Home Blog

ಮೂಲಸೌಕರ್ಯಕ್ಕಾಗಿ ಪುರಸಭೆಗೆ ಮುತ್ತಿಗೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎರಡನೇ ವಾರ್ಡ್ ವ್ಯಾಪ್ತಿಯ ಕರೇಗೋರಿ ಆಶ್ರಯ ನಿವೇಶನ ಪ್ಲಾಟ್‌ನ ನಿವಾಸಿಗಳು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪುರಸಭೆಗೆ ಮುತ್ತಿಗೆ ಹಾಕಿ ಸುಮಾರು ಮೂರು ಗಂಟೆಗಳ ಕಾಲ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಚೇರಿ ಆರಂಭವಾಗುವ ವೇಳೆಯಲ್ಲೇ ಪುರಸಭೆಗೆ ದೌಡಾಯಿಸಿದ ನಿವಾಸಿಗಳು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಮಗ್ರ ರೈತಪರ ಸಂಘಟನೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ, ಎರಡನೇ ವಾರ್ಡ್‌ನ ಕರೇಗೋರಿ ಆಶ್ರಯ ನಿವೇಶನ ಪ್ಲಾಟ್ ನಿರ್ಮಾಣಗೊಂಡು ಸುಮಾರು ೩೦ ವರ್ಷಗಳಾದರೂ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಬಾರಿಯೂ ನಿವಾಸಿಗಳು ಪ್ರತಿಭಟನೆ ನಡೆಸುವುದು, ಅಧಿಕಾರಿಗಳು ಭರವಸೆ ನೀಡಿ ಅವರನ್ನು ಸಮಾಧಾನಪಡಿಸುವುದು ಮಾಮೂಲಾಗಿದ್ದು, ಈ ಬಾರಿ ಸಮಸ್ಯೆಗಳಿಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಪ್ಲಾಟ್‌ನಲ್ಲಿ ಗಟಾರ್, ರಸ್ತೆ ಹಾಗೂ ಶೌಚಾಲಯದಂತಹ ಮೂಲಸೌಕರ್ಯಗಳ ಕೊರತೆಯಿದೆ. ರಸ್ತೆಗಳಲ್ಲಿ ತೆಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ನಿಂತ ನೀರಿನಿಂದ ದುರ್ವಾಸನೆ ಉಂಟಾಗುತ್ತಿದೆ. ಬೀದಿ ದೀಪಗಳಿಲ್ಲದೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು, ತಿಂಗಳುಗಳಿಂದ ಸಮರ್ಪಕ ಕುಡಿಯುವ ನೀರಿನ ಪೂರೈಕೆಯೂ ಆಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಿವಾಸಿಗಳಾದ ಮಂಜುನಾಥ ಗೊರವರ, ಸಚಿನ್ ಹೆಬ್ಬಾಳ ಹಾಗೂ ಮಂಜುನಾಥ ಸಂಶಿ ಮಾತನಾಡಿ, ಕಳೆದ ೧೦ ವರ್ಷಗಳಿಂದ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಭಾಗದ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ಈ ಕುರಿತು ಲೋಕಾಯುಕ್ತರಿಗೂ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಸಿಬ್ಬಂದಿಯೊಂದಿಗೆ ಕರೇಗೋರಿ ಪ್ಲಾಟ್‌ಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರ, ತಾತ್ಕಾಲಿಕ ಗಟಾರ್ ನಿರ್ಮಾಣ ಹಾಗೂ ರಸ್ತೆಗೆ ಮೊರಂ ಹಾಕಿ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ತಕ್ಷಣವೇ ಪರಿಹಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ನಾಗರಾಜ ಚಿಂಚಲಿ, ಅಮರಪ್ಪ ಅಮರಶೆಟ್ಟಿ, ಆನಂದ ಅಮರಶೆಟ್ಟಿ, ರಾಜಣ್ಣ ಕಣವಿ, ಈಶ್ವರಪ್ಪ ಅಮರಶೆಟ್ಟಿ, ಮಹಾಂತೇಶ ಗೊರವರ, ಚಂದ್ರು ಮುಳಗುಂದ, ಬಸವರಾಜ ಹುಬ್ಬಳ್ಳಿ, ಶಿವಪ್ಪ ಕೋಣಿ, ಸಚಿನ್ ಮರೀಗೌಡ್ರ, ಸಂತೋಷ ನುಚ್ಚುಂಬಲಿ, ವೆಂಕಟೇಶ ಮಕರಳ್ಳಿ, ಬಸವರಾಜ ನಾವಿ, ಮಂಜುನಾಥ ದೊಡ್ಡಮನಿ, ಭೀಮಪ್ಪ ಅರಳಿಕಟ್ಟಿ, ಮಂಜುನಾಥ ಉದ್ದಾರ, ದುಂಡಪ್ಪ ಹುಗ್ಗಿ, ಮಂಜುನಾಥ ಕೊಡಳ್ಳಿ, ಬಸಣ್ಣ ಬಳ್ಳೋಳ್ಳಿ, ಕೊಟ್ರಮ್ಮ ಅಗಸಿಬಾಗಿಲ ಸೇರಿದಂತೆ ಪ್ಲಾಟ್‌ನ ನಿವಾಸಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಂ.ಎಸ್. ಕಾಳೆ ಭಾಜನ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಬಟ್ಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಎಸ್. ಕಾಳೆ ಅವರು ಗದಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸದ್ಯ ಬಟ್ಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಕಾಳೆ ಅವರು ಮಕ್ಕಳಿಗೆ ಕ್ರೀಡೆಯ ಮಹತ್ವದ ಕುರಿತು ನಿರಂತರವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ತಮ್ಮ ಸೇವಾವಧಿಯಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಸಿದ್ಧಪಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ತಾಲೂಕು, ಜಿಲ್ಲಾ ಹಾಗೂ ವಲಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ನಿರ್ಣಾಯಕರಾಗಿಯೂ ಕಾರ್ಯನಿರ್ವಹಿಸಿರುವುದು ಅವರ ಕ್ರೀಡಾ ಕ್ಷೇತ್ರದ ಸೇವೆಗೆ ಸಾಕ್ಷಿಯಾಗಿದೆ. ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಎಂ.ಎಸ್. ಕಾಳೆ ಅವರು ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಬಟ್ಟೂರು ಗ್ರಾಮದ ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮಸ್ಥರು ಹಾಗೂ ಶಿಕ್ಷಕ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಲೂಕು ಆಡಳಿತದಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ತಹಸೀಲ್ದಾರ್ ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಕೃಷ್ಣ ಜನ್ಮಾಷ್ಟಮಿಯು ದೇಶಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.

ಗ್ರೇಡ್-೨ ತಹಸೀಲ್ದಾರ್ ಎ.ಎ. ಮುಳಗುಂದಮಠ, ಉಪನೋಂದಣಾಧಿಕಾರಿ ಶರಣಪ್ಪ ಪವಾರ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಶಿರಸ್ತೇದಾರ ಎಸ್.ಎಸ್. ಅಸ್ಕಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಕೃಷ್ಣ-ರಾಧೆಯ ವೇಷದಲ್ಲಿ ಪುಟಾಣಿಗಳ ನೃತ್ಯ: ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಜನ್ಮಾಷ್ಟಮಿ ಸಂಭ್ರಮ

0

ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿಶೇಷ ನೃತ್ಯ ಕಾರ್ಯಕ್ರಮ ನಡೆಯಿತು. ಕೃಷ್ಣನ ವೇಷದಲ್ಲಿ ಅಮರ್ಥ್ಯ ಹುಣಸಿಮರದ ಹಾಗೂ ರಾಧೆಯ ವೇಷದಲ್ಲಿ ಶ್ರೇಯಾ ಕಡ್ಲಿಮಟ್ಟಿ ಆಕರ್ಷಕವಾಗಿ ಕುಣಿದು ಎಲ್ಲರ ಗಮನ ಸೆಳೆದರು. ಪುಟಾಣಿಗಳ ಸಂಭ್ರಮದ ನೃತ್ಯ ಕಾರ್ಯಕ್ರಮಕ್ಕೆ ಪಾಲಕರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷ್ಣ-ರಾಧೆಯ ವೇಷಭೂಷಣದಲ್ಲಿ ಮಕ್ಕಳು ಸಂಭ್ರಮಿಸಿದ್ದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಎಂ.ಎಸ್. ಹಿರೇಮಠ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಲಕ್ಷ್ಮೇಶ್ವರ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಎಸ್. ಹಿರೇಮಠ ಆಯ್ಕೆಯಾಗಿದ್ದಾರೆ.

ಹಿರೇಮಠ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಎಂ.ಎಸ್. ಹಿರೇಮಠ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕಾನ್‌ಸ್ಟೇಬಲ್ ಪರೀಕ್ಷೆಗೆ ಪ್ರತಿಬಂಧಕಾಜ್ಞೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೬ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ (ಸಿಎಆರ್/ಡಿಎಆರ್) ನೇಮಕಾತಿ ಪರೀಕ್ಷೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ನಗರದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷೆಯಲ್ಲಿ ನಕಲು, ನಕಲಿ ಅಭ್ಯರ್ಥಿಗಳ ಹಾಜರಾತಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–೨೦೨೩ರ ಕಲಂ ೧೬೩ರಡಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.

ನಗರದ ಹೆಚ್.ಸಿ.ಇ.ಎಸ್. ಪದವಿಪೂರ್ವ ಕಾಲೇಜು, ಜಿಲ್ಲಾ ಕ್ರೀಡಾಂಗಣದ ಹತ್ತಿರ; ಮನೋರಮಾ ಪದವಿಪೂರ್ವ ಕಾಲೇಜು; ಕೆ.ಎಲ್.ಇ. ಸೊಸೈಟಿಯ ಜಗದ್ಗುರು ತೋಂಟದಾರ್ಯ ಪದವಿಪೂರ್ವ ಕಾಲೇಜು; ಸನ್ಮಾರ್ಗ ಪದವಿಪೂರ್ವ ಕಾಲೇಜು, ಮುಂಡರಗಿ ರಸ್ತೆ; ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಮುಂಡರಗಿ ರಸ್ತೆ; ತೋಂಟದ ಸಿದ್ದೇಶ್ವರ ಪದವಿಪೂರ್ವ ಕಾಲೇಜು, ಭೂಮರಡ್ಡಿ ವೃತ್ತ; ಸರ್ಕಾರಿ ಪದವಿಪೂರ್ವ ಕಾಲೇಜು, ಮುಳಗುಂದ ರಸ್ತೆ ಹಾಗೂ ಕರ್ನಾಟಕ ಪದವಿಪೂರ್ವ ಕಾಲೇಜು, ಮಲ್ಲಸಮುದ್ರ ಅಂಜುಮನ್ ಕಾಲೇಜು ಕ್ಯಾಂಪಸ್‌ನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಬುಕ್‌ಸ್ಟಾಲ್‌ಗಳು ಹಾಗೂ ಫೋಟೋಕಾಪಿ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.

ಅಭ್ಯರ್ಥಿಗಳು ಹಾಗೂ ಅನಧಿಕೃತ ವ್ಯಕ್ತಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ, ಕ್ಯಾಮೆರಾ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಡ್ರೋನ್ ಅಥವಾ ಯಾವುದೇ ವೈಮಾನಿಕ ಚಿತ್ರೀಕರಣ ಸಾಧನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಲೌಡ್‌ಸ್ಪೀಕರ್ ಬಳಕೆ, ಪ್ರತಿಭಟನೆ, ಮೆರವಣಿಗೆ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ಸಭೆ ನಡೆಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಪರೀಕ್ಷೆಯ ಗೌಪ್ಯತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಾರಿಗೊಳಿಸಿರುವ ಈ ಪ್ರತಿಬಂಧಕಾಜ್ಞೆಯು ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಸ್ವಾವಲಂಬನೆಗೆ ಮಾಸಿಕ ಸಂತೆ ಆಸರೆ: ಗವಿಸಿದ್ದೇಶ್ವರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾಸಿಕ ಸಂತೆ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.

ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಆಯೋಜಿಸಿದ್ದ ‘ಮಾಸಿಕ ಸಂತೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಹಾಗೂ ವಿವಿಧ ಸೌಲಭ್ಯಗಳನ್ನು ಪಡೆದಿರುವ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯಂತಹ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮಹಿಳೆಯರು ತಯಾರಿಸುವ ಗುಣಮಟ್ಟದ ಉತ್ಪನ್ನಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಉತ್ತಮ ಮಾರುಕಟ್ಟೆ ದೊರಕಿಸುವುದು ಅಗತ್ಯವಾಗಿದೆ. ಇಂತಹ ಸಂತೆಯ ಮೂಲಕ ಉತ್ಪಾದಕರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಸಾಧ್ಯವಾಗಲಿದ್ದು, ಮಹಿಳೆಯರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳ ಅವಲಂಬನೆಯಿಲ್ಲದೆ ನೇರವಾಗಿ ಮಾರಾಟ ಮಾಡಲು ಅವಕಾಶ ದೊರೆಯಲಿದೆ ಎಂದರು.

ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಸೃಷ್ಟಿಸಿ ಅವರ ಆದಾಯ ಹೆಚ್ಚಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಚಟುವಟಿಕೆಗಳಿಗೆ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮಾಸಿಕ ಸಂತೆಯಲ್ಲಿ ಭಾಗವಹಿಸಿ, ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಸಾಂಪ್ರದಾಯಿಕ ಖಾದ್ಯಗಳು, ಕರಕುಶಲ ವಸ್ತುಗಳು ಸೇರಿದಂತೆ ಹಲವು ಉತ್ಪನ್ನಗಳು ಗ್ರಾಹಕರ ಗಮನ ಸೆಳೆದವು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ, ಒಕ್ಕೂಟದ ಪದಾಧಿಕಾರಿಗಳು, ಗ್ರಾಮದ ಗಣ್ಯರು, ತಾಲೂಕಿನ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು, ಸಂಜೀವಿನಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ 18 ಶಿಕ್ಷಕರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು 18 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಬಂದಿದ್ದ ಒಟ್ಟು 32 ಪ್ರಸ್ತಾವನೆಗಳನ್ನು ಪರಿಶೀಲಿಸಿದ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಶಿಕ್ಷಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩ರಂದು ಜಿಲ್ಲಾ ಆಯ್ಕೆ ಸಮಿತಿ ಸಭೆ ನಡೆಯಿತು. ವಿವಿಧ ತಾಲೂಕುಗಳಿಂದ ಜಿಲ್ಲಾ ಹಂತಕ್ಕೆ ಸ್ವೀಕೃತವಾಗಿದ್ದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಬಳಿಕ, ಗದಗ ಗ್ರಾಮೀಣ, ಗದಗ ನಗರ, ಮುಂಡರಗಿ, ನರಗುಂದ, ರೋಣ ಹಾಗೂ ಶಿರಹಟ್ಟಿ ತಾಲೂಕುಗಳ ಶಿಕ್ಷಕರನ್ನು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಿ ತೀರ್ಮಾನಿಸಲಾಯಿತು.

ಸೆಪ್ಟೆಂಬರ್ 5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಆಯ್ಕೆಯಾದವರಲ್ಲಿ ಮುಖ್ಯೋಪಾಧ್ಯಾಯರು, ಪ್ರಭಾರಿ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಸಹ ಶಿಕ್ಷಕಿಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಚಿತ್ರಕಲಾ ಶಿಕ್ಷಕರು ಸೇರಿದ್ದಾರೆ.

ಗದಗ ಗ್ರಾಮೀಣ ತಾಲೂಕು

ಕಣವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆಯ ಸಹ ಶಿಕ್ಷಕಿ ಮಾಸಾಬಿ ಗುಡುಸಾಬ ಮಿರ್ಜಿ, ಹಿರೇಹಂದಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಭೀಮರೆಡ್ಡಿ ಹೇಮರೆಡ್ಡಿ ಕಾಲವಾಡ ಹಾಗೂ ಯಲಿಶಿರೂರ ಗ್ರಾಮದ ಶ್ರೀಮತಿ ದಂಡವ್ವ ನಾಗಪ್ಪ ಯಲಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಫಕ್ಕೀರಪ್ಪ ಜೋಗಿನ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗದಗ ನಗರ ತಾಲೂಕು

ಗದಗ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ. 11ರ ಸಹ ಶಿಕ್ಷಕಿ ಬಿ.ವಿ. ಕುಲಕರ್ಣಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 04ರ ಸಹ ಶಿಕ್ಷಕಿ ನಸೀಮಾ ಹುಸೇನಸಾಬ ಜಕ್ಕಲಿ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ಎಂ.ಎಂ. ಮಕಾನದಾರ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮುಂಡರಗಿ ತಾಲೂಕು

ಮುಂಡರಗಿ ಪಟ್ಟಣದ ಹೆಸರೂರ ರಸ್ತೆಯಲ್ಲಿರುವ ಡಾ. ಬಸವರಾಜ ಶಿವಪ್ಪ ಮೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಸವರಾಜ ರಾಮಪ್ಪ ಹೆಬ್ಬಳಿ, ಮುಕ್ತುಂಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಕ್ಕಮಹಾದೇವಿ ಆರ್. ಕೊಟ್ಟೂರಶೆಟ್ಟಿ ಹಾಗೂ ಡೋಣಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಎ.ವಿ. ಶಿವನಗೌಡರ ಅವರು ಆಯ್ಕೆಯಾಗಿದ್ದಾರೆ.

ನರಗುಂದ ತಾಲೂಕು

ಜಗಾಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಪ್ರಧಾನ ಗುರು ಎಂ.ಆರ್. ಬಡಿಗೇರ, ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಬಿ.ಬಿ. ಮತ್ತಿಕಟ್ಟಿ ಹಾಗೂ ನರಗುಂದ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಬಿ.ಕೆ. ವಗ್ಗರ್ ಅವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರೋಣ ತಾಲೂಕು

ಹುಲ್ಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ ಎಚ್. ಕಡಿವಾಲ, ರೋಣ ಪಟ್ಟಣದ ವಿದ್ಯಾಚೇತನ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಹಾಂತೇಶ ಶ್ರೀಮಂತ ಹೊಸಮನಿ ಹಾಗೂ ಕೊತಬಾಳ ಗ್ರಾಮದ ಶ್ರೀ ಗುರು ಅಡವಿಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯ ಸಹ ಶಿಕ್ಷಕ ಎಸ್.ವಿ. ಡಣಾಪೂರ ಅವರು ಆಯ್ಕೆಯಾಗಿದ್ದಾರೆ.

ಶಿರಹಟ್ಟಿ ತಾಲೂಕು

ರಣತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎಂ. ಗಂಗಮ್ಮ, ಬಟ್ಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್. ಕಾಳೆ ಹಾಗೂ ಮಜ್ಜೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ.)ಯ ಪ್ರಭಾರಿ ಮುಖ್ಯೋಪಾಧ್ಯಾಯ ಬಸಪ್ಪ ತೆಲಸಂಗ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆ ಹಾಗೂ ಶಾಲೆಗಳ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಒಟ್ಟು 32 ಪ್ರಸ್ತಾವನೆಗಳ ಪೈಕಿ 18 ಶಿಕ್ಷಕರನ್ನು ಜಿಲ್ಲಾ ಆಯ್ಕೆ ಸಮಿತಿಯ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿ ತೀರ್ಮಾನಿಸಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನೀಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್‌ಕೆಜಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಎಲ್ಲರ ಗಮನ ಸೆಳೆದರು. ಬಣ್ಣಬಣ್ಣದ ವೇಷಭೂಷಣಗಳಲ್ಲಿ ಕಂಗೊಳಿಸಿದ ಪುಟಾಣಿಗಳ ಸಂಭ್ರಮ ಶಾಲಾ ಆವರಣದಲ್ಲಿ ವಿಶೇಷ ಆಕರ್ಷಣೆಯಾಗಿತ್ತು.

ಗೀತೆ–ಕಾಯಕ ತತ್ವವೇ ಬಲಿಷ್ಠ ರಾಷ್ಟ್ರದ ಅಡಿಗಲ್ಲು: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀಕೃಷ್ಣ ಪರಮಾತ್ಮನ ಭಗವದ್ಗೀತೆಯ ಸಂದೇಶಗಳು ಹಾಗೂ ಜಗಜ್ಯೋತಿ ಬಸವೇಶ್ವರರ ‘ಕಾಯಕವೇ ಕೈಲಾಸ’ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮೃದ್ಧ, ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಭಗವಾನ್ ಶ್ರೀಕೃಷ್ಣ ಜಯಂತಿ–೨೦೨೬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ‘ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ’ ಎಂಬ ಸಂದೇಶದ ಮೂಲಕ ಕರ್ತವ್ಯಕ್ಕೆ ಅತ್ಯುನ್ನತ ಸ್ಥಾನ ನೀಡಿದ್ದಾನೆ. ಪ್ರತಿಫಲದ ನಿರೀಕ್ಷೆಯಿಲ್ಲದೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಬದುಕಿನಲ್ಲಿ ಎಷ್ಟೇ ಸಂಕಷ್ಟಗಳು ಎದುರಾದರೂ ಧೈರ್ಯ ಕಳೆದುಕೊಳ್ಳದೆ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು.

ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವವೂ ಪ್ರಾಮಾಣಿಕ ಕಾಯಕದ ಮಹತ್ವವನ್ನು ಸಾರುತ್ತದೆ. ಈ ಇಬ್ಬರು ಮಹನೀಯರ ಜೀವನ ಸಂದೇಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶ್ರೀಕೃಷ್ಣನ ಆರಾಧಕರು ಬದುಕಿನಲ್ಲಿ ಕೆಲವು ಪ್ರಮುಖ ನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಸಂಕನೂರ, ಜೀವಿಗಳ ಮೇಲೆ ಕರುಣೆ ಹಾಗೂ ದಯೆ ಹೊಂದಬೇಕು, ಮದ್ಯಪಾನ ಸೇರಿದಂತೆ ದುಶ್ಚಟಗಳಿಂದ ದೂರವಿರಬೇಕು, ನೈತಿಕ ಮೌಲ್ಯಗಳನ್ನು ಪಾಲಿಸಬೇಕು ಹಾಗೂ ಜೂಜಾಟ ಮತ್ತು ಬೆಟ್ಟಿಂಗ್‌ನಂತಹ ಚಟಗಳಿಗೆ ಬಲಿಯಾಗಬಾರದು ಎಂದರು.

ದುರಾಸೆಗೆ ಒಳಗಾಗದೆ ಸತ್ಯದ ಹಾದಿಯಲ್ಲಿ ಸಾಗಿದರೆ ಮನಸ್ಸಿನ ಶಾಂತಿ ಮತ್ತು ಉತ್ತಮ ಬದುಕು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮಾಜಗಳು ಮುಂಚೂಣಿಗೆ ಬರಬೇಕಾದರೆ ಜ್ಞಾನ ಸಂಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜ್ಞಾನವೇ ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಧರ್ಮದ ಹಾದಿಯಲ್ಲಿ ಸತ್ಯ, ಪ್ರಾಮಾಣಿಕತೆ ಹಾಗೂ ಕಾಯಕದೊಂದಿಗೆ ಮುನ್ನಡೆದರೆ ಯಶಸ್ಸು ಖಚಿತ ಎಂದು ಸಂಕನೂರ ಪ್ರತಿಪಾದಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಶ್ರೀಕೃಷ್ಣನು ತನ್ನ ಜೀವನದಲ್ಲಿ ಯಾವುದೇ ಕಾರ್ಯವನ್ನು ಸ್ವಾರ್ಥಕ್ಕಾಗಿ ಮಾಡಲಿಲ್ಲ. ಆತನ ಪ್ರತಿಯೊಂದು ಹೆಜ್ಜೆಯೂ ಸಮಾಜದ ಹಿತ ಮತ್ತು ಧರ್ಮ ಸಂಸ್ಥಾಪನೆಗಾಗಿ ಇತ್ತು ಎಂದು ಹೇಳಿದರು.

ಮಹಾಭಾರತದ ವಿವಿಧ ಪ್ರಸಂಗಗಳಲ್ಲಿ ಶ್ರೀಕೃಷ್ಣ ತೆಗೆದುಕೊಂಡ ನಿರ್ಧಾರಗಳು ಧರ್ಮದ ಗೆಲುವಿಗಾಗಿ ರೂಪಿಸಿದ ವಿಶಾಲ ಯೋಜನೆಯ ಭಾಗವಾಗಿದ್ದವು. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು. ತಮಗೆ ತಪ್ಪು ಎಂದು ಅನಿಸುವ ಕೆಲಸವನ್ನು ಮಾಡದಿರುವುದೇ ನಿಜವಾದ ಕರ್ತವ್ಯ ಎಂದು ತಿಳಿಸಿದರು.

ಯಾವುದೇ ಕೆಲಸ ಕೈಗೊಳ್ಳುವ ಮುನ್ನ ಅದರ ಸಾಧಕ–ಬಾಧಕಗಳನ್ನು ಸರಿಯಾಗಿ ವಿಶ್ಲೇಷಿಸಿ ಮುನ್ನಡೆದರೆ ತಪ್ಪುಗಳನ್ನು ಕಡಿಮೆ ಮಾಡಬಹುದು. ಸದಾ ಧನಾತ್ಮಕ ಮನೋಭಾವನೆಯೊಂದಿಗೆ ಸಮಾಜದ ಒಳಿತಿಗಾಗಿ ಶ್ರಮಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಘಟಕ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ ಅವರು ಶ್ರೀಕೃಷ್ಣನ ಜನನ ಹಾಗೂ ಬಾಲಲೀಲೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ದೇವಕಿ ಮತ್ತು ವಸುದೇವರ ಅಷ್ಟಮ ಗರ್ಭದಲ್ಲಿ ಶ್ರೀಕೃಷ್ಣ ಜನಿಸಿದ ಪ್ರಸಂಗದಿಂದ ಹಿಡಿದು, ಕಂಸನ ಅಹಂಕಾರವನ್ನು ಮುರಿಯಲು ಭಗವಂತ ಅವತರಿಸಿದ ಕಥೆಯನ್ನು ವಿವರಿಸಿದರು. ಕತ್ತಲ ರಾತ್ರಿಯಲ್ಲಿ ಮಳೆ–ಬಿರುಗಾಳಿಯ ನಡುವೆಯೂ ವಸುದೇವರು ಮಗುವನ್ನು ಬುಟ್ಟಿಯಲ್ಲಿಟ್ಟು ಯಮುನಾ ನದಿಯನ್ನು ದಾಟಿದಾಗ ನಡೆದ ದೈವಿಕ ಘಟನೆಗಳನ್ನು ಸ್ಮರಿಸಿದರು.

ಗೋಕುಲದಲ್ಲಿ ಯಶೋದೆಯ ಮಡಿಲಲ್ಲಿ ಬೆಳೆದ ಬಾಲಕೃಷ್ಣನ ತುಂಟಾಟಗಳು ಹಾಗೂ ಆತನ ಬಾಲಲೀಲೆಗಳನ್ನು ವಿವರಿಸಿದ ಅವರು, ಇಂದ್ರನ ಅತಿವೃಷ್ಟಿಯಿಂದ ಗೋಕುಲದ ಜನರನ್ನು ರಕ್ಷಿಸಲು ಶ್ರೀಕೃಷ್ಣ ತನ್ನ ಕಿರುಬೆರಳಿನಲ್ಲಿ ಗೋವರ್ಧನ ಗಿರಿಯನ್ನು ಎತ್ತಿಹಿಡಿದ ಪ್ರಸಂಗವು ಪ್ರಕೃತಿ ಹಾಗೂ ಜೀವಜಾಲದ ಸಂರಕ್ಷಣೆಯ ಮಹತ್ವವನ್ನು ಸಾರುತ್ತದೆ ಎಂದರು.

ಇಂದಿನ ಯುವಜನತೆ ಶ್ರೀಕೃಷ್ಣನ ಜೀವನ ಮತ್ತು ಭಗವದ್ಗೀತೆಯ ಸಂದೇಶಗಳನ್ನು ಅರ್ಥಮಾಡಿಕೊಂಡು ದುಶ್ಚಟಗಳಿಂದ ದೂರವಿರಬೇಕು. ಸಮಯವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ, ಜ್ಞಾನ, ಕೌಶಲ್ಯ ಹಾಗೂ ಉತ್ತಮ ಚಿಂತನೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಂ.ಕೆ. ಲಮಾಣಿ ಸಲಹೆ ನೀಡಿದರು.

ಯುವಜನತೆ ಉತ್ತಮ ದಾರಿಯಲ್ಲಿ ಸಾಗಿದಾಗ ಮಾತ್ರ ಸದೃಢ ಕುಟುಂಬ, ಆರೋಗ್ಯಕರ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ದು ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.