Home Blog

HIV ಸೋಂಕಿತರಲ್ಲಿ ಹೃದಯಾಘಾತದ ಅಪಾಯ ಹೆಚ್ಚು? ಜಯದೇವ ತಜ್ಞ ವೈದ್ಯರಿಂದ ಮಹತ್ವದ ಎಚ್ಚರಿಕೆ!

0

ಬೆಂಗಳೂರು: ಎಚ್‌ಐವಿ (HIV) ಸೋಂಕಿತರಲ್ಲಿ ವೈರಸ್‌ ನಿಯಂತ್ರಣದಲ್ಲಿದ್ದರೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿರಬಹುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (SJICR) ತಜ್ಞ ವೈದ್ಯರು ಎಚ್ಚರಿಸಿದ್ದಾರೆ.

ವೈದ್ಯರ ಪ್ರಕಾರ, ಎಚ್‌ಐವಿ ಸೋಂಕು ದೇಹದಲ್ಲಿ ದೀರ್ಘಕಾಲದ ಉರಿಯೂತಕ್ಕೆ ಕಾರಣವಾಗಬಹುದು. ಇದರಿಂದ ರಕ್ತನಾಳಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತನಾಳಗಳು ಗಟ್ಟಿಯಾಗುವ ಸಮಸ್ಯೆ ಉಂಟಾಗಬಹುದು. ಪರಿಣಾಮವಾಗಿ ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ.

ART ಚಿಕಿತ್ಸೆ ಪಡೆದರೂ ಹೃದಯದ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ:

ಜಯದೇವ ಹೃದ್ರೋಗ ಸಂಸ್ಥೆಯ ಹೃದ್ರೋಗ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಸಂಶೋಧನಾ ಮುಖ್ಯಸ್ಥ ಡಾ. ಎಚ್.ಎಸ್. ನಟರಾಜ್ ಶೆಟ್ಟಿ ಅವರ ಪ್ರಕಾರ, ಸುಧಾರಿತ ಆಂಟಿರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆಯಿಂದ ಎಚ್‌ಐವಿ ಸೋಂಕಿತರ ಜೀವಿತಾವಧಿ ಹೆಚ್ಚಾಗಿದೆ.

ಆದರೆ ವಯಸ್ಸು ಹೆಚ್ಚಾದಂತೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಇವುಗಳ ಜೊತೆಗೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.

ಹೀಗಾಗಿ ಎಚ್‌ಐವಿ ಸೋಂಕಿತರು ಕೇವಲ ವೈರಸ್‌ ನಿಯಂತ್ರಣದತ್ತ ಮಾತ್ರ ಗಮನ ಹರಿಸದೆ, ಹೃದಯದ ಆರೋಗ್ಯದ ಬಗ್ಗೆಯೂ ನಿಯಮಿತವಾಗಿ ಕಾಳಜಿ ವಹಿಸುವುದು ಅಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ:

ಎಚ್‌ಐವಿ ಸೋಂಕಿತರು ವರ್ಷಕ್ಕೆ ಕನಿಷ್ಠ ಒಮ್ಮೆಯಾದರೂ ಇಸಿಜಿ (ECG), ಲಿಪಿಡ್ ಪ್ರೊಫೈಲ್ ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಅಲ್ಲದೆ ಧೂಮಪಾನ ಹಾಗೂ ಮದ್ಯಪಾನದಿಂದ ದೂರವಿದ್ದು, ಪೌಷ್ಟಿಕ ಆಹಾರ ಸೇವಿಸುವುದು ಮತ್ತು ನಿಯಮಿತವಾಗಿ ದೈಹಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು ಮುಖ್ಯವಾಗಿದೆ.

ಎಚ್‌ಐವಿ ಚಿಕಿತ್ಸೆಯ ಜೊತೆಗೆ ಅಗತ್ಯವಿದ್ದಲ್ಲಿ ಹೃದ್ರೋಗ ತಜ್ಞರ ಸಲಹೆಯನ್ನೂ ಪಡೆಯಬೇಕು. ಹೃದಯ ಸಂಬಂಧಿ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಗಂಭೀರ ತೊಂದರೆಗಳನ್ನು ತಡೆಯಲು ಸಹಾಯವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಪಂಪ್‌ಸೆಟ್ ಕಳ್ಳರು ಬಲೆಗೆ! 9.30 ಲಕ್ಷ ರೂ. ಮೌಲ್ಯದ ಸೊತ್ತು ಪತ್ತೆ

0

ಗದಗ: ರೈತರ ಜಮೀನುಗಳಲ್ಲಿ ಅಳವಡಿಸಿದ್ದ ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರ ಜಾಲವನ್ನು ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 9 ಲಕ್ಷ 30 ಸಾವಿರ ರೂ. ಮೌಲ್ಯದ 11 ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳು ಹಾಗೂ ಕಳ್ಳತನದ ಕೃತ್ಯಕ್ಕೆ ಬಳಸಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಮುಂಡರಗಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 13, 2026ರಂದು ಅಪರಾಧ ಸಂಖ್ಯೆ 167/2026, ಕಲಂ 303(2) ಬಿಎನ್‌ಎಸ್-2023ರಡಿ ಪ್ರಕರಣ ದಾಖಲಾಗಿತ್ತು. ರೈತರ ಜಮೀನುಗಳಿಂದ ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳು ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳು ಹಾಗೂ ಕಳುವಾಗಿದ್ದ ಸೊತ್ತುಗಳ ಪತ್ತೆಗೆ ವ್ಯಾಪಕ ತನಿಖೆ ಆರಂಭಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅವರು ಕಳ್ಳತನ ಪ್ರಕರಣ ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದರು.

ನರಗುಂದ ಉಪವಿಭಾಗದ ಡಿವೈಎಸ್‌ಪಿ ಪ್ರಭುಗೌಡ ಕಿರೇದಳ್ಳಿ ಅವರ ಮಾರ್ಗದರ್ಶನದಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಯ್ಯನಗೌಡ ಪಾಟೀಲ, ಸಬ್‌ಇನ್‌ಸ್ಪೆಕ್ಟರ್ ಬಿ.ಎನ್. ಯಳವತ್ತಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು.

ತನಿಖೆಯ ವೇಳೆ ಆಗಸ್ಟ್ 29ರಂದು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಟ್ರ್ಯಾಕ್ಟರ್ ಚಾಲಕ ಮರಿಯಪ್ಪ ಅಲಿಯಾಸ್ ಮುತ್ತು ತಂದೆ ದುರ್ಗೇಶ್ ಚವಡಾಳ (22), ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಗಾರೆ ಕೆಲಸಗಾರ ಮರಿಯಪ್ಪ ತಂದೆ ಹನುಮಂತಪ್ಪ ಚವಡಾಳ (20), ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಬೇಕರಿ ಕೆಲಸಗಾರ ವಿನಾಯಕ ತಂದೆ ಹಾಲಪ್ಪ ಮಡಿವಾಳರ (26) ಹಾಗೂ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದ ಬಾಂಡೆ ಸಾಮಾನು ವ್ಯಾಪಾರಿ ಪ್ರಕಾಶ ತಂದೆ ಈರಪ್ಪ ಕಾಕಡೆ (36) ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಮುಂಡರಗಿ ತಾಲೂಕಿನ ವಿಠಲಾಪೂರ ಗ್ರಾಮ ಹಾಗೂ ಶಿರಹಟ್ಟಿ ತಾಲೂಕಿನ ತೊಳಲಿ ಮತ್ತು ಹೊಳೆಇಟಗಿ ಗ್ರಾಮಗಳ ವ್ಯಾಪ್ತಿಯಲ್ಲಿ ರೈತರು ಅಳವಡಿಸಿದ್ದ ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳನ್ನು ಕಳ್ಳತನ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.

ಈ ನಾಲ್ವರು ಆರೋಪಿಗಳು ಒಟ್ಟು 11 ನೀರೆತ್ತುವ ಮೋಟರ್ ಪಂಪ್‌ಸೆಟ್‌ಗಳನ್ನು ಕಳ್ಳತನ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿಗಳಿಂದ ಸುಮಾರು 9 ಲಕ್ಷ 30 ಸಾವಿರ ರೂ. ಮೌಲ್ಯದ ಕಳವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕಳ್ಳತನದ ಕೃತ್ಯಕ್ಕೆ ಬಳಸಲಾಗಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ಸಹ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.

ರೈತರ ಜಮೀನುಗಳಲ್ಲಿನ ಪಂಪ್‌ಸೆಟ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ನಡೆಸುತ್ತಿದ್ದ ಆರೋಪಿಗಳ ಜಾಲವನ್ನು ಭೇದಿಸುವಲ್ಲಿ ಮುಂಡರಗಿ ಪೊಲೀಸ್ ತಂಡ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಯ್ಯನಗೌಡ ಪಾಟೀಲ, ಸಬ್‌ಇನ್‌ಸ್ಪೆಕ್ಟರ್ ಬಿ.ಎನ್. ಯಳವತ್ತಿ, ಸಿಬ್ಬಂದಿಗಳಾದ ಜೆ.ಐ. ಬಚ್ಚೇರಿ, ಅಶೋಕ್ ಬೂದಿಹಾಳ, ಮಂಜುನಾಥ ಅಗಸಿಮನಿ, ವಿರೇಶ ಮೂರಶಿಳ್ಳಿ, ಎಚ್.ಕೆ. ನದಾಫ್, ಆನಂದ ಲಮಾಣಿ, ಅಣ್ಣಪ್ಪ ಕವಲೂರ ಹಾಗೂ ನಾಗರಾಜ ಹರಪನಹಳ್ಳಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ರೈತರ ಪಂಪ್‌ಸೆಟ್‌ಗಳನ್ನೇ ಗುರಿಯಾಗಿಸಿಕೊಂಡು ನಡೆದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸಿ, ಕಳುವಾದ ಸೊತ್ತುಗಳ ಜತೆಗೆ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವನ್ನು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರು ಶ್ಲಾಘಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಬಹುಮಾನವನ್ನೂ ಘೋಷಿಸಿದ್ದಾರೆ.

ಡಾಲ್ಡಾ, ಕೆಮಿಕಲ್ ಹಾಕಿ ‘ನಾಟಿ ತುಪ್ಪ’ ತಯಾರಿ! ಚಿಕ್ಕಮಗಳೂರಿನಲ್ಲಿ ಬಯಲಾಯ್ತು ಭಾರೀ ದಂಧೆ

0

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 30 ಕೆ.ಜಿ.ಗೂ ಅಧಿಕ ನಕಲಿ ನಾಟಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.

ಮನೆಯೊಂದರಲ್ಲಿ ಡಾಲ್ಡಾ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತುಪ್ಪ ತಯಾರಿಸಲಾಗುತ್ತಿತ್ತು ಎನ್ನುವುದು ದಾಳಿ ವೇಳೆ ಬೆಳಕಿಗೆ ಬಂದಿದೆ. ಬಳಿಕ ಇದೇ ನಕಲಿ ತುಪ್ಪವನ್ನು ನಾಟಿ ತುಪ್ಪ ಎಂದು ಬಿಂಬಿಸಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದ್ದಂತೆ ದಂಧೆಕೋರರು ಮನೆಯ ಬಾಗಿಲಿಗೆ ಬೀಗ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹೀಗಾಗಿ ಆರೋಪಿಗಳು ಸ್ಥಳದಲ್ಲಿ ಸಿಗದೆ, ನಕಲಿ ತುಪ್ಪ ಹಾಗೂ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಳೆದ ವಾರವೂ ದಾಳಿ:

ಚಿಕ್ಕಮಗಳೂರು ನಗರದಲ್ಲಿ ನಕಲಿ ತುಪ್ಪದ ದಂಧೆ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದೆ. ಕಳೆದ ವಾರವೂ ಪಾಳುಬಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿ ನಕಲಿ ತುಪ್ಪವನ್ನು ವಶಕ್ಕೆ ಪಡೆಯಲಾಗಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಳ್ಳಾರಿ ಮೂಲದ ಒಂದೇ ತಂಡ ನಿರಂತರವಾಗಿ ಚಿಕ್ಕಮಗಳೂರು ನಗರದಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ.

ನಗರ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ದಂಧೆಯ ಹಿಂದೆ ಯಾರಿದ್ದಾರೆ, ನಕಲಿ ತುಪ್ಪವನ್ನು ಎಲ್ಲೆಲ್ಲಿ ಮಾರಾಟ ಮಾಡಲಾಗುತ್ತಿತ್ತು ಹಾಗೂ ಇದರಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ನಕಲಿ ತುಪ್ಪವನ್ನು ನಾಟಿ ತುಪ್ಪ ಎಂದು ಮಾರಾಟ ಮಾಡಲಾಗುತ್ತಿದ್ದು, ಈ ಮೂಲಕ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ತುಪ್ಪ ಹಾಗೂ ಇತರ ವಸ್ತುಗಳ ಮಾದರಿಗಳನ್ನು ಪರಿಶೀಲನೆಗೆ ಒಳಪಡಿಸುವ ಸಾಧ್ಯತೆಯಿದೆ.

‘ಅಲ್ಲೇ ಇದ್ದಿದ್ದರೆ ವಾಶ್‌ಔಟ್ ಆಗುತ್ತಿದ್ದೆವು’… ನೇಪಾಳ ಪ್ರವಾಹದಿಂದ ಪಾರಾದ ಕನ್ನಡಿಗರ ಬೆಚ್ಚಿಬೀಳಿಸುವ ಅನುಭವ!

0

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಭಾರೀ ದುರಂತ ಸಂಭವಿಸಿದೆ.

ದಿನದಿಂದ ದಿನಕ್ಕೆ ಮೃತರ ಸಂಖ್ಯೆ ಹೆಚ್ಚುತ್ತಿದ್ದು, ಹಲವು ಪ್ರದೇಶಗಳಲ್ಲಿ ಮೃತದೇಹಗಳು ಪತ್ತೆಯಾಗುತ್ತಿವೆ. ಸದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದೆ. ಇನ್ನೂ 2,400ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚುವ ಕಾರ್ಯ ಭರದಿಂದ ಸಾಗಿದೆ.

ಪ್ರವಾಹದಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳು ಹಾಗೂ ಪ್ರವಾಹದ ನೀರಿನ ನಡುವೆ ಸಿಲುಕಿರುವವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಈ ನಡುವೆ ನೇಪಾಳದಲ್ಲಿ ಸಿಲುಕಿದ್ದ 108 ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಇನ್ನೂ 330ಕ್ಕೂ ಅಧಿಕ ಭಾರತೀಯರು ಸಂಪರ್ಕಕ್ಕೆ ಸಿಗದೆ ಇರುವುದರಿಂದ ಅವರ ಪತ್ತೆಗಾಗಿ ಪ್ರಯತ್ನ ಮುಂದುವರಿದಿದೆ. ಚೀನಾದಲ್ಲೂ ಸುಮಾರು 400 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಬೆಂಗಳೂರಿಗೆ ಮರಳಿದ 54 ಕನ್ನಡಿಗರು:

ನೇಪಾಳ ಪ್ರವಾಸಕ್ಕೆ ತೆರಳಿದ್ದ 54 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ದುರಂತಕ್ಕೂ ಮುನ್ನ ತಾವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾಗಿ ಪ್ರವಾಸಿಗರೊಬ್ಬರು ತಿಳಿಸಿದ್ದಾರೆ.

