Home Blog

ಅಗರ್ಕರ್ ಜಾಗಕ್ಕೆ ಮಾಜಿ ಕ್ರಿಕೆಟಿಗರ ಎಂಟ್ರಿ: RCB ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಸೇರಿ ಇಬ್ಬರು ರೇಸ್ʼನಲ್ಲಿ!

0

ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವರ ಒಪ್ಪಂದ ಮುಂದುವರಿಯಲಿದೆಯೇ ಅಥವಾ ಹೊಸ ಆಯ್ಕೆ ಸಮಿತಿ ಮುಖ್ಯಸ್ಥರನ್ನು ನೇಮಕ ಮಾಡಲಾಗುತ್ತದೆಯೇ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ. ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ಅವರೊಂದಿಗೆ ಒಪ್ಪಂದವನ್ನು ಮುಂದುವರಿಸದಿರಲು ಬಿಸಿಸಿಐ ನಿರ್ಧರಿಸಿದ್ದು, ನೂತನ ಚೀಫ್ ಸೆಲೆಕ್ಟರ್ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ.

2023ರ ಜುಲೈನಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಅಜಿತ್ ಅಗರ್ಕರ್ ಅವರ ಪ್ರಸ್ತುತ ಒಪ್ಪಂದ ಅಕ್ಟೋಬರ್ 4ರಂದು ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಅಗರ್ಕರ್ ಅವರು 2027ರ ಐಸಿಸಿ ಏಕದಿನ ವಿಶ್ವಕಪ್‌ವರೆಗೂ ಚೀಫ್ ಸೆಲೆಕ್ಟರ್ ಆಗಿ ಮುಂದುವರಿಯಲು ಆಸಕ್ತಿ ಹೊಂದಿದ್ದರು ಎಂಬ ವರದಿಗಳೂ ಇವೆ.

ರೋಹಿತ್ ಶರ್ಮಾ ವಿಚಾರದಲ್ಲಿ ಬಿಸಿಸಿಐ ಅಸಮಾಧಾನ?

ಅಜಿತ್ ಅಗರ್ಕರ್ ಹಾಗೂ ಬಿಸಿಸಿಐ ನಡುವಿನ ಭಿನ್ನಾಭಿಪ್ರಾಯಗಳಿಗೆ ಹಲವು ಕಾರಣಗಳನ್ನು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಅದರಲ್ಲೂ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತಂತೆ ಅಗರ್ಕರ್ ತೆಗೆದುಕೊಳ್ಳಲು ಮುಂದಾಗಿದ್ದ ನಿರ್ಧಾರ ಬಿಸಿಸಿಐ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ವಿವಿಧ ವರದಿಗಳ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ರೋಹಿತ್ ಶರ್ಮಾ ಅವರನ್ನು 2027ರ ಏಕದಿನ ವಿಶ್ವಕಪ್ ಯೋಜನೆಯ ಭಾಗವಾಗಿ ಪರಿಗಣಿಸುತ್ತಿಲ್ಲ ಎಂದು ಅಗರ್ಕರ್ ತಿಳಿಸಿದ್ದರು ಎನ್ನಲಾಗಿದೆ. ಮುಂದಿನ ವಿಶ್ವಕಪ್‌ಗಾಗಿ ಯುವ ಆಟಗಾರರನ್ನು ಬೆಳೆಸುವ ಉದ್ದೇಶವಿದೆ ಎಂಬ ಸಂದೇಶವನ್ನು ನೀಡಲಾಗಿತ್ತು ಎನ್ನಲಾಗಿದೆ.

ಆದರೆ ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ಬಿಸಿಸಿಐ ಕಾರ್ಯದರ್ಶಿ ಬಹಿರಂಗವಾಗಿ ರೋಹಿತ್ ಶರ್ಮಾ ಅವರಿಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ. ಈ ಬೆಳವಣಿಗೆಗಳು ಅಗರ್ಕರ್ ಹಾಗೂ ಬಿಸಿಸಿಐ ನಡುವಿನ ಸಂಬಂಧದ ಕುರಿತು ಚರ್ಚೆಗೆ ಕಾರಣವಾಗಿವೆ.

ಅಗರ್ಕರ್ ಬಳಿಕ ಯಾರು?

ಒಂದು ವೇಳೆ ಅಜಿತ್ ಅಗರ್ಕರ್ ಚೀಫ್ ಸೆಲೆಕ್ಟರ್ ಹುದ್ದೆಯಿಂದ ಕೆಳಗಿಳಿದರೆ, ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಈ ಹಿಂದೆ ಕೇಳಿಬಂದಿದ್ದವು.

ಆದರೆ ಇದೀಗ ಹೊಸ ಬೆಳವಣಿಗೆಯೊಂದರಲ್ಲಿ ಟೀಂ ಇಂಡಿಯಾ ಹಾಗೂ ಆರ್‌ಸಿಬಿಯ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಮತ್ತು ಭಾರತದ ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರ ಹೆಸರುಗಳು ಚೀಫ್ ಸೆಲೆಕ್ಟರ್ ಹುದ್ದೆಗೆ ಮುಂಚೂಣಿಗೆ ಬಂದಿವೆ ಎನ್ನಲಾಗಿದೆ. ಈ ಇಬ್ಬರ ಹೆಸರುಗಳನ್ನು ಬಿಸಿಸಿಐ ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಜಿತ್ ಅಗರ್ಕರ್ 2023ರಲ್ಲಿ ಚೀಫ್ ಸೆಲೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತ ತಂಡ ಹಲವು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಯಶಸ್ಸು ಸಾಧಿಸಿದೆ. 2024ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ, ಬಳಿಕ 2025ರ ಚಾಂಪಿಯನ್ಸ್ ಟ್ರೋಫಿಯನ್ನೂ ತನ್ನದಾಗಿಸಿಕೊಂಡಿತು. 2026ರ ಟಿ20 ವಿಶ್ವಕಪ್‌ನಲ್ಲಿಯೂ ಭಾರತ ಪ್ರಶಸ್ತಿ ಗೆದ್ದಿದೆ ಎನ್ನಲಾಗಿದೆ.

ಹೀಗಾಗಿ ಅಜಿತ್ ಅಗರ್ಕರ್ ಅವರ ಮುಂದಿನ ನಡೆ ಹಾಗೂ ಬಿಸಿಸಿಐನ ಹೊಸ ಚೀಫ್ ಸೆಲೆಕ್ಟರ್ ಆಯ್ಕೆ ಪ್ರಕ್ರಿಯೆ ಇದೀಗ ಕ್ರಿಕೆಟ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಪಾರ್ಥಿವ್ ಪಟೇಲ್ ಅಥವಾ ಪ್ರಗ್ಯಾನ್ ಓಜಾ ಅವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ; ಸಚಿವ ರುದ್ರಪ್ಪ ಲಮಾಣಿಗೆ ₹3 ಕೋಟಿ ದಂಡ!

0

ಹಾವೇರಿ: ಕಲ್ಲು ಕ್ವಾರಿ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ₹3 ಕೋಟಿ ದಂಡ ವಿಧಿಸಿದೆ.

ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿಯಿರುವ ಕಲ್ಲು ಕ್ವಾರಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕ್ವಾರಿಗೆ ನಿಗದಿಪಡಿಸಿದ ವ್ಯಾಪ್ತಿಯನ್ನು ಮೀರಿ ಹೆಚ್ಚುವರಿಯಾಗಿ ಕಲ್ಲು ತೆಗೆದಿರುವುದು ಹಾಗೂ ಕ್ವಾರಿ ಸುತ್ತಮುತ್ತಲಿನ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಿರುವುದು ನಿಯಮ ಉಲ್ಲಂಘನೆ ಎಂದು ಇಲಾಖೆಯ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕ್ವಾರಿ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗಿದ್ದು, ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್‌ (KRSAC) ಮೂಲಕ ನಡೆಸಲಾದ ಸಮೀಕ್ಷೆಯ ಆಧಾರದ ಮೇಲೆ ಅಕ್ರಮಗಳನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಹಾವೇರಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಲ್ಲು ಕ್ವಾರಿ ಮಾಲೀಕರಿಗೆ ದಂಡ ವಿಧಿಸಲಾಗಿದ್ದು, ಈ ಪಟ್ಟಿಯಲ್ಲಿ ರುದ್ರಪ್ಪ ಲಮಾಣಿ ಅವರ ಕ್ವಾರಿಯೂ ಸೇರಿದೆ ಎನ್ನಲಾಗಿದೆ.

ದಂಡದ ಮೊತ್ತವನ್ನು ಪಾವತಿಸಲು ಸಚಿವರಿಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ. ಒಟ್ಟು ₹3 ಕೋಟಿ ದಂಡವನ್ನು ಮೂರು ಕಂತುಗಳಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪಟಾಕಿ ತರಲು ಕರೆದೊಯ್ದು ಬಾಲಕನ ಕೊಲೆ? ಅಪಘಾತದ ಕಥೆ ಕಟ್ಟಿದ್ದ ಆರೋಪಿ ಅರೆಸ್ಟ್!

0

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ 13 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ವಿನಾಯಕ ನಗರದ ನಿವಾಸಿ ಪ್ರಜ್ವಲ್ ಮೃತ ಬಾಲಕ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪಕ್ಕದ ಮನೆಯ ಭಾಸ್ಕರ್ ರೆಡ್ಡಿ ಎಂಬಾತ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ. ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಪಟಾಕಿ ತರಲು ಹೋಗೋಣ ಎಂದು ಹೇಳಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ ಎನ್ನಲಾಗಿದೆ. ಬಳಿಕ ಬಾಲಕನನ್ನು ಕಾರಿನಲ್ಲೇ ಇರಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕನಿಂದಲೇ ವಿಡಿಯೋ ಮಾಡಿಸಿ ಆತನ ಪೋಷಕರಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಳಿಕ ಮದ್ಯದ ಅಮಲಿನಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿ, ಹಾಲೋಬ್ರಿಕ್ಸ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ಬಳಿಕ ಬಾಲಕನ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಆತಂಕಗೊಂಡಿದ್ದ ಆರೋಪಿ ಕಾರನ್ನು ಗೋಡೆಗೆ ಡಿಕ್ಕಿ ಹೊಡೆಸಿಕೊಂಡಿದ್ದಾನೆ. ನಂತರ ಬಳ್ಳಾರಿ ಸರ್ವೀಸ್ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣನಾಗಿದ್ದಾನೆ.

ಅಪಘಾತದ ಬಳಿಕ ಸ್ಥಳೀಯರು ಭಾಸ್ಕರ್ ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕಜಾಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಡಿಕ್ಕಿಯಲ್ಲಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ.

ಪೊಲೀಸರ ವಿಚಾರಣೆ ವೇಳೆ ಬಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಆದರೆ ಪ್ರಾಥಮಿಕ ತನಿಖೆಯಲ್ಲಿ ಬಾಲಕನನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಭಾಸ್ಕರ್ ರೆಡ್ಡಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Bengaluru News: ಫ್ಯಾನ್ಸಿ ಸ್ಟೋರ್‌ಗೆ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ!

0

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಇಲ್ಲಿನ ಎಂಬಿ ಜ್ಯೂವೆಲ್ಲರ್ಸ್ ಎಂಬ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಳಗ್ಗೆ ಸುಮಾರು 7.10ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

ಅಂಗಡಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ನಿಖರ ಕಾರಣ ಹಾಗೂ ಉಂಟಾಗಿರುವ ನಷ್ಟದ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಗ್ಯಾನೇಂದ್ರ ಜಾಮೀನು ಅರ್ಜಿಗೆ ಇಂದು ಆಕ್ಷೇಪಣೆ!

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗ್ಯಾನೇಂದ್ರ ಸಲ್ಲಿಸಿರುವ ಜಾಮೀನು ಅರ್ಜಿಗೆ ಇಂದು ಪ್ರಾಸಿಕ್ಯೂಷನ್‌ ಆಕ್ಷೇಪಣೆ ಸಲ್ಲಿಸಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾನೇಂದ್ರ ಅವರು ಜಾಮೀನು ಕೋರಿ ಬೆಂಗಳೂರಿನ 52ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರ ವಾದ ಮಂಡಿಸುವ ಪ್ರಾಸಿಕ್ಯೂಷನ್‌ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆಯಂತೆ ಆಕ್ಷೇಪಣೆ ಸಲ್ಲಿಸಬೇಕಿದ್ದ ಪ್ರಾಸಿಕ್ಯೂಷನ್ ಈ ಹಿಂದೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು. ಇದರಿಂದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದೀಗ ಇಂದು 52ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಪರವಾಗಿ ಗ್ಯಾನೇಂದ್ರ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಆಕ್ಷೇಪಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವಿವರಗಳು ಹಾಗೂ ಜಾಮೀನು ನೀಡಬಾರದು ಎಂಬುದಕ್ಕೆ ಸಂಬಂಧಿಸಿದ ಅಂಶಗಳನ್ನು ಪ್ರಾಸಿಕ್ಯೂಷನ್‌ ನ್ಯಾಯಾಲಯದ ಗಮನಕ್ಕೆ ತರಲಿದೆ.

ಪ್ರಾಸಿಕ್ಯೂಷನ್‌ನ ಆಕ್ಷೇಪಣೆ ಸಲ್ಲಿಕೆಯ ಬಳಿಕ ಗ್ಯಾನೇಂದ್ರ ಪರ ವಕೀಲರು ತಮ್ಮ ವಾದ ಮಂಡಿಸಲಿದ್ದು, ನಂತರ ನ್ಯಾಯಾಲಯ ಜಾಮೀನು ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಸಲಿದೆ.

ಮಳೆ ಬಂದರೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಅವಾಂತರ; ವಾರ್ಡ್‌ಗೆ ನೀರು ನುಗ್ಗಿ ರೋಗಿಗಳ ಪರದಾಟ

0

ಕೋಲಾರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳು ಎದುರಾಗಿವೆ.

ಮಳೆ ನೀರು ಜನರಲ್ ವಾರ್ಡ್‌ಗೆ ನುಗ್ಗಿದ ಪರಿಣಾಮ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಆಸ್ಪತ್ರೆಯ ವಾರ್ಡ್‌ನಲ್ಲಿ ನೀರು ತುಂಬಿಕೊಂಡಿದ್ದರಿಂದ ಅಲ್ಲಿದ್ದ ಹಾಸಿಗೆಗಳು ನೆನೆದಿವೆ. ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದು, ನೀರು ತೆರವುಗೊಳಿಸಲು ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಹರಸಾಹಸಪಟ್ಟಿದ್ದಾರೆ.

ಕೋಲಾರ ಜಿಲ್ಲಾಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಮಳೆ ಬಂದ ಸಂದರ್ಭದಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುವ ಸಮಸ್ಯೆ ಪದೇಪದೇ ಎದುರಾಗುತ್ತಿದೆ ಎನ್ನಲಾಗಿದೆ. ಮೂಲಸೌಕರ್ಯಗಳ ಕೊರತೆಯಿಂದ ರೋಗಿಗಳು ಹಾಗೂ ಅವರ ಕುಟುಂಬಸ್ಥರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರತಿ ಮಳೆಗಾಲದಲ್ಲೂ ಸಮಸ್ಯೆ ಮರುಕಳಿಸುತ್ತಿದ್ದರೂ ಶಾಶ್ವತ ಪರಿಹಾರ ಕೈಗೊಳ್ಳದಿರುವುದಕ್ಕೆ ರೋಗಿಗಳು ಹಾಗೂ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಮೂಲಸೌಕರ್ಯ ಸುಧಾರಿಸಿ, ಮಳೆ ನೀರು ವಾರ್ಡ್‌ಗಳಿಗೆ ನುಗ್ಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಚಿವರ ಸಹೋದರನ ಕುಟುಂಬದ 7 ಮಂದಿ ವಿರುದ್ಧ FIR

0

ತುಮಕೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಚಿವ ದಿವಂಗತ ಸುಧಾಕರ್ ಅವರ ಸಹೋದರ ಡಿಎಸ್. ಕುಮಾರ್ ಕುಟುಂಬದ ವಿರುದ್ಧ ತುಮಕೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಡಿಎಸ್. ಕುಮಾರ್ ಪುತ್ರ ಅರ್ಜುನ್ ಸೇರಿದಂತೆ ಕುಟುಂಬದ ಒಟ್ಟು ಏಳು ಮಂದಿ ವಿರುದ್ಧ ಯುವತಿ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಯುವತಿ ಮತ್ತು ಅರ್ಜುನ್ ಕಳೆದ 16 ವರ್ಷಗಳಿಂದ ಪರಿಚಿತರಾಗಿದ್ದು, ಕಳೆದ ಏಳು ವರ್ಷಗಳಿಂದ ಅರ್ಜುನ್ ಪ್ರೀತಿಸುವುದಾಗಿ ಹೇಳಿ ಮದುವೆಯಾಗುವುದಾಗಿ ನಂಬಿಸಿದ್ದ ಎನ್ನಲಾಗಿದೆ.

