ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತೆ ಹೊಂದಿರುವ ಆಸ್ತಿ ಮಾಲೀಕರಿಗೆ ಎ ಖಾತೆ ಪಡೆಯಲು ಅವಕಾಶ ಕಲ್ಪಿಸುವ ‘ನನ್ನ ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ ನೀಡುವುದಾಗಿ ತಿಳಿಸಿದ್ದಾರೆ. ಇದನ್ನು ಬೆಂಗಳೂರಿಗರಿಗಾಗಿ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಎಂದು ಅವರು ಘೋಷಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಇ-ಖಾತಾ, ನಂಬಿಕೆ ನಕ್ಷೆ ಸೇರಿದಂತೆ ಹಲವು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದೇವೆ. ಇದೀಗ ಬಿ ಖಾತೆ ಹೊಂದಿರುವ ನಾಗರಿಕರಿಗೆ ಎ ಖಾತೆ ಮಾಡಿಸಿಕೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮೇ 16, 2026ರಿಂದ ಈ ಅಭಿಯಾನ ಆರಂಭವಾಗಲಿದ್ದು, ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆಗೊಳ್ಳಲು ಅವಕಾಶ ನೀಡಲಾಗುತ್ತದೆ. ನಗರದಲ್ಲಿ ಸುಮಾರು 7 ಲಕ್ಷ ಬಿ ಖಾತೆಗಳಿದ್ದು, ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಒಸಿ ಇಲ್ಲದೇ ವಿದ್ಯುತ್ ಹಾಗೂ ನೀರಿನ ಸಂಪರ್ಕ ಸಿಗದೇ ಪರದಾಡುತ್ತಿರುವ ನಾಗರಿಕರಿಗೆ ಈ ಯೋಜನೆ ನೆರವಾಗಲಿದೆ. ಸೂಕ್ತ ದಾಖಲೆಗಳನ್ನು ಸಲ್ಲಿಸಿದರೆ ಆಸ್ತಿ ಪ್ರಮಾಣಪತ್ರವನ್ನು ಮನೆಬಾಗಿಲಿಗೇ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಗರದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಶಾಲಾ ಆವರಣಗಳಲ್ಲಿ 10 ಸ್ಥಳಗಳನ್ನು ಗುರುತಿಸಿ ಅಭಿಯಾನ ನಡೆಸಲಾಗುತ್ತದೆ. ಮೇ 16ರ ಬಳಿಕ ಪ್ರತಿ ಶನಿವಾರ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುವುದು. ಅಧಿಕಾರಿಗಳು ರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆಗೊಳ್ಳುವವರಿಗೆ ಗೈಡನ್ಸ್ ವ್ಯಾಲ್ಯೂ ಶೇಕಡಾ 5ರಿಂದ ಶೇಕಡಾ 2ಕ್ಕೆ ಇಳಿಕೆ ಮಾಡುವುದಾಗಿ ಘೋಷಿಸಿರುವ ಡಿಸಿಎಂ, ಮುಂದಿನ 100 ದಿನಗಳಲ್ಲಿ ಈ ಅವಕಾಶವನ್ನು ನಾಗರಿಕರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ, ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರನ್ನು ಹಸಿರುಮಯಗೊಳಿಸುವ ಉದ್ದೇಶದಿಂದ 15 ಲಕ್ಷ ಸಸಿಗಳನ್ನು ನೆಡುವ ಗ್ರೀನ್ ಬೆಂಗಳೂರು ಅಭಿಯಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಡಿಎ 50ನೇ ವರ್ಷದ ಅಂಗವಾಗಿ ಜೂನ್ 27ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಇನ್ನೊಂದೆಡೆ, ಎಲೆಕ್ಟ್ರಾನಿಕ್ ಸಿಟಿಯಿಂದ ಮೈಸೂರು ರಸ್ತೆವರೆಗೆ 33 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬಿಸಿನೆಸ್ ಕಾರಿಡಾರ್ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಭೂಮಿ ನೀಡುವ ಮಾಲೀಕರಿಗೆ ಐದು ರೀತಿಯ ಪರಿಹಾರ ನೀಡಲಾಗುವುದು. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಡಿನೋಟಿಫೈ ಮಾಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