“ನಾವು ಪ್ರವಾಹದ ಹಿಂದಿನ ದಿನವೇ ಆ ಸ್ಥಳಕ್ಕೆ ಭೇಟಿ ನೀಡಿದ್ದೆವು. ನಾವು ಅಲ್ಲಿ ಇದ್ದಿದ್ದರೆ ವಾಶ್‌ಔಟ್ ಆಗುತ್ತಿದ್ದೆವು” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ನೇಪಾಳದಲ್ಲಿ ಕಂಡುಬಂದ ಭೀಕರ ಪರಿಸ್ಥಿತಿಯ ಬಗ್ಗೆ ವಿವರಿಸಿದ ಅವರು, ಹಲವು ಕಡೆ ಗುಡ್ಡ ಕುಸಿತ ಸಂಭವಿಸಿದ್ದು, ಮಂಜು ಕರಗಿ ನೀರಿನ ಪ್ರಮಾಣ ಹೆಚ್ಚಾಗಿತ್ತು ಎಂದು ತಿಳಿಸಿದ್ದಾರೆ.

ಸದ್ಯ ನೇಪಾಳದ ವಿವಿಧ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವವರ ಪತ್ತೆಗಾಗಿ ಅಧಿಕಾರಿಗಳು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ದುರಂತದಿಂದಾಗಿ ಹಲವು ಪ್ರದೇಶಗಳಲ್ಲಿ ಭಯ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ.

KPSC ಹಗರಣಕ್ಕೆ ಬಿಗ್ ಟ್ವಿಸ್ಟ್: IAS ಅಧಿಕಾರಿ ಬಂಧನ ಬೆನ್ನಲ್ಲೇ ಹಲವರಿಗೆ ಶುರುವಾಯ್ತು ಢವಢವ!

0

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಮತ್ತಷ್ಟು ಚುರುಕುಗೊಳಿಸಿದೆ.

ಪ್ರಕರಣದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಈಗಾಗಲೇ ಬಂಧಿಸಿರುವ ಬೆನ್ನಲ್ಲೇ, ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಕೆಲ ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ಆತಂಕ ಹೆಚ್ಚಾಗಿದೆ.

ಪ್ರಕರಣದ ತನಿಖೆ ವೇಳೆ ಕೆಲ ಮಹತ್ವದ ಸಾಕ್ಷ್ಯಗಳು ಪತ್ತೆಯಾಗಿದ್ದು, ವಿಚಾರಣೆಗೆ ಜ್ಞಾನೇಂದ್ರ ಕುಮಾರ್ ಸರಿಯಾಗಿ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆ.28ರಂದು ರಾತ್ರಿ 11 ಗಂಟೆಯವರೆಗೂ ಸಿಐಡಿ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿದ್ದರು. ಬಳಿಕ ಆ.29ರಂದು ಕೂಡ ಮಧ್ಯರಾತ್ರಿವರೆಗೂ ವಿಚಾರಣೆ ಮುಂದುವರಿಸಿದ್ದರು ಎನ್ನಲಾಗಿದೆ.

ವಿಚಾರಣೆ ವೇಳೆ ಓಎಂಆರ್ ಶೀಟ್‌ಗಳ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕುಮಾರ್ ಅವರ ಕೈವಾಡವಿತ್ತು ಎನ್ನುವುದಕ್ಕೆ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಅಭ್ಯರ್ಥಿಗಳನ್ನು ಕೆಲ ಹೋಟೆಲ್‌ಗಳು ಹಾಗೂ ರೆಸಾರ್ಟ್‌ಗಳಿಗೆ ಕರೆದೊಯ್ದು ತರಬೇತಿ ನೀಡಿದ ವಿಚಾರದಲ್ಲೂ ಅವರ ಪಾತ್ರವಿರುವ ಶಂಕೆ ಸಿಐಡಿ ಅಧಿಕಾರಿಗಳಿಗೆ ವ್ಯಕ್ತವಾಗಿದೆ ಎನ್ನಲಾಗಿದೆ.

ಇದೀಗ ಜ್ಞಾನೇಂದ್ರ ಕುಮಾರ್ ಅವರನ್ನು ಬಂಧಿಸಿರುವ ಸಿಐಡಿ, ಪ್ರಕರಣದ ಮತ್ತಷ್ಟು ಆಳಕ್ಕೆ ತೆರಳಿ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ಇತರ ಅಧಿಕಾರಿಗಳು, ಕೆಪಿಎಸ್‌ಸಿ ಸದಸ್ಯರು ಹಾಗೂ ಪ್ರಭಾವಿಗಳ ಪಾತ್ರವಿದೆಯೇ ಎಂಬ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ.

ನಾಲ್ಕು ನೇಮಕಾತಿ ಪರೀಕ್ಷೆಗಳ ಮೇಲೂ ಸಿಐಡಿ ಕಣ್ಣು:

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸೀಮಿತವಾಗದೆ, ಕಳೆದ ಮೂರು ವರ್ಷಗಳಲ್ಲಿ ನಡೆದ ಕೆಪಿಎಸ್‌ಸಿಯ ನಾಲ್ಕು ಪ್ರಮುಖ ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ಸಿಐಡಿ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಗಳ ಕುರಿತು ತನಿಖಾಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.

