Home Blog

ಪಿಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

0

ಬಳ್ಳಾರಿ: ಬಳ್ಳಾರಿ ನಗರದ ಪಿಜಿ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೀವ್ರ ಅನುಮಾನಕ್ಕೆ ಕಾರಣವಾಗಿದೆ.

ಮೃತನನ್ನು ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ನಿವಾಸಿ ವಿಶ್ವನಾಥ್ (24) ಎಂದು ಗುರುತಿಸಲಾಗಿದೆ. ಆತ ಬಳ್ಳಾರಿಯ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಅಶೋಕ್ ನಗರದ ಪಿಜಿಯಲ್ಲಿ ವಾಸಿಸುತ್ತಿದ್ದನು.

ಸ್ಥಳೀಯ ಮಾಹಿತಿಯ ಪ್ರಕಾರ, ಸೋಮವಾರ ವಿಶ್ವನಾಥ್ ಹಾಗೂ ಪಿಜಿಯ ಸಹಪಾಠಿಗಳ ನಡುವೆ ಜಗಳ ನಡೆದಿತ್ತು. ಅದರ ನಂತರ ಮಂಗಳವಾರ ಕೊಠಡಿಯಲ್ಲಿ ಶವ ಪತ್ತೆಯಾಗಿದೆ.

ಆದರೆ ಮೃತದೇಹದ ತಲೆ ಮತ್ತು ಎದೆ ಭಾಗದಲ್ಲಿ ಗಾಯಗಳಿರುವುದು ಕಂಡುಬಂದಿರುವುದರಿಂದ ಪ್ರಕರಣವನ್ನು ಸಾಮಾನ್ಯ ಆತ್ಮಹತ್ಯೆ ಎಂದು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ ಕೌಲ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ; ಐವರು ಆರೋಪಿಗಳ ಜಾಮೀನು ಭವಿಷ್ಯ ಇಂದು ನಿರ್ಧಾರ

0

ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಐವರು ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಆರೋಪಿಗಳ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಇಂದು ಮಧ್ಯಾಹ್ನ 2.30ಕ್ಕೆ ಆದೇಶ ಪ್ರಕಟಿಸಲಿದೆ.

ಈ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಉಳಿದ ಐವರು ಆರೋಪಿಗಳ ಜಾಮೀನನ್ನೂ ರದ್ದುಪಡಿಸಬೇಕು ಎಂದು ಪ್ರಾಸಿಕ್ಯೂಷನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ವಿನಯ್, ನಂದೀಶ್, ಧನರಾಜು, ಪವನ್ ಹಾಗೂ ರಾಘವೇಂದ್ರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚಯ್ಯ ಅವರ ಪೀಠ ನಡೆಸಿದೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉಳಿದ ಆರೋಪಿಗಳಿಗೂ ಅದೇ ಮಾನದಂಡ ಅನ್ವಯಿಸಬೇಕು ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿತ್ತು.

ದರ್ಶನ್ ಹಾಗೂ ಇತರ ಆರೋಪಿಗಳು ಜೈಲು ಸೇರಿದ ಬಳಿಕವೇ ಪ್ರಾಸಿಕ್ಯೂಷನ್ ಈ ಅರ್ಜಿಯನ್ನು ಸಲ್ಲಿಸಿತ್ತು. ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿ, ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಸುದೀರ್ಘವಾಗಿ ಆಲಿಸಿರುವ ಹೈಕೋರ್ಟ್ ಇಂದು ಮಧ್ಯಾಹ್ನ 2.30ಕ್ಕೆ ತನ್ನ ಆದೇಶ ಪ್ರಕಟಿಸಲಿದೆ.

ಸದ್ಯ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಹೈಕೋರ್ಟ್‌ನ ತೀರ್ಪು ಪ್ರಕರಣದ ಮುಂದಿನ ಹಂತದ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.

