Home Blog

‘ವೀರಗಾಸೆ ಎಂದರೆ ಮಹದೇವಪ್ಪ’: ಮೇರು ಕಲಾವಿದನ ಅಗಲಿಕೆಗೆ ಚೆಲುವರಾಯಸ್ವಾಮಿ ಕಂಬನಿ

0

ಮಂಡ್ಯ: ವೀರಗಾಸೆ ಕಲೆಗೆ ಜೀವ ತುಂಬಿದ ಹಿರಿಯ ಜಾನಪದ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹದೇವಪ್ಪ ಅವರ ನಿಧನಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಹಳ್ಳಿಯಿಂದ ಹೊರಹೊಮ್ಮಿ ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಮಂಡ್ಯದ ಹೆಸರನ್ನು ಪಸರಿಸಿದ್ದ ಮಹದೇವಪ್ಪ, ವೀರಗಾಸೆ ಕಲೆಯ ಜೀವಂತ ಪ್ರತೀಕವಾಗಿದ್ದರು. “ವೀರಗಾಸೆ ಎಂದರೆ ಮಹದೇವಪ್ಪ, ಮಹದೇವಪ್ಪ ಎಂದರೆ ವೀರಗಾಸೆ” ಎಂಬ ಮಟ್ಟಿಗೆ ಅವರು ಜನಮನದಲ್ಲಿ ಸ್ಥಾನ ಪಡೆದಿದ್ದರು ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಅತ್ಯಂತ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಮಹದೇವಪ್ಪ, ನೂರಾರು ಶಿಷ್ಯರನ್ನು ರೂಪಿಸಿ ಜಾನಪದ ಕಲೆಯ ಉಳಿವಿಗೆ ಶ್ರಮಿಸಿದ್ದರು. ಮೈಸೂರು ದಸರಾ, ಹಂಪಿ ಉತ್ಸವ ಸೇರಿದಂತೆ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಅವರ ಕಲಾಪ್ರದರ್ಶನ ರಾಜ್ಯದ ಹೆಮ್ಮೆ ಹೆಚ್ಚಿಸಿತ್ತು.

ಇಂತಹ ಮೇರು ಕಲಾವಿದರ ಕುಟುಂಬಕ್ಕೆ ಸರ್ಕಾರ ಅಗತ್ಯ ನೆರವು ನೀಡಬೇಕು. ಅವರ ಹೆಸರಿನಲ್ಲಿ ಜಾನಪದ ಪ್ರಶಸ್ತಿ ಸ್ಥಾಪಿಸಿ, ಮುಂದಿನ ಪೀಳಿಗೆಗೆ ಅವರ ಸಾಧನೆಯನ್ನು ಪರಿಚಯಿಸುವ ಕೆಲಸವಾಗಬೇಕು ಎಂದು ಚೆಲುವರಾಯಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಹದೇವಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ, ಶಿಷ್ಯರು ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಮೋದಿ ಐತಿಹಾಸಿಕ ಸಾಧನೆಗೆ ಸ್ಯಾಂಡಲ್‌ವುಡ್ ಸಲಾಂ: ಸುದೀಪ್-ರಿಷಬ್ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್ ತಾರೆಯರು ಅಭಿನಂದನೆ ಸಲ್ಲಿಸಿದ್ದಾರೆ.

ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಹಿಂದಿಕ್ಕಿರುವ ಮೋದಿಯವರ ಸಾಧನೆಗೆ ನಟ ಕಿಚ್ಚ ಸುದೀಪ್ ಹಾಗೂ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಿಚ್ಚ ಸುದೀಪ್ ತಮ್ಮ ಸಂದೇಶದಲ್ಲಿ, “12 ವರ್ಷಗಳ ಕಾಲ ನಿರಂತರ ಸಮರ್ಪಣೆ ಮತ್ತು ಶ್ರಮದೊಂದಿಗೆ ದೇಶವನ್ನು ಮುನ್ನಡೆಸಿರುವುದು ಹೆಮ್ಮೆಯ ಸಂಗತಿ. ನಿಮ್ಮ ಮುಂದಿನ ಪಯಣವೂ ಯಶಸ್ವಿಯಾಗಲಿ” ಎಂದು ಹಾರೈಸಿದ್ದಾರೆ.