ಈ ನಾಲ್ಕೂ ನೇಮಕಾತಿ ಪ್ರಕ್ರಿಯೆಗಳಲ್ಲೂ ಅಕ್ರಮ ನಡೆದಿರುವ ಸಾಧ್ಯತೆ ಬಗ್ಗೆ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ತನಿಖೆ ಮುಂದುವರಿದಂತೆ ಪ್ರಕರಣದಲ್ಲಿ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ರೈತರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆಯ ಕೊರತೆ ಹಾಗೂ ಬೆಳೆ ನಷ್ಟದಿಂದ ಗದಗ ಜಿಲ್ಲೆಯ ಹಲವು ತಾಲೂಕುಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಕ್ರಮ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಬೆಳೆಗಳು ಒಣಗುತ್ತಿದ್ದು, ವಾಸ್ತವ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ವಿಶೇಷವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹತ್ತಿ, ಮೆಕ್ಕೆಜೋಳ, ಶೇಂಗಾ, ಉಳ್ಳಾಗಡ್ಡಿ ಹಾಗೂ ಮೆಣಸಿನಕಾಯಿ ಸೇರಿದಂತೆ ವಿವಿಧ ಮುಂಗಾರು ಬೆಳೆಗಳು ಒಣಗುತ್ತಿದ್ದು, ಬಿತ್ತನೆಗೆ ಮಾಡಿದ ವೆಚ್ಚವೂ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತೊಮ್ಮೆ ಪಾರದರ್ಶಕ ಬೆಳೆ ನಷ್ಟ ಸಮೀಕ್ಷೆ ನಡೆಸಿ, ನಿಜವಾದ ಬರ ಪರಿಸ್ಥಿತಿಯನ್ನು ಸರ್ಕಾರಕ್ಕೆ ವರದಿ ಮಾಡಬೇಕು. ಅರ್ಹ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಹಾಗೂ ಮಧ್ಯಂತರ ವಿಮೆ ಸೌಲಭ್ಯವನ್ನು ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ಕುರಿತು ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಭಾಗದ ಮೂವರು ರೈತರು ತಮ್ಮ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಬರ ಘೋಷಣೆ ಕ್ರಮವನ್ನು ಪ್ರಶ್ನಿಸಿದ್ದಾರೆ.

ಮುಂಗಾರು ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಜಿಲ್ಲೆಯ ರೈತರೆಲ್ಲರೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಮತ್ತೊಮ್ಮೆ ಪಾರದರ್ಶಕ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಪರಿಹಾರ ಹಾಗೂ ವಿಮಾ ಸೌಲಭ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಳಜಿ ವಹಿಸಬೇಕು. ರೈತರು ತಮ್ಮ ನ್ಯಾಯಯುತ ಬೇಡಿಕೆಗಳನ್ನೂ ಹೋರಾಟದ ಮೂಲಕವೇ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಬಾರದು. 

ವಿರೂಪಾಕ್ಷಪ್ಪ ಆದಿ, ರೈತ, ಲಕ್ಷ್ಮೇಶ್ವರ

ಶಿರಹಟ್ಟಿ ಮತಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ರೈತರು ಬಿತ್ತನೆಗೆ ಮಾಡಿದ ಖರ್ಚನ್ನೂ ವಾಪಸ್ ಪಡೆಯಲಾಗದೆ ಸಂಕಷ್ಟದಲ್ಲಿದ್ದಾರೆ. ಹತ್ತಿ, ಮೆಕ್ಕೆಜೋಳ, ಶೇಂಗಾ, ಉಳ್ಳಾಗಡ್ಡಿ ಹಾಗೂ ಮೆಣಸಿನಕಾಯಿ ಬೆಳೆಗಳು ಒಣಗಿ ನಿಂತಿವೆ. ಬರದ ಪರಿಸ್ಥಿತಿ ಕಣ್ಣಿಗೆ ಕಾಣುತ್ತಿದ್ದರೂ, ಈ ಮೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ಖಂಡನೀಯ. ಕೂಡಲೇ ಎರಡನೇ ಹಂತದಲ್ಲಿ ಈ ಮೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಮಧ್ಯಂತರ ವಿಮೆ ನೀಡಬೇಕು. ಇಲ್ಲವಾದರೆ ಸರ್ಕಾರ ರೈತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

ಚನ್ನಪ್ಪ ಷಣ್ಮುಕಿ, ರೈತ, ಗೊಜನೂರು

ಮಳೆ ಕೊರತೆಯ ಜತೆಗೆ ತೀವ್ರ ಬಿಸಿಲಿನ ವಾತಾವರಣದಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬೆಳೆಗಳು ಒಣಗಿ ನಿಂತಿವೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಮತ್ತೊಮ್ಮೆ ತಾಲೂಕಿನಲ್ಲಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಬೆಳೆಗಳು ಹಾಳಾಗಿರುವುದರಿಂದ ರೈತರು ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಕ್ಕಾಗಿ ಮಾಡಿದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ, ಬಡ್ಡಿ ಕಟ್ಟಲೂ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಸರ್ಕಾರ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು. ಬರಗಾಲ ಘೋಷಣೆಯ ಮಾನದಂಡದಂತೆ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು.

ಬಸವರಾಜ ಇಟಗಿ, ರೈತ, ಸೂರಣಗಿ

ಒಗ್ಗಟ್ಟಿನಿಂದ ಐತಿಹಾಸಿಕ ಗೌರಿಗುಡಿ ಅಭಿವೃದ್ಧಿ: ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದ ಒಗ್ಗಟ್ಟು ಮತ್ತು ಸಹಕಾರದಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾಧ್ಯ ಎಂದು ಗಣ್ಯ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದರು.

