Home Blog

‘ರಾಮಾಯಣ’ ಟ್ರೈಲರ್ ಲೀಕ್ : ರಾವಣನಾಗಿ ಯಶ್ ರೌದ್ರಾವತಾರ

ಅಧಿಕೃತ ಬಿಡುಗಡೆಗೂ ಮುನ್ನವೇ ‘ರಾಮಾಯಣ’ ಟ್ರೈಲರ್ ಲೀಕ್ ಆಗಿದ್ದು, ಸಿನಿಮಾ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್‌ನಲ್ಲಿ ಪ್ರದರ್ಶಿಸಲಾದ ಟ್ರೈಲರ್‌ನ ವಿಡಿಯೋ ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾಗಿದ್ದು, ರಾವಣನಾಗಿ ಯಶ್ ಅವರ ರೌದ್ರ ಎಂಟ್ರಿಯೇ ಟ್ರೈಲರ್‌ನ ಹೈಲೈಟ್ ಆಗಿದೆ.

ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕಾರಣ ವಿಡಿಯೋ ಗುಣಮಟ್ಟ ಕಡಿಮೆಯಿದ್ದರೂ, ಚಿತ್ರದ ದೃಶ್ಯ ವೈಭವ ಮತ್ತು ನಿರ್ಮಾಣ ಮೌಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಘರ್ಜಿಸುತ್ತಿರುವ ಸಿಂಹದ ಎದುರು ನಿಂತು ಅದನ್ನೇ ತನ್ನ ಪ್ರಭಾವದಿಂದ ಮೌನಗೊಳಿಸುವ ರಾವಣನ ದೃಶ್ಯ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಜೊತೆಗೆ ಬಾಹುಗಳನ್ನು ಚಾಚಿ ಸಂಭಾಷಣೆ ಹೇಳುವ ಯಶ್ ಅವರ ಮಾಸ್ ಅವತಾರವೂ ಭಾರೀ ಮೆಚ್ಚುಗೆ ಪಡೆಯುತ್ತಿದೆ.

ಟ್ರೈಲರ್‌ನಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಶೂರ್ಪಣಖಿಯಾಗಿ ರಕುಲ್ ಪ್ರೀತ್ ಸಿಂಗ್, ಹನುಮಂತ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಝಲಕ್ ನೀಡಲಾಗಿದೆ. ರಾಮನ ವನವಾಸ, ಸೀತಾ ಕಲ್ಯಾಣ, ಶೂರ್ಪಣಖಿಯ ಮೂಗು ಕತ್ತರಿಸುವ ಪ್ರಸಂಗ, ದಶರಥ-ರಾಮ ಭಾವನಾತ್ಮಕ ಕ್ಷಣಗಳು ಸೇರಿದಂತೆ ಮಹಾಕಾವ್ಯದ ಪ್ರಮುಖ ಅಧ್ಯಾಯಗಳನ್ನು ಚಿತ್ರತಂಡ ಟ್ರೈಲರ್‌ನಲ್ಲಿ ಅನಾವರಣಗೊಳಿಸಿದೆ.

ಚಿತ್ರತಂಡ ಜುಲೈ 30ರಂದು ಬೆಳಿಗ್ಗೆ 4:15ಕ್ಕೆ ಅಧಿಕೃತ ಟ್ರೈಲರ್ ಬಿಡುಗಡೆ ಮಾಡಲಿದ್ದು, ಲೀಕ್ ವಿಡಿಯೋ ಬಳಿಕ ಅದರ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಸುಮಾರು ₹2,000 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಾಗಿ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಚಿತ್ರಕ್ಕೆ ನಿತೇಶ್ ತಿವಾರಿ ನಿರ್ದೇಶನವಿದ್ದು, ನಮಿತ್ ಮಲ್ಹೋತ್ರಾ ನಿರ್ಮಾಪಕರಾಗಿದ್ದಾರೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್, ರಕುಲ್ ಪ್ರೀತ್ ಸಿಂಗ್ ಹಾಗೂ ಕಾಜಲ್ ಅಗರ್ವಾಲ್ ಅಭಿನಯಿಸಿರುವ ಈ ಪ್ಯಾನ್ ಇಂಡಿಯಾ ಸಿನಿಮಾ ಇದೇ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದ್ದು, ಎರಡನೇ ಭಾಗ ಮುಂದಿನ ವರ್ಷದ ನವೆಂಬರ್‌ನಲ್ಲಿ ತೆರೆಗೆ ಬರಲಿದೆ.

