Home Blog

38 ವರ್ಷ ದೇಶಸೇವೆ ಸಲ್ಲಿಸಿದ ಯೋಧನಿಗೆ ಅಭೂತಪೂರ್ವ ಸ್ವಾಗತ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಭದ್ರತಾ ಪಡೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಸಬ್ ಇನ್‌ಸ್ಪೆಕ್ಟರ್ ರಾಚಪ್ಪ ಮಸಗಿ ಅವರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಭವ್ಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ರೋಣ ತಾಲೂಕಿನ ನಾಗರಾಳ ಮೂಲದ ಹಾಗೂ ನರಸಾಪುರ ನಿವಾಸಿಯಾಗಿರುವ ರಾಚಪ್ಪ ಮಸಗಿ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಾಪಸ್ಸಾದ ಹಿನ್ನೆಲೆಯಲ್ಲಿ, ಗದಗ ರೈಲ್ವೆ ನಿಲ್ದಾಣದಲ್ಲಿ ಮಾಜಿ ಸೈನಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ ನೇತೃತ್ವದಲ್ಲಿ ಹೂವಿನ ಸುರಿಮಳೆಗೈದು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬಳಿಕ ರೈಲ್ವೆ ನಿಲ್ದಾಣದಿಂದ ಹೆಲ್ತ್ ಕ್ಯಾಂಪ್, ಬೆಟಗೇರಿ ಮಾರ್ಗವಾಗಿ ನರಸಾಪುರದವರೆಗೆ ದೇಶಭಕ್ತಿ ಗೀತೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ಸಮಾರಂಭದಲ್ಲಿ ರಾಚಪ್ಪ ಮಸಗಿ ಅವರ ಕುಟುಂಬದವರು ಮಾಜಿ ಸೈನಿಕರು ಹಾಗೂ ವೀರನಾರಿಯರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ದೇಶದ ಗಡಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶವನ್ನು ಕಾಪಾಡುವ ಸೈನಿಕರ ಸೇವೆ ಅತ್ಯಂತ ಶ್ರೇಷ್ಠವಾಗಿದೆ. ಇಂದು ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಭಾರತೀಯ ಸೈನಿಕರ ತ್ಯಾಗವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು, ವೀರನಾರಿಯರು, ಅರೆಸೇನಾ ಪಡೆಗಳ ಯೋಧರು ಹಾಗೂ ನಾಗರಾಳ ಮತ್ತು ನರಸಾಪುರ ಗ್ರಾಮದ ಗಣ್ಯರು, ಸಾರ್ವಜನಿಕರು ಮತ್ತು ದೇಶಪ್ರೇಮಿಗಳು ಉಪಸ್ಥಿತರಿದ್ದರು.

ಜೀತ ಪದ್ಧತಿ-ಮಾನವ ಕಳ್ಳಸಾಗಾಣಿಕೆಗೆ ಕಡಿವಾಣ ಅಗತ್ಯ: ಸಿ.ಎಸ್. ಶಿವನಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: “ಶಾಲೆಯಿಂದ ಹೊರಗುಳಿಯುವ ಮಕ್ಕಳು ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿಯ ಮೊದಲ ಬಲಿಗಳಾಗುತ್ತಿದ್ದಾರೆ. ಪ್ರತಿಯೊಬ್ಬ ಮಗುವಿಗೂ ಶಿಕ್ಷಣದ ಹಕ್ಕು ತಲುಪಿದರೆ ಈ ಸಾಮಾಜಿಕ ಪಿಡುಗನ್ನು ಆರಂಭದಲ್ಲೇ ತಡೆಗಟ್ಟಬಹುದು” ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉದಯೋನ್ಮುಖ ಸ್ವಯಂಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ಕಾರ್ಮಿಕ ವಿರೋಧಿ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರೊಂದಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಮಾನವ ಕಳ್ಳಸಾಗಾಣಿಕೆ ಮತ್ತು ಜೀತ ಪದ್ಧತಿ ಸಮಾಜದ ಘೋರ ಪಿಡುಗುಗಳಾಗಿದ್ದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಕೆಲಸಕ್ಕೆ ತಕ್ಕ ವೇತನ ನೀಡದೆ ದುಡಿಸಿಕೊಳ್ಳುವುದೂ ಜೀತ ಪದ್ಧತಿಯ ಒಂದು ರೂಪವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಸಮಾಜ ಜಾಗೃತವಾಗಬೇಕು ಎಂದು ಹೇಳಿದರು.

ಜೀತ ಪದ್ಧತಿಯಿಂದ ಮುಕ್ತಗೊಳಿಸುವುದಷ್ಟೇ ಸಾಕಾಗುವುದಿಲ್ಲ. ಸಂತ್ರಸ್ತರಿಗೆ ಬಿಡುಗಡೆ ಪತ್ರ, ಆರ್ಥಿಕ ನೆರವು, ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಪುನರ್ವಸತಿ ಕಲ್ಪಿಸಿದಾಗ ಮಾತ್ರ ಅವರಿಗೆ ನಿಜವಾದ ನ್ಯಾಯ ದೊರೆಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜೀತ ಪದ್ಧತಿ ನಡೆಸುವವರಷ್ಟೇ ಅಲ್ಲ, ಅದನ್ನು ಕಂಡೂ ಮೌನವಾಗಿರುವವರೂ ತಪ್ಪಿತಸ್ಥರಾಗುತ್ತಾರೆ. ಇಂತಹ ಪ್ರಕರಣಗಳು ಕಂಡುಬಂದ ತಕ್ಷಣ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಉದಯೋನ್ಮುಖ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ವೈ. ಪಕ್ಕಣ್ಣ ಬೆಲೇರಿ ಮಾತನಾಡಿ, ಜೀತ ಪದ್ಧತಿಯಿಂದ ಮುಕ್ತರಾದ ಸಂತ್ರಸ್ತರ ಅನುಭವಗಳನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಯಾರೂ ಅಜ್ಞಾನದಿಂದ ಊರು ಬಿಟ್ಟು ಹೋಗಿ ಇಂತಹ ಸಂಕಷ್ಟಗಳಿಗೆ ಸಿಲುಕಬಾರದು ಎಂಬ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದ್ದು, ಜಿ-ಸ್ಕ್ವಾಡ್ ತಂಡದಿಂದ ಕಿರು ನಾಟಕ ಪ್ರದರ್ಶನ ನಡೆಯಿತು. ಬಳಿಕ ಜಾಗೃತಿ ವಾಹನವು ಲಕ್ಕುಂಡಿ, ನಾಗರಾಳ, ಹಳಿಕೇರಿ, ಗದಗ ನಗರ ಸೇರಿದಂತೆ ವಿವಿಧೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ನೀಲಗುಂದ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೀಪ್ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

“ಶಾಲೆ ಬಿಟ್ಟ ಪ್ರತಿಯೊಂದು ಮಗುವನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿ ನಿರ್ಮೂಲನೆಯ ಮೊದಲ ಹೆಜ್ಜೆಯಾಗಿದೆ.”
– ಸಿ.ಎಸ್. ಶಿವನಗೌಡ್ರ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

‘ಹೂಗಾರ’ ಡಬ್ಬಿಂಗ್ ಪೂರ್ಣ; ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕೀರ್ತನ ಮೂವ್ಹಿ ಮೇಕರ್ಸ್ ಹಾಗೂ ಕೆಆರ್‌ಎಸ್ ಪ್ರೊಡಕ್ಷನ್, ಬೆಂಗಳೂರು ಬ್ಯಾನರ್ ಅಡಿಯಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಿರ್ಮಾಣವಾಗಿರುವ ‘ಹೂಗಾರ’ ಕನ್ನಡ ಚಲನಚಿತ್ರದ ಡಬ್ಬಿಂಗ್ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಗದಗ ನಗರದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಗೊಳ್ಳಲಿದೆ.

ಚಿತ್ರದ ಚಿತ್ರೀಕರಣವನ್ನು ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸಿದ್ದನಕೊಳ್ಳ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಸಲಾಗಿದೆ. ಉತ್ತರ ಕರ್ನಾಟಕದ ಭಾಷೆ, ಸಂಸ್ಕೃತಿ ಮತ್ತು ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಿರುವುದು ಚಿತ್ರದ ವಿಶೇಷವಾಗಿದೆ.

ಶ್ರೀಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ಮತ್ತೊಂದು ವಿಶೇಷ. “ಇದು ಕೇವಲ ಒಂದು ಕಂಬವಲ್ಲ; ಕರ್ನಾಟಕದ ಆತ್ಮ, ಶಕ್ತಿ, ಶಿಸ್ತು ಮತ್ತು ಸಾಧನೆಯ ಪ್ರತೀಕ” ಎಂದು ಚಿತ್ರದ ನಿರ್ದೇಶಕ ಲೋಕೇಶ್ ವಿದ್ಯಾಧರ ತಿಳಿಸಿದ್ದಾರೆ.

ಚಿತ್ರದಲ್ಲಿ ಲೋಕೇಶ್ ವಿದ್ಯಾಧರ, ಸುನಂದಾ ಕಲ್ಬುರ್ಗಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ದಾನಪ್ಪ, ಮಾಂತೇಶ್ ಹಳ್ಳೂರ, ತೇಜಸ್ ಶಿವರಾಜ್, ಕಿರಣ್ ಹೂಗಾರ, ಅಪೂರ್ವ, ಮುತ್ತುರಾಜ್ ಬುದ್ನಿ, ಕಿಟ್ಟಿ ತಾಳಿಕೋಟೆ, ಕುಮಾರ್ ಬಾಬು, ಸತೀಶ್ ಶೆಟ್ಟಿ, ಮಂಜುಳಾ ಅರಸ್, ಭಾವನಾ ಶಿಂಧೆ, ವಿದ್ಯಾ ಗಂಜಿಹಾಳ, ದಶರಥ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಮಲ್ಲಕಂಬ ಪ್ರದರ್ಶನವನ್ನು ಸಿದ್ಧಾರೂಢ ಹೂಗಾರ ಹಾಗೂ ಜೈ ಕರ್ನಾಟಕ ಮಲ್ಲಕಂಬ ತಂಡ ನಿರ್ವಹಿಸಿದ್ದು, ಸಂಭಾಷಣೆಯನ್ನು ಶಿವಂ ಬೆಂಗೇರಿ, ಸಾಹಿತ್ಯವನ್ನು ಲೋಕೇಶ್ ವಿದ್ಯಾಧರ, ಶಿವರಾಜ್ ಹಾಗೂ ಕಿನ್ನಾಳ ರಾಜ್ ರಚಿಸಿದ್ದಾರೆ. ಈ ಹಿಂದೆ ‘ಒಬ್ಬಟ್ಟು’ ಚಿತ್ರ ನಿರ್ದೇಶಿಸಿದ್ದ ಲೋಕೇಶ್ ವಿದ್ಯಾಧರ ಅವರೇ ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಚಿತ್ರಕ್ಕೆ ಕೀರ್ತನ ಮೂವ್ಹಿ ಮೇಕರ್ಸ್ ಹಾಗೂ ಕೆಆರ್‌ಎಸ್ ಪ್ರೊಡಕ್ಷನ್ ನಿರ್ಮಾಪಕರಾಗಿದ್ದು, ಟ್ರೇಲರ್ ಬಿಡುಗಡೆ ಬಳಿಕ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ನಾಳಿನ ಸಮಾಜಕ್ಕಾಗಿ ಇಂದೇ ವ್ಯಸನ ವಿರೋಧಿ ಸಂಕಲ್ಪ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ (ನಂ.2)ಯಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಸಮಾಜದಲ್ಲಿ ಮಾದಕ ವ್ಯಸನ ತಡೆಗೆ ಸಹಕಾರಿಯಾಗಲಿವೆ ಎಂದು ಹೇಳಿದರು.

