ಬೆಂಗಳೂರು, ಆ.28: ಕೆಪಿಎಸ್ಸಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಐಡಿ ತನಿಖೆಯಿಂದ ದೂರ ಉಳಿದಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗವಾರ್ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ಜ್ಞಾನೇಂದ್ರ ಕುಮಾರ್ ಹಾಜರಾಗಿದ್ದು, ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ.
2016ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, ಕೆಪಿಎಸ್ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು ಬೆಂಗಳೂರಿನ ಜಯಮಹಲ್ನಲ್ಲಿರುವ ಅವರ ನಿವಾಸ ಹಾಗೂ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆ ಮೇಲೆ ದಾಳಿ ನಡೆಸಿದ್ದರು.
ಇಡಿ ದಾಳಿ ನಡೆಸಿದ ವೇಳೆ ಜ್ಞಾನೇಂದ್ರ ಕುಮಾರ್ ಮೊಬೈಲ್, ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳೊಂದಿಗೆ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಇದೇ ವೇಳೆ ತಂದೆಗೆ ಹೃದಯಾಘಾತವಾಗಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು 15 ದಿನಗಳ ತುರ್ತು ರಜೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಆದರೆ ಲಖನೌನಲ್ಲಿದ್ದ ಅವರ ತಂದೆ ತಾನು ಆರೋಗ್ಯವಾಗಿದ್ದು, ಪುತ್ರ ಮನೆಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಅಧಿಕಾರಿಯ ರಜೆ ಅರ್ಜಿಯೇ ಅನುಮಾನಕ್ಕೆ ಕಾರಣವಾಗಿತ್ತು.
ಇಡಿ ಶೋಧದ ಬಳಿಕ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸ ಹಾಗೂ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದರು.
ಸಾಲು ಸಾಲು ಅನುಮಾನಗಳು ಹಾಗೂ ತನಿಖೆ ತೀವ್ರಗೊಳ್ಳುತ್ತಿರುವ ನಡುವೆಯೇ ಇದೀಗ ಜ್ಞಾನೇಂದ್ರ ಕುಮಾರ್ ಸಿಐಡಿ ಮುಂದೆ ಹಾಜರಾಗಿದ್ದಾರೆ. ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅವರಿಂದ ಮಹತ್ವದ ಮಾಹಿತಿ ಕಲೆಹಾಕುವ ಸಾಧ್ಯತೆಯಿದೆ.

