Home Blog

9 ವಿಕೆಟ್‌ಗಳ ಗೆಲುವಿನೊಂದಿಗೆ ಸರಣಿ ಕ್ಲೀನ್‌ಸ್ವೀಪ್ ಮಾಡಿದ ಟೀಂ ಇಂಡಿಯಾ!

0

ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಅವರ ಮಾರಕ ಬೌಲಿಂಗ್ ಹಾಗೂ ರೋಹಿತ್ ಶರ್ಮಾ–ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ.

ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 44.2 ಓವರ್‌ಗಳಲ್ಲಿ 218 ರನ್‌ಗಳಿಗೆ ಆಲೌಟ್ ಆಯಿತು. ಭಾರತ ತಂಡ 219 ರನ್‌ಗಳ ಗುರಿಯನ್ನು ಕೇವಲ 28.4 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 224 ರನ್ ಗಳಿಸುವ ಮೂಲಕ ಸುಲಭವಾಗಿ ಬೆನ್ನಟ್ಟಿತು.

ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 170 ರನ್‌ಗಳ ಜೊತೆಯಾಟವಾಡಿದ ಈ ಜೋಡಿ ಅಫ್ಘಾನ್ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ರೋಹಿತ್ ಶರ್ಮಾ 69 ಎಸೆತಗಳಲ್ಲಿ 79 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 86 ಎಸೆತಗಳಲ್ಲಿ ಅಜೇಯ 110 ರನ್‌ಗಳ ಶತಕ ಸಿಡಿಸಿ ಗೆಲುವಿನ ರೂವಾರಿಯಾದರು. ಶ್ರೇಯಸ್ ಅಯ್ಯರ್ 20 ರನ್ ಗಳಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಪ್ರಸಿದ್ಧ್ ಕೃಷ್ಣ ಅವರ ದಾಳಿಗೆ ಆರಂಭದಲ್ಲೇ ತತ್ತರಿಸಿತು. ಕೇವಲ 36 ರನ್ ಗಳಿಸುವಷ್ಟರಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೂ ನಾಯಕ ಹಷ್ಮತುಲ್ಲಾ ಶಾಹಿದಿ 102 ರನ್ ಹಾಗೂ ಅಜ್ಮತುಲ್ಲಾ ಒಮರ್‌ಜೈ 50 ರನ್ ಗಳಿಸಿ ತಂಡವನ್ನು 218 ರನ್‌ಗಳ ಮೊತ್ತಕ್ಕೆ ಕೊಂಡೊಯ್ದರು.

ಭಾರತದ ಪರ ಪ್ರಸಿದ್ಧ್ ಕೃಷ್ಣ 8.2 ಓವರ್‌ಗಳಲ್ಲಿ 23 ರನ್ ನೀಡಿ 5 ವಿಕೆಟ್ ಕಬಳಿಸಿ ಪಂದ್ಯದ ಶ್ರೇಷ್ಠ ಬೌಲರ್ ಎನಿಸಿಕೊಂಡರು. ಉಳಿದಂತೆ ಇತರೆ ಬೌಲರ್‌ಗಳು ಉತ್ತಮ ಬೆಂಬಲ ನೀಡಿದರು.

ಇನ್ನೊಂದೆಡೆ, ಅಫ್ಘಾನಿಸ್ತಾನದ ನಾಯಕ ಹಷ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ವೇಳೆ ಪಿಚ್‌ನ ನಿರ್ಬಂಧಿತ ಪ್ರದೇಶದಲ್ಲಿ ಓಡಿದ್ದ ಕಾರಣ ಅಂಪೈರ್‌ಗಳು ಭಾರತಕ್ಕೆ 5 ಪೆನಾಲ್ಟಿ ರನ್‌ಗಳನ್ನು ನೀಡಿದರು. ಹೀಗಾಗಿ ಭಾರತ ತಂಡ ಇನ್ನಿಂಗ್ಸ್ ಆರಂಭಿಸುವ ಮುನ್ನವೇ 5 ರನ್‌ಗಳ ಮುನ್ನಡೆ ಪಡೆದಿತ್ತು.