ಭಾರತ ತಂಡಕ್ಕೆ ಹೊಸ ಫೀಲ್ಡಿಂಗ್ ಬಾಸ್ : ಟಿ. ದಿಲೀಪ್ ಸ್ಥಾನಕ್ಕೆ ಸುಭದೀಪ್ ಘೋಷ್ ಎಂಟ್ರಿ

0

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಫೀಲ್ಡಿಂಗ್ ವಿಭಾಗಕ್ಕೆ ಹೊಸ ಸಾರಥಿ ಸಿಕ್ಕಿದ್ದಾರೆ. ಟಿ. ದಿಲೀಪ್ ಅವರ ಒಪ್ಪಂದವನ್ನು ನವೀಕರಿಸದಿರಲು ಬಿಸಿಸಿಐ ನಿರ್ಧರಿಸಿದ ಬೆನ್ನಲ್ಲೇ, ಅನುಭವಿ ಕೋಚ್ ಸುಭದೀಪ್ ಘೋಷ್ ಅವರನ್ನು ಟೀಮ್ ಇಂಡಿಯಾದ ಹೊಸ ಫೀಲ್ಡಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. ಗೌತಮ್ ಗಂಭೀರ್ ನೇತೃತ್ವದ ಕೋಚಿಂಗ್ ತಂಡದಲ್ಲಿ ಸೇರ್ಪಡೆಯಾಗಿರುವ ಘೋಷ್, ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದಲೇ ಹೊಸ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಕ್ರಿಕೆಟ್ ವಲಯದಲ್ಲಿ ‘ಜಾಯ್’ ಎಂದೇ ಪರಿಚಿತರಾಗಿರುವ ಸುಭದೀಪ್ ಘೋಷ್, ಅಸ್ಸಾಂ ಹಾಗೂ ರೈಲ್ವೇಸ್ ಪರ ದೇಶೀಯ ಕ್ರಿಕೆಟ್ ಆಡಿದ್ದರು. ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ಆಫ್ ಸ್ಪಿನ್ನರ್ ಆಗಿದ್ದ ಅವರು, ತಮ್ಮ ಚುರುಕಿನ ಫೀಲ್ಡಿಂಗ್‌ನಿಂದ ವಿಶೇಷ ಗುರುತಿಸಿಕೊಂಡಿದ್ದರು. 17 ಪ್ರಥಮ ದರ್ಜೆ ಮತ್ತು 17 ಲಿಸ್ಟ್-ಎ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು.

ಆಟಗಾರನಾಗಿ ನಿವೃತ್ತಿಯಾದ ಬಳಿಕ ಬಿಸಿಸಿಐ ತರಬೇತಿ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸಿದ ಘೋಷ್, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಈಗಿನ ಸೆಂಟರ್ ಆಫ್ ಎಕ್ಸಲೆನ್ಸ್)ಯಲ್ಲಿ ಕಳೆದ ಹಲವು ವರ್ಷಗಳಿಂದ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 2024ರ ಅಂಡರ್-19 ವಿಶ್ವಕಪ್‌ನಲ್ಲಿ ರನ್ನರ್‌ಅಪ್ ಆದ ಭಾರತ ತಂಡ, ಇಂಡಿಯಾ-ಎ ತಂಡಗಳು ಹಾಗೂ ಭಾರತೀಯ ಮಹಿಳಾ ತಂಡದೊಂದಿಗೆ ಅವರು ಕೆಲಸ ಮಾಡಿದ್ದರು.

2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಪುರುಷರ ತಂಡದ ಕೋಚಿಂಗ್ ಸಿಬ್ಬಂದಿಯಲ್ಲೂ ಅವರು ಸ್ಥಾನ ಪಡೆದಿದ್ದರು. ಇತ್ತೀಚೆಗೆ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದ ಭಾರತೀಯ ಯುವ ತಂಡಕ್ಕೂ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಐಪಿಎಲ್‌ನಲ್ಲೂ ಅಪಾರ ಅನುಭವ ಹೊಂದಿರುವ ಸುಭದೀಪ್ ಘೋಷ್, 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪ್ರಶಸ್ತಿ ಗೆದ್ದಾಗ ಕೋಚಿಂಗ್ ಸಿಬ್ಬಂದಿಯಲ್ಲಿದ್ದರು. ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೂ ಕೆಲಸ ಮಾಡಿದ್ದರು. ಈಗ ಟೀಮ್ ಇಂಡಿಯಾದ ಫೀಲ್ಡಿಂಗ್ ಗುಣಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಅವರ ಹೆಗಲೇರಿದೆ.