ಬೆಟಗೇರಿಯ ಹುಯಿಲಗೋಳ ರಸ್ತೆಯ ಗೌರಿಗುಡಿ ಓಣಿಯಲ್ಲಿರುವ ನೂರಾರು ವರ್ಷಗಳ ಐತಿಹಾಸಿಕ ಹಿನ್ನೆಲೆಯ ಗೌರಿಗುಡಿಯ ಜೀರ್ಣೋದ್ಧಾರ ಕಾಮಗಾರಿಯ ಸ್ಲ್ಯಾಬ್ ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಟಗೇರಿಯ ವೀರಶೈವ ಸಮಾಜವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಹಿರಿಯರು, ಯುವಕರು ಹಾಗೂ ಸಮಾಜಸೇವಕರನ್ನು ಒಳಗೊಂಡಿದೆ. ರೈತರು, ವ್ಯಾಪಾರಸ್ಥರು, ಉದ್ಯಮಿಗಳು, ಎಪಿಎಂಸಿ ವಹಿವಾಟುದಾರರು, ಶಿಕ್ಷಕರು, ಪತ್ರಕರ್ತರು, ಸರ್ಕಾರಿ ನೌಕರರು ಸೇರಿದಂತೆ ವಿವಿಧ ವೃತ್ತಿಗಳಲ್ಲಿ ಸಮಾಜದವರು ಹೆಸರು ಮಾಡಿದ್ದು, ಸಮಾಜಸೇವೆಯಲ್ಲಿಯೂ ಜನಮನ್ನಣೆ ಗಳಿಸಿದ್ದಾರೆ ಎಂದು ಹೇಳಿದರು.

ಈ ಭಾಗದ ಮಹತ್ವದ ಧಾರ್ಮಿಕ ಕೇಂದ್ರವಾಗಿರುವ ಗೌರಿಗುಡಿಯನ್ನು ಅದರ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೋದ್ಧಾರ ಕೈಗೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಿದರೆ ಇಂತಹ ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಯಶಸ್ವಿಯಾಗಿ ಕೈಗೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಉದ್ಯಮಿಗಳಾದ ವಿಜಯಕುಮಾರ ಗಡ್ಡಿ, ರವಿ ಪಟ್ಟಣಶೆಟ್ಟಿ ಹಾಗೂ ಮೋಹನ ಮಾಳಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರಾದ ಪುತ್ರಪ್ಪ ಬೆಂತೂರ, ಬಸವಣ್ಣೆಪ್ಪ ಮಾಳಶೆಟ್ಟಿ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಶಿವಪ್ಪ ನಾಗರಾಳ, ಪ್ರಕಾಶ ಮ್ಯಾಗೇರಿ, ಶರಣಪ್ಪ ಅಣ್ಣಿಗೇರಿ, ಶಿವಯ್ಯ ಶಿವಪ್ಪಯ್ಯನಮಠ, ಸಿದ್ದು ಮುಳ್ಳಾಳ, ಬಸವರಾಜ ಕುಂದಗೋಳ, ಸುದೀಪ ಕಣವಿ, ರಾಜು ಗೊಂಡಬಾಳ, ಸುರೇಶ ಬೆಂತೂರ, ಮಹೇಶ ಚಿಕ್ಕನಗೌಡ್ರ, ಶ್ರೀಕಾಂತ ಸೋನೆ, ಶ್ರೀನಿವಾಸ ಬೆಟಗೇರಿ, ಮಂಜುನಾಥ ಬೆಂತೂರ ಹಾಗೂ ಶರಣಪ್ಪ ಆಲೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾಜದ ಅಭಿವೃದ್ಧಿಗೆ ಒಗ್ಗಟ್ಟು ಬಹುದೊಡ್ಡ ಶಕ್ತಿಯಾಗಿದೆ. ಎಲ್ಲರೂ ಒಂದಾಗಿ ಕೈಜೋಡಿಸಿದರೆ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಇನ್ನಷ್ಟು ಪರಿಣಾಮಕಾರಿಯಾಗಿ ಸಾಧ್ಯವಾಗುತ್ತದೆ.

ವಿಜಯಕುಮಾರ ಗಡ್ಡಿ

ಬರ ಘೋಷಣೆಗೆ ರೈತರ ಪಟ್ಟು ; ಹೆದ್ದಾರಿ ತಡೆದು ಪ್ರತಿಭಟನೆ, ಸರ್ಕಾರಕ್ಕೆ 8 ದಿನಗಳ ಗಡುವು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ರೈತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಲಕ್ಷ್ಮೇಶ್ವರದಲ್ಲಿ ಕೈಗಾ–ಇಳಕಲ್ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಏಕಾಏಕಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿ, ಮುಂಗಾರು ಮಳೆಯ ಕೊರತೆಯಿಂದ ಮೂರು ತಾಲೂಕುಗಳಲ್ಲಿಯೂ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಉಳುಮೆ ಹಾಗೂ ಕೂಲಿಗಾಗಿ ಮಾಡಿದ ವೆಚ್ಚವೂ ಮರಳಿ ಬಾರದಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಖುದ್ದು ಬರ ಪರಿಸ್ಥಿತಿ ಪರಿಶೀಲಿಸಿ ಬರಪೀಡಿತ ತಾಲೂಕುಗಳ ಘೋಷಣೆಗೆ ಭರವಸೆ ನೀಡಿದ್ದರು. ಆದರೆ, ಶಿರಹಟ್ಟಿ ಕ್ಷೇತ್ರದ ಮೂರು ತಾಲೂಕುಗಳನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರು ಮೂರು ತಾಲೂಕುಗಳನ್ನು ಕೂಡಲೇ ಬರಪೀಡಿತ ಎಂದು ಘೋಷಿಸಬೇಕು, ತಾಲೂಕುಗಳಾದ್ಯಂತ ಜಂಟಿ ಬೆಳೆನಷ್ಟ ಸಮೀಕ್ಷೆ ನಡೆಸಬೇಕು ಹಾಗೂ ಪ್ರತಿ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತರ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಹಾಗೂ ಎಸ್‌ಡಿಆರ್‌ಎಫ್ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಹಾಗೂ ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ದಿನಗಳನ್ನು ಹೆಚ್ಚಿಸಿ, ಕೂಲಿಯನ್ನು ಸಕಾಲದಲ್ಲಿ ಪಾವತಿಸುವ ಮೂಲಕ ಗ್ರಾಮೀಣ ಜನರ ಗುಳೆ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದೂ ರೈತರು ಒತ್ತಾಯಿಸಿದರು.

