Home Blog

ಬೆಳ್ಳಂದೂರಿನಲ್ಲಿ ಭೀಕರ ಕೃತ್ಯ! ಪ್ರೇಯಸಿಯನ್ನು ಕೊಂದ ಪ್ರಿಯಕರ

0

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ಸಿಕ್ಕಿಂ ಮೂಲದ 22 ವರ್ಷದ ಐಪಿ ಹಂಗ್ಮಾ ಕೊಲೆಯಾದ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನನ್ನು ಆರೋಪಿ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಸಿಕ್ಕಿಂ ನಿವಾಸಿಗಳಾಗಿದ್ದು, ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಇವರಿಬ್ಬರ ನಡುವೆ ಪ್ರೀತಿಯ ಸಂಬಂಧವಿದ್ದು, ಇತ್ತೀಚೆಗೆ ವೈಯಕ್ತಿಕ ಕಾರಣಗಳಿಂದ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ಆರೋಪಿ ಫುರ್ಬಾ ಲೇಪ್ಸಾ, ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಐಪಿ ಹಂಗ್ಮಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆ ಹಾಗೂ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ಹತ್ಯೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

2000 ಗೃಹಲಕ್ಷ್ಮಿ ಹಣ ಪಡೆಯುವವರೇ ಗಮನಿಸಿ! ಗ್ಯಾರಂಟಿ ಪಡೆಯಲು ಮತ್ತೆ ಅರ್ಜಿ ಹಾಕಿ, ಏನೆಲ್ಲಾ ದಾಖಲೆ ಕೊಡಬೇಕು?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮೇಜರ್ ಸರ್ಜರಿ ನಡೆಸಲು ಸರ್ಕಾರ ಮುಂದಾಗಿದೆ.

ಯೋಜನೆಗಳಲ್ಲಿ ನಕಲಿ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಎರಡೂ ಯೋಜನೆಗಳ ಫಲಾನುಭವಿಗಳಿಗೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಕಡ್ಡಾಯ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ಅರ್ಜಿ ಸಲ್ಲಿಸಿ ಮರು ಪರಿಶೀಲನೆಗೆ ಒಳಗಾದವರಿಗಷ್ಟೇ ಮುಂದಿನ ದಿನಗಳಲ್ಲಿ ಯೋಜನೆಗಳ ಸೌಲಭ್ಯ ಮುಂದುವರಿಯುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಸುಮಾರು 1.28 ಕೋಟಿ ಫಲಾನುಭವಿಗಳಿದ್ದು, ಅವರಲ್ಲಿ ಲಕ್ಷಾಂತರ ಮಂದಿ ಅನರ್ಹರಾಗಿರುವ ಶಂಕೆ ವ್ಯಕ್ತವಾಗಿದೆ. ತೆರಿಗೆ ಪಾವತಿದಾರರು, ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ಹಣ ಪಡೆಯುತ್ತಿರುವವರು ಹಾಗೂ ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಲು ಸರ್ಕಾರ ಮುಂದಾಗಿದೆ. ಮೃತಪಟ್ಟವರ ಖಾತೆಗಳಿಗೆ ಸುಮಾರು 100 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದರಿಂದ ಯೋಜನೆಯ ಸಮಗ್ರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

ಇದೇ ರೀತಿ 1.68 ಕೋಟಿಗೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಮಾಹಿತಿಯನ್ನೂ ಮರು ಪರಿಶೀಲನೆ ನಡೆಸಲಾಗುತ್ತಿದೆ. ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ವಿದ್ಯುತ್ ಮೀಟರ್‌ಗಳಿದ್ದು, ವಾಣಿಜ್ಯ ಚಟುವಟಿಕೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಬಳಸಲಾಗುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಹೊಸ ಅರ್ಜಿ ನಮೂನೆ ಸಿದ್ಧಪಡಿಸಲಾಗುತ್ತಿದ್ದು, ಫಲಾನುಭವಿಗಳ ಆಧಾರ್, ಬ್ಯಾಂಕ್ ಖಾತೆ, ಪಡಿತರ ಚೀಟಿ, ಆದಾಯ ತೆರಿಗೆ ಹಾಗೂ ಜಿಎಸ್‌ಟಿ ವಿವರ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದು ಮರು ಪರಿಶೀಲನೆ ನಡೆಸಲಾಗುತ್ತದೆ. ಬಯೋಮೆಟ್ರಿಕ್ ದೃಢೀಕರಣದ ಮೂಲಕ ನೈಜ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಯೋಜನೆಗಳ ಲಾಭ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

ಶೀಘ್ರದಲ್ಲೇ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದ್ದು, ಈ ಕುರಿತು ಸರ್ಕಾರ ಅಧಿಕೃತ ಮಾರ್ಗಸೂಚಿ ಪ್ರಕಟಿಸುವ ನಿರೀಕ್ಷೆ ಇದೆ.

ಬನ್ನೇರುಘಟ್ಟದಲ್ಲಿ ಹೊಸ ಅತಿಥಿಗಳು! ಜೀಬ್ರಾ, ನೀರಾನೆ ಮರಿಗಳ ಜನನ, ಹೊಸ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತ!

ಬೆಂಗಳೂರು: ವನ್ಯಜೀವಿ ಪ್ರಿಯರು ಹಾಗೂ ಪ್ರವಾಸಿಗರಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಸಂತಸದ ಸುದ್ದಿ ಸಿಕ್ಕಿದೆ.

ದಕ್ಷಿಣ ಆಫ್ರಿಕಾದಿಂದ ಇತ್ತೀಚೆಗೆ ಕರೆತರಲಾಗಿದ್ದ ನಾಲ್ಕು ಚೀತಾಗಳು ಯಶಸ್ವಿಯಾಗಿ ಬೆಂಗಳೂರಿನ ವಾತಾವರಣಕ್ಕೆ ಹೊಂದಿಕೊಂಡಿದ್ದು, ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳು ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಈ ಅವಧಿಯಲ್ಲಿ ಪಶುವೈದ್ಯರು ಹಾಗೂ ಪ್ರಾಣಿ ಪಾಲನಾ ಸಿಬ್ಬಂದಿ ಅವುಗಳ ಆರೋಗ್ಯ, ಆಹಾರ ಪದ್ಧತಿ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳುವಿಕೆಯನ್ನು ನಿಕಟವಾಗಿ ಪರಿಶೀಲಿಸಿದ್ದರು. ಎಲ್ಲಾ ಪರೀಕ್ಷೆಗಳು ತೃಪ್ತಿಕರವಾಗಿದ್ದ ಹಿನ್ನೆಲೆಯಲ್ಲಿ ಚೀತಾಗಳನ್ನು ಇದೀಗ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗಿದೆ.

ಇದೇ ವೇಳೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜೀಬ್ರಾ ಹಾಗೂ ನೀರಾನೆ ಮರಿಗಳ ಜನನವು ಮತ್ತಷ್ಟು ಸಂತಸ ತಂದಿದೆ. ‘ಕಬಿನಿ’ ಹೆಸರಿನ ಜೀಬ್ರಾ ಆರೋಗ್ಯವಂತ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಇದರೊಂದಿಗೆ ಉದ್ಯಾನದಲ್ಲಿನ ಜೀಬ್ರಾಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ‘ದಶ್ಯಾ’ ಹೆಸರಿನ ಹೆಣ್ಣು ನೀರಾನೆ ಕೂಡ ಮರಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದ್ದು, ನೈಸರ್ಗಿಕ ಬಾಂಧವ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಸಿಬ್ಬಂದಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಉದ್ಯಾನವನದ ಅಧಿಕಾರಿಗಳ ಪ್ರಕಾರ, ಈ ಬೆಳವಣಿಗೆಗಳು ವನ್ಯಜೀವಿ ಸಂರಕ್ಷಣೆ, ವೈಜ್ಞಾನಿಕ ನಿರ್ವಹಣೆ ಹಾಗೂ ಪ್ರಾಣಿ ಕಲ್ಯಾಣಕ್ಕೆ ನೀಡುತ್ತಿರುವ ಆದ್ಯತೆಯ ಪ್ರತೀಕವಾಗಿವೆ. ವನ್ಯಜೀವಿಗಳು ಆರೋಗ್ಯಕರವಾಗಿ ಬೆಳೆಯಲು ಅಗತ್ಯವಾದ ನೈಸರ್ಗಿಕ ವಾತಾವರಣವನ್ನು ಉದ್ಯಾನವನದಲ್ಲಿ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಳೆಯ ರೌದ್ರಾವತಾರ! ಜನಜೀವನ ಸಂಪೂರ್ಣ ಅಸ್ತವ್ಯಸ್ತ

ರಾಯಚೂರು: ಜಿಲ್ಲೆಯಾದ್ಯಂತ ಶನಿವಾರ ಬೆಳ್ಳಂಬೆಳಗ್ಗೆಯೇ ಆರಂಭವಾದ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಅವಾಂತರಗಳು ಉಂಟಾಗಿವೆ.

ನಿರಂತರ ಮಳೆಯ ಪರಿಣಾಮ ಹಳ್ಳ–ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದೆ. ಇದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ನಗರದ ಐಡಿಎಸ್‌ಎಂಟಿ ಲೇಔಟ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ಮಳೆ ನೀರು ಸರಿಯಾಗಿ ಹರಿಯದೆ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸವಾರರು ನೀರಿನಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದೇ ವೇಳೆ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಅವರ ಮನೆ ಸೇರಿದಂತೆ ಹಲವೆಡೆ ಚರಂಡಿ ಮಿಶ್ರಿತ ಮಳೆನೀರು ಮನೆಗಳಿಗೆ ನುಗ್ಗಿದ್ದು, ನಿವಾಸಿಗಳು ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ.

ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ: ಕೊಲೆ ಆರೋಪಿ ಕಾಲಿಗೆ ಗುಂಡೇಟು!

ಶಿವಮೊಗ್ಗ: ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್‌ನಲ್ಲಿ ನಡೆದಿದೆ.

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಆರೋಪಿ ಮಧು ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಮೊದಲು ಎಚ್ಚರಿಕೆಗಾಗಿ ಏರ್ ಫೈರ್ ಮಾಡಿದ್ದಾರೆ. ಆದರೆ ಆರೋಪಿ ಮಾತು ಕೇಳದ ಹಿನ್ನೆಲೆಯಲ್ಲಿ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿಗೆ ಒಳಗಾದ ಆರೋಪಿ ಮಧು ಹಾಗೂ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಶಿವಮೊಗ್ಗದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹನನ್ನು ಎದುರಾಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿತ್ತು. ಈ ಪ್ರಕರಣದ ತನಿಖೆಯ ಭಾಗವಾಗಿ ಶನಿವಾರ ಪೊಲೀಸರು ಮಧು ಸೇರಿದಂತೆ ಐವರನ್ನು ಬಂಧಿಸಿದ್ದರು.

ಹಾಸನದಲ್ಲಿ ದಾರುಣ ಘಟನೆ! ಜಾಂಡೀಸ್‌ನಿಂದ ವಿದ್ಯಾರ್ಥಿನಿ ಸಾವು

ಹಾಸನ: ತೀವ್ರ ಜ್ವರ ಹಾಗೂ ಜಾಂಡೀಸ್‌ನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಪ್ರೀತಿ (20) ಎಂದು ಗುರುತಿಸಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಲೋಕೇಶ್.ಟಿ.ಕೆ. ಮತ್ತು ಶೋಭಾ ದಂಪತಿಯ ಹಿರಿಯ ಪುತ್ರಿಯಾಗಿದ್ದಾರೆ. ಪ್ರೀತಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ಓದುತ್ತಿದ್ದಳು ಎಂದು ತಿಳಿದುಬಂದಿದೆ.

ಕೆಲ ದಿನಗಳಿಂದ ತೀವ್ರ ಜ್ವರ ಹಾಗೂ ಜಾಂಡೀಸ್‌ನಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ವಿದ್ಯಾರ್ಥಿನಿಯ ಅಕಾಲಿಕ ನಿಧನದಿಂದ ಕಾಲೇಜು ಸಿಬ್ಬಂದಿ ಹಾಗೂ ಸಹಪಾಠಿಗಳು ಆಘಾತಕ್ಕೊಳಗಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ.

ವಾರಾಂತ್ಯದಲ್ಲಿ ಚಿನ್ನದ ದರ ಮತ್ತೆ ಏರಿಕೆ! 1.49 ಗಡಿ ದಾಟಿದ ಅಪರಂಜಿ, ಗ್ರಾಹಕರು ಕಂಗಾಲು

0

ನವದೆಹಲಿ: ವಾರಾಂತ್ಯದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಕಳೆದ ಶುಕ್ರವಾರ ಗ್ರಾಂಗೆ ₹270 ಏರಿಕೆಯಾಗಿದ್ದ ಚಿನ್ನದ ದರ, ಈ ವಾರಾಂತ್ಯದಲ್ಲಿ 45 ರೂ.ಗಳಷ್ಟು ಹೆಚ್ಚಳವಾಗಿದೆ.

ಅಪರಂಜಿ (24 ಕ್ಯಾರಟ್) ಚಿನ್ನದ ಬೆಲೆ ₹14,900 ಗಡಿ ದಾಟಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಏರಿಕೆಯ ಪ್ರವೃತ್ತಿ ಮುಂದುವರಿದಿದೆ. ಇದೇ ವೇಳೆ ಬೆಳ್ಳಿ ಬೆಲೆಯೂ ಪ್ರತಿ ಕಿಲೋಗೆ ₹5ರಷ್ಟು ಏರಿಕೆಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,36,650 ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹1,49,080 ತಲುಪಿದೆ. ಬೆಳ್ಳಿ ಬೆಲೆ 100 ಗ್ರಾಂಗೆ ₹26,000ರಷ್ಟಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿಯೂ ಇದೇ ದರಗಳು ಮುಂದುವರಿದಿದ್ದು, ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಬೆಳ್ಳಿ ದರ ₹27,000ವರೆಗೆ ದಾಖಲಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,181 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.

ಸರ್ಕಾರಿ ಶಾಲೆಗಳಲ್ಲಿ ಶೂ ಬದಲು ಚಪ್ಪಲಿ ವಿತರಣೆ? ಹೊಸ ನಿಯಮ ತರಲು ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ–ಸಾಕ್ಸ್ ಯೋಜನೆಯಲ್ಲಿ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದ್ದು, ವಾತಾವರಣಕ್ಕೆ ಅನುಗುಣವಾಗಿ ಶೂ ಅಥವಾ ಚಪ್ಪಲಿ ವಿತರಿಸುವ ಬಗ್ಗೆ ಚಿಂತನೆ ನಡೆಸಿದೆ.

ದೀರ್ಘಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನ ಸೋಂಕುಗಳು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಇಲಾಖೆ ಈ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ. ಯಾವ ಪ್ರದೇಶಗಳಲ್ಲಿ ಶೂ ಅಥವಾ ಚಪ್ಪಲಿ ಹೆಚ್ಚು ಸೂಕ್ತ ಎಂಬ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮಳೆ ಹಾಗೂ ಬೇಸಿಗೆ ಎರಡೂ ಕಾಲಘಟ್ಟಗಳಲ್ಲಿ ಚಪ್ಪಲಿ ಧರಿಸುವುದು ಹೆಚ್ಚು ಅನುಕೂಲಕರವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದ್ದು, ಸಾಕ್ಸ್ ಒದ್ದೆಯಾಗುವುದು ಹಾಗೂ ದುರ್ಗಂಧ ಉಂಟಾಗುವ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ಇಲಾಖೆ ಪರಿಗಣಿಸುತ್ತಿದೆ. ಜೊತೆಗೆ ದೀರ್ಘಕಾಲ ಶೂ ಧರಿಸುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನೂ ಗಮನದಲ್ಲಿಟ್ಟುಕೊಂಡು ಈ ಬದಲಾವಣೆಯನ್ನು ಪರಿಶೀಲಿಸಲಾಗುತ್ತಿದೆ.

ಪ್ರಸ್ತುತ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ವಿತರಿಸಲಾಗುತ್ತಿದೆ. ಕಳೆದ ವರ್ಷ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನುಗುಣವಾಗಿ ₹265 ರಿಂದ ₹325 ರವರೆಗೆ ಅನುದಾನ ನಿಗದಿಪಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಯೋಜನೆಯಲ್ಲಿ ಬದಲಾವಣೆ ತರಬಹುದೇ ಎಂಬ ಕುತೂಹಲ ಹೆಚ್ಚಾಗಿದೆ.

ಮಂತ್ರಾಲಯದಲ್ಲಿ ವಸತಿ ಬಿಕ್ಕಟ್ಟು! ಮಠದ ಪ್ರಾಂಗಣದಲ್ಲೇ ಮಲಗುತ್ತಿದ್ದಾರೆ ಭಕ್ತರು

ರಾಯಚೂರು: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತರ ಹರಿವು ನಿರಂತರವಾಗಿ ಹೆಚ್ಚುತ್ತಿದ್ದು, ಸುತ್ತಮುತ್ತಲಿನ ವಸತಿಗೃಹಗಳಲ್ಲಿ ಸಮಸ್ಯೆ ಉಂಟಾಗಿದೆ.

ನಿತ್ಯ ಸುಮಾರು 3 ಸಾವಿರಕ್ಕೂ ಅಧಿಕ ರೂಮ್‌ಗಳು ಸಂಪೂರ್ಣ ಭರ್ತಿಯಾಗಿದ್ದು, ಕನಿಷ್ಠ ವಸತಿಗೂ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಭಕ್ತರ ಸಂಖ್ಯೆ ಹೆಚ್ಚಿದನ್ನು ಗಮನದಲ್ಲಿಟ್ಟುಕೊಂಡು ಮಠದ ವತಿಯಿಂದ ಕಲ್ಯಾಣ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದ್ದರೂ ಅದು ಕೂಡ ಸಾಕಾಗದೆ ಭಕ್ತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೆಲವರು ಮಠದ ಪ್ರಾಂಗಣದಲ್ಲೇ ಮಲಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಇದೇ ವೇಳೆ ಖಾಸಗಿ ವಸತಿ ಗೃಹ ಮಾಲೀಕರು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಆರೋಪವೂ ಕೇಳಿಬಂದಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.

ಮಳೆಗಾಲದ ನಡುವೆಯೂ ಮಂತ್ರಾಲಯಕ್ಕೆ ಭಕ್ತರ ಆಗಮನ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ವಸತಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ದಾರುಣ ದುರಂತ! ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನೀರಿನಲ್ಲಿ ಮುಳುಗಿ ಮಕ್ಕಳ ಸಾವಿನ ಸರಣಿ ಮುಂದುವರಿದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದ ದುರಂತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಆಟವಾಡಲು ತೆರಳಿದ್ದ ದಕ್ಷಾ (11) ಮತ್ತು ಧನುಷ್ (4) ಎಂಬ ಸಹೋದರ-ಸಹೋದರಿ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ನಂತರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಕ್ಕಳು ಬಿದ್ದು ಸಾವನ್ನಪ್ಪಿದ ಕೃಷಿ ಹೊಂಡವು ಸ್ಥಳೀಯ ರೈತ ಗುರುಮೂರ್ತಿ ಅವರಿಗೆ ಸೇರಿದ್ದು, ಹೊಂಡದ ಸುತ್ತಲೂ ಯಾವುದೇ ಭದ್ರತಾ ಬೇಲಿ ಹಾಕದಿರುವುದು ಘಟನೆಗೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದೇ ವೇಳೆ ರಾಜ್ಯದ ವಿವಿಧೆಡೆ ನೀರಿನ ಹೊಂಡ, ಕೆರೆ ಹಾಗೂ ಸಂಪ್‌ಗಳಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ 2 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿದ್ದರೆ, ಬಾಗಲಕೋಟೆಯಲ್ಲಿ 18 ತಿಂಗಳ ಮಗು ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ವರದಿಯಾಗಿವೆ.

ಈ ಘಟನೆಗಳ ಸರಣಿ ಮತ್ತೆ ಮುಂದುವರಿದಿರುವುದು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ.

error: Content is protected !!