ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ್ದ ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿದ ವಿಟ್ಲ ಪೊಲೀಸರ ಮಾನವೀಯತೆ ಮತ್ತು ಸಮಯಪ್ರಜ್ಞೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಎಸ್ಐ ರಾಮಕೃಷ್ಣ ಪುಟ್ಟ ಮಗುವನ್ನು ಸುರಕ್ಷಿತವಾಗಿ ಹೊರತೆಗೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾನುವಾರ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪೆಟ್ರೋಲ್ ಬಂಕ್ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತ್ತು. ಕಾರಿನೊಳಗೆ ಮಗು, ಮಹಿಳೆ ಮತ್ತು ಚಾಲಕ ಸಿಲುಕಿಕೊಂಡಿದ್ದು, ಅಪಘಾತದ ತೀವ್ರತೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸಮೀಪದಲ್ಲೇ ಕರ್ತವ್ಯದಲ್ಲಿದ್ದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ ಅಪಘಾತದ ಶಬ್ದ ಕೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರಿನೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಹೊರತೆಗೆದು ತಕ್ಷಣ ನೆರವು ಒದಗಿಸಿದರು.
ರಕ್ಷಣಾ ಕಾರ್ಯಾಚರಣೆಯ ವೇಳೆ ಅಳುತ್ತಿದ್ದ ಮಗುವನ್ನು ಎಸ್ಐ ರಾಮಕೃಷ್ಣ ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣದ ಪೊಲೀಸ್ ಕಾರ್ಯಾಚರಣೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮಯೋಚಿತವಾಗಿ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

