Home Blog

ಗೃಹಲಕ್ಷ್ಮಿಗೆ ಮೇಜರ್ ಸರ್ಜರಿ: ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಸರ್ಕಾರದಿಂದ ಮೇಜರ್ ಪರಿಷ್ಕರಣೆ ಕೈಗೊಳ್ಳಲಾಗಿದೆ.

ಯೋಜನೆಯ ದುರುಪಯೋಗ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಫಲಾನುಭವಿಗಳ ಮರು ಪರಿಶೀಲನೆ ಆರಂಭವಾಗಿದ್ದು, ಅನರ್ಹರನ್ನು ಗುರುತಿಸಿ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರೇ ಈಗಾಗಲೇ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಮಾಹಿತಿ ನೀಡಿದ್ದಾರೆ. ಒಟ್ಟು 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ಪೈಕಿ 3.89 ಲಕ್ಷ ಮಂದಿಯನ್ನು ಅನರ್ಹರೆಂದು ಗುರುತಿಸಲಾಗಿದೆ. ಇದರಲ್ಲಿ ಆದಾಯ ತೆರಿಗೆ ಹಾಗೂ GST ಪಾವತಿದಾರರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುತ್ತಿದ್ದ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿವೆ.

ಅಧಿಕಾರಿಗಳ ಮಾಹಿತಿಯ ಪ್ರಕಾರ, 1.94 ಲಕ್ಷ ಐಟಿ/ಜಿಎಸ್‌ಟಿ ಪಾವತಿದಾರರು ಹಾಗೂ 1.95 ಲಕ್ಷ ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ಪಾವತಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಅನರ್ಹ ಫಲಾನುಭವಿಗಳ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದ್ದು, ನಂತರ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳು ಸ್ಥಾನ ಪಡೆದಿವೆ.

ಜಿಲ್ಲಾವಾರು ವಿವರ (ಮುಖ್ಯಾಂಶ):

  • ಬೆಂಗಳೂರು ನಗರ: 47,871
  • ಬೆಳಗಾವಿ: 32,282
  • ದಕ್ಷಿಣ ಕನ್ನಡ: 16,654
  • ಮೈಸೂರು: 20,680
  • ತುಮಕೂರು: 20,037

ಮಾರ್ಚ್ ತಿಂಗಳಲ್ಲಿ ನಡೆದ ಪರಿಶೀಲನೆಯಲ್ಲೇ ಈ ಅನರ್ಹರನ್ನು ಗುರುತಿಸಲಾಗಿದ್ದು, ವಿವಿಧ ಸರ್ಕಾರಿ ದತ್ತಾಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಹಂತದಲ್ಲಿ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಇದರಿಂದ ನಕಲಿ ಫಲಾನುಭವಿಗಳನ್ನು ತಡೆಯಲು ಹಾಗೂ ಯೋಜನೆಯ ನಿಖರ ಅನುಷ್ಠಾನಕ್ಕೆ ಸಹಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪರಿಷ್ಕರಣೆಯಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂ. ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಧಾರಾಕಾರ ಮಳೆಗೆ ತತ್ತರಿಸಿದ ಮಂತ್ರಾಲಯ: ಹೊಳೆಯಂತಾದ ರಸ್ತೆಗಳು, ಸಂಕಷ್ಟದಲ್ಲಿ ಭಕ್ತರು!

ರಾಯಚೂರು: ಧಾರಾಕಾರ ಮಳೆಗೆ ಮಂತ್ರಾಲಯ ಅಕ್ಷರಶಃ ನಲುಗಿ ಹೋಗಿದೆ.

ಧಾರಾಕಾರ ಮಳೆಯಿಂದ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಭಕ್ತರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಮಳೆಯ ಅರ್ಭಟದಿಂದ ರಸ್ತೆಗಳಲ್ಲಿ ನೀರು ಹರಿದು ಹೊಳೆಯಂತಾದ ದೃಶ್ಯ ನಿರ್ಮಾಣವಾಗಿದ್ದು, ಅನೇಕ ಭಕ್ತರು ನೀರಿನ ನಡುವೆಯೇ ರಾಯರ ದರ್ಶನಕ್ಕೆ ತೆರಳುವ ಪರಿಸ್ಥಿತಿ ಎದುರಾಗಿದೆ.

