ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲಾತಿ ಮರು ಪರಿಶೀಲನೆ ಕಾರ್ಯ ತಾಲೂಕಿನ ಪಿಂಜಾರ್ ಹೆಗ್ಡಳ್ ಗ್ರಾಮದಲ್ಲಿ ಆರಂಭಗೊಂಡಿದ್ದು, ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಪರಶುರಾಮ್ ಹೆಗ್ಡಳ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಜಾರಿಯಲ್ಲಿದ್ದು, ಅರ್ಹ ಫಲಾನುಭವಿಗಳಿಗೆ ಮುಂದೆಯೂ ಯೋಜನೆಯ ಸೌಲಭ್ಯ ನಿರಂತರವಾಗಿ ದೊರೆಯಬೇಕೆಂಬುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.
ಅನಧಿಕೃತ ವಿದ್ಯುತ್ ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ರಾಜ್ಯಾದ್ಯಂತ ಫಲಾನುಭವಿಗಳ ದಾಖಲಾತಿ ಮರು ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಇಬಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.
ಫಲಾನುಭವಿಗಳು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಇತ್ತೀಚಿನ ವಿದ್ಯುತ್ ಬಿಲ್, ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಅಧಿಕಾರಿಗಳಿಗೆ ನೀಡುವ ಮೂಲಕ ಪರಿಶೀಲನಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉಪನಾಯಕನಹಳ್ಳಿ ಶಾಖಾಧಿಕಾರಿ ಶ್ರೀನಿವಾಸ್, ಲೈನ್ಮ್ಯಾನ್ ವಿನಾಯಕ, ಮೆಕ್ಯಾನಿಕ್ ಪ್ರವೀಣ್, ಗ್ರಾಮ ಪ್ರಮುಖರಾದ ರವಿಯಪ್ಪ ರೆಡ್ಡಿ, ಕೆ. ಪರಮೇಶ್, ಕೇಶವರಾಯನಬಂಡಿ ದುರುಗಪ್ಪ, ಅಂಗಡಿ ಮಂಜಪ್ಪ, ಸೋಮು ಜಂಗ್ಲಿ, ಬಡಿಗೇರ್ ವಿನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ನಿರಂತರವಾಗಿ ದೊರೆಯಬೇಕು. ಆದ್ದರಿಂದ ದಾಖಲಾತಿ ಮರು ಪರಿಶೀಲನೆಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಅಧಿಕಾರಿಗಳಿಗೆ ಸಹಕರಿಸಬೇಕು.”
– ಪರಶುರಾಮ್ ಹೆಗ್ಡಳ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ

