Home Blog

ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ

ಬಾಗಲಕೋಟೆ: ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗೂ ಕೈ ಕೊಡುತ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದರು.

ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಗ ಚುನಾವಣೆಗೆ ಬಾದಾಮಿಗೆ ಬಂದಿದ್ದರು. ಈಗ ಮತ್ತೆ ಬಂದಿದ್ದಾರೆ. ಬಾದಾಮಿ ಹಾಲು ಕುಡಿದು, ಬಿರಿಯಾನಿ ತಿಂದು ಟಾಟಾ ಬಾಯ್ ಬಾಯ್ ಹೇಳಿದರು. ಇನ್ನು ಎರಡು ವರ್ಷದಲ್ಲಿ ಅಭಿವೃದ್ಧಿಯ ಮಳೆ ಸುರಿಸುತ್ತೇನೆ ಅಂತ ಅವರು ಹೇಳುತ್ತಿದ್ದಾರೆ.

ಮೂರು ವರ್ಷ ನಿಮ್ಮದೇ ಶಾಸಕರು ಬಾಗಲಕೋಟದಲ್ಲಿ ಇದ್ದರಲ್ಲ. ಆಗ ನಿಮ್ಮ ಶಿಷ್ಯ ಏನು ಅಭಿವೃದ್ಧಿ ಮಾಡಿದ್ರು ಎಂದು ಪ್ರಶ್ನಿಸಿದರು. ಕ್ಷೇತ್ರದಲ್ಲಿ ಈ ಹಿಂದೆ ಚರಂತಿಮಠ ಅವರ ಅಭಿವೃದ್ಧಿ ಕಾರ್ಯ ಜನರ ಮನಸ್ಸಲ್ಲಿ ಉಳಿದಿದೆ. ಆದ್ದರಿಂದ ಈ ಬಾರಿ ಜನರು ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಪಟ್ಟಕ್ಕಾಗಿ ಗುದ್ದಾಟ ನಡೆದಿದೆ. ಮೂರು ವರ್ಷದಲ್ಲಿ 30 ಹಗರಣಗಳನ್ನು ಮಾಡಿದರು. ವಾಲ್ಮೀಕಿ ಹಗರಣದಿಂದ ಹಿಡಿದು ಗುತ್ತಿಗೆದಾರರ ಅರವತ್ತು ಪಸೆರ್ಂಟ್ ಕಮಿಷನ್ ಹಗರಣದವರೆಗೆ ನಡೆಯತ್ತಿವೆ. ಲಿಕ್ಕರ್ ಲಾಬಿ ಮಾಡಿ ಸಚಿವರೊಬ್ಬರು ಕೋಟಿ ಕೋಟಿ ಹಣ ಹೊಡೆದು ದೆಹಲಿಗೆ ಕಳಿಸಿದರು. ಮೂರು ವರ್ಷದಲ್ಲಿ ಯಾವುದೇ ಸಾಧನೆ ಮಾಡಲಿಲ್ಲ. ನೀರಾವರಿಗೆ ಹಣ ಇಡಲಿಲ್ಲ. ಆದರೆ ಕಾಂಗ್ರೆಸ್‍ನವರು ಮಾತ್ರ ಹಣ ಮಾಡಿಕೊಳ್ಳುತ್ತಿದ್ದಾರೆ. ಒಂದು ಡ್ಯಾಮ್ ಕಟ್ಟಲಿಲ್ಲ. ಮೆಡಿಕಲ್ ಕಾಲೇಜು ತರಲಿಲ್ಲ ಎಂದರು.

