Home Blog

ಬೆಂಗಳೂರಿನಲ್ಲಿ ಶಾಲಾ ವೇಳಾಪಟ್ಟಿ ಬದಲಾವಣೆ ಸಾಧ್ಯತೆ: ಟ್ರಾಫಿಕ್ ನಿಯಂತ್ರಣಕ್ಕೆ ಸರ್ಕಾರದ ಹೊಸ ಚಿಂತನೆ!

0

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಶಾಲಾ ವಾಹನಗಳು ಹಾಗೂ ಕಚೇರಿ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗೆ ಇಳಿಯುವುದರಿಂದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಶಾಲೆಗಳ ಸಮಯವನ್ನು ಬದಲಾಯಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜನಿಕರಿಂದ ಸರ್ಕಾರಕ್ಕೆ ಮನವಿಗಳು ಬಂದಿವೆ.

ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಶಾಲಾ ಸಮಯ ಬದಲಾವಣೆ ಮಾಡುವ ಮುನ್ನ ಎಲ್ಲಾ ಭಾಗಿದಾರರ ಅಭಿಪ್ರಾಯಗಳನ್ನು ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಪೋಷಕರು, ಶಾಲಾ ಆಡಳಿತ ಮಂಡಳಿಗಳ ಜೊತೆ ಚರ್ಚೆ:

ಶಾಲಾ ಸಮಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವಿವಿಧ ಇಲಾಖೆಗಳು, ಸಂಚಾರ ಪೊಲೀಸ್ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಾಲಾ ವಾಹನ ಚಾಲಕರ ಸಂಘ ಹಾಗೂ ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದೆ.

ಎಲ್ಲಾ ಭಾಗಿದಾರರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕವೇ ಶಾಲಾ ಸಮಯ ಬದಲಾವಣೆ ಕುರಿತು ಸೂಕ್ತ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬೆಳಗ್ಗೆ ಕಚೇರಿ ಮತ್ತು ಶಾಲಾ ಸಮಯ ಒಂದೇ ಆಗಿರುವುದರಿಂದ ಒಂದೇ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಇದರಿಂದ ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಹೀಗಾಗಿ ಶಾಲಾ ಸಮಯವನ್ನು ಸುಮಾರು 30 ನಿಮಿಷದಿಂದ ಒಂದು ಗಂಟೆಯವರೆಗೆ ಮುಂಚಿತವಾಗಿ ಅಥವಾ ಬೇರೆ ಸಮಯಕ್ಕೆ ಬದಲಾಯಿಸುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆ ಮೇಲಿನ ವಾಹನಗಳ ಒತ್ತಡವೂ ಕಡಿಮೆಯಾಗಬಹುದು ಎಂಬುದು ಇಲಾಖೆಯ ಲೆಕ್ಕಾಚಾರವಾಗಿದೆ.

ಈ ಹಿಂದೆ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಶಾಲಾ ಹಾಗೂ ಕಚೇರಿ ವೇಳಾಪಟ್ಟಿಯಲ್ಲಿ ಸೂಕ್ತ ಬದಲಾವಣೆ ಮಾಡುವಂತೆ ಉಚ್ಚ ನ್ಯಾಯಾಲಯವೂ ಸರ್ಕಾರಕ್ಕೆ ಸಲಹೆ ನೀಡಿತ್ತು.

ಇದೀಗ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶಾಲಾ ಸಮಯ ಬದಲಾವಣೆಯ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹಾಸನದಲ್ಲಿ ಭೀಕರ ಅಪಘಾತ: ಸ್ಕೂಟಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಗೃಹಿಣಿ ದಾರುಣ ಸಾವು!

0

ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹಾಸನ ನಗರದ ಎನ್.ಆರ್. ವೃತ್ತದಲ್ಲಿ ನಡೆದಿದೆ.

ಅಪರ್ಣಾ ಡಿ.ಜೆ. ಎಂಬ 31 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದ ಅಪರ್ಣಾ ಬೆಂಗಳೂರಿನಲ್ಲಿ ಪತಿ ಯೋಗೀಶ್ ಜೊತೆ ವಾಸವಾಗಿದ್ದರು. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ತವರು ಮನೆಗೆ ಬಂದಿದ್ದರು.

