ಬೆಂಗಳೂರು: ಪಾರ್ಸೆಲ್ ನೀಡಲು ಬಂದಿದ್ದ ಡೆಲಿವರಿ ಏಜೆಂಟ್ವೊಬ್ಬ ಮನೆಗೆ ಬಲವಂತವಾಗಿ ಪ್ರವೇಶಿಸಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಸಿಲಿಕಾನ್ ಸಿಟಿಯಲ್ಲಿ ಕೇಳಿಬಂದಿದೆ.
ಘಟನೆ ಕುರಿತು ಸಂತ್ರಸ್ತ ಯುವತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಪಾರ್ಸೆಲ್ ನೀಡಲು ಬಂದಿದ್ದ ಡೆಲಿವರಿ ಬಾಯ್ ಶೌಚಾಲಯ ಬಳಸಬೇಕು ಎಂದು ಅನುಮತಿ ಕೇಳಿದ್ದಾನೆ. ಆದರೆ ಅಪರಿಚಿತರನ್ನು ಮನೆ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಯುವತಿ ನಿರಾಕರಿಸಿದ್ದರು.
ತುರ್ತು ಪರಿಸ್ಥಿತಿ ಇದ್ದರೆ ಪಕ್ಕದ ಮನೆಯವರ ಸಹಾಯ ಪಡೆಯುವಂತೆ ಯುವತಿ ಸಲಹೆ ನೀಡಿದ್ದರೂ, ಅದನ್ನು ಲೆಕ್ಕಿಸದೆ ಡೆಲಿವರಿ ಬಾಯ್ ತನ್ನ ಪಾದರಕ್ಷೆ ಬಿಚ್ಚಿ ಬಲವಂತವಾಗಿ ಮನೆ ಪ್ರವೇಶಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಶೌಚಾಲಯದಿಂದ ಹೊರಬಂದ ಬಳಿಕ ಆತ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಘಟನೆಯಿಂದ ಭಯಗೊಂಡ ಅವರು ತಕ್ಷಣ ಮೊಬೈಲ್ ಕ್ಯಾಮೆರಾ ಆನ್ ಮಾಡಿ, ಬಾಗಿಲು ತೆರೆದು ಸಹಾಯಕ್ಕಾಗಿ ಕೂಗಿದ್ದಾರೆ.
ಯುವತಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಯುವತಿಯಿಂದ ಮಾಹಿತಿ ಪಡೆದು ಆರೋಪಿತ ಡೆಲಿವರಿ ಏಜೆಂಟ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಡೆಲಿವರಿ ಬಾಯ್ನನ್ನು ಬಂಧಿಸಿದ್ದಾರೆ. ಬಂಧಿತನನ್ನು ವಿಜಯ್ ಮಲ್ಲಿಕಾರ್ಜುನ್ ಕಾಮತ್ ಎಂದು ಗುರುತಿಸಲಾಗಿದೆ.
ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಘಟನೆ ಕುರಿತು ಇ-ಕಾಮರ್ಸ್ ಸಂಸ್ಥೆ ಫ್ಲಿಪ್ಕಾರ್ಟ್ ಕೂಡ ಪ್ರತಿಕ್ರಿಯಿಸಿದ್ದು, ಸಿಬ್ಬಂದಿಯ ಇಂತಹ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಈ ಘಟನೆ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

