Home Blog

ವಚನಾನಂದಶ್ರೀ ಪೋಕ್ಸೋ ಪ್ರಕರಣ ತನಿಖಾಧಿಕಾರಿ ದಿಢೀರ್ ವರ್ಗಾವಣೆ!

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದಶ್ರೀ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ಎಸ್‌ಪಿ H.T. ಶೇಖರ್ ಅವರು ಹೊರಡಿಸಿದ ಆದೇಶದಂತೆ ಪಿಎಸ್‌ಐ ಮಂಜುಳಾ ಅವರನ್ನು ದಾವಣಗೆರೆಯ ಆಜಾದ್ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಆಜಾದ್ ನಗರ ಠಾಣೆಯ ಪಿಎಸ್‌ಐ ಜಯರತ್ನಮ್ಮ ಅವರನ್ನು ಹೊಸ ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.

ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠ ಟ್ರಸ್ಟ್ ಪದಾಧಿಕಾರಿಗಳು ಪೂರ್ವ ವಲಯ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಪಿಎಸ್‌ಐ ಮಂಜುಳಾ ಅವರು ವಚನಾನಂದಶ್ರೀ ಅವರನ್ನು ಎರಡು ಬಾರಿ ಹರಿಹರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಸ್ವಾಮೀಜಿಯ ವಿರುದ್ಧ ಮಕ್ಕಳ ಮೇಲಿನ ದೌರ್ಜನ್ಯ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಈಗ ಹೊಸ ತನಿಖಾಧಿಕಾರಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮುಂದಿನ ದಿನಗಳಲ್ಲಿ ಯಾವ ಹಾದಿಯಲ್ಲಿ ಸಾಗಲಿದೆ ಎಂಬುದು ಗಮನ ಸೆಳೆಯುತ್ತಿದೆ.

ಬ್ಯುಸಿ ಜೀವನಶೈಲಿಗೆ ಪರಿಹಾರ: ಪ್ರತಿದಿನ ಧ್ಯಾನ ಅಗತ್ಯ ಎಂದ ತಜ್ಞರು!

ಇಂದಿನ ವೇಗವಾಗಿ ಸಾಗುತ್ತಿರುವ ಜೀವನಶೈಲಿಯಲ್ಲಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.

ಜಿಮ್‌ಗೆ ಹೋಗುವುದು, ವ್ಯಾಯಾಮ ಮಾಡುವುದು ಹೇಗೆ ದೇಹವನ್ನು ಫಿಟ್‌ ಆಗಿಡಲು ಸಹಾಯ ಮಾಡುತ್ತದೋ, ಅದೇ ರೀತಿ ಧ್ಯಾನ ಮನಸ್ಸನ್ನು ಶಾಂತವಾಗಿಡಲು ಹಾಗೂ ಒತ್ತಡವನ್ನು ನಿಯಂತ್ರಿಸಲು ಸಹಾಯಕವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಕೆಲಸದ ಒತ್ತಡ, ಜೀವನದ ವೇಗ ಮತ್ತು ಮಾನಸಿಕ ಚಿಂತೆಗಳಿಂದ ಬಳಲುತ್ತಿದ್ದು, ಇದರಿಂದ ಮುಕ್ತಿ ಪಡೆಯಲು ಧ್ಯಾನವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತಿದಿನ ಕೇವಲ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ದೇಹ ಮತ್ತು ಮನಸ್ಸಿನಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ವಿಶೇಷವಾಗಿ ಬೆಳಿಗ್ಗೆ ಎದ್ದ ಕೂಡಲೇ ಮೊಬೈಲ್‌ ಬಳಸುವ ಅಭ್ಯಾಸವನ್ನು ಬಿಟ್ಟು, ಆ ಸಮಯವನ್ನು ಧ್ಯಾನಕ್ಕೆ ಮೀಸಲಿಟ್ಟರೆ ದಿನವಿಡೀ ಮನಸ್ಸು ಶಾಂತವಾಗಿರುತ್ತದೆ ಎಂದು ಹೇಳಲಾಗಿದೆ. ಬೆಳಗಿನ ಧ್ಯಾನದಿಂದ ದೇಹದಲ್ಲಿ ಒತ್ತಡಕ್ಕೆ ಕಾರಣವಾಗುವ ಕಾರ್ಟಿಸೋಲ್  ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಮಾನಸಿಕ ಒತ್ತಡ, ಆತಂಕ ಮತ್ತು ಕಿರಿಕಿರಿ ಕಡಿಮೆಯಾಗುವ ಜೊತೆಗೆ ಭಾವನಾತ್ಮಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

ಧ್ಯಾನ ಮಾಡುವುದರಿಂದ ಗಮನ ಶಕ್ತಿ ಹೆಚ್ಚಾಗುತ್ತದೆ ಎಂದು ತಜ್ಞರು ತಿಳಿಸುತ್ತಾರೆ. ದಿನನಿತ್ಯ 10 ನಿಮಿಷಗಳ ಧ್ಯಾನ ಅಭ್ಯಾಸ ಮಾಡಿಕೊಂಡರೆ ಮನಸ್ಸಿನಲ್ಲಿ ಇರುವ ಗೊಂದಲಗಳು ಕಡಿಮೆಯಾಗುತ್ತವೆ. ಇದರಿಂದ ವ್ಯಕ್ತಿಯು ಸ್ಪಷ್ಟವಾಗಿ ಯೋಚಿಸಲು ಸಾಧ್ಯವಾಗುತ್ತದೆ ಹಾಗೂ ನಿರ್ಧಾರಗಳನ್ನು ತ್ವರಿತವಾಗಿ ಮತ್ತು ಸರಿಯಾಗಿ ತೆಗೆದುಕೊಳ್ಳುವ ಸಾಮರ್ಥ್ಯವೂ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ನಿರಂತರವಾಗಿ ಮಾನಸಿಕ ಒತ್ತಡದಲ್ಲಿ ಕೆಲಸ ಮಾಡುವವರಿಗೆ ಇದು ಅತ್ಯಂತ ಉಪಯುಕ್ತ ಅಭ್ಯಾಸವಾಗಿದೆ.

ಅದೇ ರೀತಿ ಧ್ಯಾನವು ಮಾನಸಿಕ ಶಕ್ತಿಯನ್ನು ಹೆಚ್ಚಿಸಿ, ದೇಹದ ಶಕ್ತಿಯ ಮಟ್ಟವನ್ನೂ ಸುಧಾರಿಸುತ್ತದೆ. ಒತ್ತಡ ಮತ್ತು ಆತಂಕದಿಂದ ಬಳಲುವ ವ್ಯಕ್ತಿಗಳಲ್ಲಿ ದೈಹಿಕ ಚೈತನ್ಯ ಕಡಿಮೆಯಾಗುವುದು ಸಾಮಾನ್ಯ. ಆದರೆ ನಿಯಮಿತ ಧ್ಯಾನ ಅಭ್ಯಾಸದಿಂದ ನರಮಂಡಲ ಸಮತೋಲನದಲ್ಲಿರುತ್ತದೆ ಹಾಗೂ ದೇಹದಲ್ಲಿ ಆಮ್ಲಜನಕದ ಹರಿವು ಉತ್ತಮಗೊಳ್ಳುತ್ತದೆ. ಇದರಿಂದ ದಿನವಿಡೀ ಚೈತನ್ಯಶೀಲವಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ.

ಧ್ಯಾನವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದಕ್ಕೂ ಸಹಾಯಕವಾಗಿದೆ. ಮನಸ್ಸು ಶಾಂತವಾಗಿರುವಾಗ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿಯಮಿತ ಧ್ಯಾನ ಮಾಡುವವರಲ್ಲಿ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆಯಾಗುತ್ತದೆ ಮತ್ತು ದೇಹವು ಶೀಘ್ರವಾಗಿ ಪುನಃಶಕ್ತಿಯನ್ನು ಪಡೆಯುತ್ತದೆ. ಇದರಿಂದ ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ.

ಇದಲ್ಲದೆ, ಧ್ಯಾನವು ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಧ್ಯಾನದ ಮೂಲಕ ಮನಸ್ಸು ಶಾಂತವಾಗುವುದರಿಂದ ಹೃದಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಮತ್ತು ರಕ್ತದ ಹರಿವು ಸಮತೋಲನದಲ್ಲಿರುತ್ತದೆ. ಇದರಿಂದ ಹೃದಯ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ನಿದ್ರೆಯ ಸಮಸ್ಯೆ ಹೊಂದಿರುವವರಿಗೂ ಧ್ಯಾನ ಬಹಳ ಉಪಯುಕ್ತವಾಗಿದೆ. ಇಂದಿನ ದಿನಗಳಲ್ಲಿ ಅನೇಕರು ಒತ್ತಡ ಮತ್ತು ಆತಂಕದಿಂದ ನಿದ್ರೆ ಕೊರತೆಯನ್ನು ಅನುಭವಿಸುತ್ತಿದ್ದಾರೆ. ಪ್ರತಿದಿನ ಮಲಗುವ ಮುನ್ನ ಅಥವಾ ಬೆಳಿಗ್ಗೆ ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ನಿದ್ರೆಯ ಗುಣಮಟ್ಟವೂ ಸುಧಾರಿಸುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ದಿನಕ್ಕೆ ಕೇವಲ 10 ನಿಮಿಷಗಳ ಧ್ಯಾನವು ದೈಹಿಕ ಆರೋಗ್ಯ, ಮಾನಸಿಕ ಸ್ಥಿರತೆ, ಒತ್ತಡ ನಿಯಂತ್ರಣ, ಗಮನ ಶಕ್ತಿ ಹೆಚ್ಚಳ ಹಾಗೂ ಉತ್ತಮ ನಿದ್ರೆ ಸೇರಿದಂತೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಆದ್ದರಿಂದ ಧ್ಯಾನವನ್ನು ಜೀವನದ ದೈನಂದಿನ ಅಭ್ಯಾಸವಾಗಿಸಿಕೊಂಡರೆ ಆರೋಗ್ಯಕರ ಮತ್ತು ಸಮತೋಲನದ ಜೀವನವನ್ನು ನಡೆಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಗದಗ: ಬಟ್ಟೆ ತೊಳೆಯಲು ಹೋಗಿ ಅಕ್ಕ-ತಂಗಿ ಸಾವು..!

ಗದಗ : ಬೇಸಿಗೆಯಿಂದಾಗಿ ಊರಿನ ಕೆರೆ ಬತ್ತಿ ಹೋಗಿದ್ದರಿಂದ ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಶಿಕಾರಿ (15) ಹಾಗೂ ಮುತ್ತವ್ವ ಹರಣಶಿಕಾರಿ (8) ಎಂದು ಗುರುತಿಸಲಾಗಿದೆ.

ತಿಮ್ಮಾಪೂರ – ಯರೇಹಂಚಿನಾಳ ರಸ್ತೆಯ ಸಮೀಪ, ಕೊಪ್ಪಳ ಜಿಲ್ಲೆಯ ಯರೆಹಂಚಿನಾಳ ಗ್ರಾಮದ ಸರಹದ್ದಿನ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಕೃಷಿಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗ್ರಾಮದ ಕೆರೆ ಸಂಪೂರ್ಣ ಬತ್ತಿ ಹೋಗಿರುವುದರಿಂದ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದರು. ಇದೇ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜಲು ಬಾರದೆ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಕೃಷಿಹೊಂಡದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆದರು. ಇಬ್ಬರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಘಟನಾ ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಇರುವುದರಿಂದ ಜನರು ಕೃಷಿಹೊಂಡಗಳನ್ನೇ ಅವಲಂಬಿಸಿರುವುದು ಈ ದುರಂತಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ: ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ.

ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯ ಎನ್ನುವ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಷ್ಟು ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು.

ಕೇವಲ ಹತ್ತು ನಿಮಿಷಗಳ ಕಾಲ ಮಳೆ ಬಂದರೆ ಇಲ್ಲಿ ನೋಡಿದರೂ ನೀರು ನಿಲ್ಲುತ್ತದೆ. ಈ ಸಮಾವೇಶಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡಿದೆ. ಜನರನ್ನೂ ಸರಕಾರವೇ ಕರೆತರಬೇಕು. ಅದಕ್ಕೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಕರೆದುಕೊಂಡು ಬರುವುದಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಕಾಂಗ್ರೆಸ್ ನವರ ಕಾರ್ಯಕ್ರಮಗಳಿಗೆ ಜನ ಬರಬೇಕಲ್ಲ, ಅದಕ್ಕಾಗಿ ಅಧಿಕಾರಿಗಳನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಸರಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಸಚಿವ ಕುಮಾರಸ್ವಾಮಿ ಅವರು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದರು.

ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಸಾರಿ ಹೇಳುತ್ತಿವೆ ಎಂದು ಸಚಿವರು ಅಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಸಿದ್ದ:

ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚೆಗೆ ಪಂಥಾಹ್ವಾನ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿಯ ಸವಾಲನ್ನು ಸ್ವೀಕರಿಸಿದ ಕೇಂದ್ರ ಸಚಿವರು, ಚರ್ಚೆ ಮಾಡಲು ತಯಾರ್ ಇದ್ದೇನೆ. ಎಲ್ಲಿಗೆ ಬೇಕಾದರೂ ಬರಲಿ. ಬಿಡದಿಯಲ್ಲಿ ಮೂರೂವರೆ ಸಾವಿರ ಜನ ತಕರಾರು ತೆಗೆದು ಅರ್ಜಿ ಕೊಟ್ಟಿದ್ದಾರೆ. ರೈತರನ್ನು ರೌಡಿಗಳು ಮತ್ತು ಪೊಲೀಸರ ಮೂಲಕ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಯೋಜನೆಯಿಂದ ಒಳ್ಳೆಯದು ಆಗುವುದಿದ್ದರೆ ರೈತರೆ ಸಂತೋಷವಾಗಿ ಭೂಮಿ ಕೊಡುತ್ತಿದ್ದರು. ಆದರೆ ಇಲ್ಲಿ ಭೂಮಿ ಕೊಡಲು ರೈತರು ಬಯಸುತ್ತಿಲ್ಲ. ಹೀಗಾಗಿ ರೈತರ ಹಿತಕ್ಕೆ ತಕ್ಕಂತೆ ಸರ್ಕಾರ ವರ್ತಿಸಬೇಕು ಎಂದು ಸಚಿವರು ಹೇಳಿದರು

ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ ಸೇರುತ್ತಾರೆ:

ಎರಡು ಬಾರಿ ಶಾಸಕರಾಗಿ ಗೆದ್ದಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ್ದಾಗಿ ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಇದೊಂದು ಗೌರವಪೂರ್ವಕ ಭೇಟಿ ಎಂದ ಅವರು, ಜೆಡಿಎಸ್ ಪಕ್ಷ ಸೇರಲು ಅವರು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ದಿನಾಂಕ ನಿಗದಿ ಮಾಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷದ ಬಲವರ್ಧನೆಗೆ ನಾವು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ. ಈಗಿನ ತಲೆ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದೇವೆ. ಅದರ ಭಾಗವಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ಕಚೇರಿಗೆ ಆಗಮಿಸುವುದಕ್ಕೂ ಮುನ್ನ ಸಚಿವರು ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿದ್ದರು. ಸುಮಾರು ಒಂದು ತಾಸಿನ ಈ ಭೇಟಿ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಮ್. ರಮೇಶ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಅನೇಕ ಮುಖಂಡರು ಸಚಿವರ ಜೊತೆಯಲ್ಲಿ ಇದ್ದರು.

3 ವರ್ಷದಲ್ಲಿ ಸರ್ಕಾರದ ಸಾಧನೆ ಏನು?: ತುಮಕೂರು ಸಮಾವೇಶದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ತುಮಕೂರಿನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಈ ಮೂರು ವರ್ಷದಲ್ಲಿ ಸರ್ಕಾರ ಮಾಡಿದ ಸಾಧನೆ ಏನು?”ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರುದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನದೇ ಸಾಧನೆಗಳಿಲ್ಲದ ಕಾರಣ ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳನ್ನು ತಮ್ಮ ಸರ್ಕಾರದ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

“ಹುಬ್ಬಳ್ಳಿಯಲ್ಲಿ ಭಾರಿ ಪ್ರಮಾಣದಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಸಲಾಗಿದೆ. ಆದರೆ ಅದು ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ. ಹಳೆ ಸರ್ಕಾರದ ಯೋಜನೆಗಳನ್ನು ಈಗಿನ ಸರ್ಕಾರ ತನ್ನ ಸಾಧನೆ ಎಂದು ಜನರಿಗೆ ತೋರಿಸಲು ಯತ್ನಿಸುತ್ತಿದೆ” ಎಂದು ದೂರಿದರು.

ತುಮಕೂರಿನಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶ ಜನರಲ್ಲಿ ನಗೆಪಾಟಲಿಗೆ ಗುರಿಯಾಗಿದೆ. ಈ ಕುರಿತು ಜನರೇ ವ್ಯಂಗ್ಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಈ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಯಾವುದೇ ಕೌಂಟರ್ ಕಾರ್ಯಕ್ರಮ ನಡೆಸುವುದಿಲ್ಲ. ಜನರಿಗೆ ವಾಸ್ತವ ಸ್ಥಿತಿ ಗೊತ್ತಿದೆ ಎಂದು ಸ್ಪಷ್ಟಪಡಿಸಿದರು.

ಉಪ ಚುನಾವಣೆಗಳ ವಿಚಾರವನ್ನು ಪ್ರಸ್ತಾಪಿಸಿದ ಅವರು, “ಸರ್ಕಾರ ನಿಜವಾಗಿಯೂ ಸಾಧನೆ ಮಾಡಿದ್ದರೆ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಹಲವು ದಿನಗಳು ತಂಗಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದು ಟೀಕಿಸಿದರು.

ಮತದಾನಕ್ಕೂ ಕೆಲವೇ ದಿನಗಳ ಮೊದಲು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲಾಗಿದೆ. ಜಾಹೀರಾತುಗಳ ಮೂಲಕ ರಾಜ್ಯದ ಆರ್ಥಿಕ ಹಾಗೂ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ಭಾವನೆ ಮೂಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.ಸಮಾವೇಶದ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಇದೇ ವೇಳೆ ಬಿಜೆಪಿ ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ ಅವರು, “ನಾವು ಹೋರಾಟ ಮಾಡಿರಲಿಲ್ಲ ಎಂದರೆ ವಾಲ್ಮೀಕಿ ಹಗರಣದಲ್ಲಿ ಸಚಿವರ ರಾಜೀನಾಮೆ ಆಗುತ್ತಿರಲಿಲ್ಲ” ಎಂದು ಹೇಳಿದರು.

ಈ ಸರ್ಕಾರಕ್ಕೆ ಭಂಡತನ ಹೆಚ್ಚಾಗಿದೆ. ಯಾವುದೇ ಹೋರಾಟಕ್ಕೂ ತಲೆಬಾಗದ ಮನೋಭಾವ ತೋರಿಸುತ್ತಿದೆ. ಆದರೆ ರಾಜ್ಯದ ಜನ ಈ ಎಲ್ಲವನ್ನು ಗಮನಿಸುತ್ತಿದ್ದಾರೆ. ಈ ರಾಜಕೀಯ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿದ್ದೇ ಸರ್ಕಾರದ ಸಾಧನೆ: ಕಾಂಗ್ರೆಸ್ ವಿರುದ್ಧ ಬಿ. ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ನಾಯಕ ಬಿ. ಶ್ರೀರಾಮುಲು, “ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ದೊಡ್ಡ ಸಾಧನೆ” ಎಂದು ಆರೋಪಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ಸುಳ್ಳಿನ ಅಡಿಪಾಯದ ಮೇಲೆ ನಿಂತಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆ ಸುಳ್ಳಿನ ಸಾಕ್ಷಿದಾರರು. ಸರ್ಕಾರ ಸಂಪೂರ್ಣವಾಗಿ ಸುಳ್ಳಿನ ರಾಜಕಾರಣದ ಮೇಲೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ರೈತರ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರೈತರಿಗೆ ಸರ್ಕಾರದಿಂದ ಸಮರ್ಪಕ ನೆರವು ಸಿಗುತ್ತಿಲ್ಲ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನವೂ ಇನ್ನೂ ಬಾಕಿಯಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ಕೃಷಿ ವೆಚ್ಚ ಹಾಗೂ ಬೀಜದ ಬೆಲೆ ಏರಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಟೀಕಿಸಿದರು.

ರೈತರ ಬದುಕು ಉಳಿಸುವ ಬದಲು ಸರ್ಕಾರ ರೈತರ ಆತ್ಮಹತ್ಯೆ ಭಾಗ್ಯ ನೀಡುವ ಕೆಲಸ ಮಾಡುತ್ತಿದೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಾವಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ಅವರು, “ಇದು ಮಾನಗೆಟ್ಟ ಸರ್ಕಾರ. ರೈತರ ನೋವಿಗೆ ಸ್ಪಂದಿಸುವ ಬದಲು ರಾಜಕೀಯ ಸಮಾವೇಶಗಳಲ್ಲಿ ತೊಡಗಿಕೊಂಡಿದೆ” ಎಂದು ಆರೋಪಿಸಿದರು.

ಗೋಕರ್ಣ, ಕಾರವಾರ ಬೀಚ್‌ಗಳಲ್ಲಿ ವಾಟರ್ ಸ್ಪೋರ್ಟ್ಸ್ ಸ್ಥಗಿತ: ಪ್ರವಾಸಿಗರಿಗೆ ಜಿಲ್ಲಾಡಳಿತ ಶಾಕ್

ಕಾರವಾರ: ಮಳೆಗಾಲ ಆರಂಭ ಮತ್ತು ಹವಾಮಾನ ವೈಪರಿತ್ಯದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕಡಲತೀರ ಹಾಗೂ ನದಿಪ್ರದೇಶಗಳಲ್ಲಿ ನಡೆಯುತ್ತಿದ್ದ ಜಲಸಾಹಸ ಕ್ರೀಡೆಗಳಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿಷೇಧ ಹೇರಿದೆ.

ಜಲಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಹೊರಡಿಸಿರುವ ಆದೇಶದಂತೆ, ಮೇ 19ರಿಂದ ಮಳೆಗಾಲ ಮುಗಿಯುವವರೆಗೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಯಾವುದೇ ಜಲಕ್ರೀಡೆ ಚಟುವಟಿಕೆ ನಡೆಸಲು ಅವಕಾಶ ಇರುವುದಿಲ್ಲ.

ಗೋಕರ್ಣ ಮುಖ್ಯ ಬೀಚ್, ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್ ಬೀಚ್, ಪ್ಯಾರಡೈಸ್ ಬೀಚ್, ಮುರುಡೇಶ್ವರ ಹಾಗೂ ಕಾರವಾರ ಬೀಚ್‌ಗಳಲ್ಲಿ ನಡೆಯುತ್ತಿದ್ದ ಬೋಟಿಂಗ್ ಮತ್ತು ವಾಟರ್ ಸ್ಪೋರ್ಟ್ಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ನಡೆಯುತ್ತಿದ್ದ ಸ್ಕೂಬಾ ಡೈವಿಂಗ್ ಚಟುವಟಿಕೆಗೂ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ತದಡಿ ಅಘನಾಶಿನಿ ನದಿ ತೀರ ಹಾಗೂ ಶರಾವತಿ ಹಿನ್ನೀರಿನ ಪ್ರವಾಸಿ ಬೋಟಿಂಗ್ ಸೇವೆಯನ್ನೂ ನಿಲ್ಲಿಸಲಾಗಿದೆ.

ಹವಾಮಾನ ಇಲಾಖೆ ಚಂಡಮಾರುತ ಮತ್ತು ಬಿರುಗಾಳಿ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಅಪ್ಸರಕೊಂಡ ಕಡಲ ತೀರದಲ್ಲಿ ಪ್ರೀ-ವೆಡ್ಡಿಂಗ್ ಸೆಟ್ ಅಳವಡಿಕೆಗೂ ಅವಕಾಶ ನೀಡಿಲ್ಲ.

ಪೆಂಡಾಲ್‌ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಸಾವು: ಬೆಸ್ಕಾಂ ವಿರುದ್ಧ ಆಕ್ರೋಶ

0

ಕೋಲಾರ: ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಪುಲ್ ಷಾ ಮೊಹಲ್ಲಾದಲ್ಲಿ ನಡೆದಿದೆ.

ತಿಥಿ ಕಾರ್ಯಕ್ಕಾಗಿ ಹಾಕಲಾಗಿದ್ದ ಪೆಂಡಾಲ್ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಈ ವೇಳೆ ಅಲ್ಲಿದ್ದ ಮಕ್ಕಳು ಅದರ ಸಂಪರ್ಕಕ್ಕೆ ಬಂದಿದ್ದಾರೆ. ಪರಿಣಾಮ ಸಯ್ಯದ್ ರೆಹಮಾನ್ (4) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನೂ ಮೂವರು ಮಕ್ಕಳು ವಿದ್ಯುತ್ ಶಾಕ್‌ಗೆ ಒಳಗಾಗಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಪೋಷಕರು ಆರೋಪಿಸಿದ್ದಾರೆ. ‘ಈ ಹಿಂದೆ ಕೂಡ ವಿದ್ಯುತ್ ತಂತಿಗಳು ಕೆಳಗೆ ಬೀಳುತ್ತಿರುವ ಬಗ್ಗೆ ದೂರು ನೀಡಿದ್ದೇವೆ. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಬಂದ ಬೆಸ್ಕಾಂ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾಹ ವಾರ್ಷಿಕೋತ್ಸವದಂದು ದರ್ಶನ್‌ಗೆ ಸಿಕ್ಕ ರಿಲೀಫ್; ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಜೊತೆ ವಿಶೇಷ ಭೇಟಿ

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಇಂದು (ಮೇ 19) ಭಾವನಾತ್ಮಕ ಕ್ಷಣ ಸಿಕ್ಕಿದೆ. ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಅವರನ್ನು ಸುಮಾರು ಹತ್ತು ತಿಂಗಳ ಬಳಿಕ ಮುಖಾಮುಖಿಯಾಗಿ ಭೇಟಿ ಮಾಡುವ ಅವಕಾಶ ದೊರೆತಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ನಂತರ ದರ್ಶನ್ ಜೈಲಿನಲ್ಲೇ ಇದ್ದು, ಕುಟುಂಬದ ಸದಸ್ಯರನ್ನು ಕೇವಲ ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿ ದೂರದಿಂದ ಮಾತ್ರ ಭೇಟಿಯಾಗುತ್ತಿದ್ದರು.

ಈ ನಡುವೆ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಡಿಜಿಪಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ವಿಶೇಷ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ದರ್ಶನ್ ಕೂಡ ಜೈಲು ಅಧಿಕಾರಿಗಳ ಬಳಿ ಇದೇ ಬೇಡಿಕೆ ಇಟ್ಟಿದ್ದರು.

