Home Blog

ಕ್ಷಣಾರ್ಧದಲ್ಲೇ ರಕ್ಷಣಾ ಕಾರ್ಯ: ಚರಂಡಿಗೆ ಉರುಳಿದ ಕಾರಿನಿಂದ ಮಗು ಎತ್ತಿಕೊಂಡು ಬಂದ ಎಸ್ಐ ವಿಡಿಯೊ ವೈರಲ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ್ದ ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿದ ವಿಟ್ಲ ಪೊಲೀಸರ ಮಾನವೀಯತೆ ಮತ್ತು ಸಮಯಪ್ರಜ್ಞೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಎಸ್ಐ ರಾಮಕೃಷ್ಣ ಪುಟ್ಟ ಮಗುವನ್ನು ಸುರಕ್ಷಿತವಾಗಿ ಹೊರತೆಗೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾನುವಾರ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪೆಟ್ರೋಲ್ ಬಂಕ್ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತ್ತು. ಕಾರಿನೊಳಗೆ ಮಗು, ಮಹಿಳೆ ಮತ್ತು ಚಾಲಕ ಸಿಲುಕಿಕೊಂಡಿದ್ದು, ಅಪಘಾತದ ತೀವ್ರತೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಮೀಪದಲ್ಲೇ ಕರ್ತವ್ಯದಲ್ಲಿದ್ದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ ಅಪಘಾತದ ಶಬ್ದ ಕೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರಿನೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಹೊರತೆಗೆದು ತಕ್ಷಣ ನೆರವು ಒದಗಿಸಿದರು.

ರಕ್ಷಣಾ ಕಾರ್ಯಾಚರಣೆಯ ವೇಳೆ ಅಳುತ್ತಿದ್ದ ಮಗುವನ್ನು ಎಸ್ಐ ರಾಮಕೃಷ್ಣ ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣದ ಪೊಲೀಸ್ ಕಾರ್ಯಾಚರಣೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮಯೋಚಿತವಾಗಿ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿಗರಿಗೆ ತಂಪೆರೆದ ವರುಣ; ಅರ್ಧ ಕರ್ನಾಟಕದಲ್ಲಿ ನಾಳೆ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಬೆಂಗಳೂರಿನಲ್ಲಿ ಮುಂದುವರಿದಿದ್ದು, ನಗರದ ಹಲವು ಭಾಗಗಳಲ್ಲಿ ಉತ್ತಮ ವರ್ಷಧಾರೆ ದಾಖಲಾಗಿದೆ. ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಮಳೆಯ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು. ಹಲವು ಮಂದಿ ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳು ಹಾಗೂ ಮೇಲ್ಛಾವಣಿ ಇರುವ ಸ್ಥಳಗಳಲ್ಲಿ ಆಶ್ರಯ ಪಡೆದು ಮಳೆ ಕಡಿಮೆಯಾಗುವವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ನಾಳೆ ಅರ್ಧ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳು ಪ್ರದೇಶದಲ್ಲಿ 160.5 ಮಿ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ-1ನಲ್ಲಿ 155 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.

ಇದಲ್ಲದೆ, ಮಡಿಕೇರಿಯ ಪೆರಾಜೆ ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿ ಜಿಲ್ಲೆಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆಯ ಸಮಯದಲ್ಲಿ ಅನಗತ್ಯ ಸಂಚಾರವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಲಾಗಿದೆ.

ಭಾರತದಲ್ಲಿ ಮೊದಲ ಡೆಂಗ್ಯೂ ಲಸಿಕೆಗೆ ಅನುಮೋದನೆ: 4 ರಿಂದ 60 ವರ್ಷದವರಿಗೆ QDENGA ನೀಡಲು ಗ್ರೀನ್ ಸಿಗ್ನಲ್

0

ನವದೆಹಲಿ: ಡೆಂಗ್ಯೂ ನಿಯಂತ್ರಣದತ್ತ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಲ್ಲೇ ಮೊದಲ ಬಾರಿಗೆ QDENGA ಡೆಂಗ್ಯೂ ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತದಲ್ಲಿ ಡೆಂಗ್ಯೂ ತಡೆಗಟ್ಟಲು ಮೊದಲ ಅಧಿಕೃತ ಲಸಿಕೆ ಲಭ್ಯವಾಗಿದೆ.

ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ ಅಭಿವೃದ್ಧಿಪಡಿಸಿರುವ QDENGA ಲಸಿಕೆಯನ್ನು 4 ರಿಂದ 60 ವರ್ಷದೊಳಗಿನವರಿಗೆ ನೀಡಲು ಅನುಮತಿ ನೀಡಲಾಗಿದೆ. ಡೆಂಗ್ಯೂ ಸೋಂಕು ಹಿಂದೆ ಬಂದಿದ್ದರೂ ಅಥವಾ ಬರದಿದ್ದರೂ ಈ ಲಸಿಕೆಯನ್ನು ಪಡೆಯಬಹುದಾಗಿದೆ.

ಈ ಲಸಿಕೆಯ ಮತ್ತೊಂದು ವಿಶೇಷತೆ ಎಂದರೆ, ಲಸಿಕೆ ಪಡೆಯುವ ಮೊದಲು ಡೆಂಗ್ಯೂ ಪರೀಕ್ಷೆ ಮಾಡಿಸಬೇಕಾದ ಅಗತ್ಯವಿಲ್ಲ. ಇದರಿಂದ ಸಾಮಾನ್ಯ ಜನರಿಗೆ ಲಸಿಕೆ ಪಡೆಯುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ.

QDENGA ಲಸಿಕೆಯನ್ನು ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ ನೀಡಿದ ಮೂರು ತಿಂಗಳ ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ಈ ಲಸಿಕೆಯನ್ನು ಡೆಂಗ್ಯೂ ವೈರಸ್‌ನ ನಾಲ್ಕೂ ಸೆರೋಟೈಪ್‌ಗಳ ವಿರುದ್ಧ ರಕ್ಷಣೆ ನೀಡುವಂತೆ ಅಭಿವೃದ್ಧಿಪಡಿಸಲಾಗಿದೆ.

ಲಸಿಕೆಗೆ ಅನುಮೋದನೆ ನೀಡುವ ಮೊದಲು 19 ಹಂತಗಳ ಕ್ಲಿನಿಕಲ್ ಪರೀಕ್ಷೆ ನಡೆಸಲಾಗಿದೆ. ವಿಶ್ವದ ವಿವಿಧ ದೇಶಗಳ 28 ಸಾವಿರಕ್ಕೂ ಹೆಚ್ಚು ಮಂದಿ ಈ ಅಧ್ಯಯನದಲ್ಲಿ ಭಾಗವಹಿಸಿದ್ದರು. ಭಾರತದಲ್ಲೂ 4 ರಿಂದ 60 ವರ್ಷದವರ ಮೇಲೆ ಮೂರನೇ ಹಂತದ ಕ್ಲಿನಿಕಲ್ ಪರೀಕ್ಷೆ ನಡೆಸಿ, ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಪರಿಶೀಲಿಸಲಾಗಿದೆ.

2022ರಿಂದ ಇಲ್ಲಿಯವರೆಗೆ 43 ದೇಶಗಳು QDENGA ಲಸಿಕೆಗೆ ಅನುಮೋದನೆ ನೀಡಿದ್ದು, ವಿಶ್ವದಾದ್ಯಂತ 3.2 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಿಸಲಾಗಿದೆ.

ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಡೆಂಗ್ಯೂ ಸೋಂಕಿಗೆ ಒಳಗಾಗುತ್ತಿದ್ದಾರೆ. ನಗರೀಕರಣ, ಹವಾಮಾನ ಬದಲಾವಣೆ ಹಾಗೂ ಸೊಳ್ಳೆಗಳ ಸಂಖ್ಯೆಯ ಹೆಚ್ಚಳದಿಂದ ಡೆಂಗ್ಯೂ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಲಸಿಕೆಗೆ ದೊರೆತಿರುವ ಅನುಮೋದನೆ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಡೆಂಗ್ಯೂ ಹೆಚ್ಚಿರುವ ಪ್ರದೇಶಗಳಲ್ಲಿ QDENGA ಲಸಿಕೆ ಬಳಕೆಯನ್ನು ಶಿಫಾರಸು ಮಾಡಿದೆ. ಈ ಲಸಿಕೆಗೆ WHO ಪ್ರೀಕ್ವಾಲಿಫಿಕೇಶನ್ ಕೂಡ ಲಭ್ಯವಾಗಿದ್ದು, ಗುಣಮಟ್ಟ, ಸುರಕ್ಷತೆ ಹಾಗೂ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಿದೆ.

ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; ಕುಡಿಯುವ ನೀರಿಗೆ ಮೊದಲ ಆದ್ಯತೆ, ಗ್ರಾಮದಲ್ಲೇ ಉದ್ಯೋಗ ಸೃಷ್ಟಿಗೆ ಸೂಚನೆ – ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ 178 ತಾಲೂಕುಗಳಲ್ಲಿ ಮಳೆಯ ಕೊರತೆ ದಾಖಲಾಗಿದ್ದು, ಅವುಗಳಲ್ಲಿ 60 ತಾಲೂಕುಗಳು ತೀವ್ರ ಮಳೆ ಅಭಾವವನ್ನು ಎದುರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ 117 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಜೊತೆಗೆ 95 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇನ್ನೂ 25 ಕೋಟಿ ರೂಪಾಯಿ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಗ್ರಾಮ ಅಥವಾ ತಾಂಡಾದಲ್ಲಿ ಕುಡಿಯುವ ನೀರಿನ ಕೊಳವೆಬಾವಿಗಳು ಬತ್ತಿದರೆ, ಖಾಸಗಿ ಬೋರ್‌ವೆಲ್ ಅಥವಾ ಬಾವಿಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲಿ ಹೊಸ ಕೊಳವೆಬಾವಿ ಕೊರೆಯಲು ಸಹ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮುಂದಿನ ಮೂರುರಿಂದ ನಾಲ್ಕು ತಿಂಗಳುಗಳವರೆಗೆ ಸಮರ್ಪಕ ಮಳೆಯಾಗದಿದ್ದರೂ ಮುಂದಿನ ಮುಂಗಾರು ಆರಂಭವಾಗುವವರೆಗೆ ನೀರಿನ ಕೊರತೆ ಉಂಟಾಗದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಈಗಾಗಲೇ ಅಧ್ಯಯನ ಹಾಗೂ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ ಸಚಿವರು, ಬ್ಯಾಂಕ್ ಸಾಲ ಬಾಕಿ ಇರುವ ರೈತರು ಹಾಗೂ ಸಾಲವನ್ನು ಒಮ್ಮೆ ಇತ್ಯರ್ಥಪಡಿಸಿರುವ ರೈತರೂ ಸಹ ಸಮುದಾಯ ಸೇವಾ ಕೇಂದ್ರಗಳ ಮೂಲಕ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನುದಾನದ ಅನುಪಾತವನ್ನು 90:10ರಿಂದ 60:40ಕ್ಕೆ ಬದಲಾಯಿಸಿರುವುದರಿಂದ ರಾಜ್ಯದ ಮೇಲಿನ ಆರ್ಥಿಕ ಹೊರೆ ಹೆಚ್ಚಾದರೂ, ಬಡವರು,

ಗ್ರಾಮೀಣರು, ದಲಿತರು ಹಾಗೂ ವಂಚಿತ ವರ್ಗದ ಜನರ ಹಿತದೃಷ್ಟಿಯಿಂದ ಜುಲೈ 1ರಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಇದುವರೆಗೆ ಸುಮಾರು 5 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಕೇಳಿ ಬಂದ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದಲ್ಲದೆ, ವಿಬಿಜಿ ರಾಮ್‌ಜಿ ಯೋಜನೆಯಡಿ 318 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದ್ದು, ಹೆಚ್ಚುವರಿ ಕ್ರಿಯಾ ಯೋಜನೆ ಸಲ್ಲಿಸಲು ಪೋರ್ಟಲ್ ತೆರೆದಿದೆ. ಶಾಲಾ ಕೊಠಡಿಗಳು, ಆರೋಗ್ಯ ಕೇಂದ್ರಗಳು, ಸರ್ಕಾರಿ ಕಟ್ಟಡಗಳ ದುರಸ್ತಿ, ಕೃಷಿ ಹೊಂಡ ನಿರ್ಮಾಣ, ವಿತರಣಾ ಕಾಲುವೆ, ಹನಿ ನೀರಾವರಿ ಹಾಗೂ ಕಿರು ಅರಣ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಗಳ ಸದುಪಯೋಗವನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದರು.

ಕ್ಷಮಿಸಿ ಅಪ್ಪ… ನನ್ನಿಂದ ಸರ್ಕಾರಿ ಕೆಲಸ ಪಡೆಯಲು ಸಾಧ್ಯವಾಗಲಿಲ್ಲ: ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಬಿ.ಟೆಕ್ ವಿದ್ಯಾರ್ಥಿ!

0

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಸರ್ಕಾರಿ ಉದ್ಯೋಗಕ್ಕಾಗಿ ಹಲವು ಬಾರಿ ಪ್ರಯತ್ನಿಸಿದರೂ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದ ಯುವಕ, ಡೆತ್‌ನೋಟ್ ಬರೆದು ತಂದೆಗೆ ಕ್ಷಮೆಯಾಚಿಸಿ ಜೀವತ್ಯಾಗ ಮಾಡಿದ್ದಾನೆ.

ಮೃತನನ್ನು 23 ವರ್ಷದ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. 2024ರಲ್ಲಿ ಕಾನ್ಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶ ಮಟ್ಟದಲ್ಲಿ ಮೂರನೇ ರ್ಯಾಂಕ್ ಗಳಿಸಿದ್ದ. ಈ ಸಾಧನೆಗಾಗಿ ನಡೆದ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಂದ ಚಿನ್ನದ ಪದಕ ಸ್ವೀಕರಿಸಿದ್ದ ಎನ್ನಲಾಗಿದೆ.

ಘಟನೆ ನಡೆದ ವೇಳೆ ಮನೆಯಲ್ಲಿ ಆನಂದ್ ಒಬ್ಬರೇ ಇದ್ದರು. ಕುಟುಂಬದ ಸದಸ್ಯರು ಹಿರಿಯ ಸಹೋದರನ ವಿವಾಹ ನಿಶ್ಚಯದ ಹಿನ್ನೆಲೆಯಲ್ಲಿ ಸ್ವಗ್ರಾಮ ಬಿಹಾರಕ್ಕೆ ತೆರಳಿದ್ದರು. ಈ ವೇಳೆ ಮನೆ ಕೆಲಸದಾಕೆ ಬಂದು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನೆರೆಹೊರೆಯವರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದಾಗ ಆನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಕೊಠಡಿಯಲ್ಲಿ ಐದು ಸಾಲುಗಳ ಡೆತ್‌ನೋಟ್ ಪತ್ತೆಹಚ್ಚಿದ್ದಾರೆ. ಅದರಲ್ಲಿ ಇಂಗ್ಲಿಷ್‌ನಲ್ಲಿ, “ಸಾರಿ ಅಪ್ಪ… ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 50 ಬಾರಿ ಪ್ರಯತ್ನಿಸಿದೆ. ಆದರೆ ನನಗೆ ಯಶಸ್ಸು ಸಿಗಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಮೃತನ ತಂದೆ ರಾಜಕುಮಾರ್, ಆನಂದ್ ಪದವಿ ಪೂರ್ಣಗೊಳಿಸಿದ ಬಳಿಕ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತೊಡಗಿದ್ದನು. ರೈಲ್ವೆ, ಎಸ್‌ಎಸ್‌ಸಿ, ಬ್ಯಾಂಕ್ ಹಾಗೂ ಶಿಕ್ಷಣ ಇಲಾಖೆಯ ವಿವಿಧ ನೇಮಕಾತಿ ಪರೀಕ್ಷೆಗಳನ್ನು ಬರೆದಿದ್ದರೂ ಎಲ್ಲಿಯೂ ಆಯ್ಕೆಯಾಗಿರಲಿಲ್ಲ. ಇದರಿಂದ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಡೆತ್‌ನೋಟ್ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.

CJP ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರಿಂದ ಅಶ್ರುವಾಯು ಪ್ರಯೋಗ! ಅಭಿಜೀತ್ ದೀಪ್ಕೆ ಪೊಲೀಸರ ವಶಕ್ಕೆ

0

ನವದೆಹಲಿ: ಸಂಸತ್ ಚಲೋ ಪ್ರತಿಭಟನಾ ರ್ಯಾಲಿ ವೇಳೆ ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಸಂಸ್ಥಾಪಕ ಅಭಿಜಿತ್ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಇದರ ನಡುವೆಯೂ ಪ್ರತಿಭಟನಾಕಾರರು ‘ಸಂಸತ್ ಚಲೋ’ ಮೆರವಣಿಗೆ ನಡೆಸಿ, ಬ್ಯಾರಿಕೇಡ್‌ಗಳನ್ನು ದಾಟಿ ಸಂಸತ್ ಕಡೆಗೆ ತೆರಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುನ್ನೆಚ್ಚರಿಕೆ ನೀಡಿದ್ದರು.

ಇದೇ ವೇಳೆ, NEET-2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಸಾವಿರಾರು ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಾಗೂ ವಿರೋಧ ಪಕ್ಷದ ನಾಯಕರು ಈ ಹೋರಾಟದಲ್ಲಿ ಭಾಗಿಯಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಸಮೃದ್ಧಿ ಎಕ್ಸ್ʼಪ್ರೆಸ್ವೇಯಲ್ಲಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

0

ಮುಂಬೈ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು ಆರು ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಥೆನಾಲ್ ಸಾಗಿಸುತ್ತಿದ್ದ ಕಂಟೇನರ್ ಲಾರಿಯೊಂದು ಮೊದಲು ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಇಂಧನ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರವನ್ನು ಮತ್ತೊಂದು ಲೇನ್‌ಗೆ ತಿರುಗಿಸಲಾಗಿತ್ತು.

ಈ ವೇಳೆ ಪುಣೆಯಿಂದ ವಾರ್ಧಾಕ್ಕೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಮೆಣಸಿನಕಾಯಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯಡಿ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕೆಲವೇ ಕ್ಷಣಗಳಲ್ಲಿ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ತೀವ್ರವಾಗಿ ವ್ಯಾಪಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಲಾರಿ ಚಾಲಕ ಮತ್ತು ಕ್ಲೀನರ್ ಸೇರಿ ಒಟ್ಟು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಮೃತರನ್ನು ವಾರ್ಧಾ ಜಿಲ್ಲೆಯ ಸಾಲೋಡ್ ಗ್ರಾಮದ ನಿವಾಸಿಗಳಾದ ರಾಜೇಶ್ ಟಿಪ್ಲೆ, ಅವರ ಪತ್ನಿ ಸುಷ್ಮಾ ಟಿಪ್ಲೆ, ಪುತ್ರಿ ಜಾಹ್ನವಿ ಟಿಪ್ಲೆ ಹಾಗೂ ಕಾರು ಚಾಲಕ ಅಂಕುಶ್ ರಾವತ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸಂಜಯ್ ಕುಮಾರ್ ಮತ್ತು ಕ್ಲೀನರ್ ಸಮರ್ಜಿತ್ ಪಾಲ್ ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹೆದ್ದಾರಿ ಸುರಕ್ಷತಾ ಪಡೆ, ವಾರ್ಧಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರವನ್ನು ಪುನಾರಂಭಿಸಲಾಯಿತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ರಣವೀರ್ ಸಿಂಗ್ ‘ಧುರಂಧರ್’ಗೆ ವಿಶ್ವ ಮಟ್ಟದ ಗೌರವ: ನೆಟ್‌ಫ್ಲಿಕ್ಸ್ ಇಂಗ್ಲಿಷೇತರ ಚಿತ್ರಗಳ ಪಟ್ಟಿಯಲ್ಲಿ ಭರ್ಜರಿ ದಾಖಲೆ

