Home Blog

ಜೆಪ್ಟೋಗೆ ಬಿಗ್ ಶಾಕ್! ಅಸ್ವಚ್ಛವಾಗಿದ್ದ ಹೊಸಕೋಟೆ ಗೋದಾಮು ಸೀಜ್ ಮಾಡಿದ ಆಹಾರ ಸುರಕ್ಷತಾ ಇಲಾಖೆ

0

ಹೊಸಕೋಟೆ: ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿರುವ ಕ್ವಿಕ್‌ ಕಾಮರ್ಸ್‌ ಸಂಸ್ಥೆ ಜೆಪ್ಟೋಗೆ ಸೇರಿದ ಗೋದಾಮಿನ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ.

ಗೋದಾಮಿನಲ್ಲಿ ಸಾವಯವ ತ್ಯಾಜ್ಯ, ಎಲ್ಲೆಂದರಲ್ಲಿ ಬಿದ್ದಿದ್ದ ಕವರ್‌ಗಳು ಹಾಗೂ ಬಾಟಲಿಗಳು, ನೆಲದ ಮೇಲೆ ಸಂಗ್ರಹವಾಗಿದ್ದ ಕೊಳೆ ಮತ್ತು ಖಾಲಿ ಕಾರ್ಡ್‌ಬೋರ್ಡ್‌ ಬಾಕ್ಸ್‌ಗಳು ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿರುವ ಜೆಪ್ಟೋ ಗೋದಾಮಿನಲ್ಲಿ ಆಹಾರ ಉತ್ಪನ್ನಗಳ ಗುಣಮಟ್ಟ, ಸುರಕ್ಷತೆ, ಸಂಗ್ರಹಣೆ, ಲೇಬಲಿಂಗ್‌ ಹಾಗೂ ಆಹಾರ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸಲು ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿತ್ತು.

ತಪಾಸಣೆ ವೇಳೆ ಗೋದಾಮಿನ ಪರಿಸ್ಥಿತಿ ಅತ್ಯಂತ ಅಸ್ವಚ್ಛವಾಗಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಉತ್ಪನ್ನಗಳಿದ್ದ ಪ್ರದೇಶದಲ್ಲಿ ಸಾವಯವ ತ್ಯಾಜ್ಯ, ಕವರ್‌ಗಳು, ಬಾಟಲಿಗಳು ಹಾಗೂ ಖಾಲಿ ಕಾರ್ಡ್‌ಬೋರ್ಡ್‌ ಬಾಕ್ಸ್‌ಗಳು ಎಲ್ಲೆಂದರಲ್ಲಿ ಬಿದ್ದಿರುವುದು ಕಂಡುಬಂದಿದೆ. ನೆಲದ ಮೇಲೂ ಕೊಳೆ ಸಂಗ್ರಹವಾಗಿದ್ದ ಹಿನ್ನೆಲೆಯಲ್ಲಿ ಆಹಾರ ಉತ್ಪನ್ನಗಳ ಸಂಗ್ರಹಣೆ ಮತ್ತು ನಿರ್ವಹಣೆಯ ಬಗ್ಗೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆಹಾರ ಉತ್ಪನ್ನಗಳ ಲೇಬಲಿಂಗ್‌ನಲ್ಲಿ FSSAI ನಿಯಮಗಳಿಗೆ ವಿರುದ್ಧವಾದ ಅಂಶಗಳು ಕಂಡುಬಂದಿವೆ. ಇದರ ಜೊತೆಗೆ ತಪ್ಪು ಬ್ರ್ಯಾಂಡಿಂಗ್‌, ಅಸ್ವಚ್ಛ ರೀತಿಯಲ್ಲಿ ಆಹಾರ ನಿರ್ವಹಣೆ ಹಾಗೂ ಸೂಕ್ತವಲ್ಲದ ಸಂಗ್ರಹಣಾ ಪರಿಸ್ಥಿತಿಗಳಂತಹ ಹಲವು ಆಹಾರ ಸುರಕ್ಷತಾ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ.

ತಪಾಸಣೆಯಲ್ಲಿ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜೆಪ್ಟೋ ಗೋದಾಮನ್ನು ಸೀಲ್ ಮಾಡಿದೆ. ಸಂಸ್ಥೆಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಸಂಬಂಧಪಟ್ಟ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಲಾಗಿದೆ.