ಸ್ಥಳೀಯ ಆಡಳಿತ ಹಾಗೂ ಮಠದ ಆಡಳಿತ ಮಂಡಳಿ ತಕ್ಷಣ ಕ್ರಮ ಕೈಗೊಂಡು ಭಕ್ತರಿಗೆ ಅಗತ್ಯ ಸಹಾಯ ಹಾಗೂ ಸುರಕ್ಷತಾ ವ್ಯವಸ್ಥೆ ಕಲ್ಪಿಸಿದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಅನಾಹುತ ತಪ್ಪಿದೆಯೆಂದು ತಿಳಿದುಬಂದಿದೆ.

ಶಾಲಾ ಮೈದಾನದಲ್ಲೇ ಪ್ರಜ್ಞೆ ತಪ್ಪಿ ಬಿದ್ದು 1ನೇ ತರಗತಿ ವಿದ್ಯಾರ್ಥಿ ಸಾವು: ಹೃದಯಾಘಾತದ ಶಂಕೆ

0

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ಮನಕಲಕುವ ಘಟನೆ ಸಂಭವಿಸಿದೆ. ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿದ್ದಾನೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ಮೃತ ಬಾಲಕ ತ್ರಿಲೋಕ್ ಜೈನ್, ಕೊಡನವಳ್ಳಿ ಗ್ರಾಮದ ಗೌತಮ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದು, ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಮಧ್ಯಾಹ್ನದ ವೇಳೆ ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಅಸ್ವಸ್ಥಗೊಂಡು ನೆಲಕ್ಕುರುಳಿದ್ದಾನೆ.

ಘಟನೆ ಗಮನಿಸಿದ ಶಿಕ್ಷಕರು ಹಾಗೂ ಸಿಬ್ಬಂದಿ ಕೂಡಲೇ ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲುವೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ದುರಂತದಿಂದ ಕುಟುಂಬಸ್ಥರು, ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬಾಲಕ ಹೃದಯಾಘಾತಕ್ಕೆ ಒಳಗಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಸಾವಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಹಿಂದೆ ಬಾಲಕನಿಗೆ ಯಾವುದೇ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆ ಇತ್ತೇ ಅಥವಾ ಬೇರೆ ವೈದ್ಯಕೀಯ ಕಾರಣಗಳಿವೆಯೇ ಎಂಬುದು ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ವರದಿ ಬಳಿಕ ಸ್ಪಷ್ಟವಾಗಲಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ವೈದ್ಯಕೀಯ ವರದಿಯ ನಿರೀಕ್ಷೆಯಿದೆ. ಪುಟ್ಟ ವಯಸ್ಸಿನಲ್ಲೇ ತ್ರಿಲೋಕ್ ಜೈನ್ ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

ಕರ್ನಾಟಕದಲ್ಲಿ ಮುಂದಿನ 2-3 ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಎರಡು ರಿಂದ ಮೂರು ದಿನಗಳ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ದಿನದ ವೇಳೆ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಇದೇ ವೇಳೆ, ನಗರದಲ್ಲಿ ಗಂಟೆಗೆ ಸುಮಾರು 20 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯೊಂದಿಗೆ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾರತದ ಆರ್ಥಿಕತೆ ವಿನಾಶದ ಹಾದಿಯಲ್ಲಿಲ್ಲ, ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ನಿರ್ಮಲಾ ಸೀತಾರಾಮನ್

ಬೆಂಗಳೂರು: ಭಾರತದ ಆರ್ಥಿಕತೆ ವಿನಾಶದತ್ತ ಸಾಗುತ್ತಿದೆ ಎಂಬ ಟೀಕೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದು, ದೇಶದ ಆರ್ಥಿಕತೆ ಬಲಿಷ್ಠವಾಗಿದ್ದು, ಜಿಡಿಪಿ ಬೆಳವಣಿಗೆ ಉತ್ತಮ ಮಟ್ಟದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದ ಜಯನಗರದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ್ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು.

ಭಾರತದ ಆರ್ಥಿಕತೆ ವಿನಾಶದ ಹಾದಿಯಲ್ಲಿದೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಅವರು ದೇಶದ ಆರ್ಥಿಕ ಸ್ಥಿತಿ ಬಗ್ಗೆ ನಿರಂತರವಾಗಿ ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಜನರ ಬಗ್ಗೆ ಟೀಕಾತ್ಮಕವಾಗಿ ಮಾತನಾಡುತ್ತಾರೆ.

ಆದರೆ ನಾನು ಸ್ಪಷ್ಟವಾಗಿ ಹೇಳುತ್ತೇನೆ, ಭಾರತದ ಆರ್ಥಿಕತೆ ಯಾವುದೇ ರೀತಿಯಲ್ಲೂ ವಿನಾಶದ ಹಾದಿಯಲ್ಲಿಲ್ಲ. ಜಿಡಿಪಿ ಬೆಳವಣಿಗೆ ಉತ್ತಮವಾಗಿದ್ದು, ದೇಶ ವೇಗವಾಗಿ ಆರ್ಥಿಕ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಅಭಿವೃದ್ಧಿ ಬಗ್ಗೆ ಅನುಮಾನ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಭಾರತ ದುರ್ಬಲವಾಗುತ್ತಿದೆ ಎಂಬ ಭಾವನೆ ಮೂಡಿಸಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ ವಾಸ್ತವ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ ಎಂದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸ್ಥಿರವಾಗಿದೆ ಎಂದು ಹೇಳಿದ ಸಚಿವೆ, ಹಾರ್ಮೂಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಸವಾಲುಗಳು ಎದುರಾಗಿದ್ದರೂ ದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ದೊಡ್ಡ ವ್ಯತ್ಯಯ ಉಂಟಾಗಿಲ್ಲ ಎಂದು ತಿಳಿಸಿದರು.

ಜಾಗತಿಕ ಸವಾಲುಗಳ ನಡುವೆಯೂ ಭಾರತದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿಲ್ಲ. ತೈಲ ಸಾಗಣೆ ಮತ್ತು ಸಾಗರ ಸಾರಿಗೆಯಲ್ಲಿ ಹಲವು ಸಮಸ್ಯೆಗಳಿದ್ದರೂ ದೇಶವು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಆದಾಗ್ಯೂ ಕೆಲವರು ದೇಶದ ಬಗ್ಗೆ ನಕಾರಾತ್ಮಕ ಚಿತ್ರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಸಂಪ್ʼಗೆ ಬಿದ್ದು ಮಗು ದಾರುಣ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಕೋಲಾರ: ಮನೆ ಬಳಿಯ ಸಂಪ್‌ಗೆ ಆಕಸ್ಮಿಕವಾಗಿ ಬಿದ್ದ ಪರಿಣಾಮ ಮೂರು ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದಿದೆ.

ಮೃತ ಮಗುವನ್ನು ಯಶಸ್ (3) ಎಂದು ಗುರುತಿಸಲಾಗಿದೆ. ಇವರು ವಿಕಾಸ್ ಹಾಗೂ ಹಂಸ ದಂಪತಿಯ ಪುತ್ರನಾಗಿದ್ದಾನೆ.

ಮಾಹಿತಿಯ ಪ್ರಕಾರ, ಯಶಸ್ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸಂಪ್‌ಗೆ ಬಿದ್ದಿದ್ದಾನೆ. ವಿಷಯ ತಿಳಿದ ಕೂಡಲೇ ಕುಟುಂಬಸ್ಥರು ಮಗುವನ್ನು ಸಂಪ್‌ನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ, ಅಷ್ಟರಲ್ಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮಗುವಿನ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪೋಷಕರ ದುಃಖ ನೋಡುಗರ ಮನಕಲಕುವಂತಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಗಲ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

T20 World Cup: ದೀಪ್ತಿ ಸ್ಪಿನ್ ಜಾದೂಗೆ ಪಾಕ್ ಪತನ: ಪಾಕಿಸ್ತಾನ ವಿರುದ್ಧ ಭಾರತ ಮಹಿಳೆಯರ ಭರ್ಜರಿ ಗೆಲುವು!

0

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಅದ್ಭುತ ಪ್ರದರ್ಶನ ನೀಡಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 64 ರನ್‌ಗಳಿಂದ ಮಣಿಸಿದೆ. ಸ್ಮೃತಿ ಮಂಧಾನ ಅವರ ಸ್ಫೋಟಕ ಅರ್ಧಶತಕ ಹಾಗೂ ದೀಪ್ತಿ ಶರ್ಮಾ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್‌ಗಳ ಬಲಿಷ್ಠ ಮೊತ್ತ ಕಲೆಹಾಕಿತು. ಗೆಲುವಿಗೆ 171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ಆರಂಭದಲ್ಲಿ ಉತ್ತಮ ಹಾದಿಯಲ್ಲಿದ್ದರೂ, ಮಧ್ಯಮ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿ 106 ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ಇನ್ನಿಂಗ್ಸ್ ಆರಂಭದಲ್ಲೇ ಶಫಾಲಿ ವರ್ಮಾ (6) ಹಾಗೂ ಜೆಮಿಮಾ ರೋಡ್ರಿಗ್ಸ್ (1) ವಿಕೆಟ್ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಮೂರನೇ ವಿಕೆಟ್‌ಗೆ ಜೊತೆಯಾದ ಸ್ಮೃತಿ ಮಂಧಾನ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಇಬ್ಬರೂ 61 ಎಸೆತಗಳಲ್ಲಿ 91 ರನ್‌ಗಳ ಅಮೂಲ್ಯ ಜೊತೆಯಾಟ ನಡೆಸಿದರು. ಹರ್ಮನ್‌ಪ್ರೀತ್ 36 ರನ್‌ಗಳ ಕೊಡುಗೆ ನೀಡಿದರೆ, ಸ್ಮೃತಿ ಮಂಧಾನ ಕೇವಲ 44 ಎಸೆತಗಳಲ್ಲಿ 68 ರನ್ ಸಿಡಿಸಿ ಮಿಂಚಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಸೇರಿದ್ದವು.

ಕೊನೆಯಲ್ಲಿ ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಜೋಡಿ ವೇಗದ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಿತು. ರಿಚಾ ಘೋಷ್ ಕೇವಲ 17 ಎಸೆತಗಳಲ್ಲಿ 34 ರನ್ ಗಳಿಸಿ ತಂಡಕ್ಕೆ ಬಲ ತುಂಬಿದರು.

171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 6.2 ಓವರ್‌ಗಳಲ್ಲಿ 53 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಈ ಹಂತದಲ್ಲಿ ದೀಪ್ತಿ ಶರ್ಮಾ ಪಂದ್ಯದ ದಿಕ್ಕನ್ನೇ ಬದಲಿಸಿದರು.

ಅದ್ಭುತ ಸ್ಪಿನ್ ಬೌಲಿಂಗ್ ಪ್ರದರ್ಶಿಸಿದ ದೀಪ್ತಿ, ನಾಲ್ಕು ಓವರ್‌ಗಳಲ್ಲಿ ಕೇವಲ 10 ರನ್ ನೀಡಿ ಐದು ಪ್ರಮುಖ ವಿಕೆಟ್ ಕಬಳಿಸಿದರು. ಅವರ ದಾಳಿಗೆ ಪಾಕಿಸ್ತಾನ ತಂಡ ಕೇವಲ 53 ರನ್‌ಗಳ ಅಂತರದಲ್ಲಿ ಉಳಿದ ಒಂಬತ್ತು ವಿಕೆಟ್‌ಗಳನ್ನು ಕಳೆದುಕೊಂಡು ಕುಸಿದುಬಿತ್ತು.

ಪಾಕಿಸ್ತಾನದ ಪರ ಮುನೀಬಾ ಅಲಿ 41 ರನ್ ಗಳಿಸಿ ಹೋರಾಟ ನಡೆಸಿದರೂ, ಅವರು ರನೌಟ್ ಆದ ಬಳಿಕ ಪಾಕ್ ತಂಡದ ಪ್ರತಿರೋಧ ಸಂಪೂರ್ಣ ಕುಸಿಯಿತು. ಶ್ರೀ ಚರಣಿ ಮೂರು ವಿಕೆಟ್ ಹಾಗೂ ಶಫಾಲಿ ವರ್ಮಾ ಒಂದು ವಿಕೆಟ್ ಪಡೆದು ದೀಪ್ತಿಗೆ ಉತ್ತಮ ಸಾಥ್ ನೀಡಿದರು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ದೀಪ್ತಿ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ! ವಿಶೇಷ ಪೂಜೆ ಸಲ್ಲಿಸಿದ ಉದ್ಯಮಿ

ಉಡುಪಿ: ರಾಜ್ಯದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಅಂಬಾನಿ ಕುಟುಂಬದ ಗುರುಜಿಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ್ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಪೂಜೆ ವೇಳೆ ದೇವಾಲಯದ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ದೇವಾಲಯಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಸ್ಥಾನ ಆಡಳಿತ ಮಂಡಳಿಯ ವತಿಯಿಂದ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.

ಮೂಲಗಳ ಪ್ರಕಾರ, ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಮುಂಬೈನಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸವನ್ನು ಮುಂದೂಡಲಾಗಿತ್ತು. ಬಳಿಕ ಭಾನುವಾರ ಸಂಜೆ ಕೊಲ್ಲೂರಿಗೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದರು.

ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕೂಡ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಬೆಳ್ಳಿಯ ಖಡ್ಗ ಅರ್ಪಿಸಿದ್ದರು. ಅದರ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ ನೀಡಿರುವುದು ಭಕ್ತರ ಗಮನ ಸೆಳೆದಿದೆ.

ಕೇಂದ್ರದಿಂದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಸಿಗಲಿದೆ ಗುಡ್ ನ್ಯೂಸ್!

ಬೆಂಗಳೂರು: ನಗರದ ಮಹತ್ವಾಕಾಂಕ್ಷೆಯ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಸಂಬಂಧಿಸಿದ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬೆಳವಣಿಗೆಯಿಂದಾಗಿ ಹಲವು ತಿಂಗಳುಗಳಿಂದ ವಿಳಂಬವಾಗಿದ್ದ ಮೆಟ್ರೋ ಕಾಮಗಾರಿಗೆ ಚಾಲನೆ ಸಿಗುವ ನಿರೀಕ್ಷೆ ಮೂಡಿದೆ.

ಕಳೆದ ವರ್ಷದ ಆಗಸ್ಟ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಳದಿ ಮಾರ್ಗದ ಮೆಟ್ರೋ ಸೇವೆಯನ್ನು ಉದ್ಘಾಟಿಸುವುದರ ಜೊತೆಗೆ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೂ ಯೋಜನೆಗೆ ಸಂಬಂಧಿಸಿದ ಕಾಮಗಾರಿ ಇದುವರೆಗೆ ಆರಂಭವಾಗಿರಲಿಲ್ಲ.

ಆರೆಂಜ್ ಲೈನ್ ಮಾರ್ಗದಲ್ಲಿ ಮೆಟ್ರೋ ಜೊತೆಗೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ನಗರದ ಸಂಚಾರ ದಟ್ಟಣೆಗೆ ಪರಿಹಾರ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿತ್ತು. ಆದರೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣದಿಂದ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿ, ಮೆಟ್ರೋ ಪ್ರಯಾಣಿಕರ ಸಂಖ್ಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಕೇಂದ್ರ ನಗರಾಭಿವೃದ್ಧಿ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು.

ಇದೀಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ, ಡಬಲ್ ಡೆಕ್ಕರ್ ಕಂ ಮೆಟ್ರೋ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಕೇಂದ್ರದಿಂದ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎರಡು ಪ್ರಮುಖ ಮಾರ್ಗಗಳಿವೆ. ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರದವರೆಗೆ ಸುಮಾರು 32.5 ಕಿಲೋಮೀಟರ್ ಉದ್ದದ ಮಾರ್ಗವಿದ್ದು, ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆಯವರೆಗೆ ಸುಮಾರು 12.15 ಕಿಲೋಮೀಟರ್ ಉದ್ದದ ಮತ್ತೊಂದು ಮಾರ್ಗ ನಿರ್ಮಾಣವಾಗಲಿದೆ.

ಯೋಜನೆ ಜಾರಿಯಾದರೆ ಔಟರ್ ರಿಂಗ್ ರೋಡ್ ಪ್ರದೇಶದ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗಲಿದೆ. ಜೊತೆಗೆ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳ, ವಾಯು ಮಾಲಿನ್ಯ ನಿಯಂತ್ರಣ ಹಾಗೂ ಪೀಣ್ಯ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಭಾಗಗಳಿಗೆ ಸಂಚಾರ ಸುಗಮವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಯೋಜನೆಗಳ ವ್ಯಾಪ್ತಿಯಲ್ಲಿ ನಕಲಿ ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸೌಲಭ್ಯವನ್ನು ಮುಂದುವರಿಸಿಕೊಂಡು ಹೋಗಲು ಫಲಾನುಭವಿಗಳು ಹೊಸ ಅರ್ಜಿ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ಹೊಸ ಅರ್ಜಿಯಲ್ಲಿ ಏನೆಲ್ಲ ಮಾಹಿತಿ?

ಗೃಹಲಕ್ಷ್ಮಿ ಯೋಜನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊಸ ಅರ್ಜಿ ನಮೂನೆಯನ್ನು ಸಿದ್ಧಪಡಿಸಿದ್ದು, ಅದನ್ನು ಸರ್ಕಾರ ಮತ್ತು ಹಣಕಾಸು ಇಲಾಖೆಯ ಪರಿಶೀಲನೆಗೆ ಕಳುಹಿಸಲಾಗಿದೆ.

ಹೊಸ ಅರ್ಜಿಯಲ್ಲಿ ಮನೆಯ ಯಜಮಾನಿಯ ಹೆಸರು, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಕುಟುಂಬದ ಸದಸ್ಯರ ಮಾಹಿತಿ, ಜಾತಿ ವಿವರ, ಪತಿಯ ಹೆಸರು ಹಾಗೂ ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಇದರ ಜೊತೆಗೆ ಫಲಾನುಭವಿಗಳು ಆದಾಯ ತೆರಿಗೆ (IT) ಅಥವಾ ಜಿಎಸ್‌ಟಿ ಪಾವತಿದಾರರೇ ಎಂಬ ಮಾಹಿತಿ, ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದರ ವಿವರಗಳನ್ನೂ ನೀಡಬೇಕಾಗುತ್ತದೆ.

ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಬಯೋಮೆಟ್ರಿಕ್ ದೃಢೀಕರಣವನ್ನೂ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಸದ್ಯ ಸುಮಾರು 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮುಂದಿನ ದಿನಗಳಲ್ಲಿ ಹಣ ಪಡೆಯಲು ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪರಿಶೀಲನೆ ಮಾಡಿಸಬೇಕಾಗುತ್ತದೆ.

ಈ ಪ್ರಕ್ರಿಯೆಗೆ ಆಧಾರ್ ಕಾರ್ಡ್ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ಗುರುತಿನ ಚೀಟಿ (ID) ಸಹ ಕಡ್ಡಾಯವಾಗಲಿದೆ.

ಜಾತಿ ಪ್ರಮಾಣಪತ್ರ ವಿವರಕ್ಕೂ ಆದ್ಯತೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣಪತ್ರದಲ್ಲಿರುವ ಆರ್‌ಡಿ (RD) ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯ ದಾಖಲೆಗಳು ಮತ್ತು ಬಯೋಮೆಟ್ರಿಕ್ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಕೆಗೆ ಹಲವು ಕೇಂದ್ರಗಳಲ್ಲಿ ಅವಕಾಶ

ಹೊಸ ಅರ್ಜಿ ಸಲ್ಲಿಕೆಗೆ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಜೊತೆಗೆ ಆಫ್‌ಲೈನ್ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸುವ ಸಾಧ್ಯತೆ ಇದೆ. ಅಧಿಕೃತ ಆದೇಶ ಹೊರಬಿದ್ದ ಬಳಿಕ ಅರ್ಜಿ ಸಲ್ಲಿಕೆ ದಿನಾಂಕ ಮತ್ತು ವಿಧಾನವನ್ನು ಪ್ರಕಟಿಸಲಾಗುವುದು.

ಆದರೆ, ಈ ಎಲ್ಲ ಬದಲಾವಣೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನೂ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ. ಅಧಿಕೃತ ಆದೇಶ ಹೊರಬಂದ ಬಳಿಕವೇ ಹೊಸ ನಿಯಮಗಳ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.

error: Content is protected !!