ಕಾಂಗ್ರೆಸ್ ಬಂದ ಮೇಲೆ ಒಂದೇ ಒಂದು ಪಿ.ಎಚ್.ಸಿಗಳಲ್ಲಿ ವೈದ್ಯರಿಲ್ಲ. ಔಷಧ ಖರೀದಿಗೆ ಹಣವಿಲ್ಲ. ಹಣವಿಲ್ಲದೆ ಮೂರು ವರ್ಷದಲ್ಲಿ ಟೆಂಡರ್ ಕರೆದಿಲ್ಲ. ಅಭಿವೃದ್ಧಿಗೆ ಮಾಡಿದ ಸಾಲವೇ ಜಾಸ್ತಿ. ಸಾಲ ತಗೊಂಡು ಮಜವಾದಿ ರಾಮಯ್ಯ ಆದರು. ಸಣ್ಣ ಸಣ್ಣ ಸಮುದಾಯಗಳ ಬಳಿ ಹೋಗಿ ಈಗ ಮತ ಕೇಳುತ್ತಿದ್ದಾರೆ. 20 ನೇ ತಾರೀಕಿನ ನಂತರ ಇವರ ಕಥೆ ಏನು ಆಗುತ್ತದೋ ಗೊತ್ತಿಲ್ಲ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಿಎಂ ಸ್ಥಾನವನ್ನು ಒದ್ದು ಕಿತ್ತುಕೋತಾರೆ ಎಂದು ವಿವರಿಸಿದರು.

ಎಸ್.ಟಿ.ಮುಖಂಡನನ್ನು ಸಿಎಂ ಮಾಡ್ತಿನಿ ಅಂತ ಸಿದ್ದರಾಮಯ್ಯ ಅವರು ಒಂದು ದಿನ ಹೇಳಿಲ್ಲ. ಮುಂದೆ ಹೇಳಲ್ಲ. ಏಕೆಂದರೆ ಅವರ ಸ್ಥಾನವೇ ಗ್ಯಾರಂಟಿ ಇಲ್ಲ. ಮುಖ್ಯಮಂತ್ರಿಯಾಗಲು ಪರಮೇಶ್ವರ್ ಅವರು ಕಾಯುತ್ತಿದ್ದಾರೆ. ಆದರೆ ಅವರ ಭಾಗ್ಯದ ಬಾಗಿಲು ತೆರೆಯುವುದೇ ಡೌಟು ಎಂದರು.

ಅಭಿವೃದ್ಧಿ ವಿಷಯದಲ್ಲಿ ನಾನು ಸದಾ ರಾಜ್ಯ ಸರ್ಕಾರದ ಜೊತೆ ನಿಲ್ಲುತ್ತೇನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು ಹಾಗೂ ಆಂಧ್ರ ಪ್ರದೇಶದ ಸಚಿವರಾದ ನಾ.ರಾ. ಲೋಕೇಶ್ ಅವರು ಉದ್ಘಾಟನೆ ನೆರವೇರಿಸಿದರು. ಸಿಂಧನೂರು ಪಟ್ಟಣದಲ್ಲಿ ಶನಿವಾರ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ನೂತನ ಸೈನಿಕ ಶಾಲೆಗೆ ಹಸಿರುನಿಶಾನೆ ತೋರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು; ರಕ್ಷಣಾ ಕ್ಷೇತ್ರದಲ್ಲಿ ಭಾರತವನ್ನು ಸಾಟಿ ಇಲ್ಲದ ದೇಶವನ್ನಾಗಿ ರೂಪಿಸಲು ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಬಹುದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ. ಇದರ ಭಾಗವಾಗಿಯೇ ಸಿಂಧನೂರಿಗೆ ಸೈನಿಕ ಶಾಲೆಯನ್ನು ಮಂಜೂರು ಮಾಡಲಾಗಿದೆ. ಇದಕ್ಕಾಗಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅದೇ ಸಚಿವಾಲಯದ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವೆ ಎಂದು ಹೇಳಿದರು.

ಸಿಂಧನೂರಿನಲ್ಲಿ ಸೈನಿಕ ಶಾಲೆ ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಈ ನಿಟ್ಟಿನಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು ಸಾಕಷ್ಟು ಶ್ರಮಿಸಿದ್ದಾರೆ. ಇವತ್ತು ಆಂಧ್ರ ಪ್ರದೇಶದ ಸಚಿವರಾದ ನಾ.ರಾ. ಲೋಕೇಶ್ ಅವರು ಮತ್ತು ಕೇಂದ್ರದ ಸಚಿವರಾದ ಸಂಜಯ್ ಸೇಠ್ ಅವರು ಪಟ್ಟಣಕ್ಕೆ ಬಂದು ಶಾಲೆಗೆ ನಾಂದಿ ಹಾಡಿದ್ದಾರೆ. ರಾಯಚೂರು ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕಟ್ಟಿ ಬದ್ಧವಾಗಿದೆ ಎಂಬುದಕ್ಕೆ ಈ ಶಾಲೆಯ ಮಂಜೂರಾತಿಯೇ ಉದಾಹರಣೆ ಆಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ಇದ್ದೇನೆ:

ಈ ಕಾರ್ಯಕ್ರಮದಲ್ಲಿ ಮುಂದುವರೆದು ಮಾತನಾಡಿದ ಕೇಂದ್ರ ಸಚಿವರು; ಅಭಿವೃದ್ಧಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಿದರೆ ಮಾತ್ರ ರಾಜ್ಯಕ್ಕೆ ಒಳ್ಳೆದಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ನಾನು ಎಂದೆಂದಿಗೂ ರಾಜ್ಯ ಸರ್ಕಾರದ ಜೊತೆಗೆ ನಿಲ್ಲುತ್ತೇನೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅನೇಕ ಕೆಲಸಗಳು ಆಗಬೇಕಿದೆ. ಅದಕ್ಕಾಗಿ ರಾಜಕೀಯ ಭಿನ್ನಮತ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ. ನನ್ನ ಕಡೆಯಿಂದ ಏನೇ ಕೆಲಸ ಆಗಬೇಕಿದ್ದರೂ ಯಾರೇ ಆಗಲಿ ನನ್ನನ್ನು ಮುಕ್ತವಾಗಿ ಸಂಪರ್ಕಿಸಬಹುದು. ರಾಜ್ಯಕ್ಕೆ ಒಳ್ಳೆಯದು ಮಾಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂಬುದಾಗಿ ಸಚಿವರು ಹೇಳಿದರು.

ರಾಯಚೂರು ಜಿಲ್ಲೆಗೆ ಏಮ್ಸ್ (ಅಖಿಲ ಭಾರತ ವೈದ್ಯಕೀಯ ಸಂಸ್ಥೆ) ಬೇಕೆನ್ನುವ ಬೇಡಿಕೆ ಇದೆ. ಹಾಗೆಯೇ ತುಂಗಭದ್ರಾ ಜಲಾಶಯಕ್ಕೆ ಸಮಾನಂತರವಾಗಿ ನವಿಲೇ ಜಲಾಶಯ ನಿರ್ಮಾಣದ ಬೇಡಿಕೆ ಕೂಡ ಇದೆ. ಇವು ಸಣ್ಣ ಬೇಡಿಕೆಗಳಲ್ಲ. ಇವೆಲ್ಲವೂ ಈಡೇರಬೇಕಾದರೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಈ ಭಾಗದಲ್ಲಿ ಕೈಗಾರಿಕೆ ಬರಬೇಕು ಎಂದು ಇಲ್ಲಿನ ಶಾಸಕರು, ಹಿರಿಯರು ಆಗಿರುವ ಹಂಪನಗೌಡ ಬಾದರ್ಲಿ ಅವರು ಬೇಡಿಕೆ ಮಂಡಿಸಿದ್ದಾರೆ. ಅದಕ್ಕೆ ಸಂಸದರಾದ ಕುಮಾರ್ ನಾಯಕ ಅವರು ದನಿಗೂಡಿಸಿದ್ದಾರೆ. ಇದಕ್ಕೆ ನನ್ನ ಸಹಮತವೂ ಇದೆ. ಯಾವುದಾದರೂ ಒಂದು ಕೈಗಾರಿಕೆಯನ್ನು ಇಲ್ಲಿಗೆ ತರುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಿಮ್ಮ ಬೇಡಿಕೆಗೆ ಸ್ಪಂದಿಸುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು

ಗ್ಯಾಸ್‌ʼಗಾಗಿ ಆಟೋ ಚಾಲಕರ ಕ್ಯೂ: ಇತ್ತ ಫ್ರೀ IPL ಟಿಕೆಟ್‌ʼಗಾಗಿ ಹಾತೊರೆದ ಶಾಸಕರು..! 

