Home Blog

ಪಾರಿವಾಳ ಕದ್ದಿದ್ದಾನೆಂಬ ಆರೋಪ; ಬಾಲಕನ ಮೇಲೆ ಹಲ್ಲೆ ಮಾಡಿ ಆರೋಪಿ ಎಸ್ಕೇಪ್!

0

ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.

ಶಿವು ಅಲಿಯಾಸ್ ಬಸವ ಎಂಬಾತ ಪಾರಿವಾಳ ಸಾಕಾಣಿಕೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಪ್ರದೇಶದ ಬಾಲಕನೊಬ್ಬ ಪಾರಿವಾಳ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ, ಆತನನ್ನು ಕಟ್ಟಿ ಹಾಕಿ ಶಿವು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಹಲ್ಲೆಯಿಂದ ಬಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಆರೋಪಿ ಶಿವು ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಗದಗ ಬರ ಘೋಷಣೆಗೆ ಡೆಡ್‌ಲೈನ್; ಎಚ್.ಕೆ. ಪಾಟೀಲ್ ಸ್ಫೋಟಕ ಘೋಷಣೆ!

0

ಗದಗ: ಗದಗ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದಕ್ಕೆ ರೈತರ ಆಕ್ರೋಶ ಕಟ್ಟೆಯೊಡೆದ ಬೆನ್ನಲ್ಲೇ ಶಾಸಕ ಎಚ್.ಕೆ. ಪಾಟೀಲ್ ಸರ್ಕಾರಕ್ಕೆ ಖಡಕ್ ಗಡುವು ನೀಡಿದ್ದಾರೆ.

ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿರುವುದು ಹೋರಾಟದ ಕಾವು ಮತ್ತಷ್ಟು ಹೆಚ್ಚಿಸಿದೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರು ಭಾನುವಾರ ಭಾರೀ ಪ್ರತಿಭಟನೆ ನಡೆಸಿದರು. ಪಟ್ಟಣದ ಗಣೇಶ ಗುಡಿಯಿಂದ ಬಸಾಪುರ ಕ್ರಾಸ್‌ವರೆಗೆ ಮೆರವಣಿಗೆ ನಡೆಸಿದ ರೈತರು, ಬಳಿಕ ಗದಗ–ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಚ್.ಕೆ. ಪಾಟೀಲ್, ಹೋರಾಟಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಸರ್ಕಾರದ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ, ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗವನ್ನು ಕೈಬಿಟ್ಟಿರುವುದಕ್ಕೆ ಅವರು ಪ್ರಶ್ನೆ ಎತ್ತಿದರು.

ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಗದಗದ ಬರ ಪರಿಸ್ಥಿತಿಯ ಕುರಿತು ಚರ್ಚಿಸಲಾಗಿತ್ತು. ಅಧಿಕಾರಿಗಳ ವರದಿ ಬಳಿಕ ಮುಖ್ಯಮಂತ್ರಿಗಳು ಗದಗ ಜಿಲ್ಲೆಗೆ ಭೇಟಿ ನೀಡಿ ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ಹಾನಿ ವೀಕ್ಷಣೆ ನಡೆಸಿದ್ದರು. ಇಷ್ಟೆಲ್ಲಾ ಆದರೂ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.

ರೈತರ ಪರಿಸ್ಥಿತಿ ತನಗೆ ಅರಿವಿದ್ದು, ರೈತ ಕುಟುಂಬದಿಂದ ಬಂದವನಾಗಿ ಅವರ ಸಂಕಷ್ಟವನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದ ಅವರು, ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