ಮುಂಬೈ: ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಇದೀಗ ಜಾಗತಿಕ ಮಟ್ಟದಲ್ಲಿ ಭಾರತೀಯ ಚಿತ್ರರಂಗದ ಹೆಮ್ಮೆಯಾಗಿ ಹೊರಹೊಮ್ಮಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಭಾರತೀಯ ಸಿನಿಮಾವಾಗಿ ದಾಖಲೆ ನಿರ್ಮಿಸಿರುವ ಈ ಚಿತ್ರ 37 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ನೆಟ್‌ಫ್ಲಿಕ್ಸ್‌ನ ಇಂಗ್ಲಿಷೇತರ ಚಿತ್ರಗಳ ವಿಭಾಗದಲ್ಲಿ ಅಗ್ರ ಸ್ಥಾನಕ್ಕೇರಿದೆ. ಆಕ್ಷನ್ ಮತ್ತು ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಆರ್. ಮಾಧವನ್, ಅಕ್ಷಯ್ ಖನ್ನಾ, ಸಂಜಯ್ ದತ್ ಹಾಗೂ ಅರ್ಜುನ್ ರಾಂಪಾಲ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ 5ರಂದು ಬಿಡುಗಡೆಯಾದ ಈ ಸಿನಿಮಾ ಚಿತ್ರಮಂದಿರಗಳಲ್ಲೂ ಭರ್ಜರಿ ಯಶಸ್ಸು ಕಂಡಿತ್ತು. ಭಾರತದಿಂದ ಪಾಕಿಸ್ತಾನಕ್ಕೆ ತೆರಳಿ ಗೂಢಚರ್ಯೆ ನಡೆಸುವ ವ್ಯಕ್ತಿಯ ಸುತ್ತ ಸಾಗುವ ಕಥೆ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಯಶಸ್ಸಿನ ಬೆನ್ನಲ್ಲೇ ಚಿತ್ರದ ಮುಂದುವರಿದ ಭಾಗ ಕೂಡ ಗಮನ ಸೆಳೆದಿದೆ.

ನೆಟ್‌ಫ್ಲಿಕ್ಸ್ ಇಂಡಿಯಾದ ಒರಿಜಿನಲ್ ಕಂಟೆಂಟ್‌ನಲ್ಲೂ ಭಾರತೀಯ ಸರಣಿಗಳು ಸದ್ದು ಮಾಡಿವೆ. ‘ಅಕ್ಯೂಸ್ಡ್’ 19 ಮಿಲಿಯನ್ ವೀಕ್ಷಣೆಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪ್ರಿಯಾಂಕಾ ಮೋಹನ್ ಅಭಿನಯದ ‘ಮೇಡ್ ಇನ್ ಕೊರಿಯಾ’ 18 ಮಿಲಿಯನ್ ವೀಕ್ಷಣೆ ಪಡೆದು ಎರಡನೇ ಸ್ಥಾನದಲ್ಲಿದೆ. ಇಮ್ರಾನ್ ಹಶ್ಮಿ ನಟನೆಯ ‘ತಸ್ಕರಿ’ 16 ಮಿಲಿಯನ್ ವೀಕ್ಷಣೆಗಳೊಂದಿಗೆ ಮೂರನೇ ಸ್ಥಾನ ಪಡೆದಿದೆ.

ಇದೇ ವೇಳೆ ಜಾಗತಿಕ ಸಿನಿಮಾ ವಿಭಾಗದಲ್ಲಿ ‘ವಾರ್ ಮೆಷಿನ್’ 147 ಮಿಲಿಯನ್ ವೀಕ್ಷಣೆಗಳೊಂದಿಗೆ ದಾಖಲೆ ನಿರ್ಮಿಸಿದೆ. ‘ದಿ ಆರ್‌ಐಪಿ’, ‘ಸ್ವಾಪ್ಡ್’, ‘ಕೆ-ಪಾಪ್ ಡೆಮನ್ ಹಂಟರ್ಸ್’ ಮತ್ತು ‘ಅಪೆಕ್ಸ್’ ಸಿನಿಮಾಗಳು ಕೂಡ ಭಾರೀ ವೀಕ್ಷಣೆಗಳನ್ನು ಪಡೆದಿವೆ. ವೆಬ್ ಸರಣಿಗಳ ಪೈಕಿ ‘ಹಿಸ್ ಅಂಡ್ ಹರ್ಸ್’ 104 ಮಿಲಿಯನ್ ವೀಕ್ಷಣೆಗಳೊಂದಿಗೆ ವಿಶ್ವದಾದ್ಯಂತ ಅಗ್ರಸ್ಥಾನ ಪಡೆದುಕೊಂಡಿದೆ.

ಆ್ಯಪ್ʼನಲ್ಲಿ ಹುಡುಗಿ ಆಸೆ ತೋರಿಸಿ ವ್ಯಕ್ತಿಯ ಅಪಹರಿಸಿ ಸುಲಿಗೆ: ಬೆಂಗಳೂರಿನಲ್ಲಿ 11 ಮಂದಿ ಅರೆಸ್ಟ್!