ನಿನ್ನೆ ಆಸ್ಪತ್ರೆಗೆಂದು ಸ್ನೇಹಿತೆ ರಕ್ಷಿತಾ ಜೊತೆ ಸ್ಕೂಟಿಯಲ್ಲಿ ಹಾಸನ ನಗರಕ್ಕೆ ಬಂದಿದ್ದರು. ಆಸ್ಪತ್ರೆ ಕೆಲಸ ಮುಗಿಸಿ ಊರಿಗೆ ವಾಪಸ್ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಅಪರ್ಣಾ ಹಾಗೂ ರಕ್ಷಿತಾ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅಪರ್ಣಾ ಬಸ್‌ನ ಚಕ್ರಕ್ಕೆ ಸಿಲುಕಿದ್ದು, ಸ್ವಲ್ಪ ದೂರದವರೆಗೆ ಎಳೆದೊಯ್ಯಲಾಗಿದೆ. ಕೂಡಲೇ ಆಟೋ ಚಾಲಕ ಕುಮಾರ್ ಅವರು ಅಪರ್ಣಾರನ್ನು ಬಸ್ ಚಕ್ರದಿಂದ ಹೊರತೆಗೆದು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅಪರ್ಣಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಬಸ್ ಚಾಲಕ ಬ್ರೇಕ್ ಹಿಡಿಯಲಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ಅಪರ್ಣಾ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದೇ ವೇಳೆ ಅಪಘಾತದ ಸಂದರ್ಭದಲ್ಲಿ ಅಪರ್ಣಾ ಧರಿಸಿದ್ದ ಎರಡು ಎಳೆ ಚಿನ್ನದ ಮಾಂಗಲ್ಯ ಸರ ಕಳುವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದೂ ಮಹಾ ಗಣಪತಿಗೆ 12 ಲಕ್ಷ ರೂ. ಮೌಲ್ಯದ 5 ಕೆಜಿ ಬೆಳ್ಳಿ ಕಿರೀಟ, ಆಯುಧ ಉಡುಗೊರೆ!

0

ಚಿಕ್ಕಮಗಳೂರು: ಈ ಬಾರಿ ಚಿಕ್ಕಮಗಳೂರು ನಗರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವವನ್ನು ಹಿಂದೆಂದಿಗಿಂತಲೂ ಅದ್ದೂರಿಯಾಗಿ ಆಚರಿಸಲು ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಅಷ್ಟಕ್ಕೂ ಈ ಬಾರಿ ಗಣಪತಿಗೆ ಭಕ್ತರು ವಿಶೇಷ ಉಡುಗೊರೆಯನ್ನೇ ನೀಡಿದ್ದಾರೆ. ಬರೋಬ್ಬರಿ 12 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ 5 ಕೆಜಿ ಬೆಳ್ಳಿ ಕಿರೀಟ ಹಾಗೂ ಆಯುಧಗಳನ್ನು ಮಾಡಿಸಿಕೊಡಲಾಗಿದೆ.

ಇದರಲ್ಲಿ 4 ಕೆಜಿ ತೂಕದ ಬೆಳ್ಳಿ ಕಿರೀಟ ಹಾಗೂ ಒಟ್ಟು 1 ಕೆಜಿ ತೂಕದ ಎರಡು ಬೆಳ್ಳಿ ಆಯುಧಗಳಿವೆ. ಈ ಬೆಳ್ಳಿ ಆಭರಣಗಳನ್ನು ಶೃಂಗೇರಿಯಲ್ಲಿ ಪೂಜೆ ಮಾಡಿಸಿ ಚಿಕ್ಕಮಗಳೂರಿಗೆ ತರಲಾಗಿದೆ.

ಕಿರೀಟಕ್ಕೆ ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥ ಶ್ರೀಗಳು ಪೂಜೆ ನೆರವೇರಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಇದೇ ವೇಳೆ ಹಿಂದೂ ಮಹಾ ಗಣಪತಿ ಆಡಳಿತ ಮಂಡಳಿ ಶೃಂಗೇರಿ ಶ್ರೀಗಳಿಗೂ ಉತ್ಸವಕ್ಕೆ ಆಹ್ವಾನ ನೀಡಿದೆ.

ಇನ್ನು ಒಟ್ಟು 11 ದಿನಗಳ ಕಾಲ ನಡೆಯಲಿರುವ ಗಣೇಶೋತ್ಸವದಲ್ಲಿ ವಿಘ್ನೇಶ್ವರನು ಬೆಳ್ಳಿ ಕಿರೀಟ ಹಾಗೂ ಆಯುಧಗಳ ಸಮೇತ ಭಕ್ತರಿಗೆ ದರ್ಶನ ನೀಡಲಿದ್ದಾನೆ.

ಕಳೆದ 12 ವರ್ಷಗಳಿಂದ ಪ್ರತಿ ವರ್ಷವೂ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಿಸುತ್ತಿರುವ ಆಡಳಿತ ಮಂಡಳಿ, ಈ ಬಾರಿಯೂ ಮತ್ತಷ್ಟು ವಿಜೃಂಭಣೆಯಿಂದ ಹಬ್ಬ ಆಚರಿಸಲು ಸಿದ್ಧವಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆಗೆ ಆದ್ಯತೆ ನೀಡಿ : ಯು.ಟಿ. ಖಾದರ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ವೈದ್ಯರು ಮತ್ತು ಸಿಬ್ಬಂದಿಯ ಜವಾಬ್ದಾರಿ. ಸಣ್ಣಪುಟ್ಟ ಲೋಪಗಳಿಂದಲೂ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಮ್ಮ ಕೇಂದ್ರವನ್ನು ಸ್ವಂತ ಸಂಸ್ಥೆಯಂತೆ ಭಾವಿಸಿ ಸಮಯಪಾಲನೆಗೆ ಆದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿ ರೋಗಿಗಳಿಗೆ ಧೈರ್ಯ ಮತ್ತು ನಂಬಿಕೆ ಮೂಡುವ ವಾತಾವರಣ ನಿರ್ಮಿಸಬೇಕು. ಪತಿ-ಪತ್ನಿ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ವರ್ಗಾವಣೆ ನಿಯಮಗಳಲ್ಲಿ ಬದಲಾವಣೆ ತರಲಾಗುವುದು. ಉತ್ತಮ ಸೇವೆ ಸಲ್ಲಿಸುವ ವೈದ್ಯರಿಗೆ ಅದೇ ಸ್ಥಳದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಗುತ್ತಿಗೆ ಆಧಾರದಲ್ಲಿ ಮೂರರಿಂದ ಐದು ವರ್ಷ ಸೇವೆ ಸಲ್ಲಿಸಿರುವ ವೈದ್ಯರನ್ನು ಖಾಯಂಗೊಳಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ತಾಲೂಕು ಆಸ್ಪತ್ರೆಗಳ ಡಯಾಲಿಸಿಸ್ ಕೊರತೆ ಶೀಘ್ರ ಪರಿಹರಿಸಲಾಗುವುದು. ಜಿಲ್ಲಾ ಆಸ್ಪತ್ರೆಯ ಸಾಮರ್ಥ್ಯ ವಿಸ್ತರಣೆ ಹಾಗೂ ಹೊಸ ಆಸ್ಪತ್ರೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಗತ್ಯವಿರುವ ರೋಗಿಗಳನ್ನು 108 ಆಂಬುಲೆನ್ಸ್ ಮೂಲಕ 20ರಿಂದ 30 ನಿಮಿಷಗಳಲ್ಲಿ ತಾಲೂಕು ಆಸ್ಪತ್ರೆಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸಾ ಸೌಲಭ್ಯಗಳ ಜತೆಗೆ ಮರಣೋತ್ತರ ಪರೀಕ್ಷೆ ವ್ಯವಸ್ಥೆಯನ್ನೂ ಬಲಪಡಿಸಬೇಕು ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿಕ್ಷಕರಿಗೆ 15 ದಿನಗಳ ಕಠಿಣ ತರಬೇತಿ ನೀಡಲಾಗುವುದು. ಪ್ರತಿಯೊಂದು ಶಾಲೆಯಲ್ಲೂ ಫುಟ್‌ಬಾಲ್, ಕ್ರಿಕೆಟ್, ಹಾಕಿ, ಕಬಡ್ಡಿ, ಖೋ-ಖೋ ತಂಡಗಳನ್ನು ರಚಿಸಿ ಶಾಲೆಯಿಂದ ರಾಜ್ಯ ಮಟ್ಟದವರೆಗೆ ಪ್ರತಿಭೆ ಬೆಳೆಸಬೇಕು. ಬ್ಯಾಂಡ್, ಪಥಸಂಚಲನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಉತ್ತೇಜನ ನೀಡಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಮೂಲಕ ಮಕ್ಕಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಬೇಕು ಎಂದರು.

ಸಭೆಯಲ್ಲಿ ಶಾಸಕರಾದ ವಿನಯ ಕುಲಕರ್ಣಿ, ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಅಪರ ಜಿಲ್ಲಾಧಿಕಾರಿ ಗೀತಾ, ಜಿಪಂ ಸಿಇಒ ಭುವನೇಶ್ ಪಾಟೀಲ, ಪೂರ್ಣಿಮಾ ಚೂರಿ ಸೇರಿದಂತೆ ಅಧಿಕಾರಿಗಳು, ವೈದ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸರ್ಕಾರಿ ಆಸ್ಪತ್ರೆಗಳು ಜನರ ನಂಬಿಕೆಯ ಕೇಂದ್ರಗಳಾಗಬೇಕು. ಪ್ರತಿಯೊಬ್ಬ ರೋಗಿಗೂ ಗೌರವ, ಗುಣಮಟ್ಟದ ಚಿಕಿತ್ಸೆ ಮತ್ತು ವಿಶ್ವಾಸದ ವಾತಾವರಣ ದೊರೆಯುವಂತೆ ವೈದ್ಯರು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

— ಯು.ಟಿ. ಖಾದರ್ ಫರೀದ್, ಸಚಿವ

50 ವರ್ಷ ಅಧಿಕಾರದಲ್ಲಿದ್ದರೂ ಅಭಿವೃದ್ಧಿ ಏಕೆ ಆಗಿಲ್ಲ: ಎಚ್.ಕೆ. ಪಾಟೀಲ ವಿರುದ್ಧ ರಾಜು ಕುರುಡಗಿ ವಾಗ್ದಾಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ಐದು ದಶಕಗಳಿಂದ ರಾಜಕೀಯದಲ್ಲಿರುವ ಎಚ್.ಕೆ. ಪಾಟೀಲರು ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಇದು ಗದಗ ಜನತೆಗೆ ಮಾಡುತ್ತಿರುವ ಘೋರ ಅನ್ಯಾಯ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗದಗ-ಬೆಟಗೇರಿ ನಗರಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ವಾರಕ್ಕೊಮ್ಮೆ ಅಥವಾ ಹತ್ತು ದಿನಗಳಿಗೊಮ್ಮೆ ನೀರು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ನಗರದ ಪ್ರಮುಖ ಹಾಗೂ ಆಂತರಿಕ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಧೂಳು ಮತ್ತು ಕಳಪೆ ಮೂಲಸೌಕರ್ಯದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಗದಗ-ಬೆಟಗೇರಿ ಪ್ರದೇಶದ ನೇಕಾರರು ಹಾಗೂ ಕೈಮಗ್ಗ ಕಾರ್ಮಿಕರ ಸಮಸ್ಯೆಗಳೂ ಬಗೆಹರಿದಿಲ್ಲ. ಉದ್ಯೋಗಾವಕಾಶಗಳ ಕೊರತೆಯಿಂದ ಯುವಜನರು ಮತ್ತು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಅಭಿವೃದ್ಧಿ ಮತ್ತು ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕೋರಿ ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ರಾಜು ಕುರುಡಗಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಡಜನರ ಸೇವೆಗಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಸೇವೆ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ವಾಸಣ್ಣ ಕುರಡಗಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ : ಗುರುನಾಥ ದಾನಪ್ಪನವರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಾಂಗ್ರೆಸ್ ಪಕ್ಷದ ನೂತನ ಗದಗ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕ ವಾಸಣ್ಣ ಕುರಡಗಿ ಅವರು ಸುದೀರ್ಘ ರಾಜಕೀಯ ಅನುಭವ ಹಾಗೂ ಉತ್ತಮ ಸಂಘಟನಾ ಸಾಮರ್ಥ್ಯ ಹೊಂದಿದ್ದಾರೆ ಎಂದು ಶಿರಹಟ್ಟಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಗುರುನಾಥ ದಾನಪ್ಪನವರ ಹೇಳಿದರು.

ಗದಗ ಪ್ರವಾಸಿ ಮಂದಿರದಲ್ಲಿ ವಾಸಣ್ಣ ಕುರಡಗಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಹಲವು ವರ್ಷಗಳಿಂದ ಸಂಘಟನೆಗೆ ಕೊಡುಗೆ ನೀಡಿರುವ ವಾಸಣ್ಣ ಅವರು ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಬೆರೆಯುವ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದ್ದು, ಅವರ ಅನುಭವ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಬಲ ನೀಡಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಫಕೀರೇಶ ಮ್ಯಾಟಣ್ಣವರ, ತಿಪ್ಪಣ್ಣ ಸಂಶಿ, ರಾಜಣ್ಣ ಮಡಿವಾಳರ, ಫಕೀರೇಶ ನಡವಿನಕೇರಿ, ಜಗದೀಶ ಹುಲಿಗೆಮ್ಮನವರ, ಪವನ ಈಳಗೇರ, ಮಾರ್ತಾಂಡಪ್ಪ, ಹನಮಂತ ದೊಡ್ಡಮನಿ, ಕರಿಯಪ್ಪ ಸಾಂದ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೆ. 14ಕ್ಕೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ ವೃತ್ತದಲ್ಲಿ ಸುದರ್ಶನ ಯುವ ಮಂಡಳ ವತಿಯಿಂದ ಸೆ. 14ರಂದು ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗುವುದು. ಸೆ. 16ರಂದು ನಡೆಯುವ ರಸಮಂಜರಿ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಪಾಲ್ಗೊಳ್ಳಲಿದ್ದಾರೆ ಎಂದು ಮಂಡಳದ ಗೌರವಾಧ್ಯಕ್ಷ ವಿನಾಯಕ ಮಾನ್ವಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ರೈತರ ಕಲ್ಯಾಣಕ್ಕಾಗಿ ಸಂಕಲ್ಪದೊಂದಿಗೆ ಗಣಪತಿ ಆರಾಧನೆ ಆಯೋಜಿಸಲಾಗಿದೆ. ಸೆ. 14ರಂದು ಸಂಜೆ 6ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಸೆ. 16ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಿಜೆ ಇರಲಿದೆ ಎಂದರು.

ಗಣೇಶೋತ್ಸವದ ಅಂಗವಾಗಿ ಸೆ. 19ರಂದು ಗಣಹೋಮ, ಸೆ. 20ರಂದು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ, ಸೆ. 21ರಂದು ರುದ್ರಪಠಣ, ಸೆ. 22ರಂದು ಮಕ್ಕಳಿಗಾಗಿ ವಿವಿಧ ಆಟ ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸೆ. 23ರಂದು ಧರ್ಮಸಭೆ ನಡೆಯಲಿದ್ದು, ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲಿದ್ದಾರೆ. ಸೆ. 24ರಂದು ಲಲಿತಾ ಸಹಸ್ರನಾಮ ಪಠಣ, ಸೆ. 25ರಂದು ರಂಗೋಲಿ ಸ್ಪರ್ಧೆ ಹಾಗೂ ಸೆ. 26ರಂದು ವಿಶೇಷ ರಂಗೋಲಿ ಕಾರ್ಯಕ್ರಮ ನಡೆಯಲಿದೆ.

ಸೆ. 30ರಂದು ಅನ್ನಸಂತರ್ಪಣೆ, ರಕ್ತದಾನ ಶಿಬಿರ, ಲಕ್ಷದೀಪೋತ್ಸವ ಹಾಗೂ ಕುಂಕುಮಾರ್ಚನೆ ನಡೆಯಲಿವೆ. ಅ. 2ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅ. 3ರಂದು ವಿಶೇಷ ಕಾರ್ಯಕ್ರಮದ ಬಳಿಕ ಅ. 4ರಂದು ಗಣೇಶ ಮೂರ್ತಿ ವಿಸರ್ಜನೆ ನೆರವೇರಲಿದೆ.

ಮಂಡಳದ ಸದಸ್ಯ ರಾಘವೇಂದ್ರ ಹಬೀಬ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಗಣೇಶೋತ್ಸವದ ಅಂಗವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಬಡ ಕುಟುಂಬಗಳ ಮಕ್ಕಳಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸುವ ಕಾರ್ಯಕ್ಕೆ ಈ ಬಾರಿಯೂ ಆದ್ಯತೆ ನೀಡಲಾಗಿದೆ. ಅಗತ್ಯವಿರುವ ಮಕ್ಕಳನ್ನು ಗುರುತಿಸಿ ಚಿಕಿತ್ಸೆ, ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಮಿತಿ ವತಿಯಿಂದ ಕಲ್ಪಿಸಲಾಗುವುದು ಎಂದರು.

ಸೆ. 23ರಂದು ನಡೆಯುವ ಧರ್ಮಸಭೆಯಲ್ಲಿ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಕಾನೂನು ಪಾಲನೆ, ಶಾಂತಿ ಹಾಗೂ ಸೌಹಾರ್ದ ಕಾಪಾಡುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಆಯೋಜಕರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಮಲೇಶ ಜೈನ್, ಶಿವು ಪೂಜಾರ, ವಿಜಯಕುಮಾರ ಹಿರೇಮಠ, ಶಂಕರ ದಹಿಂಡೆ, ಬಸವರಾಜ ಅಳಗವಾಡಿ, ಮಾರುತಿ, ಅಶ್ವಿನಿ ಸೇರಿದಂತೆ ಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೆ. 15ಕ್ಕೆ ಅಭಿಯಂತರರ ದಿನಾಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಜಯಂತಿ ಅಂಗವಾಗಿ ಸೆ. 15ರಂದು ಅಭಿಯಂತರರ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದೆ ಎಂದು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನಿಯೋಜಿತ ಜಿಲ್ಲಾಧ್ಯಕ್ಷ ಮಹಮ್ಮದರಫಿ ನದಾಫ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 15ರಂದು ಬೆಳಗ್ಗೆ 10.30ಕ್ಕೆ ಕಳಸಾಪುರ ರಿಂಗ್‌ರೋಡ್ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟೆಕ್ನಿಕಲ್ ಸೆಂಟರ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ಅಭಿನವ ಶಿವಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎ.ಐ. ನಾಯ್ಕ್, ಅಶೋಕ ರೆಡ್ಡಿ ಕೊಲ್ಲೂರ, ಸುಭಾಷ್ ವಿ. ಗುಗ್ಗರಿ ಅತಿಥಿಗಳಾಗಿ ಭಾಗವಹಿಸಲಿದ್ದು, ಬಸವರಾಜ ಮಲ್ಲಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಘದ ಸದಸ್ಯ ಮಲ್ಲಿಕಾರ್ಜುನ ಐಲಿ ಮಾತನಾಡಿ, ಹೊಸ ವಿಚಾರಗಳು ಹಾಗೂ ತಾಂತ್ರಿಕ ಜ್ಞಾನ ಹಂಚಿಕೊಳ್ಳುವ ಉದ್ದೇಶದಿಂದ ತಾಂತ್ರಿಕ ಕೇಂದ್ರ ನಿರ್ಮಿಸಲಾಗಿದೆ. ಕಟ್ಟಡಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದ್ದು, ನಿರ್ಮಾಣಕ್ಕೆ ಶ್ರಮಿಸಿದವರು ಹಾಗೂ ದಾನಿಗಳನ್ನು ಸನ್ಮಾನಿಸಲಾಗುವುದು. ದೇಣಿಗೆ ನೀಡಿದವರ ಭಾವಚಿತ್ರ ಅನಾವರಣಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜು ಗುಡಸಾಲಿ, ಲೋಹಿತ್ ಶಾವಿ, ಬಸವರಾಜ ಮಲ್ಲಣ್ಣನವರ, ಎಸ್.ಎಸ್. ಚವಡಿ, ಝಡ್.ಎಂ. ಗುಲಗುಂದಿ, ಅಕ್ಷಯ್ ಗಾಳಪ್ಪನವರ, ರವಿ ಗಂಜಿ, ಪ್ರಕಾಶ್ ಆಸಂಗಿ, ನರೇಂದ್ರ ಚಿಕ್ಕನಗೌಡ್ರ, ಆರ್.ಎಫ್. ಡಾಲಾಯತ್ ಉಪಸ್ಥಿತರಿದ್ದರು.

ಪ್ರತಿಮೆ ಅನಾವರಣ

ಅಭಿಯಂತರರ ದಿನಾಚರಣೆ ಅಂಗವಾಗಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆ ಅನಾವರಣಗೊಳ್ಳಲಿದೆ. ಪ್ರತಿಮೆ ನಿರ್ಮಾಣಕ್ಕೆ ರಾಜು ಕೆ. ಗುಡಸಾಲಿ, ಜಿಶಾನ್ ಎಂ. ಗುಳಗುಂದಿ ಹಾಗೂ ಸುಧಾಕರ ಎನ್. ಮಾದಗುಂಡಿ ಶ್ರಮಿಸಿದ್ದಾರೆ.

ಬರ ಘೋಷಣೆಗೆ ನರಗುಂದ ಸ್ತಬ್ಧ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ನರಗುಂದವನ್ನು ಕೈಬಿಟ್ಟ ಸರ್ಕಾರದ ವಿರುದ್ಧ ಅನ್ನದಾತರು ರೊಚ್ಚಿಗೆದ್ದಿದ್ದು, ಬರ ಘೋಷಣೆಗೆ ಆಗ್ರಹಿಸಿ ಶನಿವಾರ ಕರೆ ನೀಡಿದ್ದ ಬಂದ್‌ಗೆ ಪಟ್ಟಣ ಸಂಪೂರ್ಣ ಸ್ತಬ್ಧವಾಯಿತು.

ಮಹಾದಾಯಿಗಾಗಿ ಮಹಾವೇದಿಕೆ ಹಾಗೂ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಬೆಂಬಲ ನೀಡಿದರು.

ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ರೈತರು ಬೃಹತ್ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಂದ್‌ನ ಬಿಸಿ ಸಾರಿಗೆ ವ್ಯವಸ್ಥೆಗೂ ತಟ್ಟಿದ್ದು, ಸರ್ಕಾರಿ ಬಸ್‌ಗಳು ರಸ್ತೆಗಿಳಿಯದ ಕಾರಣ ಬಸ್ ನಿಲ್ದಾಣ ಭಣಗುಡುತ್ತಿತ್ತು. ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡಿದರು.

ಗದಗ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಗಜೇಂದ್ರಗಡವನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದ್ದು, ನರಗುಂದ, ಗದಗ, ಮುಂಡರಗಿ, ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ರೋಣ ತಾಲೂಕುಗಳನ್ನು ಕೈಬಿಡಲಾಗಿದೆ. ಮಳೆ ಮಾಪನ ಕೇಂದ್ರಗಳ ವರದಿ ಆಧರಿಸಿ ನರಗುಂದವನ್ನು ಬರಪಟ್ಟಿಯಿಂದ ಹೊರಗಿಡಲಾಗಿದೆ ಎಂದು ರೈತರು ಆರೋಪಿಸಿದರು.

ಮಳೆ ಇಲ್ಲದಿದ್ದರೂ ತಪ್ಪು ಮಳೆ ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ತಕ್ಷಣ ನರಗುಂದವನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಗದಗ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೂ ಪರಿಹಾರ ನೀಡುವಂತೆ ಒತ್ತಾಯಿಸಿದರು.

ನರಗುಂದದ ರೈತರು ಬರದಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ವಾಸ್ತವ ಸ್ಥಿತಿಯನ್ನು ಅರಿತು ಸರ್ಕಾರ ಕೂಡಲೇ ಬರ ಘೋಷಿಸಿ ಪರಿಹಾರ ನೀಡಬೇಕು. ಇಲ್ಲವಾದರೆ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು.

— ಶಂಕರಣ್ಣ ಅಂಬಲಿ, ರೈತ ಮುಖಂಡ

ಮೂರು ದಿನದಲ್ಲಿ ಮನೆ ಹಕ್ಕುಪತ್ರ ನೀಡಿ: ಶಾಸಕ ಡಾ. ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಜನತಾ ದರ್ಶನದ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನವನ್ನೂ ಯಶಸ್ವಿಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗದಗ-ಬೆಟಗೇರಿ ಪಾಲಾ-ಬಾದಾಮಿ ರಸ್ತೆಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯದ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಇಲಾಖೆಯಿಂದ ‘ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿ ಸಹಕಾರ’ ಆಶಯದಡಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಅಭಿಯಾನ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಬಳಿಗೆ ತೆರಳಿ ಸಮಸ್ಯೆ ಆಲಿಸುವುದು, ಅರ್ಜಿ ಸ್ವೀಕರಿಸಿ ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವುದು ಅಭಿಯಾನದ ಉದ್ದೇಶ. ಜನರು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸ್ವೀಕರಿಸಿದ ಅರ್ಜಿಗಳ ವಾಸ್ತವಾಂಶ ಪರಿಶೀಲಿಸಿ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.

ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಮಧ್ಯಾಹ್ನ 12 ಗಂಟೆಯೊಳಗೆ 205 ಹಾಗೂ ನಂತರ ಸೇರಿದಂತೆ ಒಟ್ಟು 445 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 380 ಅರ್ಜಿಗಳು ಮನೆಗಾಗಿ ಸಲ್ಲಿಕೆಯಾಗಿರುವುದು ಗಮನಾರ್ಹ. ಅರ್ಹ ಕುಟುಂಬಗಳಿಗೆ ವಿವಿಧ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮನೆಗಾಗಿ ಬಂದ 380 ಅರ್ಜಿಗಳನ್ನು ವಿಳಂಬವಿಲ್ಲದೆ ಪರಿಶೀಲಿಸಿ, ಅರ್ಜಿದಾರರ ಅರ್ಹತೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಮೂರು ದಿನಗಳೊಳಗಾಗಿ ಕಾನೂನುಬದ್ಧವಾಗಿ ಹಕ್ಕುಪತ್ರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಮನೆ ಹಾಗೂ ಹಕ್ಕುಪತ್ರಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಕ್ರಮಗಳ ಕುರಿತು ಸಾರ್ವಜನಿಕರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಜಾ ಸೇವಾ ಅಭಿಯಾನ ಕೇವಲ ಅರ್ಜಿ ಸ್ವೀಕರಿಸುವ ಕಾರ್ಯಕ್ರಮವಾಗಬಾರದು. ಅರ್ಹರಿಗೆ ಸರ್ಕಾರದ ಸೇವೆ ತಲುಪುವವರೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನರು ಮತ್ತು ಅಧಿಕಾರಿಗಳ ಸಹಕಾರದಿಂದಲೇ ಅಭಿಯಾನ ಯಶಸ್ವಿಯಾಗಲಿದೆ.

— ಡಾ. ಎಚ್.ಕೆ. ಪಾಟೀಲ, ಶಾಸಕ

ಜನತಾ ದರ್ಶನ ಮಾದರಿಯಲ್ಲಿ ಕಾರ್ಯ

ಜಿಲ್ಲೆಯಲ್ಲಿ ನಾಲ್ಕು ಬಾರಿ ನಡೆದ ಜನತಾ ದರ್ಶನಗಳಲ್ಲಿ 2,987ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಬಹುತೇಕ ಅರ್ಜಿಗಳು ವಿಲೇವಾರಿಯಾಗಿವೆ. ಸದ್ಯ 147 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ ಎಂದು ಶಾಸಕ ಎಚ್.ಕೆ. ಪಾಟೀಲ ತಿಳಿಸಿದರು. ಇದೇ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನದಲ್ಲೂ ಅರ್ಜಿಗಳ ವಿಲೇವಾರಿ ಮಾತ್ರವಲ್ಲದೆ, ಅರ್ಜಿದಾರರಿಗೆ ಮಾಹಿತಿ ನೀಡುವ ಹಾಗೂ ಸೇವೆ ದೊರೆಯುವವರೆಗೆ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಿದರು.