ಚಾಮರಾಜನಗರ: ಸರಣಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ಗಳಿಂದ ಆತಂಕಕ್ಕೊಳಗಾಗಿದ್ದ ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಇದೀಗ ಮತ್ತೊಂದು ಗಂಭೀರ ಬೆದರಿಕೆ ಎದುರಾಗಿದೆ. ಈ ಬಾರಿ ಅಪರಿಚಿತ ವ್ಯಕ್ತಿಯೊಬ್ಬ ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರ ಮೊಬೈಲ್ಗೆ ಇಂಟರ್ನೆಟ್ ಕರೆ ಮಾಡಿ, ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ.
ಬುಧವಾರ ನಡೆದ ಘಟನೆಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ನ್ಯಾಯಾಧೀಶರಿಗೆ ಕರೆ ಮಾಡಿ, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಅಪರಾಧ ಸಂಖ್ಯೆ 144/2026 ಪ್ರಕರಣದ ಆರೋಪಿಗಳಿಗೆ ತಕ್ಷಣ ಜಾಮೀನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾನೆ. ಜಾಮೀನು ಅರ್ಜಿ ತಿರಸ್ಕರಿಸಿದರೆ ನ್ಯಾಯಾಧೀಶರೇ ಮುಂದಿನ ಗುರಿಯಾಗಲಿದ್ದು, ಜೀವಂತವಾಗಿ ಬಿಡುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ಬೆದರಿಕೆ ಹಾಕಿರುವುದಾಗಿ ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ತಾಂತ್ರಿಕ ವ್ಯವಸ್ಥೆ ಬಳಸಿಕೊಂಡು 41000697200 ಸಂಖ್ಯೆಯಿಂದ ಅನಾಮಧೇಯ ಇಂಟರ್ನೆಟ್ ಕರೆ ಮಾಡಿದ್ದಾನೆ. ನ್ಯಾಯಾಂಗ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ (CJM) ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕರೆ ಬಂದ ಸಂಖ್ಯೆಯ ತಾಂತ್ರಿಕ ಮಾಹಿತಿಯನ್ನು ಪತ್ತೆಹಚ್ಚಿ ಆರೋಪಿಯನ್ನು ಗುರುತಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕರೆ ಮೂಲ ಪತ್ತೆಹಚ್ಚುವ ಕಾರ್ಯವನ್ನು ಆರಂಭಿಸಿದ್ದು, ತನಿಖೆ ಮುಂದುವರಿದಿದೆ.

