ಬೀದರ್: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕೆರೆ-ಕಟ್ಟೆಗಳು ಬತ್ತುತ್ತಿದ್ದು, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಈಗಾಗಲೇ ಗೋಚರಿಸುತ್ತಿದೆ.
ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಸಣ್ಣ ನೀರಾವರಿ ಇಲಾಖೆ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಒಟ್ಟು 125 ಕೆರೆಗಳಿದ್ದು, 2,958 ಎಂಸಿಎಫ್ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿವೆ. ಈ ಕೆರೆಗಳ ಅಚ್ಚುಕಟ್ಟು ಪ್ರದೇಶ ಸುಮಾರು 21 ಸಾವಿರ ಹೆಕ್ಟೇರ್ನಷ್ಟಿದೆ.
ಆದರೆ ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದಾಗಿ ಈ ಕೆರೆಗಳ ಪೈಕಿ 57 ಕೆರೆಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಇನ್ನು 60 ಕೆರೆಗಳಲ್ಲಿ ಶೇ.30ರಷ್ಟು ಮಾತ್ರ ನೀರಿನ ಸಂಗ್ರಹವಿದ್ದು, ಕೇವಲ 7 ಕೆರೆಗಳಲ್ಲಿ ಶೇ.50ರಷ್ಟು ನೀರು ತುಂಬಿದೆ ಎಂದು ಇಲಾಖೆಯ ಅಂಕಿ-ಅಂಶಗಳು ತಿಳಿಸಿವೆ.
ಗ್ರಾಮೀಣ ಭಾಗದಲ್ಲಿ ಹನಿ ನೀರಿಗೂ ಹಾಹಾಕಾರ:
ಕೆರೆಗಳು ಬತ್ತುತ್ತಿರುವ ಪರಿಣಾಮ ಗ್ರಾಮೀಣ ಭಾಗಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗುತ್ತಿದೆ. ಕೃಷಿ ಚಟುವಟಿಕೆಗಳಿಗೂ ನೀರಿನ ಕೊರತೆ ದೊಡ್ಡ ಹೊಡೆತ ನೀಡಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಕೆರೆಗಳ ನೀರಿನ ಮಟ್ಟ ಕುಸಿದಿರುವುದು ಅಂತರ್ಜಲದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಬಾವಿ ಹಾಗೂ ಕೊಳವೆಬಾವಿಗಳಲ್ಲಿನ ನೀರಿನ ಲಭ್ಯತೆ ಕಡಿಮೆಯಾಗುವ ಆತಂಕ ಸ್ಥಳೀಯರಲ್ಲಿ ಮೂಡಿದೆ.
ಶಾಶ್ವತ ಪರಿಹಾರಕ್ಕೆ ಆಗ್ರಹ:
ಕೆರೆಗಳು ಬತ್ತುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಪರಿಹಾರ ಕ್ರಮಗಳ ಬದಲಿಗೆ ಕೆರೆಗಳ ಪುನರುಜ್ಜೀವನ, ಹೂಳು ತೆರವು, ಒತ್ತುವರಿ ತೆರವು ಹಾಗೂ ನೀರು ಹರಿದುಬರುವ ಕಾಲುವೆಗಳ ದುರಸ್ತಿ ಸೇರಿದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಇದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸಬೇಕು. ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ಕೂಡಲೇ ಅಗತ್ಯ ಕ್ರಮ ಕೈಗೊಂಡು ಕೆರೆಗಳಿಗೆ ಕಾಯಕಲ್ಪ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

