ್ಯಂತ ಭಾರೀ ಕುತೂಹಲ ಹುಟ್ಟಿಸಿದ ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣ ವಿವಾಹ ಆರತಕ್ಷತೆ ಇದೀಗ ಕಠಿಣ ಭದ್ರತಾ ವಲಯದಲ್ಲಿ ನಡೆಯಲಿದೆ. ಮಾರ್ಚ್ 4ರಂದು ನಡೆಯುವ ಕಾರ್ಯಕ್ರಮವನ್ನು ‘Invite Only’ ಆಗಿ ನಿರ್ವಹಿಸಲು ದಂಪತಿ ನಿರ್ಧರಿಸಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ಸಾರ್ವಜನಿಕ ಉತ್ಸಾಹ, ಅಭಿಮಾನಿಗಳ ಅಪಾರ ಸೇರ್ಪಡೆ ಹಾಗೂ ಭದ್ರತಾ ಆತಂಕಗಳನ್ನು ಗಮನಿಸಿ ಸ್ಥಳೀಯ ಪೊಲೀಸರೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಮತ್ತು ಉನ್ನತ ಮಟ್ಟದ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಸುರಕ್ಷತಾ ಸವಾಲುಗಳನ್ನು ತಪ್ಪಿಸಲು ಅತಿಥಿ ಪಟ್ಟಿಯನ್ನು ಸೀಮಿತಗೊಳಿಸಲಾಗಿದೆ.

ಆರಂಭಿಕ ಯೋಜನೆಯಂತೆ ದಕ್ಷಿಣ ಮತ್ತು ಉತ್ತರ ಭಾರತೀಯ ಚಿತ್ರರಂಗದ ಪ್ರಮುಖ ತಾರೆಗಳು ಹಾಗೂ ಕೆಲವು ರಾಜಕೀಯ ಗಣ್ಯರು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ಅಂತಿಮವಾಗಿ ಭದ್ರತೆಯನ್ನು ಆದ್ಯತೆಗೊಟ್ಟು ಆಯ್ದ ಅತಿಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

“ನಿಮ್ಮ ಪ್ರೀತಿ ಮತ್ತು ಆಶೀರ್ವಾದಗಳಿಗೆ ನಾವು ಸದಾ ಕೃತಜ್ಞರು. ನಮ್ಮ ಆಚರಣೆ ಸುರಕ್ಷಿತವಾಗಿರಲು ನಿಮ್ಮ ಸಹಕಾರ ಅಗತ್ಯ,” ಎಂದು ವಿಜಯ್ ಮತ್ತು ರಶ್ಮಿಕಾ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಹೈದರಾಬಾದ್‌ಗೆ ವಾಪಸಾದ ದಂಪತಿ ತಮ್ಮ ನಿವಾಸದ ಹೊರಗೆ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿ ಸಿಹಿತಿಂಡಿಗಳನ್ನು ಹಂಚಿದರು. ನಂತರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿವೆ.

ಕ್ರಿಕೆಟ್ ಜಗಳ ದುರಂತ ಅಂತ್ಯ: ಸಂಕೇತ್ ಹತ್ಯೆ ಪ್ರಕರಣದಲ್ಲಿ ₹15 ಲಕ್ಷ ಪರಿಹಾರ ಘೋಷಿಸಿದ ಸಿಎಂ

0

ಶಿವಮೊಗ್ಗ: ಕ್ರಿಕೆಟ್ ಪಂದ್ಯಾವಳಿಯಲ್ಲಿ ಉಂಟಾದ ಸಣ್ಣ ಜಗಳ ದುರಂತ ಅಂತ್ಯ ಕಂಡಿದ್ದು, ಸ್ನೇಹಿತನ ಪರ ನಿಂತಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಗುಂಪು ಹಲ್ಲೆಗೆ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬವನ್ನು ಭೇಟಿ ಮಾಡಿ ₹15 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ತೆರಳುವ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸಂಕೇತ್ ಅವರ ತಂದೆ-ತಾಯಿಯನ್ನು ಭೇಟಿಯಾದ ಮುಖ್ಯಮಂತ್ರಿಗಳು, ಸರ್ಕಾರದ ವತಿಯಿಂದ ₹10 ಲಕ್ಷ ಹಾಗೂ ಸಚಿವ ಮಧು ಬಂಗಾರಪ್ಪ ಅವರ ವೈಯಕ್ತಿಕ ₹5 ಲಕ್ಷ ಸಹಾಯಧನದ ಚೆಕ್‌ನ್ನು ಸಂಕೇತ್ ತಂದೆ ಶಿವಕುಮಾರ್ ಅವರಿಗೆ ವಿತರಿಸಿದರು.

