Home Blog

ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಕೋರ್ಟ್ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಆಕ್ಷೇಪ ಸಲ್ಲಿಸುವಂತಿಲ್ಲ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ ಮತ್ತೊಂದು ಮಹತ್ವದ ಹಂತ ತಲುಪಿದೆ. ಪ್ರದೋಷ್‌ ಮಾಫಿ ಸಾಕ್ಷಿಯಾಗುವುದಕ್ಕೆ ಇತರ ಆರೋಪಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಸೆಷನ್ಸ್‌ ಕೋರ್ಟ್‌ ಸ್ಪಷ್ಟಪಡಿಸಿದೆ. ದರ್ಶನ್‌ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುವಂತೆ ವಾದಿಸಿದ್ದರೂ ಕೋರ್ಟ್‌ ಅದನ್ನು ಪರಿಗಣಿಸಿಲ್ಲ.

ಪ್ರಕರಣದ ಆರೋಪಿಗಳು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು. ದರ್ಶನ್‌, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಮುಂದೆ ಹಾಜರಾದರು. ಪವಿತ್ರಾಗೌಡ ಕೂಡ ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು.

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಗೆ ಆರೋಪಿಗಳ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ‘ಮಾಫಿ ಸಾಕ್ಷಿ ಅರ್ಜಿಗೆ ನಮ್ಮ ಆಕ್ಷೇಪಣೆ ಇದೆ. ನಮ್ಮ ವಾದವನ್ನೂ ಕೇಳಬೇಕು’ ಎಂದು ವಕೀಲರು ವಾದಿಸಿದ್ದರು.

ಆದರೆ ಕೋರ್ಟ್‌ ಆರೋಪಿಗಳ ಆಕ್ಷೇಪಣೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿಗೆ ಇತರ ಆರೋಪಿಗಳು ಆಕ್ಷೇಪಣೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಈ ಆದೇಶ ದರ್ಶನ್‌ ಸೇರಿದಂತೆ ಇತರ ಆರೋಪಿಗಳ ಪರ ವಕೀಲರಿಗೆ ಹಿನ್ನಡೆಯಾಗಿ ಪರಿಣಮಿಸಿದೆ.

ಇದರ ನಡುವೆ ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್‌ ಪರಿಗಣಿಸುತ್ತದೆಯೇ ಎಂಬುದು ಇನ್ನೂ ಪ್ರತ್ಯೇಕ ಆದೇಶದ ಮೂಲಕ ನಿರ್ಧಾರವಾಗಲಿದೆ. ನ್ಯಾಯಮೂರ್ತಿ ಸುಜಾತಾ ಎಂ. ಸಾಂಬ್ರಾಣಿ ಅವರು ಈ ಕುರಿತು ಪ್ರತ್ಯೇಕ ಆದೇಶ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಆದೇಶ ನಿರೀಕ್ಷಿಸಲಾಗಿತ್ತು. ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ದರ್ಶನ್‌ ಪರ ವಕೀಲ ಹಸ್ಮತ್‌ ಪಾಷ ಕೋರ್ಟ್‌ ಹಾಲ್‌ಗೆ ಆಗಮಿಸಿದ್ದರು.

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಗೆ ಇತರ ಆರೋಪಿಗಳ ಆಕ್ಷೇಪಣೆಗೆ ಅವಕಾಶವಿಲ್ಲ ಎಂಬ ಕೋರ್ಟ್‌ ಆದೇಶ ಇದೀಗ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ; ರೈತರ ಜಮೀನು ರಕ್ಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದ ಬಿ.ವೈ. ವಿಜಯೇಂದ್ರ

0

ಬೆಂಗಳೂರು: ಬಿಡದಿ ರೈತರ ಜಮೀನು ಹಾಗೂ ರೈತರ ಹಿತರಕ್ಷಣೆಯ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಗೊಂದಲವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದು, ರೈತರ ಹಿತರಕ್ಷಣೆಯೇ ಎರಡೂ ಪಕ್ಷಗಳ ಸಾಮಾನ್ಯ ಉದ್ದೇಶವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಬಿಡದಿ ಪಾದಯಾತ್ರೆ ವಿಚಾರದಲ್ಲಿ ಯಾರೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಹೇಳಿದ ವಿಜಯೇಂದ್ರ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕಳೆದ ವಾರ ದೂರವಾಣಿ ಮೂಲಕ ಮಾತನಾಡಿದ್ದಾಗಿ ತಿಳಿಸಿದರು.

