Home Blog

‘ಮಂತ್ರಿಗಿರಿ ಹಣದ ಆಟ’: ಕಾಂಗ್ರೆಸ್-ಬಿಜೆಪಿ ಎರಡರ ಮೇಲೂ ಯತ್ನಾಳ್ ವಾಗ್ದಾಳಿ

0

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ವಿರುದ್ಧ ಸ್ಫೋಟಕ ಆರೋಪಗಳ ಸುರಿಮಳೆಗೈದಿದ್ದಾರೆ. “ರಾಜ್ಯದ ಸಚಿವ ಸಂಪುಟ ಗುಂಡಾಗಳ ಗೂಡಾಗಿದೆ. ಕ್ರಿಮಿನಲ್ ಹಿನ್ನೆಲೆಯವರಿಗೆ ಮಂತ್ರಿಗಿರಿ ನೀಡಿ ಕಾಂಗ್ರೆಸ್ ಸರ್ಕಾರ ತಪ್ಪು ಸಂದೇಶ ನೀಡಿದೆ” ಎಂದು ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರೂಪಿಸಿರುವ ಇದು ಅತ್ಯಂತ ಕೆಟ್ಟ ಸಚಿವ ಸಂಪುಟ. ಪ್ರಮುಖ ನಾಯಕರನ್ನು ಬದಿಗಿಟ್ಟು, ಕ್ರಿಮಿನಲ್ ಹಿನ್ನೆಲೆಯವರಿಗೆ ಅವಕಾಶ ನೀಡಿದ್ದಾರೆ. ಭ್ರಷ್ಟಾಚಾರ ಮತ್ತು ಗುಂಡಾಗಿರಿ ಆರೋಪ ಎದುರಿಸುತ್ತಿರುವವರೇ ಸರ್ಕಾರದಲ್ಲಿದ್ದಾರೆ” ಎಂದು ಟೀಕಿಸಿದರು.

ಕಾಂಗ್ರೆಸ್ ಶಾಸಕರ ರಾಜೀನಾಮೆ ಬೆದರಿಕೆಯನ್ನು ಲೇವಡಿ ಮಾಡಿದ ಯತ್ನಾಳ್, “ಇದು ಕೇವಲ ಒತ್ತಡ ತಂತ್ರ. ಯಾರೂ ರಾಜೀನಾಮೆ ಕೊಡುವುದಿಲ್ಲ. ಹೈಕಮಾಂಡ್ ಒಂದು ಕರೆ ಮಾಡಿದರೆ ಎಲ್ಲರೂ ಶಿಸ್ತಿನ ಸಿಪಾಯಿಗಳಾಗಿಬಿಡುತ್ತಾರೆ” ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಸಚಿವ ಸ್ಥಾನ ಹಂಚಿಕೆ ಕುರಿತು ಮಾತನಾಡಿದ ಅವರು, “ಎಂ.ಬಿ. ಪಾಟೀಲ್ ಕಾಂಗ್ರೆಸ್‌ನಲ್ಲಿ ಅತ್ಯಂತ ಪ್ರಭಾವಿ ನಾಯಕ. ಹೈಕಮಾಂಡ್ ಜೊತೆಗಿನ ಅವರ ಪ್ರಭಾವವೇ ಅವರನ್ನು ಸಚಿವರನ್ನಾಗಿಸಿದೆ” ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಅವಧಿಯನ್ನೂ ಉಲ್ಲೇಖಿಸಿದ ಯತ್ನಾಳ್, “ಹಣದ ರಾಜಕಾರಣ ಕಾಂಗ್ರೆಸ್‌ಗೆ ಮಾತ್ರ ಸೀಮಿತವಲ್ಲ. ಬಿಜೆಪಿ ಅವಧಿಯಲ್ಲೂ ಹೈಕಮಾಂಡ್ ಪಟ್ಟಿ ಬದಲಾಗುತ್ತಿತ್ತು. ಹಣದ ವ್ಯವಹಾರಗಳ ಮೂಲಕ ಸಚಿವ ಸ್ಥಾನ ಸಿಕ್ಕ ಉದಾಹರಣೆಗಳಿವೆ” ಎಂದು ಆರೋಪಿಸಿದರು.

ಸಿದ್ದರಾಮಯ್ಯ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಹೈಕಮಾಂಡ್ ಈಗಲೂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುತ್ತಿದೆ. ಅವರಿಗೆ ಸ್ವಾಭಿಮಾನ ಇದ್ದರೆ ಮುಂದಿನ ರಾಜಕೀಯ ನಿರ್ಧಾರದಲ್ಲಿ ಅದಕ್ಕೆ ಉತ್ತರ ನೀಡಬೇಕು” ಎಂದು ಹೇಳಿದರು.

ಜೆನ್-ಝೀ ವಿವಾದಕ್ಕೆ ಹೊಸ ಟ್ವಿಸ್ಟ್: ಕಂಗನಾ ವಿರುದ್ಧ ರಮ್ಯಾ ಕಿಡಿ

ನವದೆಹಲಿ: ಬಾಲಿವುಡ್‌ನಲ್ಲಿ ಕಂಗನಾ ರಣಾವತ್ ವಿರುದ್ಧ ಮತ್ತೊಂದು ವಾಗ್ವಾದ ಭುಗಿಲೆದ್ದಿದೆ. ಜೆನ್-ಝೀ ಪ್ರತಿಭಟನಾಕಾರರ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ಕಂಗನಾ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.

“ಗೌರವದ ಬಗ್ಗೆ ಇತರರಿಗೆ ಪಾಠ ಮಾಡುವ ಮೊದಲು ನಿಮ್ಮ ಹಳೆಯ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳಿ. 2026ರ ಅತಿ ದೊಡ್ಡ ವ್ಯಂಗ್ಯವೆಂದರೆ ಕಂಗನಾ ರಣಾವತ್ ಜೆನ್-ಝೀಗೆ ಗೌರವದ ಉಪದೇಶ ನೀಡುತ್ತಿರುವುದು” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೆ, “ರಾಮ ನನ್ನ ಪಾಲಿಗೆ ದೇವರು. ರಾಮಮಂದಿರದ ವಿಚಾರದಲ್ಲಿ ನನ್ನ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಆಗ ನಿಮ್ಮ ಆಕ್ರೋಶ ಎಲ್ಲಿತ್ತು?” ಎಂದು ಪ್ರಶ್ನಿಸುವ ಮೂಲಕ ಕಂಗನಾ ಅವರ ನಿಲುವಿನಲ್ಲಿರುವ ದ್ವಂದ್ವವನ್ನು ರಮ್ಯಾ ಪ್ರಶ್ನಿಸಿದ್ದಾರೆ.

ಈ ಬೆಳವಣಿಗೆಯ ನಡುವೆ ಕಂಗನಾ ರಣಾವತ್ ಎಕ್ಸ್‌ನಲ್ಲಿ “ನಾನು ಜಾಗೃತ ಹಿಂದೂ ಆಗಲು ಬಯಸುತ್ತೇನೆ. ಮುಸ್ಲಿಮರನ್ನು ಭೇಟಿಯಾಗುವ ಹಿಂದೂಗಳು ಎಡಪಂಥೀಯರಾಗುತ್ತಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಈ ಹೇಳಿಕೆ ಜೆನ್-ಝೀ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡದ್ದೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ತ್ರಿಷಾ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ʼಗೆ ಮದ್ರಾಸ್ ಹೈಕೋರ್ಟ್ʼನಿಂದ ಸ್ಟೇಷನ್ ಬೇಲ್ ಆದೇಶ

0

ಚೆನ್ನೈ: ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್‌ ಪರಿಹಾರ ನೀಡಿದ್ದು, ಮಂಗಳವಾರವೇ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರನ್ನು ಉದ್ದೇಶಿಸಿ ಮಾಡಿದ ಪರೋಕ್ಷ ದ್ವಂದ್ವಾರ್ಥದ ಹೇಳಿಕೆ ಎಂದು ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಸೇರಿದಂತೆ ಹಲವು ಸಂಘಟನೆಗಳು ದೂರು ದಾಖಲಿಸಿದ್ದವು.

ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ತಂಜಾವೂರಿಗೆ ಕರೆದೊಯ್ದಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಆದರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಪೊಲೀಸರಿಗೆ ಇಲ್ಲ. ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೂ ನ್ಯಾಯಾಲಯಕ್ಕೆ ಇದೇ ವಿಚಾರವನ್ನು ಸ್ಪಷ್ಟಪಡಿಸಿದ್ದು, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿತ್ತು.

ಏನಿದು ವಿವಾದ?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು.

ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಆರೋಪಿಸಿದ್ದರು. ಇದೇ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂಬ ಅರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ದ್ವಂದ್ವಾರ್ಥ ಹೊಂದಿದ್ದು, ನಟಿ ತ್ರಿಷಾ ಅವರನ್ನು ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಹೇಳಿಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿದಿದೆ.

₹34 ಸಾವಿರ ಕೋಟಿ ಲಾಭಕ್ಕಾಗಿ ಭೂಸ್ವಾಧೀನವೇ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ, ರೈತರಿಗೆ ಸದ್ಯ ರಿಲೀಫ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಹೊಸೂರು ಗ್ರಾಮದ 14 ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, 2013ರ ಭೂಸ್ವಾಧೀನ ಕಾಯ್ದೆಯ ನಿಯಮಗಳನ್ನು ಸರ್ಕಾರ ಸಮರ್ಪಕವಾಗಿ ಪಾಲಿಸಿರುವುದೇ? ಎಂದು ಖಾರವಾಗಿ ಪ್ರಶ್ನೆ ಮಾಡಿದೆ.

ಅರ್ಜಿದಾರ ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಚ್. ಪ್ರಕಾಶ್, “ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸದೇ ಸರ್ಕಾರ ಭೂಸ್ವಾಧೀನಕ್ಕೆ ಮುಂದಾಗಿದೆ. ಈ ಯೋಜನೆಯ ಮೂಲಕ ಸರ್ಕಾರವೇ ಸುಮಾರು ₹34,000 ಕೋಟಿ ಲಾಭ ಪಡೆಯುವ ಉದ್ದೇಶ ಹೊಂದಿದೆ” ಎಂದು ವಾದಿಸಿದರು.

ಈ ವೇಳೆ ನ್ಯಾಯಪೀಠ, “ಈ ಯೋಜನೆಗೆ 2013ರ ಭೂಸ್ವಾಧೀನ ಕಾಯ್ದೆಯ ಎಲ್ಲ ನಿಯಮಗಳನ್ನು ಪಾಲಿಸಲಾಗಿದೆಯೇ? ಸೆಕ್ಷನ್ 10ಎ ಅಡಿಯಲ್ಲಿ ವಿನಾಯಿತಿ ಪಡೆಯಲು ಇದು ನಿಜವಾಗಿಯೂ ಗ್ರಾಮೀಣ ವಸತಿ ಯೋಜನೆಯೇ?” ಎಂದು ಸರ್ಕಾರವನ್ನು ಪ್ರಶ್ನಿಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ಬಹುತೇಕ ರೈತರು ಈಗಾಗಲೇ ಭೂಸ್ವಾಧೀನಕ್ಕೆ ಸಮ್ಮತಿ ನೀಡಿದ್ದಾರೆ. ಸೆಕ್ಷನ್ 10ಎ ಅಡಿಯಲ್ಲಿ ಅಗತ್ಯ ವಿನಾಯಿತಿ ಪಡೆಯಲಾಗಿದೆ. ಪರಿಹಾರದ ಮೊತ್ತ ಇನ್ನೂ ಅಂತಿಮವಾಗಿಲ್ಲ. ಅಂತಿಮ ತೀರ್ಮಾನವಾಗುವವರೆಗೂ ಅರ್ಜಿದಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಸರ್ಕಾರದ ಈ ಭರವಸೆಯನ್ನು ದಾಖಲಿಸಿಕೊಂಡ ಹೈಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

ತ್ರಿಷಾ ವಿವಾದದ ಬಳಿಕ ಉದಯನಿಧಿ ಬಂಧನ: ‘ಇದು ಸರಿಯಾದ ಕ್ರಮ’ ಎಂದ ಅಮಿತ್ ಮಾಳವೀಯ

0

ನವದೆಹಲಿ: ನಟಿ ತ್ರಿಷಾ ಕುರಿತು ಅವಹೇಳನಕಾರಿ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಸನಾತನ ಧರ್ಮವನ್ನು ಅವಮಾನಿಸಿದ್ದ ವ್ಯಕ್ತಿ ಈಗ ಮಹಿಳೆಯ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕಾನೂನು ಕ್ರಮ ಎದುರಿಸುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅಮಿತ್ ಮಾಳವೀಯ, “ಮಹಿಳೆಯ ಘನತೆಗೆ ಧಕ್ಕೆ ತರುವ ರೀತಿಯ ಸಾರ್ವಜನಿಕ ಹೇಳಿಕೆಗಳಿಗೆ ಕಾನೂನು ಕ್ರಮ ಅಗತ್ಯ. ಉದಯನಿಧಿ ಬಂಧನ ಸರಿಯಾದ ಕ್ರಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ಜಲ ವಿವಾದ ಕುರಿತು ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಉದಯನಿಧಿ ಸ್ಟಾಲಿನ್ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಸಭೆಯಲ್ಲಿ “ತ್ರಿಷಾ… ತ್ರಿಷಾ…” ಎಂಬ ಘೋಷಣೆಗಳು ಕೇಳಿಬಂದಾಗ, ಉದಯನಿಧಿ ತಮಿಳಿನಲ್ಲಿ ದ್ವಂದ್ವಾರ್ಥ ಮೂಡಿಸುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಈ ಹೇಳಿಕೆ ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿದ್ದವು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ಉದಯನಿಧಿಯನ್ನು ಬಂಧಿಸಿದ್ದು, ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದೇ ವೇಳೆ, 2023ರಲ್ಲಿ “ಸನಾತನ ಧರ್ಮವು ಡೆಂಗ್ಯೂ ಮತ್ತು ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಉದಯನಿಧಿ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಅವರ ವಿರುದ್ಧ ಮತ್ತೊಮ್ಮೆ ತೀವ್ರ ಟೀಕೆ ನಡೆಸಿದೆ.

ಮಧ್ಯಾಕಾಶದಲ್ಲೇ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: ಟರ್ಬುಲೆನ್ಸ್‌ಗೆ 12 ಮಂದಿಗೆ ಗಾಯ

0

ನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾದ AI2379 ವಿಮಾನ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿ ಏಕಾಏಕಿ ಸುಮಾರು 300 ಅಡಿ ಕುಸಿದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ.

ಮಂಗಳವಾರ ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದ ವಿಮಾನ, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು. ಹಾರಾಟದ ವೇಳೆ ಏಕಾಏಕಿ ಸಂಭವಿಸಿದ ತೀವ್ರ ಪ್ರಕ್ಷುಬ್ಧತೆಗೆ ಕ್ಲಿಯರ್ ಏರ್ ಟರ್ಬುಲೆನ್ಸ್ (CAT) ಅಥವಾ ಅಪ್‌ಡ್ರಾಫ್ಟ್-ಡೌನ್‌ಡ್ರಾಫ್ಟ್ ಕಾರಣವಾಗಿರಬಹುದು ಎಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಕೆಲ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ವಿಮಾನ ಇಳಿದ ತಕ್ಷಣ ಗಾಯಾಳುಗಳನ್ನು ವಿಮಾನ ನಿಲ್ದಾಣದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಹಾಗೂ ತಪಾಸಣೆ ನಡೆಸಲಾಯಿತು.