2020ರಲ್ಲಿ ಎರಡೂ ಕುಟುಂಬಗಳ ಪೋಷಕರ ಸಮ್ಮುಖದಲ್ಲಿ ಕುಂಕುಮ ಶಾಸ್ತ್ರ ನಡೆದಿತ್ತು. ಬಳಿಕ ಇಬ್ಬರೂ ಹಲವು ಕಡೆ ಪ್ರವಾಸ ಮಾಡಿದ್ದು, ಈ ಸಂದರ್ಭದಲ್ಲಿ ಅರ್ಜುನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಮದುವೆ ವಿಚಾರವಾಗಿ ಎರಡೂ ಕುಟುಂಬಗಳ ನಡುವೆ ಮಾತುಕತೆ ಮುಂದುವರಿದಿದ್ದು, 2025ರ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ನಡೆಸಲು ಸಿದ್ಧತೆ ನಡೆದಿತ್ತು. ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಡಿಸೆಂಬರ್‌ನಲ್ಲಿ ನಿಶ್ಚಿತಾರ್ಥ ನೆರವೇರಿಸಲಾಗಿತ್ತು. 2026ರ ಮಾರ್ಚ್ 1ರಂದು ಮದುವೆ ದಿನಾಂಕವನ್ನೂ ನಿಗದಿಪಡಿಸಲಾಗಿತ್ತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆದರೆ ಮದುವೆಗೆ ಎರಡು ತಿಂಗಳು ಬಾಕಿ ಇರುವಾಗ ಅರ್ಜುನ್ ಕುಟುಂಬ ಮದುವೆ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಯುವತಿ ಆರೋಪಿಸಿದ್ದಾರೆ. ಬಳಿಕ ಕುಟುಂಬದವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಸ್ಪಂದಿಸಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮಿಂದ ತಪ್ಪಾಗಿದ್ದರೆ ಕ್ಷಮಿಸುವಂತೆ ಮನವಿ ಮಾಡಿದರೂ ಸ್ಪಂದಿಸದೆ, ಡಿಎಸ್. ಕುಮಾರ್ ಅವರು ಲಾರಿ ಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ಯುವತಿ ಮಾಡಿದ್ದಾರೆ.

ಸದ್ಯ ಪೊಲೀಸರು ಯುವತಿಯ ಹೇಳಿಕೆ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರ್ ನಡೆಸಿದ್ದಾರೆ. ಮುಂದಿನ ಹಂತದಲ್ಲಿ ನ್ಯಾಯಾಧೀಶರ ಮುಂದೆ ಯುವತಿಯ ಸೆಕ್ಷನ್ 164ರ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ. ಬಳಿಕ ತನಿಖೆಯ ಆಧಾರದ ಮೇಲೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಗಲ್ಫ್ ಸಂಘರ್ಷದ ಬಿಸಿ; ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಹೊಸ ನಿಯಮಗಳು ಜಾರಿ!

0

ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಮತ್ತು ಗಲ್ಫ್ ಪ್ರದೇಶದಲ್ಲಿನ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಇಂಧನ ಸಂರಕ್ಷಣೆ ಹಾಗೂ ವೆಚ್ಚ ಕಡಿತಕ್ಕೆ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ.

ಸರ್ಕಾರಿ ವಾಹನಗಳಿಗೆ ನೀಡಲಾಗುವ ಇಂಧನ ಪ್ರಮಾಣವನ್ನು ಶೇ.50ರಷ್ಟು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಸೇನೆ, ಕಾನೂನು ಜಾರಿ ಸಂಸ್ಥೆಗಳು, ಆಂಬುಲೆನ್ಸ್, ಅಗ್ನಿಶಾಮಕ ದಳ ಸೇರಿದಂತೆ ಅಗತ್ಯ ಸೇವೆಗಳ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಸರ್ಕಾರಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೂ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಸಚಿವರ ವಿದೇಶ ಪ್ರವಾಸಗಳಿಗೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಅನಿವಾರ್ಯ ಪ್ರವಾಸವಿದ್ದರೆ ಎಕಾನಮಿ ಕ್ಲಾಸ್‌ನಲ್ಲೇ ಪ್ರಯಾಣಿಸಬೇಕು ಎಂದು ಸೂಚಿಸಲಾಗಿದೆ.

ಅಗತ್ಯವಿಲ್ಲದ ಸರ್ಕಾರಿ ಸಭೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ಸೂಚಿಸಲಾಗಿದ್ದು, ಸರ್ಕಾರಿ ಔತಣಕೂಟಗಳು, ಅನಗತ್ಯ ವಿಚಾರಸಂಕಿರಣಗಳು ಹಾಗೂ ತರಬೇತಿ ಕಾರ್ಯಕ್ರಮಗಳ ಮೇಲೂ ನಿರ್ಬಂಧ ಹೇರಲಾಗಿದೆ.

ವಿದ್ಯುತ್ ಉಳಿತಾಯಕ್ಕಾಗಿ ಅಂಗಡಿ, ಮಾರುಕಟ್ಟೆ ಮತ್ತು ಶಾಪಿಂಗ್ ಮಾಲ್‌ಗಳನ್ನು ರಾತ್ರಿ 9 ಗಂಟೆಯೊಳಗೆ ಮುಚ್ಚಬೇಕು. ಮದುವೆ ಮಂಟಪಗಳು ರಾತ್ರಿ 10 ಗಂಟೆಗೆ ಹಾಗೂ ರೆಸ್ಟೋರೆಂಟ್‌ಗಳು ರಾತ್ರಿ 11 ಗಂಟೆಯೊಳಗೆ ಬಂದ್ ಆಗಬೇಕು ಎಂದು ಸರ್ಕಾರ ಸೂಚಿಸಿದೆ. ಮದುವೆ ಹಾಗೂ ಇತರ ಸಮಾರಂಭಗಳಲ್ಲಿ ‘ಸಿಂಗಲ್ ಡಿಶ್’ ನಿಯಮ ಮುಂದುವರಿಯಲಿದೆ.

ಗಲ್ಫ್ ಸಂಘರ್ಷದಿಂದ ಎಲ್‌ಎನ್‌ಜಿ ಪೂರೈಕೆಗೆ ಅಡಚಣೆ ಉಂಟಾಗುವ ಆತಂಕದ ನಡುವೆಯೇ ಇಂಧನ ಬಳಕೆಯನ್ನು ನಿಯಂತ್ರಿಸಲು ಪಾಕಿಸ್ತಾನ ಈ ಕ್ರಮಗಳನ್ನು ಕೈಗೊಂಡಿದೆ.

ತಮಿಳುನಾಡಿನಲ್ಲಿ ಹಿಂದಿ ಕಲಿಕೆ ವಿರೋಧ; ‘ನಿಲುವು ಬದಲಿಸಿ’ ಎಂದ ಸುಪ್ರೀಂಕೋರ್ಟ್!

0

ನವದೆಹಲಿ: ತಮಿಳುನಾಡಿನಲ್ಲಿ ಹಿಂದಿ ಕಲಿಸುವುದನ್ನು ವಿರೋಧಿಸುತ್ತಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಎಂದು ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.

ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎ.ಜಿ. ಮಸೀಹ್ ಅವರ ಪೀಠ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿತು.

ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಶಾಲೆಗಳಲ್ಲಿ ಜಾರಿಯಲ್ಲಿರುವ ತ್ರಿಭಾಷಾ ವ್ಯವಸ್ಥೆಯಲ್ಲಿ ಹಿಂದಿ ಕೂಡ ಇರುವುದರಿಂದ, ಅದು ತಮಿಳುನಾಡಿನ ದ್ವಿಭಾಷಾ ನೀತಿಗೆ ಹೊಂದಿಕೆಯಾಗುವುದಿಲ್ಲ ಎಂಬುದು ರಾಜ್ಯ ಸರ್ಕಾರದ ಪ್ರಮುಖ ವಾದವಾಗಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ನಿಮ್ಮ ಮನೋಭಾವವನ್ನು ಬದಲಿಸಿಕೊಳ್ಳಬೇಕು. ತಮಿಳುನಾಡಿನ ನೆಲದಲ್ಲಿ ಹಿಂದಿ ಕಲಿಸಬಾರದು ಎಂದು ಹೇಳಲಾಗದು. ಅಲ್ಲದೆ, ಚೆನ್ನೈ ಮತ್ತು ದೆಹಲಿ ಪರಸ್ಪರ ದೂರವಾಗಬಾರದು. ಕೇಂದ್ರದಿಂದ ಬರುವ ಯೋಜನೆಯಿಂದ ರಾಜ್ಯದ ಶಿಕ್ಷಣದ ಗುಣಮಟ್ಟ ಕಡಿಮೆಯಾಗುವುದಿಲ್ಲ. ಹೆಚ್ಚುವರಿ ಅವಕಾಶಗಳು ವಿದ್ಯಾರ್ಥಿಗಳಿಗೆ ದೊರೆಯುತ್ತವೆ ಎಂದು ಅಭಿಪ್ರಾಯಪಟ್ಟರು.

ತಮಿಳುನಾಡು ಸರ್ಕಾರವು ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಪ್ರತಿ ಜಿಲ್ಲೆಯಲ್ಲಿ ಅಗತ್ಯವಿರುವ ಭೂಮಿಯನ್ನು ಗುರುತಿಸುವಂತೆ ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ನಿರ್ದೇಶನವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಆ ಮನವಿಯನ್ನು ತಿರಸ್ಕರಿಸಿ, ಆದೇಶ ಪಾಲನೆಗೆ ರಾಜ್ಯ ಸರ್ಕಾರಕ್ಕೆ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಲಾಗಿದೆ.

ಕಾಂಗ್ರೆಸ್‌ಗೆ ಬಿಗ್ ಶಾಕ್? 2028ರ ವೇಳೆಗೆ ಹಲವು ನಾಯಕರು NDA ಸೇರ್ತಾರೆ ಎಂದ ಆರ್. ಅಶೋಕ್

0

ಬೆಂಗಳೂರು: ಕಾಂಗ್ರೆಸ್‌ನ ಹಲವು ನಾಯಕರು ಪಕ್ಷದೊಳಗೆ ಅಸಮಾಧಾನಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆದು ಎನ್‌ಡಿಎ ಒಕ್ಕೂಟ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಆರ್. ಅಶೋಕ್, ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಗೌರವ ನೀಡಲಾಗಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದಕ್ಕೆ ಕಾಂಗ್ರೆಸ್‌ ಇನ್ನೂ ಸ್ಪಷ್ಟ ಕಾರಣ ನೀಡಿಲ್ಲ ಎಂದು ಹೇಳಿದರು.

ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಅವರ ಮಾತಿಗೆ ಪಕ್ಷದಲ್ಲಿ ಹಿಂದಿನಷ್ಟು ಪ್ರಾಮುಖ್ಯತೆ ಇಲ್ಲ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ‘ಯೂಸ್‌ ಆ್ಯಂಡ್‌ ಥ್ರೋ’ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ಇತರ ನಾಯಕರಲ್ಲೂ ಅಸಮಾಧಾನವಿದ್ದು, ಹಲವು ನಾಯಕರು ಬೇರೆ ಪಕ್ಷ ಸೇರುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೊಂದಿಗೆ ಹಲವು ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂಬುದಾಗಿ ಆರ್. ಅಶೋಕ್ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರು ಸಚಿವ ಸಂಪುಟ ಸಭೆ ಬಗ್ಗೆ ಮಾತನಾಡಿ, ಮಂಗಳೂರು ಕ್ಯಾಬಿನೆಟ್ ಉಪಯೋಗ ಇಲ್ಲ. ಸರ್ಕಾರದಲ್ಲಿ ಹಣ ಇಲ್ಲ, ಮೂಗಿಗೆ ತುಪ್ಪ ಸವರಿ ಬರ್ತಾರೆ ಅಷ್ಟೇ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಮಂಗಳೂರಿಗೆ ಏನೂ ಕೊಡಲಿಲ್ಲ, ಈಗ ಆರ್ಥಿಕ ಸಂಕಷ್ಟದಲ್ಲಿ ಡಿಕೆಶಿ ಕೂಡ ಏನೂ ಕೊಡಲ್ಲ ಎಂದು ಟೀಕೆ ಮಾಡಿದರು.

ಮೂರು ದಿನ ವಿಶೇಷ ಅಧಿವೇಶ ಕರೆಯಲಾಗಿದೆ. ನಾವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ್ತೇವೆ. ವಿಶೇಷ ಅಧಿವೇಶನಲ್ಲೂ ನಾವು ಸಾಲಮನ್ನಾ ಆಗ್ರಹಿಸಿ ಚರ್ಚೆ ಮಾಡ್ತೇವೆ. ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ಕರೆದಿದೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.