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಆಹಾರ ಉದ್ಯಮ ನಿರ್ವಾಹಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರಿಗೆ ಸುರಕ್ಷಿತ, ಗುಣಮಟ್ಟದ ಹಾಗೂ ಸ್ವಚ್ಛ ಆಹಾರ ಲಭ್ಯವಾಗುವುದನ್ನು ಖಚಿತಪಡಿಸಿಕೊಳ್ಳಲು ಇಂತಹ ವಿಶೇಷ ತಪಾಸಣಾ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಜೆಪ್ಟೋ ಕೂಡ ಪ್ರತಿಕ್ರಿಯೆ ನೀಡಿದೆ. ದೇಶಾದ್ಯಂತ ಅಧಿಕಾರಿಗಳು ನಿಯಮಿತ ಮೇಲ್ವಿಚಾರಣೆಯ ಭಾಗವಾಗಿ ಆಹಾರ ಸುರಕ್ಷತಾ ತಪಾಸಣೆಗಳನ್ನು ನಡೆಸುತ್ತಾರೆ. ತಪಾಸಣೆ ವೇಳೆ ಅಧಿಕಾರಿಗಳೊಂದಿಗೆ ಸಂಸ್ಥೆ ಸಂಪೂರ್ಣ ಸಹಕರಿಸಿದೆ ಎಂದು ಜೆಪ್ಟೋ ವಕ್ತಾರರು ತಿಳಿಸಿದ್ದಾರೆ.

ಅಧಿಕಾರಿಗಳು ನೀಡಿದ ಸೂಚನೆಗಳು ಹಾಗೂ ಗಮನಕ್ಕೆ ತಂದಿರುವ ಅಂಶಗಳನ್ನು ದಾಖಲಿಸಿಕೊಂಡಿದ್ದು, ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜೆಪ್ಟೋ ತಿಳಿಸಿದೆ.

ಭೀಮನ ಅಮಾವಾಸ್ಯೆ ಸಂಭ್ರಮ: ವಿದ್ಯುತ್ ದೀಪಗಳಿಂದ ಕಂಗೊಳಿಸಿದ ಮಹದೇಶ್ವರ ಬೆಟ್ಟ!

0

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತಿವೆ.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದು, ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಭಕ್ತರು ನಿನ್ನೆಯಿಂದಲೇ ಮಲೆ ಮಹದೇಶ್ವರ ಬೆಟ್ಟದತ್ತ ಆಗಮಿಸುತ್ತಿದ್ದು, ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿವೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಮಾದಪ್ಪನ ದರ್ಶನ ಪಡೆದು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಸ್ವಾಮಿಗೆ ಪ್ರಾರ್ಥಿಸುತ್ತಿದ್ದಾರೆ.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಸ್ಥಾನದ ಆವರಣ ಹಾಗೂ ಪ್ರಾಂಗಣವನ್ನು ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರದಿಂದ ಇಡೀ ದೇವಸ್ಥಾನ ಆವರಣ ಕಂಗೊಳಿಸುತ್ತಿದ್ದು, ಭಕ್ತರನ್ನು ಮತ್ತಷ್ಟು ಆಕರ್ಷಿಸುತ್ತಿದೆ.

ಕ್ಷೇತ್ರಕ್ಕೆ ಆಗಮಿಸಿರುವ ಭಕ್ತರು ಪೂಜೆ ಸಲ್ಲಿಸುವುದರ ಜೊತೆಗೆ ವಿವಿಧ ಹರಕೆ ಸೇವೆಗಳನ್ನು ನೆರವೇರಿಸುತ್ತಿದ್ದಾರೆ. ಮಾದಪ್ಪನಿಗೆ ಬೆಳ್ಳಿ ರಥ, ಚಿನ್ನದ ರಥೋತ್ಸವ ಸೇರಿದಂತೆ ವಿವಿಧ ಸೇವೆಗಳನ್ನು ಭಕ್ತರು ಭಕ್ತಿಯಿಂದ ಸಲ್ಲಿಸುತ್ತಿದ್ದಾರೆ.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಭಕ್ತರು ಕುಟುಂಬ ಸಮೇತರಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದಾರೆ. ದೂರದ ಊರುಗಳಿಂದ ಬಂದಿರುವ ಭಕ್ತರು ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ, ಮುಂಜಾನೆಯಿಂದಲೇ ದೇವಸ್ಥಾನಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ.

ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಬೆಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜಂಗುಳಿ ಕಂಡುಬರುತ್ತಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿವೆ.

ಮಾದಪ್ಪನ ಮೇಲೆ ಅಪಾರ ಭಕ್ತಿ ಹೊಂದಿರುವ ಭಕ್ತರು ತಮ್ಮ ಕುಟುಂಬದ ಒಳಿತಿಗಾಗಿ ವಿವಿಧ ಹರಕೆಗಳನ್ನು ಹೊತ್ತು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಹರಕೆ ತೀರಿಸುವ ಭಾಗವಾಗಿ ಬೆಳ್ಳಿ ರಥ, ಚಿನ್ನದ ರಥೋತ್ಸವ ಸೇರಿದಂತೆ ವಿವಿಧ ಸೇವೆಗಳನ್ನು ನೆರವೇರಿಸುತ್ತಿದ್ದಾರೆ.

ಭಕ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಾದಪ್ಪನಿಗೆ ನೈವೇದ್ಯ ಅರ್ಪಿಸಿ ಕುಟುಂಬದ ಆರೋಗ್ಯ, ನೆಮ್ಮದಿ, ಐಶ್ವರ್ಯ ಹಾಗೂ ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಭೀಮನ ಅಮಾವಾಸ್ಯೆಯಂದು ಮಾದಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಒಟ್ಟಾರೆ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಡೆ ಮಾದಪ್ಪನ ನಾಮಸ್ಮರಣೆ ಮೊಳಗುತ್ತಿದೆ. ಸಹಸ್ರಾರು ಭಕ್ತರ ಆಗಮನದಿಂದ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.

ಭೀಕರ ಅಗ್ನಿ ಅವಘಡ! ಹೊತ್ತಿ ಉರಿದ ಕಟ್ಟಡ, ಶಾರ್ಟ್ ಸರ್ಕ್ಯೂಟ್ ಶಂಕೆ?

0

ಬೆಂಗಳೂರು: ನಗರದ ರಾಮಮೂರ್ತಿನಗರದ ಎನ್.ಆರ್.ಐ ಲೇಔಟ್‌ನ ಕಟ್ಟಡವೊಂದರಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯಿಂದ ಉಂಟಾಗಿರುವ ಹಾನಿಯ ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ, ಘಟನೆಯಲ್ಲಿ ಯಾರಿಗಾದರೂ ಗಾಯಗಳಾಗಿವೆಯೇ ಹಾಗೂ ಆಸ್ತಿ-ಪಾಸ್ತಿಗೆ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಂದೇ ಮಾತರಂ 150ರ ಸಂಭ್ರಮ: ಲಕ್ಷ್ಮೇಶ್ವರದಲ್ಲಿ 150 ಮೀಟರ್ ರಾಷ್ಟ್ರಧ್ವಜ ಯಾತ್ರೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಂದೇ ಮಾತರಂ ಗೀತೆ ರಚನೆಯಾಗಿ 150 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಲಕ್ಷ್ಮೇಶ್ವರದಲ್ಲಿ 150 ಮೀಟರ್ ಉದ್ದದ ರಾಷ್ಟ್ರಧ್ವಜ ಯಾತ್ರೆ ನಡೆಯಿತು.

ಸಾವಿರಾರು ವಿದ್ಯಾರ್ಥಿಗಳು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡ ಯಾತ್ರೆಗೆ ಶಿಗ್ಲಿ ನಾಕಾದ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಚಾಲನೆ ನೀಡಲಾಯಿತು. ಪುರಸಭೆ, ಸೋಮೇಶ್ವರ ಪಾದಗಟ್ಟಿ, ಬಜಾರ ರಸ್ತೆ, ವಿದ್ಯಾರಣ್ಯ ಸರ್ಕಲ್ ಹಾಗೂ ಬಸ್ತಿಬಣ ಮೂಲಕ ಸಾಗಿದ ಯಾತ್ರೆ ಮಹಾಕವಿ ಪಂಪ ವರ್ತುಲದಲ್ಲಿ ಸಮಾವೇಶಗೊಂಡಿತು.

ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಬೆಳೆಸಬೇಕು. ಹಿರಿಯರು ದೇಶಕ್ಕೆ ನೀಡಿದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮದಾಗಿದೆ. ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಗೀತೆಗಳು ಭಾರತೀಯರ ಹೆಮ್ಮೆಯ ಸಂಕೇತಗಳಾಗಿವೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.13ರಿಂದ 15ರವರೆಗೆ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಾಭಿಮಾನ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ವಾಗ್ಮಿ ಅಮೋಘ ಹಿರೇಮಠ ಮಾತನಾಡಿ, ವಂದೇ ಮಾತರಂ ಪ್ರತಿಯೊಬ್ಬ ಭಾರತೀಯನಲ್ಲೂ ಆತ್ಮವಿಶ್ವಾಸ, ಶಕ್ತಿ ಹಾಗೂ ದೇಶಾಭಿಮಾನ ಮೂಡಿಸುವ ಗೀತೆಯಾಗಿದೆ. ಭಾರತದ ಏಕತೆ ಮತ್ತು ಸ್ವಾಭಿಮಾನದ ಜಾಗೃತಿಯಲ್ಲಿ ವಂದೇ ಮಾತರಂ ಮಹತ್ವದ ಪಾತ್ರ ವಹಿಸಿದೆ ಎಂದರು.