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ, ಜನಪ್ರತಿನಿಧಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಗ್ಯಾಸ್ ಸಿಲಿಂಡರ್ ಪಡೆಯಲು ಆಟೋ ಚಾಲಕರು ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಶಾಸಕರು ಐಪಿಎಲ್ ಟಿಕೆಟ್‌ಗಾಗಿ ತಮ್ಮ ಪಿಎಗಳನ್ನು ಸಾಲಿನಲ್ಲಿ ನಿಲ್ಲಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಹಿನ್ನೆಲೆಯಲ್ಲಿ, ಪ್ರತಿ ಪಂದ್ಯಕ್ಕೂ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಸರ್ಕಾರ ಮತ್ತು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ನಡುವೆ ಮಾತುಕತೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ನಡೆಯಲಿರುವ ಬೆಂಗಳೂರು-ಚೆನ್ನೈ ಪಂದ್ಯಕ್ಕಾಗಿ, ಶಾಸಕರ ಸೂಚನೆಯ ಮೇರೆಗೆ ಅವರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತು ಟಿಕೆಟ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಜನಸಾಮಾನ್ಯರ ಸಮಸ್ಯೆಗಳಿಗಿಂತ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವ ಜನಪ್ರತಿನಿಧಿಗಳ ಈ ನಡೆ ವಿರೋಧಕ್ಕೆ ಗುರಿಯಾಗಿದೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸ್ಪಂದನೆ ನೀಡದೇ, ಮನರಂಜನೆಗಾಗಿ ಈ ರೀತಿಯ ವರ್ತನೆ ತೋರಿರುವುದು ವಿಪರ್ಯಾಸ ಎಂದು ಟೀಕೆಗಳು ಕೇಳಿಬರುತ್ತಿವೆ.

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

0

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಆಕೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಮತ್ತು ಭಾಗ್ಯಮ್ಮ ದಂಪತಿಯ ಪುತ್ರಿಯಾಗಿದ್ದು, ಕುಟುಂಬವು ಹೊಸಕೋಟೆಯಲ್ಲಿ ವಾಸವಾಗಿತ್ತು.

ಭಾಗ್ಯಮ್ಮ ಅವರ ಸಂಬಂಧಿಕ ಮಹೇಶ್ ಅವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಜಾತ್ರೆಗೆ ತೆರಳಿ, ಮಕ್ಕಳೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಲಾರಿಯನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ವೇಳೆ ಅಂಕಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಹಣ ಕೇಳಿದ ಮಹಿಳೆಯರ ಮೇಲೆ ಗ್ಯಾಂಗ್ ದಾಳಿ: ಆರೋಪಿಗಳ ವಿರುದ್ಧ ದೂರು ದಾಖಲು

ಕಾರವಾರ: ಕೊಟ್ಟ ಹಣವನ್ನು ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರ ಮೇಲೆ ಗ್ಯಾಂಗ್ ದಾಳಿ ನಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ.

ಯಲ್ಲಾಪುರದ ನಿವಾಸಿಗಳಾದ ಆಯಿಷಾ ಮತ್ತು ಗೀತಾ ಅವರ ಮೇಲೆ ಮೊಹಮ್ಮದ್ ಸಲ್ಮಾನ್ ಹಾಗೂ ಅವನ ಸಂಗಡಿಗರು ಕ್ರೂರವಾಗಿ ಹಲ್ಲೆ ನಡೆಸಿದರೆಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಆಯಿಷಾ ಅವರು ಅಂಗಡಿ ಆರಂಭಿಸಲು ಸಲ್ಮಾನ್‌ಗೆ ಸುಮಾರು 3.80 ಲಕ್ಷ ರೂಪಾಯಿ ನೀಡಿದ್ದರು. ನಂತರ ಕುಟುಂಬದ ಅನಿವಾರ್ಯ ಪರಿಸ್ಥಿತಿಯಿಂದ ಹುಬ್ಬಳ್ಳಿಗೆ ತೆರಳಿದ್ದ ಅವರು, ಎರಡು ತಿಂಗಳ ಬಳಿಕ ಮರಳಿ ಬಂದಾಗ ಸಲ್ಮಾನ್ ಯಲ್ಲಾಪುರವನ್ನು ತೊರೆದು ಶಿರಸಿಯಲ್ಲಿ ವ್ಯಾಪಾರ ನಡೆಸುತ್ತಿರುವುದು ತಿಳಿದುಬಂದಿದೆ. ಇದರಿಂದಾಗಿ ಅವರು ನೇರವಾಗಿ ಶಿರಸಿಗೆ ತೆರಳಿ ತಮ್ಮ ಹಣವನ್ನು ಹಿಂತಿರುಗಿಸುವಂತೆ ಕೇಳಿದ್ದಾರೆ.