ದೇಶದ ಜನತೆಗೆ ಗುರು ಪೂರ್ಣಿಮೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ: ಗುರುವಿನ ಮಹತ್ವ ಸಾರಿದ ಸಂಸ್ಕೃತ ಶ್ಲೋಕ

0

ನವದೆಹಲಿ: ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನ ನೀಡುವವರಲ್ಲ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಶಕ್ತಿ, ಉತ್ತಮ ಚಿಂತನೆ ಹಾಗೂ ಮೌಲ್ಯಗಳನ್ನು ಬೆಳೆಸಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಶಕ್ತಿಯಾಗಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಗುರುವಿನ ಮಹತ್ವವನ್ನು ವಿವರಿಸುವ ಸಂಸ್ಕೃತ ಸುಭಾಷಿತವೊಂದನ್ನು ಉಲ್ಲೇಖಿಸಿದ್ದಾರೆ.

“ಪ್ರೇರಕಃ ಸೂಚಕಶ್ಚೈವ ವಾಚಕೋ ದರ್ಶಕಸ್ತಥಾ। ಶಿಕ್ಷಕಃ ಬೋಧಕಶ್ಚೈವ ಷಡೇತೇ ಗುರವಃ ಸ್ಮೃತಾಃ”

ಈ ಶ್ಲೋಕದ ಅರ್ಥವನ್ನು ವಿವರಿಸಿರುವ ಪ್ರಧಾನಿ, ಪ್ರೇರಕ ಪ್ರೇರಣೆ ನೀಡುವವನು, ಸೂಚಕ ಸರಿಯಾದ ದಾರಿಯನ್ನು ತೋರಿಸುವವನು, ವಾಚಕ ಜ್ಞಾನವನ್ನು ಹಂಚುವವನು, ದರ್ಶಕ ಸನ್ಮಾರ್ಗದತ್ತ ಮುನ್ನಡೆಸುವವನು, ಶಿಕ್ಷಕ ವಿದ್ಯೆ ಮತ್ತು ಕೌಶಲ್ಯ ಬೋಧಿಸುವವನು ಹಾಗೂ ಬೋಧಕ ಜೀವನದ ಸತ್ಯವನ್ನು ಅರಿವಿಗೆ ತರುವವನು ಎಂದು ಹೇಳಿದ್ದಾರೆ. ಈ ಆರು ರೂಪಗಳೂ ಗುರುವಿನ ಶ್ರೇಷ್ಠ ಸ್ವರೂಪಗಳೆಂದು ಸ್ಮರಿಸಿದ್ದಾರೆ.

ಪ್ರಧಾನಿ ತಮ್ಮ ಸಂದೇಶದಲ್ಲಿ, “ಗುರುವು ಜ್ಞಾನ ಧಾರೆ ಎರೆಯುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತಾರೆ. ಸದುಲೋಚನೆ ಹಾಗೂ ಸಂಸ್ಕಾರಗಳೊಂದಿಗೆ ಅವರನ್ನು ಸುಶಿಕ್ಷಿತರನ್ನಾಗಿ ರೂಪಿಸುತ್ತಾರೆ. ಅಂತಹ ಮಹಾನ್ ಗುರುಗಳ ಆದರ್ಶಗಳನ್ನು ನಮ್ಮ ಬದುಕಿನ ದಾರಿದೀಪವನ್ನಾಗಿ ಮಾಡಿಕೊಳ್ಳೋಣ” ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.

ಪ್ರೇಯಸಿಗೆ ಕೊನೆಯ ಕರೆ ಮಾಡಿ ರೈಲಿಗೆ ತಲೆಕೊಟ್ಟ ಯುವಕ: 400 ಮೀಟರ್ ದೂರದಲ್ಲಿ ಪತ್ತೆಯಾದ ರುಂಡು!

0

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಮೊದಲಿಗೆ ತಲೆಯಿಲ್ಲದ ಮೃತದೇಹ ಮಾತ್ರ ಪತ್ತೆಯಾಗಿದ್ದರೆ, ಇದೀಗ ಘಟನೆಯ ಮರುದಿನ ರುಂಡು ಸುಮಾರು 400 ಮೀಟರ್ ದೂರದ ಮೈದಾನದಲ್ಲಿ ಪತ್ತೆಯಾಗಿದೆ. ಮೃತನನ್ನು ಆಂಧ್ರ ಪ್ರದೇಶ ಮೂಲದ 28 ವರ್ಷದ ವಿಶ್ವನಾಥ್ ಎಂದು ಗುರುತಿಸಲಾಗಿದೆ.