ರಿಷಬ್ ಶೆಟ್ಟಿ ಕೂಡ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡು, “ಐತಿಹಾಸಿಕ ನಾಯಕನಿಗೆ ಮತ್ತೊಂದು ಮಹತ್ವದ ಮೈಲಿಗಲ್ಲು. ವಿಕಸಿತ ಭಾರತದ ಕನಸನ್ನು ನನಸಾಗಿಸುವ ನಿಮ್ಮ ನಾಯಕತ್ವ ಇನ್ನಷ್ಟು ಎತ್ತರಕ್ಕೆ ತಲುಪಲಿ” ಎಂದು ಶುಭ ಕೋರಿದ್ದಾರೆ.

ಪ್ರಧಾನಿ ಮೋದಿ ಅವರ ಈ ಸಾಧನೆಗೆ ರಾಜಕೀಯ, ಸಿನಿಮಾ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ಮಡಿಕೇರಿಯಲ್ಲಿ ಭೀಕರ ಅವಘಡ: ರಸ್ತೆ ಬಿಟ್ಟು 40 ಅಡಿ ಕಂದಕಕ್ಕೆ ಉರುಳಿದ ಕಾರು

0

ಮಡಿಕೇರಿ: ಮಡಿಕೇರಿ–ಮೂರ್ನಾಡು ರಸ್ತೆಯಲ್ಲಿ ನಡೆದ ಸಿನಿಮೀಯ ಶೈಲಿಯ ಅಪಘಾತದಲ್ಲಿ ಕಾರೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ ಚಾಲಕ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಮೂರ್ನಾಡು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಅಪಘಾತದ ರಭಸಕ್ಕೆ ವಾಹನಕ್ಕೆ ಭಾರೀ ಹಾನಿಯಾಗಿದೆ.

ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ! ಗ್ಯಾಸ್ ಸಿಲಿಂಡರ್ ಲಾರಿ ಡಿಕ್ಕಿ- ಬೈಕ್‌ನಲ್ಲಿದ್ದ ದಂಪತಿ ಸಾವು

0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಗೊರಗುಂಟೆಪಾಳ್ಯ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಹಾಗೂ ಪುರುಷ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

ಹಣ ಕೊಟ್ಟರೆ ಪರೀಕ್ಷೆಯಲ್ಲಿ ಪಾಸ್: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು!

ಬಳ್ಳಾರಿ: ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆಯ ಆರೋಪದ ಬೆನ್ನಲ್ಲೇ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಹಣ ಪಡೆದು ಉತ್ತೀರ್ಣಗೊಳಿಸುವ ಅಕ್ರಮದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯನ್ನು ತೇರ್ಗಡೆಗೊಳಿಸಲು ಸುಮಾರು 6 ಸಾವಿರ ರೂಪಾಯಿ ವಸೂಲಿ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ರೀತಿಯಲ್ಲಿ ಹಣ ಪಾವತಿಸಿದ ಹಲವಾರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂಬ ಆರೋಪವೂ ವ್ಯಕ್ತವಾಗಿದೆ.

ಈ ಅಕ್ರಮ ಇತ್ತೀಚಿನದ್ದಲ್ಲ, ಹಲವು ವರ್ಷಗಳಿಂದ ಕೆಲ ಸಿಬ್ಬಂದಿ ಈ ರೀತಿಯ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯುಸಿಎಂಸಿ (UCMC) ವಿಭಾಗದ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ್ ಹಾಗೂ ಉಮೇಶ್ ವಿರುದ್ಧ ಆರೋಪಗಳು ಕೇಳಿಬಂದಿದ್ದು, ಲಭ್ಯವಾಗಿರುವ ಆಡಿಯೋ ಸಂಭಾಷಣೆಯೊಂದರಲ್ಲಿ ವಿದ್ಯಾರ್ಥಿಗಳ ಬಳಿ ಹಣದ ಬೇಡಿಕೆ ಇಟ್ಟಿರುವುದು ಕೇಳಿಬಂದಿದೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹಲವು ವರ್ಷಗಳಿಂದ ಈ ಅಕ್ರಮ ನಡೆಯುತ್ತಿದ್ದು, ವಿಶೇಷವಾಗಿ ಬಡ ಹಾಗೂ ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಅಲ್ಲದೆ, ಈ ದಂಧೆಯಲ್ಲಿ ವಿಶ್ವವಿದ್ಯಾಲಯದ ಕೆಲ ಪ್ರಮುಖ ಅಧಿಕಾರಿಗಳೂ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಎಬಿವಿಪಿ, ಪ್ರಕರಣದ ಕುರಿತು ಉನ್ನತ ಮಟ್ಟದ ಮತ್ತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.

ಸದ್ಯ ಈ ಆರೋಪಗಳು ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸುತ್ತಿವೆ.

ಎಥೆನಾಲ್ ಮಿಶ್ರಿತ ಪೆಟ್ರೋಲ್ʼಗೆ ಅಬಕಾರಿ ಸುಂಕ ವಿನಾಯಿತಿ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಂತಹ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ವಿನಾಯಿತಿ ನೀಡಿದೆ.

ಇ22 (22 ಶೇಕಡಾ ಎಥೆನಾಲ್ ಮತ್ತು 78 ಶೇಕಡಾ ಪೆಟ್ರೋಲ್), ಇ25, ಇ27 ಹಾಗೂ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಎಥೆನಾಲ್ ಮಿಶ್ರಿತ ಇಂಧನಗಳ ಬಳಕೆಯನ್ನು ದೇಶಾದ್ಯಂತ ಹೆಚ್ಚಿಸುವುದು ಹಾಗೂ ಪರಿಸರ ಸ್ನೇಹಿ ಇಂಧನಕ್ಕೆ ಉತ್ತೇಜನ ನೀಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯ ಪ್ರದೇಶದಲ್ಲಿನ ಉದ್ವಿಗ್ನತೆ ಮತ್ತು ಯುದ್ಧ ಪರಿಸ್ಥಿತಿಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದೆ. ಕಳೆದ ತಿಂಗಳಲ್ಲಿ 11 ದಿನಗಳ ಅಂತರದಲ್ಲಿ ಪೆಟ್ರೋಲ್ ದರವು 7.50 ರೂಪಾಯಿವರೆಗೆ ಹೆಚ್ಚಳವಾಗಿರುವುದು ವಾಹನ ಸವಾರರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ತಂದಿದೆ.

ಪ್ರಸ್ತುತ ಭಾರತ ತನ್ನ ಒಟ್ಟು ಕಚ್ಚಾ ತೈಲ ಅಗತ್ಯದ ಸುಮಾರು 87 ಶೇಕಡಾವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದರಿಂದ ವಿದೇಶಿ ವಿನಿಮಯ ವೆಚ್ಚ ಹೆಚ್ಚಾಗುವುದರ ಜೊತೆಗೆ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀಳುತ್ತಿದೆ.

ಜೇನು ತರಲು ಮಾವನೊಂದಿಗೆ ತೆರಳಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ! ಕೊಲೆ ಶಂಕೆ

ದಾವಣಗೆರೆ: ಜೇನು ಸಂಗ್ರಹಿಸಲು ಮಾವನೊಂದಿಗೆ ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಗ್ರಾಮದ ಶಶಿನಾಯ್ಕ್ ಅವರ ಪುತ್ರ ಆದಿತ್ಯ (7) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಆದಿತ್ಯ ತನ್ನ ಮಾವ ತಾವರೆನಾಯ್ಕ್ ಅವರೊಂದಿಗೆ ಜೇನು ತರಲು ತೆರಳಿದ್ದನು. ಆದರೆ ಸಂಜೆ ವೇಳೆಯಾದರೂ ಇಬ್ಬರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಜಗಳೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಗುರುವಾರ ಬೆಳಗ್ಗೆ ಗ್ರಾಮದ ಸಮೀಪದ ಹಳ್ಳದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಬಾಲಕನ ಸಾವಿನ ಹಿಂದೆ ದುಷ್ಕೃತ್ಯವಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನೆಯ ಬಳಿಕ ಮಾವ ತಾವರೆನಾಯ್ಕ್ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಅನುಮಾನ ಮೂಡಿಸಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ಹಳ್ಳದಲ್ಲಿ ಎಸೆದು ಪರಾರಿಯಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ಸದ್ಯ ಬಾಲಕನ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ತಾವರೆನಾಯ್ಕ್ ಪತ್ತೆಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಟಿಎಂಸಿ ಗೆ ಮತ್ತೊಂದು ಆಘಾತ: ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ರಾಜೀನಾಮೆ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ರಾಜೀನಾಮೆಗಳ ಸರಣಿ ಮುಂದುವರಿದಿದ್ದು, ರಾಜ್ಯಸಭಾ ಸಂಸದ ಪ್ರಕಾಶ್ ಚಿಕ್ ಬರೈಕ್ ತಮ್ಮ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದೊಂದಿಗೆ ಟಿಎಂಸಿ ವಿಲೀನವಾಗುವ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈಗಾಗಲೇ ಸುಖೇಂದು ಶೇಖರ್ ರಾಯ್ ಹಾಗೂ ಸುಷ್ಮಿತಾ ದೇವ್ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಪ್ರಕಾಶ್ ಚಿಕ್ ಬರೈಕ್ ಮೂರನೇ ಸಂಸದರಾಗಿದ್ದಾರೆ.

ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಬೆಳಗ್ಗೆ 11 ಗಂಟೆಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ತಮ್ಮ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ವೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ರಾಜೀನಾಮೆ ಪತ್ರದಲ್ಲಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಸಹಕಾರ ನೀಡಿದ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭಾ ಸಚಿವಾಲಯದ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಉಲ್ಲೇಖಿಸಿದ್ದಾರೆ.

ರಾಜೀನಾಮೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬರೈಕ್, ಪಶ್ಚಿಮ ಬಂಗಾಳದ ಜನರ ಅಭಿಪ್ರಾಯ ಮತ್ತು ಭಾವನೆಗಳಿಗೆ ಗೌರವ ನೀಡಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ತಮಿಳುನಾಡಿಗೆ ಜೂನ್ʼನಲ್ಲಿ 9.19 ಟಿಎಂಸಿ ನೀರು ಬಿಡುಗಡೆ: 81 ಅಡಿಗೆ ಇಳಿದ KRS ಜಲಮಟ್ಟ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗದ ಹಿನ್ನೆಲೆ, ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ 81 ಅಡಿಗೆ ಇಳಿದಿದ್ದು, ಜಲಾಶಯ ಬಹುತೇಕ ಖಾಲಿಯಾಗುವ ಹಂತ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 108 ಅಡಿ ನೀರು ಸಂಗ್ರಹವಾಗಿದ್ದರೆ, ಈ ಬಾರಿ ಮಳೆಯ ಅಭಾವದಿಂದ ನೀರಿನ ಮಟ್ಟದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಜಲಾಶಯದಲ್ಲಿ ಸದ್ಯ 11.399 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಇದರಲ್ಲಿ ಸುಮಾರು 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವುದರಿಂದ, ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 6 ಟಿಎಂಸಿ ಮಾತ್ರವಾಗಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಜಲಾಶಯದ ನೀರಿನ ಮಟ್ಟ 80 ಅಡಿ ಸಮೀಪಕ್ಕೆ ತಲುಪಿರುವುದು ಆತಂಕ ಹೆಚ್ಚಿಸಿದೆ.

ಕೆಆರ್‌ಎಸ್ ಜಲಾಶಯದ ನೀರು ಬೆಂಗಳೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿದೆ. ಹೀಗಾಗಿ ಮುಂಗಾರು ಮಳೆ ಶೀಘ್ರ ಚುರುಕುಗೊಳ್ಳದಿದ್ದರೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದೆಡೆ, ಕಾವೇರಿ ನೀರು ಹಂಚಿಕೆ ನಿಯಮಾವಳಿಗಳ ಪ್ರಕಾರ ಜೂನ್ ತಿಂಗಳಲ್ಲಿ ಕರ್ನಾಟಕವು ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಹರಿಸಬೇಕಿದೆ. ಆದರೆ ಜಲಾಶಯದಲ್ಲಿರುವ ಬಳಕೆಯೋಗ್ಯ ನೀರಿನ ಪ್ರಮಾಣವೇ ಕೇವಲ 6 ಟಿಎಂಸಿ ಆಗಿರುವುದು ಹೊಸ ಸವಾಲು ಸೃಷ್ಟಿಸಿದೆ.

ದೆಹಲಿ ಪ್ರವಾಸದ ವೇಳೆ ತಿಪಟೂರು ಶಾಸಕ ಷಡಕ್ಷರಿ ಅಸ್ವಸ್ಥ; ಖಾಸಗಿ ಆಸ್ಪತ್ರೆಗೆ ದಾಖಲು

0

ನವದೆಹಲಿ: ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರು ದೆಹಲಿಯಲ್ಲಿ ಅಸ್ವಸ್ಥಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಸಕ ಷಡಕ್ಷರಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ದಿಢೀರ್ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಸಂದರ್ಭ ಅಲ್ಲಿಯೇ ಇದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಕ್ಷಣ ನೆರವಿಗೆ ಧಾವಿಸಿ, ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪ್ರಸ್ತುತ ಷಡಕ್ಷರಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಷಡಕ್ಷರಿ ಅವರು ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ತೆರಳಿದ್ದರು. ಈ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!