ಡಿಜಿಟಲ್ ಸ್ವತ್ತುಗಳ ಮೂಲಕ ಅಕ್ರಮ ಹಣ ವರ್ಗಾವಣೆ? ಬೆಂಗಳೂರಿನ 5 ಕಂಪನಿಗಳ ಮೇಲೆ ಇಡಿ ದಾಳಿ

ಬೆಂಗಳೂರು: ವರ್ಚುವಲ್ ಡಿಜಿಟಲ್ ಸ್ವತ್ತುಗಳ ಮೂಲಕ ಅನಧಿಕೃತವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಬೆಂಗಳೂರು ಮೂಲದ ಐದು ಪ್ರಮುಖ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈ ವೇಳೆ ಸುಮಾರು 6 ಕೋಟಿ ರೂ. ಹೊಂದಿದ್ದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999ರ ಸೆಕ್ಷನ್ 37ರ ಅಡಿಯಲ್ಲಿ ಜೂನ್ 17ರಂದು ಬೆಂಗಳೂರು ವಲಯದ ಇಡಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟ್ರಾನ್ಸಾಕ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕ್ಯಾರೆಟ್ಎಕ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮೋಕ್ಷಜ್ಞ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಬೈಹಟ್ಕೆ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್ ಹಾಗೂ ಅಭಿಭಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಐದು ಕಂಪನಿಗಳಿಗೆ ಸೇರಿದ ಆರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.

ಡಿಜಿಟಲ್ ಸ್ವತ್ತುಗಳ ಬಳಕೆ ಮೂಲಕ ಕಾನೂನುಬಾಹಿರವಾಗಿ ವಿದೇಶಗಳಿಗೆ ಹಣ ರವಾನಿಸಲು ಈ ಸಂಸ್ಥೆಗಳು ನೆರವಾಗಿವೆ ಎಂಬ ಆರೋಪದ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ. ದಾಳಿ ವೇಳೆ ಅಕ್ರಮ ವಹಿವಾಟುಗಳಿಗೆ ಬಳಸಲಾಗಿದೆ ಎನ್ನಲಾದ ಕೆಲವು ಬ್ಯಾಂಕ್ ಖಾತೆಗಳ ಮೇಲೆ ತಡೆಯಾಜ್ಞೆ ವಿಧಿಸಲಾಗಿದೆ.

ಈ ಖಾತೆಗಳಲ್ಲಿ ಸುಮಾರು 6 ಕೋಟಿ ರೂ. ಹಣ ಲಭ್ಯವಿದ್ದು, ಅಗತ್ಯ ಅನುಮತಿ ಪಡೆಯದೆ ಫೆಮಾ ನಿಯಮಗಳನ್ನು ಉಲ್ಲಂಘಿಸಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಲು ಅವುಗಳನ್ನು ಬಳಸಲಾಗಿದೆ ಎಂಬ ಶಂಕೆಯನ್ನು ಇಡಿ ವ್ಯಕ್ತಪಡಿಸಿದೆ.

ಇದೇ ವೇಳೆ ಬಹುಕೋಟಿ ಹೂಡಿಕೆ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಹೀರಾ ಗ್ರೂಪ್ ಆಫ್ ಕಂಪನಿಗಳ ಮುಖ್ಯಸ್ಥೆ ನೊಹೀರಾ ಶೇಖ್ ಹಾಗೂ ಅವರಿಗೆ ಸಂಬಂಧಿಸಿದ ಸಂಸ್ಥೆಗಳ 159 ಕೋಟಿ ರೂ. ಮೌಲ್ಯದ 23 ಸ್ಥಿರ ಆಸ್ತಿಗಳನ್ನು ಇಡಿ ಯಶಸ್ವಿಯಾಗಿ ಹರಾಜು ಹಾಕಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ವಂಚನೆಗೊಳಗಾದ ಹೂಡಿಕೆದಾರರಿಗೆ ಹಣ ಹಿಂತಿರುಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

 

ನಾಳೆ ನೀಟ್ ಮರುಪರೀಕ್ಷೆ: ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ವಿಶೇಷ ವ್ಯವಸ್ಥೆ!

ಬೆಂಗಳೂರು: ನಾಳೆ ನೀಟ್ ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಪರೀಕ್ಷಾ ಕೇಂದ್ರ ತಲುಪಲು ಸಂಚಾರಿ ಪೊಲೀಸರು ಅಗತ್ಯ ವ್ಯವಸ್ಥೆ ಮಾಡಿದ್ದು, ಸಹಾಯಕ್ಕಾಗಿ ಟ್ರಾಫಿಕ್ ಕಂಟ್ರೋಲ್ ರೂಮ್ ಸಂಪರ್ಕಿಸಲು ಸೂಚಿಸಲಾಗಿದೆ.