ಆರಂಭದಲ್ಲಿ ತಲೆಯಿಲ್ಲದ ಮೃತದೇಹ ಮಾತ್ರ ಪತ್ತೆಯಾಗಿದ್ದರಿಂದ ರೈಲ್ವೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆದರೆ ಮಂಗಳವಾರ ಸ್ಥಳೀಯರು ಮೈದಾನದಲ್ಲಿ ಮಾನವ ತಲೆ ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಆತ್ಮಹತ್ಯೆ ಮಾಡಿಕೊಂಡಿದ್ದ ವಿಶ್ವನಾಥ್ ಅವರ ರುಂಡು ಎಂಬುದು ದೃಢಪಟ್ಟಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿಗೆ ತಲೆಕೊಟ್ಟ ಪರಿಣಾಮ ದೇಹ ಮತ್ತು ರುಂಡು ಬೇರ್ಪಟ್ಟಿದ್ದು, ಬಳಿಕ ನಾಯಿಗಳು ರುಂಡನ್ನು ಸುಮಾರು 400 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದವು ಎಂದು ಶಂಕಿಸಲಾಗಿದೆ. ಪತ್ತೆಯಾದ ರುಂಡನ್ನು ವರ್ತೂರು ಪೊಲೀಸರು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ.

ಇದೇ ವೇಳೆ ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಆತ್ಮಹತ್ಯೆಗೆ ಮುನ್ನ ವಿಶ್ವನಾಥ್ ತಮ್ಮ ಪ್ರೇಯಸಿಗೆ ಕರೆ ಮಾಡಿ ಮಾತನಾಡಿದ್ದರು. ಆ ಮಾತುಕತೆಯ ಬಳಿಕವೇ ಅವರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಜೀವ ಅಂತ್ಯಗೊಳಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಗೆ ನಿಖರ ಕಾರಣ ಏನು? ಪ್ರೇಮ ವೈಫಲ್ಯವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದರ ಕುರಿತು ರೈಲ್ವೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಯುವಜನರ ಧ್ವನಿಯನ್ನು ಗೌರವಿಸಿ: ನೀಟ್ ಪ್ರತಿಭಟನೆ ಕುರಿತು ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ

0

ನವದೆಹಲಿ: ಯುವಜನರ ಧ್ವನಿಯನ್ನು ಎಲ್ಲಾ ರಾಜಕೀಯ ಪಕ್ಷಗಳು ಗೌರವಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು.

ವಿದ್ಯಾರ್ಥಿಗಳ ಪ್ರತಿಭಟನೆ ಯಾವುದೇ ಕೋಪ, ಹಿಂಸೆ ಅಥವಾ ದ್ವೇಷದ ಅಭಿವ್ಯಕ್ತಿಯಲ್ಲ. ಅದು “ಭಾರತದ ಯುವಜನತೆಯ ಭರವಸೆಯ ಅಭಿವ್ಯಕ್ತಿ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಆತಂಕ ಹಾಗೂ ದುಗುಡವನ್ನು ವ್ಯಕ್ತಪಡಿಸಲು ಯುವಕರು ಬೀದಿಗಿಳಿದಿರುವುದು ದೇಶದ ಭವಿಷ್ಯದ ಬಗ್ಗೆ ವಿಶ್ವಾಸ ಮೂಡಿಸಿದೆ. ದೇಶದ ಭವಿಷ್ಯವಾಗಿರುವ ಯುವಜನರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವುದನ್ನು ನೋಡಿದಾಗ ನನಗೆ ಸಂತೋಷ ಹಾಗೂ ಭರವಸೆ ಮೂಡಿದೆ ಎಂದು ಅವರು ಹೇಳಿದರು.

ಪ್ರತಿಭಟನೆಗಳು ಮುಂದಿನ ಪೀಳಿಗೆಯ ಆಶೋತ್ತರಗಳನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ ರಾಹುಲ್ ಗಾಂಧಿ, ಇದು ಕೋಪ ಅಥವಾ ಹಿಂಸೆಯ ಸಂಕೇತವಲ್ಲ. ದೇಶದ ಯುವಜನರ ಮತ್ತು ಭವಿಷ್ಯದ ಪೀಳಿಗೆಯ ಧ್ವನಿಯಾಗಿದೆ ಎಂದು ತಿಳಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿಗಳು ಸತ್ಯ ಮತ್ತು ಜ್ಞಾನದ ಹುಡುಕಾಟದಲ್ಲಿದ್ದಾರೆ. ಯುವ ಸಮುದಾಯದ ಧ್ವನಿಯನ್ನು ಸರ್ಕಾರ ನಿರ್ಲಕ್ಷಿಸದೆ ಆಲಿಸಬೇಕು ಎಂದು ಹೇಳಿದರು.

ಬಿಜೆಪಿಯಲ್ಲಿರುವ ತಮ್ಮ ಸ್ನೇಹಿತರು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಯುವಜನರ ಅಭಿವ್ಯಕ್ತಿಯನ್ನು ಗೌರವಿಸಬೇಕು. ಯುವಕರ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಒತ್ತಿ ಹೇಳಿದರು.

