Home Blog

ಡ್ರೋನ್ ಪ್ರಿಯರ ಗಮನಕ್ಕೆ! ಸಾಂಬ್ರಾ ಏರ್ ಪೋರ್ಟ್ ಸುತ್ತ 8 ಕಿಮೀ ಡ್ರೋನ್ ಹಾರಾಟ ನಿಷೇಧ

ಬೆಳಗಾವಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಈ ಕ್ರಮವನ್ನು DGCA ಮಾರ್ಗಸೂಚಿಯಂತೆ ಕೈಗೊಳ್ಳಲಾಗಿದೆ.

ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್‌ಮ್ಯಾನ್ಡ್ ಏರಿಯಲ್ ವಾಹನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರೆಡ್ ಝೋನ್ ಹಾಗೂ ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಹಾಲಿನೊಂದಿಗೆ ತೆಗೆದುಕೊಳ್ಳಬೇಕಾ? ನೀರಿನೊಂದಿಗೆ ತೆಗೆದುಕೊಳ್ಳಬೇಕಾ? ವಿಟಮಿನ್ ಡಿ ಬಗ್ಗೆ ವೈದ್ಯರ ಸಲಹೆ!

0

ಇತ್ತೀಚಿನ ದಿನಗಳಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಪ್ಲಿಮೆಂಟ್ ಬಳಸುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಬದಲಾಗುತ್ತಿರುವ ಜೀವನಶೈಲಿ, ಬಿಸಿಲಿಗೆ ಕಡಿಮೆ ಹೋಗುವುದು ಹಾಗೂ ದೀರ್ಘಕಾಲ ಮನೆ ಅಥವಾ ಕಚೇರಿಯೊಳಗೆ ಇರುವುದರಿಂದ ಈ ಕೊರತೆ ಉಂಟಾಗುತ್ತಿದೆ ಎನ್ನಲಾಗಿದೆ. ದೇಹದಲ್ಲಿ ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುವ ವಿಟಮಿನ್ ಡಿ ಮೂಳೆ ಮತ್ತು ಹಲ್ಲುಗಳನ್ನು ಬಲವಾಗಿಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಕೊರತೆಯಿಂದ ಮೂಳೆ ನೋವು, ಆಯಾಸ, ದೌರ್ಬಲ್ಯ, ಆಗಾಗ ಅನಾರೋಗ್ಯ ಹಾಗೂ ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಂದು ತಜ್ಞರು ತಿಳಿಸಿದ್ದಾರೆ.

ವೈದ್ಯರ ಪ್ರಕಾರ, ವಿಟಮಿನ್ ಡಿ ಸಪ್ಲಿಮೆಂಟ್ ಅನ್ನು ಹಾಲಿನೊಂದಿಗೆ ತೆಗೆದುಕೊಳ್ಳುವುದರಿಂದ ಅದರಲ್ಲಿರುವ ಕೊಬ್ಬು ಮತ್ತು ಕ್ಯಾಲ್ಸಿಯಂ ಕಾರಣದಿಂದ ಹೀರಿಕೊಳ್ಳುವಿಕೆ ಉತ್ತಮವಾಗುತ್ತದೆ. ಆದರೆ ಹಾಲು ಕುಡಿಯಲು ಇಷ್ಟವಿಲ್ಲದವರು ಅಥವಾ ಲ್ಯಾಕ್ಟೋಸ್ ಅಸಹಿಷ್ಣುತೆ ಇರುವವರು ನೀರಿನೊಂದಿಗೆ ಕೂಡ ತೆಗೆದುಕೊಳ್ಳಬಹುದು. ಆದರೆ ಊಟದಲ್ಲಿ ಸ್ವಲ್ಪ ಕೊಬ್ಬಿನಾಂಶ ಇರುವ ಆಹಾರ ಸೇವಿಸುವುದು ಅಗತ್ಯವೆಂದು ವೈದ್ಯರು ಸಲಹೆ ನೀಡಿದ್ದಾರೆ.