ಇತ್ತೀಚೆಗೆ ಟ್ರಾಫಿಕ್ ಜಾಮ್‌ನಿಂದ ಕೆಲ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ ಕಾರಣ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಳೆದುಕೊಂಡ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಸೂಚನೆ ನೀಡಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್ ಪರೀಕ್ಷೆ ಮರುನಡೆಯುತ್ತಿದ್ದು, ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಹಾಗೂ ದೇಶಾದ್ಯಂತ 500ಕ್ಕೂ ಹೆಚ್ಚು ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಗೃಹ ಸಚಿವರ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಬೆಂಗಳೂರಿನಲ್ಲಿ ಇದೇ ದಿನ ವಿಶ್ವ ಯೋಗ ದಿನಾಚರಣೆ, ಮ್ಯಾರಥಾನ್ ಹಾಗೂ ವಿವಿಧ ಸಂಘಟನೆಗಳ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮುಂಚಿತವಾಗಿಯೇ ಪ್ರಯಾಣ ಯೋಜನೆ ರೂಪಿಸಿ ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಮನವಿ ಮಾಡಲಾಗಿದೆ.

ಪ್ರಯಾಣದ ವೇಳೆ ಸಂಚಾರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾದರೆ ತಕ್ಷಣ ಟ್ರಾಫಿಕ್ ಕಂಟ್ರೋಲ್ ರೂಮ್‌ನ 22943131 ಹಾಗೂ 22943030 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಗವೇ ಆರೋಗ್ಯದ ಅಡಿಪಾಯ: ಎಸ್.ವಿ. ಸಂಕನೂರು

0

ವಿಜಯಸಾಕ್ಷಿ ಸುದ್ದಿ, ಗದಗ: ಯೋಗವು ಕೇವಲ ದೈಹಿಕ ಕಸರತ್ತು ಅಥವಾ ವ್ಯಾಯಾಮವಲ್ಲ. ಅದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನ ಕಾಪಾಡುವ ಮಹಾನ್ ವಿಜ್ಞಾನವಾಗಿದ್ದು, ಆರೋಗ್ಯ ರಕ್ಷಣೆ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ಮಾಡುವುದು ಅತ್ಯಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸರ್ವಯೋಗ ಸಂಸ್ಥೆಗಳ ಸಹಯೋಗದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026 ಅಂಗವಾಗಿ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದಡಿ ಶನಿವಾರ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಜನಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದ ಋಷಿಮುನಿಗಳು, ವಿಶೇಷವಾಗಿ ಮಹರ್ಷಿ ಪತಂಜಲಿ ಅವರು ಜಗತ್ತಿಗೆ ನೀಡಿರುವ ಯೋಗ ಎಂಬ ಅಮೂಲ್ಯ ಕೊಡುಗೆಯನ್ನು ಪ್ರತಿಯೊಬ್ಬರೂ ಜೀವನದ ಭಾಗವಾಗಿಸಿಕೊಳ್ಳಬೇಕು. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ ಯೋಗಾಭ್ಯಾಸಕ್ಕೆ ಮೀಸಲಿಡಬೇಕು ಎಂದು ಸಲಹೆ ನೀಡಿದರು.

ಯೋಗವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಮಹತ್ವದ್ದಾಗಿದೆ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗದ ಮಹತ್ವವನ್ನು ಪ್ರತಿಪಾದಿಸಿದ ಬಳಿಕ ವಿಶ್ವದಾದ್ಯಂತ ಯೋಗ ದಿನಾಚರಣೆಗೆ ಮಾನ್ಯತೆ ದೊರೆತಿದ್ದು, ಇಂದು ಅದು ಜಾಗತಿಕ ಆರೋಗ್ಯ ಚಳವಳಿಯಾಗಿ ಬೆಳೆದಿದೆ ಎಂದು ಹೇಳಿದರು.

ಮುನ್ಸಿಪಲ್ ಕಾಲೇಜು ಆವರಣದಿಂದ ಆರಂಭವಾದ ಜಾಥಾವು ಗಾಂಧಿ ಸರ್ಕಲ್, ರೋಟರಿ ಸರ್ಕಲ್, ಹಳೆ ಬಸ್ ನಿಲ್ದಾಣ, ಟಾಂಗಾ ಕೂಟ, ಮಹೇಂದ್ರಕರ ಸರ್ಕಲ್, ಶಹಪೂರ ಪೇಟೆ ಮಾರ್ಗವಾಗಿ ಸಂಚರಿಸಿ ಮತ್ತೆ ಮುನ್ಸಿಪಲ್ ಕಾಲೇಜು ಆವರಣಕ್ಕೆ ತಲುಪಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಜುಬೇದಾ ಬೇಗಂ ತಿಗಳೇರ, ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ, ಬ್ರಹ್ಮಕುಮಾರಿ ಪ್ರತಿನಿಧಿಗಳು, ಸಂಘದ ಕಾರ್ಯದರ್ಶಿ ಡಾ. ಬಿ.ಎಂ. ಲೋಕಪುರಿ, ಡಾ. ಎಂ.ಎಂ. ಹಾದಿಮನಿ, ಡಾ. ಸಾಯಿಪ್ರಕಾಶ, ಆಡಳಿತಾಧಿಕಾರಿ ಸುಧಾ ಜಾಲಿಹಾಳ, ಆಯುರ್ವೇದ ಕಾಲೇಜಿನ ಡಾ. ಕೊಟ್ರು ಶೆಟ್ರು, ಆರೋಗ್ಯ ಇಲಾಖೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಇಂದಿನ ಆಧುನಿಕ ಬದುಕಿನಲ್ಲಿ ಅಧಿಕಾರ, ಅಂತಸ್ತು, ಸಂಪತ್ತಿಗಿಂತ ಆರೋಗ್ಯವೇ ದೊಡ್ಡ ಸಂಪತ್ತು. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಪ್ರತಿದಿನ ಯೋಗಾಭ್ಯಾಸ ಮಾಡಬೇಕು.”