ಆಗಸ್ಟ್ʼನಲ್ಲಿ ಸಾಲು ಸಾಲು ರಜೆ, ಬರೋಬ್ಬರಿ 14 ದಿನ ಬ್ಯಾಂಕ್ʼಗಳು ಬಂದ್: ಬೇಗನೆ ಕೆಲಸ ಮುಗಿಸಿಕೊಳ್ಳಿ!

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬ್ಯಾಂಕ್‌ಗೆ ಸಂಬಂಧಿಸಿದ ಪ್ರಮುಖ ಕೆಲಸಗಳಿದ್ದರೆ ಗ್ರಾಹಕರು ಮುಂಚಿತವಾಗಿ ರಜಾ ದಿನಗಳನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಆಗಸ್ಟ್ ತಿಂಗಳಲ್ಲಿ ಒಟ್ಟು 14 ದಿನ ಬ್ಯಾಂಕ್‌ಗಳು ಬಂದ್ ಇರಲಿವೆ. ಈ ರಜೆಗಳಲ್ಲಿ ರಾಷ್ಟ್ರೀಯ, ಪ್ರಾದೇಶಿಕ ಹಾಗೂ ಸಾಪ್ತಾಹಿಕ ರಜೆಗಳು ಸೇರಿವೆ.

ಆಗಸ್ಟ್ ತಿಂಗಳ ಬ್ಯಾಂಕ್‌ ರಜಾ ದಿನಗಳ ಪಟ್ಟಿ ಹೀಗಿದೆ:

  • ಆಗಸ್ಟ್ 2: ಭಾನುವಾರ – ವಾರದ ರಜೆ
  • ಆಗಸ್ಟ್ 8: ಎರಡನೇ ಶನಿವಾರ – ಬ್ಯಾಂಕ್‌ ರಜೆ
  • ಆಗಸ್ಟ್ 9: ಭಾನುವಾರ – ವಾರದ ರಜೆ
  • ಆಗಸ್ಟ್ 13: ಮಣಿಪುರದಲ್ಲಿ ದೇಶಪ್ರೇಮಿಗಳ ದಿನ
  • ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
  • ಆಗಸ್ಟ್ 16: ಭಾನುವಾರ – ವಾರದ ರಜೆ
  • ಆಗಸ್ಟ್ 22: ನಾಲ್ಕನೇ ಶನಿವಾರ – ಬ್ಯಾಂಕ್‌ ರಜೆ
  • ಆಗಸ್ಟ್ 23: ಭಾನುವಾರ – ವಾರದ ರಜೆ
  • ಆಗಸ್ಟ್ 25: ಈದ್-ಎ-ಮಿಲಾದ್
  • ಆಗಸ್ಟ್ 28: ರಕ್ಷಾ ಬಂಧನ
  • ಆಗಸ್ಟ್ 30: ಭಾನುವಾರ – ವಾರದ ರಜೆ

ಬ್ಯಾಂಕ್‌ ಶಾಖೆಗಳು ರಜೆಯ ದಿನಗಳಲ್ಲಿ ಮುಚ್ಚಿದ್ದರೂ, ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಬಳಸಿಕೊಳ್ಳಬಹುದು. UPI, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಎಟಿಎಂ ಹಾಗೂ IMPS ಸೇವೆಗಳು ಎಂದಿನಂತೆ ಲಭ್ಯವಿರುತ್ತವೆ.

ಆದರೆ ಚೆಕ್‌ ಠೇವಣಿ, ಡ್ರಾಫ್ಟ್‌ ಪಡೆಯುವುದು, KYC ನವೀಕರಣ ಅಥವಾ ಬ್ಯಾಂಕ್‌ ಶಾಖೆಗೆ ಭೇಟಿ ನೀಡಿ ಮಾಡಬೇಕಾದ ಯಾವುದೇ ಪ್ರಮುಖ ಕೆಲಸಗಳಿದ್ದರೆ, ರಜಾ ದಿನಗಳಿಗೂ ಮುನ್ನ ಪೂರ್ಣಗೊಳಿಸಿಕೊಳ್ಳುವುದು ಸೂಕ್ತ.

ಬ್ಯಾಂಕ್‌ಗೆ ಭೇಟಿ ನೀಡುವ ಮೊದಲು ಗ್ರಾಹಕರು ತಮ್ಮ ರಾಜ್ಯಕ್ಕೆ ಅನ್ವಯವಾಗುವ ರಜಾ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

CWRC ತೀರ್ಮಾನ ಸಮಾಧಾನ ತಂದಿಲ್ಲ, ಮೇಲ್ಮನವಿ ಸಲ್ಲಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶ ನಮಗೆ ಸಮಾಧಾನ ತಂದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವಂತೆ CWRC ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ರಾಜ್ಯದ ಜಲಾಶಯಗಳಲ್ಲಿರುವ ನೀರಿನ ಲಭ್ಯತೆ, ಡೆಡ್ ಸ್ಟೋರೇಜ್ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಪರಿಗಣಿಸಬೇಕಿದೆ ಎಂದರು.