ಮುಖ್ಯ ಶಿಕ್ಷಕರ ಕಿರುಕುಳ ಆರೋಪ: 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

0

ಬೀದರ್: ನಗರದ ಪ್ರತಾಪ್ ನಗರ ಪ್ರದೇಶದಲ್ಲಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆ ಸಂಬಂಧ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದು,

ಮೃತ ವಿದ್ಯಾರ್ಥಿಯನ್ನು 16 ವರ್ಷದ ಸಮೀರ್ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಸಮೀರ್ ಇಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಿದ್ದ. ಬಳಿಕ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ಬಳಿಕ ವಿದ್ಯಾರ್ಥಿಯ ಮೃತದೇಹವನ್ನು ಶಾಲಾ ಆಡಳಿತ ಮಂಡಳಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದೆ ಎನ್ನಲಾಗಿದೆ. ಈ ವಿಚಾರವನ್ನು ಕುಟುಂಬದವರಿಗೆ ತಕ್ಷಣ ಮಾಹಿತಿ ನೀಡದೇ ಆಸ್ಪತ್ರೆಗೆ ರವಾನಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮೃತ ವಿದ್ಯಾರ್ಥಿಯ ಪೋಷಕರ ಆರೋಪದ ಪ್ರಕಾರ, ಸಮೀರ್ 1ನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ಓದುತ್ತಿದ್ದ. ಹೆಚ್ಚಿನ ಅಂಕಗಳನ್ನು ಪಡೆಯುವಂತೆ ನಿರಂತರ ಒತ್ತಡ ಹೇರುವುದು ಹಾಗೂ ಶಾಲೆಯಲ್ಲಿ ವಿವಿಧ ಕೆಲಸಗಳನ್ನು ಮಾಡಿಸುವ ಮೂಲಕ ಮುಖ್ಯ ಶಿಕ್ಷಕರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಈ ಕಿರುಕುಳದಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಮುಂದಾಗಿರಬಹುದು ಎಂದು ಪೋಷಕರು ಶಂಕೆ ವ್ಯಕ್ತಪಡಿಸಿದ್ದು,. ಆದರೆ ಈ ಆರೋಪಗಳ ಸತ್ಯಾಸತ್ಯತೆ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ಸಾವಿನ ಕಾರಣ ಮತ್ತು ಪೋಷಕರು ಮಾಡಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

18 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ: ತೆಲಂಗಾಣದ ಉನ್ನತ ಅಧಿಕಾರಿ ಬಂಧನ

0

ಹೈದರಾಬಾದ್: ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ತೆಲಂಗಾಣ ರಸ್ತೆ ಮತ್ತು ಕಟ್ಟಡಗಳ ಇಲಾಖೆಯ ಮುಖ್ಯ ಇಂಜಿನಿಯರ್ ಮೋಹನ್ ನಾಯ್ಕ್ ಜಾರುಪ್ಲ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಸರ್ಕಾರಿ ಸೇವೆಯ ಅವಧಿಯಲ್ಲಿ ಕಾನೂನುಬಾಹಿರವಾಗಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಕುರಿತು ಬಂದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದರ ಭಾಗವಾಗಿ ಮೋಹನ್ ನಾಯ್ಕ್ ಅವರ ಕಚೇರಿ, ನಿವಾಸ ಸೇರಿದಂತೆ ಸಂಬಂಧಿಕರು ಮತ್ತು ಆಪ್ತರಿಗೆ ಸೇರಿದ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು.

ದಾಳಿಯ ವೇಳೆ ಅಧಿಕಾರಿಗಳು ಭಾರೀ ಪ್ರಮಾಣದ ಚರ ಹಾಗೂ ಸ್ಥಿರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ. ನಿಜಾಮಾಬಾದ್ ಜಿಲ್ಲೆಯ ದಿಚ್ಪಲ್ಲಿ ಮಂಡಲದ ಮುಲ್ಲಂಗಿ ಗ್ರಾಮದಲ್ಲಿ 19.38 ಎಕರೆ ವ್ಯಾಪ್ತಿಯ ಐದು ಕೃಷಿ ಭೂಮಿಗಳ ದಾಖಲೆಗಳು ಪತ್ತೆಯಾಗಿದ್ದು, ಅವುಗಳ ಸರ್ಕಾರಿ ಮೌಲ್ಯ ಸುಮಾರು ₹82.9 ಲಕ್ಷ ಎಂದು ಅಂದಾಜಿಸಲಾಗಿದೆ.