ಆದರೆ ಈ ವಿಚಾರವಾಗಿ ಮಾತುಕತೆ ನಡೆಯುತ್ತಿದ್ದ ವೇಳೆ ಪರಿಸ್ಥಿತಿ ಏಕಾಏಕಿ ತೀವ್ರಗೊಂಡಿದ್ದು, ನಾಲ್ಕು ರಿಂದ ಐದು ಜನರ ಗುಂಪು ಸ್ಥಳಕ್ಕೆ ಬಂದು ಮಹಿಳೆಯರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಗ್ಗಾಮುಗ್ಗ ಥಳಿಸಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಮಹಿಳೆಯರ ಮೇಲೆ ಅಸಭ್ಯವಾಗಿ ವರ್ತಿಸಿ ಅವರ ಗೌರವಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂಬುದೂ ತಿಳಿದುಬಂದಿದೆ.

ಇನ್ನಷ್ಟು ಆತಂಕಕಾರಿ ಅಂಶವೆಂದರೆ, ಸಂತ್ರಸ್ತೆಯ ಪ್ರಕಾರ ಯುಪಿ ಮತ್ತು ಬಿಹಾರ ಮೂಲದ ಕೆಲವರು ಕಳೆದ 18 ರಿಂದ 20 ವರ್ಷಗಳಿಂದ ಯಲ್ಲಾಪುರದಲ್ಲಿ ನೆಲೆಸಿದ್ದು, ಸಲೂನ್ ವ್ಯವಹಾರದಲ್ಲಿ ಪಾಲುದಾರರಾಗುವಂತೆ ನಂಬಿಸಿ ಹಣ ಪಡೆದಿದ್ದರು. ನಂತರ ಶಾಪ್ ಆರಂಭಿಸಿ, ಅಚಾನಕ್ ಅದನ್ನು ಮುಚ್ಚಿ ಹಲವು ಕಡೆ ಸಾಲ ಮಾಡಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಹಿಂದೆಲೇ ಪೊಲೀಸರಿಗೆ ದೂರು ನೀಡಿದ್ದರು. ಆ ಸಮಯದಲ್ಲಿ ಹಣ ಹಿಂತಿರುಗಿಸುವ ಭರವಸೆ ನೀಡಿದ್ದರೂ, ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.

ಇತ್ತೀಚೆಗೆ ಅವರು ಶಿರಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ, ಸಂತ್ರಸ್ತೆಯರು ಅಲ್ಲಿಗೆ ತೆರಳಿ ವಿಚಾರಿಸಿದಾಗ, ಸಲ್ಮಾನ್‌ನ ಸಹೋದರನ ಸಂಪರ್ಕದಲ್ಲಿ ಈ ಘಟನೆ ನಡೆದಿದ್ದು, ಕೊನೆಗೆ ಗ್ಯಾಂಗ್ ದಾಳಿ ರೂಪ ಪಡೆದುಕೊಂಡಿದೆ ಎನ್ನಲಾಗಿದೆ.

CSK ವಿರುದ್ಧ ಗೆದ್ದರೂ PBKS ನಾಯಕ ಅಯ್ಯರ್‌ಗೆ ದಂಡ: ನಿಧಾನಗತಿಯ ಓವರ್ ರೇಟ್‌ʼಗೆ 24 ಲಕ್ಷ ರೂ. ಪೆನಾಲ್ಟಿ

0

ಚೆನ್ನೈ: ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಕಾರಣ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆ ಅಯ್ಯರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದೇ ತಪ್ಪು ಮತ್ತೊಮ್ಮೆ ಮಾಡಿದರೆ 36 ಲಕ್ಷ ರೂ. ದಂಡದ ಜೊತೆಗೆ ಒಂದು ಪಂದ್ಯದಿಂದ ನಿಷೇಧವೂ ಎದುರಾಗಲಿದೆ ಎಂದು ಐಪಿಎಲ್ ಮಂಡಳಿ ಎಚ್ಚರಿಸಿದೆ.

