Home Blog

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೊಂದು ಬೆಳವಣಿಗೆ; ದರ್ಶನ್ ಖುದ್ದು ಹಾಜರಿಗೆ ವಕೀಲರ ಅರ್ಜಿ

0

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮುಂದುವರಿದಿದೆ.

ಪ್ರಕರಣದ ವಿಚಾರಣೆ ವೇಳೆ ಕಳೆದ ಕೆಲ ದಿನಗಳಿಂದ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಆಗಸ್ಟ್ 12ರಂದು ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಪರ ವಕೀಲರು ಮಹತ್ವದ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸಾಕ್ಷಿಯೊಬ್ಬರ ಪಾಟಿ ಸವಾಲು ಆಗಸ್ಟ್ 12ರಂದು ನಡೆಯಬೇಕಿತ್ತು. ಈ ಸಂದರ್ಭದಲ್ಲಿ ದರ್ಶನ್ ಅವರು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಿರಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಇದುವರೆಗೆ ದರ್ಶನ್ ಸೇರಿದಂತೆ ಕೆಲವು ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುತ್ತಿದ್ದರು. ಆದರೆ ಸಾಕ್ಷಿಯ ಪಾಟಿ ಸವಾಲಿನ ವೇಳೆ ದರ್ಶನ್ ಅವರಿಂದ ಕೆಲವು ಮಾಹಿತಿಗಳನ್ನು ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರ ಖುದ್ದು ಹಾಜರಿ ಅಗತ್ಯ ಎಂದು ವಕೀಲರು ತಿಳಿಸಿದ್ದಾರೆ.

ದರ್ಶನ್ ಪರ ವಕೀಲರು ಸಿಆರ್‌ಪಿಸಿ ಸೆಕ್ಷನ್ 273ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪಾಟಿ ಸವಾಲು ನಡೆಸುವ ಮುನ್ನ ದರ್ಶನ್ ಅವರೊಂದಿಗೆ ಕೆಲವು ವಿಚಾರಗಳನ್ನು ಚರ್ಚಿಸಿ ಮಾಹಿತಿ ಪಡೆಯಬೇಕಿರುವುದರಿಂದ ಅವರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಇದರ ಕುರಿತು ಆಗಸ್ಟ್ 12ರಂದು ವಾದ ಮಂಡಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಯನ್ನು ಮುಂದೂಡಲಾಗಿದೆ.

ಇದೇ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ದರ್ಶನ್ ಆಪ್ತ ಪ್ರದೋಷ್ ಅವರು ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.

ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆಯನ್ನು ಆದಷ್ಟು ಬೇಗ ದಾಖಲಿಸಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಆದರೆ ದರ್ಶನ್ ಪರ ವಕೀಲರು ಆಗಸ್ಟ್ 18ರವರೆಗೆ ಪ್ರದೋಷ್ ಅವರ ಹೇಳಿಕೆಯನ್ನು ದಾಖಲಿಸದಂತೆ ಮನವಿ ಮಾಡಿದ್ದರು.

ದರ್ಶನ್ ಪರ ವಕೀಲರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಆಗಸ್ಟ್ 18ರವರೆಗೆ ಪ್ರದೋಷ್ ಅವರ ಹೇಳಿಕೆ ಪಡೆಯದಂತೆ ಆದೇಶಿಸಿದೆ. ಹೀಗಾಗಿ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ದರ್ಶನ್ ಹಾಗೂ ಇತರ ಕೆಲವು ಆರೋಪಿಗಳು ಇದುವರೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುತ್ತಿದ್ದರು. ಇದೀಗ ಪ್ರಮುಖ ಸಾಕ್ಷಿಯ ಪಾಟಿ ಸವಾಲಿನ ಸಂದರ್ಭದಲ್ಲಿ ದರ್ಶನ್ ಖುದ್ದು ಹಾಜರಾಗಬೇಕು ಎಂದು ಅವರ ಪರ ವಕೀಲರೇ ಅರ್ಜಿ ಸಲ್ಲಿಸಿರುವುದು ಗಮನ ಸೆಳೆದಿದೆ.

ಇನ್ನು ಪ್ರಕರಣದ 12ನೇ ಆರೋಪಿ ಲಕ್ಷ್ಮಣ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ (ಎಸ್‌ಪಿಪಿ) ನ್ಯಾಯಾಲಯ ಸೂಚಿಸಿದೆ.

ಲಕ್ಷ್ಮಣ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಲಾಗಿದೆ.

ಒಟ್ಟಿನಲ್ಲಿ, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಖುದ್ದು ಹಾಜರಿ ಕುರಿತ ಅರ್ಜಿ, ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿ ಹಾಗೂ ಲಕ್ಷ್ಮಣ್ ಅವರ ಜಾಮೀನು ಅರ್ಜಿ ಸೇರಿದಂತೆ ಹಲವು ವಿಚಾರಗಳು ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆಯಲ್ಲಿ ಮಹತ್ವ ಪಡೆಯಲಿವೆ.

ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು; 3 ಲಕ್ಷ ರೂ. ಮೌಲ್ಯದ ದಾಳಿಂಬೆ ಎಗರಿಸಿದ್ರು!

0

ಚಿಕ್ಕಬಳ್ಳಾಪುರ: ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 3 ಲಕ್ಷ ರೂ. ಮೌಲ್ಯದ ದಾಳಿಂಬೆ ಬೆಳೆಯನ್ನು ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ನಡೆದಿದೆ.

ರೈತ ಮಂಜುನಾಥ್‌ ಅವರ ತೋಟದಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ನೀರಿನ ಕೊರತೆಯ ನಡುವೆಯೂ ಹನಿ ಹನಿ ನೀರುಣಿಸಿ ಬೆಳೆ ಉಳಿಸಿಕೊಂಡಿದ್ದ ರೈತನಿಗೆ ಇದೀಗ ದೊಡ್ಡ ಆಘಾತ ಎದುರಾಗಿದೆ.

ತೋಟದಲ್ಲಿದ್ದ 2ರಿಂದ 3 ಟನ್ ದಾಳಿಂಬೆ ಕಳುವಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಕೆಜಿಗೆ ₹130ರಿಂದ ₹150ರವರೆಗೆ ಬೆಲೆ ಇತ್ತು ಎನ್ನಲಾಗಿದೆ. ಉತ್ತಮ ಬೆಲೆ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಕಳ್ಳರು ದಾಳಿಂಬೆ ಬೆಳೆಯನ್ನು ಗುರಿಯಾಗಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಜುನಾಥ್ ಅವರು ಪತ್ನಿಯ ಚಿನ್ನಾಭರಣಗಳನ್ನು ಅಡವಿಟ್ಟು, ಸಾಲ ಮಾಡಿಕೊಂಡು ಮುಕ್ಕಾಲು ಎಕರೆಯಲ್ಲಿ ದಾಳಿಂಬೆ ಬೆಳೆದಿದ್ದರು. ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ, ಕಷ್ಟಪಟ್ಟು ಬೆಳೆಸಿದ್ದ ಫಸಲು ಕೈಗೆ ಬರುವಷ್ಟರಲ್ಲಿ ಕಳ್ಳರ ಪಾಲಾಗಿದೆ.

ಘಟನೆ ಬಳಿಕ ಸ್ಥಳೀಯ ರೈತರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಕಳ್ಳತನಕ್ಕೆ ಕಡಿವಾಣ ಹಾಕದಿದ್ದರೆ ಮತ್ತಷ್ಟು ರೈತರ ತೋಟಗಳಿಗೂ ಕಳ್ಳರು ಕನ್ನ ಹಾಕುವ ಆತಂಕವಿದೆ ಎಂದು ರೈತರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರು ನಂದಿಗಿರಿಧಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

‘ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಎಲ್ಲಿ ಮಾಯವಾಗಿದ್ದಾರೆ?’: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

0

ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್ ವಿರುದ್ಧ ಪ್ರಶ್ನಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳನ್ನು ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದರು. “ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್” ಎಂದು ಟೀಕಿಸಿದ ಅವರು, ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತ್ರ ಹೋರಾಟ ಮಾಡುವುದು ಕಾಂಗ್ರೆಸ್‌ನ ಸ್ವಭಾವ ಎಂದು ವಾಗ್ದಾಳಿ ನಡೆಸಿದರು.

ನೀಟ್ ಪರೀಕ್ಷೆ ವಿಚಾರದಲ್ಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿದ ಛಲವಾದಿ ನಾರಾಯಣಸ್ವಾಮಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಹೋರಾಟ ನಡೆಸಿ ಬಳಿಕ ನಡೆದ ಬೆಳವಣಿಗೆಗಳನ್ನು ದೇಶವೇ ನೋಡಿದೆ ಎಂದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸುವ ಕಾಂಗ್ರೆಸ್, ಸೋರಿಕೆ ತಡೆಗಟ್ಟುವ ಕ್ರಮಗಳನ್ನೂ ವಿರೋಧಿಸುತ್ತದೆ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ಅವರದ್ದು ದ್ವಿಮುಖ ನೀತಿ ಎಂದು ಟೀಕಿಸಿದರು.

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ತಮಗಾದ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಅಲ್ಲಿನ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ಸರ್ಕಾರ ವಿದ್ಯಾರ್ಥಿಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.

ಯುವಜನರ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲಲಿದೆ. ದೇಶದ ಭದ್ರತೆ ಹಾಗೂ ಸುಭದ್ರತೆಗಾಗಿ ಎಲ್ಲರೂ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

 

ದಕ್ಷಿಣ ಕನ್ನಡದಲ್ಲಿ ಪಶುವೈದ್ಯಕೀಯ ಇಲಾಖೆಗೆ ಸಿಬ್ಬಂದಿ ಕೊರತೆ: 449 ಹುದ್ದೆಗಳಲ್ಲಿ 377 ಖಾಲಿ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಸಿಬ್ಬಂದಿ ಕೊರತೆ ಎದುರಿಸುತ್ತಿದೆ.

ಮಂಜೂರಾಗಿರುವ 449 ಹುದ್ದೆಗಳ ಪೈಕಿ 377 ಹುದ್ದೆಗಳು ಖಾಲಿ ಇದ್ದು, ಕೇವಲ ಶೇ.16ರಷ್ಟು ಹುದ್ದೆಗಳಲ್ಲಷ್ಟೇ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶುವೈದ್ಯಾಧಿಕಾರಿಗಳ 74 ಮಂಜೂರಾತಿ ಹುದ್ದೆಗಳಲ್ಲಿ 44 ಹುದ್ದೆಗಳು ಖಾಲಿ ಇವೆ. ಸಿಬ್ಬಂದಿ ಕೊರತೆಯಿಂದ ಜಿಲ್ಲೆಯ ಸುಮಾರು 10 ಪಶುವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸದ ಸ್ಥಿತಿಗೆ ತಲುಪಿವೆ.

ಜಿಲ್ಲೆಯಲ್ಲಿ ಸುಮಾರು 110 ಪಶುವೈದ್ಯಕೀಯ ಆಸ್ಪತ್ರೆಗಳನ್ನು ನಿರ್ವಹಿಸುವುದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸವಾಲಾಗಿದೆ. ವಿಶೇಷವಾಗಿ ಡಿ ಗ್ರೂಪ್‌ ನೌಕರರ 170 ಹುದ್ದೆಗಳಲ್ಲಿ 168 ಹುದ್ದೆಗಳು ಖಾಲಿ ಇದ್ದು, ಕೇವಲ ಇಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಉಪನಿರ್ದೇಶಕ ಡಾ. ಅರುಣ್‌ ಕುಮಾರ್‌ ಶೆಟ್ಟಿ ಅವರ ಪ್ರಕಾರ, ವೈದ್ಯರು ಹಾಗೂ ಜಾನುವಾರುಗಳ ಪರಿಶೀಲಕರ ಕೊರತೆಯೂ ಇದೆ. ಹೊರಗುತ್ತಿಗೆ ಆಧಾರದ ಮೇಲೆ ವೈದ್ಯರು, ಡಿ ಗ್ರೂಪ್‌ ಸಿಬ್ಬಂದಿ, ಚಾಲಕರು ಹಾಗೂ ದತ್ತಾಂಶ ನಮೂದು ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಇದರ ನಡುವೆ ಜೈಲ್‌ ರಸ್ತೆಯಲ್ಲಿ ₹4.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಉಪನಿರ್ದೇಶಕರ ಕಚೇರಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಇನ್ನೂ ಉದ್ಘಾಟನೆಯಾಗಿಲ್ಲ. ಮತ್ತೊಂದೆಡೆ ಜಿಲ್ಲಾ ಕೇಂದ್ರದ ಕಚೇರಿ 1973ರಲ್ಲಿ ನಿರ್ಮಿಸಲಾದ ಹಳೆಯ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿದೆ.

 

ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಚುನಾವಣೆ ಫಿಕ್ಸ್‌; ಆಗಸ್ಟ್‌ 14ರಂದು ನಡೆಯಲಿದೆ ಮತದಾನ

0

ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಆಗಸ್ಟ್ 14ರಂದು ಸಭಾಪತಿ ಚುನಾವಣೆ ನಡೆಯಲಿದ್ದು, ಈ ಸಂಬಂಧ ಇಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಈಗಾಗಲೇ ಸಲೀಂ ಅಹಮ್ಮದ್ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಇದೇ ವೇಳೆ ಉಪಸಭಾಪತಿ ಸ್ಥಾನಕ್ಕೆ ನಟಿ ಹಾಗೂ ಕಾಂಗ್ರೆಸ್ ನಾಯಕಿ ಉಮಾಶ್ರೀ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವವರೆಗೆ ಪುಟ್ಟಣ್ಣ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಿಸಲಾಗಿದೆ.

ಆ.7ರಂದು ರಾಜೀನಾಮೆ ನೀಡಿದ್ದ ಹೊರಟ್ಟಿ

ಬಸವರಾಜ ಹೊರಟ್ಟಿ ಅವರು ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದರು ಎನ್ನಲಾಗಿದೆ. ಆದರೆ, ಆಗಸ್ಟ್ 7ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ವಿಧಾನಸೌಧದಲ್ಲಿರುವ ಸಭಾಪತಿ ಚೇಂಬರ್‌ಗೆ ತೆರಳಿ ರಾಜೀನಾಮೆ ನೀಡುವಂತೆ ಒತ್ತಡ ಹೇರಿದ್ದರು.

ಇದೇ ವೇಳೆ ಹೊರಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆಯೂ ಚರ್ಚೆ ನಡೆದಿತ್ತು ಎನ್ನಲಾಗಿದೆ. ಸರ್ಕಾರದ ಕಡೆಯಿಂದ ರಾಜೀನಾಮೆ ನೀಡುವಂತೆ ಒತ್ತಡ ಬಂದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಅಂದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಜೀನಾಮೆ ಬಳಿಕ ಹೊರಟ್ಟಿ ಅಸಮಾಧಾನ

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ್ದ ಬಸವರಾಜ ಹೊರಟ್ಟಿ, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದರಿಂದ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು.

ಆಗಸ್ಟ್ 14ರಂದು ರಾಜೀನಾಮೆ ನೀಡಬೇಕೆಂದು ತಾವು ಮೊದಲೇ ತೀರ್ಮಾನಿಸಿದ್ದೆ. ಆದರೆ, ತಮ್ಮ ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಪಡೆಯಲಾಗಿರುವುದು ಸ್ವಲ್ಪ ಬೇಸರ ತಂದಿದೆ ಎಂದು ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹಮ್ಮದ್ ವಿರುದ್ಧ ಪ್ರತಿಪಕ್ಷಗಳು ಯಾರನ್ನು ಕಣಕ್ಕಿಳಿಸಲಿವೆ ಎಂಬುದು ಕುತೂಹಲ ಮೂಡಿಸಿದೆ.

ಸತತ 4 ಶತಕಗಳೊಂದಿಗೆ ರುತುರಾಜ್ ಗಾಯಕ್ವಾಡ್ ಹೆಸರಿನ ದಾಖಲೆ ಮುರಿದ ಇಂಗ್ಲೆಂಡ್ ಬ್ಯಾಟರ್!

0

ಇಂಗ್ಲೆಂಡ್: ಇಂಗ್ಲೆಂಡ್‌ನ ದೇಶೀಯ ಕ್ರಿಕೆಟ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ವೋರ್ಸೆಸ್ಟರ್‌ಶೈರ್ ತಂಡದ ನಾಯಕ ಜೇಕ್ ಲಿಬ್ಬಿ ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಮೆಟ್ರೋ ಬ್ಯಾಂಕ್ ಒನ್-ಡೇ ಕಪ್ ಟೂರ್ನಿಯಲ್ಲಿ ವೋರ್ಸೆಸ್ಟರ್‌ಶೈರ್ ಪರ ಕಣಕ್ಕಿಳಿದಿರುವ ಜೇಕ್ ಲಿಬ್ಬಿ ಸತತ ನಾಲ್ಕು ಪಂದ್ಯಗಳಲ್ಲಿ ನಾಲ್ಕು ಶತಕಗಳನ್ನು ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಅದ್ಭುತ ಪ್ರದರ್ಶನದ ಪರಿಣಾಮ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಕನಿಷ್ಠ 50 ಇನಿಂಗ್ಸ್ ಆಡಿರುವ ಬ್ಯಾಟರ್‌ಗಳ ಪೈಕಿ ಅತ್ಯಧಿಕ ಬ್ಯಾಟಿಂಗ್ ಸರಾಸರಿ ಹೊಂದಿರುವ ಆಟಗಾರ ಎಂಬ ಹೊಸ ದಾಖಲೆ ಲಿಬ್ಬಿ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಭಾರತದ ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಅವರ ಹೆಸರಿನಲ್ಲಿತ್ತು. ಲಿಸ್ಟ್-ಎ ಕ್ರಿಕೆಟ್‌ನಲ್ಲಿ 100 ಇನಿಂಗ್ಸ್‌ಗಳನ್ನು ಆಡಿರುವ ಗಾಯಕ್ವಾಡ್ 58.61ರ ಸರಾಸರಿಯಲ್ಲಿ 5,334 ರನ್ ಗಳಿಸಿದ್ದರು.

ಆದರೆ ಸತತ ಶತಕಗಳ ಮೂಲಕ ಅಬ್ಬರಿಸಿರುವ ಜೇಕ್ ಲಿಬ್ಬಿ ಇದೀಗ ಗಾಯಕ್ವಾಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಈವರೆಗೆ 54 ಇನಿಂಗ್ಸ್‌ಗಳನ್ನು ಆಡಿರುವ ಲಿಬ್ಬಿ, 62.46ರ ಅತ್ಯುತ್ತಮ ಬ್ಯಾಟಿಂಗ್ ಸರಾಸರಿಯಲ್ಲಿ ಒಟ್ಟು 2,561 ರನ್‌ಗಳನ್ನು ಕಲೆಹಾಕಿದ್ದಾರೆ.

ಇದರೊಂದಿಗೆ ಕನಿಷ್ಠ 50 ಲಿಸ್ಟ್-ಎ ಇನಿಂಗ್ಸ್‌ಗಳನ್ನು ಆಡಿರುವ ಬ್ಯಾಟರ್‌ಗಳ ಪೈಕಿ ಅತ್ಯಧಿಕ ಬ್ಯಾಟಿಂಗ್ ಸರಾಸರಿ ಹೊಂದಿರುವ ಆಟಗಾರ ಎಂಬ ಹೆಗ್ಗಳಿಕೆಗೆ ಜೇಕ್ ಲಿಬ್ಬಿ ಪಾತ್ರರಾಗಿದ್ದಾರೆ.

ಲಿಬ್ಬಿಯ ಈ ಸಾಧನೆಯ ವಿಶೇಷತೆ ಏನೆಂದರೆ, ಅವರು ವಿಶ್ವ ಕ್ರಿಕೆಟ್‌ನ ದಿಗ್ಗಜ ಬ್ಯಾಟರ್‌ಗಳಾದ ಆಸ್ಟ್ರೇಲಿಯಾದ ಮೈಕಲ್ ಬೆವನ್ ಹಾಗೂ ಭಾರತದ ವಿರಾಟ್ ಕೊಹ್ಲಿಯನ್ನೂ ಹಿಂದಿಕ್ಕಿದ್ದಾರೆ. ಬೆವನ್ 57.86ರ ಸರಾಸರಿಯೊಂದಿಗೆ ಈ ಪಟ್ಟಿಯಲ್ಲಿದ್ದರೆ, ವಿರಾಟ್ ಕೊಹ್ಲಿ 57.80ರ ಸರಾಸರಿ ಹೊಂದಿದ್ದಾರೆ.

ಸತತ ನಾಲ್ಕು ಶತಕಗಳೊಂದಿಗೆ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿರುವ ಜೇಕ್ ಲಿಬ್ಬಿ ಇದೀಗ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಆದರೆ ಇಷ್ಟೊಂದು ಅದ್ಭುತ ದೇಶೀಯ ದಾಖಲೆ ಹೊಂದಿದ್ದರೂ ಲಿಬ್ಬಿ ಇನ್ನೂ ಇಂಗ್ಲೆಂಡ್‌ನ ಏಕದಿನ ತಂಡದಲ್ಲಿ ಸ್ಥಾನ ಪಡೆಯದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದ್ದು ನಿಜ; ಸದ್ಯಕ್ಕೆ ಆಗಿಲ್ಲ, ಮುಂದಿನ ದಿನಗಳಲ್ಲಿ ಪಕ್ಷ ನಿರ್ಧರಿಸಬಹುದು: ಸತೀಶ್ ಜಾರಕಿಹೊಳಿ

0

ಬೆಳಗಾವಿ: ಡಿಸಿಎಂ ಸ್ಥಾನ ನೀಡುವ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚೆ ನಡೆದಿದ್ದು ನಿಜ. ಆದರೆ ಸದ್ಯಕ್ಕೆ ಆ ಸ್ಥಾನ ನೀಡಲಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆಗಾಗಿ ತಾವು ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ಈ ಕುರಿತು ಚರ್ಚೆ ನಡೆದಿತ್ತು. ಆದರೆ ಈ ವಿಚಾರದಲ್ಲಿ ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ. ಪಕ್ಷವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಚಾರಗಳನ್ನು ಹೊರಗಡೆ ಚರ್ಚೆ ಮಾಡುವುದು ಸರಿಯಲ್ಲ. ಹೀಗಾಗಿ ಡಿಸಿಎಂ ಹುದ್ದೆ ಸೇರಿದಂತೆ ಪ್ರಮುಖ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ತಮ್ಮ ಖಾತೆ ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಖಾತೆ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಈ ಬಗ್ಗೆ ಪಕ್ಷವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲದಿರುವ ವಿಚಾರದ ಬಗ್ಗೆಯೂ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲು ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಈ ಸ್ಥಾನವನ್ನು ಭರ್ತಿ ಮಾಡುವ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆದಿದೆ. ಹಿರಿಯ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಲವು ಬಾರಿ ಹೇಳಿದ್ದೇವೆ ಎಂದು ತಿಳಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿರಿಯರಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳುವ ಮೂಲಕ ಅವರ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಬೀಸಿದರು.

ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತ ನೌಕರರಿಗೆ ಉಗ್ರರ ಬೆದರಿಕೆ; ಸುರಕ್ಷತೆಗಾಗಿ ರಜೆ ನೀಡಿ ಸುರಕ್ಷಿತ ತಾಣಗಳಿಗೆ ಸ್ಥಳಾಂತರ

0

ಶ್ರೀನಗರ: ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡಿರುವ ಕಾಶ್ಮೀರಿ ಪಂಡಿತ ನೌಕರರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ. ಆಗಸ್ಟ್ 25ರವರೆಗೆ ನೌಕರರನ್ನು ರಜೆಯಲ್ಲಿರಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ ಹೆಸರಿನಲ್ಲಿ ಬೆದರಿಕೆ ಪತ್ರವೊಂದು ಹರಿದಾಡಿದ್ದು, ಅದರಲ್ಲಿ ಕೆಲವು ಕಾಶ್ಮೀರಿ ಪಂಡಿತ ನೌಕರರ ಹೆಸರುಗಳನ್ನು ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಬೆದರಿಕೆ ಪತ್ರದಲ್ಲಿ ಹೆಸರುಗಳಿರುವ ಎಲ್ಲ ನೌಕರರನ್ನು ಸುರಕ್ಷಿತವಾಗಿ ಜಮ್ಮುವಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ ಪತ್ರದ ಕುರಿತು ತನಿಖೆ ಮುಂದುವರಿದಿದ್ದು, ನೌಕರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಶ್ಮೀರಿ ಪಂಡಿತ ನೌಕರ ಅಮಿತ್ ಕೌಲ್, ಬೆದರಿಕೆ ಬಂದ ಬಳಿಕ ಕೆಲಸಕ್ಕೆ ತೆರಳದಂತೆ ಪೊಲೀಸರು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಣಿವೆಯಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಮ್ಮ ಮನೆಗಳಿಂದ ಹೊರಗೆ ಬರದಂತೆ ಕೂಡ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

6 ಸಾವಿರಕ್ಕೂ ಹೆಚ್ಚು ಪಂಡಿತರಿಗೆ ಸರ್ಕಾರಿ ಉದ್ಯೋಗ

2010ರಲ್ಲಿ ಜಾರಿಗೆ ತರಲಾದ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ಸುಮಾರು 6,000 ಕಾಶ್ಮೀರಿ ಪಂಡಿತರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. 1990ರಲ್ಲಿ ಪ್ರತ್ಯೇಕತಾವಾದಿ ಚಳವಳಿ ತೀವ್ರಗೊಂಡ ಬಳಿಕ ತಮ್ಮ ತಾಯ್ನಾಡಿನಿಂದ ಸ್ಥಳಾಂತರಗೊಂಡಿದ್ದ ಕಾಶ್ಮೀರಿ ಪಂಡಿತರನ್ನು ಮತ್ತೆ ಕಣಿವೆಗೆ ಕರೆತಂದು ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು.

ಆದರೆ, 2022ರಲ್ಲಿ ಭಯೋತ್ಪಾದಕರು ಈ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ದಾಳಿಗಳಲ್ಲಿ ಐವರು ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದರು.

ದಾಳಿಗಳ ಬಳಿಕ ಪಿಎಂ ಉದ್ಯೋಗ ಪ್ಯಾಕೇಜ್‌ನಡಿ ಕೆಲಸ ಮಾಡುತ್ತಿದ್ದ ನೌಕರರು ತಮ್ಮನ್ನು ಜಮ್ಮುವಿಗೆ ವರ್ಗಾಯಿಸುವಂತೆ ಒತ್ತಾಯಿಸಿ ಸುಮಾರು ಏಳು ತಿಂಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೆ, ಸರ್ಕಾರ ನೌಕರರನ್ನು ಜಮ್ಮುವಿನಲ್ಲಿ ನಿಯೋಜಿಸಲು ನಿರಾಕರಿಸಿತ್ತು. ಬಳಿಕ ಶ್ರೀನಗರ ಹಾಗೂ ಕಣಿವೆಯ ಇತರ ಪ್ರಮುಖ ಪಟ್ಟಣಗಳಲ್ಲಿನ ಸುರಕ್ಷಿತ ಸ್ಥಳಗಳಲ್ಲಿ ಅವರನ್ನು ನಿಯೋಜಿಸಲಾಗಿತ್ತು.

ಅನಂತನಾಗ್ ದಾಳಿ ಬಳಿಕ ಭದ್ರತೆ ಹೆಚ್ಚಳ

ಜುಲೈ 22ರಂದು ಅನಂತನಾಗ್‌ನಲ್ಲಿ ನಡೆದ ಇತ್ತೀಚಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಅಲ್ಪಸಂಖ್ಯಾತರು ಹಾಗೂ ಕಾಶ್ಮೀರಿ ಪಂಡಿತ ನೌಕರರು ವಾಸಿಸುವ ಪ್ರದೇಶಗಳಲ್ಲಿ ಭದ್ರತೆ ಮತ್ತು ಪೊಲೀಸ್ ಗಸ್ತು ಹೆಚ್ಚಿಸಲಾಗಿತ್ತು.

ಭದ್ರತಾ ಕಾರ್ಯಾಚರಣೆ ತೀವ್ರಗೊಳಿಸಿದ ಬಳಿಕ ಸುಮಾರು 3,000ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತರನ್ನು ಪೊಲೀಸರು ‘ಓವರ್ ಗ್ರೌಂಡ್ ವರ್ಕರ್ಸ್’ (OGWs) ಎಂದು ಗುರುತಿಸಿದ್ದಾರೆ. ಅಂದರೆ, ಭಯೋತ್ಪಾದಕ ಸಂಘಟನೆಗಳಿಗೆ ರಹಸ್ಯವಾಗಿ ನೆರವು ನೀಡುವವರು ಎಂಬ ಅರ್ಥದಲ್ಲಿ ಈ ಪದವನ್ನು ಬಳಸಲಾಗುತ್ತದೆ.

ಇದೇ ವೇಳೆ, ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸ್ಥಳೀಯ ಯುವಕರ ನೇಮಕಾತಿಯ ಸಂಖ್ಯೆ ಬಹುತೇಕ ಶೂನ್ಯಕ್ಕೆ ತಲುಪಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತ ನೌಕರರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪರಿಸ್ಥಿತಿಯ ಮೇಲೆ ಭದ್ರತಾ ಪಡೆಗಳು ನಿರಂತರ ನಿಗಾ ಇರಿಸಿವೆ.

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ; ಸಿಎಂ ಡಿಕೆ ಶಿವಕುಮಾರ್ʼಗೆ ಬಿಡದಿ ರೈತರ ಮನವಿ

0

ಬೆಂಗಳೂರು: “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ ತಮಗಾಗಿರುವ ಕಷ್ಟ ವಿವರಿಸಿದರು. ತಕ್ಷಣವೇ ಅದನ್ನು ತೆಗೆದು ಹಾಕಿ ಎಂದು ಒತ್ತಾಯಿಸಿದರು. ಯಾರದೋ ರಾಜಕೀಯ ಆಟಕ್ಕೆ ನಾವು ಬಲಿ ಆಗುತ್ತಿದ್ದೇವೆ. ನಾವು ಜಮೀನು ಕೊಡಲು ಸಿದ್ಧ. ತಕ್ಷಣವೇ ಪರಿಹಾರ ಕೊಡಿ ಎಂದು ಮನವಿ ಮಾಡಿದರು. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಸ್ಪಂದಿಸಲಿಲ್ಲ. ನೀವಾದರೂ ನಮ್ಮ ಕಷ್ಟ ಬಗೆಹರಿಸಿ ಎಂದು ಮನವಿ ಮಾಡಿದರು.

ಬೈರಮಂಗಲ ಗ್ರಾಮದ ಸುನೀಲ್ ಎಂಬುವವರು ಮಾತನಾಡಿ, “ಕಳೆದ 20 ವರ್ಷಗಳಿಂದ ನಾವು ರೆಡ್ ಜೋನ್ ನಿಂದ ಸಂಕಷ್ಟ ಅನುಭವಿಸಿದ್ದೇವೆ. ಅಲ್ಲಿ ವೃಷಭಾವತಿ ಕೊಳಚೆ ನೀರಿನಿಂದ ವ್ಯವಸಾಯ ಕಷ್ಟವಾಗಿದೆ. ಅಲ್ಲಿ ಕೆಲವು ಭಾಗದಲ್ಲಿ ತೆಂಗಿನ ತೋಟ ಮೇಲುನೋಟಕ್ಕೆ ಹಸಿರಾಗಿ ಕಾಣಬಹುದು ಆದರೆ, ಇಳುವರಿ ಬರುತ್ತಿಲ್ಲ.

ಕುಡಿಯುವ ಹಾಲು ಕೂಡ ಕಲುಷಿತಗೊಂಡಿದೆ. ರೆಡ್ ಜೋನ್ ಮಾಡಿರುವುದರಿಂದ ಅಭಿವೃದ್ಧಿ ಮಾಡಲು ಆಗುತ್ತಿಲ್ಲ. ಆಸ್ಪತ್ರೆ, ಕಲ್ಯಾಣಮಂಟಪ ನಿರ್ಮಾಣ ಸಾಧ್ಯವಿಲ್ಲ. ನಮ್ಮ ಪಕ್ಕದ ಊರುಗಳಲ್ಲಿ ಬ್ಯಾಂಕ್ ನಲ್ಲಿ ಜಮೀನಿಗೆ 1 ಕೋಟಿವರೆಗೆ ಸಾಲವ ಕೊಟ್ಟರೆ ನಮಗೆ 1ಲಕ್ಷರೂಪಾಯಿ ಕೂಡ ಸಾಲ ಸಿಗುತ್ತಿಲ್ಲ. ನಮಗೆ ಮದುವೆ ಹಾಗೂ ಕಷ್ಟಕಾಲದಲ್ಲಿ ನಮ್ಮ ಜಮೀನು ಮಾರಲು ಆಗುತ್ತಿಲ್ಲ. ಇವೆಲ್ಲವೂ ಅಂದಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರ ಕೊಡುಗೆ. ಹೀಗಾಗಿ ನಮಗೆ ಈ ಸಮಸ್ಯೆಗಳಿಂದ ಮುಕ್ತಿ ದೊರಕಿಸಬೇಕು” ಎಂದು ಮನವಿ ಮಾಡಿದರು.

“ನಮ್ಮಲ್ಲಿ ಕೊಳಚೆ ನೀರಿನ ವಾಸನೆ, ಸೊಳ್ಳೆಗಳ ಕಾಟದಿಂದ ನೆಮ್ಮದಿ ಜೀವನ ನಡೆಸಲು ಆಗುತ್ತಿಲ್ಲ. ನಮಗೆ ಹಣ ಬೇಡ, ನಾವು ಈ ಯೋಜನೆಯಲ್ಲಿ ಅಭಿವೃದ್ಧಿಪಡಿಸಿದ ಭೂಮಿ ಪಡೆದು, ಯೋಜನೆಯ ಪಾಲುದಾರರಾಗುತ್ತೇವೆ” ಎಂದು ತಿಳಿಸಿದರು. “ನಾವು ಜೆಡಿಎಸ್ ಕಾರ್ಯಕರ್ತರೆ, ಅಭಿವೃದ್ಧಿ ಮೊದಲು, ಪಕ್ಷ ಆಮೇಲೆ. ನಮಗೆ ಟೌನ್ ಶಿಪ್ ಯೋಜನೆ ಬೇಕು. ಅಲ್ಲಿ ಹೋರಾಟ ಮಾಡುತ್ತಿರುವವರು ಬೇರೆ ಕ್ಷೇತ್ರಗಳಿಂದ ಕರೆ ತಂದಿರುವ ಪಕ್ಷದ ಕಾರ್ಯಕರ್ತರು. ನಮ್ಮಲ್ಲಿ ಬಹುತೇಕ ಜನರು ಟೌನ್ ಶಿಪ್ ಯೋಜನೆಗೆ ಭೂಮಿ ನೀಡಲು ಸಿದ್ಧರಿದ್ದಾರೆ” ಎಂದು ವಿವರಿಸಿದರು.

ಯಾಲಕ್ಕಿ ಗೌಡ ಎಂಬ ಹಿರಿಯ ನಾಗರಿಕರು ಮಾತನಾಡಿ, “ನನಗೆ 80 ವರ್ಷ, ಕಳೆದ 40 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿದ್ದೆ. ಕಳೆದ 20 ವರ್ಷಗಳಿಂದ ನಮ್ಮ ಭಾಗವನ್ನು ರೆಡ್ ಜೋನ್ ನಿಂದ ಮುಕ್ತಿಗೊಳಿಸಿ ಎಂದು ಮನವಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು ಮನಸ್ಸು ಮಾಡಲಿಲ್ಲ. ಅವರ ಉದ್ದೇಶ ನಮಗೆ ತಿಳಿಯುತ್ತಿಲ್ಲ. ನಮ್ಮಲ್ಲಿ ಕೇವಲ 1 ಲಕ್ಷಕ್ಕೆ ಜಮೀನು ಕಳೆದುಕೊಂಡವರನ್ನು ನೋಡಿದ್ದೇನೆ. ಎಲ್ಲರ ಬದುಕು ಅದ್ವಾನ ಆಗೋಗಿದೆ. ಈಗ ಈ ಪುಣ್ಯಾತ್ಮ ಡಿ.ಕೆ. ಶಿವಕುಮಾರ್ ಅವರ ಸರ್ಕಾರ ಎಲ್ಲವನ್ನೂ ಸರಿ ಮಾಡಲು ಮುಂದಾಗಿದೆ. ಈಗ ಇವರು ಇಲ್ಲದ ಕಾರಣ ಹುಡುಕಿ, ಕೆದಕಿ ತಕರಾರು ಮಾಡುತ್ತಿದ್ದಾರೆ. ಅವರು ಗೌಡರೇ, ಇವರೂ ಗೌಡರೇ, ನಾವು ಗೌಡರೇ ಆದರೆ ಕುಮಾರಣ್ಣನಿಗೆ ಎಲ್ಲರೂ ಚೆನ್ನಾಗಿರಬೇಕು ಎಂಬ ಆಸೆ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಈ ವಿಚಾರದಲ್ಲಿ ಚರ್ಚೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ವಿಧಾನಸೌಧಕ್ಕೆ ಕರೆದರು. ಅಲ್ಲಿ ಚರ್ಚೆಗೆ ಹೋಗದೇ ಕುಮಾರಸ್ವಾಮಿ ಅವರು ಸಿಎಂ ಶಿವಕುಮಾರ್ ಅವರನ್ನು ಬೈರಮಂಗಲಕ್ಕೆ ಕರೆದರು. ಅಲ್ಲಿ ಪರ ಇರೋರು ವಿರೋಧ ಇರೋರು, ಹೊಡೆದಾಡಿಕೊಂಡರೆ ಗೋಲಿಬಾರ್ ಮಾಡುವ ಪಿತೂರಿ ಇದರ ಹಿಂದೆ ಇತ್ತು. ಇದನ್ನು ಅರಿತು ನಾವು ಸಿಎಂ ಅವರಿಗೆ ದಯಮಾಡಿ ನೀವು ಚರ್ಚೆಗೆ ಬರಬೇಡಿ ಎಂದು ಮನವಿ ಮಾಡಿಕೊಂಡೆವು” ಎಂದು ತಿಳಿಸಿದರು.

ಯುವ ರೈತ ಹರೀಶ್ ರೆಡ್ಡಿ ಅವರು” ರೈತರ ಹಿತ ಕಾಪಾಡುವ ದೊಡ್ಡ ಮನಸ್ಸು ಕುಮಾರಸ್ವಾಮಿ ಅವರಿಗಿದ್ದಿದ್ದರೆ ರೆಡ್ ಜೋನ್ ಮಾಡುತ್ತಿರಲಿಲ್ಲ. ರೆಡ್ ಜೋನ್ ಅನ್ನು ತೆಗೆದು ಬಿಡಿ ಎಂದು ನಾವೆಲ್ಲಾ ಅವರ ಮನೆಗೆ ಹೋಗಿ ಎಲ್ಲ ರೀತಿಯಲ್ಲೂ ಮನವಿಮಾಡಿದರೂ ನಮ್ಮ ಮಾತಿಗೆ ಕಿಮ್ಮತ್ತು ನೀಡಲಿಲ್ಲ. ಬಿಡಿದಿ ಟೌನ್ ಶಿಪ್ ನನ್ನ ಕನಸಿನ ಕೂಸು ಅಂತ ಅವರೇ ಹೇಳಿಕೊಂಡಿದ್ದಾರೆ. ಈಗ ನಮ್ಮ ಪಾಲಿಗೆ ಪಾಪದ ಕೂಸಾಗಿದೆ. ಬೆಂಗಳೂರು ಸುತ್ತಮುತ್ತಲಿನ ಇತರೆ ಎಲ್ಲಾ ಪ್ರದೇಶಗಳನ್ನು ಗಮನಿಸಿ. ಎಲ್ಲವೂ ಶರವೇಗದಲ್ಲಿ ಅಭಿವೃದ್ಧಿಗೊಂಡಿವೆ, ಗೊಳ್ಳುತ್ತಿವೆ. ಆದರೆ, ಬಿಡಿದ ಮಾತ್ರ ಹಿಂದೆ ಬಿದ್ದಿದೆ. ಇವತ್ತು ಆ ಕುಮಾರಸ್ವಾಮಿ ಅವರ ಪಾಪದ ಕೂಸಿಗೆ ಲಾಲಿ ಹಾಡಬೇಕಾದ ಅನಿವಾರ್ಯ ನಮಗೆಲ್ಲ ಬಂದಿರುವುದು ದುರಾದೃಷ್ಟ ಮತ್ತು ದುರಂತ ” ಎಂದು ತಮ್ಮ ಸಂಕಷ್ಟವನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ಅಧಿಕಾರಿಗಳೇ ತಮಗೆ ತೋಚಿದಂತೆ ಸೂಕ್ಷ್ಮ ವಲಯ ನಿರ್ಧರಿಸುವಂತಿಲ್ಲ; ನಿರ್ದಿಷ್ಟ ಪ್ರಸ್ತಾವನೆ ಅಗತ್ಯ ಎಂದ ಹೈಕೋರ್ಟ್‌

0

ಬೆಂಗಳೂರು: ಕಾಳಿ ಹುಲಿ ಸಂರಕ್ಷಿತ ಪ್ರದೇಶ (KTR) ಅಥವಾ ಇತರ ಸಂರಕ್ಷಿತ ಅರಣ್ಯಗಳ ಸುತ್ತ ಯಾವುದೇ ನಿರ್ದಿಷ್ಟ ಪ್ರಸ್ತಾವನೆ ಅಥವಾ ಅಧಿಸೂಚನೆ ಇಲ್ಲದಿದ್ದರೂ, ಸ್ವಯಂಚಾಲಿತವಾಗಿ 10 ಕಿ.ಮೀ ವ್ಯಾಪ್ತಿಯನ್ನು ‘ಪರಿಸರ ಸೂಕ್ಷ್ಮ ವಲಯ’ (ESZ) ಎಂದು ಪರಿಗಣಿಸಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಜೋಯಿಡಾ ತಾಲೂಕಿನ ರಾಮನಗರ ಗ್ರಾಮದಲ್ಲಿ ಜೇಡಿಮಣ್ಣು ಗಣಿಗಾರಿಕೆಗೆ ಅನುಮತಿ ನಿರಾಕರಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಕ್ರಮವನ್ನು ಪ್ರಶ್ನಿಸಿ ಅಭಿಷೇಕ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.

ಯಾವುದೇ ರಾಷ್ಟ್ರೀಯ ಉದ್ಯಾನ ಅಥವಾ ವನ್ಯಜೀವಿ ಧಾಮದ ಸುತ್ತ 10 ಕಿ.ಮೀ ವ್ಯಾಪ್ತಿಯ ‘ಡಿಫಾಲ್ಟ್ ಪರಿಸರ ಸೂಕ್ಷ್ಮ ವಲಯ’ ಅಸ್ತಿತ್ವದಲ್ಲಿದೆ ಹಾಗೂ ಆ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಗಣಿಗಾರಿಕೆ ನಿಷೇಧಿಸಲಾಗಿದೆ ಎಂಬ ಸರ್ಕಾರದ ವಾದವನ್ನು ನ್ಯಾಯಪೀಠ ತಳ್ಳಿಹಾಕಿದೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ESZ ವ್ಯಾಪ್ತಿಯ ಕರಡು ಅಧಿಸೂಚನೆ ಪ್ರಸ್ತಾವನೆ ಸಲ್ಲಿಸಿದೆ. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳು ಹಾಗೂ ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ESZ ವ್ಯಾಪ್ತಿ ಅಂತಿಮಗೊಳ್ಳಬೇಕಿದೆ. ಹೀಗಾಗಿ ಸ್ವಯಂಚಾಲಿತವಾಗಿ 10 ಕಿ.ಮೀ ವ್ಯಾಪ್ತಿಯನ್ನು ESZ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಅಸ್ತಿತ್ವದಲ್ಲಿಲ್ಲದ ESZ ಆಧರಿಸಿ ಅರ್ಜಿ ತಿರಸ್ಕಾರ

ಅಧಿಕಾರಿಗಳು ಕಾನೂನುಬಾಹಿರ ಹಾಗೂ ಅಸ್ತಿತ್ವದಲ್ಲೇ ಇಲ್ಲದ ‘ಡಿಫಾಲ್ಟ್ ESZ’ ಪರಿಕಲ್ಪನೆಯನ್ನು ಆಧರಿಸಿ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ನ್ಯಾಯಪೀಠ ಹೇಳಿದೆ. ಈ ಹಿನ್ನೆಲೆಯಲ್ಲಿ 2023ರ ಜನವರಿ 5ರಂದು ಹೊರಡಿಸಲಾಗಿದ್ದ ನಿರಾಕ್ಷೇಪಣಾ ಪತ್ರ (NOC) ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದೆ.

ಅಲ್ಲದೇ, ಅರ್ಜಿದಾರರು ಸಲ್ಲಿಸಿರುವ ಗಣಿಗಾರಿಕೆ ಗುತ್ತಿಗೆ ಪರವಾನಗಿ ಮನವಿಯನ್ನು ಹೊಸದಾಗಿ ಪರಿಶೀಲಿಸಿ, ಅನ್ವಯವಾಗುವ ನಿಯಮಗಳ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲೇಖ

‘ಗೋವಾ ಫೌಂಡೇಶನ್’ ಮತ್ತು ‘ಟಿ.ಎನ್. ಗೋದಾವರ್ಮನ್’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ESZಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳು ಸಲ್ಲಿಕೆಯಾಗಿರುವ ಅಥವಾ ಅಧಿಸೂಚನೆಗಳು ಜಾರಿಯಲ್ಲಿರುವ ಪ್ರದೇಶಗಳಿಗೆ ಸ್ವಯಂಚಾಲಿತವಾಗಿ 10 ಕಿ.ಮೀ ನಿಯಮ ಅನ್ವಯಿಸುವುದಿಲ್ಲ ಎಂದು ವಿವರಿಸಿದೆ.

ಅದೇ ವೇಳೆ, ದೇಶದಲ್ಲಿರುವ ನಿರ್ದಿಷ್ಟ 21 ರಾಷ್ಟ್ರೀಯ ಉದ್ಯಾನಗಳು ಮತ್ತು ವನ್ಯಜೀವಿ ಧಾಮಗಳಿಗೆ ಮಾತ್ರ ಈ ರೀತಿಯ 10 ಕಿ.ಮೀ ನಿಯಮ ಅನ್ವಯವಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ (ಅಕ್ರಳಿ) ಗ್ರಾಮದ ಸರ್ವೆ ನಂಬರ್ 243/122, ಪ್ಲಾಟ್ ನಂಬರ್ 485ರಲ್ಲಿ ಒಂದು ಎಕರೆ ಜಮೀನಿನಲ್ಲಿ ಜೇಡಿಮಣ್ಣು ಗಣಿಗಾರಿಕೆ ನಡೆಸಲು ಅರ್ಜಿದಾರರು ಅರಣ್ಯ ಉಪ ಸಂರಕ್ಷಣಾಧಿಕಾರಿಗೆ ಗುತ್ತಿಗೆಗಾಗಿ ಮನವಿ ಸಲ್ಲಿಸಿದ್ದರು.

ಆದರೆ, ಗಣಿಗಾರಿಕೆಗೆ ಉದ್ದೇಶಿಸಿದ್ದ ಸ್ಥಳವು ಕಾಳಿ ಸಂರಕ್ಷಿತ ಪ್ರದೇಶದಿಂದ 9.5 ಕಿ.ಮೀ ದೂರದಲ್ಲಿತ್ತು. ಹೀಗಾಗಿ ಅದು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ESZ ವ್ಯಾಪ್ತಿಗೆ ಬರುತ್ತದೆ ಎಂದು ಅಧಿಕಾರಿಗಳು ವಾದಿಸಿದ್ದರು. ಈ ಕಾರಣ ನೀಡಿ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿ, 2023ರ ಜನವರಿ 5ರಂದು NOC ನೀಡಲು ನಿರಾಕರಿಸಲಾಗಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2011ರ ಫೆಬ್ರವರಿ 9ರಂದು ಹೊರಡಿಸಿದ್ದ ಮಾರ್ಗಸೂಚಿಗಳನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದರು. ಅರ್ಜಿದಾರರು ಗಣಿಗಾರಿಕೆಗೆ ಕೋರಿರುವ ಜಮೀನು ಕಾಳಿ ಹುಲಿ ಸಂರಕ್ಷಿತ ಪ್ರದೇಶದ 10 ಕಿ.ಮೀ ವ್ಯಾಪ್ತಿಯಲ್ಲಿರುವುದರಿಂದ ಗಣಿಗಾರಿಕೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ವಾದಿಸಿದ್ದರು.

ಆದರೆ, ಈ ವಾದವನ್ನು ಪರಿಗಣಿಸಿದ ಹೈಕೋರ್ಟ್, ನಿರ್ದಿಷ್ಟ ಅಧಿಸೂಚನೆ ಅಥವಾ ಪ್ರಸ್ತಾವನೆಯಿಲ್ಲದೆ 10 ಕಿ.ಮೀ ವ್ಯಾಪ್ತಿಯನ್ನು ಸ್ವಯಂಚಾಲಿತವಾಗಿ ESZ ಎಂದು ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಅರ್ಜಿದಾರರಿಗೆ ಪರಿಹಾರ ಒದಗಿಸಿದೆ.