Home Blog

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್.! 771 ಗ್ರಾಂ ಗಾಂಜಾ, 237 ಮೊಬೈಲ್ʼಗಳು ವಶಕ್ಕೆ

ಬೆಂಗಳೂರು: ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ನಿವಾಸಿ ಅಕ್ಬರ್ ಷರೀಫ್ ಬಂಧಿತ ಆರೋಪಿಯಾಗಿದ್ದು,

ದಾಳಿ ವೇಳೆ 771 ಗ್ರಾಂ ಗಾಂಜಾ, 237 ಮೊಬೈಲ್, 18 ಮಾರ್ಕಸ್ತ್ರಗಳು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಗಾಂಜಾ ಸಂಗ್ರಹ ಹಾಗೂ ಮಾರಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ತನಿಖೆ ವೇಳೆ ಆರೋಪಿ ಅಕ್ಬರ್ ಷರೀಫ್ ತನ್ನ ಕುಟುಂಬದ ಸದಸ್ಯರ ಸಹಕಾರದೊಂದಿಗೆ ಮನೆಯಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗಾಂಜಾ ಖರೀದಿಸಲು ಬಂದ ಕೆಲವರು ಹಣದ ಬದಲಾಗಿ ಮೊಬೈಲ್ ಫೋನ್‌ಗಳನ್ನು ನೀಡುತ್ತಿದ್ದು, ಆರೋಪಿ ಅವುಗಳನ್ನು ಸ್ವೀಕರಿಸಿ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಆರೋಪಿಯ ಮನೆಯಲ್ಲಿ 237 ಮೊಬೈಲ್‌ಗಳು ಪತ್ತೆಯಾಗಿವೆ.

ಇದೇ ವೇಳೆ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಆರೋಪಿ 18 ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಅಕ್ಬರ್ ಷರೀಫ್ ವಿರುದ್ಧ ಈ ಹಿಂದೆಯೂ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಇದೀಗ ಮತ್ತೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಹುಡುಗಿಯರನ್ನು ಇಟ್ಟುಕೊಂಡು ದಂಧೆ ಆರೋಪ: ನಟೋರಿಯಸ್ ಪಿಂಪ್ ಚೇತನ್ ಬಂಧನ!

ಬೆಂಗಳೂರು: ಹುಡುಗಿಯರನ್ನು ಇಟ್ಟುಕೊಂಡು ಅಕ್ರಮ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಟೋರಿಯಸ್ ಪಿಂಪ್‌ವೊಬ್ಬನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪೀಣ್ಯ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಪೊಲೀಸರ ಪ್ರಕಾರ, ಆರೋಪಿ ಚೇತನ್ ಮಂಗಳಮುಖಿ ವೇಷ ಧರಿಸಿ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಎನ್ನಲಾಗಿದೆ. ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ದಂಧೆ ನಡೆಸುತ್ತಿದ್ದ ಆರೋಪವೂ ಆತನ ಮೇಲಿದೆ.

ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಚೇತನ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಪೀಣ್ಯ ಪ್ರದೇಶದ ರೂಮ್‌ವೊಂದರಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾಕು ನಾಯಿಯಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಮಾಲೀಕರೇ ಹೊಣೆ: ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರ ಮುಖಕ್ಕೆ ಸಾಕು ನಾಯಿ ಕಚ್ಚಿದ ಪ್ರಕರಣದಲ್ಲಿ ನಾಯಿ ಮಾಲೀಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ನಾಯಿಯನ್ನು ಕಟ್ಟಿಹಾಕದೆ ಬಿಟ್ಟು, ಅದರ ದಾಳಿಯಿಂದ ಇತರರಿಗೆ ಗಾಯವಾದರೆ ಅದಕ್ಕೆ ನಾಯಿ ಮಾಲೀಕರೇ ಹೊಣೆಗಾರರು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇಂದಿರಾನಗರ ನಿವಾಸಿ ಲಲಿತಾ ಗೋಪಾಲಕೃಷ್ಣನ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು.

