Home Blog

ಕರ್ನಾಟಕದಲ್ಲಿ ಬರದ ಆತಂಕ; ಕೇಂದ್ರ ತಂಡ ಕಳುಹಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಪತ್ರ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ.

ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರದ ತಂಡ ಕಳುಹಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರವಾಗಿ ಕಡಿಮೆಯಾಗಿದೆ. ವಾಡಿಕೆ ಮಳೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡುಬಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದ 141 ತಾಲೂಕುಗಳಲ್ಲಿ ಮಳೆ ಕೊರತೆ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವೂ ಕುಂಠಿತವಾಗಿದೆ. ಈವರೆಗೆ ರಾಜ್ಯದಲ್ಲಿ ಶೇ.34ರಷ್ಟು ಮಾತ್ರ ಬಿತ್ತನೆ ನಡೆದಿದೆ.

ಇದೇ ವೇಳೆ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲೂ ನೀರಿನ ಸಂಗ್ರಹ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಕೇವಲ ಶೇ.34ರಷ್ಟು ನೀರು ಲಭ್ಯವಿದೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಬೇಕು. ಇದರಿಂದ ಬರದ ತೀವ್ರತೆಯನ್ನು ಸರಿಯಾಗಿ ಅಂದಾಜಿಸಲು ಸಾಧ್ಯವಾಗಲಿದೆ. ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ರೈತರ ಜೊತೆಗಿದೆ ಎಂಬ ಭರವಸೆಯೂ ಮೂಡಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ 10 ಕೃಷಿ ಹವಾಮಾನ ವಲಯಗಳಿವೆ. ರಾಜ್ಯದ ಸುಮಾರು ಶೇ.77ರಷ್ಟು ಪ್ರದೇಶ ಶುಷ್ಕ ಮತ್ತು ಅರೆ ಶುಷ್ಕ ಪ್ರದೇಶವಾಗಿದೆ. ಸುಮಾರು 84.79 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಕೃಷಿ ಭೂಮಿಯನ್ನು ರಾಜ್ಯ ಹೊಂದಿದ್ದು, ರಾಜಸ್ಥಾನದ ನಂತರ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

ಹೀಗಾಗಿ ರಾಜ್ಯದ ಕೃಷಿ ಚಟುವಟಿಕೆಗಳು ಹೆಚ್ಚಾಗಿ ಮುಂಗಾರು ಮಳೆಯನ್ನೇ ಅವಲಂಬಿಸಿವೆ. ಮಳೆ ಕೊರತೆಯಾದರೆ ಕೃಷಿ ಉತ್ಪಾದನೆಯ ಮೇಲೂ ನೇರ ಪರಿಣಾಮ ಬೀರುತ್ತದೆ.

ಜುಲೈ 11ರವರೆಗಿನ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ವಾಡಿಕೆಯಂತೆ 292 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಕೇವಲ 203 ಮಿ.ಮೀ. ಮಳೆಯಾಗಿದೆ. ರಾಜ್ಯದಲ್ಲಿ ಮಳೆ ಕೊರತೆ ಗಂಭೀರವಾಗುತ್ತಿರುವ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರ ಗಮನ ಸೆಳೆದಿದ್ದಾರೆ.

ಕಲಬುರ್ಗಿ ಜೈಲಿನಿಂದ ಎಸ್ಕೇಪ್ ಆಗಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್! ಇನ್ನಿಬ್ಬರಿಗಾಗಿ ಶೋಧ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ.

ಬಂಧಿತ ಕೈದಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ ಸಂತೋಷ್, ಮಸ್ತಾನ್ ಹಾಗೂ ಸಾಗರ್ ಪರಾರಿಯಾಗಿದ್ದರು. ಮೂವರ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.

ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಣೆ:

ಕಲಬುರಗಿಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಸಂತೋಷ್ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಂತೋಷ್‌ನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೂ ಗಾಯಗಳಾಗಿವೆ. ಗಾಯಾಳು ಪೊಲೀಸರು ಹಾಗೂ ಸಂತೋಷ್‌ನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಕಮಿಷನರ್ ಡಾ. ಶರಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

ಟವೆಲ್, ಹಾಸಿಗೆ ಬಳಸಿ ಜೈಲಿನಿಂದ ಪರಾರಿ:

ಸುಮಾರು 15ರಿಂದ 20 ಅಡಿ ಎತ್ತರದ ಕಾರಾಗೃಹದ ಕಾಂಪೌಂಡ್ ಗೋಡೆಯನ್ನು ಟವೆಲ್ ಮತ್ತು ಹಾಸಿಗೆ ಬಳಸಿ ಮೂವರು ಕೈದಿಗಳು ಹಾರಿ ಪರಾರಿಯಾಗಿದ್ದರು. ಬಳಿಕ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

ಇದೀಗ ಪರಾರಿಯಾಗಿದ್ದ ಮೂವರ ಪೈಕಿ ಸಂತೋಷ್ ಪೊಲೀಸರ ಬಲೆಗೆ ಬಿದ್ದಿದ್ದು, ಉಳಿದ ಕೈದಿಗಳಾದ ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

12 ವರ್ಷಗಳ ಬಳಿಕ ದ್ಯಾಮಮ್ಮ–ದುರ್ಗಮ್ಮ ಹರಿಜಾತ್ರೆ ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೆಯನ್ನು 12 ವರ್ಷಗಳ ಬಳಿಕ ಈ ಬಾರಿ ಅದ್ಧೂರಿಯಾಗಿ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲು ಭಕ್ತರು ನಿರ್ಧರಿಸಿದ್ದಾರೆ.

ನಗರದ ರಾಚೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಭಕ್ತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಗದಗ ನಗರದ 64 ವಿವಿಧ ಸಮಾಜಗಳ ಮುಖಂಡರು ಜಾತ್ರೆಯ ಯಶಸ್ವಿ ಆಯೋಜನೆ ಕುರಿತು ಚರ್ಚಿಸಿದರು.

ಜಾತ್ರೆಯು ಆಗಸ್ಟ್‌ 18ರಿಂದ 28ರವರೆಗೆ ಒಕ್ಕಲಗೇರಿ ಓಣಿಯ ದ್ಯಾಮಮ್ಮನ ಕಟ್ಟೆ ಹಾಗೂ ಜೋಡ ಮಾರುತಿ ದೇವಸ್ಥಾನದ ಎದುರಿನ ದ್ಯಾಮಮ್ಮ–ದುರ್ಗಮ್ಮ ದೇವಸ್ಥಾನದಲ್ಲಿ ನಡೆಯಲಿದೆ.

ಆಗಸ್ಟ್‌ 18ರಂದು ದೇವಿಯರ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಜಾತ್ರೆಗೆ ಚಾಲನೆ ದೊರೆಯಲಿದೆ. ಬಳಿಕ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಆಗಸ್ಟ್‌ 24ರಂದು ಮಹಾ ಅನ್ನಸಂತರ್ಪಣೆ, ಆಗಸ್ಟ್‌ 25ರಂದು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನಗರದ ವಿವಿಧ ದೇವಸ್ಥಾನಗಳಿಗೆ ಉಡಿ ತುಂಬುವ ಮತ್ತು ಕಾಯಿ ಒಡೆಯುವ ಸಂಪ್ರದಾಯಗಳು ಜರುಗಲಿವೆ.

