ಬೆಂಗಳೂರು: ಮಧ್ಯಪ್ರಾಚ್ಯದ ಉದ್ವಿಗ್ನತೆ ಹಿನ್ನೆಲೆ ರಸಗೊಬ್ಬರ ಕಚ್ಚಾ ವಸ್ತುಗಳ ಕೊರತೆಯ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಿರುವುದರಿಂದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ರೈತರು ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಲು ಫಾರ್ಮರ್ಸ್ ಗುರುತು ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಕೃಷಿ ಇಲಾಖೆ ಈಗಾಗಲೇ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಪ್ರತಿಯೊಬ್ಬ ರೈತರೂ ಗುರುತು ಸಂಖ್ಯೆ ಪಡೆಯಬೇಕಾಗಿದೆ.
ಗೊಬ್ಬರ ತಯಾರಿಕೆಗೆ ಅಗತ್ಯವಿರುವ ನೈಸರ್ಗಿಕ ಅನಿಲ ಹಾಗೂ ಇತರೆ ಕಚ್ಚಾ ವಸ್ತುಗಳು ಕತಾರ್, ಸೌದಿ ಅರೇಬಿಯಾ ಸೇರಿದಂತೆ ಮಧ್ಯಪ್ರಾಚ್ಯದ ದೇಶಗಳಿಂದ ಬರುತ್ತವೆ. ಇವುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೆ ರಾಜ್ಯದಲ್ಲಿ ಗೊಬ್ಬರ ಕೊರತೆ ಎದುರಾಗುವ ಸಾಧ್ಯತೆ ಇದೆ.
ಇದೇ ವೇಳೆ ರೈತರು ಅಗತ್ಯಕ್ಕಿಂತ ಹೆಚ್ಚು ಯೂರಿಯಾ ಬಳಕೆ ಮಾಡುತ್ತಿರುವುದು ಹಾಗೂ ಕೆಲವು ಕೈಗಾರಿಕೆಗಳಲ್ಲಿ ಅಕ್ರಮ ಬಳಕೆ ನಡೆಯುತ್ತಿರುವುದು ಕಂಡುಬಂದಿದೆ. ಜೊತೆಗೆ ಕೆಲವರು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡಿ ಕೃತಕ ಅಭಾವ ಸೃಷ್ಟಿಸುವ ಪ್ರವೃತ್ತಿಯೂ ಇದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ಕ್ರಮ ಕೈಗೊಂಡಿದೆ.
ಗುರುತು ಸಂಖ್ಯೆಯ ಮೂಲಕ ರೈತರ ಜಮೀನಿನ ಪ್ರಮಾಣಕ್ಕೆ ಅನುಗುಣವಾಗಿ ಎಷ್ಟು ಗೊಬ್ಬರ ಬೇಕು ಎಂಬುದನ್ನು ಲೆಕ್ಕ ಹಾಕಿ ಅಷ್ಟೇ ಪ್ರಮಾಣದಲ್ಲಿ ವಿತರಣೆ ಮಾಡಲು ಕೃಷಿ ಇಲಾಖೆ ಮುಂದಾಗಿದೆ.
ರಾಜ್ಯಕ್ಕೆ ಈ ವರ್ಷ ಸುಮಾರು 30 ಲಕ್ಷ ಟನ್ ರಸಗೊಬ್ಬರ ಹಂಚಿಕೆಯಾಗಿದೆ. ಅದರಲ್ಲಿ ಯೂರಿಯಾ ಪ್ರಮುಖ ಪಾಲು ಹೊಂದಿದ್ದು, ಸದ್ಯಕ್ಕೆ ಅಗತ್ಯ ಪ್ರಮಾಣದ ದಾಸ್ತಾನು ಇರುವುದಾಗಿ ಮೂಲಗಳು ತಿಳಿಸಿವೆ.

