Home Blog

ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ H5N1 ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಆತಂಕ ಹೆಚ್ಚಾಗಿದೆ. H5N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರಲ್ಲಿ ಆತಂಕ ಮೂಡಿದೆ.

ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ H5N1 ವೈರಸ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಪೌಲ್ಟ್ರಿ ಫಾರಂನಲ್ಲಿ ಇದ್ದ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.

ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕ್ರಮ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಪಂಚಾಯಿತಿಗಳಿಗೆ ನೋಟಿಸ್ ನೀಡಲಾಗಿದ್ದು, ಕೋಳಿ ಸಾಕಾಣೆ ಶೆಡ್‌ಗಳು ಹಾಗೂ ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.

ಕೋಳಿ ಸಾಕಾಣೆಗಾರರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಸದ್ಯ ಕೇಂದ್ರ ಸರ್ಕಾರದಿಂದ ಬಂದ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.

ಡಿಜಿ-ಐಜಿಪಿ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ: 2027ರವರೆಗೆ ಅಧಿಕಾರ ಮುಂದುವರಿಕೆ!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರವಾಗಿ, ರಾಜ್ಯ ಪೊಲೀಸ್ ಮುಖ್ಯಸ್ಥ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಹೊಸ ಆದೇಶದಂತೆ, ಅವರ ಅಧಿಕಾರಾವಧಿ 2027ರ ಅಕ್ಟೋಬರ್ 29ರವರೆಗೆ ಮುಂದುವರಿಯಲಿದೆ.

1993ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಡಾ. ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದರು. ಬಳಿಕ 2025ರ ಆಗಸ್ಟ್‌ನಲ್ಲಿ ಪೂರ್ಣಾವಧಿಗೆ ನೇಮಕಗೊಂಡ ಅವರು, ಮೂಲತಃ ಈ ವರ್ಷದ ಜೂನ್‌ನಲ್ಲಿ ನಿವೃತ್ತಿಯಾಗಬೇಕಿತ್ತು. ಆದರೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಸೇವಾವಧಿಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

2006ರ ಸೆಪ್ಟೆಂಬರ್ 22ರಂದು ಹೊರಬಂದ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ ಎರಡು ವರ್ಷಗಳ ಅಧಿಕಾರಾವಧಿ ನೀಡುವುದು ಕಡ್ಡಾಯ. ಪ್ರಕಾಶ್ ಸಿಂಗ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ, ಡಾ. ಎಂ.ಎ.ಸಲೀಂ ಅವರ ಅವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಸೇವಾ ಅವಧಿಯಲ್ಲಿ ಡಾ. ಎಂ.ಎ.ಸಲೀಂ ಅವರು ಹಲವು ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡಿದ್ದು, ಕಲಬುರಗಿ ಹಾಗೂ ಕುಶಾಲನಗರದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಡಿಜಿಪಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ಸಿಐಡಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಸಂಚಾರ ಸುಧಾರಣೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಜಾರಿಗೆ ತಂದು ಜನಪ್ರಿಯತೆ ಗಳಿಸಿದ್ದರು.

ಮದ್ಯಪಾನ ಮಧ್ಯೆ ಉತ್ತರ ಪತ್ರಿಕೆ ಮೌಲ್ಯಮಾಪನ: ಲಾತೂರ್ ಶಿಕ್ಷಕನ ವಿರುದ್ಧ ಆಕ್ರೋಶ!

0

ನವದೆಹಲಿ: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಣ ಕ್ಷೇತ್ರದ ನೈತಿಕತೆಗೆ ಗಂಭೀರ ಪ್ರಶ್ನೆ ಎಬ್ಬಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಅವರು ಮದ್ಯಪಾನ ಮಾಡುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ದೃಶ್ಯಗಳಲ್ಲಿ, ಶಿಕ್ಷಕನು ಸ್ನೇಹಿತರೊಂದಿಗೆ ಕುಳಿತು ಸಿಗರೇಟ್ ಸೇದುತ್ತಾ, ಪಕ್ಕದಲ್ಲೇ ಮದ್ಯದ ಬಾಟಲಿ ಇಟ್ಟುಕೊಂಡು ಪರೀಕ್ಷಾ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಶಿಕ್ಷಣದಂತಹ ಜವಾಬ್ದಾರಿಯುತ ಕ್ಷೇತ್ರದಲ್ಲಿ ಇಂತಹ ವರ್ತನೆ ತೀವ್ರ ಟೀಕೆಗೆ ಗುರಿಯಾಗಿದೆ.

ಈ ಘಟನೆ ಪೋಷಕರು ಮತ್ತು ಶಿಕ್ಷಣ ತಜ್ಞರಲ್ಲಿ ಆತಂಕ ಹುಟ್ಟುಹಾಕಿದ್ದು, ವಿದ್ಯಾರ್ಥಿಗಳ ಭವಿಷ್ಯ ಮತ್ತು ಮೌಲ್ಯಮಾಪನ ಪ್ರಕ್ರಿಯೆಯ ನಿಷ್ಠೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ರಾಮಾಯಣ ಕಥೆಗೆ ಹೊಸ ತಿರುವು: ಪ್ರಕಾಶ್ ರಾಜ್ ಹೇಳಿಕೆ ತೀವ್ರ ಆಕ್ರೋಶ, ಕಾನೂನು ಸಂಕಷ್ಟ!

ಪ್ರಚೋದನಾತ್ಮಕ ಹೇಳಿಕೆಗಳ ಮೂಲಕ ನಿರಂತರವಾಗಿ ಸುದ್ದಿಯಲ್ಲಿರುವ ಪ್ರಕಾಶ್‌ ರಾಜ್‌ ಇದೀಗ ಮತ್ತೊಮ್ಮೆ ಕಾನೂನು ವಿವಾದಕ್ಕೆ ಸಿಲುಕಿರುವಂತೆ ಕಾಣುತ್ತಿದೆ. ರಾಮಾಯಣದ ಕಥನವನ್ನು ವಿಭಿನ್ನ ದೃಷ್ಟಿಕೋನದಿಂದ ವಿವರಿಸಿದ ಅವರ ಮಾತುಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟುಹಾಕಿವೆ.

ವೇದಿಕೆ ಮೇಲಿನ ಭಾಷಣದಲ್ಲಿ, ಅವರು ರಾಮ ಮತ್ತು ರಾವಣರನ್ನು ಪ್ರಾದೇಶಿಕವಾಗಿ ವಿಭಜಿಸಿ ಹೇಳಿಕೆ ನೀಡಿರುವುದು ವಿವಾದದ ಮೂಲವಾಗಿದೆ. ದಕ್ಷಿಣ ಭಾರತದ ಸಂಸ್ಕೃತಿ ಮತ್ತು ಭಾಷಾ ವಿಚಾರವನ್ನು ಉಲ್ಲೇಖಿಸಿ, ಉತ್ತರ ಭಾರತದ ಪ್ರಭಾವದ ವಿರುದ್ಧ ತಮ್ಮ ಅಭಿಪ್ರಾಯವನ್ನು ತೀವ್ರವಾಗಿ ವ್ಯಕ್ತಪಡಿಸಿದ್ದಾರೆ.

ಪ್ರಕಾಶ್ ರಾಜ್ ಹೇಳಿದ್ದೇನು?

ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.

 ‘ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ’ ಎಂದಿದ್ದಾರೆ ಪ್ರಕಾಶ್ ರಾಜ್. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.

ಆಹಾರ ನೀಡುತ್ತಿದ್ದ ಕಾವಾಡಿಗನ ಮೇಲೆ ಕುಮ್ಕಿ ಆನೆ ದಾಳಿ; ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ!

ಹಾಸನ:– ಕಾಡಾನೆ ಸೆರೆ ಕಾರ್ಯಾಚರಣೆಗೆ ದುಬಾರೆ ಸಾಕಾನೆ ಶಿಬಿರದಿಂದ ಬಂದಿದ್ದ ಕುಮ್ಕಿ ಆನೆ ಸುಗ್ರೀವ ಆಹಾರ ನೀಡುತ್ತಿದ್ದ ಕಾವಾಡಿಗನ ಮೇಲೆ ದಾಳಿ ನಡೆಸಿದ ಘಟನೆ ತಾತ್ಕಾಲಿಕ ಸಾಕಾನೆ ಕ್ಯಾಂಪ್‌ನಲ್ಲಿ ನಡೆದಿದೆ.

ಆಹಾರ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಕಾವಾಡಿಗ ರಾಜು ಮೇಲೆ ದಾಳಿ ಮಾಡಿ ದಂತದಿಂದ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ರಾಜು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬುಧವಾರ ಕಾಡಾನೆ ಸೆರೆ ಕಾರ್ಯಾಚರಣೆಗೆ ಆರು ಸಾಕಾನೆಗಳನ್ನು ನಿಯೋಜಿಸಲಾಗಿತ್ತು. ಸಂಜೆ ವೇಳೆಗೆ ನರಹಂತಕ ಒಂಟಿಕೋರೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಆ ಕಾರ್ಯಾಚರಣೆಯಲ್ಲಿ ಸುಗ್ರೀವ ಪ್ರಮುಖ ಪಾತ್ರವಹಿಸಿತ್ತು. ಆದರೆ ನಂತರ ಆ ಕಾಡಾನೆ ತಪ್ಪಿಸಿಕೊಂಡಿದ್ದು, ಇಂದು ಬೆಳಿಗ್ಗೆ ಮತ್ತೆ ಸೆರೆ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಘಟನೆಯ ನಂತರ ಡಿಸಿಎಫ್ ಸೌರಭ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ.