ಸಾಮಾನ್ಯವಾಗಿ ಬೆಳಿಗ್ಗೆ ಅಥವಾ ಊಟದ ಸಮಯದಲ್ಲಿ ಸಪ್ಲಿಮೆಂಟ್ ಸೇವಿಸುವುದು ಉತ್ತಮವಾಗಿದ್ದು, ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ಕೆಲವರಿಗೆ ಅಸ್ವಸ್ಥತೆ ಉಂಟಾಗಬಹುದು. ಜೊತೆಗೆ ದಿನಕ್ಕೆ 15ರಿಂದ 20 ನಿಮಿಷಗಳ ಕಾಲ ಬಿಸಿಲಿನಲ್ಲಿ ಕುಳಿತುಕೊಳ್ಳುವುದು ಸಹ ಅಗತ್ಯವೆಂದು ತಜ್ಞರು ಹೇಳಿದ್ದಾರೆ. ಯಾವುದೇ ಪರೀಕ್ಷೆ ಮಾಡದೆ ದೀರ್ಘಕಾಲ ಸಪ್ಲಿಮೆಂಟ್ ಸೇವಿಸುವುದು ತಪ್ಪಾಗಿದ್ದು, ಅತಿಯಾಗಿ ಸೇವಿಸಿದರೆ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗಿ ಮೂತ್ರಪಿಂಡ ಮತ್ತು ಹೃದಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಗ್ಯಾಸ್ಟ್ರಿಕ್, ಆಸಿಡಿಟಿ ಸಮಸ್ಯೆಗೆ ಕಾರಣ ರಾತ್ರಿ ಊಟವೇ? ಇಲ್ಲಿದೆ ಮಾಹಿತಿ

0

ರಾತ್ರಿ ನಿದ್ರೆ ಮನುಷ್ಯನ ಆರೋಗ್ಯಕ್ಕೆ ಅತ್ಯಂತ ಪ್ರಮುಖವಾದುದು. ಈ ಸಮಯದಲ್ಲಿ ದೇಹ ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವುದರಿಂದ ರಾತ್ರಿ ಸೇವಿಸುವ ಆಹಾರವೂ ಬಹಳ ಮಹತ್ವದ್ದು.

ಸೂರ್ಯ ಮುಳುಗಿದ ನಂತರ ದೇಹದ ಜೀರ್ಣಕ್ರಿಯೆ ನಿಧಾನಗೊಳ್ಳುತ್ತದೆ ಎಂದು ತಜ್ಞರು ಹೇಳುತ್ತಾರೆ. ಆದ್ದರಿಂದ ರಾತ್ರಿ ಯಾವ ಆಹಾರವನ್ನು ಮತ್ತು ಎಷ್ಟು ಪ್ರಮಾಣದಲ್ಲಿ ಸೇವಿಸುತ್ತೇವೆ ಎಂಬುದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ರಾತ್ರಿ ಹೆಚ್ಚು ಎಣ್ಣೆಯಲ್ಲಿ ಕರಿದ, ಅತಿ ಮಸಾಲೆಯುಕ್ತ ಅಥವಾ ಜಂಕ್ ಆಹಾರಗಳನ್ನು ಸೇವಿಸಿದರೆ ಗ್ಯಾಸ್ಟ್ರಿಕ್, ಆಸಿಡಿಟಿ, ಎದೆ ಉರಿ ಹಾಗೂ ಹೊಟ್ಟೆ ತುಂಬಿರುವ ಅನುಭವ ಕಾಣಿಸಬಹುದು.

ಇದರಿಂದ ಮಧ್ಯರಾತ್ರಿ ನಿದ್ರೆ ಕದಡುವುದು, ಬೆಳಿಗ್ಗೆ ಎದ್ದಾಗ ದಣಿವು ಕಾಣಿಸಿಕೊಳ್ಳುವುದು, ತಲೆ ಭಾರವಾಗಿರುವುದು ಅಥವಾ ದಿನವಿಡೀ ಸುಸ್ತು ಅನುಭವಿಸುವಂತಹ ಸಮಸ್ಯೆಗಳು ಉಂಟಾಗಬಹುದು. ಜೊತೆಗೆ ಹೆಚ್ಚು ಸಿಹಿ ಪದಾರ್ಥಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅಸ್ಥಿರಗೊಳಿಸಬಹುದು ಹಾಗೂ ಹೆಚ್ಚು ಉಪ್ಪು ಇರುವ ಆಹಾರಗಳು ದೇಹದಲ್ಲಿ ನೀರನ್ನು ಹಿಡಿದುಕೊಳ್ಳುವ ಕಾರಣ ಊತ ಮತ್ತು ಅಸ್ವಸ್ಥತೆ ಉಂಟಾಗಬಹುದು.