ಅರ್ಜಿದಾರರ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, ನಾಯಿಯನ್ನು ನಿಯಂತ್ರಣವಿಲ್ಲದೆ ಬಿಡುವುದು ಬೇಜವಾಬ್ದಾರಿಯ ವರ್ತನೆ ಎಂದು ಅಭಿಪ್ರಾಯಪಟ್ಟಿದೆ. ಸಾಕು ಪ್ರಾಣಿಗಳ ಮಾಲೀಕರು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಜವಾಬ್ದಾರಿಯಿಂದ ವರ್ತಿಸಬೇಕು. ಈ ಪ್ರಕರಣ ಇತರ ನಾಯಿ ಮಾಲೀಕರಿಗೂ ಎಚ್ಚರಿಕೆಯ ಪಾಠವಾಗಬೇಕು. ಇಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಕ್ರಮವನ್ನು ಈ ಹಂತದಲ್ಲೇ ರದ್ದುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಕೆಯಾಗಿರುವುದರಿಂದ, ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲಿ ಆರೋಪಮುಕ್ತಗೊಳಿಸುವಂತೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪೀಠ ಸೂಚಿಸಿತು. ಬಳಿಕ ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ನಲ್ಲಿದ್ದ ಅರ್ಜಿಯನ್ನು ಹಿಂಪಡೆದುಕೊಂಡರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹಜರು ಹಾಗೂ ವೈದ್ಯಕೀಯ ವರದಿಯಲ್ಲಿ ಗಂಭೀರ ಗಾಯಗಳ ಬಗ್ಗೆ ಯಾವುದೇ ದಾಖಲೆಯಿಲ್ಲ. ದೂರುದಾರರಿಗೆ ನಾಯಿ ಈಗಾಗಲೇ ಪರಿಚಿತವಾಗಿದ್ದು, ಅವರೇ ನಾಯಿಯ ಬಳಿ ಮುಖ ತಂದಿದ್ದರು. ಅಲ್ಲದೆ, ಇದು ಅಪಾಯಕಾರಿ ತಳಿಯ ನಾಯಿಯಲ್ಲ. ಹಣ ಪಡೆಯುವ ಉದ್ದೇಶದಿಂದಲೇ ಸುಳ್ಳು ದೂರು ದಾಖಲಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಪ್ರಕರಣದ ಹಿನ್ನೆಲೆ

ನಾಯಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಲಲಿತಾ ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 291 (ಪ್ರಾಣಿಗಳಿಗೆ ಸಂಬಂಧಿಸಿದ ನಿರ್ಲಕ್ಷ್ಯದ ನಡವಳಿಕೆ) ಅಡಿಯಲ್ಲಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಸದ್ಯ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಮುಂದುವರಿಯುತ್ತಿದೆ.

ಹುಮನಾಬಾದ್‌ನಲ್ಲಿ ದುರಂತ: ರಸ್ತೆ ದಾಟುತ್ತಿದ್ದ ಕುರಿಗಳ ಹಿಂಡಿಗೆ ಕಾರು ಡಿಕ್ಕಿ, 15 ಕುರಿ ಬಲಿ!

ಬೀದರ್: ಜಿಲ್ಲೆಯ ಹುಮನಾಬಾದ್-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿ ಹೊಡೆದ ಪರಿಣಾಮ 15 ಕುರಿಗಳು ಮೃತಪಟ್ಟಿವೆ.

