Home Blog

ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ಸ್ಪಂದನೆ: ಬೆಂಗಳೂರಲ್ಲಿ ₹18 ಕೋಟಿ ಸಂಗ್ರಹ!

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ 50% ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ನೀಡಿರುವ ಅವಕಾಶಕ್ಕೆ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜೂನ್ 21ರಿಂದ ಆರಂಭವಾದ ಈ ಯೋಜನೆಯಡಿ ಜುಲೈ 4ರವರೆಗೆ ಒಟ್ಟು 6,06,032 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಅವಧಿಯಲ್ಲಿ ವಿವಿಧ ವಿಧಾನಗಳ ಮೂಲಕ ಒಟ್ಟು 18,15,42,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಜುಲೈ 10ರವರೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಪಿಎಸ್‌ಐ ಸೇರಿದಂತೆ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದ್ದು, ದಂಡ ಪಾವತಿಗೆ ಸಹಾಯ ಮಾಡುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸಂಚಾರಿ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ನಡೆಯುತ್ತಿದೆ.

ನಿಯಮ ಉಲ್ಲಂಘನೆಗಳನ್ನು ಕಡಿಮೆ ಮಾಡುವುದರ ಜೊತೆಗೆ ಬಾಕಿ ಇರುವ ದಂಡವನ್ನು ವಸೂಲಿ ಮಾಡುವ ಉದ್ದೇಶದಿಂದ ಈ ವಿಶೇಷ ಅಭಿಯಾನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಮಹಿಳಾ ಅಧಿಕಾರಿ ಸಾವು: ತುಮಕೂರಲ್ಲಿ ಅಹೋರಾತ್ರಿ ಧರಣಿ!

ತುಮಕೂರು: ಕರ್ತವ್ಯದ ಒತ್ತಡ ಹಾಗೂ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರು ನಡೆಸುತ್ತಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದಿದೆ.

ಇತ್ತೀಚೆಗೆ ಜಾರಿಗೆ ಬಂದಿರುವ ಎಸ್‌ಐಆರ್ ಕಾರ್ಯದ ನಿಮಿತ್ತ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ಭುವನಾ ಮೃತಪಟ್ಟಿದ್ದರು. ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೌಕರರು ಪ್ರತಿಭಟನೆ ಮುಂದುವರಿಸಿದ್ದಾರೆ.

ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಇಡೀ ರಾತ್ರಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ತಡರಾತ್ರಿ ಸುಮಾರು 11:15ರ ಸುಮಾರಿಗೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದರೂ ಸಂಧಾನ ಯಶಸ್ವಿಯಾಗಿಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಂದಾಯ ನೌಕರರ ಸಂಘ ಪಟ್ಟು ಹಿಡಿದಿದೆ.

ಇಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ನೌಕರರ ಆರೋಪದ ಪ್ರಕಾರ, ತುಮಕೂರು ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭುವನಾ ಅವರಿಗೆ ಮೇಲಧಿಕಾರಿಗಳಿಂದ ನಿರಂತರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮುಂಜಾನೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿರಂತರ ಕೆಲಸ ಮಾಡಿಸಲಾಗುತ್ತಿತ್ತು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಅಪಘಾತದ ದಿನವೂ ಮುಂಜಾನೆ 6:30ರೊಳಗೆ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಮೇಲಧಿಕಾರಿಗಳ ಒತ್ತಡದಿಂದ ಗಡಿಬಿಡಿಯಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಗೂಳೂರು ಬಳಿ ಭೀಕರ ಅಪಘಾತ ಸಂಭವಿಸಿ ಭುವನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನೌಕರರು ತಿಳಿಸಿದ್ದಾರೆ.

ಈ ಘಟನೆಗೆ ಡಿಸಿ, ಎಡಿಸಿ, ಎಸಿ ಹಾಗೂ ತಹಶೀಲ್ದಾರ್ ಅವರ ಅತಿಯಾದ ಕೆಲಸದ ಒತ್ತಡವೇ ನೇರ ಕಾರಣ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿಗಳ ವರ್ಗಾವಣೆಗೂ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮಳೆ ಅವಾಂತರ: ಸಕಲೇಶಪುರದಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ ಹಾನಿ

ಹಾಸನ/ಬೆಳಗಾವಿ: ಕರ್ನಾಟಕದ ಹಲವೆಡೆ ಮಳೆ ಮುಂದುವರಿದಿದ್ದು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿವೆ.