ಘಟನೆ ಬಳಿಕ ಕುಮ್ಕಿ ಆನೆಗಳಾದ ಸುಗ್ರೀವ ಹಾಗೂ ಲಕ್ಷ್ಮಣರನ್ನು ದುಬಾರೆ ಶಿಬಿರಕ್ಕೆ ವಾಪಸ್ ಕಳುಹಿಸಲಾಗಿದೆ. ಅವುಗಳ ಬದಲಿಗೆ ಬೇರೆ ಎರಡು ಕುಮ್ಕಿ ಆನೆಗಳನ್ನು ನಿಯೋಜಿಸಲು ತೀರ್ಮಾನಿಸಲಾಗಿದ್ದು, ಇಂದಿನ ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನೆಲಮಂಗಲದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಕೊಲೆಯೋ, ಅಸಹಜ ಸಾವೋ? ಪೊಲೀಸರಿಂದ ತನಿಖೆ ಚುರುಕು!

0

ನೆಲಮಂಗಲ: ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್‌ನಲ್ಲಿರುವ ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ಮಹಿಳೆಯನ್ನು ತುಮಕೂರು ಮೂಲದ ಯಮುನಾ (35) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಅವರು ಈಗ ಅಸ್ಥಿಪಂಜರ ರೂಪದಲ್ಲಿ ಪತ್ತೆಯಾಗಿದ್ದಾರೆ. ತಲೆಬುರುಡೆ ಹಾಗೂ ಕೈ-ಕಾಲುಗಳ ಕೆಲವು ಮೂಳೆಗಳು ಸ್ಥಳದಲ್ಲಿ ಸಿಕ್ಕಿದ್ದು, ಜೊತೆಗೆ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್ ಕೂಡ ದೊರೆತಿರುವುದರಿಂದ ಗುರುತು ಪತ್ತೆ ಸಾಧ್ಯವಾಗಿದೆ.

ಯಮುನಾ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಅವರನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಬಳಿಕ ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಅವರು, ಪತಿಯನ್ನು ಬಿಟ್ಟು ಕೆಲ ವರ್ಷ ದೊಡ್ಡಬಳ್ಳಾಪುರದಲ್ಲಿ ಆತನೊಂದಿಗೆ ವಾಸವಿದ್ದರು. ನಂತರ ಎರಡು ವರ್ಷಗಳ ಹಿಂದೆ ಮತ್ತೆ ಪತಿಯ ಮನೆಗೆ ಮರಳಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಮಾರ್ಚ್ 21ರಂದು ಯಮುನಾ ಅವರ ಹುಟ್ಟುಹಬ್ಬ ಇದ್ದು, ಆ ದಿನ ರಾಘವೇಂದ್ರ ಭೇಟಿ ಮಾಡುವಂತೆ ಒತ್ತಾಯಿಸಿದ್ದನೆಂದು ಮಾಹಿತಿ ಲಭ್ಯವಾಗಿದೆ. ಕೆಲಸ ಮುಗಿಸಿ ಆತನನ್ನು ಭೇಟಿಯಾಗಲು ತೆರಳಿದ ನಂತರ ಯಮುನಾ ನಾಪತ್ತೆಯಾಗಿದ್ದರು. ಈ ಕುರಿತು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಅಡಿಕೆ ತೋಟದ ಬಳಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಘವೇಂದ್ರನೇ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಶವವನ್ನು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್!

ಬೆಂಗಳೂರು:- ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಅಶುತೋಷ್ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸದಿದ್ದರೂ ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬುದನ್ನು ಪ್ರಶ್ನಿಸಿ, ಅವರ ಪರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಸ್‌ಪೋರ್ಟ್ ಪಡೆಯಲು ತೊಂದರೆ ಉಂಟಾಗುತ್ತಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ.

ಘಟನೆಯ ದಿನ ಅಶುತೋಷ್ ಹಿಂಬದಿ ಸೀಟಿನಲ್ಲಿ ಇದ್ದರು, ನೇರವಾಗಿ ಘಟನೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಲಾಗಿದ್ದು, ತನಿಖೆಯಲ್ಲೂ ಅವರ ನೇರ ಭಾಗವಹಿಸುವಿಕೆ ಉಲ್ಲೇಖವಿಲ್ಲ ಎಂದು ನ್ಯಾಯಾಲಯದ ಮುಂದೆ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರತಿಕ್ರಿಯೆಯೂ ಗಮನ ಸೆಳೆದಿದೆ.

ಜಿಮ್‌ನಲ್ಲಿ ಧರಿಸುವ ಟೈಟ್ ಬಟ್ಟೆಗಳು ಆರೋಗ್ಯಕ್ಕೆ ಹಾನಿಕಾರ! ತಜ್ಞರು ಹೇಳುವುದೇನು ಗೊತ್ತಾ?

0

ಇಂದಿನ ಫಿಟ್ನೆಸ್ ಟ್ರೆಂಡ್‌ನಲ್ಲಿ ಜಿಮ್‌ಗೆ ಹೋಗುವವರು ಟೈಟ್ ಬಟ್ಟೆಗಳನ್ನು ಧರಿಸುವುದು ಸಾಮಾನ್ಯವಾಗಿದೆ. ಆದರೆ ಇವು ಆರೋಗ್ಯಕ್ಕೆ ಹಾನಿಕಾರಕವಾಗಬಹುದೇ ಎಂಬ ಪ್ರಶ್ನೆ ಈಗ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಅಮೆರಿಕದಲ್ಲಿ ನಡೆದ ಅಧ್ಯಯನದ ಬಳಿಕ ಈ ವಿಷಯ ಹೆಚ್ಚು ಗಮನ ಸೆಳೆದಿದೆ.

ತಜ್ಞರ ಪ್ರಕಾರ, ಬಹುತೇಕ ಜಿಮ್ ಬಟ್ಟೆಗಳು ಕೃತಕ ತಂತುಗಳಿಂದ ತಯಾರಾಗಿರುತ್ತವೆ. ಇವುಗಳಲ್ಲಿ ‘ಫಥಾಲೇಟ್ಸ್’ ಎಂಬ ರಾಸಾಯನಿಕಗಳ ಬಳಕೆ ಇರುವ ಸಾಧ್ಯತೆ ಇದೆ. ಈ ರಾಸಾಯನಿಕಗಳು ದೇಹದ ಹಾರ್ಮೋನ್ ವ್ಯವಸ್ಥೆಗೆ ಹಾನಿ ಉಂಟುಮಾಡಬಹುದು ಎಂಬ ಆತಂಕ ವ್ಯಕ್ತವಾಗಿದೆ.

ವೈದ್ಯರು ತಿಳಿಸುವಂತೆ, ತುಂಬಾ ಬಿಗಿಯಾದ ಮತ್ತು ಕೃತಕ ತಂತುಗಳಿಂದ ಮಾಡಿದ ಬಟ್ಟೆಗಳನ್ನು ಹೆಚ್ಚು ಸಮಯ ಧರಿಸುವುದರಿಂದ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವ್ಯಾಯಾಮದ ವೇಳೆ ಬೆವರು ಹೆಚ್ಚಾಗಿ ಬರುತ್ತದೆ. ಟೈಟ್ ಬಟ್ಟೆಗಳು ಬೆವರನ್ನು ಒಳಗೇ ಹಿಡಿದುಕೊಳ್ಳುತ್ತವೆ. ಇದರಿಂದ ಫಂಗಸ್ ಸೋಂಕು, ಚರ್ಮದ ಉರಿ, ಕೆಂಪು ದಪ್ಪಗಳು (ರಾಶ್‌) ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬೇಸಿಗೆ ಕಾಲದಲ್ಲಿ ಈ ಸಮಸ್ಯೆಗಳು ಇನ್ನಷ್ಟು ತೀವ್ರವಾಗಬಹುದು.

ಇನ್ನೊಂದು ಮುಖ್ಯ ವಿಷಯವೆಂದರೆ, ಬಿಗಿಯಾದ ಬಟ್ಟೆಗಳು ದೇಹಕ್ಕೆ ಸರಿಯಾದ ಗಾಳಿಯ ಹರಿವನ್ನು ತಡೆಯುತ್ತವೆ. ಇದರಿಂದ ಚರ್ಮದ ಮೇಲೆ ಒತ್ತಡ ಹೆಚ್ಚಾಗಿ ಅಸ್ವಸ್ಥತೆ ಉಂಟಾಗುತ್ತದೆ. ಕೆಲವು ಸಂದರ್ಭಗಳಲ್ಲಿ ದೀರ್ಘಕಾಲ ಬಳಕೆಯಿಂದ ಹಾರ್ಮೋನಲ್ ಸಮಸ್ಯೆಗಳಿಗೂ ಕಾರಣವಾಗಬಹುದು ಎಂಬ ಆತಂಕ ತಜ್ಞರು ವ್ಯಕ್ತಪಡಿಸಿದ್ದಾರೆ.

ತಡೆಗಟ್ಟುವ ಕ್ರಮಗಳು:

  • ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ
  • ವ್ಯಾಯಾಮದ ನಂತರ ತಕ್ಷಣ ಬಟ್ಟೆ ಬದಲಾಯಿಸಿ
  • ಹತ್ತಿ ಅಥವಾ ಹಗುರವಾದ ಬಟ್ಟೆಗಳಿಗೆ ಆದ್ಯತೆ ನೀಡಿ
  • ಚರ್ಮದಲ್ಲಿ ಉರಿ ಅಥವಾ ಸೋಂಕು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ

ಸರಿಯಾದ ಬಟ್ಟೆ ಆಯ್ಕೆ ಮತ್ತು ಸ್ವಚ್ಛತೆ ಪಾಲಿಸುವುದರಿಂದ ಈ ರೀತಿಯ ಸಮಸ್ಯೆಗಳನ್ನು ಸುಲಭವಾಗಿ ತಪ್ಪಿಸಿಕೊಳ್ಳಬಹುದು.

ಬೆಂಗಳೂರು| ದ್ವಿತೀಯ ಪಿಯುಸಿ ಪರೀಕ್ಷೆ-2 ಅರ್ಜಿ ಅವಧಿ ವಿಸ್ತರಣೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಭ ಸುದ್ದಿ ನೀಡಿದೆ.

ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಆದೇಶ ಹೊರಡಿಸಿದೆ. ಮೊದಲು ಏಪ್ರಿಲ್ 17 ಕೊನೆಯ ದಿನವಾಗಿದ್ದರೂ, ತಾಂತ್ರಿಕ ದೋಷಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅರ್ಜಿ ಪ್ರಕ್ರಿಯೆಯಲ್ಲಿ ಉಂಟಾದ ಅಡಚಣೆಗಳನ್ನು ಗಮನದಲ್ಲಿಟ್ಟುಕೊಂಡು ಒಂದು ದಿನದ ಮಟ್ಟಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನೂ ಅರ್ಜಿ ಸಲ್ಲಿಸದವರು ತಕ್ಷಣವೇ ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಏನಿದೆ?

2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಹಾಗೂ ಫಲಿತಾಂಶ ಸುಧಾರಿಸಿಕೊಳ್ಳುವ ಅಭ್ಯರ್ಥಿಗಳಿಗೆ ಏಪ್ರಿಲ್ 9ರಿಂದ 17ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆನ್‌ಲೈನ್ ಹಾಗೂ ಕಾಲೇಜುಗಳ ಮೂಲಕ ಭೌತಿಕವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇತ್ತು.

ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿ ಇದೀಗ ಅಂತಿಮ ದಿನಾಂಕವನ್ನು ಏಪ್ರಿಲ್ 18ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಹೋಟೆಲ್!

ಬೆಂಗಳೂರು: ನಗರದಲ್ಲಿ ಮತ್ತೊಂದು ದೊಡ್ಡ ಅಗ್ನಿ ಅವಘಡ ಸಂಭವಿಸಿದೆ.

ನೈಸ್ ರಸ್ತೆಯ ಸೋಂಪುರ ಸರ್ಕಲ್‌ನಲ್ಲಿರುವ ಶುದ್ಧ ತಿಂಡಿ ಹೋಟೆಲ್‌ಗೆ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಪರಿಣಾಮ ಸಂಪೂರ್ಣ ಹೋಟೆಲ್ ಸುಟ್ಟು ಕರಕಲಾಗಿದೆ.

ಇತ್ತೀಚಿಗಷ್ಟೇ, ಮಾರ್ಚ್ ತಿಂಗಳಲ್ಲಿ ಉದ್ಘಾಟನೆಯಾಗಿದ್ದ ಈ ಬೃಹತ್ ಹೋಟೆಲ್‌ನಲ್ಲಿ ಇಡ್ಲಿ ಸ್ಟೀಮರ್‌ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬೆಂಕಿ ತಗುಲುತ್ತಿದ್ದಂತೆಯೇ ಒಳಗಿದ್ದ ಸಿಬ್ಬಂದಿಗಳು ತಕ್ಷಣ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

error: Content is protected !!