ಪ್ರಬಂಧ ಸ್ಪರ್ಧೆಯಲ್ಲಿ ಐದನೇ ತರಗತಿಯ ಜಯಶ್ರೀ ಕೊತಬಾಳ, ವಿದ್ಯಾಶ್ರೀ ಕನ್ನೂರ ಹಾಗೂ ಮುಸ್ಕಾನ್ ಇಲಿ, ಆರನೇ ತರಗತಿಯ ಶಿಫಾ ಎಂಡಿಗೇರಿ, ಅರ್ಪಿತಾ ಮರಾಠಿ ಹಾಗೂ ಸಫಾ ಪಾಟೀಲ್, ಏಳನೇ ತರಗತಿಯ ಪ್ರಿಯಾಂಕ ಹಡಪದ, ಜಾಕಿರಾ ನದಾಫ್ ಹಾಗೂ ಶ್ರೀದೇವಿ ಅಯಾರ್ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ಕ್ಲಬ್ ವತಿಯಿಂದ ವಿಜೇತರಿಗೆ ಬಹುಮಾನ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಸಿಹಿ ವಿತರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎಂ. ರೇಷ್ಮಿ ಮಾತನಾಡಿ, ಇನ್ನರ್ ವೀಲ್ ಕ್ಲಬ್‌ನ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು. ಶಾಲೆಯ ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಈ ಸಂದರ್ಭದಲ್ಲಿ ಕ್ಲಬ್‌ನ ಉಪಾಧ್ಯಕ್ಷೆ ಶಿವಲೀಲಾ ಅಕ್ಕಿ, ಕಾರ್ಯದರ್ಶಿ ಪೂಜಾ ಭೂಮಾ, ಸಂಪಾದಕಿ ಮೀನಾಕ್ಷಿ ಕೊರವನವರ, ಸಿಪಿಸಿಸಿ ಜಯಶ್ರೀ ಉಗಲಾಟದ, ಕೋ-ಸಿಪಿಸಿಸಿ ಶಾರದಾ ಸಜ್ಜನರ, ಮಾಜಿ ಅಧ್ಯಕ್ಷೆ ನೀಲಾಂಬಿಕಾ ಉಗಲಾಟದ, ಹಿರಿಯ ಸದಸ್ಯೆ ಸುಶೀಲಾ ಕೋಟಿ, ಶಿಕ್ಷಕರಾದ ಇಂದಿರಾಬಾಯಿ ಎಸ್.ವಿ., ಪಿ.ಎಫ್. ನಾಗನೂರ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಖಜಾಂಚಿ ವೀಣಾ ಕಾವೇರಿ ನಿರೂಪಿಸಿದರು.

ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಲ್ಲ (ಯಾದವ) ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘ, ಶಾಸಕ ಡಿ.ಟಿ. ಶ್ರೀನಿವಾಸ್ ಹಾಗೂ ಶಾಸಕ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ಕಾರ್ಯಕಾರಿಣಿ ಸದಸ್ಯ ಹರೀಶ ಪೂಜಾರ, ದಿವಂಗತ ಎ. ಕೃಷ್ಣಪ್ಪ ಹಾಗೂ ಮುನಿಯಪ್ಪ ಮುದ್ದಪ್ಪ ಅವರ ನಂತರ ಯಾವುದೇ ಸರ್ಕಾರದಲ್ಲಿ ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಇದು ಸಮುದಾಯದ ನಿರ್ಲಕ್ಷ್ಯದ ಸಂಕೇತವಾಗಿದ್ದು, ತಕ್ಷಣವೇ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೊಲ್ಲ (ಯಾದವ) ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರವೇಶಿಸಿ, ಡಿ.ಟಿ. ಶ್ರೀನಿವಾಸ್ ಹಾಗೂ ಎಂ. ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಶಕ್ತಿ ಯೋಜನೆ ಯಶಸ್ವಿ ಜಾರಿಗೆ ಶ್ರಮಿಸಿದ ಅಧಿಕಾರಿಗೆ ಗೌರವ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ಗದಗ ವಿಭಾಗೀಯ ಕಚೇರಿಯ ಸಹಾಯಕ ಸಂಚಾರ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿರುವ ಸವಿತಾ ಆದಿ ಅವರನ್ನು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ ಮಾತನಾಡಿ, ಸವಿತಾ ಆದಿ ಅವರು ಲಕ್ಷ್ಮೇಶ್ವರ ಘಟಕದಲ್ಲಿ ಆಡಳಿತಾತ್ಮಕ ದಕ್ಷತೆ, ಕಾರ್ಯನಿಷ್ಠೆ ಹಾಗೂ ಸಾರ್ವಜನಿಕ ಸ್ನೇಹಿ ಸೇವೆಯ ಮೂಲಕ ಉತ್ತಮ ಹೆಸರು ಗಳಿಸಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಹಿಳಾ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ಒದಗಿಸಿರುವುದು ಶ್ಲಾಘನೀಯವಾಗಿದೆ. ಅವರ ಸೇವಾ ಮನೋಭಾವ ಇತರ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಘಟಕದ ನೂತನ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕರಿಸಿರುವ ಪವಿತ್ರಾ ಪಿ. ಅವರನ್ನು ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಸಾರ್ವಜನಿಕ ಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ ಶಕ್ತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸುವಂತೆ ಶುಭ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ತಾಲೂಕು ಪಂಚಾಯಿತಿ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆ. 8ರಂದು ಗದಗದಲ್ಲಿ ಸಂಗೀತ ಸಂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗಾನಲಹರಿ ಸಾಂಸ್ಕೃತಿಕ ಕಲಾ ಸಂಸ್ಥೆ, ಹಾವೇರಿ ಹಾಗೂ ಅಜೆಯ ಮ್ಯೂಜಿಕಲ್ ಅಕಾಡೆಮಿ, ಕೊಪ್ಪಳ ಇವರ ಸಹಯೋಗದಲ್ಲಿ ಆಗಸ್ಟ್ 8ರಂದು ಸಂಜೆ ನಗರದ ಭೀಮಸೇನ ಜೋಷಿ ರಂಗಮಂದಿರದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶ್ರೀನಾಥ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷೆ ಶೀಲಾ ಪಾಟೀಲ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಪ.ಪೂ. ಡಾ. ಕಲ್ಲಯ್ಯಜ್ಜನವರು ಹಾಗೂ ಪ.ಪೂ. ಶಿವಶಾಂತವೀರ ಶರಣರು ವಹಿಸಲಿದ್ದು, ಫೀರಸಾಬ್ ಕೌತಾಳ್ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೀಲಾ ವೀರನಗೌಡ ಪಾಟೀಲ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಸಿ.ಸಿ. ಪಾಟೀಲ, ಮುಖಂಡರಾದ ಸಚಿನ್ ಪಾಟೀಲ, ರಾಜಶೇಖರ ಕಲ್ಲೂರ, ಡಾ. ಬಸವರಾಜ ಬಳ್ಳಾರಿ, ಗವಿಸಿದ್ದಪ್ಪ ಪಲ್ಲೇದ, ಡಾ. ಶ್ರೀಧರ ಕುರಡಗಿ, ಸಿದ್ದರಾಮೇಶ್ವರ ಗಡೇದ, ವಿಜಯಕುಮಾರ ಗಡ್ಡಿ, ಇಮಾಮ್ ಮೊರಬದ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಮರ ಜವಳಿ ಹಾಗೂ ಶಶಾಂಕ್ ಗಜಾಕೋಶ ಉಪಸ್ಥಿತರಿದ್ದರು.

ಗದಗ ಜಿಲ್ಲೆಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಭೇಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಆಗಸ್ಟ್ 6 ಮತ್ತು 7ರಂದು ಗದಗ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದ ಸಭೆ ನಡೆಸಲಿದ್ದಾರೆ.

ಆಗಸ್ಟ್ 6ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಪ್ರಕರಣಗಳ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಹೊಸ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಲೋಕಾಯುಕ್ತ ಕಚೇರಿ ಸ್ಪಷ್ಟಪಡಿಸಿದೆ.