ಎಸ್.ವಿ. ಸಂಕನೂರು, ವಿಧಾನ ಪರಿಷತ್ ಸದಸ್ಯರು

ಯೋಗದ ಮಹತ್ವ ಸಾರಿದ ವಿದ್ಯಾರ್ಥಿಗಳು

ರೋಣ ಆಯುರ್ವೇದ ಕಾಲೇಜು ಹಾಗೂ ಬಿದರೂರು ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಯೋಗ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರ ಗಮನ ಸೆಳೆದರು. “ಯೋಗ ಮಾಡಿ ರೋಗ ಓಡಿಸಿ” ಎಂಬ ಸಂದೇಶ ಜಾಥಾದ ಪ್ರಮುಖ ಆಕರ್ಷಣೆಯಾಗಿತ್ತು.

ಹಲ್ಲಿ ಕಂಡರೆ ಭಯವಾಗುತ್ತದೆಯೇ? ಇದು ಫೋಬಿಯಾದ ಲಕ್ಷಣ ಇರಬಹುದು!

0

ಮನೆಯಲ್ಲಿ ಗೋಡೆಯ ಮೇಲೆ ಹಲ್ಲಿ ಕಾಣಿಸಿಕೊಂಡ ತಕ್ಷಣ ಕೆಲವರು ಅದನ್ನು ನಿರ್ಲಕ್ಷಿಸಿದರೆ, ಇನ್ನೂ ಕೆಲವರು ಭಯದಿಂದ ದೂರ ಸರಿಯುತ್ತಾರೆ.

ಹಲ್ಲಿಯನ್ನು ನೋಡಿದ ಕೂಡಲೇ ಹೃದಯ ಬಡಿತ ಹೆಚ್ಚಾಗುವುದು, ಬೆವರುವುದು, ನಡುಕ ಉಂಟಾಗುವುದು ಅಥವಾ ಆ ಸ್ಥಳದಿಂದ ದೂರ ಹೋಗಬೇಕೆನಿಸುವುದು ಸಾಮಾನ್ಯ ಪ್ರತಿಕ್ರಿಯೆಯಾಗಿರಬಹುದು. ಆದರೆ ಈ ಭಯ ಅತಿಯಾಗಿದ್ದರೆ ಅದು ಫೋಬಿಯಾದ ಲಕ್ಷಣವೂ ಆಗಿರಬಹುದು ಎಂದು ಮಾನಸಿಕ ಆರೋಗ್ಯ ತಜ್ಞರು ತಿಳಿಸಿದ್ದಾರೆ.

ತಜ್ಞರ ಪ್ರಕಾರ, ಹಲ್ಲಿಯ ರೂಪ, ಅದರ ವೇಗದ ಚಲನೆ ಹಾಗೂ ಯಾವಾಗ ಎಲ್ಲಿ ಕಾಣಿಸಿಕೊಳ್ಳುತ್ತದೆ ಎಂಬ ಅನಿಶ್ಚಿತತೆ ಕೆಲವರಲ್ಲಿ ಭಯದ ಭಾವನೆಯನ್ನು ಹೆಚ್ಚಿಸುತ್ತದೆ. ಬಾಲ್ಯದ ಅನುಭವಗಳು, ಕುಟುಂಬದ ಸದಸ್ಯರ ವರ್ತನೆ ಹಾಗೂ ಸಾಮಾಜಿಕ ಪ್ರಭಾವಗಳೂ ಈ ಭಯದ ಬೆಳವಣಿಗೆಗೆ ಕಾರಣವಾಗಬಹುದು. ಮನೆಯಲ್ಲೇ ಹಲ್ಲಿಯನ್ನು ನೋಡಿ ಅತಿಯಾಗಿ ಹೆದರುವವರನ್ನು ಕಂಡು ಬೆಳೆದ ಮಕ್ಕಳಲ್ಲೂ ಇದೇ ರೀತಿಯ ಭಯ ಬೆಳೆವ ಸಾಧ್ಯತೆ ಇದೆ.

ಫೋಬಿಯಾ ಎಂದು ಹೇಗೆ ಗುರುತಿಸಬಹುದು?

ಹಲ್ಲಿಗಳನ್ನು ಇಷ್ಟಪಡದಿರುವುದು ಸಾಮಾನ್ಯ. ಆದರೆ ಆ ಭಯವು ದೈನಂದಿನ ಜೀವನದ ಮೇಲೆ ಪರಿಣಾಮ ಬೀಳಲು ಆರಂಭಿಸಿದರೆ ಅದನ್ನು ಫೋಬಿಯಾ ಎಂದು ಪರಿಗಣಿಸಲಾಗುತ್ತದೆ. ಹಲ್ಲಿ ಕಾಣಿಸಬಹುದು ಎಂಬ ಕಾರಣಕ್ಕೆ ಕೆಲವು ಕೊಠಡಿಗಳಿಗೆ ಹೋಗುವುದನ್ನು ತಪ್ಪಿಸುವುದು, ಮನೆಯಲ್ಲಿ ಒಬ್ಬರೇ ಇರಲು ಹೆದರುವುದು, ಪದೇ ಪದೇ ಗೋಡೆಗಳು ಮತ್ತು ಮೇಲ್ಛಾವಣಿಯನ್ನು ಪರಿಶೀಲಿಸುವುದು ಮುಂತಾದ ವರ್ತನೆಗಳು ಫೋಬಿಯಾದ ಲಕ್ಷಣಗಳಾಗಿರಬಹುದು.

ಚಿಕಿತ್ಸೆಯಿಂದ ಭಯ ನಿವಾರಣೆ ಸಾಧ್ಯ:

ಮಾನಸಿಕ ಆರೋಗ್ಯ ತಜ್ಞರ ಪ್ರಕಾರ, ಹಲ್ಲಿಗಳ ಭಯಕ್ಕೆ ಪರಿಣಾಮಕಾರಿ ಚಿಕಿತ್ಸೆಗಳು ಲಭ್ಯವಿವೆ. ಕಾಗ್ನಿಟಿವ್ ಬಿಹೇವಿಯರಲ್ ಥೆರಪಿ (CBT) ಹಾಗೂ ಗ್ರಾಡ್ಯುಯಲ್ ಎಕ್ಸ್‌ಪೋಸರ್ ಥೆರಪಿ ಮೂಲಕ ಈ ಭಯವನ್ನು ಹಂತಹಂತವಾಗಿ ಕಡಿಮೆ ಮಾಡಬಹುದು. ಸರಿಯಾದ ಮಾರ್ಗದರ್ಶನ, ಸಹನೆ ಮತ್ತು ಚಿಕಿತ್ಸೆಯಿಂದ ಹಲವು ವರ್ಷಗಳಿಂದ ಕಾಡುತ್ತಿರುವ ಫೋಬಿಯಾವನ್ನೂ ನಿಯಂತ್ರಣಕ್ಕೆ ತರಲು ಸಾಧ್ಯವಿದೆ.

ಹಲ್ಲಿಗಳ ಭಯವು ದಿನನಿತ್ಯದ ಚಟುವಟಿಕೆಗಳು, ಮನಶಾಂತಿ ಅಥವಾ ಸಾಮಾಜಿಕ ಜೀವನದ ಮೇಲೆ ಪರಿಣಾಮ ಬೀರುತ್ತಿದ್ದರೆ, ತಕ್ಷಣ ಮಾನಸಿಕ ಆರೋಗ್ಯ ತಜ್ಞರ ಸಲಹೆ ಪಡೆಯುವುದು ಒಳಿತು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಗದಗ ಮೇನ್ ಜಂಕ್ಷನ್ ಮೂಲಕವೇ ರೈಲು ಓಡಿಸಲಿ: ವಿಕಾಸ ವೇದಿಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ಹಾಗೂ ವಿಜಯಪುರ–ಯಶವಂತಪುರ ರೈಲುಗಳನ್ನು ಗದಗ ಬೈಪಾಸ್ ಮಾರ್ಗದ ಬದಲು ಗದಗ ಮೇನ್ ಜಂಕ್ಷನ್ ಮೂಲಕವೇ ಸಂಚರಿಸಲು ಅವಕಾಶ ಕಲ್ಪಿಸಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ರೈಲ್ವೆ ಇಲಾಖೆಗೆ ಆಗ್ರಹಿಸಿದ್ದಾರೆ.

