ರಾಮನಗರ/ಚಾಮರಾಜನಗರ, ಏಪ್ರಿಲ್ 26: ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮತ್ತೆ ತೀವ್ರಗೊಂಡಿದ್ದು, ಮಾನವ ಜೀವಹಾನಿ ಹಾಗೂ ಕೃಷಿ ನಷ್ಟಕ್ಕೆ ಕಾರಣವಾಗುತ್ತಿದೆ. ಕನಕಪುರ ತಾಲೂಕಿನ ಸಂಗಮ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ್ದ ಕಾಡಾನೆ ಪ್ರಕರಣದ ಬೆನ್ನಲ್ಲೇ, ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ಕರಿಗುಂಡ (55) ಎಂಬವರು ಬಲಿಯಾಗಿದ್ದಾರೆ.
ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಾಗಪಟ್ಟಣ ಸಮೀಪದ ಬರಗಿ ಕಾಲೋನಿಯಲ್ಲಿ ಕೂಡ ಕಾಡಾನೆ ಹಾವಳಿ ಮುಂದುವರಿದಿದೆ. ಬಂಡೀಪುರ ಅರಣ್ಯಕ್ಕೆ ಅಂಟಿಕೊಂಡಿರುವ ಈ ಪ್ರದೇಶದಲ್ಲಿ ಒಂಟಿ ಸಲಗ ಮೆಕ್ಕೆಜೋಳ ಬೆಳೆ ಮೇಲೆ ದಾಳಿ ನಡೆಸಿ ಸಂಪೂರ್ಣ ಹಾನಿ ಉಂಟುಮಾಡಿದೆ. ರೈತ ಮಹೇಶ್ ಅವರಿಗೆ ಭಾರೀ ನಷ್ಟ ಉಂಟಾಗಿದೆ.
ಇನ್ನೊಂದೆಡೆ ಹನೂರು ತಾಲೂಕಿನ ಪಿಜಿ ಪಾಳ್ಯದಲ್ಲಿ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಕಾಣಿಸಿಕೊಂಡಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ನೀರಿನತ್ತ ಕಾಡುಪ್ರಾಣಿಗಳು ಸೇರುತ್ತಿರುವುದು ಕಂಡುಬಂದಿದೆ. ಈ ಎಲ್ಲಾ ಘಟನೆಗಳು ಗ್ರಾಮಸ್ಥರಲ್ಲಿ ಭೀತಿ ವಾತಾವರಣ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ತ್ವರಿತ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

