ತುಮಕೂರು: ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ಬಳಿಕ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರದಲ್ಲಿ ಗುರುವಾರ ನಡೆದ ಸತ್ತಿ ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಈ ಅನಾಹುತ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಊಟ ಸೇವಿಸಿದ ಬಳಿಕ ಅನೇಕರು ವಾಂತಿ ಮತ್ತು ಭೇದಿ ಲಕ್ಷಣಗಳಿಂದ ಬಳಲಿದ್ದಾರೆ. ಕೆಲವರಿಗೆ ಗುರುವಾರ ರಾತ್ರಿಯೇ ಆರೋಗ್ಯ ಸಮಸ್ಯೆ ಆರಂಭವಾದರೆ, ಇನ್ನು ಕೆಲವರಿಗೆ ಮರುದಿನ ಬೆಳಗ್ಗೆ ತೀವ್ರ ಅಸ್ವಸ್ಥತೆ ಕಂಡುಬಂದಿದೆ.
ಮಕ್ಕಳು ಸೇರಿದಂತೆ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆಹಾರ ವಿಷಬಾಧೆ ಶಂಕೆ ವ್ಯಕ್ತವಾಗಿದೆ. ಘಟನೆಯ ಕುರಿತು ಆರೋಗ್ಯ ಇಲಾಖೆ ಹಾಗೂ ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆ.

