Home Blog

ಸ್ಯಾಂಡಲ್ ವುಡ್ ನಿರ್ದೇಶಕನ ಕಿಡ್ನ್ಯಾಪ್ ಕೇಸ್: ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್!

0

ಬೆಂಗಳೂರು: ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

ಅನೀಶ್ “ಜೀವನದ ಭಾಷೆ” ಎಂಬ ಸಿನಿಮಾವನ್ನು ನಿರ್ದೇಶಿಸುತ್ತಿದ್ದರು. ಇದಕ್ಕೂ ಮುನ್ನ “ಭರವಸೆಯ ಜೀವನ” ಎಂಬ ಶಾರ್ಟ್ ಮೂವಿ ನಿರ್ಮಿಸಿದ್ದರು. ಕೆಲವು ಕಾರಣಗಳಿಂದ ಸಿನಿಮಾ ನಿಲ್ಲಿಸಿ ಬಳಿಕ ಮುಂಬೈಗೆ ಸ್ಥಳಾಂತರವಾಗಿದ್ದರು.

ಈ ನಡುವೆ, ತಮ್ಮ ಕಾರು ಮಾರಾಟದ ಬಗ್ಗೆ ನಟಿ ಐಶ್ವರ್ಯ ಅವರಿಗೆ ಮಾಹಿತಿ ನೀಡಿದ್ದರು. ದುನಿಯಾ ವಿಜಯ್ ಅಭಿನಯದ “ಭೀಮ” ಸಿನಿಮಾದಲ್ಲಿ ನಟಿಸಿದ್ದ ಐಶ್ವರ್ಯ ಮೂಲಕ ಆರೋಪಿಗಳು ಮಾಹಿತಿ ಕಲೆಹಾಕಿದ್ದಾರೆ. ಕಾರು ಖರೀದಿ ಮಾಡುವುದಾಗಿ ಹೇಳಿ ಅನೀಶ್ ಅವರನ್ನು ಸಂಪರ್ಕಿಸಿ, ನಟಿಯ ಮೂಲಕ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.

ಬೆಂಗಳೂರಿಗೆ ಬಂದ ಬಳಿಕ ಕಾರು ಖರೀದಿ ನೆಪದಲ್ಲಿ ಅನೀಶ್ ಅವರನ್ನು ಕಿಡ್ನ್ಯಾಪ್ ಮಾಡಲಾಗಿದೆ. ನಿರ್ದೇಶಕನೊಂದಿಗೆ ಐದು ಲಕ್ಷ ರೂಪಾಯಿ ಹಣದ ವಿಚಾರವಾಗಿ ಉಂಟಾದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ 11 ಆರೋಪಿಗಳನ್ನು ಬಂಧಿಸಿರುವ ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳ ಬಳಿಕ ಮಹತ್ವದ ಕಾನೂನು ಬೆಳವಣಿಗೆ ಸಂಭವಿಸಿದೆ. ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ಕೆಳ ನ್ಯಾಯಾಲಯದ ಖುಲಾಸೆ ತೀರ್ಪನ್ನು ಎತ್ತಿಹಿಡಿದಿದೆ.

2000ರ ಜುಲೈ 30ರಂದು ದೊಡ್ಡಗಾಜನೂರಿನ ಫಾರ್ಮ್‌ಹೌಸ್‌ನಿಂದ ಡಾ. ರಾಜ್‌ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. 108 ದಿನಗಳ ಕಾಲ ನಡೆದ ಈ ನಾಟಕೀಯ ಘಟನೆ ಕರ್ನಾಟಕ ಮತ್ತು ತಮಿಳುನಾಡಿನ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು.

ಪ್ರಕರಣದಲ್ಲಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಸೇರಿ ನಾಲ್ವರು ಸಾವನ್ನಪ್ಪಿದ ಬಳಿಕ, ಉಳಿದ ಒಂಬತ್ತು ಮಂದಿಯ ವಿರುದ್ಧ ದೀರ್ಘಾವಧಿ ವಿಚಾರಣೆ ನಡೆದಿತ್ತು. ಸುಮಾರು 10 ನ್ಯಾಯಮೂರ್ತಿಗಳು ಬದಲಾಗಿದ್ದ ಈ ಪ್ರಕರಣ 18 ವರ್ಷಗಳ ಬಳಿಕ 2018ರಲ್ಲಿ ಖುಲಾಸೆ ತೀರ್ಪಿನಿಂದ ಅಂತ್ಯಗೊಂಡಿತ್ತು.

ಆ ತೀರ್ಪಿಗೆ ವಿರೋಧವಾಗಿ 2019ರಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಇದೀಗ ಹೈಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಎರಡು ದಶಕಗಳಿಗೂ ಅಧಿಕ ಕಾಲ ಮುಂದುವರಿದ ಕಾನೂನು ಹೋರಾಟಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.

ಪಿ. ಲಂಕೇಶ್ ಪರಂಪರೆಗೆ ಮೂರನೇ ಕಿರೀಟ: ಸಮರ್ಜಿತ್ ಲಂಕೇಶ್ ಗೆ ಫಿಲ್ಮ್‌ಫೇರ್ ಗೌರವ

70ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭವು ಲಂಕೇಶ್ ಕುಟುಂಬಕ್ಕೆ ಮತ್ತೊಮ್ಮೆ ಗೌರವ ತಂದಿದೆ. ಸಮರ್ಜಿತ್ ಲಂಕೇಶ್ ಅವರು ‘ಗೌರಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನವನಟ ಪ್ರಶಸ್ತಿ ಗೆದ್ದು ಕುಟುಂಬದ ಸಾಧನೆಯನ್ನು ಮುಂದುವರಿಸಿದ್ದಾರೆ.

ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗದಲ್ಲಿ ವಿಶಿಷ್ಟ ಗುರುತು ಮೂಡಿಸಿದ ಪಿ. ಲಂಕೇಶ್ ಅವರು ಎಲ್ಲಿಂದಲೋ ಬಂದವರು ಚಿತ್ರದ ಮೂಲಕ ಫಿಲ್ಮ್‌ಫೇರ್ ಗೌರವ ಪಡೆದಿದ್ದರು. ಅವರ ಪುತ್ರ ಇಂದ್ರಜಿತ್ ಲಂಕೇಶ್ ನಿರ್ದೇಶನ ಕ್ಷೇತ್ರದಲ್ಲಿ ‘ಐಶ್ವರ್ಯ’ ಚಿತ್ರದಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದಿದ್ದರು.

ಈಗ ಸಮರ್ಜಿತ್ ಲಂಕೇಶ್ ‘ಗೌರಿ’ ಮೂಲಕ ಯಶಸ್ವಿ ಆರಂಭ ಮಾಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವೃಷಭ ಚಿತ್ರದಲ್ಲಿ ಮೋಹನ್ಲಾಲ್ ಜೊತೆ ಅಭಿನಯಿಸಿದ್ದು ಅವರ ಕರಿಯರ್‌ಗೆ ಹೊಸ ಆಯಾಮ ನೀಡಿದೆ. ಒಂದು ಕನ್ನಡ ಹಾಗೂ ಒಂದು ಹಿಂದಿ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ.

ಲಂಕೇಶ್ ಕುಟುಂಬದ ಚಿತ್ರಯಾನ ಮೂರನೇ ತಲೆಮಾರಿನೊಂದಿಗೆ ಮತ್ತಷ್ಟು ಬಲ ಪಡೆಯುತ್ತಿದೆ.

ತೆಲುಗು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಸಮಾರಂಭ ಭಾರಿ ಗಮನ ಸೆಳೆದಿದೆ. ರಾಜಸ್ಥಾನದ ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಇಂದು ಬೆಳಗ್ಗೆ ಈ ಜೋಡಿ ಅಧಿಕೃತವಾಗಿ ವಿವಾಹವಾಗಿದ್ದಾರೆ.

ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ವಿವಾಹವು ತೆಲುಗು ಸಂಪ್ರದಾಯದಂತೆ ನೆರವೇರಿತು. ಕಳೆದ ವರ್ಷ ನಡೆದ ನಿಶ್ಚಿತಾರ್ಥದ ನಂತರ ಈ ಜೋಡಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದೆ. ಮದುವೆಗೆ ಮುನ್ನ ಮೆಹಂದಿ, ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳು ನಡೆಯುವ ಮೂಲಕ ಮದುವೆ ಸಂಭ್ರಮ ಆರಂಭವಾಗಿತ್ತು.

ಈ ಜೋಡಿ ವಿಭಿನ್ನ ಸಂಪ್ರದಾಯಗಳಿಗೆ ಸೇರಿದ ಕುಟುಂಬಗಳಿಂದ ಬಂದಿರುವ ಕಾರಣ, ತೆಲುಗು ಮತ್ತು ಕೊಡವ ಸಂಪ್ರದಾಯಗಳನ್ನು ಸಮನಾಗಿ ಪಾಲಿಸುವ ರೀತಿಯಲ್ಲಿ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ ವೇಳೆಗೆ ಕೊಡವ ಸಂಪ್ರದಾಯದ ಶಾಸ್ತ್ರಗಳು ನಡೆಯುವ ನಿರೀಕ್ಷೆಯಿದೆ.

ಚಿತ್ರರಂಗ ಮತ್ತು ರಾಜಕೀಯ ವಲಯದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ಮಾರ್ಚ್ ಮೊದಲ ವಾರದಲ್ಲಿ ಹೈದರಾಬಾದ್‌ನಲ್ಲಿ ಭರ್ಜರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಸಿಎಂ ಕುರ್ಚಿ ಗೊಂದಲಗಳಿಗೆ ಹೈಕಮಾಂಡೇ ಉತ್ತರ ನೀಡಬೇಕು: ಸಚಿವ ಡಾ. ಜಿ. ಪರಮೇಶ್ವರ್ 

0

ಬೆಂಗಳೂರು: ಸಿಎಂ ಕುರ್ಚಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ಹೈಕಮಾಂಡ್‌ವೇ ಉತ್ತರ ನೀಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳು ತಮ್ಮ ಹೆಸರು ಕೂಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ಸಾಕಷ್ಟು ಗೊಂದಲಗಳು ಈಗಾಗಲೇ ಉಂಟಾಗಿವೆ. ನಾನು ಅದನ್ನು ಇನ್ನಷ್ಟು ಗೊಂದಲಗೊಳಿಸಲು ಸಿದ್ಧನಿಲ್ಲ ಎಂದು ತಿಳಿಸಿದ್ದಾರೆ.

ಅನೇಕರು ತಮ್ಮನ್ನು ಪ್ರಶ್ನಿಸುತ್ತಾರೆ. ಕೆಲ ಅಭಿಮಾನಿಗಳು ಸಿಎಂ ಆಗಬೇಕು ಎಂದು ಘೋಷಣೆಗಳನ್ನು ಕೂಗುತ್ತಾರೆ. ಆದರೆ ಇದರ ಕುರಿತು ಉತ್ತರ ನೀಡಬೇಕಾಗಿರುವುದು ಹೈಕಮಾಂಡ್. ಯಾವ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೋ, ಆ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ನಾನು ಯಾವತ್ತೂ ಲಾಬಿ ಮಾಡಲು ಹೋಗಿಲ್ಲ. ದೆಹಲಿಗೂ ಹೋಗಿಲ್ಲ. ಯಾವುದೇ ರೀತಿಯ ಲಾಬಿ ಮಾಡುತ್ತಿಲ್ಲ. ನಮ್ಮ ಹಿತೈಷಿಗಳು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿರಬಹುದು.

ಅವರಿಗೆ ಮಾಡಬೇಡಿ ಎಂದು ಹೇಳುವುದು ಕಷ್ಟ. 2-3 ಬಾರಿ ಹಾಗೆ ಮಾಡಬೇಡಿ ಎಂದು ಹೇಳಿದ್ದೇನೆ. ಆದರೆ ಅವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಈ ಗೊಂದಲಕ್ಕೆ ನಾನು ಕೈಜೋಡಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

“ನೀನೇ ಖುಷಿಯಾಗಿರು”: ಸ್ಟೇಟಸ್ ಹಾಕಿ ನೀರಿಗೆ ಹಾರಿ 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ!

0

ತುಮಕೂರು: “ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ” ಎಂದು ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿಯೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ವಿದ್ಯಾರ್ಥಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ ಧನುಷ್, ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಪೋಷಕರು ಕರೆ ಮಾಡಿದರೂ ಮೊಬೈಲ್ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ಆರಂಭಿಸಿದರು.

ಹುಡುಕಾಟದ ವೇಳೆ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಧನುಷ್  ಬ್ಯಾಗ್, ಚಪ್ಪಲಿ ಮತ್ತು ಮೊಬೈಲ್ ಪತ್ತೆಯಾಗಿದೆ. ಜೊತೆಗೆ ಆತ್ಮಹತ್ಯೆಗೆ ಮುನ್ನ ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಪೋಷಕರು ತುರುವೇಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನ ಕಟ್ಟೆಯಲ್ಲಿ ಶೋಧ ಕಾರ್ಯ ನಡೆಸಿ ವಿದ್ಯಾರ್ಥಿ ಧನುಷ್  ಮೃತದೇಹವನ್ನು ಪತ್ತೆಹಚ್ಚಿದರು. ಬಳಿಕ ಮೃತದೇಹವನ್ನು ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

0

ಹೈದರಾಬಾದ್: ಯೂಟ್ಯೂಬರ್ ಹಾಗೂ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಹೈದರಾಬಾದ್‌ನ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆಬ್ರವರಿ 23ರಂದು (ಸೋಮವಾರ) ನಡೆದಿದೆ. ಸಾಯುವ ಮುನ್ನ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತಾಯಿಗೆ “ಐ ಲವ್ ಯೂ ಸೋ ಮಚ್” ಎಂಬ ಸಂದೇಶ ಕಳುಹಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳನ್ನು ಕೋಮಲಿ (21) ಎಂದು ಗುರುತಿಸಲಾಗಿದೆ. ಆಕೆ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಕಳೆದ 11 ತಿಂಗಳಿನಿಂದ ಹೈದರಾಬಾದ್‌ನಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಆಕೆ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಅಭ್ಯಾಸ ಮಾಡುತ್ತಿದ್ದರು. ವಿಜ್ಞಾನ ವಿದ್ಯಾರ್ಥಿನಿಯಾಗಿದ್ದ ಕೋಮಲಿ ಯೂಟ್ಯೂಬರ್ ಆಗಿಯೂ ಗುರುತಿಸಿಕೊಂಡಿದ್ದರು.

ಫೆಬ್ರವರಿ 23ರ ಬೆಳಗ್ಗೆ, ಕೋಮಲಿ ತನ್ನ ತಾಯಿ ಬಿ. ಸತ್ಯ ವರಲಕ್ಷ್ಮಿಗೆ “ನಿಮ್ಮನ್ನು ತುಂಬಾ ಪ್ರೀತಿಸುತ್ತೀನಿ ಅಮ್ಮ” ಎಂದು ಸಂದೇಶ ಕಳುಹಿಸಿ, ಕಿರಿಯ ಸಹೋದರನನ್ನು ನೋಡಿಕೊಳ್ಳುವಂತೆ ಮನವಿ ಮಾಡಿದ್ದಾಳೆ. ಬಳಿಕ ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು.ತಾಯಿ ಹಲವು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದೆ, ಸ್ನೇಹಿತರನ್ನು ಸಂಪರ್ಕಿಸಿ ಕೋಮಲಿಯ ಫ್ಲಾಟ್‌ಗೆ ಹೋಗುವಂತೆ ತಿಳಿಸಿದ್ದಾರೆ.

ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸ್ನೇಹಿತರು ಫ್ಲಾಟ್‌ಗೆ ತೆರಳಿದ್ದು, ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿಲ್ಲ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿ ಬೀಗ ಮುರಿದು ಒಳ ಪ್ರವೇಶಿಸಿದರು. ಅಲ್ಲಿ ಕೋಮಲಿಯ ಶವ ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದು ಕಂಡುಬಂದಿದೆ. ಸ್ಥಳದಿಂದ ಸಣ್ಣ ಏಣಿ ಹಾಗೂ ಸೀರೆ ವಶಪಡಿಸಿಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕೋಮಲಿ ಕಳೆದ ಮೂರು ವರ್ಷಗಳಿಂದ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಜೊತೆ ಸಂಬಂಧ ಹೊಂದಿದ್ದಳು. ಇತ್ತೀಚೆಗೆ ಇಬ್ಬರೂ ಸಂಬಂಧ ಮುರಿದಿರುವ ಮಾಹಿತಿ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರು ತಿಂಗಳ ಹಿಂದೆಯೂ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆಗಾಗಿ ಭೌತಿಕ ಹಾಗೂ ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ: NIA ತನಿಖೆಗೆ ಶ್ರೀರಾಮುಲು ಮನವಿ

0

ಬಾಗಲಕೋಟೆ: ಜಿಲ್ಲೆಯಲ್ಲಿನ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಘಟನೆಯ ವಿವರ

ಫೆಬ್ರವರಿ 19ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೆರವಣಿಗೆಯ ಮೇಲೆ ಚಪ್ಪಲಿ ಎಸೆದು ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮುಲು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ ಎಂದು ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ. ಸತ್ಯಾಸತ್ಯತೆ ಹೊರಬರಲು ಎನ್‌ಐಎ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಘಟನೆಗಳ ಮಾದರಿಯಲ್ಲೇ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು, ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇದರ ನಡುವೆ ಕೆಲ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. “15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ” ಎಂಬ ಅರ್ಥದ ಹೇಳಿಕೆ ಪೋಸ್ಟ್‌ನಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು: ಹೈಕೋರ್ಟ್ ಆದೇಶ

0

ಬೆಂಗಳೂರು: ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕಾಗಿದ್ದು, ಈ ರಜೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸಿಸಿಎಲ್‌ ಕೋರಿ ಬಂದ ಅರ್ಜಿಗಳನ್ನು ಆದ್ಯತೆ ಮೇರೆಗೆ ಮಂಜೂರು ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್‌ನಲ್ಲಿ (ಸಿ-ಡ್ಯಾಕ್) ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ವಡ್ಡೆ ಅವರಿಗೆ ಫೆಬ್ರವರಿ 6ರಿಂದ ಮೇ 20ರವರೆಗೆ ಚೈಲ್ಡ್ ಕೇರ್ ಲೀವ್ ಮಂಜೂರು ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಫೆಬ್ರವರಿ 5ರಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ರಜೆ ಮಂಜೂರು ಮಾಡಲು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಿಎಟಿ ಆದೇಶವನ್ನು ಎತ್ತಿಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದೆ.

ನ್ಯಾಯಪೀಠ ತಿಳಿಸಿದಂತೆ, ಇತರೆ ರಜೆಗಳನ್ನು ಮಂಜೂರು ಮಾಡುವುದು ಅಥವಾ ನಿರಾಕರಿಸುವುದು ಉದ್ಯೋಗದಾತರ ವಿವೇಚನೆಗೆ ಒಳಪಟ್ಟಿರಬಹುದು. ಆದರೆ ಸಿಸಿಎಲ್‌ ವಿಚಾರದಲ್ಲಿ ಅಂತಹ ವಿವೇಚನಾ ಅಧಿಕಾರ ಅನ್ವಯಿಸುವುದಿಲ್ಲ. ಮಕ್ಕಳ ಆರೈಕೆಗೆ ಮೀಸಲಾದ ಈ ರಜೆ ನೀಡಲೇಬೇಕು ಎಂದು ಸ್ಪಷ್ಟಪಡಿಸಿದೆ. ತಾಯಿಗೆ ರಜೆ ನಿರಾಕರಿಸಿದರೆ ಅದು ಮಕ್ಕಳ ಮೇಲೆ ಒತ್ತಡ ಉಂಟುಮಾಡಬಹುದು. ಆದ್ದರಿಂದ ಸಿಸಿಎಲ್‌ ಮಗುವಿನ ಹಕ್ಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವಕೀಲರು, 5 ತಿಂಗಳ ಸಿಸಿಎಲ್‌ ಕೋರಿದ್ದರೂ ಕೇವಲ 18 ದಿನಗಳ ರಜೆ ಮಾತ್ರ ಮಂಜೂರು ಮಾಡಲಾಗಿದೆ. ಇದು ಕೇಂದ್ರ ನಾಗರಿಕ ಸೇವಾ ರಜೆ ನಿಯಮ 43ಸಿ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.
ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗಾಗಿ ತಾಯಿಯ ಆರೈಕೆ ಅಗತ್ಯವಿದೆ. ಪರೀಕ್ಷಾ ಅವಧಿಯಲ್ಲಿರುವ ಮಕ್ಕಳಿಗೆ ತಾಯಿಯ ಬೆಂಬಲ ಮುಖ್ಯವಾಗಿದ್ದು, ರಜೆ ನಿರಾಕರಣೆ ಒತ್ತಡಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. ವಾದ ಆಲಿಸಿದ ಹೈಕೋರ್ಟ್, ಫೆಬ್ರವರಿ 6ರಿಂದ ಮೇ 20ರವರೆಗೆ ಸಿಸಿಎಲ್‌ ರಜೆ ನೀಡುವಂತೆ ಅಂತಿಮ ಆದೇಶ ನೀಡಿದೆ.

ಟ್ರಂಪ್‌ಗೆ ಮೀರಿದ ಮೋದಿ ಡಿಜಿಟಲ್ ದಾಪುಗಾಲು: ನೆಸ್ಸೆಟ್ ಗೌರವವೂ ಪ್ರಧಾನಿ ಖಾತೆಗೆ

0

ನವದೆಹಲಿ: ನರೇಂದ್ರ ಮೋದಿ ಅವರ ಜನಪ್ರಿಯತೆ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದೆ. ಇನ್‌ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ಅವರು ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ.

2014ರಲ್ಲಿ ಮೆಟಾ ವೇದಿಕೆಯಾದ ಇನ್‌ಸ್ಟಾಗ್ರಾಂನಲ್ಲಿ ಖಾತೆ ತೆರೆದ ಪ್ರಧಾನಿ ಮೋದಿ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿದ್ದಾರೆ. ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಲಾ ಡಾ ಸಿಲ್ವಾ 14.4 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದು, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಭಾರತದೊಳಗೆ ಪ್ರಧಾನಿ ಮೋದಿ ನಂತರ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (16.1 ಮಿಲಿಯನ್). ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

error: Content is protected !!