ಬಳಿಕ ಗ್ರೇಡ್–2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಹೊನ್ನಪ್ಪ ವಡ್ಡರ, ಐ.ಎಸ್. ಪೂಜಾರ, ಮುತ್ತುರಾಜ ರಾಠೋಡ, ಬಿ.ಟಿ. ಚಂದ್ರಶೇಖರ, ಮಹೇಶ ಹೊಗೆಸೊಪ್ಪಿನ, ನಾಗರಾಜ ಚಿಂಚಲಿ, ಸೋಮಣ್ಣ ಡಾಣಗಲ್, ಚನ್ನಪ್ಪ ಷಣ್ಮುಖಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.

ಸಿಪಿಐ ಬಿ.ವಿ. ನ್ಯಾಮಗೌಡರ ಹಾಗೂ ಪಿಎಸ್‌ಐ ಟಿ.ಕೆ. ರಾಠೋಡ ನೇತೃತ್ವದಲ್ಲಿ ಪೊಲೀಸರು ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಿದರು.

ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಎಂಟು ದಿನಗಳೊಳಗೆ ಬರಪೀಡಿತ ಎಂದು ಘೋಷಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕುವುದರ ಜತೆಗೆ ಉಗ್ರ ಹೋರಾಟ ಹಾಗೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. 

ಎಂ.ಎಸ್. ದೊಡ್ಡಗೌಡರ, ನ್ಯಾಯವಾದಿ

ಗದಗ ಕ್ರೀಡಾಪಟುಗಳಿಗೆ ಸಿಕ್ಕಿದೆ ಬಲಿಷ್ಠ ವೇದಿಕೆ: ಬಿ.ಬಿ. ಆಸೂಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡಾ ಕ್ಷೇತ್ರದಲ್ಲಿ ಗದಗ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಹಲವು ಪ್ರತಿಭಾವಂತ ಕ್ರೀಡಾಪಟುಗಳನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ನೀಡಿದೆ. ಜಿಲ್ಲೆಯ ಯುವ ಕ್ರೀಡಾ ಪ್ರತಿಭೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯವಾದ ಉತ್ತಮ ಮೂಲಸೌಕರ್ಯಗಳು ನಿರ್ಮಾಣಗೊಂಡಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಆಸೂಟಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಕಿ ದಿಗ್ಗಜ ಮೇಜರ್ ಧ್ಯಾನಚಂದ್ ಅವರ ಸಾಧನೆಯನ್ನು ಸ್ಮರಿಸಿದ ಅವರು, ಗದಗ–ಬೆಟಗೇರಿ ಅವಳಿ ನಗರಕ್ಕೂ ಹಾಕಿ ಕ್ರೀಡೆಗೂ ಐತಿಹಾಸಿಕ ನಂಟಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಬೇಣು ಭಟ್, ರಾಜೀವ್ ಬಾಂಗ್ಲೆ ಹಾಗೂ ಸುನಿಲ್ ಜೋಶಿ ಅವರಂತಹ ಅಪ್ರತಿಮ ಕ್ರೀಡಾಪಟುಗಳನ್ನು ನೀಡಿದ ಹೆಮ್ಮೆ ಗದಗ ಜಿಲ್ಲೆಗಿದೆ ಎಂದರು.

ಗದಗದಲ್ಲಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣ ನಿರ್ಮಾಣಗೊಂಡಿದ್ದು, ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಒಳಾಂಗಣ ಕ್ರೀಡಾಂಗಣ ಗದಗದಲ್ಲಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಗದಗದ ಯುವಕರು ಹಾಕಿ ಮಾತ್ರವಲ್ಲದೆ ಸೈಕ್ಲಿಂಗ್, ಕುಸ್ತಿ, ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ ಹಾಗೂ ಕರಾಟೆ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಇಂತಹ ಪ್ರತಿಭೆಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಇನ್ನಷ್ಟು ಕ್ರೀಡಾಪಟುಗಳು ಉನ್ನತ ಮಟ್ಟದಲ್ಲಿ ಹೊರಹೊಮ್ಮಲಿದ್ದಾರೆ ಎಂದು ತಿಳಿಸಿದರು.

ಸರ್ಕಾರ ನಿರ್ಮಿಸಿರುವ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಪೋಷಕರು ಮಕ್ಕಳನ್ನು ಕ್ರೀಡಾ ಕ್ಷೇತ್ರದತ್ತ ಪ್ರೋತ್ಸಾಹಿಸುವ ಮೂಲಕ ಅವರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಾಬರ್ಚಿ ಹಾಕಿ ಪಂದ್ಯಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮಾದರಿಯಾಗುವಂತಹ ಮಹತ್ವದ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕಬಡ್ಡಿ, ಕುಸ್ತಿ, ಹಾಕಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾಂಗಣಗಳು ಹಾಗೂ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದ್ದು, ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಅಭ್ಯಾಸಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೆರಿ, ಎಚ್.ಬಿ. ವೀರಾಪುರ, ವಾಯ್.ಜಿ. ಗಡದ, ಸುರೇಶ್ ಕಟ್ಟಿಮನಿ, ಮಾರುತಿ ಮುಟಗಾರ, ವಸಂತ ಕಲಕಾಂಬಿ, ಡಾ. ಪ್ರವೀಣ ಚಪ್ಪರಮನಿ, ಮಂಜುನಾಥ ಬಾಗಲಕೋಟಿ, ಶಿವರಾಜ ಕೊರಶ್, ವಿಶ್ವಾಸ ಗಂಗಡೆ, ವಾಯ್.ಕೆ. ಚೌಡಾಪುರ, ಲಕ್ಷ್ಮಣ ಬಾಗಲಕೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಗದಗ ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಯಾವುದೇ ಕೊರತೆಯಿಲ್ಲ. ಸೂಕ್ತ ಅವಕಾಶ, ತರಬೇತಿ ಮತ್ತು ಪ್ರೋತ್ಸಾಹ ದೊರೆತರೆ ಜಿಲ್ಲೆಯ ಇನ್ನಷ್ಟು ಯುವ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಗದಗದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ.

ಬಿ.ಬಿ. ಆಸೂಟಿ

ಸಿಹಿ ಭೋಜನದೊಂದಿಗೆ ಸರ್ಕಾರಿ ಶಾಲೆಗೆ ಮಕ್ಕಳ ಸೆಳೆತ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ವಿನೂತನ ಉದ್ದೇಶದಿಂದ ತಾಲೂಕಿನ ಗೋವನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶ್ರಾವಣ ಸಿರಿ–ಸಿಹಿ ಭೋಜನ’ ಕಾರ್ಯಕ್ರಮ ಸತತ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ.

ಶಾಲೆಯ 1ರಿಂದ 8ನೇ ತರಗತಿಯ 86 ವಿದ್ಯಾರ್ಥಿಗಳಿಗೆ ಶ್ರಾವಣ ಮಾಸದುದ್ದಕ್ಕೂ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಿವಿಧ ಬಗೆಯ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಜಿಲೇಬಿ, ಬೂಂದಿ, ಮೈಸೂರು ಪಾಕ್, ಪಾಯಸ, ಕೇಸರಿಬಾತ್ ಹಾಗೂ ಹೋಳಿಗೆ ಸೇರಿದಂತೆ ಪ್ರತಿದಿನ ವಿಭಿನ್ನ ಸಿಹಿ ತಿನಿಸುಗಳನ್ನು ಮಕ್ಕಳಿಗೆ ಸಿದ್ಧಪಡಿಸಿ ನೀಡುತ್ತಿರುವುದು ವಿಶೇಷವಾಗಿದೆ.

ಗ್ರಾಮಸ್ಥರು, ದಾನಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಎಸ್‌ಡಿಎಂಸಿ ಹಾಗೂ ಶಿಕ್ಷಕರ ಸಹಕಾರದಿಂದ ಶ್ರಾವಣ ಮಾಸದುದ್ದಕ್ಕೂ ಈ ಸಿಹಿಯೂಟ ಕಾರ್ಯಕ್ರಮ ನಡೆಯುತ್ತಿದೆ.

ಸಿಹಿ ಭೋಜನದ ಜತೆಗೆ ಪ್ರತಿಭಾ ಕಾರಂಜಿ, ಕ್ರೀಡಾಕೂಟ ಹಾಗೂ ನಲಿ–ಕಲಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಶಾಲೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಈ ವಿನೂತನ ಪ್ರಯತ್ನದಿಂದ ಸರ್ಕಾರಿ ಶಾಲೆಯತ್ತ ಮಕ್ಕಳ ಸೆಳೆತ ಹೆಚ್ಚಿಸುವ ಉದ್ದೇಶವನ್ನು ಶಾಲೆ ಯಶಸ್ವಿಯಾಗಿ ಮುಂದುವರಿಸಿಕೊಂಡು ಬಂದಿದೆ.

ಜಿಲ್ಲಾ ಉಪನಿರ್ದೇಶಕ ಆರ್.ಎಸ್. ಬುರಡಿ ಶಾಲೆಯ ಈ ವಿಶೇಷ ಕಾರ್ಯಕ್ರಮವನ್ನು ಮೆಚ್ಚಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಸಮುದಾಯದ ಸಹಕಾರ ಪಡೆದು ಇಂತಹ ವಿನೂತನ ಚಟುವಟಿಕೆಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಶಿಮೀಕೇರಿ, ಅಕ್ಷರ ದಾಸೋಹ ಸಹ ನಿರ್ದೇಶಕ ಎಚ್.ಎಸ್. ರಾಮನಗೌಡ, ಪ್ರಧಾನ ಗುರು ಎಸ್.ಪಿ. ಕಟ್ಟೆನ್ನವರ ಹಾಗೂ ಶಿಕ್ಷಕ ಬಿ.ಬಿ. ಯತ್ತಿನಹಳ್ಳಿ ಸೇರಿದಂತೆ ಇತರರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.