Home Blog

ಶಿರಹಟ್ಟಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸಮರ್ಪಕ ಬೆಳೆ ಪರಿಹಾರ, ಸಾಲದ ನೆರವು ಹಾಗೂ ಜಾನುವಾರುಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಗದಗ ಜಿಲ್ಲೆಯಲ್ಲಿ ಮಾತ್ರ ಕೇವಲ ಒಂದು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಶಿರಹಟ್ಟಿ ತಾಲೂಕು ಕೂಡ ಬರದ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆರೆ–ಕಟ್ಟೆಗಳು ಹಾಗೂ ಇತರೆ ಜಲಮೂಲಗಳಲ್ಲಿನ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಕೃಷಿ ಚಟುವಟಿಕೆ ಸಂಪೂರ್ಣ ಹಿನ್ನಡೆ ಕಂಡಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.

ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆ ನಷ್ಟದ ಪರಿಹಾರ ವಿತರಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಸಾಲದ ನೆರವು ನೀಡುವುದರೊಂದಿಗೆ ಜಾನುವಾರುಗಳ ರಕ್ಷಣೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಫಕ್ಕೀರೇಶ ಕಟ್ಟಿಮನಿ, ಎಸ್.ವಿ. ನೆಲಗುಡ್ಡದ, ಫಕ್ಕೀರೇಶ ಹೊಸಮನಿ, ಕೃಷ್ಣಸಾಬ ದೊಡ್ಡಮನಿ, ಪೀರಸಾಬ ನದಾಫ, ಎಸ್.ಎನ್. ದಲಾಲಿ, ವೀರಣ್ಣ ಮಜ್ಜಗಿ, ಸುರೇಶ ಸೂರಣಗಿ, ರಾಮನಗೌಡ ಪಾಟೀಲ, ವೀರೇಶ ಶಿವಶಿಂಪಿ, ಫಕ್ಕೀರಗೌಡ ಪಾಟೀಲ, ದೇವಪ್ಪ ಉಪ್ಪಾರ, ಜಿ.ಬಿ. ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆ–ಕಟ್ಟೆಗಳ ನೀರಿನ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆ ಹಿನ್ನಡೆ ಕಂಡಿದೆ. ರೈತರ ಸಂಕಷ್ಟವನ್ನು ಪರಿಗಣಿಸಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡಬೇಕು.

ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ, ರೈತ ಮುಖಂಡರು

ಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ಸಿಎಂ ಡಿ.ಕೆ. ಶಿವಕುಮಾರರಿಗೆ ಕಪ್ಪು ಭಾವುಟದ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ತೀವ್ರ ಬರಗಾಲದಿಂದ ಗದಗ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರೂ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಸೆಪ್ಟೆಂಬರ್ 1ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಸಿದರು.

ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಬರ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಜಾನುವಾರುಗಳು ಸಂಕಷ್ಟಕ್ಕೀಡಾಗಿದ್ದು, ಬೆಳೆ ಹಾನಿಯಿಂದ ರೈತರು ಆತಂಕದಲ್ಲಿದ್ದಾರೆ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಒಂದು ವಾರದೊಳಗೆ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದ ಅವರು, ರೈತರ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಬೇಕು ಎಂದರು.

ರೈತರ ಪರವಾಗಿ ನಿಲ್ಲದ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗಿರೀಶ್ ಹೊಸಮನಿ, ನಾಗರಾಜ ಕಳ್ಳಿಹಾಳ, ರಾಮಣ್ಣ ಕಮ್ಮಾರ, ಬಸವರಾಜ ಮರಾಠೆ, ಶರಣಪ್ಪ ಕಮ್ಮಾರ, ರವಿ ವಗ್ಗನವರ್ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.

ತೀವ್ರ ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವುದು ಖಂಡನೀಯ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಮುಖ್ಯಮಂತ್ರಿ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.

ಶಂಕರಗೌಡ ಜಾಯನಗೌಡ್ರ, ಅಧ್ಯಕ್ಷರು, ರೈತ ಸಂಘ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮರಲಿಂಗ ಬಸವೇಶ್ವರ ಮಹಾರಥೋತ್ಸವ ವೈಭವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಡಿ.ಎಸ್. ಹಡಗಲಿ ಗ್ರಾಮದ ಶ್ರೀ ಅಮರಲಿಂಗ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ಮಹಾರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು.