ಆಗಸ್ಟ್‌ 26ರಂದು ದೇವಿಯರ ಮೂರ್ತಿಗಳನ್ನು ಮಂಗಳ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕಿಲ್ಲಾದ ದೇವಸ್ಥಾನಕ್ಕೆ ಕೊಂಡೊಯ್ದು ಪ್ರತಿಷ್ಠಾಪಿಸಲಾಗುವುದು. ಆಗಸ್ಟ್‌ 28ರಂದು ಮಹಾಹೋಮ, ಅನ್ನಸಂತರ್ಪಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಕೀರ್ತನಕಾರ ಕಲ್ಲಿನಾಥ ಶಾಸ್ತ್ರಿಗಳು ದೇವಿಯರ ಮಹಿಮೆ ಹಾಗೂ ಹರಿಜಾತ್ರೆಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಸಮಿತಿ ಅಧ್ಯಕ್ಷ ಕೊಟ್ರಪ್ಪ ಕಮತರ ವಹಿಸಿದ್ದರು. ವಿವಿಧ ಸಮಾಜಗಳ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು

  • ಆಗಸ್ಟ್‌ 18: ದೇವಿಯರ ಮೂರ್ತಿ ಪ್ರತಿಷ್ಠಾಪನೆ
  • ಆಗಸ್ಟ್‌ 18–25: ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು
  • ಆಗಸ್ಟ್‌ 24: ಮಹಾ ಅನ್ನಸಂತರ್ಪಣೆ
  • ಆಗಸ್ಟ್‌ 25: ಮುತೈದೆಯರಿಗೆ ಉಡಿ ತುಂಬುವ ಹಾಗೂ ಕಾಯಿ ಒಡೆಯುವ ಕಾರ್ಯಕ್ರಮ
  • ಆಗಸ್ಟ್‌ 26: ದ್ಯಾಮಮ್ಮ–ದುರ್ಗಮ್ಮ ದೇವಿಯರ ಭವ್ಯ ಮೆರವಣಿಗೆ ಮತ್ತು ಮೂರ್ತಿ ಪ್ರತಿಷ್ಠಾಪನೆ
  • ಆಗಸ್ಟ್‌ 28: ಮಹಾಹೋಮ, ಅನ್ನಸಂತರ್ಪಣೆ ಹಾಗೂ ಸಮಾರೋಪ

64 ಸಮಾಜಗಳ ಭಕ್ತರ ಸಾಥ್

ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಹರಿಜಾತ್ರೆಯನ್ನು ಯಶಸ್ವಿಗೊಳಿಸಲು ಗದಗ ನಗರದ 64 ವಿವಿಧ ಸಮಾಜಗಳ ಮುಖಂಡರು ತನು-ಮನ-ಧನದಿಂದ ಸಹಕರಿಸುವುದಾಗಿ ಸಭೆಯಲ್ಲಿ ಸಂಕಲ್ಪ ಕೈಗೊಂಡರು. ಜಾತ್ರೆಯನ್ನು ಐತಿಹಾಸಿಕವಾಗಿ ಆಚರಿಸಲು ಎಲ್ಲ ಸಮಾಜಗಳ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಲಾಯಿತು.

ರಾಜ್ಯ ಮಟ್ಟದಲ್ಲಿ ಮಿಂಚಿದ ಶಿಗ್ಲಿ ಶಾಲೆ ವಿದ್ಯಾರ್ಥಿಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡ್ಲಮಠ ಮಾಧ್ಯಮಿಕ ಶಾಲೆಯ 20 ಸ್ಕೌಟ್ಸ್ ಹಾಗೂ 6 ಗೈಡ್ಸ್ ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು.

ಶನಿವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮೆರೆದಿದ್ದು, ತರಬೇತುದಾರ ಶಿಕ್ಷಕರಾದ ಕೆ.ಆರ್. ಲಮಾಣಿ ಹಾಗೂ ಪಿ.ಸಿ. ಹಿರೇಮಠ ಅವರ ವಿಶೇಷ ತರಬೇತಿ ಈ ಯಶಸ್ಸಿಗೆ ಕಾರಣವಾಗಿದೆ.