ಹುಮನಾಬಾದ್ ತಾಲೂಕಿನ ತಡೋಳಾ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ಕಾರೊಂದು ವೇಗವಾಗಿ ಬಂದು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 12 ಕುರಿಗಳು ಹಾಗೂ 3 ಕುರಿ ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ಮೃತ ಕುರಿಗಳು ವಿಜಯಪುರ ಜಿಲ್ಲೆಯ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ ಸೇರಿವೆ. ಜ್ಯೋತಿಬಾ ಅವರು ತಮ್ಮ ಜೀವನೋಪಾಯಕ್ಕಾಗಿ ಕುರಿ ಸಾಕಾಣಿಕೆ ಮಾಡುತ್ತಿದ್ದು, ಸುಮಾರು 700 ಕುರಿಗಳನ್ನು ಹುಮನಾಬಾದ್ ತಾಲೂಕು ವ್ಯಾಪ್ತಿಯಲ್ಲಿ ಮೇಯಿಸುತ್ತಿದ್ದರು.

ನಿನ್ನೆ ಸಂಜೆ ಕುರಿಗಳನ್ನು ಮೇಯಿಸಿಕೊಂಡು ರಸ್ತೆ ದಾಟಿಸುತ್ತಿದ್ದ ವೇಳೆ ಹುಮನಾಬಾದ್ ಕಡೆಯಿಂದ ವೇಗವಾಗಿ ಬಂದ ಕಾರು ಏಕಾಏಕಿ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಒಟ್ಟು 15 ಕುರಿಗಳು ಮೃತಪಟ್ಟಿದ್ದು, ಕುರಿಗಾಯಿ ಜ್ಯೋತಿಬಾ ಅವರಿಗೆ ಸುಮಾರು 3 ರಿಂದ 4 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕುರಿಗಳೇ ತಮ್ಮ ಕುಟುಂಬದ ಜೀವನಾಧಾರವಾಗಿದ್ದವು. ಅವುಗಳ ಸಾವಿನಿಂದ ದೊಡ್ಡ ನಷ್ಟ ಉಂಟಾಗಿದೆ ಎಂದು ಜ್ಯೋತಿಬಾ ಪಾಂಡು ಲೋಖಂಡೆ ತಿಳಿಸಿದ್ದಾರೆ.

ಘಟನೆ ಬಳಿಕ ಸ್ಥಳೀಯರು ಹಾಗೂ ಕುರಿಗಾಯಿಗಳು ಮಾಹಿತಿ ನೀಡಿದ್ದು, ಅಪಘಾತಕ್ಕೆ ಕಾರಣವಾದ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಗದಗದಲ್ಲಿ ರೌಡಿಗಳ ವಿರುದ್ಧ ಪೊಲೀಸರ ಕಠಿಣ ಕ್ರಮ:3 ತಿಂಗಳಲ್ಲಿ 13 ರೌಡಿಶೀಟರ್‌ಗಳು ಗಡಿಪಾರು!

ಗದಗ:- ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ರೌಡಿಶೀಟರ್‌ಗಳ ವಿರುದ್ಧ ಗದಗ ಜಿಲ್ಲಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

ಕಳೆದ ಮೂರು ತಿಂಗಳ ಅವಧಿಯಲ್ಲಿ 13 ಮಂದಿ ರೌಡಿಶೀಟರ್‌ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ. ಕೊಲೆ ಯತ್ನ, ದರೋಡೆ, ಸುಲಿಗೆ, ಮಾದಕ ವಸ್ತುಗಳ ಮಾರಾಟ, ಜೂಜಾಟ, ಸಾರ್ವಜನಿಕ ಆಸ್ತಿ ಹಾನಿ, ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಆದೇಶದ ಮೇರೆಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದ ಸಲ್ಲಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಬಳಿಕ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗಡಿಪಾರುಗೊಂಡ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಭಾರತೀಯ ದಂಡ ಸಂಹಿತೆ (IPC), ಎನ್‌ಡಿಪಿಎಸ್ ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.

ಗಡಿಪಾರುಗೊಂಡ ರೌಡಿಶೀಟರ್‌ಗಳ ವಿವರ:

* ದವನಪ್ಪ (ಬಾಗಲಕೋಟೆ): ಕೊಲೆ ಯತ್ನ, ಗಲಭೆ, ಹಲ್ಲೆ, ಜೀವ ಬೆದರಿಕೆ, ಎಸ್‌ಸಿ/ಎಸ್‌ಟಿ ಕಾಯ್ದೆ ಉಲ್ಲಂಘನೆ ಸೇರಿ 6 ಪ್ರಕರಣಗಳು.

* ದಾವಲಸಾಬ್ (ಬಾಗಲಕೋಟೆ): ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ 3 ಪ್ರಕರಣಗಳು.

* ಅಭಿಷೇಕ್ (ಬಾಗಲಕೋಟೆ): ಜೀವ ಬೆದರಿಕೆ, ಹಲ್ಲೆ ಸೇರಿ 2 ಪ್ರಕರಣಗಳು.

* ಸಾಹಿಲ್ (ಕೊಪ್ಪಳ): ಜೀವ ಬೆದರಿಕೆ, ಹಲ್ಲೆ ಸೇರಿ 2 ಪ್ರಕರಣಗಳು.

* ರಾಚಣ್ಣ (ಬಾಗಲಕೋಟೆ): ಜೂಜಾಟಕ್ಕೆ ಸಂಬಂಧಿಸಿದ ಕರ್ನಾಟಕ ಪೊಲೀಸ್ ಕಾಯ್ದೆಯಡಿ 3 ಪ್ರಕರಣಗಳು.

* ಲಾಲಸಾಬ್ (ಹಾವೇರಿ): ಜೂಜಾಟಕ್ಕೆ ಸಂಬಂಧಿಸಿದ 3 ಪ್ರಕರಣಗಳು.

* ಮೈನುದ್ದೀನ್ (ಹಾವೇರಿ): ಕೊಲೆ ಯತ್ನ, ದರೋಡೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ 5 ಪ್ರಕರಣಗಳು.

* ಫಕ್ರುಸಾಬ್ (ಹಾವೇರಿ): ಕೊಲೆ ಯತ್ನ, ದರೋಡೆ, ಜೀವ ಬೆದರಿಕೆ ಸೇರಿ 10 ಪ್ರಕರಣಗಳು.

* ಹಾಲಪ್ಪ (ಹಾವೇರಿ): ಕೊಲೆ ಯತ್ನ, ದರೋಡೆ, ಸಾರ್ವಜನಿಕ ಆಸ್ತಿ ಹಾನಿ ಸೇರಿ 12 ಪ್ರಕರಣಗಳು.

* ದರ್ಶನ (ವಿಜಯಪುರ): ಅಪಹರಣ, ಸುಲಿಗೆ, ವಂಚನೆ, ಅತಿಹೆಚ್ಚು ಬಡ್ಡಿ ವಸೂಲಿ, ಹಲ್ಲೆ ಸೇರಿದಂತೆ 10 ಪ್ರಕರಣಗಳು.

* ಬೈರಪ್ಪ (ಹಾವೇರಿ): ಜೂಜಾಟಕ್ಕೆ ಸಂಬಂಧಿಸಿದ 4 ಪ್ರಕರಣಗಳು.

* ಶೇಖಪ್ಪ (ಕೊಪ್ಪಳ): ಜೂಜಾಟಕ್ಕೆ ಸಂಬಂಧಿಸಿದ 5 ಪ್ರಕರಣಗಳು.

* ಕಳಕಪ್ಪ (ಧಾರವಾಡ): ಜೂಜಾಟ ಹಾಗೂ ಬಿಎನ್‌ಎಸ್‌ಎಸ್ ಅಡಿಯಲ್ಲಿ 3 ಪ್ರಕರಣಗಳು.

ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, “ಕಳೆದ ಮೂರು ತಿಂಗಳಲ್ಲಿ 13 ಮಂದಿ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಮುಂದೆಯೂ ನಿರ್ದಾಕ್ಷಿಣ್ಯ ಕ್ರಮ ಮುಂದುವರಿಯಲಿದೆ. ಗದಗ ಜಿಲ್ಲೆಯಲ್ಲಿ ರೌಡಿಸಂ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಅವಕಾಶವಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಸುಳ್ಯದ ಹೆಮ್ಮೆಯ ಪುತ್ರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ!

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

1950ರ ಮೇ 2ರಂದು ಸುಳ್ಯದಲ್ಲಿ ಜನಿಸಿದ್ದ ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು.

ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅವರು, 1989ರಲ್ಲಿ ತಮ್ಮ ಸ್ವಗ್ರಾಮ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆ ನಿರ್ಮಿಸುವ ಮೂಲಕ ತಮ್ಮ ಸೇವಾ ಪಯಣ ಆರಂಭಿಸಿದ್ದರು.

ದುರ್ಗಮ ಪ್ರದೇಶಗಳು, ಕಾಡು ಪ್ರದೇಶಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳಿಗೆ ಅವರ ತೂಗು ಸೇತುವೆಗಳು ಜೀವನಾಡಿಯಾಗಿದ್ದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿದ್ದರು.

ಅವರ ಅಪೂರ್ವ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ 2017ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಿ ಗೌರವಿಸಿತ್ತು.

ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಗಣ್ಯರು, ತಾಂತ್ರಿಕ ಕ್ಷೇತ್ರದ ತಜ್ಞರು ಹಾಗೂ ಗ್ರಾಮೀಣ ಭಾಗದ ಜನರು ಸಂತಾಪ ಸೂಚಿಸಿದ್ದಾರೆ. ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಿದ ಮಹಾನ್ ತಾಂತ್ರಿಕ ಚೇತನವೊಂದು ಕಳೆದುಹೋದಂತಾಗಿದೆ.

PDO ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!

ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಬಿಲ್ ಕಲೆಕ್ಟರ್ ಒಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬಿಳಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಶಿವಪ್ಪ ಎಂದು ಗುರುತಿಸಲಾಗಿದೆ. ಶಿವಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ ನೋಟ್‌ನಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡಿ ಮಾನಸಿಕ ಒತ್ತಡ ಹೇರಲಾಗುತ್ತಿತ್ತು ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಕಂಪ್ಯೂಟರ್ ಜ್ಞಾನ ಇಲ್ಲದ ಕಾರಣ ಪಿಡಿಒ ನಂದಲಿಂಗೇಶ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಹಾಗೂ ಜಾತಿ ನಿಂದನೆ ಮಾಡುತ್ತಿದ್ದರು ಎಂದು ಶಿವಪ್ಪ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿವಪ್ಪ ಅವರು ಬಿಳಚೋಡು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ವರ್ಷಗಳ ಕಾಲ ನೀರಗಂಟಿಯಾಗಿ ಕೆಲಸ ಮಾಡಿದ್ದು, ಕಳೆದ 2-3 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸಂಬಂಧ ಮೃತ ಶಿವಪ್ಪ ಅವರ ಪುತ್ರ ಅಶೋಕ್ ಅವರು ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ಶಿವಪ್ಪ ಕುಟುಂಬಸ್ಥರು ಆರೋಪಿತ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಗುಂಡಿ ರಸ್ತೆಗಳೇ ಟ್ರಾಫಿಕ್‌ಗೆ ಕಾರಣ? 750 ಜಂಕ್ಷನ್‌ಗಳ ಬಗ್ಗೆ ಜಿಬಿಎಗೆ ವರದಿ ಸಲ್ಲಿಸಿದ ಪೊಲೀಸರು!

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ವರದಿ ಸಿದ್ಧಪಡಿಸಿ ಬೆಂಗಳೂರು ಗ್ರೇಟರ್ ಅಥಾರಿಟಿಗೆ ಸಲ್ಲಿಸಿದ್ದಾರೆ.

ಬೆಂಗಳೂರು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಕುರಿತು ವರದಿ ನೀಡುವಂತೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸಂಚಾರಿ ಪೊಲೀಸರಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಸಂಚಾರಿ ಪೊಲೀಸ್ ವಿಭಾಗವು ಸಮಸ್ಯೆಗಳ ಪಟ್ಟಿ ಮಾಡಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸಿದೆ.

ನಗರದ ಸುಮಾರು 750 ಜಂಕ್ಷನ್‌ಗಳಲ್ಲಿ ರಸ್ತೆ ಸಮಸ್ಯೆಗಳನ್ನು ಸರಿಪಡಿಸುವಂತೆ ಸಂಚಾರಿ ಪೊಲೀಸರು ಜಿಬಿಎಗೆ ಮನವಿ ಮಾಡಿದ್ದಾರೆ. ರಸ್ತೆ ಗುಂಡಿಗಳು, ಹದಗೆಟ್ಟ ರಸ್ತೆಗಳು ಹಾಗೂ ಸಿಗ್ನಲ್‌ಗಳ ಬಳಿ ಇರುವ ಸಮಸ್ಯೆಗಳಿಂದ ವಾಹನಗಳ ಸಂಚಾರ ನಿಧಾನವಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಂಕ್ಷನ್‌ಗಳಲ್ಲಿ ರಸ್ತೆ ಸರಿಯಾಗಿಲ್ಲದ ಕಾರಣ ವಾಹನಗಳು ಸಂಚರಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿವೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಸಿಗ್ನಲ್ ಇಂಟರ್‌ಸೆಕ್ಷನ್‌ಗಳಲ್ಲಿನ ರಸ್ತೆಯನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ನಗರದ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ವಿವಿಧ ಅಂಶಗಳನ್ನು ಗುರುತಿಸಿರುವ ಸಂಚಾರಿ ಪೊಲೀಸರು, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಜಿಬಿಎಗೆ ಮನವಿ ಮಾಡಿದ್ದಾರೆ.

ಸದ್ಯ ಈ ವರದಿಯ ಆಧಾರದ ಮೇಲೆ ಜಿಬಿಎ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಎಫೆಕ್ಟ್: 4 ತಾಲೂಕುಗಳ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ ಕಳಸ ತಾಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ತಾಲೂಕು ಆಡಳಿತಗಳು ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿವೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಅವತಿ, ವಸ್ತಾರೆ ಹಾಗೂ ಆಲ್ದೂರು ವ್ಯಾಪ್ತಿಯ ಶಾಲೆಗಳಿಗೂ ರಜೆ ನೀಡಲಾಗಿದೆ.

ಮಳೆಗಿಂತ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಗ್ರಾಮೀಣ ಭಾಗಗಳಲ್ಲಿ ಮರಗಳು ಬೀಳುವ ಹಾಗೂ ಇತರ ಅನಾಹುತಗಳ ಆತಂಕವಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲೂ ರಜೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಲಾರಿ ಡಿಕ್ಕಿಗೆ ಇಬ್ಬರು ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಈ ಘಟನೆ ನಡೆದಿದೆ.

ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್, ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಮೃತಪಟ್ಟಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೀಟಿನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್‌ನ ಭಾಗಗಳನ್ನು ತೆರವುಗೊಳಿಸಿ ಚಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ.

ಇನ್ನು ಪ್ರಯಾಣಿಕನ ಮೃತದೇಹವನ್ನು ಬಸ್‌ನ ಕಿಟಕಿ ಮೂಲಕ ಹೊರತೆಗೆಯಲಾಗಿದ್ದು, ದೃಶ್ಯ ಮನಕಲಕುವಂತಿತ್ತು.

ಮಾಹಿತಿ ತಿಳಿದ ತಕ್ಷಣ ಪೇರೆಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಬಸ್ ಹಾಗೂ ಲಾರಿಯನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.