ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತೀವ್ರಗೊಂಡಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳುದ್ದಕ್ಕೂ ಕಸದ ರಾಶಿಗಳು ಕಂಡುಬರುತ್ತಿವೆ.
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಲೇವಾರಿಯಾಗದೆ ಬಿದ್ದಿರುವ ಕಸದಿಂದ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಎರಡು ತಿಂಗಳಿನಿಂದ ಹಲವು ಪ್ರದೇಶಗಳಲ್ಲಿ ಕಸ ಸಂಗ್ರಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಪರಿಣಾಮವಾಗಿ ಕಸದ ರಾಶಿಗಳು ರಸ್ತೆ ಮಧ್ಯಭಾಗದವರೆಗೂ ಹರಡಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟುಮಾಡುತ್ತಿದೆ.
ನಗರದ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಮಾರ್ಷಲ್ಗಳನ್ನು ನೇಮಿಸಲಾಗಿದ್ದರೂ, ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮನೆಗಳ ಬಳಿ ಕಸದ ವಾಹನಗಳು ನಿಯಮಿತವಾಗಿ ಬಾರದ ಕಾರಣ ಅನೇಕರು ರಸ್ತೆಗಳಲ್ಲೇ ಕಸ ಎಸೆಯುತ್ತಿದ್ದಾರೆ ಎನ್ನಲಾಗಿದೆ.
ಹಸಿ ಕಸ ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಆರೋಗ್ಯ ಸಮಸ್ಯೆಗಳ ಆತಂಕವೂ ಎದುರಾಗಿದೆ. ಕಸ ವಿಲೇವಾರಿಯಲ್ಲಿ ಉಂಟಾಗಿರುವ ಅವ್ಯವಸ್ಥೆ ಬಗ್ಗೆ ನಾಗರಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಕಸಾ ಪೋರ್ಟಲ್’ ಅಂಕಿಅಂಶಗಳ ಪ್ರಕಾರ, ಒಂದು ತಿಂಗಳ ಹಿಂದೆ 3,200ರಷ್ಟಿದ್ದ ಸಕ್ರಿಯ ಕಸದ ಬ್ಲ್ಯಾಕ್ ಸ್ಪಾಟ್ಗಳ ಸಂಖ್ಯೆ ಇದೀಗ 5,445ಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆ ಉದ್ಯಾನ ನಗರಿ ಮತ್ತೆ ಕಸದ ನಗರಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.
ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗಲು ಕಳೆದ ಹಲವು ವರ್ಷಗಳಿಂದ ಕಸ ಸಂಗ್ರಹಣೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು, ಟಿಪ್ಪರ್ ವಾಹನಗಳ ಕೊರತೆ, ಸಿಬ್ಬಂದಿ ಅಭಾವ, ಸಂಬಳ ಪಾವತಿಯ ವಿಳಂಬ ಹಾಗೂ ವಾಹನಗಳ ದುರಸ್ತಿ ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ಮೂಲಗಳು ತಿಳಿಸಿವೆ.