ಗದಗ ಜಿಲ್ಲೆಯ ಪ್ರತಿನಿಧಿಯಾಗಿ ಶಾಲೆಯ ವಿದ್ಯಾರ್ಥಿ ಮಲ್ಲಿಕಾರ್ಜುನ ಕಾಳಪ್ಪನವರ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು. ತರಬೇತಿ ನೀಡಿದ ಶಿಕ್ಷಕರಾದ ಕೆ.ಆರ್. ಲಮಾಣಿ ಮತ್ತು ಪಿ.ಸಿ. ಹಿರೇಮಠ ಅವರೂ ವಿದ್ಯಾರ್ಥಿಗಳೊಂದಿಗೆ ಸಮಾರಂಭದಲ್ಲಿ ಭಾಗವಹಿಸಿ ಗೌರವ ಸ್ವೀಕರಿಸಿದರು.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಬಳಿಗಾರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ, ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಬೆಳೆ ವಿಮೆ ಗೊಂದಲಕ್ಕೆ ಬೇಸತ್ತ ರೈತರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಹೊಸ ನಿಯಮಗಳಿಂದ ರೈತರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಿ, ಬೆಳೆ ವಿಮೆ ಕಂತು ಪಾವತಿಸಲು ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲೂಕು ಸಮಗ್ರ ರೈತ ಹೋರಾಟ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿವಿಧ ಬ್ಯಾಂಕ್‌ಗಳ ಪ್ರಾದೇಶಿಕ ವ್ಯವಸ್ಥಾಪಕರೊಂದಿಗೆ ರೈತರು ಸಭೆ ನಡೆಸಿ, ಬೆಳೆ ವಿಮೆ ಸಮಸ್ಯೆ, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಮನವಿಯಲ್ಲಿ, ಕಳೆದ ಹಲವು ವರ್ಷಗಳಿಂದ ರೈತರು ಬೆಳೆ ವಿಮೆ ಕಂತು ಪಾವತಿಸುತ್ತಿದ್ದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ದಲ್ಲಾಳಿಗಳ ಹಾವಳಿಯಿಂದ ಬಹುತೇಕ ರೈತರು ವಂಚಿತರಾಗಿದ್ದು, ಕೆಲವೇ ರೈತರಿಗೆ ಅಲ್ಪ ಪ್ರಮಾಣದ ಪರಿಹಾರ ಸಿಕ್ಕಿದೆ ಎಂದು ಆರೋಪಿಸಲಾಗಿದೆ.

ಹೊಸ ನಿಯಮದಂತೆ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರು ಬೆಳೆ ಬದಲಾವಣೆ ದೃಢೀಕರಣ ಪತ್ರದೊಂದಿಗೆ ವಿಮೆ ಪಾವತಿಸಬೇಕಿದ್ದು, ಹತ್ತಿ ಹಾಗೂ ಹೆಸರು ಬೆಳೆಗಳಿಗೆ ಜುಲೈ 15 ಕೊನೆಯ ದಿನವಾಗಿರುವುದರಿಂದ ಅನೇಕ ರೈತರು ವಿಮೆ ಪಾವತಿಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಸಾಲ ಪಡೆಯದ ರೈತರಿಗೆ ಸ್ವಘೋಷಣಾ ಪತ್ರದ ಮೂಲಕ ಕರ್ನಾಟಕ ಒನ್ ಹಾಗೂ ಸಿಎಸ್‌ಸಿ ಕೇಂದ್ರಗಳಲ್ಲಿ ವಿಮೆ ಪಾವತಿಸಲು ಅವಕಾಶ ನೀಡಲಾಗಿದ್ದರೂ, ಸರ್ವರ್ ಸಮಸ್ಯೆ, ತಾಂತ್ರಿಕ ತೊಂದರೆ, ದಾಖಲೆಗಳ ಗೊಂದಲ ಹಾಗೂ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲ ಸಿಬ್ಬಂದಿ ಕೊರತೆಯಿಂದ ರೈತರು ಪರದಾಡುವಂತಾಗಿದೆ ಎಂದು ದೂರಿದರು.

ಅಲ್ಲದೆ, ಅತಿವೃಷ್ಟಿ, ಮಳೆ ಕೊರತೆ ಹಾಗೂ ರೋಗಬಾಧೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಪಾವತಿಸಲು ಅವಕಾಶ ಕಲ್ಪಿಸಬೇಕು. ವಿಮೆ ಪಾವತಿಗೆ ಇನ್ನಷ್ಟು ಕಾಲಾವಕಾಶ ನೀಡುವ ಜೊತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಸೋಮವಾರ ಬ್ಯಾಂಕ್‌ಗಳು ಹಾಗೂ ಆನ್‌ಲೈನ್ ಕೇಂದ್ರಗಳ ಮುಂದೆ ರೈತರು ದಿನವಿಡೀ ಕಾದರೂ, ಸರ್ವರ್ ಸಮಸ್ಯೆಯಿಂದ ವಿಮೆ ಪಾವತಿಸಲು ಸಾಧ್ಯವಾಗದೆ ನಿರಾಶರಾಗಿ ಹಿಂತಿರುಗಿದ ದೃಶ್ಯಗಳು ಕಂಡುಬಂದವು.

“ಬೆಳೆ ವಿಮೆ ನಿಯಮಗಳ ಗೊಂದಲ ನಿವಾರಿಸಿ, ಪಾವತಿ ಅವಧಿ ವಿಸ್ತರಿಸದಿದ್ದರೆ ಸಾವಿರಾರು ರೈತರು ವಿಮೆ ಸೌಲಭ್ಯದಿಂದ ವಂಚಿತರಾಗಲಿದ್ದಾರೆ.”

– ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷ, ಸಮಗ್ರ ರೈತ ಹೋರಾಟ ಸಂಘಟನೆಗಳ ಒಕ್ಕೂಟ

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ದ್ವಾರಕಾಮಾಯಿ ಫೌಂಡೇಶನ್ ಹಾಗೂ ಅಮೃತಾ ಟೂಲ್ಸ್ ಆ್ಯಂಡ್ ಕ್ರಾಫ್ಟ್ ಪ್ರೈವೇಟ್ ಲಿಮಿಟೆಡ್, ಹೈದರಾಬಾದ್ ಸಹಯೋಗದಲ್ಲಿ ಉಂಡೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 86 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಪುಸ್ತಕ, ಪೆನ್ ಹಾಗೂ ಪೆನ್ಸಿಲ್ ಕಿಟ್‌ಗಳನ್ನು ವಿತರಿಸಲಾಯಿತು.

ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿಗಳನ್ನು ವಿತರಿಸಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರಾದ ಖಾಜಾವಾಲಿ ಮುಲ್ಲಾ, ಗಣೇಶ ಚವಡಿ, ಬಸವರಾಜ ಕಟಗಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆ್ಯಂಗ್ಲೋ ಉರ್ದು ಶಾಲೆಯಲ್ಲಿ ಶಾಲಾ ಸಂಸತ್ ರಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪ್ರತಿಷ್ಠಿತ ಆ್ಯಂಗ್ಲೋ ಉರ್ದು ಬಾಲಕಿಯರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತನ್ನು ಚುನಾವಣೆಯ ಮೂಲಕ ರಚಿಸಲಾಗಿದೆ.

ಶಾಲಾ ಪ್ರಧಾನ ಮಂತ್ರಿಯಾಗಿ ಕುಮಾರಿ ಮೆಹಕ್ ಕಲೆಗಾರ, ವಿರೋಧ ಪಕ್ಷದ ನಾಯಕಿಯಾಗಿ ಕುಮಾರಿ ಮುಬೀನ್ ಬೇಲೇರಿ, ಸಂಸತ್ ಅಧ್ಯಕ್ಷೆಯಾಗಿ ಕುಮಾರಿ ಆಸ್ಮಾ ಡೋಣಿ, ಶಿಕ್ಷಣ ಸಚಿವೆಯಾಗಿ ಕುಮಾರಿ ರಿಫತ್ ನದಾಫ್, ಆರೋಗ್ಯ ಸಚಿವೆಯಾಗಿ ಕುಮಾರಿ ತಯ್ಯಬಾ ಕಾತರಕಿ, ಪ್ರವಾಸೋದ್ಯಮ ಸಚಿವೆಯಾಗಿ ಕುಮಾರಿ ರೆಹಾನ್ ಗಂಧದ, ಗ್ರಂಥಾಲಯ ಸಚಿವೆಯಾಗಿ ಕುಮಾರಿ ಇನ್ಷಾ ಬೇಪಾರಿ ಹಾಗೂ ಆಹಾರ ಸಚಿವೆಯಾಗಿ ಕುಮಾರಿ ಮೆಹರ್ ಬಾಗೋಡಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಶಾಲಾ ಸಂಸತ್ ಪದಾಧಿಕಾರಿಗಳನ್ನು ಮುಖ್ಯೋಪಾಧ್ಯಾಯ ಎಲ್.ಆರ್. ಇಟಗಿ, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಐದು ವರ್ಷಗಳಿಂದ ನೀರಿನ ಘಟಕ ಬಂದ್; ಗ್ರಾಮಸ್ಥರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲೂಕಿನ ಶಿವಾಜಿನಗರ (ಮಜ್ಜೂರ) ತಾಂಡಾದಲ್ಲಿ ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ವಕೀಲ ರವಿಕಾಂತ ಅಂಗಡಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ರವಿಕಾಂತ ಅಂಗಡಿ, ಸುಮಾರು 550 ಮನೆಗಳು ಹಾಗೂ 2,500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯೇ ಇಲ್ಲ. ಗ್ರಾಮಸ್ಥರು ಫ್ಲೋರೈಡ್ ಅಂಶ ಹೆಚ್ಚಿರುವ ಬೋರ್‌ವೆಲ್ ನೀರನ್ನೇ ಅವಲಂಬಿಸಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಗ್ರಾಮದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳು ಐದು ವರ್ಷಗಳಿಂದ ಸ್ಥಗಿತಗೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ನೀರು ಶುದ್ಧೀಕರಣ ಘಟಕಗಳನ್ನು ತಕ್ಷಣ ದುರಸ್ತಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಕಾನೂನುಬದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಜಿಲ್ಲೆಯ ರೈತರು ಮಳೆ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ ಎರಡು ದಿನಗಳೊಳಗೆ ಶುದ್ಧ ನೀರಿನ ಘಟಕಗಳನ್ನು ದುರಸ್ತಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಬರಗಾಲ ಘೋಷಣೆ ಕುರಿತು ಸರ್ಕಾರದ ಗಮನಕ್ಕೆ ವಿಷಯ ತರುವುದಾಗಿ ತಿಳಿಸಿದರು. ಅಲ್ಲದೆ, ಬೆಳೆ ಸಾಲ ಪಡೆದ ರೈತರು ಸಮೀಪದ ಸಿಎಸ್‌ಸಿ ಕೇಂದ್ರಗಳಿಗೆ ತೆರಳಿ ಜುಲೈ 16ರೊಳಗೆ ಬೆಳೆ ವಿಮೆ ಪಾವತಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಣೇಶ ಲಮಾಣಿ, ಭಾಪೂಜಿ ಲಮಾಣಿ, ಪ್ರಕಾಶ ಲಮಾಣಿ, ತುಕಾರಾಮ ಲಮಾಣಿ, ಕೇಶಪ್ಪ ಲಮಾಣಿ, ಅರುಣ ಲಮಾಣಿ, ಜಗದೀಶ ಲಮಾಣಿ, ರವಿ ಲಮಾಣಿ, ರಮೇಶ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ಶಿವಾಜಿನಗರ (ಮಜ್ಜೂರ) ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.

“ಐದು ವರ್ಷಗಳಿಂದ ಶುದ್ಧ ನೀರಿನ ಘಟಕಗಳು ಬಂದ್ ಆಗಿರುವುದು ಗ್ರಾಮಸ್ಥರ ದುರ್ದೈವ. ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.”

– ರಮೇಶ ಮಾನಪ್ಪ ಲಮಾಣಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ

ಬರದ ಬೇಗೆಯಲ್ಲೂ ಮಣ್ಣೆತ್ತಿನ ಹಬ್ಬದ ಸಡಗರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬರದ ಛಾಯೆ ಆವರಿಸಿದ್ದರೂ ರೈತ ಸಮುದಾಯದ ಸಾಂಪ್ರದಾಯಿಕ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬವನ್ನು ಪಟ್ಟಣದಲ್ಲಿ ಬುಧವಾರ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಪೇಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಮಣ್ಣಿನ ಎತ್ತುಗಳ ಮೂರ್ತಿಗಳ ಖರೀದಿ ಭರಾಟೆ ಜೋರಾಗಿತ್ತು.

ಬೆಳಗ್ಗೆಯಿಂದಲೇ ಕುಟುಂಬ ಸಮೇತರಾಗಿ ಆಗಮಿಸಿದ ಸಾರ್ವಜನಿಕರು ವಿವಿಧ ಗಾತ್ರ ಹಾಗೂ ಬಣ್ಣಬಣ್ಣದ ಮಣ್ಣೆತ್ತಿನ ಮೂರ್ತಿಗಳನ್ನು ಖರೀದಿಸಿದರು. ಲಕ್ಷ್ಮೇಶ್ವರದ ಕುಂಬಾರರ ಕುಟುಂಬಗಳು ತಯಾರಿಸಿದ ಮಣ್ಣಿನ ಎತ್ತುಗಳಿಗೆ ರಾಜ್ಯದ ವಿವಿಧ ಭಾಗಗಳಿಂದಲೂ ಬೇಡಿಕೆ ಇರುವುದರಿಂದ ಹಬ್ಬಕ್ಕೂ ಮುನ್ನವೇ ಹೆಚ್ಚಿನ ಪ್ರಮಾಣದಲ್ಲಿ ಸಗಟು ಮಾರಾಟ ನಡೆದಿತ್ತು.

ಈ ವರ್ಷ ಮಣ್ಣೆತ್ತಿನ ಮೂರ್ತಿಗಳ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ. ಹಿಂದೆ ₹20ಕ್ಕೆ ಸಿಗುತ್ತಿದ್ದ ಸಣ್ಣ ಮೂರ್ತಿಗಳು ಈಗ ₹50ಕ್ಕಿಂತ ಹೆಚ್ಚು ಬೆಲೆಗೆ ಮಾರಾಟವಾದವು. ₹50ರಿಂದ ₹1,000ರವರೆಗೆ ವಿವಿಧ ಮಾದರಿಯ ಮೂರ್ತಿಗಳು ಲಭ್ಯವಿದ್ದರೆ, ವಿಶೇಷ ಅಲಂಕಾರದ ದೊಡ್ಡ ಮೂರ್ತಿಗಳು ₹2,000ರವರೆಗೆ ಮಾರಾಟವಾದವು.

ವಿಶೇಷವಾಗಿ ರಾಸಾಯನಿಕ ಬಣ್ಣಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣಗಳಿಂದ ತಯಾರಿಸಿದ ಮಣ್ಣಿನ ಎತ್ತುಗಳಿಗೆ ಈ ಬಾರಿ ಹೆಚ್ಚು ಬೇಡಿಕೆ ಕಂಡುಬಂದಿದ್ದು, ಇಷ್ಟದ ಮೂರ್ತಿಗಳನ್ನು ಖರೀದಿಸಲು ಗ್ರಾಹಕರ ನಡುವೆ ಪೈಪೋಟಿಯೂ ಕಂಡುಬಂತು.

ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ರೈತರು ಮಾತ್ರವಲ್ಲದೆ ಪಟ್ಟಣದ ಅನೇಕ ಕುಟುಂಬಗಳು ಮಣ್ಣಿನ ಎತ್ತುಗಳನ್ನು ಮನೆಗೆ ಕೊಂಡೊಯ್ದು ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯಬದ್ಧವಾಗಿ ಹಬ್ಬ ಆಚರಿಸಿದರು. ಕೃಷಿ ಬದುಕಿನ ಅವಿಭಾಜ್ಯ ಅಂಗವಾದ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಸಂಸ್ಕೃತಿ ಇಂದಿಗೂ ಜೀವಂತವಾಗಿರುವುದು ಹಬ್ಬದ ವಿಶೇಷತೆಯಾಗಿದೆ.

ಬರ ಘೋಷಿಸಿ, ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರಧನ ಬಿಡುಗಡೆ ಮಾಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಕರಮಡಿ ಹಾಗೂ ಜಿಲ್ಲಾ ಗೌರವಾಧ್ಯಕ್ಷ ಟಾಕಪ್ಪ ಸಾತಪೂತೆ ಆಗ್ರಹಿಸಿದರು.

ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಬಳಿಕ ಒಂದೂವರೆ ತಿಂಗಳಿನಿಂದ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗಿ ನಿಂತಿದ್ದು, ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಹೆಸರು, ಗೋವಿನ ಜೋಳ, ಶೇಂಗಾ, ಈರುಳ್ಳಿ, ಜೋಳ, ಎಳ್ಳು ಹಾಗೂ ಉದ್ದು ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಆದ್ದರಿಂದ ತಕ್ಷಣ ಬರ ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಬೆಳೆಗೂ ಪರಿಹಾರ ಘೋಷಿಸಬೇಕು. ಕೆಲವೇ ಬೆಳೆಗಳಿಗೆ ಪರಿಹಾರ ನೀಡುವುದರಿಂದ ರೈತರ ಸಂಕಷ್ಟ ನಿವಾರಣೆಯಾಗುವುದಿಲ್ಲ ಎಂದು ಹೇಳಿದರು.

ಬೆಳೆ ಸಮೀಕ್ಷೆ ನಡೆಸುತ್ತಿರುವ ಪಿಆರ್‌ಒಗಳು ಸಮರ್ಪಕವಾಗಿ ಹೊಲಗಳಿಗೆ ಭೇಟಿ ನೀಡದೆ ಮನಬಂದಂತೆ ಮಾಹಿತಿ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಹಶೀಲ್ದಾರರು ಈ ಕುರಿತು ನಿಗಾ ವಹಿಸಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷದ ಬೆಳೆ ವಿಮೆ ಹಣ ಹಾಗೂ ಮೆಣಸಿನಕಾಯಿ ಬೆಳೆ ಮಧ್ಯಂತರ ಪರಿಹಾರ ಇನ್ನೂ ರೈತರಿಗೆ ದೊರೆತಿಲ್ಲ. ಬ್ಯಾಂಕುಗಳು ಸಾಲ ಮರುಪಾವತಿಗೆ ರೈತರ ಮೇಲೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು. ಒನ್ ಟೈಮ್ ಸೆಟ್ಲ್‌ಮೆಂಟ್ (ಒಟಿಎಸ್) ಮಾಡಿಕೊಂಡ ರೈತರಿಗೆ ಅದೇ ಬ್ಯಾಂಕುಗಳಲ್ಲಿ ಮತ್ತೆ ಸಾಲ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ರೈತರ ಜಮೀನುಗಳಿಗೆ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.

ಈ ವರ್ಷದ ಬೆಳೆ ಹಾನಿಯನ್ನು ಪರಿಗಣಿಸಿ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿದರು.

ಬಳಿಕ ಸಂಘದ ಪದಾಧಿಕಾರಿಗಳು ತಹಶೀಲ್ದಾರ ಧನಂಜಯ ಎಂ. ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹಿರೇಮಠ, ಶಿರಹಟ್ಟಿ ತಾಲೂಕು ಅಧ್ಯಕ್ಷ ವೀರನಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಜಿಲ್ಲೆಯಲ್ಲಿ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿವೆ. ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು.”

– ಯಲ್ಲಪ್ಪ ಕರಮಡಿ, ಜಿಲ್ಲಾಧ್ಯಕ್ಷ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