“ಈಗಿರುವ ನೀರಿನಲ್ಲಿ ಡೆಡ್ ಸ್ಟೋರೇಜ್ ಲೆಕ್ಕಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬೆಂಗಳೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಅಗತ್ಯವಿದೆ. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೀರನ್ನು ಉಳಿಸಿಕೊಳ್ಳುತ್ತೇವೆ” ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನದಿಂದ ರಾಜ್ಯಕ್ಕೆ ಸಮಾಧಾನವಾಗಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಬಿಜೆಪಿ ನಾಯಕರು ಸಾಮಾನ್ಯ ಜ್ಞಾನವಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಳಿಗುಂಡ್ಲು ಬಳಿ ಪರಿಶೀಲನೆ ನಡೆಸಿದರೆ ರಾಜ್ಯದಿಂದ ಎಷ್ಟು ನೀರು ಹರಿಸಲಾಗಿದೆ ಎಂಬುದು ಗೊತ್ತಾಗುತ್ತದೆ. ಪ್ರಸ್ತುತ 3,500 ಕ್ಯೂಸೆಕ್ ಪ್ರಮಾಣದ ನೀರನ್ನಷ್ಟೇ ಹರಿಸಲಾಗುತ್ತಿದೆ ಎಂದು ಹೇಳಿದರು.

ಸದ್ಯಕ್ಕೆ ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಹಾಗೂ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಮಗೇ ಕುಡಿಯಲು ನೀರಿಲ್ಲ, 3,500 ಕ್ಯೂಸೆಕ್ ಹೇಗೆ ಬಿಡೋದು?: ಕಾವೇರಿ ಆದೇಶಕ್ಕೆ ಡಿಸಿಎಂ ಪರಮೇಶ್ವರ್ ಆಕ್ರೋಶ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲೇ ಕುಡಿಯುವ ನೀರಿನ ಕೊರತೆ ಇರುವ ಸಂದರ್ಭದಲ್ಲಿ ಇಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮಗೇ ಕುಡಿಯಲು ನೀರಿಲ್ಲ. ಹಾಗಿದ್ದಾಗ 3,500 ಕ್ಯೂಸೆಕ್ ನೀರು ಬಿಡಿ ಅಂದ್ರೆ ಹೇಗೆ?” ಎಂದು ಕಿಡಿಕಾರಿದರು. ಈ ವಿಚಾರವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ವಪಕ್ಷ ಸಭೆ ಕರೆಯಲಿದ್ದು, ಮುಂದಿನ ನಡೆ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಆಗಸ್ಟ್‌ 3ರಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕರ್ನಾಟಕಕ್ಕೆ ಆಗಮಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಈ ವಿಷಯವಾಗಿ ಚರ್ಚಿಸುವ ಸಾಧ್ಯತೆಯೂ ಇದೆ ಎಂದರು. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಕೂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮದ ಕುರಿತು ಚರ್ಚಿಸಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ಈಗಾಗಲೇ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರ ಪರಿಸ್ಥಿತಿಯನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುವ ಅವಕಾಶವಿಲ್ಲ ಎಂದು ಸಂಸತ್ತಿನಲ್ಲಿ ಸ್ಪಷ್ಟನೆ ನೀಡಲಾಗಿದೆ. ಅಂತಿಮವಾಗಿ ನ್ಯಾಯಾಲಯದ ತೀರ್ಪೇ ನಿರ್ಣಾಯಕವಾಗಿದ್ದು, ನ್ಯಾಯಾಲಯ ಸೂಚಿಸಿದಂತೆ ಸರ್ಕಾರ ನಡೆದುಕೊಳ್ಳಲಿದೆ ಎಂದು ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪತ್ರ ಬರೆಯುವುದು ಅವರ ಹಕ್ಕು. ಆದರೆ, ನ್ಯಾಯಾಲಯದ ತೀರ್ಪೇ ಅಂತಿಮವಾಗಿರುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿಕೆಶಿ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿಯನ್ನು ಬಿಜೆಪಿ ಟೀಕಿಸಿರುವ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಪರಸ್ಪರ ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಸಹಜ ಎಂದು ಹೇಳಿದರು.

ಟಿ.ಬಿ. ಡ್ಯಾಂ ಕ್ರೆಸ್ಟ್ ಗೇಟ್ ಉದ್ಘಾಟನೆ ವೇಳೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದರು. ನೆರೆ ರಾಜ್ಯಗಳೊಂದಿಗೆ ಸಂವಾದ ನಡೆಸುವುದು ತಪ್ಪಲ್ಲ. ರಾಜ್ಯಗಳು ಯಾವಾಗಲೂ ಸಂಘರ್ಷದಲ್ಲೇ ಇರಬೇಕು ಎಂಬುದು ಬಿಜೆಪಿಯ ನಿಲುವಾಗಿರಬಹುದು, ಅದಕ್ಕಾಗಿ ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ವ್ಯಂಗ್ಯವಾಡಿದರು.

ಊಟದಲ್ಲಿ ವಿಷ ಬೆರೆಸಿ, ಬಳಿಕ ಉಸಿರುಗಟ್ಟಿಸಿ ಹತ್ಯೆ: ಚಿನ್ನದಾಸೆಗೆ ವೃದ್ಧೆಯ ಜೀವ ತೆಗೆದ ಮೂವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಚಿನ್ನಾಭರಣ ದೋಚುವ ಉದ್ದೇಶದಿಂದ 80 ವರ್ಷದ ವೃದ್ಧೆಗೆ ಆಹಾರದಲ್ಲಿ ವಿಷ ಬೆರೆಸಿ, ಬಳಿಕ ಉಸಿರುಗಟ್ಟಿಸಿ ಹತ್ಯೆ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಅಪರಾಧ ಸಾಬೀತಾಗಿದ್ದು, ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಮ್ಟಾಡಿ ಹೀರಾ ನಿವಾಸಿ ವಿಲ್ಮಾ ಪ್ರಸ್ಚಿತಾ ಬಾರೆಟ್ಟೊ (30), ನರಿಕೊಂಬು ಪದಕಟ್ಟೆ ಹೊಯಿಗೆಬೈಲು ನಿವಾಸಿ ಚರಣ್ ಕುಮಾರ್ (34) ಹಾಗೂ ನರಿಕೊಂಬು ಅಂತರಹೌಸ್ ನಿವಾಸಿ ಸತೀಶ್ ಎ.ಆರ್. (33) ಶಿಕ್ಷೆಗೆ ಗುರಿಯಾದ ಅಪರಾಧಿಗಳು.

ಪ್ರಕರಣದ ವಿವರಗಳ ಪ್ರಕಾರ, ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ನಿವಾಸಿ ಬೆನೆಡಿಕ್ಟ್ ಕಾರ್ಲೊ (80) ಅವರು ಪತಿ ಇನಾಸ್ ಕಾರ್ಲೊ ಅವರೊಂದಿಗೆ ವಾಸವಾಗಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಇನಾಸ್ ಕಾರ್ಲೊ ಹಾಸಿಗೆ ಹಿಡಿದಿದ್ದ ಹಿನ್ನೆಲೆಯಲ್ಲಿ, ಮನೆಯ ಆರೈಕೆಗಾಗಿ ವಿಲ್ಮಾ ಪ್ರಸ್ಚಿತಾ ಬಾರೆಟ್ಟೊ ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡುತ್ತಿದ್ದಳು.

ಈ ವೇಳೆ ಬೆನೆಡಿಕ್ಟ್ ಕಾರ್ಲೊ ಧರಿಸುತ್ತಿದ್ದ ಚಿನ್ನದ ಕರಿಮಣಿ ಸರ ಹಾಗೂ ಮನೆಯಲ್ಲಿದ್ದ ಇತರೆ ಚಿನ್ನಾಭರಣಗಳನ್ನು ಗಮನಿಸಿದ ವಿಲ್ಮಾ, ಅವುಗಳನ್ನು ದೋಚುವ ಉದ್ದೇಶದಿಂದ ಸಂಚು ರೂಪಿಸಿದ್ದಳು. ಈ ವಿಷಯವನ್ನು ಪರಿಚಿತನಾದ ಸತೀಶ್‌ಗೆ ತಿಳಿಸಿದ್ದು, ಆತ ವೃದ್ಧೆಗೆ ಆಹಾರದಲ್ಲಿ ವಿಷ ಬೆರೆಸುವಂತೆ ಸಲಹೆ ನೀಡಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಅದರಂತೆ 2021ರ ಜನವರಿ 25ರಂದು ರಾತ್ರಿ ವಿಲ್ಮಾ ಆಹಾರದಲ್ಲಿ ವಿಷ ಬೆರೆಸಿದ್ದಳು. ವಿಷ ಸೇವಿಸಿದ ಬಳಿಕ ಬೆನೆಡಿಕ್ಟ್ ಕಾರ್ಲೊ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಬಳಿಕ ವಿಲ್ಮಾ ಮತ್ತು ಸತೀಶ್ ನಡುವಿನ ಮಾತುಕತೆಯ ನಂತರ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲ್ಲುವ ನಿರ್ಧಾರ ಕೈಗೊಳ್ಳಲಾಗಿತ್ತು.