ಬಿಜೆಪಿಯೂ ರೈತರ ಪರವಾಗಿದ್ದು, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಿದ್ದೆ. ಇದಕ್ಕೆ ಕುಮಾರಸ್ವಾಮಿ ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದು ವಿಜಯೇಂದ್ರ ಹೇಳಿದರು.

ನಂತರ ಜೆಡಿಎಸ್ ವತಿಯಿಂದ ಪಾದಯಾತ್ರೆಯ ದಿನಾಂಕ ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿ ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ನಿರ್ಧರಿಸಲಾಯಿತು. ಜೆಡಿಎಸ್ ಈಗಾಗಲೇ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಸಾಂಕೇತಿಕ ಬೆಂಬಲ ನೀಡುವುದು ಹಾಗೂ ಸದನದ ಒಳಗೂ ರೈತರ ಪರವಾಗಿ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ತಾವು ಪಾದಯಾತ್ರೆಯಲ್ಲಿ ಭಾಗವಹಿಸದಿರುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಲವು ಪೂರ್ವನಿಗದಿತ ಕಾರ್ಯಕ್ರಮಗಳು ಮುಂದೂಡಿಕೆಯಾಗಿದ್ದವು. ಭಾನುವಾರ ಕಾರ್ಯಕ್ರಮ ನಡೆಸಬೇಕೆಂಬ ಸ್ಥಳೀಯ ನಾಯಕರ ಒತ್ತಾಯದ ಹಿನ್ನೆಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳಬೇಕಾಯಿತು ಎಂದು ಹೇಳಿದರು.

ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಪಕ್ಷದ ಮುಖಂಡರು ಸಾಂಕೇತಿಕವಾಗಿ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಒಳಗೆ ಯಾವುದೇ ಗೊಂದಲವಿಲ್ಲ. ರೈತರ ಹೋರಾಟದ ವಿಚಾರದಲ್ಲಿ ಬಿಜೆಪಿ ಸದಾ ರೈತರ ಪರವಾಗಿ ನಿಲ್ಲಲಿದೆ ಎಂದು ವಿಜಯೇಂದ್ರ ಹೇಳಿದರು.

ಬಿಡದಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ. ಪರಿಹಾರ ನೀಡುವ ಹೆಸರಿನಲ್ಲಿ ಕೆಲವರನ್ನು ಹೋರಾಟದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ತಮ್ಮ ಗಮನಕ್ಕೆ ಬಂದಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಈ ವಿಚಾರವನ್ನು ಈಗಾಗಲೇ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗಿದೆ. ಆದರೆ ಇದರ ಅರ್ಥ ಬಿಜೆಪಿ ಹೋರಾಟದಿಂದ ಹಿಂದೆ ಸರಿದಿದೆ ಎಂದಲ್ಲ. ಬಿಡದಿ ಮಾತ್ರವಲ್ಲದೆ ರಾಜ್ಯದಾದ್ಯಂತ ರೈತರ ಜಮೀನುಗಳ ರಕ್ಷಣೆಯ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಬಿಡದಿ, ವಿಮಾನ ನಿಲ್ದಾಣ ಸೇರಿದಂತೆ ರೈತರ ಭೂಮಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ಬಿಜೆಪಿ ರೈತರ ಪರವಾಗಿ ನಿಲ್ಲಲಿದೆ ಎಂದರು.

ಚಿಕ್ಕಬಳ್ಳಾಪುರ ಪ್ರವಾಸದ ವೇಳೆ ಶಿಡ್ಲಘಟ್ಟದಲ್ಲಿಯೂ ಕೆಐಎಡಿಬಿ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ರೈತರ ಜಮೀನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದರು.