ಮೂರು ದಿನಗಳಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದ ಅವರು, ಅದು ಸಾಧ್ಯವಾಗದಿದ್ದರೆ ವಿಧಾನಸಭೆಯ ಮೂಲಕ ಸರ್ಕಾರಕ್ಕೆ ಅಕ್ಟೋಬರ್ 10ರ ಗಡುವು ನೀಡುವುದಾಗಿ ಸ್ಪಷ್ಟಪಡಿಸಿದರು. ಆ ಗಡುವಿನೊಳಗೆ ಗದಗ ತಾಲೂಕು ಬರಪೀಡಿತ ಎಂದು ಘೋಷಣೆಯಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಇದೇ ವೇಳೆ ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು. ಗದಗ ಸೇರಿದಂತೆ ಉತ್ತರ ಕರ್ನಾಟಕದ ಉಳಿದ ತಾಲೂಕುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಬರ ಘೋಷಣೆಗೆ ಆಗ್ರಹಿಸಿ ನಡೆದ ರೈತರ ಹೆದ್ದಾರಿ ತಡೆ ಪ್ರತಿಭಟನೆಯಿಂದ ಮುಳಗುಂದದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತರ ಹೋರಾಟಕ್ಕೆ ಶಾಸಕ ಎಚ್.ಕೆ. ಪಾಟೀಲ್ ನೀಡಿದ ರಾಜೀನಾಮೆ ಗಡುವು ಇದೀಗ ಸರ್ಕಾರದ ಮುಂದಿನ ನಿರ್ಧಾರದತ್ತ ಗಮನ ಸೆಳೆದಿದೆ.

ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಮಳೆ ಅವಾಂತರ: ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು

0

ಆನೇಕಲ್: ರಾತ್ರಿ ಸುರಿದ ಭಾರೀ ಮಳೆಯಿಂದ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ಕೆಸರು ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಹಳೆ ಚಂದಾಪುರದ ಬಳಿ ಕಳೆದ ಒಂದು ವರ್ಷದಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡಿಲ್ಲದ ಹಿನ್ನೆಲೆಯಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು, ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಸೂರ್ಯನಗರ ಪೊಲೀಸರು ಸ್ಥಳದಲ್ಲಿ ಸಂಚಾರ ನಿರ್ವಹಣೆ ಮಾಡಿದ್ದಾರೆ.

ಪ್ರತಿದಿನ ಕಾಮಗಾರಿ ಹಾಗೂ ಟ್ರಾಫಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ವಾಹನ ಸವಾರರು, ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅಟ್ಟಹಾಸ: ಇಬ್ಬರು ಪುಡಿರೌಡಿಗಳ ಬಂಧನ!

0

ಬೆಂಗಳೂರು: ನಡುರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಇಬ್ಬರು ಯುವಕರನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನದೀಂ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಜಯನಗರದ 9ನೇ ಬ್ಲಾಕ್‌ನಲ್ಲಿ ಇಬ್ಬರು ಲಾಂಗ್ ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಓಡಾಡಿದ್ದರು ಎನ್ನಲಾಗಿದೆ.

ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ತಿಲಕ್ ನಗರ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಇಬ್ಬರನ್ನೂ ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಸ್ಥಳೀಯರು ಹಾಗೂ ವ್ಯಾಪಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಮಂಗಳೂರಿನಲ್ಲಿ ದುರಂತ ಘಟನೆ: ಕೌಟುಂಬಿಕ ಕಲಹಕ್ಕೆ 3 ವರ್ಷದ ಮಗು ಬಲಿ!

0

ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದಿದೆ.

ನೂರುನ್ನೀಸಾ (28) ಹಾಗೂ ಅವರ ಪತಿ ಸಿನಾನ್ (32) ನಡುವೆ ಇಂದು ಫೋನ್‌ನಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನೀಸಾ, ಪತಿಯ ತಂಗಿಯ ಮಗುವಿನ ಜೊತೆಗೆ ತನ್ನ ಮಗುವನ್ನೂ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಬಾವಿಗೆ ಇಳಿದು ಇಬ್ಬರು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನೀಸಾ ಅವರ ಸುಮಾರು ಮೂರೂವರೆ ವರ್ಷದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ನೂರುನ್ನೀಸಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಐಷಾರಾಮಿ ಆಡಿ ಕಾರಿನೊಳಗೆ ರಿಯಲ್ ಎಸ್ಟೇಟ್ ಉದ್ಯಮಿ ಸಾವು: ಹೃದಯಾಘಾತ ಶಂಕೆ!

0

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಳಗ್ಗೆ ಕಾರಿನ ಬಳಿ ಬಂದ ಹೋಟೆಲ್ ಸಿಬ್ಬಂದಿ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ರಾತ್ರಿ ಸುಮಾರು 2.36ಕ್ಕೆ ಕೋರಮಂಗಲ ಠಾಣೆ ಮುಂಭಾಗದ ಫಾಸ್ಟ್‌ಫುಡ್ ಹೋಟೆಲ್ ಬಳಿ KA-51-MG-9786 ನೋಂದಣಿ ಸಂಖ್ಯೆಯ ಆಡಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಬೆಳಗ್ಗೆ ಕಾರಿನ ಬಾಗಿಲು ತೆರೆದಿರುವುದನ್ನು ಗಮನಿಸಿದ ಸಿಬ್ಬಂದಿ ಒಳಗಿದ್ದ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಕೋರಮಂಗಲ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರನ್ನು ಸಲೀಂ ಅಕ್ಬರ್ ಎಂದು ಗುರುತಿಸಲಾಗಿದ್ದು, ಅವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎನ್ನಲಾಗಿದೆ.

ವ್ಯವಹಾರ ಸಂಬಂಧ ಬೆಂಗಳೂರಿಗೆ ಬಂದಿದ್ದ ಸಲೀಂ ಅಕ್ಬರ್, ರಾತ್ರಿ ಕಾರನ್ನು ಹೋಟೆಲ್ ಮುಂಭಾಗ ನಿಲ್ಲಿಸಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಕೋರಮಂಗಲ ಪೊಲೀಸರು ಹಾಗೂ ಸೋಕೋ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ವ್ಹೀಲಿಂಗ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ!

0

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಿಕೊಳ್ಳಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ.

ನಿನ್ನೆ ಮಧ್ಯರಾತ್ರಿ ದೇವಸ್ಥಾನದ ಬಳಿಯ ರಿಂಗ್ ರಸ್ತೆಯಲ್ಲಿ ಕೆಲವರು ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಟಿಟಿ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಮನೋಜ್ ಎಂದು ಗುರುತಿಸಲಾಗಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಬೆಂಗಳೂರಿನಲ್ಲಿ 10 ಗ್ರಾಂಗೆ 1,42,850, ಬೆಳ್ಳಿ ದರವೂ ಹೆಚ್ಚಳ!

0

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಸುಮಾರು 275ರಷ್ಟು ಹೆಚ್ಚಾಗಿದ್ದು, ವಾರಾಂತ್ಯದಲ್ಲಿ ಪ್ರತಿ ಗ್ರಾಂಗೆ 130 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ಪ್ರತಿ ಗ್ರಾಂಗೆ ಸುಮಾರು 10 ರೂ. ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,584
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,285
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,688
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
  • ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ:
    • ಬೆಂಗಳೂರು: 14,285 ರೂ
    • ಚೆನ್ನೈ: 14,285 ರೂ
    • ಮುಂಬೈ: 14,285 ರೂ
    • ದೆಹಲಿ: 14,300
    • ಕೋಲ್ಕತಾ: 14,285 ರೂ
    • ಕೇರಳ: 14,285 ರೂ
    • ಅಹ್ಮದಾಬಾದ್: 14,290 ರೂ
    • ಜೈಪುರ್: 14,300
    • ಲಕ್ನೋ: 14,300
    • ಭುವನೇಶ್ವರ್: 14,285 ರೂ.

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

0

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಕೆಲವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಟಿ.ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗಳ ಬಳಿಕ ವಿವಾದ ತೀವ್ರಗೊಂಡಿತ್ತು. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೋಭಾಯಾತ್ರೆ ನಡೆಸಲಾಗಿದ್ದು, ಈ ವೇಳೆ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಗುಂಪುಗಳು ಹಾಗೂ ಸಮುದಾಯಗಳ ನಡುವೆ ದ್ವೇಷಕ್ಕೆ ಉತ್ತೇಜನ ನೀಡುವುದು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಕೃತ್ಯಗಳ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಬಿಎನ್‌ಎಸ್‌ನ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ನೇ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

KSRP ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಸಜ್ಜಾದ KEA: 1.81 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು, 418 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

0

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೆಪ್ಟೆಂಬರ್ 20ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಿಕ್ಕುಳಿದ ವೃಂದದ ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ ಒಟ್ಟು 1,42,912 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ 38,332 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಕೆಇಎ ಸೂಚಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ ಮೂಲಕ ಕಣ್ಗಾವಲು ಇರಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ವೆಬ್‌ಕಾಸ್ಟಿಂಗ್ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.