ಯೋಜನೆಯಂತೆ ಸತೀಶ್, ಚರಣ್ ಕುಮಾರ್‌ನನ್ನು ಮನೆಗೆ ಕಳುಹಿಸಿದ್ದು, ಚಿನ್ನಾಭರಣದಲ್ಲಿ ಪಾಲು ನೀಡುವ ಷರತ್ತಿನ ಮೇರೆಗೆ ಆತ ಸಂಚಿನಲ್ಲಿ ಭಾಗಿಯಾಗಿದ್ದಾನೆ. ಬಳಿಕ ವಿಲ್ಮಾ ಮತ್ತು ಚರಣ್ ಕುಮಾರ್ ಸೇರಿ ತಲೆದಿಂಬು ಹಾಗೂ ಬಟ್ಟೆಯನ್ನು ಬಳಸಿ ಬೆನೆಡಿಕ್ಟ್ ಕಾರ್ಲೊ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಹತ್ಯೆಯ ಬಳಿಕ ಮೃತೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಕಿವಿಯೋಲೆ, ಬಳೆ, ಉಂಗುರ, ಚೈನ್ ಸೇರಿದಂತೆ ಸುಮಾರು ₹2.75 ಲಕ್ಷ ಮೌಲ್ಯದ, 61.070 ಗ್ರಾಂ ತೂಕದ ಚಿನ್ನಾಭರಣವನ್ನು ದೋಚಿದ್ದಾರೆ. ನಂತರ ವಿಷದ ಉಳಿದ ಅಂಶವನ್ನು ರಸ್ತೆಯ ತೋಡಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ.

2021ರ ಜನವರಿ 26ರಂದು ಪ್ರಕರಣ ಬೆಳಕಿಗೆ ಬಂದಿದ್ದು, ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸ್ ತನಿಖೆಯಲ್ಲಿ ಇದು ಪೂರ್ವಯೋಜಿತ ಕೊಲೆ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದ್ದಾರೆ.

₹1 ಕೋಟಿ ಬಹುಮಾನ ಘೋಷಿಸಲಾಗಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ಬಂಧನ!

0

ರಾಂಚಿ: ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹1 ಕೋಟಿ ಬಹುಮಾನ ಘೋಷಿಸಲಾಗಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮಿಸಿರ್ ಬೆಸ್ರಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ. ಧನ್ಬಾದ್ ಜಿಲ್ಲೆಯಲ್ಲಿ ನಡೆದ ಈ ಕಾರ್ಯಾಚರಣೆಯನ್ನು ಎಡಪಂಥೀಯ ಉಗ್ರವಾದ (LWE) ವಿರುದ್ಧದ ಹೋರಾಟದಲ್ಲಿ ಮಹತ್ವದ ಸಾಧನೆ ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮಿಸಿರ್ ಬೆಸ್ರಾ ಹಲವು ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದು, ದೇಶದ ಮೋಸ್ಟ್ ವಾಂಟೆಡ್ ಬಂಡುಕೋರರಲ್ಲಿ ಒಬ್ಬನಾಗಿದ್ದ. ಆತನ ಬಂಧನದಿಂದ ಜಾರ್ಖಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಪ್ರಸ್ತುತ ಜಾರ್ಖಂಡ್ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ನಿಷೇಧಿತ ನಕ್ಸಲ್ ಸಂಘಟನೆಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ. ಮಿಸಿರ್ ಬೆಸ್ರಾ ಬಂಧನವು ಈ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ, 2026ರ ಜನವರಿಯಲ್ಲಿ ಜಾರ್ಖಂಡ್‌ನ ಸಾರಂಡಾ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ₹1 ಕೋಟಿ ಬಹುಮಾನ ಘೋಷಿಸಲಾಗಿದ್ದ ನಕ್ಸಲ್ ಕಮಾಂಡರ್ ಅನಾಲ್ ದಾ ಅಲಿಯಾಸ್ ತೂಫಾನ್ ಹತನಾಗಿದ್ದ. ಕೋಬ್ರಾ ಬೆಟಾಲಿಯನ್ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ ಆ ಕಾರ್ಯಾಚರಣೆಯಲ್ಲಿ ಒಟ್ಟು ಎಂಟು ನಕ್ಸಲರು ಸಾವನ್ನಪ್ಪಿದ್ದರು.