0

ಬೆಂಗಳೂರು: ಆ್ಯಪ್‌ನಲ್ಲಿ ಹುಡುಗಿಯರು ಇದ್ದಾರೆ ಎಂದು ನಂಬಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ ಸುಲಿಗೆ ಮಾಡಿದ ಆರೋಪದಡಿ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ್ ಕೀರ್ತಿ, ಕಾಂತರಾಜು ಹಾಗೂ ಸಂದೀಪ್ ಸೇರಿದಂತೆ ಇತರರು ಎಂದು ಗುರುತಿಸಲಾಗಿದೆ.

ಆರೋಪಿಗಳು ಮೊದಲು ಆ್ಯಪ್‌ವೊಂದರಲ್ಲಿ ಹುಡುಗಿಯರು ಪರಿಚಯವಾಗುತ್ತಾರೆ ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಇದನ್ನು ನಂಬಿದ ವ್ಯಕ್ತಿಯೊಬ್ಬರು ಹುಡುಗಿಯನ್ನು ಭೇಟಿಯಾಗಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ಆತನನ್ನು ತಮ್ಮ ಬಲೆಗೆ ಬೀಳಿಸಿ ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಗಿಯರನ್ನು ಭೇಟಿಯಾಗಲು ಸಂತ್ರಸ್ತ ವ್ಯಕ್ತಿ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್‌ಆರ್‌ಬಿಆರ್ ಲೇಔಟ್ ಬಳಿಗೆ ತೆರಳಿದ್ದರು. ಅಲ್ಲಿ ಆಟೋದಲ್ಲಿ ಯುವತಿಯರು ಕುಳಿತಿರುವುದು ಕಂಡುಬಂದಿತ್ತು. ಆದರೆ, ಅವರನ್ನು ಭೇಟಿಯಾಗುವ ಮುನ್ನವೇ ಆರೋಪಿಗಳು ವ್ಯಕ್ತಿಯನ್ನು ಅಪಹರಿಸಿದ್ದಾರೆ ಎನ್ನಲಾಗಿದೆ.

ಬಳಿಕ ಸಂತ್ರಸ್ತನನ್ನು ಆಟೋದಲ್ಲಿ ನಗರದ ವಿವಿಧ ಭಾಗಗಳಲ್ಲಿ ಸುತ್ತಾಡಿಸಿ, ಆತನ ಬಳಿಯಿದ್ದ ಹಣ, ಮೊಬೈಲ್ ಫೋನ್ ಹಾಗೂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಮಾಹಿತಿ ಪಡೆದ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಎರಡು ಆಟೋಗಳು, ನಾಲ್ಕು ದ್ವಿಚಕ್ರ ವಾಹನಗಳು, 13 ಮೊಬೈಲ್ ಫೋನ್‌ಗಳು ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಹೊಳೆನರಸೀಪುರದಲ್ಲಿ ಚೆನ್ನಮ್ಮರಿಗೆ ಭಾವಪೂರ್ಣ ವಿದಾಯ: ಜನಸಾಗರದ ನಡುವೆ ಅಂತಿಮ ಯಾತ್ರೆ, ಹರದನಹಳ್ಳಿಯಲ್ಲಿ ಅಂತಿಮ ವಿಧಿ

0

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಆರಂಭವಾಗಿದ್ದು, ಅಪಾರ ಸಂಖ್ಯೆಯ ಜನರು ಕಣ್ಣೀರಿನ ವಿದಾಯ ಸಲ್ಲಿಸುತ್ತಿದ್ದಾರೆ. ಪಾರ್ಥಿವ ಶರೀರವನ್ನು ಹೊತ್ತ ಮುಕ್ತಿವಾಹನವನ್ನು ಮಲ್ಲಿಗೆ ಹೂ ಮತ್ತು ತುಳಸಿ ಮಾಲೆಗಳಿಂದ ಅಲಂಕರಿಸಲಾಗಿದ್ದು, ಮಾರ್ಗದುದ್ದಕ್ಕೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಹೊಳೆನರಸೀಪುರದಿಂದ ಆರಂಭವಾಗಿರುವ ಅಂತಿಮ ಯಾತ್ರೆ ತಾಲೂಕಿನ ಹಲವು ಗ್ರಾಮಗಳ ಮೂಲಕ ಸಾಗಲಿದೆ. ನಾಗಲಾಪುರ, ಹುಚ್ಚನಕೊಪ್ಪಲು, ಸಂಕನಹಳ್ಳಿ, ಕಳ್ಳಿಕೊಪ್ಪಲು, ಕಟ್ಟಹಳ್ಳಿ ಬಾರೆ, ಮಾರಗೊಡನಹಳ್ಳಿ, ಪಡುವಲಹಿಪ್ಪೆ, ಹನುಮನಹಳ್ಳಿ, ಬಸವನಾಯಕನಹಳ್ಳಿ, ಹಂಗರಹಳ್ಳಿ ಮತ್ತು ಹಳೇಕೋಟೆ ಗ್ರಾಮಗಳಲ್ಲಿ ಅಂತಿಮ ಯಾತ್ರೆ ನಡೆಯಲಿದೆ.