ಆಗಸ್ಟ್ 7ರಂದು ಉಪಲೋಕಾಯುಕ್ತರು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಹಾಗೂ ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡರಕಟ್ಟಿ ರೈತರ ಗೋಳು ಕೇಳಿದ ಜಿಲ್ಲಾಡಳಿತ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸುಮಾರು 15-20 ವರ್ಷಗಳಿಂದ ಚರಂಡಿ ನೀರು ನಿಂತು 160ಕ್ಕೂ ಹೆಚ್ಚು ಎಕರೆ ಫಲವತ್ತಾದ ಕೃಷಿಭೂಮಿ ಹಾಳಾಗಿರುವ ಅಡರಕಟ್ಟಿ ಗ್ರಾಮದ ಸಮಸ್ಯೆಗೆ ಕೊನೆಗೂ ಜಿಲ್ಲಾಡಳಿತ ಸ್ಪಂದಿಸಿದೆ. ರೈತರು ಒಂದು ವಾರದ ಗಡುವು ನೀಡಿ ಹೋರಾಟದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಗದಗ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಗಂಗಪ್ಪ ಎಂ. ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರೊಂದಿಗೆ ಗದಗ ನಾಕಾ ಬಳಿಯ ಲಂಡಿ ಹಳ್ಳದಿಂದ ಹರಿದುಬರುವ ಚರಂಡಿ ನೀರನ್ನು ವೀಕ್ಷಿಸಿದ ಉಪವಿಭಾಗಾಧಿಕಾರಿಗಳು, ಬಳಿಕ ಅಡರಕಟ್ಟಿ ಗ್ರಾಮಕ್ಕೆ ತೆರಳಿ ಜವುಳು ಬೆಳೆದು ನಿರುಪಯುಕ್ತವಾಗಿರುವ ಕೃಷಿಭೂಮಿಗಳನ್ನು ಪರಿಶೀಲಿಸಿ ರೈತರ ಅಹವಾಲು ಆಲಿಸಿದರು.

ರೈತರು, ತಾತ್ಕಾಲಿಕ ಕಾಮಗಾರಿ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಲಂಡಿ ಹಳ್ಳದಿಂದ ಪೈಪ್‌ಲೈನ್ ಅಳವಡಿಸಿ ಚರಂಡಿ ನೀರನ್ನು ಡಬ್ಬಾಡುಬ್ಬಿ ಹಳ್ಳಕ್ಕೆ ಹರಿಸುವ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಹನುಮಂತ ನಂದೆಣ್ಣವರ ಹಾಗೂ ರೈತರಾದ ಸಿದ್ದಣ್ಣ ಹವಳದ, ಮುತ್ತಣ್ಣ ಗಡೆಪ್ಪನವರ, ಚನ್ನಬಸಪ್ಪ ಹಳೆಮನಿ, ಗಂಗನಗೌಡ್ರ ಪಾಟೀಲ, ಯಲ್ಲಪ್ಪ ಗಡೆಪ್ಪನವರ, ಮಾಂತೇಶ ಲಿಂಗಶೆಟ್ಟಿ, ಮೌನೇಶ ಗಡೆಪ್ಪನವರ, ಚಂದ್ರು ಮಾಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಆಗಸ್ಟ್ 16ರ ನಂತರ ಸಂಬಂಧಿಸಿದ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ರೈತರ ಸಭೆ ನಡೆಸಿ ಎರಡು-ಮೂರು ಶಾಶ್ವತ ಯೋಜನೆಗಳ ರೂಪುರೇಷೆ ಸಿದ್ಧಪಡಿಸಿ. ಅಮೃತ್-2 ಯೋಜನೆಯಡಿ ಸಾಧ್ಯವಾದರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ರೈತರ ಸಮಸ್ಯೆ ಬಗೆಹರಿಸಲು ವಿಶೇಷ ಕಾಳಜಿ ವಹಿಸುತ್ತೇವೆ.”