ಈ ಕುರಿತು ಮನವಿ ಸಲ್ಲಿಸಿರುವ ಅವರು, ಟ್ರೇನ್ ನಂ.16535/36 ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ಗದಗ ಬೈಪಾಸ್ ಮೂಲಕ ಸಂಚರಿಸಿದರೆ ಜಿಲ್ಲೆಯ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಬೈಪಾಸ್ ನಿಲ್ದಾಣವು ನಗರದಿಂದ ಸುಮಾರು 8 ಕಿ.ಮೀ. ದೂರದಲ್ಲಿದ್ದು, ಸಮರ್ಪಕ ರಸ್ತೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಇಲ್ಲ. ಹೀಗಾಗಿ ಸಾಮಾನ್ಯ ಪ್ರಯಾಣಿಕರು, ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೈಪಾಸ್ ಮಾರ್ಗವನ್ನು ಮುಖ್ಯವಾಗಿ ಸರಕು ಸಾಗಣೆ ರೈಲುಗಳಿಗಾಗಿ ಬಳಸಬೇಕು. ಪ್ರಯಾಣಿಕರ ರೈಲುಗಳನ್ನು ಗದಗ ಮೇನ್ ಜಂಕ್ಷನ್ ಮೂಲಕವೇ ಓಡಿಸುವುದರಿಂದ ಜಿಲ್ಲೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ವಾರದಲ್ಲಿ ಎರಡು ದಿನ ಸಂಚರಿಸುವ ವಿಜಯಪುರ–ಯಶವಂತಪುರ ರೈಲು ಕೂಡ ಗದಗ ನಿಲ್ದಾಣವನ್ನು ತಪ್ಪಿಸಿ ಸಂಚರಿಸುತ್ತಿದ್ದು, ಇದರಿಂದ ಜಿಲ್ಲೆಯ ಪ್ರಯಾಣಿಕರು ನೇರ ರೈಲು ಸಂಪರ್ಕದಿಂದ ವಂಚಿತರಾಗುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ರೈಲ್ವೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗದಗ–ಹರಪನಹಳ್ಳಿ ಹೊಸ ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ವಿಶ್ವನಾಥ ಖಾನಾಪೂರ ಅವರೊಂದಿಗೆ ಜಗದೀಶ ಕಂಗೂರಿ, ವೆಂಕಟೇಶ ಕಬಾಡಿ, ಸಿದ್ದು ಜರತಖನ್ನಿ, ರಜಾಕ್ ನೂರಭಾಷಾ ಸೇರಿದಂತೆ ಹಲವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವ ವಿ. ಸೋಮಣ್ಣ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

“ಸಮಯ ಉಳಿತಾಯಕ್ಕಿಂತ ಪ್ರಯಾಣಿಕರ ಅನುಕೂಲ ಮುಖ್ಯ. ಗದಗ ಮೇನ್ ಜಂಕ್ಷನ್ ಮೂಲಕ ರೈಲು ಸಂಚಾರ ಮಾಡಿದರೆ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬೈಪಾಸ್ ಮಾರ್ಗದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಿಲ್ಲ.”

ವಿಶ್ವನಾಥ ಖಾನಾಪೂರ

ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಸಹಾಯಕ ಇಂಜಿನಿಯರ್ ಅಮಾನತು, ಗುತ್ತಿಗೆದಾರನಿಗೆ ಬ್ಲ್ಯಾಕ್‌ಲಿಸ್ಟ್ ಭೀತಿ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಕೃಷ್ಣಭೈರೇಗೌಡ ಅವರು ಮೊದಲ ಸಭೆಯಲ್ಲೇ ನಗರದ ರಸ್ತೆಗಳ ಬಗ್ಗೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ್ದರು.

ಕ್ರೆಸೆಂಟ್ ರಸ್ತೆಯ ಡಾಂಬರೀಕರಣ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಹಾಗೂ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಸಂಪಂಗಿರಾಮನಗರ ವಿಭಾಗದ ಸಹಾಯಕ ಇಂಜಿನಿಯರ್ ಪೂಜಾರಪ್ಪ ಅವರನ್ನು ಅಮಾನತು ಮಾಡಲಾಗಿದೆ.

ರಸ್ತೆ ಕಾಮಗಾರಿಯಲ್ಲಿ ನಿಗದಿತ ಪ್ರಮಾಣ ಮತ್ತು ದಪ್ಪದಲ್ಲಿ ಆಸ್ಫಾಲ್ಟಿಂಗ್ ಮಾಡದೇ ನಿರ್ಲಕ್ಷ್ಯ ವಹಿಸಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಅಮಾನತು ಆದೇಶ ಹೊರಡಿಸಿದ್ದಾರೆ.

ಇದರ ಜೊತೆಗೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುಣಮಟ್ಟ ಕಾಪಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಹ ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ನಗರದ ರಸ್ತೆ ಗುಂಡಿಗಳ ಸಮಸ್ಯೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಕೃಷ್ಣ ಭೈರೇಗೌಡ, “ಬೆಂಗಳೂರು ರಸ್ತೆ ಗುಂಡಿ ಮುಚ್ಚುವುದು ರಾಕೆಟ್ ಸೈನ್ಸ್ ಅಲ್ಲ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಪರಿಶೀಲನೆಯ ಬಳಿಕ ಮೊದಲ ಅಮಾನತು ಕ್ರಮ ಜರುಗಿರುವುದು ಅಧಿಕಾರಿಗಳಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ.

ಸಿಎ ಪರೀಕ್ಷೆಯಲ್ಲಿ ರೋಹನ ಜೋಗಿನ ಯಶಸ್ಸು

0

ವಿಜಯಸಾಕ್ಷಿ ಸುದ್ದಿ, ಗದಗ: ಮೇ 2026ರಲ್ಲಿ ನಡೆದ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ನಗರದ ಒಕ್ಕಲಗೇರಿ ಓಣಿಯ ರೋಹನ ರವಿ ಜೋಗಿನ ಅವರು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಕೆಇಬಿಯ ಪ್ರಥಮ ದರ್ಜೆ ಗುತ್ತಿಗೆದಾರ ರವಿ ಜೋಗಿನ ಅವರ ಪುತ್ರರಾಗಿರುವ ರೋಹನ, ತಮ್ಮ ನಿರಂತರ ಪರಿಶ್ರಮ ಮತ್ತು ಶ್ರದ್ಧೆಯಿಂದ ಈ ಯಶಸ್ಸು ಸಾಧಿಸಿದ್ದಾರೆ.

ಅವರು ತಮ್ಮ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ನಗರದ ಕೆ.ಎಲ್.ಇ. ಪ್ರೌಢಶಾಲೆಯಲ್ಲಿ ಹಾಗೂ ಪಿಯುಸಿ ಶಿಕ್ಷಣವನ್ನು ಎ.ಎಸ್.ಎಸ್. ಕಾಲೇಜಿನಲ್ಲಿ ಪೂರ್ಣಗೊಳಿಸಿ, ಬಳಿಕ ಸಿಎ ವ್ಯಾಸಂಗದಲ್ಲಿ ತೊಡಗಿಸಿಕೊಂಡಿದ್ದರು.

ದೇಶದ ಅತ್ಯಂತ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿರುವ ರೋಹನ ಅವರ ಸಾಧನೆಗೆ ಗುರು-ಹಿರಿಯರು, ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

ಗ್ಯಾರಂಟಿಗೆ ಗಂಡಾಂತರ; ಸ್ಲಂ ಜನರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಬಡಜನರ ಕಲ್ಯಾಣ, ಉಚಿತ ಶಿಕ್ಷಣ, ಆರೋಗ್ಯ ಹಾಗೂ ವಸತಿ ಭರವಸೆ ನೀಡಿ ಅಧಿಕಾರಕ್ಕೆ ಬರುವ ಸರ್ಕಾರಗಳು ಬಳಿಕ ಶ್ರೀಮಂತರು ಹಾಗೂ ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದು ವಿಷಾದನೀಯ ಎಂದು ಬೇಲೂರು ಗುರುಬಸವೇಶ್ವರ ಮಠದ ಪರಮಪೂಜ್ಯ ಡಾ. ಪ್ರಭು ಮಹಾಂತ ಮಹಾಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಲಾಯನ್ಸ್ ಭವನದಲ್ಲಿ ಶನಿವಾರ ಸ್ಲಂ ಜನಾಂದೋಲನ-ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿನಿಧಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಆಧಾರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ಫಲಾನುಭವಿಗಳ ಮರುಪರಿಶೀಲನೆ ನಡೆಸುತ್ತಿರುವುದು ಬಡವರಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಸ್ಲಂ ನಿವಾಸಿಗಳ ಹಕ್ಕುಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಬಡವರ ಹೋರಾಟಗಳಿಗೆ ತಾವು ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ಸಮ್ಮೇಳನದ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ, ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಸರ್ಕಾರ ಮರೆತಿದೆ. ಸ್ಲಂ ನಿವಾಸಿಗಳಿಗೆ ಉಚಿತ ಮನೆ, ನಿವೇಶನ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರಗತಿಪರ ಚಿಂತಕ ಬಸವರಾಜ ಸೂಳಿಬಾವಿ ಮಾತನಾಡಿ, ದೇಶದಲ್ಲಿ ಸಾರ್ವಜನಿಕ ಆಸ್ತಿಗಳ ಖಾಸಗೀಕರಣ ವೇಗವಾಗಿ ನಡೆಯುತ್ತಿದ್ದು, ಬಡವರು ಇನ್ನೂ ಮನೆ ಹಾಗೂ ನಿವೇಶನಕ್ಕಾಗಿ ಹೋರಾಟ ನಡೆಸುವ ಪರಿಸ್ಥಿತಿ ಮುಂದುವರಿದಿರುವುದು ಸರ್ಕಾರಗಳ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಸಮ್ಮೇಳನಕ್ಕೂ ಮುನ್ನ ಗದಗ-ಬೆಟಗೇರಿ ನಗರಸಭೆ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೃಹತ್ ಜಾಥಾ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿದ ಜಾಥಾದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಚಂದ್ರಮ್ಮ ಅಧ್ಯಕ್ಷತೆ ವಹಿಸಿದ್ದರು. ಎಂ.ಎಸ್. ಹಡಪದ, ಬಸವರಾಜ ಪೂಜಾರ, ಪೂರ್ಣ ರವಿಶಂಕರ್, ವೆಂಕಟೇಶಯ್ಯ, ಶೇಖಣ್ಣ ಕವಳಿಕಾಯಿ, ಇಮ್ತಿಯಾಜ್ ಆರ್. ಮಾನ್ವಿ, ಅಶೋಕ ಕುಡತಿನಿ, ಜನಾರ್ಧನ ಹಳ್ಳಿಬೆಂಚಿ, ಶೋಭಾ ಕಮತರ, ರೇಣುಕಾ ಸರಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಬಡವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರಗಳು ಇಂದು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಸ್ಲಂ ಜನರ ಹಕ್ಕುಗಳಿಗೆ ಸರ್ಕಾರಗಳು ನ್ಯಾಯ ಒದಗಿಸಬೇಕು.”

– ಡಾ. ಪ್ರಭು ಮಹಾಂತ ಮಹಾಸ್ವಾಮೀಜಿ, ಬೇಲೂರು ಗುರುಬಸವೇಶ್ವರ ಮಠ

ಕ್ರೀಡಾ ಸಂಘಟಕರ ಜನ್ಮದಿನಕ್ಕೆ ಸಂಭ್ರಮದ ಸಡಗರ

0

ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾದ ಇಮಾಮಸಾಬ ಗಾಡಗೋಳಿ ಅವರ ಜನ್ಮದಿನವನ್ನು ಹುಲಕೋಟಿಯಲ್ಲಿರುವ ಅವರ ಸ್ವಗೃಹದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ವೆಂಕಪ್ಪ ಬಳ್ಳಾರಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನದ ಸಂಭ್ರಮಾಚರಣೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಇಮಾಮಸಾಬ ಗಾಡಗೋಳಿಯವರು ನೌಕರರ ಸಂಘಟನೆ ಬಲವರ್ಧನೆ, ನೌಕರರ ಹಿತಾಸಕ್ತಿಗಳ ರಕ್ಷಣೆ ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮಟ್ಟದ ಕ್ರೀಡಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ನೌಕರರ ವಲಯದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿಗಳಾದ ರಾಜು ಕಂಟಿಗೊಣ್ಣವರ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ಎಸ್.ಎಸ್. ಪಾರ್ವತಿಮಠ, ಕರೀಮಸಾಬ ಸುಣಗಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಗಾಡಗೋಳಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಿದರು.

ಕೊನೆಯಲ್ಲಿ ಇಮಾಮಸಾಬ ಗಾಡಗೋಳಿಯವರು ಶುಭಾಶಯ ಸಲ್ಲಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.

“ನೌಕರರ ಹಿತಾಸಕ್ತಿ ಹಾಗೂ ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ಇಮಾಮಸಾಬ ಗಾಡಗೋಳಿಯವರು ಸಲ್ಲಿಸಿರುವ ಸೇವೆ ಶ್ಲಾಘನೀಯ. ಅವರ ಸಾಮಾಜಿಕ ಬದ್ಧತೆ ಮತ್ತು ಸರಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ.”

– ಬಸವರಾಜ ವೆಂಕಪ್ಪ ಬಳ್ಳಾರಿ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

error: Content is protected !!