ಇದಲ್ಲದೆ, ಪ್ಲೇಯಿಂಗ್-11 ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಸೇರಿ ಉಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 25% ದಂಡ ವಿಧಿಸಲಾಗಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 209 ರನ್ ಗಳಿಸಿತು.

ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ, 18.4 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿ ಗೆಲುವು ಸಾಧಿಸಿತು.ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಆರಂಭಿಕ ಎರಡು ಪಂದ್ಯಗಳಲ್ಲೂ ಜಯ ಸಾಧಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

 

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ.

ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ‘ಕೈʼ ಹಿಡಿಯಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವುದು ನಿಶ್ಚಿತ. ವಿಧಾನಸಭೆಯಲ್ಲಿ ನಮ್ಮ ಶಾಸಕರ ಸಂಖ್ಯೆ 138ರಿಂದ 140ಕ್ಕೆ ಏರಿಕೆಯಾಗಲಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಟೀಕಿಸಿದ್ದರು. ಗ್ಯಾರಂಟಿ ಜಾರಿಗೆ ತರಲು ಅಸಾಧ್ಯ, ರಾಜ್ಯ ದಿವಾಳಿ ಆಗುತ್ತದೆ. ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ ಎಂದರು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತು. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಲಾಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ವಿವೇಚನೆಯಡಿ 80 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ. ವಿಪಕ್ಷ, ಆಡಳಿತದ ಶಾಸಕರಿಗೂ ಅನುದಾನ ಹಂಚಿಕೆ ಮಾಡಲಾಗಿದ್ದು ಈ ವರ್ಷ ಪ್ರತಿ ಶಾಸಕರಿಗೂ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದರು.

ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಹಣ ಪಡೆಯುತ್ತಿರುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡುತ್ತಿರುವುದು ಕೇವಲ 50 ಸಾವಿರ ಕೋಟಿ. ಐವರು ಕೇಂದ್ರ ಸಚಿವರಿದ್ದರೂ ರಾಜ್ಯದ ಹಿತಾಸಕ್ತಿ ಬಗ್ಗೆ ಬಾಯಿಬಿಡುತ್ತಿಲ್ಲ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರು ಕೇಂದ್ರ ಸರ್ಕಾರ ಒಪ್ಪಿಗೆ ಕೊಡುತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ಅವರ ಮೌನ ಏಕೆ ಎಂದು ಪ್ರಶ್ನಿಸಿದರು.

ಈ ಉಪಚುನಾವಣೆ ಫಲಿತಾಂಶ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಈ ಉಪಚುನಾವಣೆ ಗೆಲುವು ಮುಂದಿನ ಚುನಾವಣೆ ದಿಕ್ಸೂಚಿ ಎಂಬುದು ಅವರ ವೈಯಕ್ತಿಕ ಅಭಿಪ್ರಾಯ, ರಾಜಕೀಯ ವಿಶ್ಲೇಷಣೆ. ಈ ಹಿಂದೆ ನಡೆದ ಬಳ್ಳಾರಿ, ಚನ್ನಪಟ್ಟಣ, ಹಾವೇರಿ ಉಪಚುನಾವಣೆಯಲ್ಲಿ ಮೂರರಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚನ್ನಪಟ್ಟಣ ಮತ್ತು ಹಾವೇರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರ ಪುತ್ರರನ್ನೇ ಸೋಲಿಸಿ ಕಾಂಗ್ರೆಸ್ ಗೆಲುವು ಸಾದಿಸಿತ್ತು ಎಂದು ಹೇಳಿದರು.

ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ 50 ಸ್ಥಾನ ದಾಟುತ್ತಿಲ್ಲ. ಅವರಿಗೆ ಬೇರೆ ಪಕ್ಷದ ಅನಿವಾರ್ಯತೆ ಇದೆ. ಜೆಡಿಎಸ್ ಮೈತ್ರಿ ವರ್ಕ್ ಔಟ್ ಆಗುವುದಿಲ್ಲ, ದಾವಣಗೆರೆಯಲ್ಲಿ ಜೆಡಿಎಸ್ ಪ್ರಭಾವ ಇಲ್ಲ. ಅಶೋಕ್, ವಿಜಯೇಂದ್ರ, ಕುಮಾರಸ್ವಾಮಿ ಅವರ ಮಾತಿಗೆ ಬೆಲೆ ಇಲ್ಲ. ಅವರದ್ದು ಹಿಟ್ ಅಂಡ್ ರನ್ ಎಂದು ಟೀಕಿಸಿದರು.

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು.

ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು. ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಚನೆಗಳು ಜಾರಿಯಲ್ಲಿದ್ದು 24/3/2026 ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ.

ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಳೆದ ಬಾರಿಗಿಂತ ದೊಡ್ಡ ಅಂತರದ ಗೆಲುವು: ಡಿ.ಕೆ. ಶಿವಕುಮಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ.

ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.

ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ” ಎಂದು ತಿಳಿಸಿದರು.

ರಾಜ್ಯದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದಾಗ, “ಆಟೋ ಚಾಲಕರಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೊಟೇಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು” ಎಂದು ಆಗ್ರಹಿಸಿದರು.

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು” ಎಂದು ತಿಳಿಸಿದರು.

ಸಿಎಂ ದಾವಣಗೆರೆಯಲ್ಲಿ ಪ್ರಚಾರ ಮಾಡಲು ಹೇಳಿದ್ದು, ವೇಣುಗೋಪಾಲ್ ಅವರು ಕೇರಳದಲ್ಲಿ ಪ್ರಚಾರ ಮಾಡಲು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರವಾಗಿ ಗೊತ್ತಿಲ್ಲ. ಯಾರು ಇರಲಿ, ಇಲ್ಲದಿರಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ” ಎಂದು ತಿಳಿಸಿದರು.

SSLC ಗ್ರೇಡಿಂಗ್ ವಿವಾದ: ರಾಜ್ಯಪಾಲರ ವಿರುದ್ಧ ಟಿ.ಎನ್. ನಾರಾಯಣಗೌಡ ವಾಗ್ದಾಳಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಕುರಿತು ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಾರಾಯಣಗೌಡ, “ಹಿಂದಿ ಸಾಮ್ರಾಜ್ಯಶಾಹಿ ಲಾಬಿಯ ಪರವಾಗಿ ಮಾತನಾಡುತ್ತಿರುವುದು ಸ್ಪಷ್ಟ. ಕನ್ನಡಿಗರ ತೆರಿಗೆ ಹಣದಿಂದ ನಡೆಯುವ ರಾಜಭವನದಲ್ಲಿ ಇದ್ದು, ತಿಂದ ಮನೆಗೆ ಕನ್ನ ಹಾಕಬೇಡಿ” ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲರು ಬರೆದಿರುವ ಪತ್ರದ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, “ಈ ರೀತಿಯ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತದ್ದು. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ಮರೆತಿದ್ದಾರೆ” ಎಂದು ಟೀಕಿಸಿದರು.

ಮುಂದುವರೆದು, “ಜನರಿಂದ ನೇರವಾಗಿ ಆಯ್ಕೆಯಾದ ಪ್ರತಿನಿಧಿಯಲ್ಲದ ರಾಜ್ಯಪಾಲರಿಗೆ ದೈನಂದಿನ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ನೈತಿಕ ಅಥವಾ ಸಾಂವಿಧಾನಿಕ ಅಧಿಕಾರವಿಲ್ಲ” ಎಂದು ಹೇಳಿದರು. ಈ ರೀತಿಯ ನಡೆ ಮುಂದುವರೆದರೆ “ಗಂಟುಮೂಟೆ ಕಟ್ಟಿಕೊಂಡು ತಮ್ಮ ರಾಜ್ಯಕ್ಕೆ ಹಿಂತಿರುಗುವಂತೆ ಹೇಳಬೇಕಾಗುತ್ತದೆ” ಎಂದು ನಾರಾಯಣಗೌಡ ತೀವ್ರ ಎಚ್ಚರಿಕೆ ನೀಡಿದ್ದಾರೆ.

error: Content is protected !!