Home Blog

ಅಪ್ಪನ ನೆನಪಿನೊಂದಿಗೆ ಹೊಸ ಪಯಣ: ಪುನೀತ್ ಪುತ್ರಿ ವಂದಿತಾ ಹೊಸ ಬ್ಯುಸಿನೆಸ್‌ ಆರಂಭ

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ವಂದಿತಾ ರಾಜ್‌ಕುಮಾರ್ ಇದೀಗ ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಗುರುತು ಮೂಡಿಸಲು ಮುಂದಾಗಿದ್ದಾರೆ. ಬೇಕಿಂಗ್ ಮೇಲಿನ ತಮ್ಮ ಆಸಕ್ತಿಯನ್ನು ಬ್ಯುಸಿನೆಸ್ ಆಗಿ ಪರಿವರ್ತಿಸಿರುವ ಅವರು, ತಂದೆ ಪ್ರೀತಿಯಿಂದ ಕರೆಯುತ್ತಿದ್ದ ‘ನುಕಾ’ ಹೆಸರಿನಲ್ಲೇ ‘ನುಕಾಸ್ ಕೆಫೆ’ ಆರಂಭಿಸಿದ್ದಾರೆ.

ವಂದಿತಾ ಅವರಿಗೆ ಬೇಕಿಂಗ್ ಒಂದು ಹವ್ಯಾಸವಾಗಿತ್ತು. ಕುಟುಂಬದ ಕಾರ್ಯಕ್ರಮಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಕೇಕ್‌ಗಳನ್ನು ತಯಾರಿಸುತ್ತಿದ್ದ ಅವರು, ಇದೀಗ ಅದನ್ನೇ ವೃತ್ತಿಪರವಾಗಿ ಆರಂಭಿಸಿದ್ದಾರೆ.

ಇತ್ತೀಚೆಗೆ ಸಹೋದರ ವಿನಯ್ ರಾಜ್‌ಕುಮಾರ್ ಅವರ ‘ಗ್ರಾಮಾಯಣ’ ಸಿನಿಮಾದ ಸಂದರ್ಭದಲ್ಲಿ ವಂದಿತಾ ವಿಶೇಷ ಕೇಕ್ ತಯಾರಿಸಿ ಗಮನ ಸೆಳೆದಿದ್ದರು. ಅದರ ಮೇಲೂ ‘ಗ್ರಾಮಾಯಣ’ ಎಂದು ಬರೆದು ಸಹೋದರನಿಗೆ ಶುಭ ಹಾರೈಸಿದ್ದರು.

ಈಗ ತಮ್ಮ ಪ್ರತಿಭೆ ಮತ್ತು ಆಸಕ್ತಿಗೆ ಹೊಸ ರೂಪ ನೀಡಿರುವ ವಂದಿತಾ, ಮನೆಯಲ್ಲಿ ತಯಾರಿಸಿದ ವಿವಿಧ ಬೇಕರಿ ಉತ್ಪನ್ನಗಳನ್ನು ಗ್ರಾಹಕರಿಗೆ ಪೂರೈಸುತ್ತಿದ್ದಾರೆ.

ತಿರಮಿಸು, ವಿವಿಧ ಬಗೆಯ ಕೇಕ್‌ಗಳು, ಕುಕೀಸ್, ಬ್ರೆಡ್, ಬ್ರೌನಿ, ಚೀಸ್ ಕೇಕ್ ಹಾಗೂ ಕಪ್ ಕೇಕ್‌ಗಳು ‘ನುಕಾಸ್ ಕೆಫೆ’ಯ ಪ್ರಮುಖ ಉತ್ಪನ್ನಗಳಾಗಿವೆ.

ಅಪ್ಪು ಅವರ ನೆನಪನ್ನು ಜೊತೆಯಲ್ಲಿಟ್ಟುಕೊಂಡು ಆರಂಭಿಸಿರುವ ಈ ಹೊಸ ಉದ್ಯಮಕ್ಕೆ ಅಭಿಮಾನಿಗಳು ಹಾಗೂ ಸಿನಿಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಉಪಸಭಾಪತಿ ಪ್ರಾಣೇಶ್ʼಗೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್: ವಿಧಾನ ಪರಿಷತ್ ಸದಸ್ಯತ್ವ ರದ್ದು

0

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ ದೊಡ್ಡ ಹಿನ್ನಡೆ ನೀಡಿದ್ದು, ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸುವ ಮೂಲಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಈ ತೀರ್ಪಿನೊಂದಿಗೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಕಾನೂನು ಹೋರಾಟದಲ್ಲಿ ಮೇಲುಗೈ ದೊರೆತಿದೆ.

2021ರ ಡಿಸೆಂಬರ್‌ನಲ್ಲಿ ನಡೆದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಒಟ್ಟು 2,410 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 39 ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಪ್ರಾಣೇಶ್ 1,188 ಮತಗಳನ್ನು, ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದು, ಕೇವಲ ಆರು ಮತಗಳ ಅಂತರದಿಂದ ಪ್ರಾಣೇಶ್ ಗೆಲುವು ಸಾಧಿಸಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿರುವುದು ಕಾನೂನುಬಾಹಿರ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಅದೇ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದ್ದು, ಪ್ರಾಣೇಶ್ ಅವರ ಸದಸ್ಯತ್ವ ರದ್ದಾಗಿದೆ.

ನಕಲಿ ದಾಖಲೆ ಪಡೆದು ಭಾರತದಲ್ಲಿ ವಾಸ: ಬಾಂಗ್ಲಾದೇಶಿ ಪ್ರಜೆಗೆ 3 ವರ್ಷ ಜೈಲು

0

ರಾಯಚೂರು: ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ಪಡೆದು ಹಲವು ವರ್ಷಗಳಿಂದ ವಾಸವಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನಿಗೆ ಸಿಂಧನೂರು ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪಾಸ್‌ಪೋರ್ಟ್ ಪಡೆದಿದ್ದರೂ ಇಮಿಗ್ರೇಷನ್ ಪರಿಶೀಲನೆಯ ವೇಳೆ ಸಿಕ್ಕಿಬಿದ್ದಿದ್ದ ಆರೋಪಿಗೆ ಇದೀಗ ಶಿಕ್ಷೆ ಪ್ರಕಟವಾಗಿದೆ.

ಶೋರನಜೀತ್ ಮಂಡಲ್ ಎಂಬಾತ ಅಕ್ರಮವಾಗಿ ಭಾರತ ಪ್ರವೇಶಿಸಿ ಸಿಂಧನೂರು ತಾಲೂಕಿನ ನಿರಾಶ್ರಿತರ ಕೇಂದ್ರದ ವ್ಯಾಪ್ತಿಯಲ್ಲಿ ವಾಸವಾಗಿದ್ದ. ಆಧಾರ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಸೇರಿದಂತೆ ಹಲವು ದಾಖಲೆಗಳನ್ನು ಪಡೆದು ಭಾರತೀಯ ಪ್ರಜೆಯಂತೆ ಬದುಕುತ್ತಿದ್ದನು.

ಈ ದಾಖಲೆಗಳ ಆಧಾರದಲ್ಲಿ ಪಾಸ್‌ಪೋರ್ಟ್ ಕೂಡ ಪಡೆದಿದ್ದ ಆತ, 2018ರಲ್ಲಿ ಬಾಂಗ್ಲಾದೇಶಕ್ಕೆ ತೆರಳುವ ವೇಳೆ ಇಮಿಗ್ರೇಷನ್ ಅಧಿಕಾರಿಗಳ ತಪಾಸಣೆಯಲ್ಲಿ ಸಿಕ್ಕಿಬಿದ್ದಿದ್ದ. ನಂತರ ಆತನ ವಿರುದ್ಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಆರೋಪಿಗೆ ಮೂರು ವರ್ಷಗಳ ಸಜೆ ಹಾಗೂ ₹5,000 ದಂಡ ವಿಧಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಕಾರ್ಯಾಚರಣೆಗಳು ತೀವ್ರಗೊಂಡಿದ್ದು, ಮಂಗಳೂರು ಮತ್ತು ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಗಳಲ್ಲೂ ಹಲವು ವಲಸಿಗರನ್ನು ಬಂಧಿಸಿರುವುದು ಗಮನಾರ್ಹವಾಗಿದೆ.

ಮೆಸ್ಸಿ ಮ್ಯಾಜಿಕ್ʼಗೆ ಮಣಿದ ಇಂಗ್ಲೆಂಡ್: ಸತತ ಎರಡನೇ ವಿಶ್ವಕಪ್ ಪ್ರಶಸ್ತಿಯ ಕನಸಿನೊಂದಿಗೆ ಫೈನಲ್ʼಗೆ ಅರ್ಜೆಂಟೀನಾ

0

ನ್ಯೂಯಾರ್ಕ್: 2026ರ ಫಿಫಾ ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತೊಮ್ಮೆ ಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿಗಾಗಿ ಸ್ಪೇನ್ ತಂಡವನ್ನು ಎದುರಿಸಲಿದೆ. ಅಟ್ಲಾಂಟಾದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ, ಇಂಗ್ಲೆಂಡ್ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ತಮ್ಮ ಅನುಭವ ಮತ್ತು ಅದ್ಭುತ ಆಟದ ಮೂಲಕ ತಂಡದ ಗೆಲುವಿನ ರೂವಾರಿಯಾಗಿದ್ದರು. ಎರಡು ಮಹತ್ವದ ಅಸಿಸ್ಟ್‌ಗಳನ್ನು ನೀಡಿದ ಅವರು, ಎಂಜೊ ಫೆರ್ನಾಂಡಿಸ್ ಮತ್ತು ಲೌಟಾರೊ ಮಾರ್ಟಿನೆಜ್ ಗಳಿಸಿದ ಗೋಲುಗಳಿಗೆ ಕಾರಣರಾದರು.

ಸೆಮಿಫೈನಲ್‌ನ ಮೊದಲಾರ್ಧದಲ್ಲಿ ಉಭಯ ತಂಡಗಳು ಹಲವು ಅವಕಾಶಗಳನ್ನು ಸೃಷ್ಟಿಸಿಕೊಂಡರೂ ಗೋಲು ದಾಖಲಿಸಲು ವಿಫಲವಾದವು. ಪರಿಣಾಮ ಮೊದಲ 45 ನಿಮಿಷಗಳು ಗೋಲುರಹಿತವಾಗಿ ಅಂತ್ಯಗೊಂಡವು.

ದ್ವಿತೀಯಾರ್ಧದ 55ನೇ ನಿಮಿಷದಲ್ಲಿ ಇಂಗ್ಲೆಂಡ್ ಮುನ್ನಡೆ ಸಾಧಿಸಿತು. ಹ್ಯಾರಿ ಕೇನ್ ನೀಡಿದ ಅದ್ಭುತ ಅಸಿಸ್ಟ್ ಅನ್ನು ಆಂಥೋನಿ ಗಾರ್ಡನ್ ಗೋಲಾಗಿ ಪರಿವರ್ತಿಸಿ ಇಂಗ್ಲೆಂಡ್‌ಗೆ 1-0 ಮುನ್ನಡೆ ತಂದುಕೊಟ್ಟರು.

ಒಂದು ಗೋಲಿನ ಹಿನ್ನಡೆಯಲ್ಲಿದ್ದ ಅರ್ಜೆಂಟೀನಾ ಪಂದ್ಯದ ಕೊನೆಯ ಕ್ಷಣಗಳವರೆಗೆ ಸಮಬಲದ ಗೋಲಿಗಾಗಿ ಹೋರಾಟ ನಡೆಸಿತು. ಅಂತಿಮವಾಗಿ 85ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ನೀಡಿದ ನಿಖರ ಪಾಸ್ ಅನ್ನು ಎಂಜೊ ಫೆರ್ನಾಂಡಿಸ್ ಗೋಲಾಗಿ ಪರಿವರ್ತಿಸಿ ಪಂದ್ಯವನ್ನು 1-1ರ ಸಮಬಲಕ್ಕೆ ತಂದರು.

ಸಮಬಲದ ಗೋಲಿನ ಸಂಭ್ರಮ ತಣಿಯುವ ಮುನ್ನವೇ ಅರ್ಜೆಂಟೀನಾ ಮತ್ತೊಂದು ನಿರ್ಣಾಯಕ ಹೊಡೆತ ನೀಡಿತು. ಮೆಸ್ಸಿ ನೀಡಿದ ಮತ್ತೊಂದು ಅದ್ಭುತ ಅಸಿಸ್ಟ್ ಅನ್ನು ಲೌಟಾರೊ ಮಾರ್ಟಿನೆಜ್ ಗೋಲಾಗಿ ಪರಿವರ್ತಿಸಿ ತಂಡಕ್ಕೆ 2-1ರ ಮುನ್ನಡೆ ತಂದುಕೊಟ್ಟರು. ಕೇವಲ ಮೂರು ನಿಮಿಷಗಳ ಅಂತರದಲ್ಲಿ ಎರಡು ಗೋಲುಗಳನ್ನು ಗಳಿಸಿದ ಅರ್ಜೆಂಟೀನಾ, ಇಂಗ್ಲೆಂಡ್‌ನ ಫೈನಲ್ ಕನಸಿಗೆ ತೆರೆ ಎಳೆದು ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಿತು.

ಇದೀಗ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ, ವಿಶ್ವಕಪ್ ಪ್ರಶಸ್ತಿಗಾಗಿ ಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದ್ದು, ಸತತ ಎರಡನೇ ಬಾರಿ ವಿಶ್ವಕಪ್ ಟ್ರೋಫಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

0

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ನಡೆದ ಈ ಘಟನೆಯಲ್ಲಿ 12 ವರ್ಷದ ಅರ್ಹನ್ ಪಾಷಾ ಮೃತಪಟ್ಟಿದ್ದಾನೆ.

ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಬಾಲಕ ತನಗೆ ಸುಸ್ತಾಗುತ್ತಿದೆ ಎಂದು ಶಿಕ್ಷಕಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಳಿಕ ತರಗತಿಗೆ ಬಂದು ಬೆಂಚ್ ಮೇಲೆ ಕುಳಿತ ಕೆಲವೇ ಕ್ಷಣಗಳಲ್ಲಿ ಕುಸಿದುಬಿದ್ದಿದ್ದಾನೆ. ಆದರೆ, ಬಾಲಕನ ಆರೋಗ್ಯ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸದೆ ಶಾಲಾ ಸಿಬ್ಬಂದಿ ಹಾಗೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಸಿದುಬಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಬದಲು ಸುಮಾರು 45 ನಿಮಿಷಗಳ ಕಾಲ ತರಗತಿ ಕೊಠಡಿಯಲ್ಲೇ ಇರಿಸಿಕೊಂಡಿದ್ದರು ಎಂದು ಪೋಷಕರು ಆರೋಪಿಸಿದ್ದು, ಈ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ನಂತರ ಶಾಲಾ ಆಡಳಿತವು ಕುಟುಂಬಸ್ಥರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತಿದ್ದರೆ ಮಗುವಿನ ಜೀವ ಉಳಿಯಬಹುದಿತ್ತು ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೆರಿಕ-ಇರಾನ್ ಉದ್ವಿಗ್ನತೆ ನಡುವೆ ಬಂಗಾರ ದರದಲ್ಲಿ ಇಳಿಕೆ! ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು?

ಬೆಂಗಳೂರು: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಜಾಗತಿಕ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತ ಮುಂದುವರಿದಿದೆ. ಬುಧವಾರ ಏರಿಕೆ ಕಂಡಿದ್ದ ಚಿನ್ನದ ದರ, ಗುರುವಾರ (ಜುಲೈ 16) ಮತ್ತೆ ಇಳಿಕೆಯಾಗಿದೆ ಎಂದು ಗುಡ್‌ರಿಟರ್ನ್ಸ್ ವರದಿ ತಿಳಿಸಿದೆ.

ಇಂದಿನ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ ಒಂದು ಗ್ರಾಂಗೆ 28 ರೂಪಾಯಿ ಇಳಿಕೆಯಾಗಿದ್ದು, ಪ್ರತಿ ಗ್ರಾಂ ಬೆಲೆ 14,329 ರೂಪಾಯಿಗೆ ತಲುಪಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ 280 ರೂಪಾಯಿ ಕುಸಿದು 1,43,290 ರೂಪಾಯಿಯಾಗಿದೆ.

ಇದೇ ವೇಳೆ, 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ದಾಖಲಾಗಿದೆ. ಒಂದು ಗ್ರಾಂಗೆ 25 ರೂಪಾಯಿ ಕಡಿಮೆಯಾಗಿದ್ದು, ಪ್ರಸ್ತುತ ಪ್ರತಿ ಗ್ರಾಂ 13,135 ರೂಪಾಯಿಗೆ ಮಾರಾಟವಾಗುತ್ತಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 250 ರೂಪಾಯಿ ಇಳಿದು 1,31,350 ರೂಪಾಯಿಗೆ ತಲುಪಿದೆ.

ಬೆಂಗಳೂರುದಲ್ಲಿ ಇಂದಿನ ದರ

ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಪ್ರತಿ ಗ್ರಾಂ ಬೆಲೆ 14,329 ರೂಪಾಯಿಯಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರತಿ ಗ್ರಾಂ ಬೆಳ್ಳಿ 235 ರೂಪಾಯಿಯಲ್ಲೇ ಸ್ಥಿರವಾಗಿದ್ದು, ಪ್ರತಿ ಕೆ.ಜಿ. ಬೆಳ್ಳಿ ಬೆಲೆ 2,35,000 ರೂಪಾಯಿಯಾಗಿದೆ.

ಜುಲೈ ತಿಂಗಳ ಆರಂಭದಲ್ಲಿ 24 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆ 14,078 ರೂಪಾಯಿಯಷ್ಟಿದ್ದರೆ, ತಿಂಗಳ ಮಧ್ಯಭಾಗದಲ್ಲಿ ಅದು 14,700 ರೂಪಾಯಿವರೆಗೆ ಏರಿಕೆ ಕಂಡಿತ್ತು. ಬಳಿಕ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡು, ಇದೀಗ 14,329 ರೂಪಾಯಿಗೆ ತಲುಪಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ, ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಕೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿನ ಏರಿಳಿತ ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತಿದೆ.

ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದ ಸುಂಕದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹೇಳಿಕೆಯಲ್ಲಿ ಬದಲಾವಣೆ ಮಾಡಿದ ಬಳಿಕ ಜಾಗತಿಕ ಷೇರುಪೇಟೆಯಲ್ಲಿ ಅಲ್ಪ ಮಟ್ಟಿನ ಚೇತರಿಕೆ ಕಂಡುಬಂದಿತ್ತು. ಇದರ ಪರಿಣಾಮವಾಗಿ ಚಿನ್ನದ ದರದಲ್ಲೂ ಏರಿಳಿತ ಮುಂದುವರಿದಿದ್ದು, ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೆ, ಬೆಳ್ಳಿ ದರ ಸ್ಥಿರವಾಗಿದೆ.

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

0

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.

ಜುಲೈ 9ರಂದು ರೆಸ್ಟೋ ಬಾರ್‌ಗೆ ತೆರಳಿದ್ದ ಮಂಜು ಹಾಗೂ ಅವರ ಸ್ನೇಹಿತರು ಊಟ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಹೊರಡುವಾಗ ಅವರನ್ನು ತಡೆದು ಸೆಲ್ಫಿ ಕೇಳಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಲ್ಲಿ ಮಧ್ಯಪ್ರವೇಶಿಸಿದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದಾರೆ.

ನ್ಯಾಯಾಲಯಗಳು ಕೇವಲ ವ್ಯಾಜ್ಯ ಇತ್ಯರ್ಥದ ವೇದಿಕೆಗಳಲ್ಲ; ನೋವಿನಲ್ಲಿರುವವರಿಗೆ ನ್ಯಾಯ ಒದಗಿಸುವ ರಕ್ಷಕರು: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯಗಳು ಕೇವಲ ವ್ಯಕ್ತಿಗಳು ಅಥವಾ ಸರ್ಕಾರಗಳ ನಡುವಿನ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ವೇದಿಕೆಗಳಷ್ಟೇ ಅಲ್ಲ, ಅಗತ್ಯವಿದ್ದಾಗ ಸಂಕಷ್ಟದಲ್ಲಿರುವವರಿಗೆ ನ್ಯಾಯ ಮತ್ತು ಸಮಾನತೆ ಒದಗಿಸುವ ರಕ್ಷಕರಾಗಿಯೂ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೂರು ವರ್ಷದ ಬಾಲಕ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಮನೆಯ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಪ್ರಕರಣದಲ್ಲಿ ಉಭಯ ಪಕ್ಷಗಳು ಪರಸ್ಪರ ಒಪ್ಪಂದದ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿರುವುದನ್ನು ಪರಿಗಣಿಸಿದ ನ್ಯಾಯಾಲಯ, ಕಳೆದುಹೋದ ಜೀವವನ್ನು ಯಾವುದೇ ರೀತಿಯಲ್ಲೂ ಮರಳಿ ತರಲು ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹಣಕಾಸಿನ ಪರಿಹಾರ ಜೀವಕ್ಕೆ ಪರ್ಯಾಯವಾಗುವುದಿಲ್ಲ. ಆದರೆ ಸಂತ್ರಸ್ತ ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯಗಳು ಮಾನವೀಯ ದೃಷ್ಟಿಕೋನದಿಂದ ಪ್ರಗತಿಪರ ನಿರ್ಧಾರಗಳನ್ನು ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದೆ.

ಒಪ್ಪಂದದ ಭಾಗವಾಗಿ ಆರೋಪಿತ ಮನೆಯ ಮಾಲೀಕರು ಮೃತ ಬಾಲಕನ ಪೋಷಕರಿಗೆ ಮುಂದಿನ 12 ತಿಂಗಳವರೆಗೆ ಪ್ರತಿ ತಿಂಗಳು ₹10,000 ಪಾವತಿಸಲು ಒಪ್ಪಿಕೊಂಡಿದ್ದಾರೆ. ಇದರ ಜೊತೆಗೆ ₹5 ಲಕ್ಷ ಪರಿಹಾರ ಮೊತ್ತವನ್ನು ಪೋಷಕರ ಹೆಸರಿನಲ್ಲಿ ಖಾತೆ ತೆರೆಯುವ ಮೂಲಕ ಅಂಚೆ ಇಲಾಖೆಯ ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಹೂಡಿಕೆಯಿಂದ ದೊರೆಯುವ ಮಾಸಿಕ ಬಡ್ಡಿಯನ್ನು ಐದು ವರ್ಷಗಳ ಕಾಲ ನೇರವಾಗಿ ಪೋಷಕರಿಗೆ ನೀಡಬೇಕು. ಆ ಹಣವನ್ನು ಮೃತ ಬಾಲಕನ ಸಹೋದರ ಹಾಗೂ ಸಹೋದರಿಯ ಶಿಕ್ಷಣ, ಪಾಲನೆ-ಪೋಷಣೆ ಮತ್ತು ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಮಗಳು ಪ್ರಾಪ್ತ ವಯಸ್ಸಿಗೆ ಬಂದ ಬಳಿಕ ಕಾನೂನುಬದ್ಧವಾಗಿ ಮೂಲ ಹೂಡಿಕೆ ಮೊತ್ತವನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದೂ ತಿಳಿಸಿದೆ.

ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಸಂತ್ರಸ್ತ ಕುಟುಂಬಕ್ಕೆ ಒಮ್ಮೆಗೆ ದೊಡ್ಡ ಮೊತ್ತದ ಹಣ ನೀಡಿದರೆ ಅದು ತಕ್ಷಣದ ಅಗತ್ಯಗಳಿಗೆ ಖರ್ಚಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಉಳಿದಿರುವ ಮಕ್ಕಳ ದೀರ್ಘಕಾಲೀನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಮೊತ್ತವನ್ನು ಸಂರಕ್ಷಿಸುವುದು ಸೂಕ್ತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ

2026ರ ಮೇ 27ರಂದು ರಾಜರಾಜೇಶ್ವರಿ ನಗರದ ಆರ್.ಆರ್. ಕೆಂಚೇನಹಳ್ಳಿಯ ಜನಪ್ರಿಯ ಲೇಔಟ್‌ನಲ್ಲಿರುವ ನಿರ್ಮಾಣ ಹಂತದ ತ್ರಿಲೋಕ ವಿಲ್ಲಾಸ್ ಅಪಾರ್ಟ್‌ಮೆಂಟ್ ಸಮೀಪ ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿದ್ದ. ಈ ಸಂಬಂಧ ನಿರ್ಮಾಣ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪದಡಿ ಮನೆಯ ಮಾಲೀಕ ಅಭಿಷೇಕ್, ಮೇಸ್ತ್ರಿ ವೇಲು ಹಾಗೂ ಗುತ್ತಿಗೆದಾರ ಅಲೋಕ್ ಸುಂದರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 106(1) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಎಫ್‌ಐಆರ್ ರದ್ದುಪಡಿಸುವಂತೆ ಮನೆಯ ಮಾಲೀಕರು ಹೈಕೋರ್ಟ್ ಮೊರೆ ಹೋಗಿದ್ದು, ಸಂತ್ರಸ್ತ ಕುಟುಂಬ ಮತ್ತು ಆರೋಪಿತರ ನಡುವಿನ ಒಪ್ಪಂದವನ್ನು ಪರಿಗಣಿಸಿ ನ್ಯಾಯಾಲಯ ಪ್ರಕರಣ ಇತ್ಯರ್ಥಕ್ಕೆ ಒಪ್ಪಿಗೆ ನೀಡಿದೆ.

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ; ಆತಂಕ ಬೇಡ – ವೈದ್ಯರು ನೀಡಿರುವ ಸ್ಪಷ್ಟ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಚಿಕಿತ್ಸೆ ಫಲಕಾರಿಯಾಗಿ ನಡೆಯುತ್ತಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಸತ್ಯನಾರಾಯಣ ಮೈಸೂರು ಅವರು ಈ ಕುರಿತು ಮಾಹಿತಿ ನೀಡಿದ್ದು, ಚೆನ್ನಮ್ಮ ಅವರಿಗೆ ಸಣ್ಣ ಪ್ರಮಾಣದ ಉಸಿರಾಟದ ತೊಂದರೆ ಹಾಗೂ ಎದೆಯಲ್ಲಿ ಕಫ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ವೇಳೆ ಆಮ್ಲಜನಕದ ಮಟ್ಟದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಚೆನ್ನಮ್ಮ ಅವರಿಗೆ ಆಗಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಸುಮಾರು 25 ದಿನಗಳ ಹಿಂದಷ್ಟೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಮಂಗಳವಾರ ರಾತ್ರಿ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರಿ ಸುಮಾರು 8.30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಅವರಿಗೆ ಆಂಟಿಬಯೋಟಿಕ್ ಔಷಧೋಪಚಾರ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆರೋಗ್ಯದಲ್ಲಿ ಮತ್ತಷ್ಟು ಸುಧಾರಣೆ ಕಂಡುಬಂದರೆ ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ವಿಷಯ ತಿಳಿದ ಕೂಡಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾತ್ರಿ 10.30ರ ಸುಮಾರಿಗೆ ಆಸ್ಪತ್ರೆಗೆ ಭೇಟಿ ನೀಡಿ ಸುಮಾರು ಒಂದು ಗಂಟೆ ಕಾಲ ಪತ್ನಿಯ ಆರೋಗ್ಯ ವಿಚಾರಿಸಿದರು. ಬಳಿಕ ಪುತ್ರ ಎಚ್.ಡಿ. ರೇವಣ್ಣ, ಕುಟುಂಬದ ಸದಸ್ಯರು ಹಾಗೂ ವೈದ್ಯರೂ ಆಗಿರುವ ಅಳಿಯ ಡಾ. ಮಂಜುನಾಥ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.

ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪ: ಗದಗ ಜಿಲ್ಲೆಯಿಂದ ರೌಡಿಶೀಟರ್ ಪ್ರಕಾಶ್ ಗಡಿಪಾರು!

0

ಗದಗ: ಗಲಾಟೆ, ಜೀವ ಬೆದರಿಕೆ, ಜಾತಿ ನಿಂದನೆ, ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಪ್ರಕಾಶ್ ನನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಈ ಕುರಿತು ಗದಗ ಎಸ್ಪಿ ರೋಹನ್ ಜಗದೀಶ್ ಪ್ರಕಟಣೆ ನೀಡಿದ್ದು, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪೊಲೀಸ್ ಇಲಾಖೆಯ ಮಾಹಿತಿಯಂತೆ, ಪ್ರಕಾಶ್ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಬಂಧನ ಹಾಗೂ ನ್ಯಾಯಾಂಗ ಬಂಧನಕ್ಕೊಳಗಾದ ಬಳಿಕವೂ ಆತನ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಮತ್ತೆ ಮತ್ತೆ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಗಡಿಪಾರು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಳಿಕ ಸಮಗ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಗದಗ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.

ಎರಡು ಗಂಭೀರ ಕ್ರಿಮಿನಲ್ ಪ್ರಕರಣಗಳು:

ಪ್ರಕಾಶ್ ವಿರುದ್ಧ 2024ರ ಅಪರಾಧ ಸಂಖ್ಯೆ 76/2024ರಲ್ಲಿ ಗಲಾಟೆ, ಹಲ್ಲೆ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ, ಜಾತಿ ನಿಂದನೆ ಸೇರಿದಂತೆ ಭಾರತೀಯ ದಂಡ ಸಂಹಿತೆ (IPC) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದೇ ರೀತಿ ಅಪರಾಧ ಸಂಖ್ಯೆ 147/2024ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ (ತಿದ್ದುಪಡಿ) ಕಾಯ್ದೆಯಡಿ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದ್ದು, ಈ ಎರಡೂ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

ಐದು ಬಾರಿ ಮುಂಜಾಗ್ರತಾ ಕ್ರಮ:

ಕ್ರಿಮಿನಲ್ ಪ್ರಕರಣಗಳ ಜೊತೆಗೆ ಪ್ರಕಾಶ್ ವಿರುದ್ಧ 2025 ಮತ್ತು 2026ರಲ್ಲಿ ಒಟ್ಟು ಐದು ಮುಂಜಾಗ್ರತಾ (P.R.) ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಮೂರು ಹಾಗೂ 2026ರಲ್ಲಿ ಎರಡು ಬಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ಆತನ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಇದೇ ಕಾರಣದಿಂದ ಅಂತಿಮವಾಗಿ ಗಡಿಪಾರು ಕ್ರಮ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಠಿಣ ಎಚ್ಚರಿಕೆ:

ಗಲಭೆ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ವ್ಯಕ್ತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಪ್ರಕಾಶ್ ವಿರುದ್ಧ ದಾಖಲಾಗಿರುವ ಮುಂಜಾಗ್ರತಾ ಪ್ರಕರಣಗಳು:

P.R. No. 08/2025,
P.R. No. 20/2025,
P.R. No. 54/2025,
P.R. No. 23/2026,
P.R. No. 28/2026