ಬೆಂಗಳೂರು: ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ಮಾಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಕೇಳಿದ ಹಿನ್ನೆಲೆಯಲ್ಲಿ ಅನುದಾನ ನೀಡಲಾಗಿದೆ. ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಸತ್ತೇಗಾಲದಿಂದ ನೀರು ಬರುವ ಸಮಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಲುವೆ ಕಾಮಗಾರಿ ನಡೆಯುತ್ತಿದೆ. ತಾವು ಸ್ವತಃ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕೆಲಸ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.
ವಿದೇಶ ಪ್ರವಾಸದಿಂದ ವಾಪಸ್ಸಾದ ಶಾಸಕರು ಭೇಟಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಹಲವರು ಭೇಟಿ ಮಾಡಿ ಪ್ರವಾಸದಲ್ಲಿ ಕಂಡ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಬಜೆಟ್ ಕುರಿತು ಪ್ರಶ್ನಿಸಿದಾಗ, ನಮ್ಮ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಬಜೆಟ್ ಮೇಲೆ ಅವಲಂಬಿತವಾಗಿಲ್ಲ. ಪೆನ್ನು–ಕಾಗದ ನನ್ನ ಕೈಯಲ್ಲಿದೆ. ಬಜೆಟ್ ಇರಲಿ, ಇಲ್ಲದಿರಲಿ ಜಿಲ್ಲೆಯ ಕೆಲಸಗಳು ಮುಂದುವರಿಯುತ್ತವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪ್ರತಿ ಶಾಲೆಗೆ 15 ಕೋಟಿ ರೂ. ವೆಚ್ಚದಲ್ಲಿ 25 ಕೆಪಿಎಸ್ ಶಾಲೆಗಳು ನಿರ್ಮಾಣವಾಗುತ್ತಿವೆ. ಈ ಯೋಜನೆಯನ್ನು ನಾವು ಬಜೆಟ್ನಲ್ಲಿ ಸೇರಿಸಿಲ್ಲ. ರಾಜ್ಯದಾದ್ಯಂತ 2 ಸಾವಿರ ಶಾಲೆ ನಿರ್ಮಾಣ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.
ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಮಹಾವಿದ್ಯಾಲಯ ಮಂಜೂರು ಮಾಡಲಾಗಿತ್ತು. ನಂತರದ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿತು. ಈಗ ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳಿಗೆ ವೈದ್ಯಕೀಯ ಮಹಾವಿದ್ಯಾಲಯ ನೀಡಿದ್ದೇವೆ. ಚನ್ನಪಟ್ಟಣದಲ್ಲೂ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಅನುಮತಿ ನೀಡಲಾಗಿದೆ. ಕನಕಪುರ ಮತ್ತು ರಾಮನಗರ ನಡುವಿನ ದಯಾನಂದ ಸಾಗರ್ ವೈದ್ಯಕೀಯ ಮಹಾವಿದ್ಯಾಲಯವೂ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಮಾಗಡಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