ಇದರ ಜೊತೆಗೆ ಕೊಂಪಲ್ಲಿಯಲ್ಲಿ ಮೂರು ಹಾಗೂ ಗಚಿಬೌಲಿಯಲ್ಲಿ ನಾಲ್ಕು ಫ್ಲ್ಯಾಟ್‌ಗಳು ಸೇರಿದಂತೆ ಒಟ್ಟು ಏಳು ಫ್ಲ್ಯಾಟ್‌ಗಳು ಪತ್ತೆಯಾಗಿದ್ದು, ಅವುಗಳ ಸರ್ಕಾರಿ ಮೌಲ್ಯ ಸುಮಾರು ₹7.35 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಮಿಯಾಪುರದಲ್ಲಿ ₹2.5 ಕೋಟಿ ಮೌಲ್ಯದ ಟ್ರಿಪ್ಲೆಕ್ಸ್ ವಿಲ್ಲಾ, ಕೂಕಟ್ಪಲ್ಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಮನೆ ಹಾಗೂ ನಿಜಾಂಪೇಟೆಯಲ್ಲಿ ಮತ್ತೊಂದು ವಿಲ್ಲಾ ಖರೀದಿಗೆ ₹1 ಕೋಟಿ ಮುಂಗಡ ಪಾವತಿ ಮಾಡಿರುವ ದಾಖಲೆಗಳೂ ಲಭ್ಯವಾಗಿವೆ.

ಶೋಧ ಕಾರ್ಯದ ವೇಳೆ ₹55 ಲಕ್ಷ ನಗದು, ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಲಾಗಿದ್ದ ₹1.44 ಕೋಟಿ ಠೇವಣಿ ದಾಖಲೆಗಳು, ಸುಮಾರು 2.5 ಕೆಜಿ ಚಿನ್ನಾಭರಣ, 6 ಕೆಜಿ ಬೆಳ್ಳಿ ಆಭರಣಗಳು, ಐಷಾರಾಮಿ ವಾಹನಗಳು ಹಾಗೂ ಎಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಪತ್ತೆಯಾಗಿರುವ ಆಸ್ತಿಗಳ ಅಧಿಕೃತ ಮೌಲ್ಯ ಸುಮಾರು ₹17.95 ಕೋಟಿ ಎಂದು ಅಂದಾಜಿಸಲಾಗಿದೆ. ಆದರೆ ಹೈದರಾಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಾರುಕಟ್ಟೆ ದರಗಳನ್ನು ಪರಿಗಣಿಸಿದರೆ ಈ ಆಸ್ತಿಗಳ ನೈಜ ಮೌಲ್ಯ ₹100 ಕೋಟಿಗೂ ಅಧಿಕ ಇರಬಹುದೆಂದು ಎಸಿಬಿ ಅಧಿಕಾರಿಗಳು ಶಂಕಿಸಿದ್ದಾರೆ.

ಉದ್ಯಮಿ ಮನೆಯಲ್ಲಿ ₹25 ಲಕ್ಷ ಕಳವು; ನೇಪಾಳ ಮೂಲದ ದಂಪತಿ ಬಂಧನ

0

ಬೆಂಗಳೂರು: ಮನೆ ಕೆಲಸದ ನೆಪದಲ್ಲಿ ಉದ್ಯಮಿಯ ನಿವಾಸಕ್ಕೆ ಸೇರಿದ್ದ ದಂಪತಿ, ₹25 ಲಕ್ಷ ನಗದು ಕಳವು ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ನೇಪಾಳ ಮೂಲದ ದಂಪತಿಯನ್ನು ಬಂಧಿಸಿ, ಕಳವು ಮಾಡಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಆರೋಪಿಗಳು ಸುಮಾರು ಒಂದು ತಿಂಗಳ ಹಿಂದೆ ಅಮೃತಹಳ್ಳಿ ವ್ಯಾಪ್ತಿಯ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.

ತನಿಖೆ ವೇಳೆ ಬೆಳಕಿಗೆ ಬಂದ ಮಾಹಿತಿಯ ಪ್ರಕಾರ, ಮನೆಯ ಮಾಲೀಕರು ಸಿಬ್ಬಂದಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್‌ನಿಂದ ₹25 ಲಕ್ಷ ಹಣವನ್ನು ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟು ಲಾಕ್ ಮಾಡಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇರಿಸಲಾಗಿತ್ತು.

ಈ ಮಾಹಿತಿ ಆರೋಪಿಗಳಿಗೆ ತಿಳಿದಿದ್ದು, ಮನೆಯ ಮಾಲೀಕರು ಇಲ್ಲದ ಸಮಯವನ್ನು ಬಳಸಿಕೊಂಡು ಕಬೋರ್ಡ್‌ನಲ್ಲಿದ್ದ ₹25 ಲಕ್ಷ ನಗದು ಹಣವನ್ನು ಕಳವು ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಳವು ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಮನೆ ಕೆಲಸಕ್ಕೆ ಸೇರಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಕಳವು ನಡೆದ ತಕ್ಷಣ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು.

ತಾಂತ್ರಿಕ ಮಾಹಿತಿ ಮತ್ತು ತನಿಖೆಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳವು ಮಾಡಿದ್ದ ₹25 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು–ಬೀದರ್ ವಿಮಾನ ವೇಳಾಪಟ್ಟಿ ಬದಲಾವಣೆಗೆ ಈಶ್ವರ ಖಂಡ್ರೆ ಆಕ್ಷೇಪ

ಬೆಂಗಳೂರು: ಸ್ಟಾರ್ ಏರ್ ಸಂಸ್ಥೆ ಬೆಂಗಳೂರು–ಬೀದರ್–ಬೆಂಗಳೂರು ನಡುವಿನ ವಿಮಾನ ವೇಳಾಪಟ್ಟಿಯನ್ನು ನಾಳೆಯಿಂದ ಅನ್ವಯವಾಗುವಂತೆ ಬದಲಾಯಿಸಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಿಗೆ ಪತ್ರ ಬರೆದು, ಈ ಹಿಂದೆ ಇದ್ದ ಬೆಳಗಿನ ವೇಳಾಪಟ್ಟಿ ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿತ್ತು ಎಂದು ತಿಳಿಸಿದ್ದಾರೆ. ಬೆಳಗ್ಗೆ 6:30ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನ 7:45ಕ್ಕೆ ಬೀದರ್ ತಲುಪಿ, 8:15ಕ್ಕೆ ಬೀದರ್‌ನಿಂದ ಹೊರಟು 9:30ಕ್ಕೆ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿತ್ತು ಎಂದು ವಿವರಿಸಿದ್ದಾರೆ.

ಈ ಬೆಳಗಿನ ವೇಳಾಪಟ್ಟಿ ಬೀದರ್ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಪ್ರಯಾಣಿಕರು, ವ್ಯಾಪಾರಿಗಳು ಮತ್ತು ತೆಲಂಗಾಣ ಭಾಗದ ಪ್ರಯಾಣಿಕರಿಗೆ ಸಹಾಯಕವಾಗಿತ್ತು ಎಂದು ಅವರು ಹೇಳಿದ್ದಾರೆ.

ಆದರೆ ಹೊಸ ವೇಳಾಪಟ್ಟಿಯಂತೆ ಜೂನ್ 10ರಿಂದ ವಿಮಾನ ಮಧ್ಯಾಹ್ನ 12:30ಕ್ಕೆ ಬೆಂಗಳೂರಿನಿಂದ ಹೊರಟು 1:45ಕ್ಕೆ ಬೀದರ್ ತಲುಪಲಿದೆ. ಬಳಿಕ 2:30ಕ್ಕೆ ಬೀದರ್‌ನಿಂದ ಹೊರಟು 3:30ಕ್ಕೆ ಬೆಂಗಳೂರಿಗೆ ಮರಳಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರ ಅನುಕೂಲತೆ ಕಡಿಮೆಯಾಗುವ ಸಾಧ್ಯತೆ ಇದ್ದು, ಪ್ರಯಾಣಿಕರ ಸಂಖ್ಯೆಯಲ್ಲಿಯೂ ಇಳಿಕೆ ಉಂಟಾಗಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಮತ್ತು ಕೆಕೆಆರ್‌ಡಿಬಿಯಿಂದ ನೀಡಲಾಗುತ್ತಿರುವ ವಿಜಯಬಿಲಿಟಿ ಗ್ಯಾಪ್ ಫಂಡ್ (ವಿಜಿಎಫ್) ಬಳಕೆ ಸಹ ಪರಿಣಾಮಕಾರಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಉಡಾನ್ ಯೋಜನೆಯಡಿ ಕೇಂದ್ರ ಸಬ್ಸಿಡಿ ಸ್ಥಗಿತಗೊಂಡ ನಂತರ ಸೇವೆ ಹಲವು ಬಾರಿ ನಿಲ್ಲಿಸಿ ಮತ್ತೆ ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ಸಹಾಯಧನದಿಂದ ಮಾತ್ರ ಈ ಮಾರ್ಗ ನಿರ್ವಹಣೆಯಾಗುತ್ತಿದೆ ಎಂದು ಅವರು ಪತ್ರದಲ್ಲಿ ಸ್ಮರಿಸಿದ್ದಾರೆ.

ಮಳೆ ಅಬ್ಬರಕ್ಕೆ ವಿಭೂತಿ ಫಾಲ್ಸ್ ಬಂದ್: ಅಪಾಯ ತಪ್ಪಿಸಲು ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಅಂಕೋಲ ತಾಲೂಕಿನ ಜನಪ್ರಿಯ ಪ್ರವಾಸಿ ತಾಣವಾದ ವಿಭೂತಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ.

ಯಾಣ ಪ್ರವಾಸಿ ವಲಯದ ಭಾಗವಾಗಿರುವ ವಿಭೂತಿ ಫಾಲ್ಸ್‌ಗೆ ಮಳೆಗಾಲದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ನಿರಂತರ ಮಳೆಯಿಂದ ಜಲಪಾತದಲ್ಲಿ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗುವ ಹಾಗೂ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯ ಕ್ರಮವಾಗಿ ನಿರ್ಬಂಧ ಹೇರಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ ಹೊಸಕಂಬಿ ಅರಣ್ಯ ಇಲಾಖೆ ಪ್ರವೇಶ ನಿಷೇಧ ಆದೇಶ ಜಾರಿಗೊಳಿಸಿದ್ದು, ಜಲಪಾತ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಈ ಹಿಂದೆ ಭಾರೀ ಮಳೆಯ ಸಂದರ್ಭದಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಪ್ರವಾಸಿಗರ ಜೀವಕ್ಕೆ ಅಪಾಯ ಎದುರಾದ ಘಟನೆಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.

ಮಳೆಗಾಲದಲ್ಲಿ ಅಪಾಯದ ಪ್ರಮಾಣ ಹೆಚ್ಚಾಗುವ ಕಾರಣ ಪ್ರತಿ ವರ್ಷ ಜೂನ್ ತಿಂಗಳಲ್ಲಿ ನಿರ್ಬಂಧ ಜಾರಿಗೊಳಿಸಲಾಗುತ್ತದೆ. ಈ ವರ್ಷವೂ ಸುರಕ್ಷತೆಯ ದೃಷ್ಟಿಯಿಂದ ಜೂನ್ ಎರಡನೇ ವಾರದಲ್ಲೇ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರು ವಿಭೂತಿ ಜಲಪಾತಕ್ಕೆ ಭೇಟಿ ನೀಡದಂತೆ ಅರಣ್ಯ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.

ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ಹಾಸನ, ಮಂಡ್ಯ, ಮೈಸೂರು ರೈತರಲ್ಲಿ ಆತಂಕ

0

ಹಾಸನ: ಮುಂಗಾರು ಆರಂಭವಾದರೂ ಮಳೆಯ ಕೊರತೆಯಿಂದ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದ್ದು, ಹಾಸನ ಸೇರಿದಂತೆ ನಾಲ್ಕು ಜಿಲ್ಲೆಗಳ ರೈತರಲ್ಲಿ ಆತಂಕ ಮನೆ ಮಾಡಿದೆ. ಜಲಾಶಯದಲ್ಲಿ ಸದ್ಯ 14.552 ಟಿಎಂಸಿ ನೀರು ಇದ್ದರೂ, ಬಳಕೆಗೆ ಲಭ್ಯವಿರುವುದು ಕೇವಲ 10.185 ಟಿಎಂಸಿ ಮಾತ್ರ.

37.105 ಟಿಎಂಸಿ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ 4.372 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿರುವುದರಿಂದ ನೀರಿನ ಲಭ್ಯತೆ ಮತ್ತಷ್ಟು ಸೀಮಿತವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 24.482 ಟಿಎಂಸಿ ನೀರು ಸಂಗ್ರಹವಾಗಿದ್ದರೆ, ಈ ಬಾರಿ ಆ ಪ್ರಮಾಣ ಅರ್ಧಕ್ಕಿಂತಲೂ ಕಡಿಮೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹೇಮಾವತಿ, ಹಾಸನದ ಜೊತೆಗೆ ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಪ್ರಮುಖ ಆಧಾರವಾಗಿದೆ. ಹೀಗಾಗಿ ಜಲಾಶಯ ಭರ್ತಿಯಾಗದಿದ್ದರೆ ಈ ಜಿಲ್ಲೆಗಳ ರೈತರು ಹಾಗೂ ಜನಸಾಮಾನ್ಯರು ಗಂಭೀರ ಸಂಕಷ್ಟ ಎದುರಿಸಬೇಕಾಗುತ್ತದೆ.

ಇಂತಹ ಪರಿಸ್ಥಿತಿಯ ನಡುವೆಯೂ ನಾಲೆಗಳಿಗೆ 300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಮಲೆನಾಡು ಭಾಗಗಳಾದ ಮೂಡಿಗೆರೆ, ಸಕಲೇಶಪುರ ಹಾಗೂ ಆಲೂರಿನಲ್ಲಿ ಮಳೆ ಚುರುಕುಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಕೃಷಿ ಚಟುವಟಿಕೆಗಳು ಈಗಾಗಲೇ ನಿಧಾನಗೊಂಡಿದ್ದು, ಎಲ್ಲರ ಚಿತ್ತ ಈಗ ಮುಂಗಾರು ಮಳೆಯತ್ತ ನೆಟ್ಟಿದೆ.

ಬಾಲಕಿಯರ ಹಾಸ್ಟೆಲ್‌ಗೆ ಪದೇಪದೇ ನುಗ್ಗುತ್ತಿದ್ದ ಕಾರ್ಮಿಕ: ಕೊನೆಗೂ ಪೊಲೀಸರ ಬಲೆಗೆ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಬಾಲಕಿಯರ ಹಾಸ್ಟೆಲ್‌ನಲ್ಲಿ ಮತ್ತೊಮ್ಮೆ ಭದ್ರತಾ ಲೋಪ ಬಯಲಾಗಿದ್ದು, ಮಧ್ಯರಾತ್ರಿ ಯುವಕನೊಬ್ಬ ವಸತಿ ನಿಲಯಕ್ಕೆ ನುಗ್ಗಿದ ಘಟನೆ ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದೆ. ಪ್ರಕರಣ ಸಂಬಂಧ ಉತ್ತರ ಪ್ರದೇಶದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ಹಾಸ್ಟೆಲ್ ಒಳಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ವಿದ್ಯಾರ್ಥಿನಿಯರು ಗುರುತಿಸಿದ್ದಾರೆ. ಆತನನ್ನು ಪ್ರಶ್ನಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ, ವಿದ್ಯಾರ್ಥಿನಿಯರೇ ಧೈರ್ಯ ತೋರಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ರಾಕೇಶ್ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಾಗಿದ್ದು, ಈ ಹಿಂದೆಯೂ ಹಾಸ್ಟೆಲ್ ಆವರಣಕ್ಕೆ ನುಗ್ಗಿದ್ದ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಿದ್ದರೂ ಸೂಕ್ತ ಭದ್ರತಾ ಕ್ರಮ ಕೈಗೊಳ್ಳದ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿನಿಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯರ ಸುರಕ್ಷತೆ ಪ್ರಶ್ನಾರ್ಥಕವಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಡೀನ್ ಪೊಲೀಸರಿಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ವಿಚಾರಣೆ ವೇಳೆ ಕಳ್ಳತನದ ಉದ್ದೇಶದಿಂದ ಹಾಸ್ಟೆಲ್‌ಗೆ ತೆರಳಿದ್ದಾಗಿ ಆರೋಪಿ ಹೇಳಿಕೊಂಡಿದ್ದರೂ, ಆತ ಹಾಸ್ಟೆಲ್‌ಗೆ ಏಕೆ ಪದೇ ಪದೇ ಪ್ರವೇಶಿಸುತ್ತಿದ್ದ ಎಂಬುದರ ಕುರಿತು ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗಳ ಭದ್ರತೆ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ದರ್ಶನ್ʼಗೆ ಮತ್ತೆ ಕಿರುಕುಳ!

ಬೆಂಗಳೂರು: ನಟ ದರ್ಶನ್  ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಕಿರುಕುಳ ನೀಡಲಾಗುತ್ತಿರುವ ಆರೋಪ ಕೇಳಿಬಂದಿದೆ. ಕೆಲವು ದುಷ್ಕರ್ಮಿಗಳು ನಕಲಿ ಖಾತೆಗಳನ್ನು ಸೃಷ್ಟಿಸಿ, ಅವರ ವಿರುದ್ಧ ಅವಹೇಳನಕಾರಿ ಹಾಗೂ ಅಸಭ್ಯ ಕಾಮೆಂಟ್‌ಗಳನ್ನು ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಿದೆ.

‘ಜಲಗಾರ ಯುನಿವರ್ಸಿಟಿ’ ಎಂಬ ಹೆಸರಿನ ನಕಲಿ ಖಾತೆಗಳ ಮೂಲಕ ವಿಜಯಲಕ್ಷ್ಮಿ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ನಿಂದನಾತ್ಮಕ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡಲಾಗುತ್ತಿದೆ.

ವಿಜಯಲಕ್ಷ್ಮಿ ಸಿನಿಮಾ ನೋಡಲು ಹೋದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ”, “ಅವಳ ಬಾಯ್‌ಫ್ರೆಂಡ್, ಗಂಡ ಜೈಲಿನಲ್ಲಿ” ಎಂದು ಆಕ್ಷೇಪಾರ್ಹವಾಗಿ ನಿಂದಿಸಿದ್ದಾರೆ. “ಇವಳು ‘Rapid Driver’ ಕಾರಿನಲ್ಲಿ ಓಡಾಡುತ್ತಾಳೆ” ಎಂಬಂತಹ ಸಂದೇಶಗಳನ್ನೂ ಸಹ ಹರಡಲಾಗಿದೆ.

ಈ ರೀತಿ ಅತೀ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುವ ಜೊತೆಗೆ, ವಿಜಯಲಕ್ಷ್ಮಿ ಅವರು ದೂರು ನೀಡದಂತೆ ‘ವಿಜಿಗೆ ಕಂಪ್ಲೇಂಟ್ ಕೊಡಬೇಡ ಅಂತ ಹೇಳಿ ಪ್ಲೀಸ್’ ಎಂದು ಮನವಿ ಮಾಡುವ ರೀತಿಯಲ್ಲಿ ಒತ್ತಡ ಹೇರಲಾಗುತ್ತಿದೆ.

ಈ ಕುರಿತು ವಿಜಯಲಕ್ಷ್ಮಿ ಅಥವಾ ಅವರ ಕುಟುಂಬದವರು ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಈ ರೀತಿಯ ಕಿರುಕುಳದ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!