ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಮುಖ್ಯ ದ್ವಾರ ಸಮೀಪ ಅಪಾಯಕಾರಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಇದರಿಂದ ಗಣಿಗಾರಿಕಾ ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಚಿನ್ನದಗಣಿ ಕಂಪನಿ ಗೇಟ್ ಎದುರಿನ ಮುಖ್ಯರಸ್ತೆಯಲ್ಲಿ ಸ್ಫೋಟ ಕಾರ್ಯಗಳಿಗೆ ಬಳಸುವ 15ಕ್ಕೂ ಹೆಚ್ಚು ಮದ್ದುಗಳ ಕಾಟ್ರಿಜ್ಗಳು ಪತ್ತೆಯಾಗಿವೆ. ಮಾಹಿತಿ ತಿಳಿಯುತ್ತಿದ್ದಂತೆ ಗಣಿಯ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಸುದ್ದಿ ನೀಡಿದ್ದಾರೆ. ಸ್ಥಳಕ್ಕೆ ಹಟ್ಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲ್ಸರ್ ಬೈಕ್ನಲ್ಲಿ ತೆರಳುತ್ತಿದ್ದ ಕೆಲವರು ಮದ್ದುಗಳ ಕಾಟ್ರಿಜ್ಗಳನ್ನು ಅನವಧಾನದಿಂದ ರಸ್ತೆಯಲ್ಲಿ ಬೀಳಿಸಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ.

ಜಿಲ್ಲೆಯ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಡುವ ಹಟ್ಟಿ ಚಿನ್ನದಗಣಿ ದ್ವಾರ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮದ್ದುಗಳು ಗಣಿಗಾರಿಕೆಗೆ ಬಳಸುವ ಅಧಿಕೃತ ವಸ್ತುಗಳೋ ಅಥವಾ ಖಾಸಗಿ ಕಲ್ಲು ಕ್ವಾರೆಗಳಿಗೆ ಸಾಗಿಸಲಾಗುತ್ತಿದ್ದವೆಯೋ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