ಶಿವಮೊಗ್ಗದ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಜಗಳ ಉಂಟಾಗಿ, ಅದು ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಸ್ನೇಹಿತನಿಗೆ ಬೆಂಬಲವಾಗಿ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಜೀವ ಉಳಿಯಲಿಲ್ಲ.

ಕುಟುಂಬದ ನೋವನ್ನು ಹಂಚಿಕೊಂಡ ಮುಖ್ಯಮಂತ್ರಿ, ಸರ್ಕಾರದಿಂದ ಅಗತ್ಯ ನೆರವು ಮತ್ತು ಬೆಂಬಲ ಒದಗಿಸುವ ಭರವಸೆ ನೀಡಿದ್ದಾರೆ. ಪ್ರಕರಣದ ಸಂಬಂಧ ತನಿಖೆ ಮುಂದುವರೆದಿದೆ.

ಫೋನ್ ಕಾಲ್‌ಗಳ ಹಾದಿ ಬೆನ್ನಟ್ಟಿದ ಪೊಲೀಸರು: ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್-ನಾಲ್ವರು ಅರೆಸ್ಟ್

0

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪ ನಡೆದ ಮಹ್ಮದ್ ಫಾರೂಕ್ ಶೇಖಸನದಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ನಿಶ್ಚಿತಾರ್ಥವಾದ ಯುವತಿಯ ಪ್ರಿಯಕರನೇ ಸಂಚು ರೂಪಿಸಿ ಹತ್ಯೆ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಕೊಲೆಯಾದ ಮಹ್ಮದ್ ಫಾರೂಕ್ ಅವರಿಗೆ ಸುಮಾರು ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಆದರೆ, ನಿಶ್ಚಿತಾರ್ಥವಾದ ಯುವತಿಯನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ದಾವಲಸಾಬ್ ಮಕಾಂದಾರ್, ಫಾರೂಕ್ ಅವರನ್ನು ಸಂಪರ್ಕಿಸಿ ತನ್ನ ಪ್ರೀತಿಯ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಜಗಳವೂ ನಡೆದಿತ್ತು.

ಘಟನೆಯ ದಿನ ದಾವಲಸಾಬ್ ಫಾರೂಕ್‌ಗೆ ಫೋನ್ ಕರೆ ಮಾಡಿ ಜಮೀನಿಗೆ ಕರೆಯಿಸಿಕೊಂಡಿದ್ದಾನೆ. ಬಳಿಕ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ಫಾರೂಕ್ ಜೊತೆ ಜಗಳವಾಡಿ, ಕೊಡಲಿಯಿಂದ ಹೊಡೆದು ಭೀಕರವಾಗಿ ಹತ್ಯೆ ನಡೆಸಿದ್ದಾರೆ. ಕೊಲೆ ಬಳಿಕ ಮುಳಗುಂದ ಸಮೀಪದ ಹಳ್ಳದಲ್ಲಿ ಕೊಡಲಿಯನ್ನು ಬಿಸಾಕಿ ಪರಾರಿಯಾಗಿದ್ದರು.

ಹತ್ಯೆಯಾದ ಮಹ್ಮದ್ ಫಾರೂಕ್

ಈ ಪ್ರಕರಣ ಸಂಬಂಧ ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ ದಾವಲಸಾಬ್ ಮಕಾಂದಾರ್, ಮಕಬೂಲಸಾಬ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಆರೋಪಿಗಳನ್ನು ಕಾನೂನು ಸಂಘರ್ಷಕ್ಕೆ ಒಳಪಡಿಸಲಾಗಿದೆ.

ಫೋನ್ ಕಾಲ್‌ಗಳ ಹಾದಿ ಬೆನ್ನಟ್ಟಿದ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ತ್ಯಜಿಸಬೇಕು: ಎಂ.ಬಿ ಪಾಟೀಲ್

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದನ್ನು ಬಿಡಬೇಕು ಎಂದು ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವುದು ಸರಿಯಲ್ಲ ಎಂಬ ಡಿಕೆ ಸುರೇಶ್ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳ ಲಾಭವನ್ನು ಅರ್ಹ ಬಿಪಿಎಲ್ ಕುಟುಂಬಗಳು ಮಾತ್ರ ಪಡೆಯಬೇಕು, ಶ್ರೀಮಂತರು ಅದನ್ನು ಸ್ವಯಂ ಇಚ್ಛೆಯಿಂದ ತ್ಯಜಿಸಬೇಕು ಎಂಬುದು ತಮ್ಮ ಅಭಿಪ್ರಾಯವೂ ಹೌದು ಎಂದು ಹೇಳಿದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯೂ ಸಮಾನವಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳು ಅಭಿವೃದ್ಧಿಯ ಭಾಗವಾಗಿದ್ದು, ಅವುಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವುದಿಲ್ಲ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿಗಳು ಹಣಕಾಸು ವಿಷಯದಲ್ಲಿ ಅನುಭವಿಗಳಾಗಿದ್ದು, ಈಗಾಗಲೇ ಹಲವು ಬಜೆಟ್‌ಗಳನ್ನು ಮಂಡಿಸಿರುವವರು; ಅವರು ಹಣಕಾಸನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಪರೀಕ್ಷೆ ಮುಗಿಸಿ ಬಂದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ!

0

ಮೈಸೂರು: ಹಳೆಯ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕ್ರೂರ ಹಲ್ಲೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ.

ಪೂರ್ಣಿಮಾ ಎಂಬ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದ ವೇಳೆ, ಆಕೆಯ ಸೋದರ ಮಾವ ಸೋಮಣ್ಣ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ನೀನು ಓದಬಾರದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬಾರದು ಎಂಬ ದ್ವೇಷದಿಂದಲೇ ಹಲ್ಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೂರ್ಣಿಮಾ ಸೋದರ ಮಾವನ ಆಶ್ರಯದಲ್ಲೇ ಬೆಳೆದಿದ್ದರೂ ಸಹ, ಶಿಕ್ಷಣ ಮುಂದುವರಿಸುತ್ತಿರುವುದಕ್ಕೆ ಕೋಪಗೊಂಡು ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಸೋಮಣ್ಣ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಪೂರ್ಣಿಮಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮಣ್ಣ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇರಾನ್ – ಇಸ್ರೇಲ್ ಯುದ್ಧ: ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್‌ ಪ್ರತಾಪ್‌

ಇರಾನ್–ಇಸ್ರೇಲ್ ಯುದ್ಧದ ಹಿನ್ನೆಲೆ ಗಲ್ಫ್ ರಾಷ್ಟ್ರಗಳ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳು ರದ್ದಾಗಿದ್ದು, ದುಬೈ ಸೇರಿದಂತೆ ಯುಎಇ ಭಾಗಗಳಲ್ಲಿ ಅನೇಕರ ಕನ್ನಡಿಗರು ಸಂಕಷ್ಟಕ್ಕೊಳಗಾಗಿದ್ದಾರೆ.

ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಪ್ರತಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಇದರ ಪರಿಣಾಮವಾಗಿ ಏರ್‌ಸ್ಪೇಸ್ ಸಂಪೂರ್ಣವಾಗಿ ಮುಚ್ಚಲಾಗಿದ್ದು, ವಿಮಾನ ಹಾರಾಟ ಸ್ಥಗಿತಗೊಂಡಿದೆ.