ಆದ್ದರಿಂದ ರಾತ್ರಿ ಸಮಯದಲ್ಲಿ ಹಗುರ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರಗಳನ್ನು ಸೇವಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬೇಯಿಸಿದ ತರಕಾರಿಗಳು, ಬೇಳೆ, ರೊಟ್ಟಿ ಅಥವಾ ಸ್ವಲ್ಪ ಅನ್ನ, ಖಿಚ್ಡಿ ಅಥವಾ ಸೂಪ್‌ಗಳನ್ನು ಸೇವಿಸುವುದು ಉತ್ತಮ ಆಯ್ಕೆ ಎಂದು ಹೇಳಲಾಗುತ್ತದೆ. ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಮಲಗುವ ಸಮಯಕ್ಕೆ ಕನಿಷ್ಠ ಎರಡು ರಿಂದ ಮೂರು ಗಂಟೆಗಳ ಮೊದಲು ರಾತ್ರಿ ಊಟ ಮಾಡುವುದು, ಊಟ ಮಾಡಿದ ತಕ್ಷಣ ಮಲಗದೇ ಸ್ವಲ್ಪ ಹೊತ್ತು ನಡೆದು ಬರುವುದು ಹಾಗೂ ಟಿವಿ ಅಥವಾ ಮೊಬೈಲ್ ನೋಡುತ್ತಾ ಊಟ ಮಾಡುವುದನ್ನು ತಪ್ಪಿಸುವುದು ಉತ್ತಮ ಅಭ್ಯಾಸಗಳಾಗಿವೆ.

ಈ ರೀತಿಯ ಸರಿಯಾದ ಆಹಾರ ಪದ್ಧತಿ ಮತ್ತು ಜೀವನಶೈಲಿ ಪಾಲಿಸಿದರೆ ಉತ್ತಮ ನಿದ್ರೆ ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

ಮಧ್ಯಪ್ರಾಚ್ಯ ಉದ್ವಿಗ್ನತೆ: ವಾಣಿಜ್ಯ LPG ಮೇಲಿನ ಸಬ್ಸಿಡಿ ಹಿಂಪಡೆದ ಸರ್ಕಾರ!

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆಯ ಮೇಲೂ ಪರಿಣಾಮ ಬೀರಿದ್ದು, ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು IOCL ನಿರ್ದೇಶನದ ಮೇರೆಗೆ  ಪ್ರಕಟಣೆ ಹೊರಡಿಸಿದೆ.

ಪ್ರಕಟಣೆಯ ಪ್ರಕಾರ, ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆಗೆ ನೀಡಲಾಗಿದ್ದ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆವರೆಗೆ ತಡೆಹಿಡಿಯಲಾಗಿದೆ. IOCL ಪ್ರಧಾನ ಕಚೇರಿಯ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ ₹1,814 ಇದ್ದು, 47.5 ಕೆಜಿ ಸಿಲಿಂಡರ್ ₹4,532ಕ್ಕೆ ಮಾರಾಟವಾಗುತ್ತಿದೆ. ರಿಯಾಯಿತಿಗಳ ಸ್ಥಗಿತದಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರೆ ವಾಣಿಜ್ಯ ಬಳಕೆದಾರರಿಗೆ ಖರ್ಚು ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಪವರ್ ಫೈಟ್ ನಡುವೆಯೇ 17ನೇ ಬಜೆಟ್ ಮಂಡನೆಗೆ ಸಜ್ಜು: ಸಿದ್ದರಾಮಯ್ಯ ಆಯವ್ಯಯ ಇತಿಹಾಸ ಹೀಗಿದೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಬಹುತೇಕ ಪೂರ್ಣಗೊಳಿಸಿದ್ದಾರೆ. ಮಾರ್ಚ್ 6ರಂದು ಅವರು ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿರುವ ನಾಯಕ ಎಂಬ ದಾಖಲೆ ಅವರ ಹೆಸರಿನಲ್ಲಿದೆ.