ಗ್ರಾಮದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಶ್ರೀ ಅಮರಲಿಂಗ ಬಸವೇಶ್ವರರ ದರ್ಶನ ಪಡೆದು, ಭಕ್ತಿಭಾವದಿಂದ ಮಹಾರಥೋತ್ಸವದಲ್ಲಿ ಪಾಲ್ಗೊಂಡರು. ಜೈಕಾರ, ಭಜನೆ ಹಾಗೂ ಧಾರ್ಮಿಕ ಘೋಷಣೆಗಳ ಮಧ್ಯೆ ರಥೋತ್ಸವ ಸಾಗಿದ್ದು, ಗ್ರಾಮದಲ್ಲಿ ಭಕ್ತಿಯ ಸಂಭ್ರಮ ಮನೆಮಾಡಿತ್ತು.

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದಾರೆ.

ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು, ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಗದಗಕ್ಕೆ ಆಗಮಿಸುವ ಮುಖ್ಯಮಂತ್ರಿ ಅವರು ಬೆಳಿಗ್ಗೆ 11.15ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಲಿದ್ದಾರೆ. ಬಳಿಕ ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 1.15ಕ್ಕೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರು ಕೃಷಿ ವಿಜ್ಞಾನಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 2.30ಕ್ಕೆ ಗದಗ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಹಾಗೂ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರದ ಉಮಾ ಪಿಯು ಕಾಲೇಜು ಆವರಣಕ್ಕೆ ತೆರಳಲಿದ್ದಾರೆ.

ಬಳಿಕ 3.50ಕ್ಕೆ ಶ್ರೀ ಮುಕ್ತಿ ಮಂದಿರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರು ನಂತರ ಲಕ್ಷ್ಮೇಶ್ವರಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಸಂಜೆ 5.05ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಫಿ ಎಸ್ಟೇಟ್‌ನಲ್ಲಿ ದುರಂತ: ಬಂದೂಕಿನಿಂದ ಗುಂಡು ಸಿಡಿದು 61 ವರ್ಷದ ರೈತ ಸಾವು

0

ಹಾಸನ: ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ಕಾಫಿ ಬೆಳೆಗಾರನೊಬ್ಬ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಕೇಶವಶೆಟ್ಟಿ (61) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಬಂದೂಕು ಹಿಡಿದು ಕಾಫಿ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕೈಯಲ್ಲಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿ ಕೇಶವಶೆಟ್ಟಿ ಅವರ ಮೃತದೇಹ ಪತ್ತೆಯಾಗಿದೆ. ಗುಂಡು ಸಿಡಿದ ಬಳಿಕ ಗಾಯಗೊಂಡ ಅವರು ಕೆಲ ದೂರ ನಡೆದುಕೊಂಡು ಬಂದು ನಂತರ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಗುಂಡು ಸಿಡಿದ ಸ್ಥಳದಲ್ಲಿ ಅವರ ಮೊಬೈಲ್ ಪತ್ತೆಯಾಗಿದ್ದು, ಮೃತದೇಹ ಬಿದ್ದಿದ್ದ ಸ್ಥಳದಿಂದ ಕೆಲ ಮೀಟರ್ ಹಿಂದೆ ಬಂದೂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ SOCO ತಂಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಂಜುನಾಥ ನಗರಕ್ಕೆ ₹1 ಕೋಟಿ ಮೂಲಸೌಕರ್ಯದ ಕೊಡುಗೆ

0

ವಿಜಯಸಾಕ್ಷಿ ಸುದ್ದಿ, ಗದಗ: ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಗದಗ-ಬೆಟಗೇರಿ ನಗರದ 4ನೇ ವಾರ್ಡ್‌ನ ಮಂಜುನಾಥ ನಗರದ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸರ್ಕಾರ ಪ್ರಾಮಾಣಿಕವಾಗಿ ಕೈಗೊಂಡಿದ್ದು, ಜನರ ಅನುಕೂಲಕ್ಕಾಗಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆಗಳು ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಹಿರಿಯ ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ಬೆಟಗೇರಿಯ 4ನೇ ವಾರ್ಡ್‌ನ ಮಂಜುನಾಥ ನಗರದಲ್ಲಿ ಲೆಕ್ಕ ಶೀರ್ಷಿಕೆ 8443 ಠೇವಣಿ ವಂತಿಕೆ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಂದು ಕೋಟಿ ರೂ. ವೆಚ್ಚದ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರಸಭೆಯ ಸದಸ್ಯೆ ಶ್ರೀಮತಿ ಶಕುಂತಲಾ ಅಕ್ಕಿ ಅವರು ವಾರ್ಡ್‌ನ ಬಡ ಜನರಿಗೆ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ನಗರಸಭೆಯಿಂದ ಹೆಚ್ಚುವರಿಯಾಗಿ 27 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಿರುವುದು, ತಮ್ಮ ವಾರ್ಡ್‌ನ ಜನತೆಯ ಮೇಲಿರುವ ಅವರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಎಚ್.ಕೆ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ವಾರ್ಡ್‌ನ ಹಲವೆಡೆ ಬೋರ್‌ವೆಲ್ ಕೊರೆಸಿ ಜನರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವುದು ಹಾಗೂ ಹಲವು ರಸ್ತೆಗಳನ್ನು ನಿರ್ಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಈ ಭಾಗದ ಜನರ ಮನ ಮೆಚ್ಚುವಂತೆ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂಬರುವ ಜನವರಿ ತಿಂಗಳೊಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾಗಬೇಕು ಹಾಗೂ ಜನರಿಗೆ ಅಗತ್ಯ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ಎಚ್.ಕೆ.ಪಾಟೀಲ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾರ್ಡ್ ಸದಸ್ಯೆ ಶ್ರೀಮತಿ ಶಕುಂತಲಾ ಹೊಳಬಸಪ್ಪ ಅಕ್ಕಿ ಮಾತನಾಡಿ, ತಮ್ಮನ್ನು ಆಯ್ಕೆ ಮಾಡಿದ ವಾರ್ಡ್‌ನ ಜನತೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ನಿರಂತರ ಸಹಕಾರ ನೀಡುತ್ತಿರುವ ಶಾಸಕ ಎಚ್.ಕೆ. ಪಾಟೀಲ ಅವರನ್ನು ಸ್ಮರಿಸಿದರು.

ವಾರ್ಡ್‌ನ ಜನತೆಗೆ ಸರ್ಕಾರ ಹಾಗೂ ನಗರಸಭೆಯಿಂದ ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಈ ಭಾಗದ ಜನರ ಸಹಕಾರ ಮನೋಭಾವವನ್ನು ಅವರು ಶ್ಲಾಘಿಸಿದರು.

ಮಂಜುನಾಥ ನಗರದ ಫಾರೂಕ್ ಮಸೀದಿಯಿಂದ ಗೌರಿಗಣೇಶ ಶಾಲೆಯವರೆಗೆ ಗುಣಮಟ್ಟದ ಸಿಮೆಂಟ್ ರಸ್ತೆ ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ಸಿ.ಸಿ. ಚರಂಡಿ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ 348 ಮೀಟರ್ ಉದ್ದದ ಐದು ಸಿ.ಸಿ. ರಸ್ತೆಗಳು, 1,137 ಮೀಟರ್ ಉದ್ದದ ಸಿ.ಸಿ. ಚರಂಡಿಗಳು ಹಾಗೂ ಹೈಮಾಸ್ಟ್ ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಕಾಶ ವೆರ್ಣೆಕರ, ಶಂಕರಸಿಂಗ್ ರಜಪೂತ, ಹೀರಾಲಾಲಸಾ ಮೇರವಾಡೆ, ಶಿವಯ್ಯ ಶಿವಪ್ಪಯ್ಯಮಠ, ಸೂರಜ್ ಜಮಾದಾರ, ಮಹ್ಮದ ಶಾಲಗಾರ, ಶೇಡುಸಿಂಗ್ ಜಮಾದಾರ ಹಾಗೂ ಬಸವರಾಜ ಕುಂದಗೋಳ ಪಾಲ್ಗೊಂಡಿದ್ದರು.

ಸಿದ್ದಣ್ಣ ಮೇಳನವರ ಸ್ವಾಗತಿಸಿದರು. ವಾಸುದೇವ ಹುಣಸಿಮರದ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹೊಳಬಸಪ್ಪ ಅಕ್ಕಿ, ಸುದೀಪ ಕಣವಿ, ಹುಲ್ಲೇಶ ಬಜಂತ್ರಿ, ನಿಂಗಪ್ಪ ಕರಮುಡಿ ಸೇರಿದಂತೆ ಗಣ್ಯರು, ಈ ಭಾಗದ ನಾಗರಿಕರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ಬಡವರು ವಾಸಿಸುವ ಪ್ರದೇಶಗಳಿಗೂ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಮಂಜುನಾಥ ನಗರದಲ್ಲಿ ಆರಂಭವಾಗಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.

ಎಚ್.ಕೆ. ಪಾಟೀಲ, ಶಾಸಕ

ಶಿವಮೊಗ್ಗ: ಓದು ಎಂದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

0

ಶಿವಮೊಗ್ಗ: ಓದಿನ ವಿಚಾರದಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ (14) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಚೆನ್ನಾಗಿ ಓದುವಂತೆ ಪೋಷಕರು ಪದೇಪದೇ ಬುದ್ಧಿವಾದ ಹೇಳುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಮನನೊಂದಿದ್ದಳು ಎನ್ನಲಾಗಿದೆ.

ಪೋಷಕರು ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂಜೆ ಮುಗಿಸಿ ಪೋಷಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಓದಿನ ವಿಚಾರವಾಗಿ ಪೋಷಕರು ಪದೇಪದೇ ಹೇಳುತ್ತಿದ್ದ ಮಾತುಗಳಿಂದ ಮನನೊಂದಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಒಬ್ಬಂಟಿಯಾಗಿ ಊಟ ಮಾಡುವ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ? ಇಲ್ಲಿದೆ ತಜ್ಞರ ಸಲಹೆ

0

ಇಂದಿನ ವೇಗದ ಜೀವನಶೈಲಿಯಲ್ಲಿ ಒಬ್ಬಂಟಿಯಾಗಿ ಊಟ ಮಾಡುವುದು ಹಲವರಿಗೆ ಸಾಮಾನ್ಯವಾಗಿದೆ.

ಕಚೇರಿ ಕೆಲಸ, ಬೇರೆ ನಗರಗಳಲ್ಲಿ ಏಕಾಂಗಿಯಾಗಿ ವಾಸಿಸುವುದು ಅಥವಾ ಸಮಯದ ಅಭಾವದಂತಹ ಕಾರಣಗಳಿಂದ ಹಲವರು ಒಬ್ಬರೇ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವಾಗ ಮೊಬೈಲ್ ನೋಡುವುದು, ಟಿವಿ ವೀಕ್ಷಿಸುವುದು ಅಥವಾ ಕೆಲಸದಲ್ಲಿ ತೊಡಗಿರುವುದನ್ನೂ ರೂಢಿಸಿಕೊಂಡಿರುತ್ತಾರೆ.

ಆದರೆ ಪದೇಪದೇ ಒಬ್ಬಂಟಿಯಾಗಿ ಊಟ ಮಾಡುವ ಅಭ್ಯಾಸವು ಸಾಮಾಜಿಕ ಸಂಪರ್ಕ ಹಾಗೂ ಮಾನಸಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

ಊಟದ ಸಮಯವೂ ಸಾಮಾಜಿಕ ಸಂಪರ್ಕಕ್ಕೆ ಅವಕಾಶ:

ಕುಟುಂಬದವರು, ಸ್ನೇಹಿತರು ಅಥವಾ ಸಹೋದ್ಯೋಗಿಗಳೊಂದಿಗೆ ಕುಳಿತು ಊಟ ಮಾಡುವುದು ಕೇವಲ ಆಹಾರ ಸೇವಿಸುವ ಸಮಯವಲ್ಲ. ಪರಸ್ಪರ ಮಾತನಾಡಲು, ದಿನದ ವಿಚಾರಗಳನ್ನು ಹಂಚಿಕೊಳ್ಳಲು ಹಾಗೂ ಒಟ್ಟಿಗೆ ಸಮಯ ಕಳೆಯಲು ಇದೊಂದು ಉತ್ತಮ ಅವಕಾಶವಾಗಿದೆ.

ಈ ರೀತಿಯ ಸಾಮಾಜಿಕ ಸಂಪರ್ಕದಿಂದ ಒಂಟಿತನದ ಭಾವನೆ ಕಡಿಮೆಯಾಗಲು ಸಹಾಯವಾಗಬಹುದು. ಈಗಾಗಲೇ ಸಾಮಾಜಿಕವಾಗಿ ಪ್ರತ್ಯೇಕವಾಗಿರುವ ವ್ಯಕ್ತಿಗಳಲ್ಲಿ ಒಬ್ಬಂಟಿಯಾಗಿ ಊಟ ಮಾಡುವ ಅಭ್ಯಾಸವು ಒಂಟಿತನದ ಅನುಭವದ ಮತ್ತೊಂದು ಭಾಗವಾಗುವ ಸಾಧ್ಯತೆಯೂ ಇದೆ.

ಮೊಬೈಲ್, ಟಿವಿ ನೋಡುತ್ತಾ ಊಟ ಮಾಡುವುದು?

ಒಬ್ಬಂಟಿಯಾಗಿ ಊಟ ಮಾಡುವುದಕ್ಕಿಂತ ಊಟದ ವೇಳೆ ಮೊಬೈಲ್ ಅಥವಾ ಟಿವಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಮತ್ತೊಂದು ಸಮಸ್ಯೆಯಾಗಬಹುದು. ಪರದೆ ನೋಡುತ್ತಾ ಊಟ ಮಾಡುವಾಗ ಆಹಾರದ ಪ್ರಮಾಣ ಹಾಗೂ ಹೊಟ್ಟೆ ತುಂಬಿರುವ ಅನುಭವದ ಬಗ್ಗೆ ಗಮನ ಕಡಿಮೆಯಾಗಬಹುದು. ಇದರಿಂದ ಅಗತ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಆಹಾರ ಸೇವಿಸುವ ಸಾಧ್ಯತೆ ಇದೆ.

ಹೀಗಾಗಿ ಊಟ ಮಾಡುವಾಗ ಸಾಧ್ಯವಾದಷ್ಟು ಮೊಬೈಲ್, ಟಿವಿಯಂತಹ ಗಮನ ಬೇರೆಡೆ ಸೆಳೆಯುವ ವಸ್ತುಗಳಿಂದ ದೂರವಿದ್ದು, ಆಹಾರದ ರುಚಿ ಹಾಗೂ ಪ್ರಮಾಣದತ್ತ ಗಮನ ಹರಿಸುವುದು ಉತ್ತಮ ಅಭ್ಯಾಸವಾಗಿದೆ.

ಸಾಧ್ಯವಾದಾಗ ಒಟ್ಟಿಗೆ ಊಟ ಮಾಡಿ:

ಕುಟುಂಬದ ಸದಸ್ಯರು, ಸ್ನೇಹಿತರು ಅಥವಾ ಸಹೋದ್ಯೋಗಿಗಳೊಂದಿಗೆ ಊಟ ಮಾಡುವುದರಿಂದ ಸಾಮಾಜಿಕ ಸಂಪರ್ಕ ಹೆಚ್ಚಿಸಿಕೊಳ್ಳಬಹುದು. ಮಾತನಾಡುವುದು, ನಗುವುದು ಮತ್ತು ಪರಸ್ಪರ ಸಮಯ ಕಳೆಯುವುದು ಮನಸ್ಸಿಗೆ ಉತ್ತಮ ಅನುಭವ ನೀಡಬಹುದು.

ಕಚೇರಿಯಲ್ಲಿ ಕೆಲಸ ಮಾಡುವವರು ಸಾಧ್ಯವಾದಾಗ ಸಹೋದ್ಯೋಗಿಗಳೊಂದಿಗೆ ಊಟದ ವಿರಾಮ ಹಂಚಿಕೊಳ್ಳಬಹುದು. ಮನೆಯಲ್ಲಿರುವವರು ದಿನಕ್ಕೆ ಕನಿಷ್ಠ ಒಂದು ಹೊತ್ತಾದರೂ ಕುಟುಂಬದ ಸದಸ್ಯರೊಂದಿಗೆ ಒಟ್ಟಿಗೆ ಊಟ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬಹುದು.

ಒಬ್ಬಂಟಿಯಾಗಿ ಊಟ ಮಾಡುವುದು ಅನಿವಾರ್ಯವಾದರೆ?

ಕೆಲವೊಮ್ಮೆ ಕೆಲಸ, ವಾಸದ ಪರಿಸ್ಥಿತಿ ಅಥವಾ ಇತರ ಕಾರಣಗಳಿಂದ ಒಬ್ಬಂಟಿಯಾಗಿ ಊಟ ಮಾಡುವುದು ಅನಿವಾರ್ಯವಾಗಬಹುದು. ಅಂತಹ ಸಂದರ್ಭದಲ್ಲಿ ಆತಂಕಪಡುವ ಅಗತ್ಯವಿಲ್ಲ. ಊಟದ ವೇಳೆ ಮೊಬೈಲ್ ಮತ್ತು ಟಿವಿಯಿಂದ ದೂರವಿದ್ದು, ಆಹಾರದ ರುಚಿ, ಪ್ರಮಾಣ ಹಾಗೂ ತಿನ್ನುವಿಕೆಯತ್ತ ಗಮನ ಹರಿಸುವುದು ಉತ್ತಮ.

ಒಟ್ಟಿನಲ್ಲಿ, ಒಬ್ಬಂಟಿಯಾಗಿ ಊಟ ಮಾಡುವುದೇ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಸಾಮಾಜಿಕ ಸಂಪರ್ಕವನ್ನು ಕಾಪಾಡಿಕೊಳ್ಳುವುದು, ಸಮತೋಲಿತ ಆಹಾರ ಸೇವಿಸುವುದು ಮತ್ತು ಗಮನವಿಟ್ಟು ಊಟ ಮಾಡುವ ಅಭ್ಯಾಸ ದೈಹಿಕ ಹಾಗೂ ಮಾನಸಿಕ ಯೋಗಕ್ಷೇಮಕ್ಕೆ ಸಹಾಯಕವಾಗಬಹುದು. ಸಾಧ್ಯವಾದಾಗ ಕುಟುಂಬ, ಸ್ನೇಹಿತರು ಅಥವಾ ಸಹೋದ್ಯೋಗಿಗಳೊಂದಿಗೆ ಊಟ ಹಂಚಿಕೊಳ್ಳುವುದು ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಸಹಕಾರಿ.

ಗೃಹಜ್ಯೋತಿ ಸರ್ವೆಗೆ ಸಿಗದ ಸ್ಪಂದನೆ: ರೀ-ವೆರಿಫಿಕೇಶನ್‌ಗೆ ಮತ್ತೊಂದು ತಿಂಗಳು ಅವಕಾಶ!

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಪ್ರಕ್ರಿಯೆಗೆ ಇನ್ನೊಂದು ತಿಂಗಳ ಗಡುವು ವಿಸ್ತರಿಸಲಾಗಿದೆ.

ಆರಂಭದಲ್ಲಿ ಆಗಸ್ಟ್ 31ರವರೆಗೆ ನಿಗದಿಪಡಿಸಿದ್ದ ಅವಧಿಯನ್ನು ಇದೀಗ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.

ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಕಾರ್ಯ ಕೈಗೊಳ್ಳಲಾಗಿದೆ. ಜುಲೈ 1ರಿಂದ ಮರುಪರಿಶೀಲನೆ ಕಾರ್ಯ ಆರಂಭವಾಗಿದ್ದು, ಗಡುವು ಮುಕ್ತಾಯದ ವೇಳೆಗೆ ಸರ್ವೆ ಕಾರ್ಯ ಸಂಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ.

ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದುವರೆಗೆ ಸುಮಾರು ಶೇ.70ರಷ್ಟು ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ ಶೇ.30ರಷ್ಟು ಪರಿಶೀಲನೆ ಬಾಕಿಯಿದೆ.

ವಿದ್ಯುತ್ ಗ್ರಾಹಕರಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಸರ್ವೆ ಕಾರ್ಯ ಪೂರ್ಣಗೊಳಿಸಲು ಇಂಧನ ಇಲಾಖೆ ಇನ್ನೊಂದು ತಿಂಗಳ ಕಾಲಾವಕಾಶ ನೀಡಿದೆ.

ಹೀಗಾಗಿ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ವ್ಯಾಪ್ತಿಗೆ ಬರುವ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗೆ ಸರ್ವೆ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ತಿಳಿಸಲಾಗಿದೆ.

ಕುಕ್ಕೆ ಕ್ಷೇತ್ರಕ್ಕೆ ಹೋಗುವ ಭಕ್ತರೇ ಗಮನಿಸಿ: ಸೆಪ್ಟೆಂಬರ್‌ನ ಈ ದಿನಗಳಲ್ಲಿ ಸೇವೆ ಇಲ್ಲ!

0

ಸುಬ್ರಹ್ಮಣ್ಯ: ನಾಗಕ್ಷೇತ್ರ ಎಂದೇ ಪ್ರಸಿದ್ಧವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಕೆಲವು ದಿನಗಳಲ್ಲಿ ವಿಶೇಷ ಧಾರ್ಮಿಕ ಸೇವೆಗಳನ್ನು ರದ್ದುಗೊಳಿಸಲಾಗಿದೆ.

ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಜಂಟಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್ 3 ಮತ್ತು 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ದಶಮಿ-ಏಕಾದಶಿ ಹಿನ್ನೆಲೆಯಲ್ಲಿ ಕೆಲವು ವಿಶೇಷ ಸೇವೆಗಳು ನಡೆಯುವುದಿಲ್ಲ ಎಂದು ತಿಳಿಸಿದೆ.

ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆಪ್ಟೆಂಬರ್ 7ರಂದು ಏಕಾದಶಿ ಇರುವ ಹಿನ್ನೆಲೆಯಲ್ಲಿ ಆಶ್ಲೇಷಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಸೇರಿದಂತೆ ಕೆಲವು ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಈ ದಿನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರಲಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ನಿತ್ಯದ ಪೂಜಾ ಕೈಂಕರ್ಯಗಳಿಗೆ ಅಡಚಣೆ ಇಲ್ಲ:

ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದ್ದರೂ ದೇವಸ್ಥಾನದ ನಿತ್ಯದ ಧಾರ್ಮಿಕ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿವೆ. ಮಹಾಪೂಜೆ, ಶೇಷಸೇವೆ, ಅಭಿಷೇಕ ಹಾಗೂ ಅರ್ಚನೆ ಸೇರಿದಂತೆ ದಿನನಿತ್ಯದ ಪೂಜಾ ಕೈಂಕರ್ಯಗಳು ಯಾವುದೇ ವ್ಯತ್ಯಯವಿಲ್ಲದೆ ನೆರವೇರಲಿವೆ.

ಹೀಗಾಗಿ ಶ್ರೀದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಭಕ್ತರಿಗೆ ಮುಂಗಡ ಯೋಜನೆಗೆ ಮನವಿ:

ಕುಕ್ಕೆ ಕ್ಷೇತ್ರದಲ್ಲಿ ಸರ್ಪಸಂಸ್ಕಾರ, ಆಶ್ಲೇಷಬಲಿ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲು ಯೋಜಿಸಿರುವ ಭಕ್ತರು ಈ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಅಲ್ಲದೆ, ವಿಶೇಷ ಸೇವೆಗಳಿಗಾಗಿ ಮುಂಗಡ ಕಾಯ್ದಿರಿಸುವಿಕೆಯನ್ನು ದಿನಾಂಕಗಳನ್ನು ಪರಿಗಣಿಸಿ ಮಾಡಿಕೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚಿಸಿದೆ.

ದೇವಸ್ಥಾನದ ಸುಗಮ ನಿರ್ವಹಣೆಗೆ ಭಕ್ತಾದಿಗಳು ಸಂಪೂರ್ಣ ಸಹಕಾರ ನೀಡುವಂತೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಜಂಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.