ಈ ನಡುವೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಸೇರಿದಂತೆ 150ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಫೆಬ್ರವರಿ 28ರಂದು ಬೆಂಗಳೂರಿಗೆ ವಾಪಸ್ಸಾಗಬೇಕಿದ್ದ ಡ್ರೋನ್ ಪ್ರತಾಪ್, ಸದ್ಯ ಅಬುಧಾಬಿ ವಿಮಾನ ನಿಲ್ದಾಣದಲ್ಲೇ ಇದ್ದಾರೆ. “ನಾವು ಇಂದು ರಾತ್ರಿ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಎಲ್ಲಾ ವಿಮಾನಗಳು ಕ್ಯಾನ್ಸಲ್ ಆಗಿವೆ. ಏರ್‌ಸ್ಪೇಸ್ ಸಂಪೂರ್ಣವಾಗಿ ಕ್ಲೋಸ್ ಮಾಡಿದ್ದಾರೆ. ಈಗ ಏರ್‌ಪೋರ್ಟ್‌ನಲ್ಲಿ ಕಾಯುವುದರ ಹೊರತು ಮಾರ್ಗವಿಲ್ಲ,” ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ.

ಬುರ್ಜ್ ಖಲೀಫಾ ಸಮೀಪದಿಂದ ವಿಡಿಯೋ ಹಂಚಿಕೊಂಡಿರುವ ಪ್ರತಾಪ್, “ನಗರದಲ್ಲಿ ಸಾಮಾನ್ಯ ದಿನಗಳಂತೆಯೇ ಸಂಚಾರ ಇದೆ. ಆದರೆ ಯುದ್ಧದ ಆತಂಕ ಜನರಲ್ಲಿ ಕಂಡು ಬರುತ್ತಿದೆ,” ಎಂದು ಹೇಳಿದ್ದಾರೆ.

ಸದ್ಯ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಒಂದೆರಡು ದಿನಗಳಲ್ಲಿ ಸೇವೆ ಪುನರಾರಂಭವಾಗುವ ನಿರೀಕ್ಷೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಮಾಹಿತಿಗಳ ವಿರುದ್ಧ ಇರಾನ್ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ಕುಟುಂಬದೊಂದಿಗೆ ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ತಜ್ಞ!

ಹಾವೇರಿ: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಆತಂಕ ದಿನೇದಿನೇ ಹೆಚ್ಚುತ್ತಿದೆ.

ಅದರಂತೆ ಹಾವೇರಿ ಜಿಲ್ಲೆಯ ಮೂಲದ ತಾಂತ್ರಿಕ ತಜ್ಞರೊಬ್ಬರ ಕುಟುಂಬ ಅಬುಧಾಬಿಯಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ಎಂಜಿನಿಯರ್ ರಾಘವೇಂದ್ರ ಕುದುರಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸದ್ಯ ಅಬುಧಾಬಿಯಲ್ಲಿ ನೆಲೆಸಿದ್ದಾರೆ.

ಅಲ್ಲಿನ ಪರಿಸ್ಥಿತಿ ಅತ್ಯಂತ ಭಯಾನಕವಾಗಿದ್ದು, ಕ್ಷಿಪಣಿ ದಾಳಿಯ ಪರಿಣಾಮ ಕಟ್ಟಡಗಳು ನಡುಗುತ್ತಿರುವ ಅನುಭವವಾಗುತ್ತಿದೆ ಎಂದು ರಾಘವೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸ್ನಾನಗೃಹದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಬಾಗಿಲುಗಳು ತೀವ್ರವಾಗಿ ಅಲುಗಾಡುತ್ತಿವೆ. ನಾವು ಇರುವ ಕಟ್ಟಡದ ಮೇಲೆ ನಡೆದ ದಾಳಿಯ ದೃಶ್ಯ ಕಂಡು ಕೆಲ ಹೊತ್ತು ಭಯದಿಂದ ಸ್ಥಬ್ಧರಾಗಿದ್ದೆವು ಎಂದು ಅವರು ತಿಳಿಸಿದ್ದಾರೆ.

ಮೊದಲು ತಾವೊಬ್ಬರೇ ಅಬುಧಾಬಿಯಲ್ಲಿ ಕೆಲಸಕ್ಕಾಗಿ ನೆಲೆಸಿದ್ದೆ, ಒಂದು ತಿಂಗಳ ಹಿಂದಷ್ಟೇ ಪತ್ನಿ ಹಾಗೂ ಮಕ್ಕಳನ್ನು ಕರೆಸಿಕೊಂಡಿದ್ದೇನೆ. ಆದರೆ ಈಗ ಯುದ್ಧದ ಭೀತಿಯಿಂದ ಕುಟುಂಬದ ಸುರಕ್ಷತೆ ಬಗ್ಗೆ ಗಂಭೀರ ಚಿಂತೆ ಕಾಡುತ್ತಿದೆ. ಕೂಡಲೇ ನಮ್ಮನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವಂತೆ ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಬಳಿ ಮನವಿ ಮಾಡುತ್ತಿದ್ದೇವೆ ಎಂದು ರಾಘವೇಂದ್ರ ಕುದುರಿ ತಿಳಿಸಿದ್ದಾರೆ.

ಕ್ಷಿಪಣಿ ದಾಳಿಯಿಂದ ವಿಮಾನ ಸಂಚಾರ ಸ್ಥಗಿತ: ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್!

ಅಬುಧಾಬಿ/ಬೆಂಗಳೂರು: ಇರಾನ್–ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಮಗಳ ಹುಟ್ಟುಹಬ್ಬ ಆಚರಣೆಗೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.

ರಣ್ ಮತ್ತು ಸುನೀತ ದಂಪತಿ ಫೆಬ್ರವರಿ 23ರಂದು ಮಗಳ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಬೆಂಗಳೂರಿನಿಂದ ದುಬೈಗೆ ಪ್ರಯಾಣ ಬೆಳೆಸಿದ್ದರು. ದುಬೈಯಲ್ಲಿರುವ ಬುರ್ಜ್ ಖಲೀಫಾ ಎದುರು ಮಗಳ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು.

ಶನಿವಾರ ಬೆಂಗಳೂರಿಗೆ ಮರಳಲು ಟಿಕೆಟ್ ಕಾಯ್ದಿರಿಸಲಾಗಿದ್ದು, ಮಧ್ಯಾಹ್ನ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರವೇಶ ಪ್ರಕ್ರಿಯೆ ಕೂಡ ಪೂರ್ಣಗೊಳಿಸಿದ್ದರು. ಆದರೆ ಅಷ್ಟರಲ್ಲಿ ಕ್ಷಿಪಣಿ ದಾಳಿ ಆರಂಭವಾದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡು ದಂಪತಿ ಅಲ್ಲಿಯೇ ಸಿಲುಕಿದ್ದಾರೆ. ಸುರಕ್ಷಿತವಾಗಿ ನಮ್ಮ ನಾಡಿಗೆ ಮರಳಿದರೆ ಸಾಕು ಎಂಬ ಭಯದೊಂದಿಗೆ ಪ್ರತಿಕ್ಷಣ ಕಳೆಯುತ್ತಿರುವುದಾಗಿ ದಂಪತಿ ನೋವು ವ್ಯಕ್ತಪಡಿಸಿದ್ದಾರೆ.

ಸುನೀತ ಅವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಂಡು ನಮ್ಮನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ದಂಪತಿ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲೇ ಒಂದು ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಳಿಕ ಅಲ್ಲಿನ ಅಧಿಕಾರಿಗಳು ಅವರನ್ನು ಹೋಟೆಲ್‌ಗೆ ಸ್ಥಳಾಂತರಿಸಿದ್ದಾರೆ. ಆದರೂ ಯುದ್ಧದ ಆತಂಕದ ನಡುವೆ ಹೋಟೆಲ್‌ನಲ್ಲೇ ಆಶ್ರಯ ಪಡೆದಿರುವ ದಂಪತಿ, ಭಯಭೀತ ವಾತಾವರಣದಲ್ಲಿ ದಿನಗಳನ್ನು ಕಳೆಯುತ್ತಿದ್ದಾರೆ.

error: Content is protected !!