‘ನನ್ನ ಸಾಧನೆಗೆಲ್ಲಾ ನನ್ನ ತಾಯಿಯೇ ಕಾರಣ’: ತಾಯಿ ಕಳೆದುಕೊಂಡ ಗುರುಕಿರಣ್‌ ಭಾವುಕ ನುಡಿ

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬದುಕಿನಲ್ಲಿ ದುಃಖದ ಛಾಯೆ ಆವರಿಸಿದೆ. ಅವರ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದು, ತಾಯಿಯ ಅಗಲಿಕೆಯಿಂದ ಕಂಗಾಲಾಗಿರುವ ಗುರುಕಿರಣ್ ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಜೀವನದ ಪ್ರತಿಯೊಂದು ಸಾಧನೆಯ ಹಿಂದೆಯೂ ತಾಯಿಯೇ ಇದ್ದರು ಎಂದು ಹೇಳುವ ಮೂಲಕ ಗುರುಕಿರಣ್ ಮಾತೃವಂದನೆ ಸಲ್ಲಿಸಿದ್ದಾರೆ.

‘ನನ್ನ ಪ್ರೀತಿಯ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ ಎಂಬ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಜೀವನದಲ್ಲಿ ಏನೇ ಆಗಿದ್ದರೂ, ಏನೇ ಸಾಧಿಸಿದ್ದರೂ ಅದಕ್ಕೆಲ್ಲಾ ನನ್ನ ತಾಯಿಯೇ ಕಾರಣ’ ಎಂದು ಗುರುಕಿರಣ್ ಬರೆದುಕೊಂಡಿದ್ದಾರೆ.

ಗುರುಕಿರಣ್ ಅವರ ಭಾವುಕ ಪೋಸ್ಟ್‌ಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಆತ್ಮೀಯರಿಂದ ಸಂತಾಪದ ಮಹಾಪೂರವೇ ಹರಿದುಬಂದಿದೆ. ತಾಯಿ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

90ರ ದಶಕದ ಅಂತ್ಯದಲ್ಲಿ ‘ಎ’ ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಗುರುಕಿರಣ್, ತಮ್ಮ ವಿಭಿನ್ನ ಸಂಗೀತದ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದರು. ‘ಉಪೇಂದ್ರ’, ‘ಅಪ್ಪು’, ‘ಆಪ್ತಮಿತ್ರ’, ‘ಜೋಗಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಿಗೆ ಸಂಗೀತ ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನ ಗಳಿಸಿದರು.

ಸಂಗೀತ ನಿರ್ದೇಶನದ ಜೊತೆಗೆ ಗಾಯಕ ಹಾಗೂ ನಟನಾಗಿಯೂ ಗುರುಕಿರಣ್ ಗುರುತಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ಪ್ರಶಸ್ತಿ ಹಾಗೂ ಹಲವು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಗೆದ್ದಿರುವ ಅವರ ಯಶಸ್ಸಿನ ಹಾದಿಯಲ್ಲಿ ತಾಯಿ ರತ್ನಕಾಂತಿ ಶೆಟ್ಟಿ ಅವರ ಪ್ರೋತ್ಸಾಹ ಪ್ರಮುಖ ಪಾತ್ರ ವಹಿಸಿತ್ತು.

ತಮ್ಮ ಸಾಧನೆಯ ಹಿಂದಿನ ದೊಡ್ಡ ಶಕ್ತಿಯಾಗಿದ್ದ ತಾಯಿಯನ್ನೇ ಕಳೆದುಕೊಂಡಿರುವ ಗುರುಕಿರಣ್‌ಗೆ ಇದೀಗ ಚಿತ್ರರಂಗದ ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಧೈರ್ಯ ತುಂಬುತ್ತಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ: ಸದನದಲ್ಲೇ ಉತ್ತರ ನೀಡುತ್ತೇವೆ ಎಂದ ಸಚಿವ ಸಂತೋಷ್ ಲಾಡ್

0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ವಿಪಕ್ಷಗಳು ವಿಧಾನಸಭೆಯಲ್ಲಿ ಚರ್ಚೆ ನಡೆಸಲಿ, ಸರ್ಕಾರ ಸೂಕ್ತ ಉತ್ತರ ನೀಡಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಹೋರಾಟಗಳು ನಡೆಯಬೇಕು. ಜೆಡಿಎಸ್ ಪಾದಯಾತ್ರೆ ನಡೆಸಲಿ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ಅವರ ಕಾಲದಲ್ಲೇ ಆರಂಭವಾಗಿತ್ತು ಎಂದು ಆರೋಪಿಸಿದ ಸಚಿವರು, ಈ ಕುರಿತ ಸಂಪೂರ್ಣ ವಿಚಾರ ಸದನದಲ್ಲಿ ಚರ್ಚೆಯಾಗಲಿ ಎಂದರು.

ವಿಪಕ್ಷಗಳು ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಲಿ. ಸರ್ಕಾರ ಕೂಡ ಸದನದಲ್ಲಿ ಎಲ್ಲವನ್ನೂ ತೆರೆದಿಡುವ ಕೆಲಸ ಮಾಡಲಿದೆ. ವಿಪಕ್ಷಗಳು ಪ್ರಶ್ನೆಗಳನ್ನು ಕೇಳಲಿ, ಅದಕ್ಕೆ ಸರ್ಕಾರ ಸದನದಲ್ಲೇ ಉತ್ತರ ನೀಡಲಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ನಿಯಮಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಧಾರವಾಡ ಜಿಲ್ಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.96ರಷ್ಟು ಬಿತ್ತನೆಯಾಗಿದ್ದರೂ ನಿರೀಕ್ಷಿತ ಫಸಲು ಸಿಗುತ್ತಿಲ್ಲ. ಕೆಲವು ಪ್ರದೇಶಗಳಲ್ಲಿ ಮಳೆಯಾಗಿಲ್ಲ, ಇನ್ನೂ ಕೆಲವು ಕಡೆ ಮಳೆಯಾಗಿದೆ. ಮೇಲ್ನೋಟಕ್ಕೆ ಹೊಲಗಳಲ್ಲಿ ಹಸಿರು ಕಾಣಿಸುತ್ತಿದ್ದರೂ ವಾಸ್ತವವಾಗಿ ಬೆಳೆ ಇಲ್ಲದ ಪರಿಸ್ಥಿತಿ ಇದೆ. ಇದನ್ನು ‘ಹಸಿರು ಬರ’ ಎಂದು ಘೋಷಿಸಬಹುದಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ಹೇಳಿದರು.

ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಅದರಂತೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಾಗಿದೆ. ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದರು.

ರಾಜ್ಯದಲ್ಲಿ ಬರ ಘೋಷಣೆ ಮಾಡಲು ನಿರ್ದಿಷ್ಟ ನಿಯಮಗಳಿವೆ. ಈ ನಿಯಮಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬಂದು ಪರಿಸ್ಥಿತಿಯನ್ನು ಅಧ್ಯಯನ ಮಾಡಬೇಕು. ಬರ ಪರಿಹಾರಕ್ಕೆ ಸಂಬಂಧಿಸಿದಂತೆ NDRF ನಿಯಮಗಳಲ್ಲಿ ಬದಲಾವಣೆ ಅಗತ್ಯವಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ನೀಡಬೇಕಾದ ಅನುದಾನ ಹಾಗೂ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ. ಬರ ಘೋಷಣೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಯನ್ನು ಸರ್ಕಾರ ನಿಯಮಾನುಸಾರ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

0

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ 8 ಮಂದಿ ವಿದೇಶಿಯರು ಹಾಗೂ 21 ಮಂದಿ ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಹತ್ತು ದಿನಗಳಿಂದ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿ ನಗರದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತು ದಂಧೆಕೋರರ ಜಾಲವನ್ನು ಭೇದಿಸಿದ್ದಾರೆ.

ಅಮೃತಹಳ್ಳಿ, ಗಿರಿನಗರ, ಕೆಐಎ ವಿಮಾನ ನಿಲ್ದಾಣ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಮಾದಕ ವಸ್ತುಗಳ ವಿವರ ಹೀಗಿದೆ:

  • MDMA: 21 ಕೆಜಿ 641 ಗ್ರಾಂ
  • ಗಾಂಜಾ: 184 ಕೆಜಿ 625 ಗ್ರಾಂ
  • ಹೈಡ್ರೋ ಗಾಂಜಾ: 4 ಕೆಜಿ 493 ಗ್ರಾಂ
  • ಅಫೀಮು: 1 ಕೆಜಿ 65 ಗ್ರಾಂ
  • ಕೊಕೇನ್: 738 ಗ್ರಾಂ
  • ಮಾರ್ಫಿನ್: 25 ಗ್ರಾಂ

ಇವುಗಳ ಒಟ್ಟು ಮೌಲ್ಯ ಸುಮಾರು 55.8 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ ಆರೋಪಿಗಳಿಂದ 17 ಲಕ್ಷ ರೂಪಾಯಿ ನಗದು, 22 ಮೊಬೈಲ್ ಫೋನ್‌ಗಳು ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೆಹಲಿಯಲ್ಲೇ MDMA ತಯಾರಿಸಿ ಬೆಂಗಳೂರಿಗೆ ಪೂರೈಕೆ

ಈ ಸಂಪೂರ್ಣ ಕಾರ್ಯಾಚರಣೆಯಲ್ಲಿ ಅಮೃತಹಳ್ಳಿ ಪೊಲೀಸರು ಭಾರಿ ಪ್ರಮಾಣದ ಮಾದಕ ವಸ್ತು ಜಾಲವೊಂದನ್ನು ಭೇದಿಸಿದ್ದಾರೆ. ಬರೋಬ್ಬರಿ 28.8 ಕೋಟಿ ರೂಪಾಯಿ ಮೌಲ್ಯದ MDMA ವಶಪಡಿಸಿಕೊಂಡಿರುವ ಪೊಲೀಸರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬ ಇಬ್ಬರನ್ನು ದೆಹಲಿಯಲ್ಲೇ ಬಂಧಿಸಿದ್ದಾರೆ.

ತನಿಖೆಯ ವೇಳೆ ಆರೋಪಿಗಳು ದೆಹಲಿಯಲ್ಲೇ MDMA ತಯಾರಿಸಿ, ಬಳಿಕ ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಉದ್ದೇಶದಿಂದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಮಾದಕ ವಸ್ತುಗಳ ಮಾರಾಟ ಮತ್ತು ಪೂರೈಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್ʼನಲ್ಲಿ 105 ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆ

0

ಬೆಂಗಳೂರು: ಅಕ್ರಮ ವಲಸಿಗರ ಪತ್ತೆ ಹಾಗೂ ಪರಿಶೀಲನೆಗಾಗಿ ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯಡಿ 105 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಮೂರು ವಿಭಾಗಗಳಲ್ಲಿ ಅಕ್ರಮ ವಲಸಿಗರ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಒಟ್ಟು 2,944 ಮಂದಿಯ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 105 ಮಂದಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ ಒಟ್ಟು 1,909 ಮಂದಿಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ 43 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ.

ಇನ್ನು ವೈಟ್‌ಫೀಲ್ಡ್ ವಿಭಾಗದಲ್ಲಿ 1,035 ಮಂದಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, 62 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆಯಾದ ಒಟ್ಟು 105 ಮಂದಿಯ ಮಾಹಿತಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ನೀಡಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಾಗಿ ಅವರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ರಮ ವಲಸಿಗರ ಪತ್ತೆ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿಯಲಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

JPSC-JSSC ಪರೀಕ್ಷಾರ್ಥಿಗಳ ವಿಧಾನಸಭೆ ಮುತ್ತಿಗೆ: ರಾಂಚಿಯಲ್ಲಿ ಉದ್ವಿಗ್ನ ಪರಿಸ್ಥಿತಿ, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್–ಜಲಫಿರಂಗಿ

0

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಧಾನಸಭೆಯತ್ತ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಗೆ ಸಿಲುಕಿದೆ ಎಂದು ಆರೋಪಿಸಿರುವ ಪರೀಕ್ಷಾರ್ಥಿಗಳು, ನೇಮಕಾತಿ ಪ್ರಕ್ರಿಯೆಯಲ್ಲಿ ತಕ್ಷಣವೇ ಪಾರದರ್ಶಕ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳು ವಿಧಾನಸಭೆ ಮುತ್ತಿಗೆಗೆ ಕರೆ ನೀಡಿದ್ದರು.

ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರತ್ತ ಚಪ್ಪಲಿ ಹಾಗೂ ಖಾಲಿ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರತ್ತ ನೀರು ಹಾಯಿಸಿದ್ದಾರೆ. ಆದರೆ, ಕೆಲ ವಿದ್ಯಾರ್ಥಿಗಳು ಸ್ಥಳದಿಂದ ತೆರಳದೆ ಜಲಫಿರಂಗಿಗೆ ಎದುರಾಗಿ ನಿಂತು ಪ್ರತಿಭಟನೆ ಮುಂದುವರಿಸಿದ್ದಾರೆ. ಕೆಲವರು ನೀರಿನ ಸಿಂಚನದ ನಡುವೆಯೇ ಕುಣಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೋ ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಪೊಲೀಸರು ತಡೆದರೆ ಅವರೊಂದಿಗೆ ಜಗಳವಾಡಬೇಡಿ. ಶಿಸ್ತುಬದ್ಧವಾಗಿ ಬೇರೆ ಮಾರ್ಗಗಳ ಮೂಲಕ ವಿಧಾನಸಭೆ ತಲುಪಲು ಪ್ರಯತ್ನಿಸಿ ಎಂದು ಅವರು ಕರೆ ನೀಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಬೆಳಗ್ಗೆಯೇ ರೈಲು, ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ರಾಂಚಿಗೆ ಆಗಮಿಸಿದ್ದರು. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಆಡಳಿತವು ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಾಂಚಿಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿತ್ತು.

ಇದೇ ವೇಳೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ರಾಂಚಿಗೆ ಆಗಮಿಸುವುದನ್ನು ತಡೆಯಲು ಜಿಲ್ಲೆಯ ಗಡಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರು ತೀವ್ರ ವಾಹನ ತಪಾಸಣೆ ನಡೆಸಿದ್ದರು.

JPSC ಮತ್ತು JSSC ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ನಡೆದಿರುವ ಈ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಂಚಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ಆಚರಣೆಗೆ GBA ಕರೆ: POP ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ

0

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಜಿಬಿಎ ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಪರಿಸರ ಸ್ನೇಹಿ ರೀತಿಯಲ್ಲಿ ಗಣೇಶೋತ್ಸವ ಆಚರಿಸುವಂತೆ ಸಾರ್ವಜನಿಕರು ಹಾಗೂ ಗಣೇಶೋತ್ಸವ ಮಂಡಳಿಗಳಿಗೆ ಇಲಾಖೆ ಕರೆ ನೀಡಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದೆ.

ಜಿಬಿಎ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳು, ಭಾರ ಲೋಹಗಳನ್ನು ಒಳಗೊಂಡಿರುವ ರಾಸಾಯನಿಕ ಬಣ್ಣ ಬಳಸಿ ತಯಾರಿಸಿದ ಮೂರ್ತಿಗಳು ಹಾಗೂ ಜೈವಿಕವಾಗಿ ವಿಘಟನೆಯಾಗದ ಕೃತಕ ವಸ್ತುಗಳಿಂದ ನಿರ್ಮಿಸಿದ ಮೂರ್ತಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ. ಅಲ್ಲದೆ, ಇಂತಹ ಮೂರ್ತಿಗಳನ್ನು ನಗರದ ಕೆರೆ, ಬಾವಿ ಸೇರಿದಂತೆ ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವುದಕ್ಕೂ ಸಂಪೂರ್ಣ ನಿಷೇಧವಿದೆ ಎಂದು ಇಲಾಖೆ ತಿಳಿಸಿದೆ.

ಜಲಮಾಲಿನ್ಯ ತಡೆಗೆ ಕ್ರಮ

ಪ್ರತಿ ವರ್ಷ ಗಣೇಶ ಚತುರ್ಥಿ ಸಂದರ್ಭದಲ್ಲಿ ರಾಸಾಯನಿಕ ಬಣ್ಣ ಹಾಗೂ ಪಿಒಪಿಯಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ.

ರಾಸಾಯನಿಕ ಬಣ್ಣಗಳಿಂದ ಕೂಡಿದ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳ ನೀರು ಹಾಗೂ ಸುತ್ತಮುತ್ತಲಿನ ಮಣ್ಣು ಕಲುಷಿತಗೊಳ್ಳುತ್ತದೆ. ಇದರಿಂದ ಪರಿಸರ ವ್ಯವಸ್ಥೆ ಮಾತ್ರವಲ್ಲದೆ ಜಲಚರಗಳ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ರಾಸಾಯನಿಕ ಬಣ್ಣದ ಮೂರ್ತಿಗಳನ್ನು ನೀರಿಗೆ ವಿಸರ್ಜಿಸುವುದರಿಂದ ನೀರು ಮತ್ತು ಭೂಮಿ ಎರಡೂ ಕಲುಷಿತಗೊಳ್ಳುತ್ತಿವೆ. ಇದರಿಂದ ಜಲಚರಗಳು ಹಾಗೂ ಒಟ್ಟಾರೆ ಪರಿಸರ ವ್ಯವಸ್ಥೆಗೆ ಹಾನಿಯಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸರ್ಗಿಕ ಮಣ್ಣಿನ ಗಣಪತಿ ಬಳಕೆಗೆ ಸೂಚನೆ

ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಅರಿತು ಸಾರ್ವಜನಿಕರು ಹಾಗೂ ಗಣೇಶೋತ್ಸವ ಮಂಡಳಿಗಳು ನೈಸರ್ಗಿಕ ಜೇಡಿಮಣ್ಣು ಮತ್ತು ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು ಎಂದು ಜಿಬಿಎ ಅಧಿಕಾರಿಗಳು ಸೂಚಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಮೂರ್ತಿಗಳ ಬಳಕೆಯಿಂದ ದೂರವಿದ್ದು, ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವಂತೆ ಇಲಾಖೆ ಮನವಿ ಮಾಡಿದೆ.

ನಿಯಮಗಳನ್ನು ಉಲ್ಲಂಘಿಸಿ ಪಿಒಪಿ ಅಥವಾ ನಿಷೇಧಿತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಅಥವಾ ವಿಸರ್ಜನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬಿಡದಿ ಟೌನ್ ಶಿಪ್ʼಗೆ ಕುಮಾರಸ್ವಾಮಿಯವರೇ ಪಿತಾಮಹ; ಈಗ ಅವರೇ ವಿರೋಧಿಸುತ್ತಿದ್ದಾರೆ: ಸಚಿವ ಎಂ.ಬಿ. ಪಾಟೀಲ್

0

ವಿಜಯಪುರ: ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಸಚಿವ ಎಂ.ಬಿ. ಪಾಟೀಲ್ ಟೀಕಿಸಿದ್ದಾರೆ. ಈ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ನಡೆಯುತ್ತಿದ್ದು, ಇದೆಲ್ಲವೂ ನಾಟಕ ಎಂದು ಅವರು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಡದಿ ಟೌನ್‌ಶಿಪ್‌ ಯೋಜನೆಗೆ ಜನ್ಮ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಈ ಯೋಜನೆಯ ಪಿತಾಮಹ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್‌ ಎಚ್.ಡಿ. ಕುಮಾರಸ್ವಾಮಿ ಅವರ ಕನಸಿನ ಕೂಸು. ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಈ ಯೋಜನೆಗೆ ಚಾಲನೆ ನೀಡಿದ್ದರು. ಹೀಗಾಗಿ ಯೋಜನೆಯ ಪಿತಾಮಹ ಅವರೇ ಆಗಿದ್ದಾರೆ. ಆದರೆ, ಇದೀಗ ಅವರೇ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವರು ಟೀಕಿಸಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಬಿಡದಿ ಟೌನ್‌ಶಿಪ್‌ ವಿಚಾರವಾಗಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯಕ್ಕಾಗಿ ನಡೆಯುತ್ತಿದೆ. ಜನರ ಹಿತದೃಷ್ಟಿಗಿಂತ ರಾಜಕೀಯ ಉದ್ದೇಶವೇ ಇದರಲ್ಲಿ ಹೆಚ್ಚಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಇದೇ ವೇಳೆ, ಸಚಿವ ನಾಗೇಂದ್ರ ಅವರು ನ್ಯಾಯಾಲಯದ ನಿಯಮ ಉಲ್ಲಂಘಿಸಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಈ ವಿಚಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಇಲ್ಲದೆ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಹೀಗಾಗಿ ಸಂಬಂಧಿತ ಮಾಹಿತಿ ಪಡೆದುಕೊಂಡ ಬಳಿಕ ಈ ಕುರಿತು ಪ್ರತಿಕ್ರಿಯಿಸುವುದಾಗಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನ್ನನ್ನೇ ಹೊಣೆ ಮಾಡ್ತೀರಾ?; ‘ತೀರ್ಮಾನ ಹೈಕಮಾಂಡ್‌ದ್ದು, ನನ್ನದಲ್ಲ’: ಎಂ.ಬಿ. ಪಾಟೀಲ್‌ ಗರಂ

0

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಲಾಬಿ, ಅಸಮಾಧಾನ ಹಾಗೂ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ವಿಜಯಪುರ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲ್‌ ಕಾರಣ ಎಂಬ ಆರೋಪದ ಬೆನ್ನಲ್ಲೇ ಪಾಟೀಲ್‌ ನೇರವಾಗಿ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬ ಅಂತಿಮ ತೀರ್ಮಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ಗೆ ಸೇರಿದ್ದು ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಬೇಕೆಂದು ತಾನೇ ಪಕ್ಷದ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾಗಿ ತಿಳಿಸಿರುವ ಪಾಟೀಲ್‌, ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ ಹಾಗೂ ರಾಹುಲ್‌ ಗಾಂಧಿ ಅವರು ಈ ಕುರಿತು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಶಾಸಕ ಸಿ.ಎಸ್‌. ನಾಡಗೌಡ ಮತ್ತು ಯಶವಂತರಾಯಗೌಡ ಪಾಟೀಲ್‌ ಅವರಿಗೆ ಸಚಿವ ಸ್ಥಾನ ತಪ್ಪಲು ತಾನೇ ಕಾರಣ ಎಂಬ ಆರೋಪಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಅವರು, ‘ಮತ್ತೊಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದೇ ನಾನು. ಆದರೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಸಚಿವ ಸ್ಥಾನ ತಪ್ಪಿಸಿದ್ದು ನಾನು ಎನ್ನುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಯಾಕೆ ಸಿಗಲಿಲ್ಲ ಎಂಬುದಕ್ಕೆ ತಮ್ಮನ್ನು ಹೊಣೆ ಮಾಡುವುದು ಸರಿಯಲ್ಲ ಎಂದಿರುವ ಅವರು, ಈ ಬಗ್ಗೆ ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು, ಸುರ್ಜೆವಾಲಾ ಹಾಗೂ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಬೇಕು ಎಂದು ಹೇಳಿದ್ದಾರೆ.

ಇನ್ನು ತಮ್ಮ ವಿರುದ್ಧ ಇಬ್ಬರು ಶಾಸಕರು ಮಾಡಿರುವ ಆರೋಪಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂಬ ವಿಚಾರಕ್ಕೂ ಪಾಟೀಲ್‌ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಬಸವಣ್ಣನವರಿಗೆ ಬಿಟ್ಟಿಲ್ಲ ಇನ್ನೂ ಎಂ.ಬಿ. ಪಾಟೀಲ್‌ ಯಾವ ಲೆಕ್ಕ?’ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿರುವ ಸಚಿವರು, ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.