ಅಂತಿಮವಾಗಿ ಜೈಲಧಿಕಾರಿಗಳು ಅರ್ಧ ಗಂಟೆಯ ಮುಖಾಮುಖಿ ಭೇಟಿಗೆ ಅನುಮತಿ ನೀಡಿದ್ದು, ದರ್ಶನ್ ಇರುವ ಕೊಠಡಿಯಲ್ಲೇ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಭೇಟಿ ಮಾಡಿ ಸಮಯ ಕಳೆದಿದ್ದಾರೆ.

ಹತ್ತು ತಿಂಗಳ ಬಳಿಕ ಕುಟುಂಬದ ಜೊತೆ ಹತ್ತಿರದಿಂದ ಮಾತನಾಡಿದ ದರ್ಶನ್ ಭಾವುಕರಾಗಿದ್ದರೆಂದು ಮೂಲಗಳು ತಿಳಿಸಿವೆ.

ಬೆಲೆ ಏರಿಕೆ, ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರವೇ ಕಾರಣ: ತುಮಕೂರಿನಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ತುಮಕೂರು: ಇಂದಿನ ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶಿಕ್ಷಣ ನೀತಿಗಳನ್ನು ತೀವ್ರವಾಗಿ ಟೀಕಿಸಿದರು.

ನರೇಂದ್ರ ಮೋದಿ ಅಮೆರಿಕಕ್ಕೆ ತೆರಳಿದಾಗ ಡೊನಾಲ್ಡ್ ಟ್ರಂಪ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿದ್ದರು. ಟ್ರಂಪ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇರಾನ್ ಮೇಲೆ ಯುದ್ಧವೂ ನಡೆಯಿತು. ಆದರೆ ಇರಾನ್ ಮೇಲೆ ದಾಳಿ ನಡೆದಾಗ ಮೋದಿ ಒಮ್ಮೆಯೂ ವಿಷಾದ ವ್ಯಕ್ತಪಡಿಸಲಿಲ್ಲ ಎಂದು ಹೇಳಿದರು.

ಮಧ್ಯಪ್ರಾಚ್ಯದಲ್ಲಿ ಉಂಟಾದ ಉದ್ವಿಗ್ನತೆಯಿಂದ ಇಂಧನ ದರ ಏರಿಕೆ ಉಂಟಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಈ ಸ್ಥಿತಿಗೂ ಪ್ರಧಾನಿ ಮೋದಿ ಅವರೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇದೇ ವೇಳೆ ಉದ್ಯಮಿಗಳಾದ ಗೌತಮ್ ಅದಾನಿ ಹಾಗೂ ಮುಕೇಶ್ ಅಂಬಾನಿ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಮೋದಿ ಪ್ರಧಾನಿಯಾದ ಬಳಿಕ ಲಾಭ ಪಡೆದವರು ಅಂಬಾನಿ ಮತ್ತು ಅದಾನಿ ಮಾತ್ರ ಎಂದು ಟೀಕಿಸಿದರು.

2014ರಲ್ಲಿ ಗೌತಮ್ ಅದಾನಿ ಅವರ ಆಸ್ತಿ ಮೌಲ್ಯ ಸುಮಾರು 16 ಸಾವಿರ ಕೋಟಿ ರೂಪಾಯಿ ಇತ್ತು. ಇಂದು ಅದು ಲಕ್ಷಾಂತರ ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಮುಕೇಶ್ ಅಂಬಾನಿಯವರ ಆರ್ಥಿಕ ಸ್ಥಿತಿಯೂ ಬಹಳಷ್ಟು ವೃದ್ಧಿಯಾಗಿದೆ.

ಆದರೆ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರದ ನೀತಿಗಳಿಂದ ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದ್ದು, ಯುವಕರು ಹಾಗೂ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

error: Content is protected !!