ಏರ್ ಇಂಡಿಯಾ ಪ್ರಕಟಣೆಯಲ್ಲಿ, “ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ನೆರವು ಒದಗಿಸಲಾಗಿದೆ. ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

ವಿಮಾನದಲ್ಲಿದ್ದ 134 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ವಿಮಾನದಿಂದ ಹೊರಬಂದಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಕಾಂಗ್ರೆಸ್ ನಮ್ಮ ಗರ್ಭಗುಡಿ, ನಾಯಕರ ನಿರ್ಧಾರವೇ ಅಂತಿಮ: ಸಚಿವ ಸ್ಥಾನದ ಕುರಿತು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ತಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. “ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ. ಕಾಂಗ್ರೆಸ್ ನಮ್ಮ ಗರ್ಭಗುಡಿ. ಪಕ್ಷದ ನಾಯಕರು ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರು. ಸಾಮಾನ್ಯ ವ್ಯಕ್ತಿಯಾಗಿದ್ದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಹೀಗಾಗಿ ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ಸಿಗದಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಮಂತ್ರಿಯಾಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಚಿವ ಸ್ಥಾನ ಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. ನನಗೆ ಇನ್ನೂ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ” ಎಂದರು.

“ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಯಲ್ಲಿ ಭಾಗವಹಿಸುವುದಿಲ್ಲ” ಎಂದು ಪ್ರದೀಪ್ ಈಶ್ವರ್ ಹೇಳಿದರು.

ಇದೇ ವೇಳೆ 2028ರ ವಿಧಾನಸಭೆ ಚುನಾವಣೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, “ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ನಂಬಿಕೆ ಇದೆ” ಎಂದು ತಿಳಿಸಿದರು.

ಸಚಿವ ಸ್ಥಾನ ಕೈತಪ್ಪಿದ ಬೇಸರ; ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ

ತುಮಕೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಅಸಮಾಧಾನದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ್, ಸಚಿವ ಸ್ಥಾನ ನೀಡಬೇಕು ಎಂದು ಜನರು ಹೇಳುತ್ತಾರೆ. ಆದರೆ ಯಾರಿಂದ ಹೇಳಿಸಬೇಕಿತ್ತೋ ಅವರು ಹೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ರಾಜಕೀಯದಲ್ಲಿ ನಮ್ಮಂತಹ ಸಾಮಾನ್ಯ ರೈತನ ಮಕ್ಕಳು ಮೇಲೆ ಬರುವುದು ಕಷ್ಟ. ನಮಗೆ ಗಾಡ್‌ಫಾದರ್ ಇರಲಿಲ್ಲ. ಹೀಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಅನಿಸುತ್ತಿದೆ. ಜಗಳ ಮಾಡಿ ಸ್ಥಾನ ಪಡೆಯಲು ಅದೇನು ನಮ್ಮ ಅಪ್ಪನ ಆಸ್ತಿಯಲ್ಲ. ನಮಗೆ ಯೋಗ್ಯತೆ ಇಲ್ಲ ಎಂಬ ಅರ್ಥವೂ ಆಗುತ್ತದೆ” ಎಂದು ಅಸಮಾಧಾನ ಹೊರಹಾಕಿದರು.

ರಾಜಕೀಯದ ಹೊಸ ಪಾಠ ಈಗ ಅರ್ಥವಾಗುತ್ತಿದೆ. ಪ್ರಾಮಾಣಿಕತೆಗೆ ಎಷ್ಟು ಬೆಲೆ ಇದೆ ಎಂಬುದರ ಬಗ್ಗೆ ಈಗ ಪ್ರಶ್ನೆ ಮೂಡಿದೆ. ರಾಜಕೀಯದಲ್ಲಿ ಡಬಲ್ ಗೇಮ್ ಹಾಗೂ ಮೋಸ ನಡೆಯುತ್ತಿದೆ ಎಂದು ಆರೋಪಿಸಿದರು.

“ನನಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ ಈಗ ಅವಕಾಶ ವಂಚಿತನಾಗಿದ್ದೇನೆ. ನಮ್ಮ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡಬಹುದಿತ್ತು. ಬಡವನ ಕೋಪ ದವಡೆಗೆ ಮೂಲ. ಇನ್ನೂ ಒಂದೂವರೆ ವರ್ಷ ಸಮಯ ಇದೆ. ಕಾರ್ಯಕರ್ತರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ” ಎಂದು ಹೇಳಿದರು.

ಇದೇ ವೇಳೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ ಅವರು, “ಕೆಎಸ್‌ಆರ್‌ಟಿಸಿ ನಷ್ಟದಲ್ಲಿದೆ. ಯಾವುದೇ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾಳೆ ತೆರಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆ, ಇದೀಗ ಎಸ್.ಆರ್. ಶ್ರೀನಿವಾಸ್ ಅವರ ರಾಜೀನಾಮೆ ಘೋಷಣೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

UFC fighter: ನಿದ್ರೆಯಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದ 34 ವರ್ಷದ ಕ್ರೀಡಾಪಟು!

0

ಕ್ರೀಡಾಲೋಕಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದ್ದು, ಪ್ರಸಿದ್ಧ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (MMA) ಪ್ರಚಾರ ಸಂಸ್ಥೆ ಯುಎಫ್‌ಸಿಯ ಪ್ರತಿಭಾವಂತ ಫೈಟರ್ ಬ್ರೆಜಿಲ್‌ನ ಅಲ್ಲಾನ್ ನಾಸಿಮೆಂಟೊ ನಿಧನರಾಗಿದ್ದಾರೆ.

ನಿದ್ರೆಯಲ್ಲಿದ್ದಾಗ ಸಂಭವಿಸಿದ ಹೃದಯಾಘಾತದಿಂದ ಅಲ್ಲಾನ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಬೆಳಗ್ಗೆ ತಮ್ಮ ಮನೆಯಲ್ಲಿ ಅವರು ಅಸ್ವಾಭಾವಿಕ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ವೈದ್ಯಕೀಯ ತಂಡ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿತ್ತು. ಆದರೆ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅಲ್ಲಾನ್ ನಾಸಿಮೆಂಟೊ ಅವರ ನಿಧನವನ್ನು ಯುಎಫ್‌ಸಿ ಅಧಿಕೃತವಾಗಿ ದೃಢಪಡಿಸಿದ್ದು, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಸಂತಾಪ ಸೂಚಿಸಿದೆ. ಅಲ್ಲಾನ್ ನಾಸಿಮೆಂಟೊ ಅವರು 2011ರಲ್ಲಿ ವೃತ್ತಿಪರ ಎಂಎಂಎ ವೃತ್ತಿಜೀವನ ಆರಂಭಿಸಿದ್ದರು. ಬಳಿಕ 2021ರಲ್ಲಿ ಯುಎಫ್‌ಸಿಗೆ ಸೇರ್ಪಡೆಯಾಗಿದ್ದರು.

ತಮ್ಮ ಒಟ್ಟಾರೆ ಎಂಎಂಎ ವೃತ್ತಿಜೀವನದಲ್ಲಿ ಅವರು 22 ಗೆಲುವು ಮತ್ತು 7 ಸೋಲುಗಳ ದಾಖಲೆ ಹೊಂದಿದ್ದರು. ಯುಎಫ್‌ಸಿಯಲ್ಲಿ ಅವರು 4-2 ದಾಖಲೆ ನಿರ್ಮಿಸಿದ್ದರು. ಈ ವರ್ಷದ ಜೂನ್‌ನಲ್ಲಿ ಮಿಚ್ ರಾಪೋಸೊ ವಿರುದ್ಧ ನಡೆದ ಪಂದ್ಯವೇ ಅವರ ವೃತ್ತಿಜೀವನದ ಕೊನೆಯ ಹೋರಾಟವಾಗಿತ್ತು.

ಅಲ್ಲಾನ್ ನಾಸಿಮೆಂಟೊ ಕೇವಲ ಒಬ್ಬ ಫೈಟರ್ ಆಗಿರದೆ, ತಮ್ಮ ಶಿಸ್ತು, ಸರಳತೆ ಮತ್ತು ವಿನಯಶೀಲತೆಗೆ ಹೆಸರಾಗಿದ್ದರು. ಶೂಟ್ ಬಾಕ್ಸೆ ತಂಡವು ಅವರನ್ನು ಒಬ್ಬ ಶ್ರೇಷ್ಠ ಯೋಧ ಹಾಗೂ ಅದ್ಭುತ ವ್ಯಕ್ತಿ ಎಂದು ಸ್ಮರಿಸಿದೆ. ಅಲ್ಪ ವಯಸ್ಸಿನಲ್ಲೇ ಪ್ರತಿಭಾವಂತ ಫೈಟರ್ ಒಬ್ಬರನ್ನು ಕಳೆದುಕೊಂಡಿರುವುದು ಎಂಎಂಎ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ರಾಜೀನಾಮೆ ನೀಡುವವರನ್ನು ತಡೆಯಲು ಸಾಧ್ಯವಿಲ್ಲ: ಪಕ್ಷವೇ ಮುಖ್ಯ ಎಂದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು, ರಾಜೀನಾಮೆ ನೀಡಲು ಮುಂದಾಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅದನ್ನು ಅಂಗೀಕರಿಸುತ್ತೇನೆ. ಇದೆಲ್ಲವೂ ರಾಜಕೀಯದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ರಾಜಕೀಯ ಭವಿಷ್ಯ ಬೇಕಾದರೆ ಪಕ್ಷವೇ ಮುಖ್ಯ” ಎಂದು ಹೇಳಿದರು.

ಕೆಲವು ಶಾಸಕರು ರಾಜೀನಾಮೆ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ಹಿಂದಿನ ರಾಜಕೀಯ ಅನುಭವವನ್ನು ಉಲ್ಲೇಖಿಸಿದರು.

“ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಮತ್ತು ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಸಿಗಲಿಲ್ಲ. ಆಗ ನಾವೂ ರಾಜೀನಾಮೆ ನೀಡಬಹುದಿತ್ತು. ಆದರೆ ತಾಳ್ಮೆಯಿಂದ ಇದ್ದೆವು. ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಬಂಗಾರಪ್ಪ ಅವರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಬಳಿಕ ಅವರು ಮುಖ್ಯಮಂತ್ರಿಯಾದರು. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಹಲವು ಸಂದರ್ಭಗಳಲ್ಲಿ ಅವಕಾಶ ಸಿಗಲಿಲ್ಲ” ಎಂದು ಹೇಳಿದರು.

ಅಸಮಾಧಾನ ಹೊಂದಿರುವ ಶಾಸಕರಿಗೆ ತಾಳ್ಮೆ ಅಗತ್ಯವಿದೆ ಎಂದು ಸಲಹೆ ನೀಡಿದ ಡಿ.ಕೆ. ಶಿವಕುಮಾರ್, “ಎಲ್ಲಕ್ಕಿಂತ ಪಕ್ಷ ಮುಖ್ಯ. ನಿಗಮ, ಮಂಡಳಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಇರುವವರು ರಾಜೀನಾಮೆ ನೀಡುವಂತೆ ಸೂಚಿಸುತ್ತೇನೆ. ಅಧಿಕಾರ ಹಂಚಿಕೆ ಕುರಿತು ಮೊದಲೇ ಎರಡುವರೆ ವರ್ಷದ ಅವಧಿಯ ಬಗ್ಗೆ ತಿಳಿಸಲಾಗಿತ್ತು” ಎಂದರು.

ಮೊದಲು ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಬಳಿಕ ಶಾಸಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಹೊಸ ಬೆಳವಣಿಗೆಗಳಿದ್ದರೆ ತಾವೇ ಮಾಧ್ಯಮಗಳ ಮುಂದೆ ಮಾಹಿತಿ ನೀಡುವುದಾಗಿ ಹೇಳಿದರು.