ಗಂಗಪ್ಪ ಎಂ., ಉಪವಿಭಾಗಾಧಿಕಾರಿ

ಕಾಂಗ್ರೆಸ್ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಶಾಸಕ ಸಿ.ಸಿ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಬೇಗುದಿ ಹೆಚ್ಚಾಗುತ್ತಿದ್ದು, ಸಂಪುಟ ವಿಸ್ತರಣೆಯ ಬಳಿಕ ಅಸಮಾಧಾನ ತಾರಕಕ್ಕೇರಿದೆ. ಸರ್ಕಾರ ಯಾವಾಗ ಬೇಕಾದರೂ ಪತನಗೊಂಡು ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಭವಿಷ್ಯ ನುಡಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪ್ರಮಾಣವಚನ ಸಮಾರಂಭಕ್ಕೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿರುವುದು ಕಾಂಗ್ರೆಸ್‌ನ ಒಳಜಗಳಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಾಲ್ಕು ಬಣಗಳು ಸೃಷ್ಟಿಯಾಗಿದ್ದು, ಸರ್ಕಾರವೇ ಸಮ್ಮಿಶ್ರ ಸರ್ಕಾರದಂತೆ ಕಾಣುತ್ತಿದೆ ಎಂದು ಟೀಕಿಸಿದರು.

ಸಚಿವ ಸಂಪುಟದ ಪಟ್ಟಿಯಲ್ಲಿ ಪ್ರಕಟವಾಗಿದ್ದ ಇಬ್ಬರ ಹೆಸರನ್ನು ಕೈಬಿಟ್ಟು ಮತ್ತೊಬ್ಬರಿಗೆ ಅವಕಾಶ ನೀಡಲಾಗಿದೆ. ಈ ಬದಲಾವಣೆ ಯಾರ ಒತ್ತಡಕ್ಕೆ ನಡೆದಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಪ್ರಾತಿನಿಧ್ಯದ ಕುರಿತು ಕಾಂಗ್ರೆಸ್ ಮಾತು ಮತ್ತು ಕೃತ್ಯದಲ್ಲಿ ವ್ಯತ್ಯಾಸವಿದೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದ ಕಾಂಗ್ರೆಸ್, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಂಪುಟದಲ್ಲೂ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿಲ್ಲ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗಳನ್ನು ವ್ಯಂಗ್ಯವಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಎದುರಿಸದವರಿಗೆ ಪಕ್ಷದ ಉನ್ನತ ಹುದ್ದೆ ನೀಡಲಾಗಿದೆ. ತಮ್ಮ ಜವಾಬ್ದಾರಿಯ ಅರಿವಿನಿಂದ ಮಾತನಾಡಬೇಕು ಎಂದು ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ವಾಗ್ದಾಳಿ ನಡೆಸಿದ ಸಿ.ಸಿ. ಪಾಟೀಲ, ತಮ್ಮ ಇಲಾಖೆಯ ಕೆಲಸ ಬಿಟ್ಟು ಅನಗತ್ಯ ರಾಜಕಾರಣದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇಸ್ಪೀಟ್, ಮರಳು ಹಾಗೂ ಡ್ರಗ್ಸ್ ದಂಧೆ ಹೆಚ್ಚಾಗಿರುವುದನ್ನು ತಡೆಯುವತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾವುದೇ ಇರಲಿ, ಗದಗ ಜಿಲ್ಲೆಗೆ ಒಬ್ಬ ಸಚಿವ ಇರಬೇಕು. ಸಚಿವರಿಲ್ಲದಿದ್ದರೆ ಅಧಿಕಾರಿಗಳ ಮೇಲೆ ನಿಯಂತ್ರಣ ಕಡಿಮೆಯಾಗಿ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ರಾಜು ಕುರಡಗಿ, ಎಂ.ಎಸ್. ಕರಿಗೌಡ್ರ, ಉಷಾ ದಾಸರ, ಎಂ.ಎಂ. ಹಿರೇಮಠ, ಲಿಂಗಾರಾಜ ಪಾಟೀಲ, ಮಂಜುನಾಥ ಮುಳಗುಂದ, ಅನಿಲ ಅಬ್ಬಿಗೇರಿ ಹಾಗೂ ಗೂಳಪ್ಪ ಮುಷಿಗೇರಿ ಉಪಸ್ಥಿತರಿದ್ದರು.

“ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ದಟ್ಟವಾಗಿದೆ. ಸರ್ಕಾರ ಯಾವಾಗ ಬೇಕಾದರೂ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.”

ಸಿ.ಸಿ. ಪಾಟೀಲ, ನರಗುಂದ ಶಾಸಕ