ಈ ಸಂದರ್ಭದಲ್ಲಿ ಸುನೀಲ ಮಹಾಂತಶೆಟ್ಟರ, ಫಕ್ಕಿರೇಶ ರಟ್ಟಿಹಳ್ಳಿ, ಅನಿಲ ಮುಳಗುಂದ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಶಶಿಧರ ರಾನಡೆ, ಪ್ರವೀಣ ಬೋಮಲೆ, ವಿಜಯ ಕುಂಬಾರ, ಈರಣ್ಣ ಪೂಜಾರ ಸೇರಿದಂತೆ ಎಬಿವಿಪಿ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆ.14ರಿಂದ ಗದಗದಲ್ಲಿ ‘ಉತ್ಸವ’ದ ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಕೈಗಾರಿಕೆ, ವ್ಯಾಪಾರ, ಉದ್ಯಮಶೀಲತೆ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಒಂದೇ ವೇದಿಕೆ ಕಲ್ಪಿಸುವ ‘ಗದಗ ಉತ್ಸವ–2026’ ಆ.14ರಿಂದ 18ರವರೆಗೆ ನಗರದ ಎಪಿಎಂಸಿ ಯಾರ್ಡ್‌ನ ಸ್ವಾಮಿ ವಿವೇಕಾನಂದ ಸಭಾಭವನ ಹಾಗೂ ಕೆ.ಎಚ್. ಪಾಟೀಲ ಸಭಾಭವನದಲ್ಲಿ ನಡೆಯಲಿದೆ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ತಿಳಿಸಿದರು.

ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ದಿನಗಳ ಉತ್ಸವದಲ್ಲಿ ಕೈಗಾರಿಕಾ ವಸ್ತುಗಳ ಪ್ರದರ್ಶನ–ಮಾರಾಟ ಮೇಳ, ಸ್ವಸಹಾಯ ಸಂಘಗಳ ಉತ್ಪನ್ನಗಳು, ಕರಕುಶಲ ವಸ್ತುಗಳು, ಅತ್ಯಾಧುನಿಕ ಯಂತ್ರೋಪಕರಣಗಳ ಪ್ರದರ್ಶನ, ಉದ್ಯಮಶೀಲತಾ ಕಾರ್ಯಾಗಾರ, ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ, ರಕ್ತದಾನ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.

ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಮೇಳ ನಡೆಯಲಿದ್ದು, ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳ ಕೈಗಾರಿಕಾ ಉತ್ಪನ್ನಗಳ ಜತೆಗೆ ವ್ಯಾಪಾರಸ್ಥರಿಗೆ ಅಗತ್ಯವಿರುವ ಸಾಟೆಕ್ಸ್, ಗ್ರೇಡಿಂಗ್, ಮಡ್ಡ ಕ್ಲೀನರ್ ಸೇರಿದಂತೆ ವಿವಿಧ ಆಧುನಿಕ ಯಂತ್ರೋಪಕರಣಗಳು ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಿರಲಿವೆ. ಸಂಜೆ ಕಲರ್ಸ್ ಕನ್ನಡ ಖ್ಯಾತಿಯ ಕಲಾವಿದರು ಹಾಗೂ ಸ್ಥಳೀಯ ಕಲಾವಿದರಿಂದ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಆ.14ರಂದು ಅದ್ಧೂರಿ ಚಾಲನೆ

ಆ.14ರಂದು ಸಂಜೆ 5ಕ್ಕೆ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡ್ರ ಉದ್ಘಾಟಿಸಲಿದ್ದಾರೆ. ಶರಣಬಸಪ್ಪ ಗುಡಿಮನಿ ಅಧ್ಯಕ್ಷತೆ ವಹಿಸಲಿದ್ದಾರೆ.

ಆ.15ರಂದು ಸಾಧಕರಿಗೆ ಸನ್ಮಾನ ನಡೆಯಲಿದ್ದು, ಆ.16ರಂದು ಬೆಳಿಗ್ಗೆ ರಕ್ತದಾನ ಶಿಬಿರ ಹಾಗೂ ಸಂಜೆ ಜೀವಮಾನ ಸಾಧನೆ, ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ ಮತ್ತು ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಉದ್ಯಮ ಕ್ಷೇತ್ರದ ಸಾಧಕರಿಗೆ ಗೌರವ

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಆನಂದ ಪೋತ್ನೀಸ್ ಹಾಗೂ ಈಶಣ್ಣ ಮುನವಳ್ಳಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು.

ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಕುಮಾರ ವಿ. ಫಟ್ಟದ, ವೀರಣ್ಣ ಸೊನ್ನದ ಹಾಗೂ ವೀರಣ್ಣ ಪವಾಡದ, ಶ್ರೇಷ್ಠ ವರ್ತಕ ಪ್ರಶಸ್ತಿಗೆ ಸುರೇಶಕುಮಾರ ಓಸವಾಲ, ಬಸಪ್ಪ ಶೆಟ್ಟಿಕೇರಿ, ಸಂಗಮೇಶ ಗೌರಿಮಠ ಹಾಗೂ ಗೌತಮ್‌ಚಂದ ಚೋಪ್ರಾ ಆಯ್ಕೆಯಾಗಿದ್ದಾರೆ. ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿಯನ್ನು ನಿರ್ಮಲಾ ಕೊಳ್ಳಿ ಅವರಿಗೆ ನೀಡಲಾಗುವುದು.

ಮಹಿಳಾ ಉದ್ಯಮಶೀಲತೆಗೆ ವಿಶೇಷ ಒತ್ತು

ಆ.17ರಂದು ಜವಳಿ ವಲಯದ ರಫ್ತು ಉದ್ಯಮಿದಾರರಿಗೆ ಪ್ರೋತ್ಸಾಹ ಕಾರ್ಯಾಗಾರ ನಡೆಯಲಿದೆ. ಸಂಜೆ ಮಹಿಳಾ ಘಟಕದಿಂದ ‘ನವ ಮಹಿಳಾ ಉದ್ಯಮಿದಾರರ ಸಂವಾದ–ಸಮಸ್ಯೆ ಹಾಗೂ ಪರಿಹಾರ’ ಕಾರ್ಯಕ್ರಮ ನಡೆಯಲಿದೆ.

ಆ.18ರಂದು ಬೆಳಿಗ್ಗೆ ಮಹಿಳೆಯರ ಅಡುಗೆ ಸ್ಪರ್ಧೆ ಆಯೋಜಿಸಲಾಗಿದ್ದು, ಸಂಜೆ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ತಜ್ಞರಿಂದ ಉಪನ್ಯಾಸಗಳು, ಉದ್ಯಮಶೀಲತೆ ಕುರಿತ ಕಾರ್ಯಾಗಾರಗಳು ಹಾಗೂ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ, ಗೌರವ ಕಾರ್ಯದರ್ಶಿ ಚನ್ನವೀರಪ್ಪ ಹುಣಶೀಕಟ್ಟಿ, ಸಹ ಗೌರವ ಕಾರ್ಯದರ್ಶಿ ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಕೋಶಾಧ್ಯಕ್ಷ ಅರವಿಂದ ಕಾಮತ, ಗದಗ ಉತ್ಸವ ಸಮಿತಿ ಚೇರ್ಮನ್ ಮಧುಸೂದನ ಪುಣೇಕರ, ಕೋ-ಚೇರ್ಮನ್ ಮಂಜುನಾಥ ವೀರಲಿಂಗಯ್ಯನಮಠ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಉತ್ಸವ ಕೇವಲ ವಸ್ತು ಪ್ರದರ್ಶನವಲ್ಲ. ಜಿಲ್ಲೆಯ ಉದ್ಯಮಿಗಳು, ವರ್ತಕರು, ಮಹಿಳಾ ಉದ್ಯಮಿಗಳು ಹಾಗೂ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಜತೆಗೆ ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ವೇದಿಕೆ ಒದಗಿಸುವ ಉದ್ದೇಶ ಹೊಂದಿದೆ.
— ಶರಣಬಸಪ್ಪ ಗುಡಿಮನಿ, ಅಧ್ಯಕ್ಷರು, ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ

ಪ್ರಾಮಾಣಿಕ ಸೇವೆಯೇ ವ್ಯಕ್ತಿಯ ನಿಜವಾದ ಹಿರಿಮೆ: ಮುಪ್ಪಿನ ಬಸವಲಿಂಗ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹುದ್ದೆ, ಸ್ಥಾನಮಾನಕ್ಕಿಂತ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ಸಮರ್ಪಣೆಯಿಂದ ನಿರ್ವಹಿಸುವುದೇ ವ್ಯಕ್ತಿಯ ನಿಜವಾದ ಹಿರಿಮೆ ಎಂದು ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಭಾರತಿ ಶಿರ್ಸಿ ಅವರ ಸೇವಾ ನಿವೃತ್ತಿ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಶಿಕ್ಷಕರು ಮಕ್ಕಳ ಮನಸ್ಸಿನಲ್ಲಿ ಅಕ್ಷರದ ಜತೆಗೆ ಉತ್ತಮ ವಿಚಾರಗಳ ಬೀಜ ಬಿತ್ತಬೇಕು. ಕನ್ನಡ ಮಾಧ್ಯಮದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದು ಸ್ವಾಮೀಜಿ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತಿ ಶಿರ್ಸಿ, ಬಸವೇಶ್ವರ ಶಾಲೆಯಲ್ಲಿ ೨೨ ವರ್ಷಗಳ ಕಾಲ ಸಲ್ಲಿಸಿದ ಸೇವೆ ತಮ್ಮ ಜೀವನದ ಅಮೂಲ್ಯ ಅಧ್ಯಾಯವಾಗಿದೆ. ಸಂಸ್ಥೆಯೊಂದಿಗಿನ ಸಂಬಂಧ ಕೇವಲ ಉದ್ಯೋಗದ ಸಂಬಂಧವಲ್ಲ; ಅದು ಆತ್ಮೀಯ ಬಂಧವಾಗಿದೆ ಎಂದರು.

ರವೀಂದ್ರನಾಥ ದೊಡ್ಡಮೇಟಿ, ಡಾ. ಜಿ.ಕೆ. ಕಾಳೆ ಸೇರಿದಂತೆ ಗಣ್ಯರು ಭಾರತಿ ಶಿರ್ಸಿ ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಪ್ರಾಚಾರ್ಯ ವೈ.ಸಿ. ಪಾಟೀಲ, ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

೨೨ ವರ್ಷಗಳ ಸೇವೆ ನನ್ನ ಜೀವನದ ಅಮೂಲ್ಯ ಅಧ್ಯಾಯ. ಸಂಸ್ಥೆಯೊಂದಿಗಿನ ಸಂಬಂಧ ಕೇವಲ ಉದ್ಯೋಗದ ಸಂಬಂಧವಲ್ಲ; ಅದು ಗುರು–ಶಿಷ್ಯರ ಆತ್ಮೀಯ ಬಂಧ.
— ಭಾರತಿ ಶಿರ್ಸಿ, ನಿವೃತ್ತ ಶಿಕ್ಷಕಿ

ಗದಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 6 ಹೆಸರು: ಯುವಜನರಿಗೆ ಶೇ.50ರಷ್ಟು ಆದ್ಯತೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ ಜಿಲ್ಲಾ ಘಟಕಗಳ ಅಧ್ಯಕ್ಷರ ಆಯ್ಕೆಯಲ್ಲಿ ಶೇ.50ರಷ್ಟು ಯುವಜನರಿಗೆ ಆದ್ಯತೆ ನೀಡಲು ಪಕ್ಷದ ವರಿಷ್ಠರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ವೀಕ್ಷಕ ವಿವೇಕ್‌ ಬನ್ಸಾಲ್‌ ಹೇಳಿದರು.

ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ ಹೆಸರುಗಳನ್ನು ಪ್ರಸ್ತಾಪಿಸಲಾಗಿದ್ದು, ಈ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಗುವುದು. ಅಂತಿಮವಾಗಿ ವರಿಷ್ಠರು ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷರಾಗಲು ಕನಿಷ್ಠ ಐದು ವರ್ಷ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿರಬೇಕು ಎಂಬ ನಿಯಮವಿದೆ. ಇದರೊಂದಿಗೆ ಯುವಜನರು, ಮಹಿಳೆಯರು ಹಾಗೂ ದಲಿತರಿಗೆ ಪ್ರಾತಿನಿಧ್ಯ ಕಲ್ಪಿಸುವುದಕ್ಕೂ ಆದ್ಯತೆ ನೀಡಲಾಗುವುದು. ಪಕ್ಷದ ಸಂಘಟನೆ ಮತ್ತು ಸಶಕ್ತೀಕರಣಕ್ಕಾಗಿ ‘ಸಂಘಟನಾ ಸೃಜನಾ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯುವಜನರ ಧ್ವನಿಯಾಗಿದ್ದಾರೆ ರಾಹುಲ್‌ ಗಾಂಧಿ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಯುವಜನರು ನಡೆಸಿದ ಹೋರಾಟಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊದಲಿನಿಂದಲೂ ಧ್ವನಿಯಾಗಿದ್ದರು. ದೇಶದ ಯುವಜನರ ಸಮಸ್ಯೆಗಳನ್ನು ಅವರು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಭಾರತ ಜಗತ್ತಿನಲ್ಲೇ ಅತಿ ಹೆಚ್ಚು ಯುವಶಕ್ತಿ ಹೊಂದಿರುವ ದೇಶವಾಗಿದ್ದು, ಈ ಯುವಶಕ್ತಿಯ ಧ್ವನಿಯಾಗಿ ರಾಹುಲ್‌ ಗಾಂಧಿ ಕೆಲಸ ಮಾಡುತ್ತಿದ್ದಾರೆ ಎಂದು ಬನ್ಸಾಲ್‌ ಹೇಳಿದರು.

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಕುರಿತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದರಿಂದ ಯುವಜನತೆ ಸಂಕಷ್ಟಕ್ಕೆ ಸಿಲುಕಿದೆ. ದೇಶದ ವಿದೇಶಾಂಗ ಹಾಗೂ ಆರ್ಥಿಕ ಪರಿಸ್ಥಿತಿಯೂ ಚಿಂತಾಜನಕವಾಗಿದೆ. ದೇಶವನ್ನು ಸಮರ್ಪಕವಾಗಿ ಮುನ್ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರ ಕಾಂಗ್ರೆಸ್‌ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಅಕ್ಕಿ, ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್ಲ, ಕೆಪಿಸಿಸಿ ಕಾರ್ಯದರ್ಶಿ ಸತೀಶ ಮೆಹರವಾಡೆ, ಮುಖಂಡರಾದ ರಾಬರ್ಟ್‌ ದದ್ದಾಪುರಿ, ಯುವ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಮುಖಂಡರಾದ ವಾಸಣ್ಣ ಕುರುಡಗಿ, ಸುಜಾತ ದೊಡ್ಡಮನಿ, ಮಿಥುನ್ ಪಾಟೀಲ, ಸಿದ್ದು ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾವಿನಲ್ಲೂ ಇಬ್ಬರ ಬಾಳಿಗೆ ಬೆಳಕಾದ ಕಲಾವಿದ ವಿಜಯಕುಮಾರ

0

ವಿಜಯಸಾಕ್ಷಿ ಸುದ್ದಿ, ಗದಗ: ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ವಿಜಯಕುಮಾರ ವಾಸುದೇವಸಾ ಜಿತೂರಿ (೬೪) ಅವರು ಸೋಮವಾರ ಬೆಟಗೇರಿಯ ಸ್ವಗೃಹದಲ್ಲಿ ನಿಧನರಾದರು.

ಅವರ ನಿಧನದ ಬಳಿಕ ಕುಟುಂಬದವರು ಮಾನವೀಯ ನಿರ್ಧಾರ ಕೈಗೊಂಡಿದ್ದು, ನೇತ್ರದಾನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ನೇತ್ರ ತಜ್ಞರ ತಂಡ ನೇತ್ರದಾನ ಪ್ರಕ್ರಿಯೆ ನೆರವೇರಿಸಿತು.

ವಿಜಯಕುಮಾರ ಜಿತೂರಿ ಅವರು ತಾಯಿ, ಪತ್ನಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಬೆಟಗೇರಿಯಲ್ಲಿ ನೆರವೇರಿತು.

ಲಯನ್ಸ್ ಕ್ಲಬ್‌ನ ರಮೇಶ ಶಿಗ್ಲಿ, ರಾಜಣ್ಣ ಮಲ್ಲಾಡದ, ಗಣಪತಸಾ ಮೇರವಾಡೆ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಬಲ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದರ ಜತೆಗೆ ಮಣ್ಣು–ನೀರು ಸಂರಕ್ಷಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ವಿಬಿಜಿ ರಾಮ್‌ಜಿ ಯೋಜನೆ ಪೂರಕವಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ (ವಿಬಿಜಿ ರಾಮ್‌ಜಿ) ಕುಮಾರ ಪೂಜಾರ ಹೇಳಿದರು.