ಎಚ್.ಡಿ. ದೇವೇಗೌಡ ಹಾಗೂ ಜೆ.ಹೆಚ್. ಪಟೇಲ್ ಆಡಳಿತ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ ಅವರು 1995-96ನೇ ಸಾಲಿನ ಮೊದಲ ಮುಂಗಡ ಪತ್ರ ಮಂಡಿಸಿದ್ದರು. ನಂತರ 1996-97ರಿಂದ 1999-2000ರವರೆಗೆ ಹಾಗೂ 2004-05, 2005-06 ಸಾಲುಗಳಲ್ಲಿ ಬಜೆಟ್ ಮಂಡಿಸಿದ್ದರು.

ಬಳಿಕ ಮುಖ್ಯಮಂತ್ರಿಯಾಗಿ 2013-14ರಿಂದ 2018-19ರವರೆಗೆ ನಿರಂತರವಾಗಿ ಬಜೆಟ್ ಮಂಡಿಸಿದ ಅವರು, ಪ್ರಸ್ತುತ ಅವಧಿಯಲ್ಲಿ 2023-24, 2024-25 ಹಾಗೂ 2025-26 ಸಾಲಿನ ಬಜೆಟ್‌ಗಳನ್ನು ಮಂಡಿಸಿದ್ದಾರೆ. 2023-24ರಲ್ಲಿ ಬಜೆಟ್ ಮಂಡಿಸುವ ಮೂಲಕ ಅವರು ರಾಮಕೃಷ್ಣ ಹೆಗಡೆ ಅವರ ಅತಿಹೆಚ್ಚು ಬಜೆಟ್ ಮಂಡನೆ ದಾಖಲೆಯನ್ನು ಮೀರಿಸಿದ್ದರು.

ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಒಟ್ಟು 7 ಬಜೆಟ್ ಹಾಗೂ ಮುಖ್ಯಮಂತ್ರಿಯಾಗಿ 9 ಬಜೆಟ್ ಮಂಡಿಸಿದ್ದು, ಈಗ 17ನೇ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ತಮ್ಮ ಹಿಂದಿನ 16 ಬಜೆಟ್‌ಗಳಲ್ಲಿ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಗಮನಾರ್ಹ.

ಪ್ರಸ್ತುತ ಅಧಿಕಾರಾವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿದ್ದು, 2023-24 ಸಾಲಿನ ಬಜೆಟ್‌ನಲ್ಲಿ ₹35,410 ಕೋಟಿ, 2024-25ರಲ್ಲಿ ₹52,009 ಕೋಟಿ ಹಾಗೂ 2025-26ರಲ್ಲಿ ₹51,034 ಕೋಟಿ ಸೇರಿ ಸುಮಾರು ₹1.38 ಲಕ್ಷ ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ.

ಹಿಂದಿನ ಬಜೆಟ್‌ಗಳಲ್ಲಿ ಅನ್ನಭಾಗ್ಯ ಯೋಜನೆಗೆ ವಾರ್ಷಿಕ ₹4,300 ಕೋಟಿ ವೆಚ್ಚ, ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ, ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ, ಅಲ್ಪಸಂಖ್ಯಾತ ಯುವತಿಯರಿಗಾಗಿ ಶಾದಿ ಭಾಗ್ಯ, ಕೃಷಿ ಹೊಂಡ, ನಮ್ಮ ಗ್ರಾಮ ನಮ್ಮ ರಸ್ತೆ, ಪರಿಶಿಷ್ಟ ಪಂಗಡ ಉಪಯೋಜನೆ ಕಾಯ್ದೆ ಜಾರಿ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದರು.

ಇದೀಗ ಮಾ.6ರಂದು ಮಂಡನೆಯಾಗಲಿರುವ ಬಜೆಟ್‌ನಲ್ಲಿ ಯಾವ ಹೊಸ ಯೋಜನೆಗಳು ಘೋಷಣೆಯಾಗುತ್ತವೆ ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮುಂದುವರಿದಿರುವ ಬಿಸಿಲಿನ ತೀವ್ರತೆ ನಡುವೆ ಇಂದು ಕೂಡ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿದ್ದು, ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಉಷ್ಣಾಂಶ ಹೆಚ್ಚಾಗಿದ್ದು, ಒಣ ಗಾಳಿಯೇ ಆವರಿಸಿದೆ. ಇಂದಿನಿಂದ ಇನ್ನೂ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಲಕ್ಷಣಗಳು ಕಾಣಿಸದಿದ್ದು, ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಇದೇ ಸ್ಥಿತಿ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ಮಾರ್ಚ್ ಎರಡನೇ ವಾರದ ಬಳಿಕ ನಗರದಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಲಾಗಿದೆ.

ಹೀಟ್ ಸ್ಟ್ರೋಕ್ ಹಾಗೂ ದೇಹದ ನೀರಿನ ಕೊರತೆ (ಡಿಹೈಡ್ರೇಶನ್) ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿರುವವರು ವಿಶೇಷ ಜಾಗ್ರತೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್! ಗದಗ, ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ, ಗದಗ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ.

ಬೆಳಿಗ್ಗೆ 6 ಗಂಟೆಯಿಂದಲೇ ಹಲವಾರು ತಂಡಗಳಾಗಿ ವಿಭಜನೆಗೊಂಡು ಕಾರ್ಯಾಚರಣೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಮತ್ತು ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಪರಿಶೀಲನೆ ನಡೆದಿದೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ದಾಳಿ ನಡೆದಿದ್ದು, ಮಂಡ್ಯದಲ್ಲಿ PWD ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗಿದೆ.

ಧಾರವಾಡದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಮತ್ತು ಮೈಸೂರಿನ ಜಲಮಂಡಳಿಯ ಎಇಇ ಆಶಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆಗಳಲ್ಲಿಯೂ ಪರಿಶೀಲನೆ ನಡೆದಿದ್ದು, ಕೆಲವು ಸ್ಥಳಗಳಲ್ಲಿ ಅಧಿಕಾರಿಗಳು ಬಾಗಿಲು ತೆರೆಯದೆ ಹೈಡ್ರಾಮ ಸ್ಥಿತಿ ಉಂಟಾಯಿತು.

ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ದಾಖಲಾತಿ ಪರಿಶೀಲನೆಗಿಂತ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಬಿಸಿಎಂ ಶಿರಹಟ್ಟಿ ತಾಲ್ಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ!

0

ಗದಗ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮರಿಗೌಡ ಸುರಕೋಡ ಅವರ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಗದಗ ನಗರದ ಕಳಸಾಪೂರ ರಸ್ತೆಯ ಹೆರಕಲ್ ಲೇಔಟ್‌ನಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದ್ದು, ಗದಗ ಮತ್ತು ಧಾರವಾಡ ಸೇರಿ ಆರು ತಂಡಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿ ವಿಜಯ ಬಿರಾದಾರ ಸೇರಿದಂತೆ ಹಲವು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿ ವೇಳೆ ಅಪಾರ ಪ್ರಮಾಣದ ಬೇನಾಮಿ ಆಸ್ತಿ ದಾಖಲೆಗಳು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಳಿಯ ಸೇರಿದಂತೆ ಹಲವರ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದೆ. ಇದಲ್ಲದೆ, ಕಚೇರಿ ಸಿಬ್ಬಂದಿಯ ಪತ್ನಿಯ ಹೆಸರಲ್ಲಿ ಆಸ್ತಿ ಇರುವ ಸಾದ್ಯತೆ ಇದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಗದಗ ನಿವಾಸದ ಜೊತೆಗೆ ಶಿರಹಟ್ಟಿ ಕಚೇರಿ ಹಾಗೂ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಂಗಳ ಗ್ರಾಮದಲ್ಲಿರುವ ಮನೆ ಮೇಲೂ ದಾಳಿ ನಡೆಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ.

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್‌ ವಾಹನ: ಇಬ್ಬರು ಸ್ಥಳದಲ್ಲೇ ಸಾವು, 8ಜನರಿಗೆ ಗಾಯ

ಆರ್ಕೆಸ್ಟ್ರಾ ನೋಡಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ

ಗದಗ: ಜಿಲ್ಲೆಯ ಗದಗ–ಹರ್ತಿ ಮಾರ್ಗದಲ್ಲಿ ಗುರುವಾರ ಬೆಳಿಗ್ಗೆ ಟಾಟಾ ಏಸ್ ವಾಹನವು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿಂಗಪ್ಪ ಹನುಮಂತ ಯಳವತ್ತಿ (36) ಹಾಗೂ ಮುತ್ತಪ್ಪ ಶಂಕ್ರಪ್ಪ ಸತ್ತಿಗೇರಿ (35) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ತಕ್ಷಣವೇ ಸಮೀಪದ ಜಿಮ್ಸ್  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಮಾಹಿತಿಯಂತೆ, ಟಾಟಾ ಏಸ್ ವಾಹನದಲ್ಲಿ ಗೊಜುನೂರು ಗ್ರಾಮಕ್ಕೆ ಆರ್ಕೇಸ್ಟ್ರಾ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದವರು ವಾಪಸ್ಸು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ರೆ ಅಮಲಿನಲ್ಲಿದ್ದ ಕಾರಣದಿಂದ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹೇಮಾವತಿ ಸಂಪರ್ಕ ಕಾಲುವೆ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಬೆಂಗಳೂರು: ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಮಾಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಕೇಳಿದ ಹಿನ್ನೆಲೆಯಲ್ಲಿ ಅನುದಾನ ನೀಡಲಾಗಿದೆ. ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ಸತ್ತೇಗಾಲದಿಂದ ನೀರು ಬರುವ ಸಮಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಲುವೆ ಕಾಮಗಾರಿ ನಡೆಯುತ್ತಿದೆ. ತಾವು ಸ್ವತಃ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕೆಲಸ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ವಿದೇಶ ಪ್ರವಾಸದಿಂದ ವಾಪಸ್ಸಾದ ಶಾಸಕರು ಭೇಟಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಹಲವರು ಭೇಟಿ ಮಾಡಿ ಪ್ರವಾಸದಲ್ಲಿ ಕಂಡ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಬಜೆಟ್ ಕುರಿತು ಪ್ರಶ್ನಿಸಿದಾಗ, ನಮ್ಮ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಬಜೆಟ್ ಮೇಲೆ ಅವಲಂಬಿತವಾಗಿಲ್ಲ. ಪೆನ್ನು–ಕಾಗದ ನನ್ನ ಕೈಯಲ್ಲಿದೆ. ಬಜೆಟ್ ಇರಲಿ, ಇಲ್ಲದಿರಲಿ ಜಿಲ್ಲೆಯ ಕೆಲಸಗಳು ಮುಂದುವರಿಯುತ್ತವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪ್ರತಿ ಶಾಲೆಗೆ 15 ಕೋಟಿ ರೂ. ವೆಚ್ಚದಲ್ಲಿ 25 ಕೆಪಿಎಸ್ ಶಾಲೆಗಳು ನಿರ್ಮಾಣವಾಗುತ್ತಿವೆ. ಈ ಯೋಜನೆಯನ್ನು ನಾವು ಬಜೆಟ್‌ನಲ್ಲಿ ಸೇರಿಸಿಲ್ಲ. ರಾಜ್ಯದಾದ್ಯಂತ 2 ಸಾವಿರ ಶಾಲೆ ನಿರ್ಮಾಣ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಮಹಾವಿದ್ಯಾಲಯ ಮಂಜೂರು ಮಾಡಲಾಗಿತ್ತು. ನಂತರದ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿತು. ಈಗ ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳಿಗೆ ವೈದ್ಯಕೀಯ ಮಹಾವಿದ್ಯಾಲಯ ನೀಡಿದ್ದೇವೆ. ಚನ್ನಪಟ್ಟಣದಲ್ಲೂ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಅನುಮತಿ ನೀಡಲಾಗಿದೆ. ಕನಕಪುರ ಮತ್ತು ರಾಮನಗರ ನಡುವಿನ ದಯಾನಂದ ಸಾಗರ್ ವೈದ್ಯಕೀಯ ಮಹಾವಿದ್ಯಾಲಯವೂ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಮಾಗಡಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

error: Content is protected !!