Home Blog

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

0

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು ವಿದೇಶಗಳಲ್ಲೂ ಹೂಡಿಕೆ ಮಾಡುವಂತೆ ಹೇಳುತ್ತಾರೆ. ಸತೀಶ್ ಜಾರಕಿಹೊಳಿ ಅವರು ಅದನ್ನೇ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ತನಿಖೆ ನಡೆಯಬೇಕು ಎಂದು ಹೇಳಿದೆ. ಇದು ಕೇವಲ ಆರೋಪವಾಗಿದ್ದು, ಸಾಕ್ಷ್ಯ ಸಿಕ್ಕಿದೆ ಎಂದು ಹೇಳಲಾಗಿದೆಯಾದರೂ ಯಾವ ಸಾಕ್ಷ್ಯ ಸಿಕ್ಕಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಪ್ರಶ್ನಿಸಿದರು.

ಇಡಿ ನಡೆಸಿರುವ ದಾಳಿಗಳ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಇಂತಹ 196 ದಾಳಿಗಳ ಬಗ್ಗೆ ತಾವು ಈ ಹಿಂದೆ ಅಂಕಿ-ಅಂಶ ನೀಡಿದ್ದಾಗಿ ಹೇಳಿದರು. ಆದರೆ ಈ ಪೈಕಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಆರೋಪಿಸಿದರು. ಎಲ್ಲಾ ದಾಳಿಗಳಿಗೂ ಇಡಿ ಪತ್ರಿಕಾ ಪ್ರಕಟಣೆ ಹೊರಡಿಸುತ್ತದೆ. ಹಾಗಾದರೆ ಶಿಕ್ಷೆಯ ಪ್ರಮಾಣ ಇಷ್ಟೊಂದು ಕಡಿಮೆ ಏಕೆ ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಅವರು ತಾವು ಯಾವುದೇ ಕಾನೂನುಬಾಹಿರ ಹೂಡಿಕೆ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ವಿದೇಶದಲ್ಲಿ ಹೂಡಿಕೆ ಮಾಡಲು ಉದ್ದೇಶಿಸಿದ್ದಾಗಿ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಕಾನೂನುಬಾಹಿರವಾಗಿ ಹೂಡಿಕೆ ಮಾಡಿದ್ದರೆ ಮಾತ್ರ ಅದು ತಪ್ಪಾಗುತ್ತದೆ ಎಂದು ಹೇಳಿದರು.

ಕಾಂಗೋ, ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹೂಡಿಕೆ ಮಾಡುವುದೇ ತಪ್ಪು ಎಂದು ಎಲ್ಲಿಯೂ ಹೇಳಿಲ್ಲ. ಸತೀಶ್ ಜಾರಕಿಹೊಳಿ ಅವರು ಹೂಡಿಕೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಇಡಿ ಲಂಚದ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸುತ್ತಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಡಿ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಇನ್ನು ಪಿಡಬ್ಲ್ಯುಡಿ ಇಲಾಖೆಯಲ್ಲಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಗಾಳಿ ಸುದ್ದಿಗಳಿಗೆ ತಾವು ಉತ್ತರಿಸುವುದಿಲ್ಲ ಎಂದರು. ಇಡಿ ಆರೋಪ ಮಾಡಿದ್ದರೆ ಅದಕ್ಕೆ ದಾಖಲೆಗಳನ್ನು ನೀಡಲಿ. ಗುತ್ತಿಗೆಗಳಲ್ಲಿ ಲಂಚ ಪಡೆದ ಹಣವನ್ನೇ ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬುದಕ್ಕೆ ದಾಖಲೆಗಳನ್ನು ನೀಡಲಿ ಎಂದು ಸವಾಲು ಹಾಕಿದರು.

ಅಲ್ಲದೆ, ವಿದೇಶ ಪ್ರಯಾಣ ಮತ್ತು ಹೂಡಿಕೆಗಳ ಬಗ್ಗೆ ತನಿಖೆ ನಡೆಸುವುದಾದರೆ ಪಾಸ್‌ಪೋರ್ಟ್‌ಗಳನ್ನು ಪರಿಶೀಲಿಸಲಿ ಎಂದ ಅವರು, ತಮ್ಮ ಪಾಸ್‌ಪೋರ್ಟ್‌ಗಳನ್ನು ನೀಡಲು ಸಿದ್ಧವಿರುವುದಾಗಿ ಹೇಳಿದರು. ಬಿಜೆಪಿ ಶಾಸಕರು ಹಾಗೂ ಮಾಜಿ ಸಚಿವರು ಕೂಡ ತಮ್ಮ ಪಾಸ್‌ಪೋರ್ಟ್‌ಗಳನ್ನು ನೀಡಲಿ. ಯಾರು ದುಬೈ, ಮಾರಿಷಸ್ ಸೇರಿದಂತೆ ಯಾವ ದೇಶಗಳಿಗೆ ಎಷ್ಟು ಬಾರಿ ಹೋಗಿ ಬಂದಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯಲಿ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಸಿಎಂ ಡಿಕೆಶಿ APMCಗೆ ದಿಢೀರ್ ಭೇಟಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೊಲೀಸರ ಸ್ಪೆಷಲ್ ಡ್ರೈವ್: 17 ಬಾಲಕಾರ್ಮಿಕರ ರಕ್ಷಣೆ

0

ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ ಅವರು ಎಪಿಎಂಸಿಗೆ ದಿಢೀರ್ ಭೇಟಿ ನೀಡಿ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರು ಪೊಲೀಸರು ನಗರದಾದ್ಯಂತ ಸ್ಪೆಷಲ್ ಡ್ರೈವ್ ಆರಂಭಿಸಿದ್ದಾರೆ. ಹೋಟೆಲ್‌, ಅಂಗಡಿ, ಗ್ಯಾರೇಜ್‌, ಪೆಟ್ರೋಲ್ ಬಂಕ್ ಸೇರಿದಂತೆ ವಿವಿಧೆಡೆ ವ್ಯಾಪಕ ಪರಿಶೀಲನೆ ನಡೆಸಲಾಗಿದೆ.

ಈ ವೇಳೆ ಹಲವು ಕಡೆಗಳಲ್ಲಿ ಬಾಲಕಾರ್ಮಿಕರು ಪತ್ತೆಯಾಗಿದ್ದು, ಇದುವರೆಗೆ 17 ಬಾಲಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಉತ್ತರ ವಿಭಾಗವೊಂದರಲ್ಲೇ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಎಪಿಎಂಸಿಗೆ ದಿಢೀರ್ ಭೇಟಿ ನೀಡಿದ್ದ ವೇಳೆ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಾಲಕಾರ್ಮಿಕನೊಬ್ಬ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸ್ಥಳೀಯ ಪೊಲೀಸರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದರು.

ಇದರ ಜೊತೆಗೆ, ಮಹಿಳಾ ಕೂಲಿ ಕಾರ್ಮಿಕರು ತಮ್ಮ ಮಕ್ಕಳನ್ನೇ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಕೆಲವರು ಸಿಎಂ ಗಮನಕ್ಕೆ ತಂದಿದ್ದರು. ಈ ದೂರಿನ ಬೆನ್ನಲ್ಲೇ ಇಡೀ ಬೆಂಗಳೂರಿನಲ್ಲಿ ಬಾಲಕಾರ್ಮಿಕರ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಸಿಎಂ ಸೂಚನೆ ನೀಡಿದ್ದರು.

ಸಿಎಂ ಸೂಚನೆ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಗರದ ವಿವಿಧೆಡೆ ಬಾಲಕಾರ್ಮಿಕ ಪದ್ಧತಿ ಇನ್ನೂ ಮುಂದುವರಿದಿರುವುದು ಬೆಳಕಿಗೆ ಬಂದಿದೆ.

ಸರ್ಕಾರಿ ಜಮೀನು ಮಾರಾಟಕ್ಕೆ ಖಾಸಗಿಯವರಿಗೆ ಅಧಿಕಾರವಿಲ್ಲ: 33 ಎಕರೆ 33 ಗುಂಟೆ ಜಾಗ ಸರ್ಕಾರದ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶ

0

ಬೆಂಗಳೂರು: ಸರ್ಕಾರಿ ಜಮೀನನ್ನು ಯಾವುದೇ ಖಾಸಗಿ ವ್ಯಕ್ತಿ ಮತ್ತೊಬ್ಬರಿಗೆ ಮಾರಾಟ ಮಾಡಲು ಅಥವಾ ವರ್ಗಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ಯಲಹಂಕ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ಕೃಷ್ಣದೇವರಾಯ ಎಜುಕೇಷನಲ್ ಟ್ರಸ್ಟ್ ಹೊಂದಿದೆ ಎನ್ನಲಾದ 33 ಎಕರೆ 33 ಗುಂಟೆ ‘ಬಿ ಖರಾಬು’ ಸರ್ಕಾರಿ ಜಮೀನನ್ನು ಸರ್ವೆ ನಡೆಸಿ, ಗಡಿ ಗುರುತಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ನ್ಯಾಯಪೀಠ ಸೂಚಿಸಿದೆ.

ಸರ್ಕಾರಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಟ್ರಸ್ಟ್ ಪರವಾಗಿ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಹೆಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಯಾವುದೇ ಖಾಸಗಿ ವ್ಯಕ್ತಿಗೆ ಸರ್ಕಾರಿ ‘ಬಿ ಖರಾಬು’ ಜಮೀನನ್ನು ಮತ್ತೊಬ್ಬರಿಗೆ ಮಾರಾಟ ಮಾಡಲು ಅಥವಾ ವರ್ಗಾವಣೆ ಮಾಡಲು ಅವಕಾಶವಿಲ್ಲ. ಇಂತಹ ಜಮೀನಿನ ಮಾರಾಟ ಪತ್ರಗಳು ಕಾನೂನುಬದ್ಧವಾಗಿ ಅಸಿಂಧುವಾಗುತ್ತವೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

101 ಎಕರೆ ಹಕ್ಕು, 133 ಎಕರೆ ಮಾರಾಟ

ಟ್ರಸ್ಟ್ ಪರವಾಗಿ ಏಕಸದಸ್ಯ ಪೀಠದ ಮುಂದೆ ಸಲ್ಲಿಸಿದ್ದ ಅರ್ಜಿಯಲ್ಲಿ, ಸರಸ್ವತಮ್ಮ ಎಂಬುವರಿಂದ ಜಮೀನು ಖರೀದಿಸಿರುವುದಾಗಿ ಹೇಳಲಾಗಿತ್ತು. ಆದರೆ ಸರಸ್ವತಮ್ಮ ಅವರಿಗೆ ಕೇವಲ 101 ಎಕರೆ 37 ಗುಂಟೆ ಜಮೀನಿನ ಮೇಲಷ್ಟೇ ಹಕ್ಕು ಇತ್ತು. ಇದಕ್ಕಿಂತ ಹೆಚ್ಚಿನ ಜಮೀನನ್ನು ಅವರು ಟ್ರಸ್ಟ್‌ಗೆ ಮಾರಾಟ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಹೆಚ್ಚುವರಿ ಜಮೀನಿನ ಮೇಲೆ ಟ್ರಸ್ಟ್ ಮಾಲೀಕತ್ವ ಹೊಂದಲು ಸಾಧ್ಯವಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ಮುಂದಿನ ಮೂರು ತಿಂಗಳೊಳಗೆ ಸಂಬಂಧಪಟ್ಟ ಎಲ್ಲ ಪಕ್ಷಗಾರರಿಗೆ ನೋಟಿಸ್ ಜಾರಿ ಮಾಡಬೇಕು. ವಿವಾದಿತ ಜಮೀನಿನ ಜಂಟಿ ಸರ್ವೆ ನಡೆಸಿ ಸ್ಕೆಚ್ ಸಿದ್ಧಪಡಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಸರ್ವೆಯಲ್ಲಿ ಗುರುತಿಸಲಾಗುವ 33 ಎಕರೆ 33 ಗುಂಟೆ ಜಮೀನನ್ನು ಕಂದಾಯ ದಾಖಲೆಗಳಲ್ಲಿ ‘ಬಿ ಖರಾಬು ಸರ್ಕಾರಿ ಜಮೀನು’ ಎಂದು ದಾಖಲಿಸಬೇಕು. ಈ ಜಾಗವನ್ನು ಉದ್ಯಾನವನ, ಸ್ಮಶಾನ, ರಸ್ತೆ ಸೇರಿದಂತೆ ಸಾರ್ವಜನಿಕ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದು ಪೀಠ ತಿಳಿಸಿದೆ.

ಇದಲ್ಲದೆ, ವಿವಾದಿತ ಸರ್ಕಾರಿ ಜಮೀನನ್ನು ಯಾವುದೇ ಬಿಲ್ಡರ್‌ಗಳು, ಡೆವಲಪರ್‌ಗಳು ಅಥವಾ ಖಾಸಗಿ ಸಂಸ್ಥೆಗಳಿಗೆ ವಾಣಿಜ್ಯ ಹಾಗೂ ರಿಯಲ್ ಎಸ್ಟೇಟ್ ಚಟುವಟಿಕೆಗಳಿಗಾಗಿ ನೀಡಬಾರದು ಎಂದು ಸರ್ಕಾರದಿಂದ ಪ್ರಮಾಣಪತ್ರ ಪಡೆದುಕೊಳ್ಳಬೇಕು ಎಂಬ ಅಂಶವನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಹಿನ್ನೆಲೆ ಏನು?

ಮೂಲ ಜಮೀನುದಾರರಾದ ಕೃಷ್ಣರಾವ್ ಎಲ್. ಬಾಳೇಕಾಯಿ ಅವರು 1961ರಲ್ಲಿ ತಮ್ಮ ಪತ್ನಿ ಸರಸ್ವತಮ್ಮ ಅವರಿಗೆ ಸೆಟಲ್ಮೆಂಟ್ ಡೀಡ್ ಮೂಲಕ 101 ಎಕರೆ 37 ಗುಂಟೆ ಜಮೀನನ್ನು ನೀಡಿದ್ದರು.

ಆದರೆ ಸರಸ್ವತಮ್ಮ ಅವರು ತಮಗಿದ್ದ ಹಕ್ಕಿಗಿಂತ ಹೆಚ್ಚಿನ ಪ್ರಮಾಣದ, ಒಟ್ಟು 133 ಎಕರೆ 33 ಗುಂಟೆ ಜಮೀನನ್ನು ಕೃಷ್ಣದೇವರಾಯ ಎಜುಕೇಷನಲ್ ಟ್ರಸ್ಟ್‌ಗೆ ಆರು ಪ್ರತ್ಯೇಕ ಕ್ರಯ ಪತ್ರಗಳ ಮೂಲಕ ಮಾರಾಟ ಮಾಡಿದ್ದರು. ಇದರಲ್ಲಿ 31 ಎಕರೆ 36 ಗುಂಟೆ ಖರಾಬು ಜಮೀನು ಕೂಡ ಸೇರಿತ್ತು ಎನ್ನಲಾಗಿದೆ.

ಮೂಲ ಮಾರಾಟಗಾರರಿಗೇ ಹಕ್ಕಿಲ್ಲದ ಜಮೀನನ್ನು ಟ್ರಸ್ಟ್ ಖರೀದಿಸಿ ಬಳಸಿಕೊಳ್ಳುತ್ತಿದೆ ಎಂದು ಪ್ರಶ್ನಿಸಿ ಭೂಮಾಪನ ಇಲಾಖೆ ಸರ್ವೆ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಪ್ರಶ್ನಿಸಿ ಟ್ರಸ್ಟ್ ಹೈಕೋರ್ಟ್ ಮೊರೆ ಹೋಗಿತ್ತು. ಈ ಹಿಂದೆ ಏಕಸದಸ್ಯ ಪೀಠವು ನೋಟಿಸ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಇದೀಗ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಸರ್ಕಾರಿ ‘ಬಿ ಖರಾಬು’ ಜಮೀನಿನ ಮಾರಾಟ ಅಥವಾ ವರ್ಗಾವಣೆ ಕಾನೂನುಬದ್ಧವಲ್ಲ ಎಂದು ಸ್ಪಷ್ಟಪಡಿಸಿ, ಜಮೀನನ್ನು ಸರ್ವೆ ನಡೆಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಆದೇಶಿಸಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದು, ರಾಜ್ಯದ ಕೆಲವೆಡೆ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸದ್ಯಕ್ಕೆ ವ್ಯಾಪಕ ಮಳೆಯ ನಿರೀಕ್ಷೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ.13ರಂದು ಗುಡುಗು ಸಹಿತ ಮಳೆ ಸಾಧ್ಯತೆ

ಸೆಪ್ಟೆಂಬರ್‌ 13ರಂದು ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯ ಜೊತೆಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇದೇ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿತ್ತು. ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 2 ಸೆಂ.ಮೀ ಮಳೆ ದಾಖಲಾಗಿದೆ. ಮುಂದಿನ ದಿನಗಳಲ್ಲೂ ಹಲವು ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಇನ್ನು ವಾಯವ್ಯ-ಪಶ್ಚಿಮ ಮಧ್ಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಒಡಿಶಾ–ಉತ್ತರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಹೊಂದಿಕೊಂಡಂತೆ ವಾಯುಭಾರ ಕುಸಿತ ಉಂಟಾಗಿದೆ.

ಇದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಸಮುದ್ರಮಟ್ಟದಿಂದ ಸುಮಾರು 7.6 ಕಿಲೋಮೀಟರ್ ಎತ್ತರದವರೆಗೆ ವಿಸ್ತರಿಸಿದೆ. ಈ ವ್ಯವಸ್ಥೆ ನೈಋತ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಸ್ಪಷ್ಟವಾಗಲಿದೆ.

ನಂತರ ಉತ್ತರ ಕರಾವಳಿ ಆಂಧ್ರಪ್ರದೇಶ–ದಕ್ಷಿಣ ಒಡಿಶಾ ಭಾಗದ ಮೂಲಕ ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂತಹ ಘಟನೆ ಬೇರೆ ಯಾವ ದೇಶದಲ್ಲೂ ನಡೆಯಲ್ಲ: ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್

0

ನವದೆಹಲಿ: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಸೇರಿದ 21 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಇಡಿ ತನ್ನ ಪ್ರಕಟಣೆಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಅವ್ಯವಹಾರ ಹಾಗೂ ಗುತ್ತಿಗೆದಾರರಿಂದ ಲಂಚ ಪಡೆದಿರುವ ಆರೋಪಗಳ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ.

ಈ ನಡುವೆ ಉದ್ಯಮಿ ವಿಜಯ್ ಮಲ್ಯ ಅವರು ಸತೀಶ್ ಜಾರಕಿಹೊಳಿ ಪರವಾಗಿ ಬ್ಯಾಟ್ ಬೀಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಮಲ್ಯ, ಇಡಿ ಈ ಕಾರ್ಯಾಚರಣೆಯನ್ನು ದೊಡ್ಡ ಸಾಧನೆಯಂತೆ ಬಿಂಬಿಸುತ್ತಿದೆ. ಆದರೆ ಯಾವುದೇ ದೋಷಾರೋಪ ಪಟ್ಟಿ ಅಥವಾ ವಿಚಾರಣೆ ಇಲ್ಲದೆ ಸಾರ್ವಜನಿಕವಾಗಿ ವ್ಯಕ್ತಿತ್ವ ಹನನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಂತಹ ರೀತಿಯ ಕ್ರಮ ಬೇರೆ ಯಾವುದೇ ದೇಶದಲ್ಲಿ ನಡೆಯುವುದಿಲ್ಲ. ಈ ವಿಚಾರದಲ್ಲಿ ಸಾರ್ವಜನಿಕರು ಸ್ವತಃ ಯೋಚಿಸಬೇಕು ಎಂದು ವಿಜಯ್ ಮಲ್ಯ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಮಲ್ಯ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.

ಡಿಕೆಶಿಯಿಂದ ಮತ್ತೆ ದಾಳಿ ಬಗ್ಗೆ ಎಚ್ಚರಿಕೆ

ಇನ್ನು ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಶೋಧ ನಡೆಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಟ್ರ್ಯಾಪ್ ಮಾಡಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಇನ್ನೂ ಮೂರ್ನಾಲ್ಕು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರ ಮೇಲೆ ಇಂತಹ ದಾಳಿಗಳು ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇಡಿ ದಾಳಿ ನಡೆಯುವ ಮುನ್ನವೇ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

‘ನಮ್ಮ ಸಂಸ್ಥೆಗಳ ವಹಿವಾಟು ₹2,000 ಕೋಟಿ’

ಇಡಿ ದಾಳಿ ಕುರಿತು ಈ ಹಿಂದೆ ಪ್ರತಿಕ್ರಿಯಿಸಿದ್ದ ಸತೀಶ್ ಜಾರಕಿಹೊಳಿ, ತಮ್ಮ ಹಾಗೂ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ವಾರ್ಷಿಕ ವಹಿವಾಟು ₹2,000 ಕೋಟಿಗೂ ಅಧಿಕವಾಗಿದೆ ಎಂದು ಹೇಳಿದ್ದರು.

ವಿದೇಶದಲ್ಲಿ ಹೂಡಿಕೆ ಮಾಡಲು ಯೋಜನೆ ರೂಪಿಸಲಾಗಿದ್ದು, ಈವರೆಗೆ ಹೂಡಿಕೆ ಮಾಡಿಲ್ಲ. ಹೂಡಿಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದರು. ಇಡಿ ವಶಪಡಿಸಿಕೊಂಡಿದೆ ಎನ್ನಲಾದ ₹2 ಕೋಟಿಯನ್ನು ಕಾನೂನುಬದ್ಧವಾಗಿ ಕ್ಲೈಮ್ ಮಾಡುವುದಾಗಿ ಕೂಡ ಸತೀಶ್ ಜಾರಕಿಹೊಳಿ ಹೇಳಿದ್ದರು.

ಇದರ ಬೆನ್ನಲ್ಲೇ ಇಡಿ ತನ್ನ ಪ್ರಕಟಣೆಯಲ್ಲಿ ಗುತ್ತಿಗೆದಾರರಿಂದ ಲಂಚ ಪಡೆದಿರುವುದು ಹಾಗೂ ಲೋಕೋಪಯೋಗಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ. ಹೀಗಾಗಿ ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಸಂಬಂಧಿಸಿದ ಇಡಿ ಶೋಧ ಕಾರ್ಯ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

0

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ ತಾಯಿಯೊಂದಿಗೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಗನೂರು ಯಲ್ಲಪ್ಪ ಗಾರ್ಡನ್‌ನಲ್ಲಿ ಸೆಪ್ಟೆಂಬರ್ 9ರಂದು ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಬಳಿಕ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ ನಾಟಕವಾಡಿದ್ದಾಳೆ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಮುಬಾರಕ್‌ ಎಂಬುವರನ್ನು ಶಹಿನಾ ಬಾನು ವಿವಾಹವಾಗಿದ್ದಳು. ಕಳೆದ ಎರಡು ವರ್ಷಗಳಿಂದ ಮುಬಾರಕ್‌ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ. ಇದೇ ವೇಳೆ ದಂಪತಿಯ ಪುತ್ರಿಯೂ ಅನಾರೋಗ್ಯಕ್ಕೆ ಒಳಗಾಗಿದ್ದಳು. ಮಗಳನ್ನು ಗುಣಪಡಿಸುವುದಾಗಿ ಮನೆಗೆ ಬಂದಿದ್ದ ನಹೀಮ್‌ ಉದ್ದೀನ್‌ ಖುರೇಶಿ ಎಂಬಾತನೊಂದಿಗೆ ಶಹಿನಾ ಬಾನು ಸಲುಗೆ ಬೆಳೆಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಶಹಿನಾ ಬಾನು ಹಾಗೂ ನಹೀಮ್‌ ನಡುವೆ ಪ್ರೇಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಪತಿಯನ್ನು ನೋಡಿಕೊಳ್ಳುವ ವಿಚಾರದಲ್ಲಿ ಬೇಸತ್ತಿದ್ದ ಶಹಿನಾ ಬಾನುಗೆ ನಹೀಮ್‌ ಕೊಲೆ ಮಾಡುವ ಸಲಹೆ ನೀಡಿದ್ದ ಎನ್ನಲಾಗಿದೆ. ಅದರಂತೆ ಸೆಪ್ಟೆಂಬರ್ 9ರಂದು ರಾತ್ರಿ ಶಹಿನಾ ಬಾನು ತನ್ನ ತಾಯಿ ಹಸೀನ ಜಾನ್ ಜೊತೆ ಸೇರಿ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಳು ಎಂದು ಆರೋಪಿಸಲಾಗಿದೆ.

ಮುಬಾರಕ್‌ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಹಾಗೂ ಖಾಸಗಿ ಭಾಗಕ್ಕೆ ಒದ್ದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಬಳಿಕ ಮುಬಾರಕ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಹಿನಾ ಬಾನು ಹಾಗೂ ಹಸೀನ ಜಾನ್ ಹೇಳಿಕೊಂಡಿದ್ದರು.

ಆದರೆ ಮುಬಾರಕ್‌ ಸಾವಿನ ಬಗ್ಗೆ ಸಂಬಂಧಿಕರಿಗೆ ಅನುಮಾನ ಮೂಡಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಆವಲಹಳ್ಳಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದಾಗ ಮುಬಾರಕ್‌ ಉಸಿರುಗಟ್ಟಿ ಮೃತಪಟ್ಟಿರುವುದು ಹಾಗೂ ಕೆನ್ನೆ, ಮೂಗು, ಕುತ್ತಿಗೆ ಮತ್ತು ಖಾಸಗಿ ಭಾಗದಲ್ಲಿ ಗಾಯಗಳಾಗಿರುವುದು ಬೆಳಕಿಗೆ ಬಂದಿದೆ.

ಮರಣೋತ್ತರ ಪರೀಕ್ಷಾ ವರದಿ ಆಧರಿಸಿ ಪೊಲೀಸರು ಶಹಿನಾ ಬಾನು, ಆಕೆಯ ತಾಯಿ ಹಸೀನ ಜಾನ್ ಹಾಗೂ ನಹೀಮ್‌ ಉದ್ದೀನ್‌ ಖುರೇಶಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಹೊರಬಂದಿದೆ ಎನ್ನಲಾಗಿದ್ದು, ಮೂವರನ್ನೂ ಬಂಧಿಸಿರುವ ಆವಲಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನ ಬನಶಂಕರಿಯಲ್ಲಿ ಚಿರತೆ ಕಾಟ: ನಾಯಿಗಳ ಮೇಲೆ ದಾಳಿಗೆ ಯತ್ನ, ಸ್ಥಳೀಯರಲ್ಲಿ ಆತಂಕ

0

ಬೆಂಗಳೂರು: ನಗರದ ಬನಶಂಕರಿ 5ನೇ ಹಂತದ 2ನೇ ಬ್ಲಾಕ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಸೆ.9ರ ಬೆಳಗಿನ ಜಾವ ಸುಮಾರು 4 ಗಂಟೆಗೆ ಮನೆಯೊಂದರ ಮುಂದೆ ಚಿರತೆ ಓಡಾಡಿದ್ದು, ಅಲ್ಲಿದ್ದ ನಾಯಿಗಳ ಮೇಲೆ ದಾಳಿ ಮಾಡಲು ಯತ್ನಿಸಿದೆ ಎನ್ನಲಾಗಿದೆ. ಚಿರತೆಯ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮನೆಯೊಂದರ ಮುಂದೆ ಚಿರತೆ ಓಡಾಡುತ್ತಿರುವುದು ಹಾಗೂ ನಾಯಿಗಳತ್ತ ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಮತ್ತಷ್ಟು ಭೀತಿ ಮೂಡಿಸಿದೆ.

ಇದೇ ಪ್ರದೇಶದಲ್ಲಿ ಈ ಹಿಂದೆ ಜುಲೈ ತಿಂಗಳಲ್ಲೂ ಚಿರತೆ ಕಾಣಿಸಿಕೊಂಡಿತ್ತು. ಅಂದು ಪಟಾಕಿ ಸಿಡಿಸಿ ಚಿರತೆಯನ್ನು ಕಾಡಿನತ್ತ ಓಡಿಸಲಾಗಿತ್ತು ಎನ್ನಲಾಗಿದೆ. ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಚಿರತೆ ಮತ್ತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದ್ದು, ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸುವ ಅಗತ್ಯ ಎದುರಾಗಿದೆ.

ಜೈಲಿನಲ್ಲಿದ್ರೂ ಚಾಳಿ ಬಿಟ್ಟಿಲ್ಲ: ಪ್ರಜ್ವಲ್ ಬಳಿ ಸಿಕ್ಕ ಪೆನ್ʼಡ್ರೈವ್ʼನಲ್ಲಿತ್ತು 100 ಸೆಕ್ಸ್ ವಿಡಿಯೋಗಳು..!

0

ಆನೇಕಲ್: ಮೊಬೈಲ್ ಬಳಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಅವರ ಸಹಕೈದಿಯ ಸೆಲ್‌ನಲ್ಲಿ ಪತ್ತೆಯಾಗಿದ್ದ ಪೆನ್‌ಡ್ರೈವ್‌ನಲ್ಲಿ ಸುಮಾರು 100 ಅಶ್ಲೀಲ ವಿಡಿಯೋಗಳು ಇರುವುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢಪಟ್ಟಿದೆ ಎನ್ನಲಾಗಿದೆ.

ತನಿಖೆಯ ಪ್ರಕಾರ, ಕೈದಿಗಳ ಬ್ಯಾರಕ್‌ನಲ್ಲಿ ಅಳವಡಿಸಲಾಗಿದ್ದ ಟಿವಿಗೆ ಪೆನ್‌ಡ್ರೈವ್‌ ಸಂಪರ್ಕಿಸಿ ಈ ವಿಡಿಯೋಗಳನ್ನು ವೀಕ್ಷಿಸಲಾಗಿತ್ತು ಎನ್ನಲಾಗಿದೆ. ಈ ಕುರಿತು ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

ಪೆನ್‌ಡ್ರೈವ್‌ ಹಾಗೂ ಮೊಬೈಲ್‌ನಲ್ಲಿದ್ದ ಒಟ್ಟು 173 ಫೈಲ್‌ಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ ಮೊಬೈಲ್‌ನಲ್ಲಿ ಚಲನಚಿತ್ರಗಳು ಮತ್ತು ವೆಬ್‌ ಸೀರೀಸ್‌ಗಳು ಮಾತ್ರ ಪತ್ತೆಯಾಗಿವೆ. ಆದರೆ ಪೆನ್‌ಡ್ರೈವ್‌ನಲ್ಲಿ ಸುಮಾರು 100 ಅಶ್ಲೀಲ ವಿಡಿಯೋಗಳು ಇರುವುದು ಎಫ್‌ಎಸ್‌ಎಲ್‌ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಆದರೆ ಈ ಪೆನ್‌ಡ್ರೈವ್‌ ಅನ್ನು ಯಾವ ಸಮಯದಲ್ಲಿ ಬಳಸಲಾಗಿತ್ತು ಎಂಬುದನ್ನು ಇನ್ನೂ ಖಚಿತಪಡಿಸಿಕೊಳ್ಳಬೇಕಿದೆ. ಹೀಗಾಗಿ ಬಳಕೆಯ ಸಮಯ ಹಾಗೂ ಇತರ ತಾಂತ್ರಿಕ ವಿವರಗಳನ್ನು ಪತ್ತೆಹಚ್ಚಲು ಪೊಲೀಸರು ಮತ್ತೆ ಎಫ್‌ಎಸ್‌ಎಲ್‌ ತಜ್ಞರ ನೆರವು ಕೋರಿದ್ದಾರೆ.

ಸಿಸಿಬಿ ದಾಳಿ ವೇಳೆ ಮೊಬೈಲ್, ಪೆನ್‌ಡ್ರೈವ್ ಪತ್ತೆ

ಕಳೆದ ತಿಂಗಳು ಆಗಸ್ಟ್ 11ರಂದು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಅವರ ಸಹಕೈದಿ ಪ್ರತಾಪ್ ರಾಯ್ ಅವರ ಸೆಲ್‌ನಲ್ಲಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿದ್ದವು.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜಪ್ತಿ ಮಾಡಿದ್ದ ಮೊಬೈಲ್ ಹಾಗೂ ಪೆನ್‌ಡ್ರೈವ್‌ಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಎಫ್‌ಎಸ್‌ಎಲ್‌ ವರದಿಯಲ್ಲಿ ಪೆನ್‌ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೋಗಳ ಮಾಹಿತಿ ಬಹಿರಂಗವಾಗಿದ್ದು, ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯ: ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಗದಗ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ. ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಯಿತು.

ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಬೆಳಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ವ್ಯಾಪಾರ-ವಹಿವಾಟು ಬಂದ್ ಆಗಿವೆ. ಇದರಿಂದ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಖಾಸಗಿ ವಾಹನಗಳ ಸಂಚಾರ, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಮಾತ್ರ ಎಂದಿನಂತೆ ಆರಂಭವಾಗಿವೆ.

ನರಗುಂದದ ಮುಖ್ಯ ರಸ್ತೆಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ಗದಗ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿದರು. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ರೈತರ ಇತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳು ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಗೌರಿ-ಗಣೇಶ ಹಬ್ಬಕ್ಕೆ ಮುಳ್ಳಯ್ಯನಗಿರಿ ಪ್ರವಾಸ ಪ್ಲಾನ್ ಮಾಡಿದ್ದೀರಾ? ಸೆ.14ರಂದು ನೋ ಎಂಟ್ರಿ

0

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತವು ಪ್ರಮುಖ ಮುನ್ನೆಚ್ಚರಿಕೆ ಸೂಚನೆಯೊಂದನ್ನು ನೀಡಿದೆ. ಹಬ್ಬದ ಆಚರಣೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಸಾಂಪ್ರದಾಯಿಕ ಪೂಜೆ ಹಾಗೂ ಭಕ್ತರ ಆಗಮನ: ಚೌತಿ ಹಬ್ಬದ ಹಿನ್ನೆಲೆಯಲ್ಲಿ ಪ್ರಸಿದ್ಧ ಗಿರಿಧಾಮಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಹಣ್ಣು-ಕಾಯಿ ನೈವೇದ್ಯ ಮಾಡಿಸಲು ಮತ್ತು ‘ಚೌತಿ ಕಾಯಿ’ ಹೊಡೆಯಲು ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ನೂರಾರು ವರ್ಷಗಳಿಂದ ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಈ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಟ್ರಾಫಿಕ್ ಜಾಮ್ ತಡೆಯಲು ಮುಂಜಾಗ್ರತೆ: ಹಬ್ಬದ ದಿನದಂದು ಪ್ರವಾಸಿಗರ ವಾಹನಗಳ ದಟ್ಟಣೆಯಿಂದಾಗಿ ಗಿರಿಧಾಮಗಳ ಕಿರಿದಾದ ರಸ್ತೆಗಳಲ್ಲಿ ತೀವ್ರ ಸ್ವರೂಪದ ಟ್ರಾಫಿಕ್ ಜಾಮ್ ಉಂಟಾಗುವ ಭಾರಿ ಸಾಧ್ಯತೆಯಿರುವುದರಿಂದ, ಸಾರ್ವಜನಿಕರ ಹಾಗೂ ಭಕ್ತಾದಿಗಳ ಸುಗಮ ಸಂಚಾರಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರವಾಸ ಮುಂದೂಡಲು ಜಿಲ್ಲಾಧಿಕಾರಿ ಮನವಿ: ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಭಾಗಗಳಿಗೆ ತೆರಳಲು ಬಯಸುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸಾರ್ವಜನಿಕರಲ್ಲಿ ಕೋರಿದ್ದಾರೆ.