ಬೆಂಗಳೂರು: ನೇರಳೆ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಮೇ 10ರಂದು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ತಿಳಿಸಿದೆ.
ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಸೆಂಟ್ರಲ್ ಕಾಲೇಜು ಮಾರ್ಗದಲ್ಲಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಈ ವ್ಯತ್ಯಯ ಉಂಟಾಗಲಿದೆ.
ಕಾಮಗಾರಿ ಹಿನ್ನೆಲೆ ಬಾಲಗಂಗಾಧರ ನಾಥ ಮೆಟ್ರೋ ನಿಲ್ದಾಣದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ನಡುವಿನ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ ಚಲಘಟ್ಟ – ವಿಜಯನಗರ, ಎಂಜಿ ರೋಡ್ – ವೈಟ್ಫೀಲ್ಡ್, ಮಾದವರ – ಸಿಲ್ಕ್ ಇನ್ಸ್ಟಿಟ್ಯೂಟ್ ಹಾಗೂ ಆರ್ವಿ ರೋಡ್ – ಬೊಮ್ಮಸಂದ್ರ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಮುಂದುವರಿಯಲಿದೆ.
ಬೆಳಗ್ಗೆ 9 ಗಂಟೆಯ ಬಳಿಕ ಸ್ಥಗಿತಗೊಂಡಿದ್ದ ನಿಲ್ದಾಣಗಳಲ್ಲೂ ಮೆಟ್ರೋ ಸೇವೆ ಪುನರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ.
ಪ್ರಯಾಣಿಕರು ಈ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ಮುಂಚಿತವಾಗಿ ಪ್ರಯಾಣ ಯೋಜನೆ ರೂಪಿಸಿಕೊಳ್ಳುವಂತೆ ಹಾಗೂ ಮೆಟ್ರೋ ಸಿಬ್ಬಂದಿಗೆ ಸಹಕರಿಸುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.