ಗದಗ ತಾಲೂಕಿನ ಅಂತೂರ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಜನೆಯಡಿ ಕೂಲಿ ಮೊತ್ತವನ್ನು ₹382ಕ್ಕೆ ಹೆಚ್ಚಿಸಲಾಗಿದ್ದು, ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ದಾಖಲಿಸಿ, ಅಳತೆಗೆ ಅನುಗುಣವಾಗಿ ಕೂಲಿ ಪಾವತಿಸಲಾಗುತ್ತದೆ. ಪುರುಷರು ಹಾಗೂ ಮಹಿಳೆಯರಿಗೆ ಯಾವುದೇ ತಾರತಮ್ಯವಿಲ್ಲದೆ ಸಮಾನ ಕೂಲಿ ನೀಡಲಾಗುತ್ತದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಹಾಯಕ ನಿರ್ದೇಶಕ (ಪಂರಾ) ಶಿವಕುಮಾರ ವಾಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ಹಾಗೂ ಅಕುಶಲ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವ ಮೂಲಕ ವಿಬಿಜಿ ರಾಮ್‌ಜಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿದೆ. ಕಾಮಗಾರಿಗಳಲ್ಲಿ ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ಪ್ರತಿದಿನ ಎರಡು ಬಾರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ ಎಂದರು.

ಅಂತೂರ–ಬೆಂತೂರ ಗ್ರಾಮದ ಬೂದೀಶ್ವರ ಸಂಸ್ಥಾನ ಮಠದ ಡಾ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶಗೌಡ ಪಾಟೀಲ, ಕಾರ್ಯದರ್ಶಿ ಶಾಂತಯ್ಯ ಪ್ರಭಯ್ಯನಮಠ, ಟಿಎಇ ಪ್ರದೀಪ್ ನರೇಗಲ್ಲ, ಗ್ರಾಪಂ ಸಿಬ್ಬಂದಿ ಮಹಾತೇಶ ಮಜ್ಜಿಗುಡ್ಡ, ಅಶೋಕ ಜಿನಗಿ, ಬಿಎಫ್‌ಟಿ ದಾವಲಸಾಬ್ ಚಳ್ಳಮರದ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

ಸಚಿನ್ ಡಿ. ಪಾಟೀಲರಿಗೆ ಡಿಸಿಸಿ ಅಧ್ಯಕ್ಷ ಪಟ್ಟಕ್ಕೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಡಿ. ಪಾಟೀಲ ಅವರನ್ನು ಗದಗ ಜಿಲ್ಲಾ ಕಾಂಗ್ರೆಸ್‌ ಸಮಿತಿ (ಡಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕಾಂಗ್ರೆಸ್‌ ಮುಖಂಡರಾದ ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.

ಈ ಕುರಿತು ಗದಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ವೀಕ್ಷಕರಾಗಿರುವ ಎಐಸಿಸಿ ಕಾರ್ಯದರ್ಶಿ ವಿವೇಕ್‌ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಚಿನ್ ಡಿ. ಪಾಟೀಲ ಅವರು ಕಳೆದ 35 ವರ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ದುಡಿದಿದ್ದಾರೆ. ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ಹೋಬಳಿ ಮಟ್ಟದಿಂದ ಬೂತ್‌ಮಟ್ಟದವರೆಗೆ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅನ್ವರ ಶಿರಹಟ್ಟಿ ತಿಳಿಸಿದ್ದಾರೆ.

ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಂಘಟನೆಗೆ ತಮ್ಮದೇ ಆದ ಕಾರ್ಯಕರ್ತರ ಪಡೆಯೊಂದಿಗೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು, ರೈತರು, ದಲಿತರು, ಕೂಲಿ ಕಾರ್ಮಿಕರು, ಮಹಿಳೆಯರು, ದುರ್ಬಲ ವರ್ಗದವರು ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಸಚಿನ್ ಡಿ. ಪಾಟೀಲ ಅವರಿಗೆ ದೂರದೃಷ್ಟಿಯ ನಾಯಕತ್ವ ಗುಣಗಳಿವೆ. ಸರಳ, ಸಜ್ಜನ ಹಾಗೂ ಎಲ್ಲ ವರ್ಗದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರೆಂಬ ಹೆಗ್ಗಳಿಕೆ ಅವರಿಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಳಮಟ್ಟದಿಂದ ಪಕ್ಷ ಸಂಘಟಿಸಿದ ನಿಷ್ಠಾವಂತ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವುದರಿಂದ ಕಾಂಗ್ರೆಸ್‌ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಸಚಿನ್ ಡಿ. ಪಾಟೀಲರಿಗೆ ಅವಕಾಶ ನೀಡಿದರೆ 2028ರ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗಲಿದೆ ಎಂದು ಅನ್ವರ ಶಿರಹಟ್ಟಿ ಹಾಗೂ ಭಾಷಾಸಾಬ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.