ಅಂತಿಮ ಯಾತ್ರೆಯ ಬಳಿಕ ಮಧ್ಯಾಹ್ನ 3 ಗಂಟೆ ವೇಳೆಗೆ ಹರದನಹಳ್ಳಿಯ ಅಂತ್ಯಕ್ರಿಯೆ ಸ್ಥಳಕ್ಕೆ ಪಾರ್ಥಿವ ಶರೀರ ತಲುಪಲಿದೆ. 45 ನಿಮಿಷಗಳ ಕಾಲ ವಿಶೇಷ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ಸಂಜೆ 4 ಗಂಟೆ ವೇಳೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.

ಶ್ರೀ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಕಣ್ಣನ್ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತಿದೆ. 15ಕ್ಕೂ ಹೆಚ್ಚು ಅರ್ಚಕರು ಭಾಗವಹಿಸಲಿದ್ದು, ವಾಸ್ತು ಪ್ರಕಾರ ಅಂತಿಮ ಸಂಸ್ಕಾರದ ವ್ಯವಸ್ಥೆ ಮಾಡಲಾಗಿದೆ.

ರಂಗನಾಥಸ್ವಾಮಿ ಬೆಟ್ಟದ ತಪ್ಪಲನ್ನು ಅಂತ್ಯಕ್ರಿಯೆಗೆ ಆಯ್ಕೆ ಮಾಡಿರುವುದರ ಹಿಂದೆ ಚೆನ್ನಮ್ಮ ಅವರ ಭಾವನಾತ್ಮಕ ನಂಟಿದೆ. ಹರದನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳೊಂದಿಗೆ ಅವರು ಹೊಂದಿದ್ದ ಆತ್ಮೀಯ ಸಂಬಂಧ, ಈ ಭಾಗದ ಜನರ ಮೇಲಿನ ಪ್ರೀತಿ ಹಾಗೂ ದೈವ ಭಕ್ತಿಯ ಹಿನ್ನೆಲೆಯಲ್ಲಿ ಕುಟುಂಬ ಈ ಸ್ಥಳವನ್ನು ಆಯ್ಕೆ ಮಾಡಿದೆ.

ಚೆನ್ನಮ್ಮ ಅವರ ಅಳಿಯ ಹಾಗೂ ಸಂಸದ ಸಿ.ಎನ್. ಮಂಜುನಾಥ್, ಕುಟುಂಬದ ಸದಸ್ಯರೆಲ್ಲರೂ ಚರ್ಚಿಸಿ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ಸ್ಥಳದಲ್ಲಿ ಸ್ಮಾರಕ ನಿರ್ಮಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದಿದ್ದಾರೆ.

ಹರದನಹಳ್ಳಿ ದೇವೇಗೌಡರ ತವರೂರಾಗಿದ್ದು, ಚೆನ್ನಮ್ಮ ಅವರ ಜೀವನದ ಹಲವು ನೆನಪುಗಳನ್ನು ಹೊಂದಿರುವ ಸ್ಥಳವಾಗಿದೆ. ಮಾವಿನಕೆರೆ ರಂಗನಾಥಸ್ವಾಮಿ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು, ಕುಟುಂಬದ ಒಳಿತಿಗಾಗಿ ಹಾಗೂ ರೈತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತಿದ್ದರು. ಇದೀಗ ಅದೇ ದೈವ ಸನ್ನಿಧಿಯ ನೆರಳಿನಲ್ಲಿ ಅವರ ಅಂತಿಮ ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿದೆ.