ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಜಮ್ಮು-ಕಾಶ್ಮೀರ ತಂಡ, ಬಲಿಷ್ಠ ಕರ್ನಾಟಕವನ್ನು ಮಣಿಸಿ ಐತಿಹಾಸಿಕವಾಗಿ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ.
ರಣಜಿ ಇತಿಹಾಸದಲ್ಲಿ 15ನೇ ಬಾರಿ ಫೈನಲ್ ತಲುಪಿದ್ದ ಕರ್ನಾಟಕ ತಂಡ ತವರು ನೆಲದ ಲಾಭ ಪಡೆದು ಸುಲಭವಾಗಿ ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ತಂಡದಲ್ಲಿ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಮತ್ತು ದೇವದತ್ ಪಡಿಕ್ಕಲ್ರಂತಹ ಅನುಭವಿ ಬ್ಯಾಟ್ಸ್ಮನ್ಗಳು ಇದ್ದರು. ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ ಮತ್ತು ಶ್ರೇಯಸ್ ಗೋಪಾಲ್ ಪ್ರಮುಖರಾಗಿದ್ದರು. ಆದರೂ ಪಂದ್ಯ ಆರಂಭದಿಂದಲೇ ಹಿಡಿತ ಸಾಧಿಸಿದ ಜಮ್ಮು-ಕಾಶ್ಮೀರ ತಂಡ, ಕರ್ನಾಟಕಕ್ಕೆ ಮರುಪ್ರವೇಶದ ಅವಕಾಶವೇ ನೀಡಲಿಲ್ಲ.
1959-60ರಲ್ಲಿ ಮೊದಲ ಬಾರಿಗೆ ರಣಜಿ ಟ್ರೋಫಿಯಲ್ಲಿ ಭಾಗವಹಿಸಿದ್ದ ಜಮ್ಮು-ಕಾಶ್ಮೀರ ತಂಡಕ್ಕೆ ಇದುವರೆಗೆ ಪ್ರಶಸ್ತಿ ಸಿಕ್ಕಿರಲಿಲ್ಲ. ಬರೋಬ್ಬರಿ 67 ವರ್ಷಗಳ ಬಳಿಕ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ವಿಜೇತರನ್ನು ಘೋಷಿಸುವ ನಿಯಮದಂತೆ ಜಮ್ಮು-ಕಾಶ್ಮೀರ ತಂಡಕ್ಕೆ ಕಿರೀಟ ಒಲಿಯಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್ನಲ್ಲಿ 584 ರನ್ಗಳ ಭರ್ಜರಿ ಮೊತ್ತ ಕಲೆಹಾಕಿತು. ಪ್ರತಿಯಾಗಿ ಕರ್ನಾಟಕ ತಂಡ 293 ರನ್ಗಳಿಗೆ ಆಲೌಟ್ ಆಯಿತು.
ಎರಡನೇ ಇನ್ನಿಂಗ್ಸ್ನಲ್ಲೂ ಜಮ್ಮು-ಕಾಶ್ಮೀರ ಬ್ಯಾಟ್ಸ್ಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಆರಂಭಿಕ ಆಟಗಾರ ಕಮ್ರಾನ್ ಇಕ್ಬಾಲ್ 160 ರನ್ಗಳ ಸೊಗಸಾದ ಇನ್ನಿಂಗ್ಸ್ ಆಡಿದರು. ಸಾಹಿಲ್ ಕೂಡ ಶತಕ ಬಾರಿಸಿದರು. ಇದರಿಂದ ಒಟ್ಟು ಮುನ್ನಡೆ 630 ರನ್ಗಳನ್ನು ಮೀರಿತು. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ, ಮೊದಲ ಇನ್ನಿಂಗ್ಸ್ನಲ್ಲಿ 291 ರನ್ಗಳ ಮುನ್ನಡೆ ಪಡೆದಿದ್ದ ಜಮ್ಮು-ಕಾಶ್ಮೀರ ತಂಡವನ್ನು ನಿಯಮಾನುಸಾರ ಚಾಂಪಿಯನ್ ಎಂದು ಘೋಷಿಸಲಾಯಿತು.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಹುಬ್ಬಳ್ಳಿಗೆ ಆಗಮಿಸಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಟಗಾರರನ್ನು ಅಭಿನಂದಿಸಿದರು. ಈ ಸಾಧನೆ ಭವಿಷ್ಯದ ಪೀಳಿಗೆಗಳಿಗೆ ಕ್ರೀಡೆಯಲ್ಲಿ ಸ್ಫೂರ್ತಿ ನೀಡಲಿದೆ ಎಂದು ಅವರು ಹೇಳಿದರು. ಜಮ್ಮು-ಕಾಶ್ಮೀರ ತಂಡದ ಈ ಗೆಲುವು ರಣಜಿ ಟ್ರೋಫಿ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಂತಾಗಿದೆ.