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಗಾಳಿ–ಮಳೆಗೆ ದೊಡ್ಡ ತಡೆಗೋಡೆ ಕುಸಿದು ಎರಡು ಮನೆಗಳು ಜಖಂಗೊಂಡಿವೆ. ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮಧು ಮತ್ತು ಅಬ್ದುಲ್ ಮುನಾಫ್ ಅವರ ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಎಲ್ಲರೂ ಸುರಕ್ಷಿತರಾಗಿದ್ದಾರೆ.

ಬೆಳಗಾವಿ ನಗರದಲ್ಲೂ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಸಬಾಗ್‌ನ ಉಪ್ಪಾರ ಗಲ್ಲಿಯಲ್ಲಿ ಬೃಹತ್ ಹುಣಸೆ ಮರ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಮರ ಬೀಳುವ ವೇಳೆ ಮಹಿಳೆಯೊಬ್ಬರು ಹತ್ತಿರದಲ್ಲೇ ಇದ್ದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅನಿಲ್ ಮುಟ್ಕೇಕರ್ ಅವರ ಮನೆಯ ಗೋಡೆ ಕುಸಿದಿದೆ. ಇತರ ಕೆಲವು ಮನೆಗಳಿಗೂ ಹಾನಿಯಾಗಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.

ಇದೇ ವೇಳೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಇರುವ ಡೆಲ್ಟಾ ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಮಳೆ ಹೆಚ್ಚಾದ ಕಾರಣ ಜಲಪಾತಕ್ಕೆ ಜೀವ ಬಂದಿದೆ. ಆದರೆ ಪ್ರವಾಸಿಗರು ಅಪಾಯಕಾರಿಯಾಗಿ ವರ್ತಿಸುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಜಲಪಾತಕ್ಕೆ ಹೋಗುವ ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ಅರಣ್ಯ ಸಿಬ್ಬಂದಿ ಕಾವಲು ನಿಂತಿದ್ದಾರೆ. ನಿಯಮ ಉಲ್ಲಂಘಿಸಿದರೆ ಎಫ್‌ಐಆರ್ ದಾಖಲಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಗದಗದಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ಒತ್ತು: ರಥಗಳ ಮೇಲಿನ ವಿವಾದಿತ ಹೆಸರು ತೆರವಿಗೆ ಜಿಲ್ಲಾಧಿಕಾರಿಗೆ ಮನವಿ!

ಗದಗ: ಗದಗ ನಗರದಲ್ಲಿ ಧಾರ್ಮಿಕ ಸಾಮರಸ್ಯ ಹಾಗೂ ದೇವಾಲಯಗಳ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಸಮಾಜಮುಖಿ ಕಾರ್ಯಕರ್ತ ಪೀರಸಾಬ್ ಎ. ಕೌತಾಳ ಅವರು ಶ್ರೀ ವೀರೇಶ್ವರ ಪುಣ್ಯಾಶ್ರಮ ಮತ್ತು ಗಂಗಾಪುರ ಪೇಟೆಯ ಶ್ರೀ ದುರ್ಗಾದೇವಿ ದೇವಸ್ಥಾನದ ರಥಗಳ ಗಾಲಿಗಳ ಮೇಲೆ ಕೆತ್ತಲಾಗಿರುವ ವಿವಾದಿತ ಹೆಸರನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಶ್ರೀ ವೀರೇಶ್ವರ ಪುಣ್ಯಾಶ್ರಮದ ಪರಮಪೂಜ್ಯ ಡಾ. ಕಲ್ಲಯ್ಯಜ್ಜನವರ ಮೂಲಕ ಹಾಗೂ ಶ್ರೀ ದುರ್ಗಾದೇವಿ ದೇವಸ್ಥಾನದ ಟ್ರಸ್ಟ್ ಮೂಲಕ ಸಲ್ಲಿಸಲಾದ ಮನವಿಯಲ್ಲಿ, ಎರಡೂ ಧಾರ್ಮಿಕ ಸಂಸ್ಥೆಗಳು ಲಕ್ಷಾಂತರ ಭಕ್ತರ ಆರಾಧನಾ ಕೇಂದ್ರಗಳಾಗಿದ್ದು, ಅವುಗಳ ಪಾವಿತ್ರ್ಯ ಮತ್ತು ಘನತೆಯನ್ನು ಕಾಪಾಡುವುದು ಅಗತ್ಯ ಎಂದು ಉಲ್ಲೇಖಿಸಲಾಗಿದೆ.

ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಗುರಿಯಾಗಿಸದೆ, ಧಾರ್ಮಿಕ ಸಂಸ್ಥೆಗಳ ಗೌರವ, ಸರ್ವಧರ್ಮ ಸಮಭಾವ ಹಾಗೂ ಸಾಮಾಜಿಕ ಸೌಹಾರ್ದವನ್ನು ಉಳಿಸುವ ಉದ್ದೇಶದಿಂದ ವಿವಾದಕ್ಕೆ ಕಾರಣವಾಗಿರುವ ಹೆಸರುಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ತೆರವುಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಶ್ರೀ ವೀರೇಶ್ವರ ಪುಣ್ಯಾಶ್ರಮ ಮಠದ ಪೀಠಾಧಿಪತಿಗಳು, ಟ್ರಸ್ಟ್‌ನ ಆಡಳಿತ ಮಂಡಳಿ, ಶ್ರೀ ದುರ್ಗಾದೇವಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೀರಸಾಬ್ ಎ. ಕೌತಾಳ ಮನವಿ ಮಾಡಿದ್ದಾರೆ.

ಧಾರ್ಮಿಕ ವಿಷಯಗಳಲ್ಲಿ ವಿವಾದಕ್ಕಿಂತ ಸಾಮರಸ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕೈಗೊಂಡಿರುವ ಈ ಕ್ರಮ ಸಾರ್ವಜನಿಕರ ಗಮನ ಸೆಳೆದಿದ್ದು, ಧಾರ್ಮಿಕ ಸಂಸ್ಥೆಗಳ ಘನತೆ ಕಾಪಾಡುವ ಪ್ರಯತ್ನವಾಗಿ ಹಲವು ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಆನಂದ ಸಾಲಿಗ್ರಾಮ, ರಮೇಶ್ ಚಲವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಬಗ್ಗೆ ಪೀರಸಾಬ್ ಎ. ಕೌತಾಳ ಮಾತನಾಡಿ, “ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಗುರಿಯಾಗಿಸುವ ಉದ್ದೇಶ ನಮ್ಮದಲ್ಲ. ಶ್ರೀ ವೀರೇಶ್ವರ ಪುಣ್ಯಾಶ್ರಮ ಮಠ ಹಾಗೂ ದುರ್ಗಾದೇವಿ ದೇವಸ್ಥಾನದ ಘನತೆ, ಭಕ್ತರ ಧಾರ್ಮಿಕ ಭಾವನೆ ಮತ್ತು ಸಾಮಾಜಿಕ ಸೌಹಾರ್ದ ಕಾಪಾಡುವ ದೃಷ್ಟಿಯಿಂದ ಮಾತ್ರ ಈ ಮನವಿ ಸಲ್ಲಿಸಿದ್ದೇವೆ,” ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ! BWSSB ಯಿಂದ ಮಹತ್ವದ ಆದೇಶ

ಬೆಂಗಳೂರು: ಮಳೆ ಕೊರತೆಯಿಂದ ನಗರದ ಹಲವು ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂರಕ್ಷಣೆಗೆ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ಬಿಡಬ್ಲ್ಯೂಎಸ್‌ಎಸ್‌ಬಿ ಕಾಯ್ದೆ-1964ರ ಕಲಂ 33 ಮತ್ತು 34ರಡಿ ಮೂರು ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಲಾಗಿದ್ದು, ಜುಲೈ 31ರೊಳಗೆ ಅವುಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚಿಸಲಾಗಿದೆ.

ಹೊಸ ಆದೇಶದ ಪ್ರಕಾರ, ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ತರಬೇತಿ ಪಡೆಯುವ ಕ್ರೀಡಾಪಟುಗಳಿಗಾಗಿ ಬಳಸುವ ಈಜುಕೊಳಗಳಿಗೆ ಮಂಡಳಿಯ ಪೂರ್ವಾನುಮತಿ ಪಡೆದಿದ್ದರೆ ಈ ನಿಯಮ ಅನ್ವಯಿಸುವುದಿಲ್ಲ.

ಇದರ ಜೊತೆಗೆ ವಾಹನ ತೊಳೆಯುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು, ಅಲಂಕಾರಿಕ ಕಾರಂಜಿಗಳು, ಸಿನಿಮಾ ಮಂದಿರಗಳು ಹಾಗೂ ಮಾಲ್‌ಗಳಲ್ಲಿ ಕುಡಿಯುವ ಉದ್ದೇಶವಲ್ಲದ ನೀರಿನ ಬಳಕೆ, ರಸ್ತೆ ನಿರ್ಮಾಣ ಹಾಗೂ ರಸ್ತೆ ಸ್ವಚ್ಛತಾ ಕಾಮಗಾರಿಗಳಿಗೆ ಕುಡಿಯುವ ನೀರನ್ನು ಬಳಸುವುದಕ್ಕೂ ನಿಷೇಧ ಹೇರಲಾಗಿದೆ.

ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಸರ್ಕಾರಿ ಕಟ್ಟಡಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಉದ್ದೇಶಕ್ಕಾಗಿ ಬಳಸುವ ನಳಿಕೆಗಳು ಮತ್ತು ನೀರಿನ ಔಟ್‌ಲೆಟ್‌ಗಳಿಗೆ ಫ್ಲೋ ರಿಸ್ಟ್ರಿಕ್ಟರ್‌ಗಳು ಅಥವಾ ಏರೇಟರ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಮಂಡಳಿ ಸೂಚಿಸಿದೆ.

ನಗರದಲ್ಲಿ ಶಾಶ್ವತ ಹಾಗೂ ತಾತ್ಕಾಲಿಕ ನಿವಾಸಿಗಳನ್ನು ಸೇರಿಸಿ ಸುಮಾರು 1.4 ಕೋಟಿ ಜನಸಂಖ್ಯೆ ಇರುವುದರಿಂದ ಕುಡಿಯುವ ನೀರನ್ನು ಸಮಾನವಾಗಿ ಹಾಗೂ ವಿವೇಕಪೂರ್ವಕವಾಗಿ ಬಳಸುವುದು ಅಗತ್ಯವಾಗಿದೆ. ಕಡಿಮೆ ಮಳೆಯಿಂದ ನಗರದ ಕೆಲ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ಕಾರಣ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು BWSSB ತಿಳಿಸಿದೆ.

ಜಲಾಶಯಗಳಲ್ಲಿನ ನೀರಿನ ಸಂಗ್ರಹವೂ ಗಣನೀಯವಾಗಿ ಕುಸಿದಿದೆ ಎಂದು BWSSB ಅಧ್ಯಕ್ಷೆ ಮಂಜುಳಾ ಎನ್. ತಿಳಿಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಶನಿವಾರ ಸಂಜೆ ವೇಳೆಗೆ ಜಲಾಶಯಗಳಲ್ಲಿ ಕೇವಲ ಶೇ.23ರಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಒಟ್ಟು 895.6 ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ ಸದ್ಯ 203 ಟಿಎಂಸಿ ನೀರು ಲಭ್ಯವಿದ್ದು, ಕಾವೇರಿ ಜಲಾನಯನ ಪ್ರದೇಶದ 114.5 ಟಿಎಂಸಿ ಸಾಮರ್ಥ್ಯಕ್ಕೆ ಹೋಲಿಸಿದರೆ ಕೇವಲ 36 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿತ್ತನೆ ಮಾಡಬೇಡಿ ಎನ್ನುವ ಸರ್ಕಾರ ರೈತರ ಪಾಲಿಗೆ ಶಾಪ: ಎಎಪಿ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ್ ಕಲೇಗಾರ್ ವಾಗ್ದಾಳಿ

ರಾಜ್ಯ ಸರ್ಕಾರದ ವಿರುದ್ಧ ಕಲೇಗಾರ ಆಕ್ರೋಶ!

ವಿಜಯಸಾಕ್ಷಿ ಸುದ್ದಿ, ಗದಗ

“ಬೆಳೆಯನ್ನೇ ಬೆಳೆಯಬೇಡಿ, ಪರಿಹಾರವನ್ನೇ ಕೇಳಬೇಡಿ” ಎಂಬ ರೀತಿಯ ಸಂದೇಶ ನೀಡುವ ರಾಜ್ಯ ಸರ್ಕಾರದ ನಿಲುವು ರೈತ ವಿರೋಧಿ, ಅಮಾನವೀಯ ಹಾಗೂ ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ್ ಕಲೇಗಾರ್ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟದ ಸಂದರ್ಭದಲ್ಲಿ ಅವರ ಬೆನ್ನಿಗೆ ನಿಲ್ಲುವ ಬದಲು ಜವಾಬ್ದಾರಿಯಿಂದ ಹಿಂದೆ ಸರಿಯಲು ಯತ್ನಿಸುತ್ತಿದೆ ಎಂದು ಟೀಕಿಸಿದರು.

ಮಳೆ ಕೊರತೆ, ಅತಿವೃಷ್ಟಿ, ಬೆಲೆ ಕುಸಿತ, ಗೊಬ್ಬರ ಕೊರತೆ, ಕಳಪೆ ಬೀಜ ಪೂರೈಕೆ ಹಾಗೂ ಸಾಲದ ಹೊರೆಗಳಿಂದ ರೈತರು ಈಗಾಗಲೇ ಸಂಕಷ್ಟದಲ್ಲಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಬೆಂಬಲ ನೀಡುವ ಬದಲು ಬಿತ್ತನೆ ಮಾಡದಂತೆ ಹೇಳುವುದು ರೈತರನ್ನು ಆತ್ಮವಿಶ್ವಾಸ ಕಳೆದುಕೊಳ್ಳುವಂತೆ ಮಾಡುವ ನಿರ್ಧಾರವಾಗಿದೆ ಎಂದು ಅವರು ಆರೋಪಿಸಿದರು.

ಚುನಾವಣೆ ವೇಳೆ ರೈತರ ಪರವಾಗಿ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬೆಳೆ ಹಾನಿ ಪರಿಹಾರದ ಹೊಣೆಗಾರಿಕೆಯಿಂದಲೂ ಹಿಂದೆ ಸರಿಯುತ್ತಿದೆ.

ಇದು ರೈತ ಸಮುದಾಯಕ್ಕೆ ಮಾಡುತ್ತಿರುವ ದ್ರೋಹ ಎಂದು ಕಿಡಿಕಾರಿದರು. ತಕ್ಷಣ ನಿರ್ಧಾರ ಹಿಂಪಡೆಯಲಿ
ಸರ್ಕಾರ ರೈತ ವಿರೋಧಿ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು.

ಬೆಳೆ ಹಾನಿಗೊಳಗಾದ ಎಲ್ಲ ರೈತರಿಗೆ, ಅವರು ಬೆಳೆ ವಿಮೆ ಪಡೆದಿರಲಿ ಅಥವಾ ಪಡೆಯದಿರಲಿ, ಸಮರ್ಪಕ ಪರಿಹಾರ ಘೋಷಿಸಬೇಕು. ಬರ, ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದಿಂದ ಸಂಕಷ್ಟದಲ್ಲಿರುವ ರೈತರಿಗೆ ತುರ್ತು ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು.

ರೈತರನ್ನು ಸಂಕಷ್ಟದ ಸಮಯದಲ್ಲಿ ಕೈಬಿಡುವ ಸರ್ಕಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ರೈತಪರ ನಿಲುವು ತಾಳಬೇಕು.”
ಡಾ. ದಾದಾಪೀರ್ ಕಲೇಗಾರ್, ಜಿಲ್ಲಾ ಅಧ್ಯಕ್ಷರು, ಆಮ್ ಆದ್ಮಿ ಪಕ್ಷ

ಜಿಲ್ಲಾ ಲೆಕ್ಕಪರಿಶೋಧನೆ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗದಗ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ನಡೆಯಿತು.

ಸಭೆಯಲ್ಲಿ ಸ್ಥಳೀಯ ಲೆಕ್ಕಪರಿಶೋಧನ ವರ್ತುಲದ ಲೆಕ್ಕಪರಿಶೋಧನಾಧಿಕಾರಿ ಎಂ.ಜಿ. ದೊಡ್ಡಮನಿ ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಲೆಕ್ಕಾಧೀಕ್ಷಕ ಮಲ್ಲಿಕಾರ್ಜುನ ಹೊಸೂರು ಅವರನ್ನು ಉಪಾಧ್ಯಕ್ಷರಾಗಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಲೆಕ್ಕಾಧೀಕ್ಷಕ ಅರಿಹಂತ ದುಂಡಣ್ಣನವರ ಅವರನ್ನು ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಅಧಿಕಾರಿಗಳು, ಇಲಾಖೆಯ ಅಭಿವೃದ್ಧಿ, ಸಿಬ್ಬಂದಿಯ ಹಿತಾಸಕ್ತಿ ಹಾಗೂ ಸಮನ್ವಯದೊಂದಿಗೆ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್, ಸ್ಥಳೀಯ ಲೆಕ್ಕಪರಿಶೋಧನ ವರ್ತುಲದ ಹಿರಿಯ ಉಪ ನಿರ್ದೇಶಕಿ ಶಾಂತಾ ಜಾಧವ, ಲೆಕ್ಕಪರಿಶೋಧನಾಧಿಕಾರಿಗಳಾದ ಗುರುರಾಜ್ ಚವ್ಹಾಣ, ಟಿ.ಎಂ. ಕಂಠಿ, ಪ್ರಕಾಶ್ ಮುದ್ಗಲ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಭೆಯ ನಂತರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬೆಳೆ ವಿಮೆ ನೋಂದಣಿಗೆ ಜುಲೈ 31 ಅಂತಿಮ ಗಡುವು

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಕರ್ನಾಟಕ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ತಾಲೂಕಿನ ರೈತರು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ಪಾಟೀಲ್ ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ಅವರು ತಿಳಿಸಿರುವಂತೆ, ಪ್ರಕೃತಿ ವಿಕೋಪ, ಇಳುವರಿ ನಷ್ಟ, ಬಿತ್ತನೆ ವಿಳಂಬ, ಬೆಳವಣಿಗೆಯ ಹಂತದಲ್ಲಿ ಸಂಭವಿಸುವ ಹಾನಿ, ಕೊಯ್ಲಿನ ನಂತರದ ನಷ್ಟ ಹಾಗೂ ಸ್ಥಳೀಯ ವಿಪತ್ತುಗಳಿಂದಾಗುವ ಬೆಳೆ ಹಾನಿಗೆ ಆರ್ಥಿಕ ಪರಿಹಾರ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಯಲ್ಲಿದೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಈರುಳ್ಳಿ, ಕೆಂಪು ಮೆಣಸಿನಕಾಯಿ, ಜೋಳ, ತೊಗರಿ, ಸೂರ್ಯಕಾಂತಿ, ಹತ್ತಿ, ರಾಗಿ ಹಾಗೂ ಸಜ್ಜಿ ಬೆಳೆಗಳನ್ನು ಬೆಳೆಯುವ ರೈತರು ಯೋಜನೆಯ ಸೌಲಭ್ಯ ಪಡೆಯಬಹುದು.

ರೈತರು ಅರ್ಜಿ ಸಲ್ಲಿಸುವಾಗ ತಮ್ಮ ಬೆಳೆ ಮಳೆಯಾಶ್ರಿತವೋ ಅಥವಾ ನೀರಾವರಿ ಬೆಳೆವೋ ಎಂಬುದನ್ನು ಸರಿಯಾಗಿ ನಮೂದಿಸಬೇಕು. ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಅಧಿಸೂಚಿತ ಬೆಳೆಗಳಿಗೆ ಯೋಜನೆಯಲ್ಲಿ ಭಾಗವಹಿಸಲು ಅವಕಾಶವಿದೆ.

ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ಹಾಗೂ ಬೆಳೆ ಸಾಲ ಪಡೆಯದಿರುವ ಕುರಿತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಗುರುಕುಲ ಪರಂಪರೆಯ ‘ಅಕ್ಷರ ದಾಸೋಹ’ ಇಂದಿಗೂ ಜೀವಂತ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣ ಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅನನ್ಯವಾಗಿದ್ದು, ಅವರು ಆರಂಭಿಸಿದ ಗುರುಕುಲ ಮಾದರಿಯ ಆಶ್ರಮದಲ್ಲಿ ಇಂದಿಗೂ ಅನುಭವಿ ಶಿಕ್ಷಕರಿಂದ ನಿರಂತರ ‘ಅಕ್ಷರ ದಾಸೋಹ’ ನಡೆಯುತ್ತಿರುವುದು ಅಭಿನಂದನೀಯ ಎಂದು ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವ್ಹಿ. ನಡುವಿನಮನಿ ಹೇಳಿದರು.

ಗದಗ ತಾಲೂಕಿನ ಹಾತಲಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶ್ರೀ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಐದು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಅಭಿನಂದನಾ ಪತ್ರ, ಕಾಲೇಜು ಬ್ಯಾಗ್ ಹಾಗೂ ಸಿಹಿ ವಿತರಿಸಿ ಅವರು ಮಾತನಾಡಿದರು.

ಶಿಕ್ಷಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ಅಣ್ಣಿಗೇರಿ ಗುರುಗಳು ತಮ್ಮ ವಾಸದ ಕೊಠಡಿಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಟ್ಯೂಷನ್‌ ಹೇಳುವ ಮೂಲಕ ಆರಂಭಿಸಿದ ಶಿಕ್ಷಣ ಸೇವೆ, ನಂತರ ಗುರುಕುಲ ಮಾದರಿಯ ಆಶ್ರಮವಾಗಿ ಬೆಳೆದು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಅವರ ಶಿಷ್ಯರು ಇಂದಿಗೂ ಆ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಎಚ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಶಿವಾನಂದ ಪೂಜಾರ ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಐದು ಸ್ಥಾನ ಪಡೆದ ಸತೀಶ ಪೂಜಾರ, ಯಶೋಧಾ ಆಲೂರ, ರಶ್ಮಿ ಬಾರಕೇರ, ಧನರಾಜ ಬೆಂತೂರ ಹಾಗೂ ರೇಣುಕಾ ಕುರುಬರ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಂಕರ ಹಡಗಲಿ, ಪ್ರತಿಷ್ಠಾನದ ಕಾರ್ಯದರ್ಶಿ ಸುಭಾಷಚಂದ್ರ ಬೆಟ್ಟದೂರ, ಶಿವಾನಂದ ಕತ್ತಿ, ನೇಹಾ ಖಟವಟೆ, ಜ್ಯೋತಿ ವಡಗೇರಿ, ಮಂಜುನಾಥ ಕುರಬರ ಉಪಸ್ಥಿತರಿದ್ದರು.

ಸತೀಶ ಮೇಲ್ಮನಿ ಪ್ರಾರ್ಥಿಸಿದರು. ಸುಮಿತ್ರಾ ಮೇತ್ರಿ ಸ್ವಾಗತಿಸಿದರು. ಲಿಂಗನಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ವಿಜಯಲಕ್ಷ್ಮಿ ರಾಠೋಡ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಬಿ.ಜಿ. ಅಣ್ಣಿಗೇರಿ ಗುರುಗಳು ಆರಂಭಿಸಿದ ಗುರುಕುಲ ಪರಂಪರೆ ಇಂದಿಗೂ ಅಕ್ಷರ ದಾಸೋಹದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸುತ್ತಿದೆ. ಇಂತಹ ಶಿಕ್ಷಣ ಸೇವೆ ಸಮಾಜಕ್ಕೆ ಮಾದರಿಯಾಗಿದೆ.”

– ವ್ಹಿ.ವ್ಹಿ. ನಡುವಿನಮನಿ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ

ಅಭಿವೃದ್ಧಿ ಹೆಸರಲ್ಲಿ ಪ್ರಕೃತಿ ನಾಶ ಮನುಷ್ಯ ಧರ್ಮವಲ್ಲ: ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಯೋಗ ಎಂದರೆ ಕೇವಲ ದೈಹಿಕ ವ್ಯಾಯಾಮವಲ್ಲ, ನಮ್ಮ ಸುತ್ತಲಿನ ಪರಿಸರ ಹಾಗೂ ಸಮಾಜದೊಂದಿಗೆ ಸಾಮರಸ್ಯದಿಂದ ಬದುಕುವ ಜೀವನ ಪದ್ಧತಿಯಾಗಿದೆ. ದೇವರು ಸೃಷ್ಟಿಸಿದ ಪ್ರಕೃತಿಯನ್ನು ಅಭಿವೃದ್ಧಿಯ ಹೆಸರಿನಲ್ಲಿ ಹಾಳು ಮಾಡುವುದು ಮನುಷ್ಯ ಧರ್ಮವಲ್ಲ ಎಂದು ಹಾಲಕೇರಿ ಅನ್ನದಾನೀಶ್ವರ ಸಂಸ್ಥಾನಮಠದ ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು.

ನಗರದ ರಾಜೀವಗಾಂಧಿ ನಗರದ ಈಶ್ವರ ಬಡಾವಣೆಯ ಈಶ್ವರ ಸಭಾಭವನದಲ್ಲಿ ಈಶ್ವರ ಸೇವಾ ಟ್ರಸ್ಟ್, ಗದಗ-ಬೆಟಗೇರಿ ನಗರಸಭೆ, ಕೆ.ಎಚ್. ಪಾಟೀಲ ಕಲಾ ವಿಜ್ಞಾನ ಕೇಂದ್ರ, ಪತಂಜಲಿ ಜಿಲ್ಲಾ ಯೋಗ ಸಮಿತಿ, ಧರ್ಮಸ್ಥಳ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಜೂನ್ 21ರಂದು ಯೋಗ ದಿನ ಆಚರಿಸುವ ಮಹತ್ವವನ್ನು ವಿವರಿಸಿದ ಶ್ರೀಗಳು, ಮನುಷ್ಯನು ದಿನಕ್ಕೆ ಸರಾಸರಿ 21,600 ಬಾರಿ ಉಸಿರಾಡುತ್ತಾನೆ. ಜೂನ್ 21 ಈ ಉಸಿರಾಟದ ಸಂಕೇತವಾಗಿದೆ ಎಂದು ಹೇಳಿದರು. ಯೋಗಾಭ್ಯಾಸವನ್ನು ಗುರುಗಳ ಮಾರ್ಗದರ್ಶನದಲ್ಲಿ ಮಾತ್ರ ಮಾಡಬೇಕು. ಟಿವಿ ಅಥವಾ ಮೊಬೈಲ್ ನೋಡಿ ಯೋಗ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಯೋಗವು ಭಾರತೀಯ ಋಷಿಮುನಿಗಳ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು. 2014ರಲ್ಲಿ ವಿಶ್ವಸಂಸ್ಥೆಯಲ್ಲಿ ಮೋದಿ ಅವರು ಯೋಗದ ಮಹತ್ವ ಪ್ರತಿಪಾದಿಸಿದ ಹಿನ್ನೆಲೆಯಲ್ಲಿ ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಪರಿಸರ ಹಾನಿ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ವಾಯು, ನೀರು ಮತ್ತು ಭೂಮಿಯ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪ್ರಕೃತಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರಲಾಲ ಆರ್ಯ, ಜಿಲ್ಲಾ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಕೆಎಸ್‌ಎಸ್ ಸಮಿತಿ ಕಾರ್ಯದರ್ಶಿ ರವಿ ದಂಡಿನ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಜುಬೇದಾ ತಿಗಳೇರ ಯೋಗ ಹಾಗೂ ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಜಿ. ಸಂತೋಜಿ ವಹಿಸಿದ್ದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಯೋಗಾಭ್ಯಾಸಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಯೋಗವಿರಲಿ, ಜೀವನವಿರಲಿ – ಕ್ರಮ ಮತ್ತು ಶಿಸ್ತು ಅತ್ಯಗತ್ಯ. ಗುರುಗಳ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮಾಡಿದಾಗ ಮಾತ್ರ ಯೋಗದ ನಿಜವಾದ ಫಲ ದೊರೆಯುತ್ತದೆ.”

– ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಹಾಲಕೇರಿ ಅನ್ನದಾನೀಶ್ವರ ಸಂಸ್ಥಾನಮಠ